Connect with us

ದಿನದ ಸುದ್ದಿ

ಮೈಲಾರ ಕಾರ್ಣಿಕೋತ್ಸವ,ಕುರವತ್ತಿ ಜಾತ್ರೆಗೆ ಸಾರ್ವಜನಿಕರು ಭಾಗವಹಿಸುವುದು ಸಂಪೂರ್ಣ ನಿಷೇಧ: ಡಿಸಿ ಮಾಲಪಾಟಿ

Published

on

ಸುದ್ದಿದಿನ,ಬಳ್ಳಾರಿ : ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗ ಸ್ವಾಮಿಯ ವಾರ್ಷಿಕ ಜಾತ್ರಾ ಕಾರ್ಣಿಕೋತ್ಸವ ಹಾಗೂ ಕುರವತ್ತಿಯ ಶ್ರೀ ಮಲ್ಲಿಕಾರ್ಜುನ ಮತ್ತು ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸಂಪೂರ್ಣನಿಷೇಧಿಸಲಾಗಿದ್ದು, ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯೇ ಸಂಹಿತೆ 1973ರ ಕಲಂ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಮೈಲಾರಲಿಂಗ ಸ್ವಾಮಿಯ ವಾರ್ಷಿಕ ಜಾತ್ರೆಯು ಫೆ.19ರಿಂದ ಮಾ.2ರವರೆಗೆ ಜರುಗಲಿದ್ದು,ಮಾ.1ರಂದು ಕಾರ್ಣಿಕೋತ್ಸವ ನಡೆಯಲಿದೆ. ಈ ಜಾತ್ರೆಯ ಕಾರ್ಣಿಕೋತ್ಸವವನ್ನು ವಿಕ್ಷಿಸಲು ರಾಜ್ಯದ ನಾನಾ ಕಡೆಯಿಂದ ಸುಮಾರು 09 ರಿಂದ 10 ಲಕ್ಷ ಜನರು ಸೇರುತ್ತಾರೆ ಮತ್ತು ಕುರುವತ್ತಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವವು ಮಾ.7ರಿಂದ 15ರವರೆಗೆ ಜರುಗಲಿದೆ.

ಈ ಸದರಿ ದಿನಗಳಂದು 144 ಸೆಕ್ಷನ್ ಜಾರಿಗೊಳಿಸುವುದರ ಮೂಲಕ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. ಆದರೆ ರೂಢಿ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು, ಕಾರ್ಣಿಕೋತ್ಸವ, ರಥೋತ್ಸವ ಧಾರ್ಮಿಕ ಆಚರಣೆಗಳನ್ನು ದೇವಸ್ಥಾನದ ವತಿಯಿಂದ ನಿರ್ವಹಿಸಲು ಕ್ರಮ ಜರುಗಿಸಲಾಗಿದೆ ಎಂದು ಅವರು ವಿವರಿಸಿದರು.

ಸಾರ್ವಜನಿಕರು ಈ ವರ್ಷ ಮೈಲಾರ ಶ್ರೀ ಮೈಲಾರಲಿಂಗ ಸ್ವಾಮಿ ಕಾರ್ಣಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಕುರುವತ್ತಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಭಾಗವಹಿಸದಂತೆ ಮನವಿ ಮಾಡಿದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಈ ಬಾರಿ ಭಕ್ತಾದಿಗಳು ತಮ್ಮ ತಮ್ಮ ಮನೆಯಲ್ಲಿಯೇ ಮೈಲಾರಲಿಂಗರನ್ನು ಪೂಜಿಸಿ ಎಂದರು.

ಜಾತ್ರಾ ಮಹೋತ್ಸವ ಪ್ರಯುಕ್ತ ಮೈಲಾರ ಮತ್ತು ಕುರುವತ್ತಿ ಕ್ಷೇತ್ರಕ್ಕೆ ವಿಶೇಷ ಬಸ್ಸುಗಳ ವ್ಯವಸ್ಥೆ ಇರುವುದಿಲ್ಲ, ಜಾತ್ರಾ ಪ್ರದೇಶದಲ್ಲಿ ವಾಣಿಜ್ಯ ವಹಿವಾಟುಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಫೆ.15ರಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೊರಡಿಸಿದ ಕೋವಿಡ್ ನಿಯಮಾವಳಿಗಳ ಅನುಸಾರ ಕಾರ್ಣಿಕೋತ್ಸವ ಮತ್ತು ಜಾತ್ರಾ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದ ಡಿಸಿ ಮಾಲಪಾಟಿ ಅವರು ಈ ಅಂಶಗಳನ್ನು ವಿವಿಧ ಮಾಧ್ಯಮಗಳ ಮೂಲಕ ಫ್ಲೇಕ್ಸ್, ಬ್ಯಾನರ್, ಪೋಸ್ಟ್‍ರ್ಸ್ ಹಾಕಿ ಸಾಕಷ್ಟು ಪ್ರಚುರಪಡಿಸಲಾಗುವುದು. ಹರಪನಹಳ್ಳಿ, ಹೂವಿನಹಡಗಲಿ ಎಲ್ಲಾ ಗ್ರಾಮಗಳಲ್ಲಿ ಡಂಗೂರ ಹಾಕುವ ಮೂಲಕವಾಗಿ ಪ್ರಚಾರ ಪಡಿಸಲು ಕ್ರಮ ಜರುಗಿಸಲಾಗುವುದು ಎಂದರು.

ಹಾವೇರಿ,ಗದಗ,ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸಹ ಈ ವಿಷಯವನ್ನು ಪ್ರಸ್ತಾಪಿಸಿ ಪ್ರಚಾರ ಪಡಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ವಿವರಿಸಿದರು.

ಕಾರ್ಣಿಕ ನುಡಿ ಸ್ಪಷ್ಟವಾಗಿ ಕೇಳುವ ಹಾಗೆ ದ್ವನಿ ವರ್ಧಕ ವ್ಯವಸ್ಥೆ ಮತ್ತು ಕಾರ್ಣಿಕ ನುಡಿಯನ್ನು ಸೆರೆಯಿಡಿಯಲು ಅತ್ಯಾಧುನಿಕ ಸಲಕರಣೆಗಳನ್ನು ಬಳಸಿಕೊಂಡು ರೇಕಾರ್ಡ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ನಿರ್ವಹಿಸಲಾಗುವುದು ಮತ್ತು ಕಾರ್ಣಿಕ ನುಡಿಯನ್ನು ಮಾಧ್ಯಮಗಳ ಮೂಲಕ ಪ್ರಚಾರಪಡಿಸಲು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕರಿಗೆ ಭಕ್ತಾಧಿಗಳಿಗೆ ಮೈಲಾರ ಗ್ರಾಮದಲ್ಲಿ ಫೆ.19ರಿಂದ ಮಾ.2ರವರೆಗೆ ವಾಸ್ತವ್ಯ ಮಾಡಲು ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದರು.

ಮೈಲಾರ,ಕುರುವತ್ತಿ ಗ್ರಾಮದ ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಈ ನಿಟ್ಟಿನಲ್ಲು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಸೂಕ್ತ ಕ್ರಮ ಕೈಕೊಳ್ಳಲಾಗಿದೆ. ಆರೋಗ್ಯ ಇಲಾಖೆಯಿಂದ ಪ್ರತಿ ವರ್ಷದಂತೆ ವೈದ್ಯರ ಸಿಬ್ಬಂದಿಗಳನ್ನು ನಿಯೋಜಿಸಿ ಅಗತ್ಯ ಕ್ರಮ ಜರುಗಿಸಲು ಮತ್ತು ಮೋಬೈಲ್ ವೈದ್ಯಾಧಿಕಾರಿಗಳ ತಂಡ ಕಾರ್ಣಿಕೋತ್ಸವ ನಡೆಯುವ ವೈದಾನದಲ್ಲಿ ಕಾರ್ಯನಿರ್ವಹಿಸಲು ಕ್ರಮ ಜರುಗಿಸಲಾಗಿದೆ.

ಪ್ರತಿ ವರ್ಷದಂತೆ ಭದ್ರ ಜಲಾಶಯದಿಂದ ಕುಡಿಯುವ ನೀರಿನ ವ್ಯವಸ್ಥೆಗಾಗಿ ನೀರನ್ನು ತುಂಗ ಭದ್ರ ನದಿಗೆ ನೀರನ್ನು ಹರಿಸಲು ಕ್ರಮ ಜರುಗಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ನೀರನ್ನು ಹರಿಸಲು ಅಗತ್ಯ ಕ್ರಮ ಜರುಗಿಸಲಾಗಿದೆ ಎಂದರು.

5 ಕಡೆ ಚೆಕ್‍ಪೋಸ್ಟ್ ಕಾರ್ಯಾರಂಭ

ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರಾ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮದ ಭಕ್ತಾದಿಗಳನ್ನು ಹೊರತುಪಡಿಸಿ ಹೊರಗಡೆಯಿಂದ ಭಕ್ತರು ಮತ್ತು ಸಾರ್ವಜನಿಕರು ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ 5 ಕಡೆ ಚೆಕ್‍ಪೋಸ್ಟ್‍ಗಳನ್ನು ಹಾಕಲು ಉದ್ದೇಶಿಸಲಾಗಿದ್ದು,ಅವುಗಳು ಫೆ.19ರ ಮಧ್ಯಾಹ್ನದಿಂದಲೇ ಕಾರ್ಯಾರಂಭವಾಗಲಿದ್ದು,ಮಾ.2ರ ಸಂಜೆಯವರೆಗೆ ಇರಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ವಿವರಿಸಿದರು.

ಪೂಜಾರ ಪೆಟ್ರೋಲ್ ಬಂಕ್,ಕುರವತ್ತಿ ಕ್ರಾಸ್,ಗುತ್ತಲ್ ಕ್ರಾಸ್,ಡೊಂಗರಹಳ್ಳಿ,ಕುರವತ್ತಿ ಗಣೇಶ ಮಂದಿರದ ಹತ್ತಿರ ಚೆಕ್‍ಪೋಸ್ಟ್‍ಗಳನ್ನು ಪೊಲೀಸ್ ಇಲಾಖೆ ವತಿಯಿಂದ ಹಾಕಲಾಗುತ್ತಿದ್ದು,ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ವಿವರಿಸಿದ ಎಸ್ಪಿ ಸೈದುಲು ಅಡಾವತ್ ಅವರು ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.ಈ ಕುರಿತು ಜನರಿಗೆ ನಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿಯೂ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದರು.

ತಿಮ್ಮಲಾಪುರದಲ್ಲಿ ಫೆ.20ರಂದು ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ತಿಮ್ಮಲಾಪುರ ಗ್ರಾಮದಲ್ಲಿ ಫೆ.20ರಂದು ಗ್ರಾಮವಾಸ್ತವ್ಯವನ್ನು ಮಾಡುತ್ತಿದ್ದೇನೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದರು.

ಅಂದು ಗ್ರಾಮದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಗ್ರಾಮದ ಜನರಿಂದ ಪಿಂಚಣಿ ಸಂಬಂಧಿತ ಸಮಸ್ಯೆಗಳು,ಕಂದಾಯ ಹಾಗೂ ಭೂ ಸಂಬಂಧಿತ ಸಮಸ್ಯೆಗಳು,ರೇಷನ್ ಕಾರ್ಡ್ ಸಮಸ್ಯೆಗಳನ್ನು ಆಲಿಸಲಾಗುವುದು.ಸ್ಥಳದಲ್ಲಿಯೇ ಪರಿಹಾರ ದೊರಕುವಂತಿದ್ದರೇ ಅವುಗಳನ್ನು ಅಲ್ಲಿಯೇ ಬಗೆಹರಿಸಲಾಗುವುದು.ಉಳಿದವುಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ನಿರ್ದೇಶಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮದಲ್ಲಿರುವ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು; ಗ್ರಾಮದ ಸೌಕರ್ಯಗಳನ್ನು ಪರಿಶೀಲಿಸಲಾಗುವುದು;ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದರು. ಈ ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending