ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ9 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ24 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

