Connect with us

ನೆಲದನಿ

ನೆಲದ ನಾದಧ್ವನಿ ಮೋರ್‍ಝಿಂಗ್ ಕಲಾವಿದ ಶಂಕ್ರಪ್ಪ ಬಾದಿಗಿ

Published

on

ನ್ನಡ ನಾಡು ಹಲವು ಸಂಸ್ಕøತಿ, ಕಲೆಗಳ ತವರೂರು. ಇಲ್ಲಿ ಅನಾದಿಕಾಲದಿಂದಲೂ ಹಲವಾರು ವಿಧವಾದ ಸಾಂಸ್ಕøತಿಕ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬರಲಾಗಿದೆ. ಇಲ್ಲಿನ ಕಲೆಯು ಈ ನಾಡಿನ ಹಿರಿಮೆಯನ್ನು ಜಗತ್ತಿನೆದುರು ಮೆರೆದಿರುವುದು ಕಂಡುಬರುತ್ತದೆ. ಕನ್ನಡ ನಾಡಿನಲ್ಲಿ ಜಾಗತೀಕರಣದಂಥ ಸಂದರ್ಭದಲ್ಲಿಯೂ ಕಲೆಗಳು ಜೀವಂತವಾಗಿರುವುದಕ್ಕೆ ಪ್ರಮುಖ ಕಾರಣವೆಂದರೆ, ಕಲೆಯೊಂದಿಗೆ ಭಾವನಾತ್ಮಕ ಭಾಂದವ್ಯವನ್ನು ರೂಪಿಸಿಕೊಂಡಿರುವ ಕಲಾವಿದನ ಶ್ರಮವಾಗಿದೆ. ಕಲೆಯನ್ನು ಕೇವಲ ಒಂದು ವ್ಯವಹಾರಿಕ ದೃಷ್ಟಿಯಿಂದ ನೋಡದೆ ಅದನ್ನು ತನ್ನ ಅಂತರಾಳದ ಕುಡಿಯಂಬಂತೆ ಪೋಷಿಸಿಕೊಂಡು ಬಂದಿರುವವನು ಕಲಾವಿದನಾಗಿದ್ದಾನೆ. ತಮ್ಮ ಬದುಕಿನ ಒಂದು ಭಾಗವಾಗಿ ಕಲೆಯನ್ನು ಮೈಗೊಡಿಸಿಕೊಂಡು ಬಂದಿರುವ ಕಲಾವಿದನು ಒಂದು ಕಲೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಹಂಬಲ ಹೊಂದಿರುತ್ತಾನೆ. ಕಲೆಯನ್ನೆ ಉಸಿರೆಂದುಕೊಂಡು, ಈ ಕಲೆಯ ಸಿಹಿಯನ್ನು ನಾಡಿನ ಜನತೆಗೆ ಉಣಬಡಿಸಿ ತಾವು ಮಾತ್ರ ಹಸಿದ ಹೊಟ್ಟೆಯಲ್ಲಿ ತೃಪ್ತಿಪಡುವಂತಹ ಎಷ್ಟೋ ಕಲಾವಿದರು ನಮ್ಮ ನಾಡಿನಲ್ಲಿ ಕಂಡುಬರುತ್ತಾರೆ. ಹೀಗೆ ಕಲೆಯ ಉಳಿವಿಗಾಗಿ ತನ್ನ ಬದುಕನ್ನೆ ಸಮರ್ಪಿಸಿಕೊಂಡಿರುವವರಲ್ಲಿ ಮೋರ್‍ಝಿಂಗ್ ನುಡಿಸುವ ಗಾರುಡಿಗ ಶಂಕ್ರಪ್ಪ ಬಾದಿಗಿಯವರು ಒಬ್ಬರಾಗಿದ್ದಾರೆ.

ಶಂಕ್ರಪ್ಪ ಬಾದಿಗಿಯವರು ಮೂಲತ `ಸುಡುಗಾಡು ಸಿದ್ಧ’ ಎಂಬ ಅಲೆಮಾರಿ ಜನಾಂಗದವರಾಗಿದ್ದು, ಬಳ್ಳಾರಿ ಜಿಲ್ಲೆ ಹೊಸಪೇಟೆಯ ಜಂಬುನಾಥನಹಳ್ಳಿ ಆಶ್ರಯ ಕಾಲೋನಿಯ ಟೆಂಟ್‍ಹೌಸ್‍ನಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. 63 ವರ್ಷದ ಶಂಕ್ರಪ್ಪ ಬಾದಿಗಿಯವರು ಮೂರು ಜನ ಗಂಡು ಮಕ್ಕಳನ್ನು ಹೊಂದಿದ್ದು, ತಮ್ಮ ಮಕ್ಕಳಿಗೆ ಸೂಕ್ತವಾದ ಶಿಕ್ಷಣವನ್ನು ದೊರಕಿಸಿ ಕೊಡಲು ಸಾಧ್ಯವಾಗದ ಕಾರಣ ಅವರನ್ನು ಕೂಲಿ, ವ್ಯಾಪಾರದಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಶಂಕ್ರಪ್ಪ ಬಾದಿಗಿಯವರು ತಮ್ಮ ತಂದೆಯಾದ ದುರುಗಪ್ಪ ಬಾದಿಗಿಯವರಿಂದ ಬಳುವಳಿಯಾಗಿ ಬಂದ ಮೋರ್‍ಝಿಂಗ್ ವಾದ್ಯ ನುಡಿಸುವ ಕಲೆಯನ್ನು ತಮ್ಮ ಸತತವಾದ ಪ್ರಯತ್ನದಿಂದ ಕರಗತಮಾಡಿಕೊಂಡು, ಮುವತ್ತು ವರ್ಷಗಳಿಂದಲೂ ಈ ಕಲೆಯ ಉಳಿವಿಗಾಗಿ ಅವಿರತ ಪರಿಶ್ರಮವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಶಂಕ್ರಪ್ಪ ಬಾದಿಗಿಯವರ ತಂದೆಯಾದ ದುರುಗಪ್ಪ ಬಾದಿಗಿಯವರು ಮೈಸೂರು ಮಹಾರಾಜರ ಆಸ್ಥಾನದಲ್ಲಿ ಮೋರ್‍ಝಿಂಗ್ ವಾದ್ಯವನ್ನು ನುಡಿಸುತ್ತಿದ್ದು, ಮಹಾರಾಜರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಈ ವಿಶೇಷ ಕಲೆಯನ್ನು ತಮ್ಮ ಮಗನಿಗೆ ಕರಗತಗೊಳಿಸಿ ಈ ಕಲೆಯನ್ನು ಮುಂದಿನ ಪೀಳಿಗೆಗೂ ಕಾಪಾಡಿಕೊಂಡು ಹೋಗುವಂತೆ ತರಬೇತಿ ನೀಡಿದ್ದಾರೆ. ತಂದೆಯಿಂದ ಭಕ್ತಿ-ಭಾವದಿಂದ ಕರಗತ ಮಾಡಿಕೊಂಡಿರುವ ಈ ಸಂಗೀತ ಕಲೆಯನ್ನು ಉಳಿಸುವ ಹಂಬಲ ಹೊತ್ತ ಶಂಕ್ರಪ್ಪ ಬಾದಿಗಿಯವರು ತಮ್ಮ ಬಡತನದ ಬದುಕನ್ನು ಲೆಕ್ಕಿಸದೆ ಒಂದು ತಂಡವನ್ನು ರಚಿಸಿಕೊಂಡು, ಅವರಿಗೆ ಈ ಕಲೆಯ ತರಬೇತಿ ನೀಡುವ ಮೂಲಕ ತಮ್ಮದೆ ಆದ ಸಾಂಸ್ಕøತಿಕ ವೇಶ ಭೂಷಣ ತಯಾರಿಸಿಕೊಂಡು ಹಲವಾರು ಸಭೆ-ಸಮಾರಂಭಗಳಲ್ಲಿ ಈ ಕಲೆಯ ಪ್ರದರ್ಶನ ನೀಡುತ್ತ ಬಂದಿದ್ದು, ಜನರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಕೆಲವು ನಿಮಿಷಗಳ ಕಾಲ ತಮ್ಮ ಉಸಿರನ್ನು ಬಿಗಿ ಹಿಡಿದು ಈ ವಾದ್ಯವನ್ನು ನುಡಿಸುವ ಪರಿಗೆ ಕೇಳುಗರು ಆಶ್ಚರ್ಯ ಚಕಿತರಾಗುವುದರ ಜೊತೆಗೆ, ಇದರಿಂದ ಹೊರ ಹೊಮ್ಮುವ ನಾದದ ಸ್ವರಕ್ಕೆ ರೋಮಾಂಚನಗೊಳ್ಳುತ್ತಾರೆ ಪುರಂದರದಾಸರ ಕೀರ್ತನೆಗಳು, ತತ್ವಪದಗಳು ಹಾಗೂ ದೇವರ ಶ್ಲೋಕಗಳನ್ನು ಹಾಡುವ ಮೂಲಕ ಈ ವಾದ್ಯವನ್ನು ನುಡಿಸುವ ಕ್ರಮವು ಎಂಥವರನ್ನು ಕ್ಷಣಕಾಲದವರೆಗೆ ಮಂತ್ರಮುಗ್ದರನ್ನಾಗಿಸುತ್ತದೆ.

ತಮ್ಮ ಜೀವದ ಹಂಗನ್ನು ತೊರೆದು ಉಸಿರು ಬಿಗಿ ಹಿಡಿದು ವಾದ್ಯ ನುಡಿಸುವ ಈ ಕ್ರಮವು ಅವರು ಈ ಕಲೆಯಲ್ಲಿ ಹೊಂದಿರುವ ನೈಪುಣ್ಯತೆಯ ಜೊತೆಗೆ, ಕಲೆಯೊಂದಿಗಿನ ಇವರ ಭಾಂವ್ಯವನ್ನು ಸೂಚಿಸುತ್ತದೆ. ಸಂಗೀತಾ ಪರಿಕರಗಳಲ್ಲಿ ಒಂದು ವಿಶಿಷ್ಟ ಪ್ರಕಾರವಾಗಿರುವುದು ಮೋರ್‍ಝಿಂಗ್. ಭಾರತದಲ್ಲಿ ಇದರ ಮೂಲವು ದಕ್ಷಿಣ ಭಾರತ, ರಾಜಸ್ಥಾನ, ಪಾಕಿಸ್ಥಾನದ ಸಿಂಧ್‍ಪ್ರಾಂತ್ಯ ಹಾಗೂ ನೇಪಾಳದಲ್ಲಿ ಇರುವುದಾಗಿ ತಿಳಿದು ಬರುತ್ತದೆ. ಈ ಸಾಧನವನ್ನು ಇಂಗ್ಲಿಷ್ ಭಾಷೆಯಲ್ಲಿ `ಜಾಹಾರ್ಪ್’ ಎಂದು, ರಾಜಸ್ಥಾನ ಭಾಷೆಯಲ್ಲಿ `ಮೋರ್‍ಝಿಂಗ್’ ಎಂದು ಕರ್ನಾಟಕದಲ್ಲಿ `ಬಾಯಿಬಿಲ್ಲು ನೀದಸ್ವರ’ ಎಂಬುದಾಗಿಯೂ ಕರೆಯಲಾಗುತ್ತದೆ. ಇದು ತ್ರಿಶೂಲಾಕಾರದ ಚಮಟಿಗೆಯಂತೆ ಇದ್ದು, ಉಕ್ಕಿನ ಲೋಹದಿಂದ ತಯಾರಿಸಲಾಗಿದೆ. ಇದರ ಗಾತ್ರವು 10 ರಿಂದ 20 ಸೆಂ.ಮೀ ಇರುತ್ತದೆ. ಅಂಗೈ ಮುಷ್ಟಿಯಲ್ಲಿ ಹಿಡಿಯಬಹುದಾದ ಈ ಸಾಧನದಿಂದ ಒಬ್ಬನೇ ಕಲಾವಿದನು ಲಯಬದ್ಧವಾದ ಸಪ್ತಸ್ವರಗಳನ್ನು ನುಡಿಸುತ್ತಾನೆ. ಈ ಸಾಧನವು ಉಕ್ಕಿನಿಂದ ತಯಾರಿಸಲ್ಪಟ್ಟ ಕಾರಣ ಇದನ್ನು ಪ್ರತಿದಿನ ಸ್ವಚ್ಚಗೊಳಿಸಬೇಕಾಗುತ್ತದೆ. ಇಲ್ಲದೆ ಹೋದರೆ ಇದು ತುಕ್ಕು ಹಿಡಿದು ಸ್ವರ ಹೊರ ಹೊಮ್ಮುವುದಿಲ್ಲ. ತಮಿಳುನಾಡಿನ ಚೆನೈನಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಬ್ರಿಟಿಷರು ಸಂಗ್ರಹಿಸುವ ಸಂಗೀತದ ಎಲ್ಲ ಪರಿಕರಗಳಲ್ಲಿ ಎರಡು ಮೋರ್‍ಝಿಂಗ್ ಸಾಧನೆಗಳು ಇವೆ. ಈ ವಸ್ತು ಸಂಗ್ರಹಾಲಯದಲ್ಲಿರುವ ಸಾಧನಗಳನ್ನು ಉಪಯೋಗಿಸದ ಕಾರಣ ತುಕ್ಕು ಹಿಡಿದು ಮೂಲೆಯಲ್ಲಿ ನಿರ್ಜಿವ ವಸ್ತುಗಳಂತೆ ಕುಳಿತಿವೆ. ಆದರೆ ಕರ್ನಾಟಕದಲ್ಲಿ ತನ್ನ ಜೀವಂತಿಕೆಯನ್ನು ಕಾಪಾಡಿಕೊಂಡಿರುವ ಮೋರ್‍ಝಿಂಗ್ ವಾದ್ಯವು ಶಂಕ್ರಪ್ಪ ಬಾದಿಗಿಯವರ ಪರಿಶ್ರಮದಿಂದ ತನ್ನ ಅಸ್ಮಿತೆಯನ್ನು ಕಾಪಾಡಿಕೊಂಡಿದೆ.

ಮೋರ್‍ಝಿಂಗ್ (ಬಾಯಿಬಿಲ್ಲು ನಾದಸ್ವರ) ಕಲೆಯನ್ನು ತನ್ನ ತಂದೆಯಿಂದ ಕಾಪಾಡಿಕೊಂಡು ಬಂದು, ಇದರಲ್ಲಿ ಪಾಂಡಿತ್ಯವನ್ನು ಗಳಿಸಿಕೊಂಡಿರುವ ಶಂಕ್ರಪ್ಪ ಬಾದಿಗಿಯವರು ಈ ಕಲೆಯು ಅವನತಿಯ ಹಂಚಿನಲ್ಲಿರುವ ಕಾರಣ ಇದರ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ. ಒಂದು ಕಡೆ ದಟ್ಟದಾರಿದ್ರ್ಯದ ಬಡತನದ ನೋವು ಇವರನ್ನು ಕಾಡಿದರೆ, ಮತ್ತೊಂದೆಡೆ ಈ ಕಲೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಇದನ್ನು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕೆಂಬ ಹಂಬಲ ಇವರದಾಗಿದೆ. ಕರ್ನಾಟಕದ ಬಹುತೇಕ ಕಲಾವಿದರ ಬದುಕು ಬಡತನದ ಬವಣೆಯಲ್ಲಿ ಕಮರಿ ಹೋಗುತ್ತಿವೆ. ಇತ್ತೀಚಿಗೆ ಸರ್ಕಾರವು ಇಂತಹ ಕಲೆಯನ್ನು ಜೀವಂತಗೊಳಿಸಬೇಕೆಂಬ ದೃಷ್ಟಿಯಿಂದ ಅಪರೂಪದ ಕಲೆಗಳು ಹಾಗೂ ಕಲಾವಿದರನ್ನು ಗುರುತಿಸಿ ಸಹಾಯ ಧನ ನೀಡುವ ಮೂಲಕ ಕಲಾವಿದರಿಗೆ ಪ್ರೋತ್ಸಹ ನೀಡುವ ಕಾರ್ಯ ಮೈಗೊಡಿಸಿಕೊಂಡಿದೆ. ಆದರೆ ಶಂಕ್ರಪ್ಪನವರಿಗೆ ಕರ್ನಾಟಕದ ಸರ್ಕಾರದಿಂದ ಯಾವುದೇ ಸಹಾಯ ಧನವಾಗಲೀ ಲಭ್ಯವಾಗಿಲ್ಲ. ಇವರು ಅನಕ್ಷರತೆಯ ನಡುವೆಯೂ ಕೆಲವು ಅಧಿಕಾರಿಗಳನ್ನು ಕಾಡಿಬೇಡಿ `ಮಾಶಾಸನಕ್ಕೆ’ ಅರ್ಜಿಸಲ್ಲಿಸಿದರು ಕೂಡ ಇವರಿಗೆ ಸರ್ಕಾರದಿಂದ ಯಾವುದೇ ಅನುದಾನ ಬಂದಿರುವುದಿಲ್ಲ.ಕರ್ನಾಟಕದಲ್ಲಿ ಎಷ್ಟೋ ಕಲಾವಿದರು ಎಲೆಮರೆಯ ಕಾಯಿಯಂತೆ ಇದ್ದು ತಮ್ಮ ಕಲೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಇಂತಹ ಅಪರೂಪದ ಕಲೆಯ ಉಳಿವಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಬಡತನದ ಬೇಗೆಯಲ್ಲಿಯೂ ತಮ್ಮಲ್ಲಿರುವ ಕಲೆಯ ಪಾಂಡಿತ್ಯಕ್ಕೆ ಚ್ಯುತಿಯಾಗದ ರೀತಿಯಲ್ಲಿ ಅದನ್ನು ಪೋಷಿಸಿಕೊಂಡು ಬಂದಿದ್ದಾರೆ. ಅಂತಹವರ ಸಾಲಿನಲ್ಲಿ ಶಂಕ್ರಪ್ಪ ಬಾದಿಗಿಯವರು ಒಬ್ಬರಾಗಿದ್ದಾರೆ. ಇವರ ಸ್ಥಿತಿಯು ಇಬ್ಬಾಯಿಯ ಖಡ್ಗದ ನಡುವೆ ಸಿಕ್ಕಿಹಾಕಿಕೊಂಡಂತಿದೆ. ಒಂದು ಕಡೆ ಭಾವನಾತ್ಮಕ ಸಂಬಂಧವನ್ನು ಹೊಂದಿ ಉಳಿಸಿಕೊಂಡು ಬಂದಿರುವ ಕಲೆಯಾದರೆ, ಮತ್ತೊಂದೆಡೆ ಸಮಾಜದಲ್ಲಿ ಸ್ವಾತಂತ್ರವಾಗಿ ತನ್ನ ಕುಟುಂಬವನ್ನು ರೂಪಿಸಿಕೊಳ್ಳಬೇಕೆಂಬ ಹಂಬಲ. ಒಂದರ ಉಳಿಗಾಗಿ ಬೆನ್ನತ್ತಿ ಹೊರಟರೆ ಮತ್ತೊಂದು ಬೀದಿಪಾಲಾಗುವಂತಿದೆ. ಆದ್ದರಿಂದ ಶಂಕ್ರಪ್ಪನವರಿಗೆ ಕರ್ನಾಟಕದ ಭವ್ಯ ಸಾಂಸ್ಕಂತಿಕ ಪರಂಪರೆಗೆ ಸಾಕ್ಷಿಯಾಗಿರುವ ಕಲೆಯ ಉಳಿವಿಗಾಗಿ ಶ್ರಮಿಸಬೇಕೋ? ಕಲೆಯ ತೊರೆದು ತನ್ನ ಕೌಟುಂಬಿಕ ಜೀವನವನ್ನು ಸುಧಾರಿಸಿಕೊಳ್ಳಬೇಕೋ? ಎಂಬ ಪ್ರಶ್ನೆಯು ಅವರನ್ನು ಕಾಡುತ್ತಿದೆ. ಪ್ರಸ್ತುತದಲ್ಲಿ ಸರ್ಕಾರವು ಸಂಗೀತ ಕಲೆಗಳನ್ನು ಕಾಪಾಡುವ ಮತ್ತು ಅವುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಪ್ರತ್ಯೇಕವಾಗಿ ಸಂಗೀತ ವಿಶ್ವವಿದ್ಯಾಲಯಗಳನ್ನು ಪ್ರಾರಂಬಿಸಿದೆ. ಇಂತಹ ವಿಶ್ವವಿದ್ಯಾಲಯಗಳು ಕೇವಲ ಅಕಡೆಮಿಕ್ ಆದ ಪಠ್ಯಕ್ರಮ ಆಧಾರಿತ ಸಂಗೀತ ಶಿಕ್ಷಣವನ್ನು ನೀಡುತ್ತಿವೆ. ಇಲ್ಲಿ ಈ ಅಕಡೆಮಿಕ್ ಪಠ್ಯಕ್ರಮದ ಜೊತೆಜೊತೆಯಲ್ಲಿಯೇ ವ್ಯಕ್ತಿಯ ಬದುಕಿನ ಜೊತೆಯಲ್ಲಿಯೆ ಬೆಳೆದು ಬಂದಿರುವ ಇಂತಹ ಜನಪದ ಸಂಗೀತ ಕಲೆಗಳನ್ನು ವಿಶ್ವವಿದ್ಯಾಲಯಗಳಲ್ಲಿ ಪರಿಚಯಿಸುವುದು ಅತ್ಯಂತ ಸೂಕ್ತವಾಗಿದೆ. ಈ ವಿಶ್ವವಿದ್ಯಾಲಯಗಳು ಅಳಿವಿನ ಅಂಚಿಗೆ ತಳಲ್ಪಟ್ಟಿರುವ ಕಲೆಗಳನ್ನು ಗುರುತಿಸಿ, ಇಂತಹ ಕಲಾವಿದರಿಂದ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಕಾರ್ಯಗಾರದಂತಹ ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳುವುದರಿಂದ ಕಲೆಗೂ ಮತ್ತು ಕಲಾವಿದರಿಗೂ ಸೂಕ್ತ ನ್ಯಾಯ ಒದಗಿಸಿದಂತಾಗುತ್ತದೆ. ಅಕಡೆಮಿಕ್ ಜ್ಞಾನ ಶಿಸ್ತಿಗಿಂತಲೂ ಜೀವನದ ಅನುಭವದ ಮೂಲಕ ಪಡೆದ ಶಿಕ್ಷಣ ಹೆಚ್ಚು ಸಂವೇದನಾಶೀಲವಾಗಿರುತ್ತದೆ. ಇದರಿಂದ ಸಮಾಜದಲ್ಲಿ ಉತ್ತಮ ಪರಿಸರವನ್ನು ರೂಪಿಸಬಹುದಾಗಿದೆ. ಜಾಗತೀಕರಣದ ಭರಾಟೆಯಲ್ಲಿ ತಿರಸ್ಕøತಗೊಂಡಿರುವ ದೇಶಿ ಕಲೆಗಳಿಗೂ ಮತ್ತೆ ಜೀವ ನೀಡಿದಂತಾಗುತ್ತದೆ. ಇದರಿಂದ ಕರ್ನಾಟಕದ ಅದರಲ್ಲೂ ಭಾರತದ ಸಾಂಸ್ಕøತಿಕ ವೈಭವದ ಹಿರಿಮೆಯನ್ನು ಹೆಚ್ಚಿಸಿದ ಕೀರ್ತಿಯು ಲಭಿಸುತ್ತದೆ.ಶಂಕ್ರಪ್ಪ ಬಾದಗಿಯವರು ಅತ್ಯಂತ ಕಡುಬಡತನದಲ್ಲಿಯೂ ತಮ್ಮ ಕಲೆಯ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ನಾಡಿನ ಜನತೆ ಹಾಗೂ ವಿವಿಧ ವರ್ಗದ ಸಹಕಾರ ಅತ್ಯಂತ ಅಗತ್ಯವಾಗಿದೆ. ಸರ್ಕಾರ ಇಂತಹ ಪ್ರತಿಭೆಗಳಿಗೆ ಸೂಕ್ತ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದೆ ಆದರೆ ಈ ಕಲೆಯು ಜೀವಂತಿಕೆಯನ್ನು ಪಡೆಯುತ್ತದೆ. ಈ ಅಪರೂಪದ ದೇಶಿ ಕಲೆಯನ್ನು ನಾಡಿನ ಜನತೆಗೆ ಪರಿಚಯಿಸುವ ಆಸಕ್ತಿ ಉಳ್ಳವರು ಶಂಕ್ರಪ್ಪ ಬಾದಿಗಿಯವರನ್ನು ಸಂಪರ್ಕಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಟ್ಟಿದ್ದೆ ಆದರೆ ಮುಕ್ತ ಮನಸ್ಸಿನಿಂದ ತಮ್ಮ ಕಲೆಯ ಪ್ರದರ್ಶನ ನೀಡುತ್ತಾರೆ. ಆಸಕ್ತಿ ಉಳ್ಳವರು ಶಂಕ್ರಪ್ಪ ಬಾದಿಗಿಯವರ ಮೊಬೈಲ್ ನಂಬರ್: 9741618957 ಗೆ ಸಂಪರ್ಕಿಸಬಹುದು. ಇದರಿಂದ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಕೀರ್ತಿಯು ಲಭಿಸುತ್ತದೆ. ಜೊತೆಗೆ ಅಳಿವಿನ ಅಂಚಿನಲ್ಲಿರುವ ಕಲೆಯನ್ನು ನಾಡಿನ ಜನತೆಗೆ ಪರಿಚಯಿಸಿದಂತಾಗುತ್ತದೆ. ಕಲೆಯನ್ನೆ ಉಸಿರಾಗಿಸಿಕೊಂಡು ನಿಸ್ವಾರ್ಥ ಸೇವೆಸಲ್ಲಿಸುತ್ತಿರುವ ಇವರ ಬದುಕು ಕಲೆಯ ಕಳೆಗೆ ಕಮರಿ ಹೋಗುತ್ತಿದೆ. ಇಂತಹ ಕಲಾವಿದನ ಬದುಕಿಗೆ ಕಲಾಸಕ್ತರು ಪ್ರೋತ್ಸಾಹ ನೀಡಿ ಇವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ. ಸರ್ಕಾರವು ಇಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ. ಇಂದು ಪ್ರಶಸ್ತಿಗಳು ರಾಜಕೀಯ ಒತ್ತಡದಿಂದ ಅನರ್ಹರ ಪಾಲಾಗುತ್ತಿವೆ. ಇದರಿಂದ ಪ್ರಶಸ್ತಿಗಳು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿವೆ. ಇದರ ಬದಲು ಸೂಕ್ತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಗೌರವಿಸುವುದರಿಂದ ನಮ್ಮ ನಾಡಿನ ಕಲೆಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಇದರಿಂದ ಪ್ರಶಸ್ತಿಗಳಿಗೂ ಗೌರವ ಉಳಿಯುತ್ತದೆ.

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

ವಸ್ತು ಪ್ರದರ್ಶನ

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

ದೇಸೀ ಆಟಗಳು

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮ‌ಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ‌ಉತ್ಸವ’-2025.
| ಡಾ.ಬಿ‌.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

Continue Reading

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending