Connect with us

ದಿನದ ಸುದ್ದಿ

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ 2 ದಿನದ ಬ್ಯಾಂಕ್ ಮುಷ್ಕರ

Published

on

ಕೆ.ರಾಘವೇಂದ್ರ ನಾಯರಿ,ಪ್ರಧಾನ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘ, ದಾವಣಗೆರೆ

ಸುದ್ದಿದಿನ, ದಾವಣಗೆರೆ : ಕೇಂದ್ರ ಸರಕಾರ ಇತ್ತೀಚಿಗೆ ಮಂಡಿಸಿದ ಬಜೆಟ್‌ನಲ್ಲಿ ಬ್ಯಾಂಕ್ ಖಾಸಗೀಕರಣ ಪ್ರಸ್ತಾಪವನ್ನು ವಿರೋಧಿಸಿ ದೇಶವ್ಯಾಪಿ ಎರಡು ದಿನಗಳ ಬ್ಯಾಂಕ್ ಮುಷ್ಕರವನ್ನು ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ‌ ತಿಳಿಸಿದ್ದಾರೆ.

ಕಳೆದ ಪೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವರು ಐಡಿಬಿಐ ಬ್ಯಾಂಕ್ ಹಾಗೂ 2 ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗಿಕರಣ, ಜೀವ ವಿಮಾ ನಿಗಮದಲ್ಲಿ ಬಂಡವಾಳ ಹಿಂತೆಗೆತ, ಒಂದು ಸಾಮಾನ್ಯ ವಿಮಾ ಕಂಪೆನಿಯ ಖಾಸಗೀಕರಣ, ವಿಮಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಶೇ.74%ವರೆಗೆ ಅವಕಾಶ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳಲ್ಲಿ ಬಂಡವಾಳ ಹಿಂತೆಗೆತ ಮತ್ತು ಅವುಗಳು ಮಾರಾಟ ಮುಂತಾದ ಪ್ರಸ್ತಾಪಗಳನ್ನು ಮುಂದಿಟ್ಟಿದ್ದಾರೆ.

ದೇಶ ವಿರೋಧಿ ಮತ್ತು ಜನ ವಿರೋಧಿಯಾದ ಈ ಪ್ರಸ್ತಾಪಗಳನ್ನು ಖಂಡಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು (UFBU) ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಲ್ಲಿ‌ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಎಲ್ಲಾ 9 ಸಂಘಟನೆಗಳ ಮತ್ತು ಗ್ರಾಮೀಣ ಬ್ಯಾಂಕ್‌ಗಳ ಸಂಘಟನೆಗಳ ಸುಮಾರು 10 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ‌.

ಇದನ್ನೂ ಓದಿ |ದಾವಣಗೆರೆ | ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆ ಉಪ ನಿರ್ದೇಶಕ ಕೆ.ಎಂ. ಪ್ರಥಮ ಅವರ ಕಚೇರಿ ಮೇಲೆ ಎಸಿಬಿ ದಾಳಿ

1969 ರಲ್ಲಿ 14 ಹಾಗೂ 1980 ರಲ್ಲಿ ಇನ್ನೂ 6 ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲಾಗಿತ್ತು. ನಮ್ಮ ದೇಶದಲ್ಲಿ ಜುಲೈ 19 ನ್ನು ಬ್ಯಾಂಕ್ ರಾಷ್ಟ್ರೀಕರಣ ದಿನವನ್ನಾಗಿಯೂ ಆಚರಿಸಲಾಗುತ್ತಿದೆ. 1975 ರಲ್ಲಿ ಗ್ರಾಮೀಣ ಬ್ಯಾಂಕುಗಳನ್ನು ಸ್ಥಾಪಿಸಲಾಯಿತು. ಇಂತಹ ಬ್ಯಾಂಕುಗಳನ್ನು ಸ್ಥಾಪಿಸಿದ ಉದ್ದೇಶ ಅತೀ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರ ಉಳಿತಾಯದ ಹಣವನ್ನು ಸಂಗ್ರಹಿಸಿ, ಅವರ ಹಣಕ್ಕೆ ಭದ್ರತೆ ಮತ್ತು ಬಡ್ಡಿಯನ್ನು ನೀಡಿ, ತನ್ಮೂಲಕವಾಗಿ ಅತೀ ಹೆಚ್ಚು ಉತ್ಪಾದಕರಿಗೆ ಸಾಲ ಸೌಲಭ್ಯವನ್ನು ಒದಗಿಸುವುದಾಗಿದೆ.

ಬ್ಯಾಂಕ್ ರಾಷ್ಟ್ರೀಕರಣದ ಮುಂಚಿನ ದಿನಗಳಲ್ಲಿ ಬ್ಯಾಂಕುಗಳ ಮುಳುಗುವಿಕೆ/ಮುಚ್ಚುವಿಕೆ ಸರ್ವೇ ಸಾಮಾನ್ಯವಾಗಿತ್ತು. 1947 ರಿಂದ 1969 ರ ಅವಧಿಯಲ್ಲಿ ಒಟ್ಟು 550 ಖಾಸಗಿ ಬ್ಯಾಂಕುಗಳು ಬಾಗಿಲು ಮುಚ್ಚಿದ್ದವು. ಈ ಬ್ಯಾಂಕುಗಳಲ್ಲಿ ತಮ್ಮ ಉಳಿತಾಯದ ಹಣವನ್ನು ಠೇವಣಿಯಾಗಿಟ್ಟಿದ್ದ ಜನ ಸಾಮಾನ್ಯರು ಹೆಚ್ಚು ಕಡಿಮೆ ತಮ್ಮೆಲ್ಲ ಕಷ್ಟಾರ್ಜಿತ ಉಳಿತಾಯದ ಹಣವನ್ನು ಕಳೆದುಕೊಂಡರು.

ಜನರು ಈ ಬ್ಯಾಂಕುಗಳ ಮೇಲಿಟ್ಟಿದ್ದ ವಿಶ್ವಾಸ, ನಂಬಿಕೆಗೆ ಧಕ್ಕೆಯುಂಟಾಯಿತು. ಬ್ಯಾಂಕ್ ರಾಷ್ಟ್ರೀಕರಣದ ತರುವಾಯ ಕೂಡಾ ಇದುವರೆಗೂ 38 ಖಾಸಗಿ ಬ್ಯಾಂಕುಗಳು ಮುಳುಗಿವೆ‌. ಗ್ಲೋಬಲ್ ಟ್ರಸ್ಟ್ ಬ್ಯಾಂಕ್, ಸೆಂಚುರಿಯನ್ ಬ್ಯಾಂಕ್, ಟೈಮ್ಸ್ ಬ್ಯಾಂಕ್, ಬ್ಯಾಂಕ್ ಆಪ್ ಪಂಜಾಬ್, ಲಕ್ಷ್ಮೀ ವಿಲಾಸ ಬ್ಯಾಂಕುಗಳು ಇದರಲ್ಲಿ ಸೇರಿವೆ‌. ಆದರೆ ಅದೇ ಸಮಯದಲ್ಲಿ ನಮ್ಮ ದೇಶದ ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳು ಮುಳುಗಿಲ್ಲ ಮಾತ್ರವಲ್ಲ, ಮುಳುಗಿ ಹೋಗಿದ್ದ ಖಾಸಗಿ ಬ್ಯಾಂಕುಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡು ಠೇವಣಿದಾರರ ಹಿತಾಸಕ್ತಿಗಳನ್ನು ಕಾಪಾಡಿವೆ ಎಂಬುದನ್ನು ಗಮನಿಸಬೇಕು.

2008 ರ ಜಾಗತಿಕ ಬ್ಯಾಂಕಿಂಗ್ ಕುಸಿತದ ಸಂದರ್ಭದಲ್ಲಿ ಸಹ ಭಾರತದ ಬ್ಯಾಂಕಿಂಗ್ ವಲಯವು ಯಾವುದೇ ಅಪಾಯಕ್ಕೆ ಸಿಲುಕಲಿಲ್ಲ. ಬಲಾಢ್ಯ ಯುರೋಪಿಯನ್ ಮತ್ತು ಅಮೇರಿಕಾದ ಖಾಸಗಿ ಬ್ಯಾಂಕುಗಳು ತರಗಲೆಯಂತೆ ಕುಸಿಯುತ್ತಿದ್ದಾಗ, ಬೊಕ್ಕಸದಿಂದ ಅಪಾರ ಮೊತ್ತದ ಹಣ ನೀಡಿ ಸರಕಾರಗಳೇ ಅವುಗಳನ್ನು ರಕ್ಷಿಸಿದ ಇತಿಹಾಸ ನಮ್ಮ ಕಣ್ಣ ಮುಂದಿದೆ. ಅದಕ್ಕೂ ಹಿಂದೆ 1980 ರಲ್ಲಿ ಜಪಾನಿನ, 1990 ರಲ್ಲಿ ಕೊರಿಯಾದ ಮತ್ತು ಇತ್ತೀಚೆಗೆ 2017 ರಲ್ಲಿ ಇಟಲಿಯ ಖಾಸಗಿ ಬ್ಯಾಂಕುಗಳನ್ನು ಅದೇ ರೀತಿ ರಕ್ಷಿಸಲಾಗಿದೆ.

ಇನ್ನು ನಮ್ಮ ರಾಷ್ಟ್ರೀಕೃತ ಬ್ಯಾಂಕುಗಳ ಬೆಳವಣಿಗೆಯನ್ನು ಗಮನಿಸಿದಾಗ ನಮ್ಮ ದೇಶದಲ್ಲಿ 1969 ರ ಜೂನ್ ತಿಂಗಳಲ್ಲಿ ಕೇವಲ 8961 ರಷ್ಟಿದ್ದ ಬ್ಯಾಂಕ್ ಶಾಖೆಗಳ ಸಂಖ್ಯೆ 2020 ರಲ್ಲಿ 146904 ಕ್ಕೆ ತಲುಪಿದೆ. 1969 ರಲ್ಲಿ ಕೇವಲ ರೂ.4700 ಕೋಟಿಯಷ್ಟಿದ್ದ ಠೇವಣಿಗಳ ಮೊತ್ತ ಪ್ರಸ್ತುತ 1,47,98,000 ಕೋಟಿಯಷ್ಟಾಗಿದೆ. ಬ್ಯಾಂಕ್ ರಾಷ್ಟ್ರೀಕರಣದ ನಂತರ ಸಣ್ಣ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು, ಚಿಕ್ಕ ಮತ್ತು ಮಧ್ಯಮ ರೈತರು, ಕುಶಲ ಕರ್ಮಿಗಳು, ಚಿಕ್ಕ ವ್ಯಾಪಾರಸ್ಥರು, ಸ್ವ ಉದ್ಯೋಗಿಗಳು, ಚಿಲ್ಲರೆ ವ್ಯಾಪಾರಸ್ಥರು ಮತ್ತು ಸಣ್ಣ ಉದ್ಯಮಿಗಳು, ಮಹಿಳೆಯರು, ವಿದ್ಯಾರ್ಥಿಗಳು ಅತೀ ಹೆಚ್ಚಿನ ಪ್ರಮಾಣದಲ್ಲಿ ಸಹಾಯವನ್ನು ಪಡೆದರು‌.

ಆದ್ಯತಾ ವಲಯಗಳಿಗೆ ಸಾಲ ನೀಡುವಲ್ಲಿ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಯಿತು. ಆರ್ಥಿಕ ಕ್ರಾಂತಿಯ ಮೂಲಕ ದೇಶದಲ್ಲಿ ಬಡತನ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿಗೆ ದೊಡ್ಡ ಕೊಡುಗೆ ನೀಡಿರುವ ರಾಷ್ಟ್ರೀಕೃತ ಬ್ಯಾಂಕುಗಳನ್ನು ವಿಲೀನಗೊಳಿಸಿ, ಅವುಗಳ ಒಡೆತನವನ್ನು ಖಾಸಗಿ ಬಂಡವಾಳಶಾಹಿಗಳಿಗೆ ನೀಡುವ ಹುನ್ನಾರ ಈಗ ನಡೆದಿದೆ. ಮಾಹಿತಿ ಹಕ್ಕುಗಳ ಕಾಯಿದೆಯಡಿ ಪಡೆಯಲಾದ ಮಾಹಿತಿಯ ಪ್ರಕಾರ 2019 ರವರೆಗೆ ಕೇವಲ 50 ಜನ ಸಾಲಗಾರರ ರೂ.68607 ಕೋಟಿಗಳಷ್ಟು ಸಾಲವನ್ನು ಮನ್ನಾ ಮಾಡಲಾಗಿದೆ‌ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ‌.

ಇದರಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಯಂತಹ ಮಹಾನುಭಾವರೂ ಇದ್ದಾರೆ‌. ಅಧಿಕೃತವಾಗಿ ಕೆಟ್ಟ ಸಾಲಗಳು ಎಂದು ಪರಿಗಣಿಸಲಾಗಿರುವ ರೂ.450000 ಕೋಟಿಗಳ ಮೊತ್ತದ ಸಾಲ ಕೇವಲ 100 ಅತೀ ದೊಡ್ಡ ಸಾಲಗಾರರಿಗೆ ಸೇರಿದ್ದು ಎಂಬುದನ್ನು ರಿಸರ್ವ್ ಬ್ಯಾಂಕ್ ವರದಿಗಳು ಹೇಳುತ್ತವೆ‌.

ಈ ದೊಡ್ಡ ಸಾಲಗಾರರಿಂದ ಸಾಲ ವಸೂಲಿಗೆ ಪರಿಣಾಮಕಾರಿಯಾದ ದಿಟ್ಟ ಪ್ರಯತ್ನ ಮಾಡುವುದರ ಬದಲಾಗಿ ಬ್ಯಾಂಕುಗಳನ್ನು ಇಂಥವರಿಗೆ ಮಾರಾಟ ಮಾಡಿ ಸಾರ್ವಜನಿಕ ಆಸ್ತಿಗಳ ಲೂಟಿಗೆ ಅವಕಾಶ ನೀಡಲಾಗುತ್ತಿದೆ‌. ಬ್ಯಾಂಕುಗಳ ಖಾಸಗಿಕರಣವೆಂದರೆ ನಿಸಂಶಯವಾಗಿಯೂ ದೇಶದ ಹಣಕಾಸು ವಲಯದ ನಿಯ‌ತ್ರಣವನ್ನು ದೇಶ ವಿದೇಶಗಳ ಖಾಸಗಿ ಬಂಡವಾಳಷಾಹಿಗಳ ಕೈಗೊಪ್ಪಿಸುವುದು.

ದೇಶದ ಜನರ ಉಳಿತಾಯದ ಹಣದ ಲೂಟಿಗೆ ಅವಕಾಶ ಮಾಡುವುದು, ಜನಸಾಮಾನ್ಯರ ಠೇವಣಿ ಹಣದ ಹಿತಾಸಕ್ತಿಗೆ ಧಕ್ಕೆ ತರುವುದು, ಉದ್ಯೋಗಾವಕಾಶ ಮತ್ತು ಮೀಸಲಾತಿಯಂತಹ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ತರುವಂತದ್ದು, ಬ್ಯಾಂಕ್ ಶಾಖೆಗಳ ಮುಚ್ಚುವಿಕೆ ಮತ್ತು ಜನಸಾಮಾನ್ಯರನ್ನು ಬ್ಯಾಂಕಿಂಗ್ ಸೇವೆಯಿಂದ ಹೊರಗಿಡುವ ಪ್ರಯತ್ನ ಮೊದಲಾದ ಹಲವಾರು ವಿಷಯಗಳನ್ನು ವಿರೋಧಿಸಿ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ನಡೆಸುತ್ತಿರುವ ಈ ದೇಶಪ್ರೇಮಿ ಹೋರಾಟದಲ್ಲಿ ಅತ್ಯಗತ್ಯವಾಗಿ ಸಾರ್ವಜನಿಕರು, ಬ್ಯಾಂಕ್ ಗ್ರಾಹಕರು, ಆರ್ಥಿಕ ಪರಿಣಿತರು, ಸಂಘ ಸಂಸ್ಥೆಗಳು ಭಾಗಿಯಾಗಬೇಕಾಗಿದೆ.

ರಾಷ್ಟ್ರೀಕೃತ ಬ್ಯಾಂಕುಗಳ ಇರುವಿಕೆಯು ಬ್ಯಾಂಕ್ ಉದ್ಯೋಗಿಗಳಿಗಿಂತ ಸಾರ್ವಜನಿಕರಿಗೆ ಅಗತ್ಯವಾಗಿ ಬೇಕಾಗಿದೆ. ಆದ್ದರಿಂದ ಸಾರ್ವಜನಿಕ ಬ್ಯಾಂಕುಗಳನ್ನು ಉಳಿಸಿ ಬೆಳೆಸಿ ದೇಶದ ಆರ್ಥಿಕ ಸಾರ್ವಭೌಮತ್ವವನ್ನು ರಕ್ಷಿಸಲು ಸಾರ್ವಜನಿಕರ ಸಹಕಾರ ಮತ್ತು ಬೆಂಬಲವನ್ನು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರಾದ ಬಿ.ಆನಂದಮೂರ್ತಿಯವರು ಕೋರಿದ್ದಾರೆ.

ಅಖಿಲ ಭಾರತ ಮುಷ್ಕರದ ಅಂಗವಾಗಿ 15-03-2021 ರ ಸೋಮವಾರ ಬೆಳಿಗ್ಗೆ ದಾವಣಗೆರೆ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದ ಮುಂಭಾಗ ಮತ್ತು 16-03-2021 ರ ಮಂಗಳವಾರ ಬೆಳಿಗ್ಗೆ ದಾವಣಗೆರೆ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂಭಾಗ ಪ್ರತಿಭಟನೆ ಮತ್ತು ಮತಪ್ರದರ್ಶನ ನಡೆಯಲಿದೆ.

ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಎಲ್ಲಾ ಸದಸ್ಯರು, ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳು, ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಸದಸ್ಯರು ಹಾಗೂ ಸಾರ್ವಜನಿಕರು ಮಷ್ಕರದ ಎಲ್ಲಾ ಕಾರ್ಯಕ್ರಮದಲ್ಲಿ ಬಾಗವಹಿಸಿ ಸರಕಾರದ ಬ್ಯಾಂಕ್ ಖಾಸಗೀಕರಣ ನಡೆಯನ್ನು ಹಿಮ್ಮೆಟ್ಟಿಸಬೇಕಾಗಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಷ್ಟ್ರೀಕೃತ ಬ್ಯಾಂಕುಗಳನ್ನು ಉಳಿಸಿಕೊಳ್ಳುವ ಈ ಹೋರಾಟದಲ್ಲಿ ಸಾರ್ವಜನಿಕರು, ಬ್ಯಾಂಕ್ ಗ್ರಾಹಕರು, ಸಂಘ ಸಂಸ್ಥೆಗಳು ಭಾಗಿಯಾಗಬೇಕು.

| ಕೆ.ರಾಘವೇಂದ್ರ ನಾಯರಿ,ಪ್ರಧಾನ ಕಾರ್ಯದರ್ಶಿ,
ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘ, ದಾವಣಗೆರೆ


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending