Connect with us

ದಿನದ ಸುದ್ದಿ

ಕರ್ನಾಟಕದ 16 ಸಾವಿರ ಕಿಲೋಮೀಟರ್ ರೈಲ್ವೆ ಮಾರ್ಗ ವಿದ್ಯುದೀಕರಣ; ರಾಜ್ಯದ ಅಭಿವೃದ್ಧಿಗೆ ವಿಶೇಷ ಆದ್ಯತೆ : ಪ್ರಧಾನಿ ನರೇಂದ್ರ ಮೋದಿ

Published

on

ಸುದ್ದಿದಿನ ಡೆಸ್ಕ್ : ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. 425ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಪ್ರಧಾನಿ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಉನ್ನತೀಕರಿಸಿದ ರಾಜ್ಯದ 150ಸರ್ಕಾರಿ ಐಟಿಐ ಸಂಸ್ಥೆಗಳನ್ನು ಲೋಕಾರ್ಪಣೆ ಮಾಡಿದರು.

ಬೆಂಗಳೂರು ನಗರದ ಕೊಮ್ಮಘಟ್ಟದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಪ್ರದರ್ಶನ ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ-ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಶೇಕಡ 100ರಷ್ಟು ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿ ನಗರವನ್ನು ಸಂಪರ್ಕಿಸುವ ಹೊಸ ರೈಲು ಸೇವೆಗೆ ಹಸಿರು ನಿಶಾನೆ ತೋರಿದರು.

ಬೆಂಗಳೂರು ಉಪನಗರ ರೈಲು ಯೋಜನೆ, ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ, ಬೆಂಗಳೂರಿನ ವರ್ತುಲ ರಸ್ತೆ-2 ಪ್ಯಾಕೇಜ್‌ಗಳು, ನೆಲಮಂಗಲ ತುಮಕೂರು ವಿಭಾಗದ 6-ಲೈನಿಂಗ್, ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗಿನ ರಸ್ತೆ ಅಗಲೀಕರಣ, ರಾಷ್ಟ್ರೀಯ ಹೆದ್ದಾರಿ 69ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ, ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ಅವರು, ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಅಭಿವೃದ್ಧಿಗೆ ಕಳೆದ ೮ ವರ್ಷಗಳಿಂದಲೂ ಕೇಂದ್ರ ಸರ್ಕಾರ ಬೆಂಬಲ, ಸಹಕಾರ ನೀಡುತ್ತಿದೆ. ಉನ್ನತ ಶಿಕ್ಷಣ, ಸಂಶೋಧನೆ, ಸಾರಿಗೆ, ಮೂಲಸೌಲಭ್ಯದ ಈ ಮಹತ್ವದ ಯೋಜನೆಗಳು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಕ್ಷೆಯನ್ನು ಬದಲಾವಣೆ ಮಾಡಲಿದೆ ಎಂದು ಹೇಳಿದರು.
ಬೆಂಗಳೂರು ನಾಗರಿಕರು ಎದುರಿಸುತ್ತಿರುವ ಸಂಚಾರ ದಟ್ಟಣೆಯಿಂದ ಮುಕ್ತಿ ಪಡೆಯಲಿದ್ದಾರೆ. ಈ ಎಲ್ಲ ಯೋಜನೆಗಳು ಬೆಂಗಳೂರು ಜನತೆಯ ಜೀವನ ಮಟ್ಟವನ್ನು ಸುಧಾರಿಸುತ್ತವೆ. ಹಾಗೂ ಉದ್ಯಮಿಗಳು ಹೆಚ್ಚು ಬಂಡವಾಳ ತೊಡಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಬೆಂಗಳೂರು ಶ್ರೇಷ್ಟ ಭಾರತದ ಪ್ರತಿಬಿಂಬವಾಗಿದೆ. ರಾಜ್ಯದ ಜನತೆಯ ಕನಸನ್ನು ನನಸು ಮಾಡಲು ರಾಜ್ಯ ಬಿಜೆಪಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಕಳೆದ ೮ ವರ್ಷಗಳ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ತರಲಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ಎರಡು ವರ್ಷಗಳ ಕಾಲ ೮೦ ಕೋಟಿ ಜನರಿಗೆ ಉಚಿತ ಆಹಾರ ಪೂರೈಕೆ ಮಾಡಿರುವುದು ವಿಶ್ವದ ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಐದು ಟ್ರಿಲಿಯನ್ ಆರ್ಥಿಕ ಗುರಿ ಸಾಧಿಸಬೇಕು ಎಂಬ ಪ್ರಧಾನಿಯವರ ಕನಸನ್ನು ನನಸು ಮಾಡಲು ಕರ್ನಾಟಕ ದೊಡ್ಡ ಮಟ್ಟದ ಕೊಡುಗೆ ನೀಡುವ ಸಂಕಲ್ಪ ಮಾಡಿದೆ. ಕಳೆದ 8ವರ್ಷಗಳ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕೊಡುಗೆಗಳನ್ನು ನೀಡಿದೆ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ 53ಲಕ್ಷ, ಪ್ರಧಾನಮಂತ್ರಿ ಉಜ್ವಲ ಯೋಜನೆಯಿಂದ 34 ಲಕ್ಷ ಹಾಗೂ ಜಲಜೀವನ್ ಮಿಷನ್ ಯೋಜನೆ ಜಾರಿಯಿಂದ ೪೮ ಲಕ್ಷ ಜನರಿಗೆ ಉಪಯೋಗವಾಗಿದೆ. 2024ರ ವೇಳೆಗೆ ರಾಜ್ಯದ ಪ್ರತಿಯೊಂದು ಹಳ್ಳಿಗೂ ಕೊಳಾಯಿ ನೀರು ಪೂರೈಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಹೇಳಿದರು.

ಬಳಿಕ ಪ್ರಧಾನಮಂತ್ರಿ ಅವರು, ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ವಾಕ್ ಶ್ರವಣ ಸಂಸ್ಥೆಯ ಉತ್ಕೃಷ್ಟತಾ ಕೇಂದ್ರವನ್ನು ಉದ್ಘಾಟಿಸಿದರು. ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ಅವರು, ಕೇಂದ್ರ ಸರ್ಕಾರ ಆತ್ಮವಿಶ್ವಾಸದಿಂದ ಜನಪರ ಕೆಲಸ ಮಾಡುತಿದ್ದು, ಬಡವರ ಬದುಕಿನಲ್ಲಿ ಸುಧಾರಣೆ ತರುತ್ತಿದೆ. ಹಲವಾರು ಯೋಜನೆಗಳ ಮೂಲಕ ಬದಲಾವಣೆಗೆ ನಾಂದಿ ಹಾಡಿದೆ. ಮಹಿಳೆಯರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ಕರ್ನಾಟಕದ ರೈತರ ಖಾತೆಗಳಿಗೆ ಕೃಷಿ ಸಮ್ಮಾನ್ ನಿಧಿ ಮೂಲಕ 10 ಸಾವಿರ ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ರಾಜ್ಯದ 2 ಲಕ್ಷಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ, ಮುದ್ರಾ ಯೋಜನೆಯಡಿ ಕರ್ನಾಟಕಕ್ಕೆ ಹೆಚ್ಚಿನ ನೆರವು ನೀಡಲಾಗಿದೆ. ಕರ್ನಾಟಕದ 4 ಲಕ್ಷ ಜನರಿಗೆ ವಸತಿ ಸೌಲಭ್ಯ ಕಲ್ಪಿಸುತ್ತಿದ್ದು, ಅಮೃತ ಕಾಲದಲ್ಲಿ ಅಭಿವೃದ್ಧಿಯ ಪರ್ವದಲ್ಲಿ ಪ್ರತಿಯೊಬ್ಬರನ್ನು ಪಾಲುದಾರರನ್ನಾಗಿ ಮಾಡಲಾಗುವುದು. ದಿವ್ಯಾಂಗ ಸಮುದಾಯದ ಅಭಿವೃದ್ಧಿ ಪಥದಲ್ಲಿ ಯುವಸಮೂಹ ಕೈಜೋಡಿಸಬೇಕು ಎಂದು ಕರೆ ನೀಡಿದರು.

ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು, 16 ಸಾವಿರ ಕಿಲೋಮೀಟರ್ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿಗೆ ವೇಗ ನೀಡುತ್ತಿದ್ದು, ಇದರಲ್ಲಿ ಜನರ ಸಹಭಾಗಿತ್ವ ಮತ್ತಷ್ಟು ಹೆಚ್ಚಾಗಬೇಕೆಂದು ಪ್ರಧಾನಿ ಅವರು ಕರೆ ನೀಡಿದರು.

ಬಳಿಕ ಪ್ರಧಾನಮಂತ್ರಿ ಅವರು ಸುತ್ತೂರಿನ ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠದ ದೇಶಿ ಕೇಂದ್ರ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದರು. ನಂತರ ಸಂಸ್ಕೃತ ಪಾಠಶಾಲೆ ಮತ್ತು ವಸತಿ ಕಟ್ಟಡವನ್ನು ಉದ್ಘಾಟಿಸಿದರು. ನಂತರ ನರೇಂದ್ರ ಮೋದಿ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending