ದಿನದ ಸುದ್ದಿ
ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?
ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.
ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.
ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.
ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.
ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.
ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.
ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.
ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.
ಎರಡನೇ ತಂಡದ ಆನೆಗಳ ಆಗಮನ
ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.
ವಿಶೇಷ ತರಬೇತಿ ಮತ್ತು ತಾಲೀಮು
ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.
ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ
ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.
ಪೂಜಾ ಕಾರ್ಯಕ್ರಮಗಳು
ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.
ವನ್ಯಜೀವಿ ಸಪ್ತಾಹ-2018
ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.
ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು
ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ3 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


