ದಿನದ ಸುದ್ದಿ
ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು : ಎಂಪಿ ಜಿ.ಎಂ. ಸಿದ್ದೇಶ್ವರ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್ಹೌಸ್ಗಳು, ಡೆಲವರಿ ಚೇಂಬರ್ಗಳು, ಎಲೆಕ್ಟ್ರಿಕಲ್ ಸಬ್ಸ್ಟೇಷನ್ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕು,ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಸ್ವೆಹಳ್ಳಿ ಸೇರಿದಂತೆ ವಿವಿಧ ಏತನೀರಾವರಿ ಯೋಜನೆಗಳ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯಡಿ ಜಾಕ್ವೆಲ್ ಕಮ್ ಪಂಪ್ಹೌಸ್, ಡೆಲಿವರಿ ಛೇಂಬರ್, ಎಲೆಕ್ಟ್ರಿಕಲ್ ಸಬ್ಸ್ಟೇಷನ್, ರೈಸಿಂಗ್ ಮೈನ್ಗಳ ನಿರ್ಮಾಣಕ್ಕಾಗಿ ಹೊನ್ನಾಳಿ ತಾಲ್ಲೂಕಿನಲ್ಲಿ 6 ಎಕರೆ 03 ಗುಂಟೆ ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ 09 ಎಕರೆ 14 ಗುಂಟೆ ಸೇರಿದಂತೆ 15 ಎಕರೆ 17 ಗುಂಟೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತದೆ.
ಈಗಾಗಲೆ ಸಾಸ್ವೆಹಳ್ಳಿ ಗ್ರಾಮದಲ್ಲಿ 03 ಎಕರೆ 03 ಗುಂಟೆಗೆ ಸಂಬಂಧಿಸಿದಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ. ಅದೇ ರೀತಿ ಚನ್ನಗಿರಿ ತಾಲ್ಲೂಕು ಚಕ್ಕಲಿ ಗ್ರಾಮ ಬಳಿ ಪಂಪ್ಹೌಸ್, ಎಲೆಕ್ಟ್ರಿಕಲ್ ಸಬ್ಸ್ಟೇಷನ್, ಅಪ್ರೋಚ್ ರಸ್ತೆಗೆ ಅಗತ್ಯವಿರುವ ಒಟ್ಟು 07 ಎಕರೆ ಭೂಮಿಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಬಲಿ ಪಂಪ್ಹೌಸ್ ಹಾಗೂ ವಿದ್ಯುತ್ ಸಬ್ಸ್ಟೇಷನ್, ಚಿತ್ರದುರ್ಗ ತಾಲ್ಲೂಕು ಮದಕರಿಉರ ಮತ್ತು ದೊಡ್ಡಿಗನಾಳ್ ಗ್ರಾಮ ಬಳಿ ಡೆಲವರಿ ಚೇಂಬರ್, ಅಪ್ರೋಚ್ ರಸ್ತೆಗಾಗಿ ಸದ್ಯ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ನಿಗಮಕ್ಕೆ ಹಸ್ತಾಂತರ ಮಾಡುವ ಕಾರ್ಯ ಬಾಕಿ ಇದೆ. ಭೂಸ್ವಾಧೀನ ಕಾರ್ಯವನ್ನು ವಿಳಂಬಕ್ಕೆ ಅವಕಾಶವಿಲ್ಲದಂತೆ ಶೀಘ್ರ ಪೂರ್ಣಗೊಳಿಸಬೇಕು. ಯಾವುದೇ ಅಡೆತಡೆಗಳು ಇದ್ದಲ್ಲಿ ಕೂಡಲೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದರು ಸೂಚನೆ ನೀಡಿದರು.
ಇದನ್ನೂ ಓದಿ | ಹರಿಹರ ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ
ಹೊನ್ನಾಳಿ ತಾಲ್ಲೂಕಿನಲ್ಲಿ ಪಂಪ್ಹೌಸ್-1 ರ ಬಳಿ ನಿರ್ಮಿಸಲು ಉದ್ದೇಶಿಸಿರುವ ಎಲೆಕ್ಟ್ರಿಕಲ್ ಸಬ್ಸ್ಟೇಷನ್ಗೆ ವಿದ್ಯುತ್ ಸಂಪರ್ಕಕ್ಕಾಗಿ ದಿಡಗೂರು, ಬೀರಗೊಂಡನಹಳ್ಳಿ, ಚಿಕ್ಕಬಾಸೂರು, ಉಜ್ಜನೀಪುರ, ಹೊಟ್ಯಾಪುರ, ಸದಾಶಿವಪುರ, ಸಾಸ್ವೆಹಳ್ಳಿ, ಮಾವಿನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ಒಟ್ಟು 49 ವಿದ್ಯುತ್ ಟವರ್ಗಳನ್ನು ನಿರ್ಮಿಸಬೇಕಿದ್ದು, 48 ಎಕರೆ ಭೂಮಿಯನ್ನು ಗುರುತಿಸಲಾಗಿದೆ.
ಇದಕ್ಕಾಗಿ ಅಗತ್ಯ ಜಾಗ ಮತ್ತು ಕಾರಿಡಾರ್ ಹಾದುಹೋಗುವ ಮಾರ್ಗದ ಸರ್ವೆ ನಕ್ಷೆ ಹಾಗೂ ಬಾಧಿತರಾಗುವ ರೈತರ ಭೂಮಿಯ ಸರ್ವೆ ನಂಬರ್ಗಳೊಂದಿಗೆ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಪರಿಹಾರಮೊತ್ತ ನಿಗದಿಪಡಿಸುವುದು ಬಾಕಿ ಇದೆ. ಹೊಳಲ್ಕೆರೆ ತಾಲ್ಲೂಕು ಸಾಸಲು ಗ್ರಾಮ ಬಳಿಯ ಸಬ್ಸ್ಟೇಷನ್ಗೆ 20 ಟವರ್ಗಳ ನಿರ್ಮಾಣಕ್ಕೆ ಸರ್ವೆ ಪೂರ್ಣಗೊಂಡಿದೆ.
ಅದೇ ರೀತಿ ಕೆರೆಬಿಳಚಿ ಗ್ರಾಮ ಬಳಿ ವಿದ್ಯುತ್ ಸಬ್ಸ್ಟೇಷನ್ಗೆ ವಿದ್ಯುತ್ ಸಂಪರ್ಕಿಸಲು 4.50 ಕಿ.ಮೀ. ಮಾರ್ಗದಲ್ಲಿ 20 ವಿದ್ಯುತ್ ಟವರ್ ನಿರ್ಮಾಣಕ್ಕೆ ಜಕ್ಕಲಿ, ಸೋಮಲಾಪುರ, ಕೆರೆಬಿಳಚಿ ಗ್ರಾಮಗಳ ಸರ್ವೆ ಕಾರ್ಯವನ್ನು ಚನ್ನಗಿರಿ ತಹಸಿಲ್ದಾರರು ತ್ವರಿತವಾಗಿ ಮಾಡಿಸಬೇಕು, ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಬಾಕಿ ಇರುವ ಸರ್ವೆ ಕಾರ್ಯವನ್ನು ಆಯಾ ತಹಸಿಲ್ದಾರರು ಪೂರ್ಣಗೊಳಿಸಬೇಕು. ಪರಿಹಾರ ಮೊತ್ತದ ದರವನ್ನು ಒಂದು ವಾರದೊಳಗೆ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಸಂಸದರು ಮಾತನಾಡಿ, ಅಧಿಕಾರಿಗಳು ಸರ್ವೆ ಕಾರ್ಯ, ಭೂಸ್ವಾಧೀನದಂತಹ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಫಾಲೋಅಪ್ ಮಾಡುವುದಿಲ್ಲ, ಹೀಗಾಗಿ ಯೋಜನೆಗಳಲ್ಲಿ ಪ್ರಗತಿಯಾಗುವುದಿಲ್ಲ. ಅಧಿಕಾರಿಗಳ ಇಂತಹ ಕಾರ್ಯವೈಖರಿಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜನಹಳ್ಳಿ ಏತನೀರಾವರಿ
ಜಿಲ್ಲೆಯ ಜಗಳೂರು ತಾಲ್ಲೂಕಿನ 03 ಮತ್ತು ದಾವಣಗೆರೆ ತಾಲ್ಲೂಕಿನ 19 ಸೇರಿದಂತೆ ಒಟ್ಟು 22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆಯಲ್ಲಿ ಮೊದಲನೆ ಹಂತದಲ್ಲಿ ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮ ಬಳಿ ತುಂಗಭದ್ರಾ ನದಿಯಿಂದ ನೀರೆತ್ತಿ 28 ಕಿ.ಮೀ. ದೂರದಲ್ಲಿರುವ ದಾವಣಗೆರೆ ತಾಲ್ಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಹತ್ತಿರದ ಎರಡನೆ ಹಂತಕ್ಕೆ ನೀರೊದಗಿಸುವುದು.
ಎರಡನೆ ಹಂತದಲ್ಲಿ ಉದ್ದೇಶಿತ 22 ಕೆರೆಗಳಿಗೆ 150 ಕಿ.ಮೀ. ಪೈಪ್ಲೈನ್ ಮುಖಾಂತರ ನೀರೊದಗಿಸುವ ಯೋಜನೆ ಇದಾಗಿದೆ. ಯೋಜನೆಯಡಿ ಸದ್ಯ 2022 ರ ಜುಲೈ 31 ರವರೆಗೆ ನಿರ್ವಹಣೆ ಗುತ್ತಿಗೆಯನ್ನು ನೀಡಲಾಗಿದೆ ಎಂದು ಯೋಜನೆಯ ಕಾರ್ಯಪಾಲಕ ಅಭಿಯಂತರ ಮಲ್ಲಪ್ಪ ಹೇಳಿದರು.
ಹಲಸಬಾಳು ಪಂಪ್ಹೌಸ್ಗೆ ಸಂಪರ್ಕಿಸುವ 225 ಮೀ. ಉದ್ದ ಹಾಗೂ ಮಲ್ಲಶೆಟ್ಟಿಹಳ್ಳಿ ಬಳಿಯ 50 ಮೀ. ಉದ್ದದ ಇಂಟೇಕ್ ಚಾನಲ್ನ ಹೂಳನ್ನು ತೆಗೆಸಲು ಸೂಚನೆ ನೀಡಲಾಗಿದ್ದು, ಸದ್ಯ ಇಂಟೇಕ್ಚಾನಲ್ನಲ್ಲಿ ನೀರು ಖಾಲಿಯಿದ್ದು, ಮಳೆಗಾಲ ಪ್ರಾರಂಭವಾಗುವುದರ ಒಳಗಾಗಿ ಹೂಳು ತೆಗೆಸಬೇಕು ಎಂದು ಸಂಸದರು ಸೂಚನೆ ನೀಡಿದರು.
ಏತನೀರಾವರಿ ಯೋಜನೆಯ ರಾಷ್ಟ್ರೀಯ ಹೆದ್ದಾರಿ 04 ರ ಪಕ್ಕದಲ್ಲಿರುವ ಪೈಪ್ಲೈನ್ಅನ್ನು ಸ್ಥಳಾಂತರಿಸುವ ಕಾಮಗಾರಿ ತ್ವರಿತವಾಗಿ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಏತ ನೀರಾವರಿ ಯೋಜನೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಪೈಪ್ಲೈನ್ ಸ್ಥಳಾಂತರಿಸುವ ಕಾರ್ಯ ಶೀಘ್ರ ಪೂರ್ಣಗೊಳ್ಳಬೇಕು ಎಂದರು.
ಉತ್ತರಿಸಿದ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಈಗಾಗಲೆ 12 ಕಿ.ಮೀ. ಪೈಕಿ 7.5 ಕಿ.ಮೀ. ಪೈಪ್ಲೈನ್ ಸ್ಥಳಾಂತರ ಪೂರ್ಣಗೊಂಡಿದ್ದು, ಇನ್ನೂ 4.5 ಕಿ.ಮೀ. ಕಾಮಗಾರಿ ಬಾಕಿ ಇದೆ. ಭೂಮಿ ಹಸ್ತಾಂತರ ಪ್ರಕ್ರಿಯೆಯಲ್ಲಿ ಸಮಸ್ಯೆಯಿದ್ದು, ವಿಳಂಬವಾಗುತ್ತಿದೆ ಎಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಭೂಮಿ ಸ್ವಾಧೀನಕ್ಕೆ ಪಡೆದು, ಪೊಲೀಸ್ ಬಂದೋಬಸ್ತ್ ತೆಗೆದುಕೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ರಾ.ಹೆ. ನಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ
ದಾವಣಗೆರೆಯಿಂದ ಹಾವೇರಿವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಫ್ಲೈಓವರ್ಗಳ ಬಳಿ ಹಾಗೂ ಕೆಳ ಸೇತುವೆ ಬಳಿ ಮಳೆ ನೀರು ರಸ್ತೆಯ ಮೇಲೆಯೇ ನಿಲ್ಲುತ್ತಿದ್ದು, ಇದರಿಂದ ವೇಗವಾಗಿ ಬರುವ ವಾಹನಗಳ ಗಾಜುಗಳಿಗೆ ನೀರು ಸಿಡಿದು ಮುಂದಿನ ರಸ್ತೆ ಕಾಣದಂತಾಗುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆಗಳಿವೆ.
ತಾವೇ ಖುದ್ದಾಗಿ ಇದರ ಅನುಭವ ಪಡೆದಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ, ಸೂಕ್ತ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲುವಂತಿರಬಾರದು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ, ಕರ್ನಾಟಕ ನೀರಾವರಿ ನಿಗಮ ತುಂಗಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಯತೀಶ್ಚಂದ್ರ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸೇರಿದಂತೆ ಬೆಸ್ಕಾಂ, ಕೆಪಿಟಿಸಿಎಲ್, ಲೋಕೋಪಯೋಗಿ ಇಲಾಖೆಗಳ ಇಂಜಿನಿಯರ್ಗಳು, ತಹಸಿಲ್ದಾರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.
ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.
ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ4 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ
-
ಅಂಕಣ1 day ago
ಕವಿತೆ | ಅವ ಸುಡುತ್ತಾನೆ
-
ದಿನದ ಸುದ್ದಿ4 days ago
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ
-
ದಿನದ ಸುದ್ದಿ1 hour ago
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್