Connect with us

ನೆಲದನಿ

ದ್ವಿಕಂಠ ಸಿರಿ ಮುರಾರ್ಜಿ ಎಂಬ ದಲಿತ ಕಲಾವಿದನ ಹೋರಾಟ ಕಥನ

Published

on

ಭಾರತದಲ್ಲಿ ವೈದಿಕತೆಯು ತನ್ನ ಅಸ್ತಿತ್ವದ ಉಳಿವಿಗಾಗಿ ರೂಪಿಸಿಕೊಂಡು ಬಂದ ಶ್ರೇಣಿಕೃತ ವ್ಯವಸ್ಥೆಯಲ್ಲಿ ಅಸೃಶ್ಯರೆಂಬ ಪಟ್ಟವನ್ನು ಸ್ವೀಕರಿಸಿ, ಉನ್ನತ ವರ್ಗಗಳ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ನೆಡೆಸಿಕೊಂಡು ಬಂದವರು ನೆಲಮೂಲ ಸಂಸ್ಕøತಿಯ ಹೊಲೆಯ ಮತ್ತು ಮಾದಿಗ ಸಮುದಾಯದವರು. ಆಧುನಿಕ ಶಿಕ್ಷಣದಿಂದ ಜಾಗೃತರಾಗಿ ಈ ದಲಿತ ಸಮುದಾಯದ ವಿಮೋಚನೆಗಾಗಿ ಬಾಬಾಸಾಹೇಬ ಅಂಬೇಡ್ಕರರು ಸಂವಿಧಾನಿಕ ಹಕ್ಕು ಹಾಗೂ ಮೀಸಲಾತಿಯನ್ನು ಕಲ್ಪಿಸಿಕೊಡುವ ತನಕವೂ ಈ ಸಮುದಾಯದ ಸ್ಥಿತಿಗತಿಯನ್ನು ಕಲ್ಪಿಸಿಕೊಳ್ಳುವುದಕ್ಕೂ ಕಷ್ಟಸಾಧ್ಯವಾಗಿತ್ತು. ಆದರೆ ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ದಲಿತರು ನಾವು ಮಾನವರೆಂಬುದಾಗಿ ಸ್ವಲ್ಪ ನೆಮ್ಮದಿಯುತವಾಗಿ ಬದುಕುವಂತಾಗಿದೆ. ಇಂತಹ ದಮನಿತ ಸಮುದಾಯದಲ್ಲಿ ಬೆಳೆದುಬಂದು, ತಮ್ಮ ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದ ಕಲೆಯಿಂದಲೆ ತನ್ನ ಬದುಕನ್ನು ರೂಪಿಸಿಕೊಂಡು, ಆ ಮೂಲಕ ತನ್ನ ಸಮುದಾಯದ ಜನತೆ ಹಾಗೂ ಸಮಾಜದಲ್ಲಿನ ಮಾರಕ ನೆಲೆಯ ಸನ್ನಿವೇಶಗಳ ಕುರಿತಾಗಿ ಅರಿವು ಮೂಡಿಸುವ ನೆಲೆಯಲ್ಲಿ ಹಲವಾರು ದಮನಿತ ಕಲಾವಿದರು ನೆಲದ ದನಿಯಾಗಿ ತಮ್ಮ ಪ್ರಾಮಾಣಿಕ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ನಮ್ಮ ನಡುವೆ ಇರುವ ಇಂತಹ ಜೀವಪರ ದನಿಗಳನ್ನು ಗುರುತಿಸುವ ಕಿರು ಪ್ರಯತ್ನದ ಭಾಗವೇ ಪ್ರಸ್ತುತ ಲೇಖನದ ಆಶಯವಾಗಿದೆ.

ಜಾನಪದ ಸಾಹಿತ್ಯ, ಸಂಗೀತ ನೆಲೆಯೂರಿರುವುದೆ ಗ್ರಾಮೀಣ ಜನಜೀವನದಲ್ಲಿ, ಅದರಲ್ಲೂ ವಿಶೇಷವಾಗಿ ತಳಸಮುದಾಯಗಳು ಹಾಗೂ ಶ್ರಮಿಕ ವರ್ಗಗಳಲ್ಲಿ. ನಮ್ಮ ಜಾನಪದ ಪರಂಪರೆ ಹಾಗೂ ದೇಶಿ ಸಾಹಿತ್ಯದ ಸೊಬಗನ್ನು ಇಂದಿಗೂ ಜೀವಂತವಾಗಿ ಗುರುತಿಸುವುದಾದರೆ ಅದು ದಲಿತರು ಹಾಗೂ ತಳವರ್ಗಗಳಲ್ಲಿ ಮಾತ್ರ. ಆಧುನಿಕತೆಯ ಸ್ಪರ್ಶ ಹಾಗೂ ಆರ್ಥಿಕತೆಯ ಸುಧಾರಣೆಯ ಹಂತವನ್ನು ತಲುಪಿದ ಬಹುತೇಕ ಕುಟುಂಬಗಳಲ್ಲಿ ಈ ಮೌಖಿಕ ಜಾನಪದವು ಕಣ್ಮರೆಯಾಗಿರುವ ಸಾಧ್ಯತೆ ಹೆಚ್ಚಾಗಿ ಕಂಡುಬರುತ್ತದೆ. ಇದು ಪ್ರಕೃತಿಯ ಬದಲಾವಣೆಯ ನಿಯಮಗಳಲ್ಲೊಂದಾಗಿರುವ ಸಹಜ ಪ್ರಕ್ರಿಯೆಯಾಗಿದೆ. ಹಿಂದಿನಿಂದಲೂ ಜಾನಪದ ಸಾಹಿತ್ಯ ಪರಂಪರೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಜಾನಪದ ಮತ್ತು ಬಡತನಕ್ಕೂ ಅವಿನಾಭಾವ ಸಂಬಂಧವಿರುವುದು ಕಂಡುಬರುತ್ತದೆ. ಇಂದಿಗೂ ಎಷ್ಟೋ ಜನ ಜಾನಪದ ಕಲಾವಿದರು ತಮ್ಮ ಸಾಹಿತ್ಯ ಹಾಗೂ ಕಲೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೂ ಉಳಿಸುವ ಸಲುವಾಗಿ ಬಡತನದ ಬೇಗೆಯಲ್ಲಿ ತಾವು ಬೆಂದು, ತಮ್ಮ ಕಲೆಯನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿ ಜಾನಪದ ಸಾಹಿತ್ಯದ ಮೂಲಕವೇ ತನ್ನ ಬಡತನದ ಬದುಕು ಹಾಗೂ ಆರ್ಥಿಕತೆಯ ಮಟ್ಟವನ್ನು ಸುಧಾರಿಸಿಕೊಂಡ ಗ್ರಾಮೀಣ ಪ್ರತಿಭೆಯಾದ ಮುರಾರ್ಜಿ ಎಂಬ ದ್ವಿಕಂಠ ಕಲಾವಿದನ ಬದುಕಿನ ಸಂಕಥನವನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ದೇಶವಾಗಿದೆ.

2

ಚಿತ್ರದುರ್ಗ ಜಿಲ್ಲೆಯ ಚಿನ್ನೋಬನಹಳ್ಳಿ ಎಂಬ ಗ್ರಾಮದ ದಲಿತ ಕುಟುಂಬವೊಂದರಲ್ಲಿ ಶ್ರೀ ಡಿ.ಬಿ. ಓಬ್ಬಯ್ಯ ಹಾಗೂ ಶ್ರೀಮತಿ ಮಾರಮ್ಮ ಎಂಬ ದಂಪತಿಗಳ ಮಗನಾಗಿ ಜನ್ಮತಳೆದ ಶ್ರೀಯುತ ಮುರಾರ್ಜಿಯವರು ಬಾಲ್ಯದಿಂದಲೂ ಜಾನಪದ ಸಾಹಿತ್ಯ ಸಂಗೀತದಂತಹ ವಾತವರಣದ ನಡುವೆ ಬೆಳೆದು ಬಂದವರು. ಇವರ ತಂದೆ ತತ್ವಪದ ಹಾಗೂ ಭಜನೆಯಂತಹ ಸಾಹಿತ್ಯ ವಲಯದಲ್ಲಿ ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದು, ಇವರ ತಾಯಿ ಮಾರಮ್ಮನವರು ಸೋಬಾನೆ ಹಾಡುಗಾರ್ತಿಯಾಗಿಯೂ ಪ್ರಸಿದ್ದಿಯನ್ನು ಪಡೆದವರು. ಇವರ ಪ್ರಭಾವದ ನಡುವೆ ಬೆಳೆದು ಬಂದ ಮುರಾರ್ಜಿಯವರು ಜಾನಪದ ಸಂಗೀತ ಹಾಗೂ ನಾಟಕವನ್ನು ತಮ್ಮ ಕಾರ್ಯಕ್ಷೇತ್ರವಾಗಿ ಆಯ್ದುಕೊಂಡರು. ತನ್ನ ಬಡತನದ ಬದುಕಿನ ನಡುವೆಯೇ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡ ಇವರು, ತಮ್ಮ ಪ್ರಾದೇಶಿಕ ಪರಿಸರದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಸಾಮಾಜಿಕ ನಾಟಕಗಳಿಂದ ಪ್ರಭಾವಿತರಾದರು. ಈ ಸಾಮಾಜಿಕ ನಾಟಕಗಳ ಪ್ರಭಾವದಿಂದಾಗಿ ಹೆಣ್ಣು ಮತ್ತು ಗಂಡಿನ ದನಿಯನ್ನು ಅನುಕರಿಸುವ ಮೂಲಕವಾಗಿ ಹಾಡುಗಳನ್ನು ಮಧುರವಾಗಿ ಹಾಡತೊಡಗಿದರು. ಈ ಹಾಡುಗಾರಿಕೆಯನ್ನು ಮನರಂಜನೆಯ ಒಂದು ಭಾಗವಾಗಿ ಮುಂದುವರೆಸಿಕೊಂಡು ಬಂದ ಇವರಿಗೆ ಬಾಲ್ಯದಿಂದಲೂ ಗಾಯನ ಕಲೆಯು ಹತ್ತಿರದಿಂದ ಪರಿಚಿತವಾದ ಕಲೆಯಾಗಿತ್ತು.

ಇವರಲ್ಲಿ ಅಂತರ್ಗತವಾಗಿದ್ದ ಈ ಕಲೆಯ ಅನಾವರಣಕ್ಕೆ ಪ್ರಾರಂಭಿಕ ವೇದಿಕೆ ಲಭಿಸಿದ್ದು ಮಾತ್ರ ಕಿರಿಯ ಪ್ರಾಥಮಿಕ ಶಿಕ್ಷಣದ ಪಡೆಯುವ ಅವಧಿಯಲ್ಲಿ. ಈ ಅವಧಿಯಲ್ಲಿ ಶಾಲೆಯಲ್ಲಿ ನಡೆಸುತ್ತಿದ್ದ ಶಾರದ ಪೂಜೆ ಹಾಗೂ ಇತರೆ ಸಮಾರಂಭಗಳಲ್ಲಿ ಇವರೇ ಪ್ರಾರ್ಥನೆಯನ್ನು ನೆರವೇರಿಸುತ್ತಿದ್ದರು. ಈ ಹಂತದಲ್ಲಿ ಇವರ ಕಂಠವನ್ನು ಮೆಚ್ಚಿ ಪ್ರೋತ್ಸಹಿಸುತ್ತಿದ್ದ ಶಿಕ್ಷಕರಿಂದ ಇವರಲ್ಲಿ ಮತ್ತೊಷ್ಟು ಬೆಂಬಲ ಹಾಗೂ ಆತ್ಮಸ್ಥೈರ್ಯ ಒಡಮೂಡಿತು. ಇಂಥ ಪ್ರೋತ್ಸಾಹಗಳ ನಡುವೆ ಬೆಳೆದುಬಂದ ಮುರಾರ್ಜಿಯವರಿಗೆ ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣದ ಅವಧಿಯಲ್ಲಿ ಶಿಕ್ಷಕ ವರ್ಗದಿಂದ ಉತ್ತಮವಾದ ಸಹಕಾರ ಲಭಿಸಿತು. ಇವರಲ್ಲಿ ಅಂತರ್ಗತವಾಗಿದ್ದ ಗಾಯನ ಕಲೆಗೆ ಮನಸೋತ ಶಿಕ್ಷಕ ವರ್ಗವು ಬಡತನದಲ್ಲಿದ್ದ ಮುರಾರ್ಜಿ ಎಂಬ ಈ ಪ್ರತಿಭೆಯನ್ನು ಪ್ರಚೋದಿಸುವ ನೆಲೆಯಲ್ಲಿ ಇವರ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುತ್ತ ಬಂದರು. ಶಿಕ್ಷಕ ವರ್ಗದ ಇಂತಹ ಸಹಕಾರದಿಂದಾಗಿ ವಿದ್ಯಾಭ್ಯಾಸ ಹಾಗೂ ಗಾಯನ ಕಲೆಯಲ್ಲಿ ಸಾಕಷ್ಟು ಆಸಕ್ತಿಯನ್ನು ಪಡೆದುಕೊಂಡರು. ಕಾಡುಹಕ್ಕಿ ಹಕ್ಕಿಯಂತೆ ತನ್ನ ಸ್ವರ ಮಾಧುರ್ಯವನ್ನು ಮುಂದುವರೆಸುತ್ತ ಬಂದ ಈ ಹಳ್ಳಿಹಕ್ಕಿಗೆ ಗಾಯನ ಕಲೆಯೇ ತನ್ನ ಬದುಕಿಗೆ ಸಾಕಷ್ಟು ಹೆಸರು ತಂದು ಕೊಟ್ಟಿರುವುದು ಮಾತ್ರವಲ್ಲದೆ, ಇವರ ಬದುಕಿಗೆ ವರವಾಗಿ ಪರಿಣಮಿಸಿತು.

3

ಮುರಾರ್ಜಿಯವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ಬೆಳೆದುಬಂದವರು. ಇಂತಹ ಸಂದರ್ಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಓದುವುದಕ್ಕೆ ಹಲವಾರ ತೊಂದರೆಗಳು ಎದುರಾದವು. ಇವರು ಪಿ.ಯು ಕಾಲೇಜು ಶಿಕ್ಷಣವನ್ನು ಪಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಕಾಡುವ ಬಡತನದಿಂದಾಗಿ ಕುಟುಂಬ ನಿರ್ವಹಣೆಯ ಸಮಸ್ಯೆಯು ಎದುರಾದಾಗ ಇವರ ಶಿಕ್ಷಣ ಕುಂಟಿತವಾಯಿತು. ಈ ಅವಧಿಯಲ್ಲಿ ಕಾಲೇಜು ಶಿಕ್ಷಣದಿಂದ ವಂಚಿತರಾದ ಇವರನ್ನು ಸ್ವಗ್ರಾಮದಲ್ಲಿ ಜೀತಕ್ಕೆ ನೇಮಿಸಲಾಯಿತು. ಈ ಸಂದರ್ಭದಲ್ಲಿ ಎಮ್ಮೆ ಕಾಯಲು ಹೋಗುತ್ತಿರುವಾಗ ಬಿಡುವಿನ ವೇಳೆಯಲ್ಲಿ ತನ್ನ ಸಹೋದ್ಯೊಗಿಗಳ ಸಮ್ಮುಖದಲ್ಲಿ ಹಾಗೂ ಏಕಾಂತವಾಗಿರುವ ಸಮಯದಲ್ಲಿ ದ್ವಿಕಂಠದಲ್ಲಿ ತನ್ನ ಗಾಯನ ಕಲೆಯ ಪ್ರಯೋಗ ನಡೆಸುತ್ತಿದ್ದರು. ಈ ವೇಳೆಗಾಗಲೇ ಸಾಮಾಜಿಕ ನಾಟಕಗಳಿಂದ ಸಾಕಷ್ಟು ಪ್ರೇರಣೆಗೊಂಡಿದ್ದ ಇವರಿಗೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ತಾನು ಹಾಡಬೇಕು ಎಂಬ ಛಲ ಮೂಡಿತು. ಬಾಲ್ಯದಿಂದಲೂ ಮಧುರವಾದ ಕಂಠವನ್ನು ಹೊಂದಿದ್ದ ಇವರಿಗೆ ಇದು ಕಷ್ಟದ ಕೆಲಸವೇನು ಆಗಿರಲಿಲ್ಲ. ಆದರೆ ಏಕಕಾಲಕ್ಕೆ ಗಂಡು ಮತ್ತು ಹೆಣ್ಣಿನ ಸ್ವರವನ್ನು ಬದಲಾಯಿಸಿ ಹಾಡುವುದಕ್ಕೆ ತಾಲಿಮಿನ ಅವಶ್ಯಕತೆ ಇವರಿಗೆ ಬೇಕಿತ್ತು. ಈ ಸಂದರ್ಭದಲ್ಲಿ ಇವರು ಯಾವುದೇ ಗುರುವಿನ ಬಳಿ ಕಲಿಯದೆ ಸ್ವತಃ ತಾವೇ ಪ್ರಯೋಗ ನಡೆಸಿ ದ್ವಿಕಂಠ ಕಲೆಯಲ್ಲಿ ಪರಿಣಿತಿಯನ್ನು ಸಾಧಿಸಿದರು. ಹಗಲೆಲ್ಲ ಜೀತ ಕೆಲಸ ಮಾಡಿಕೊಂಡೆ ಹಾಡುಗಾರಿಕೆಯ ಪ್ರಯೋಗ ನಡೆಸಿ ರಾತ್ರಿಯ ವೇಳೆಯಲ್ಲಿ ಎಲ್ಲಿ ಸಾಮಾಜಿಕ ನಾಟಕಗಳು ನಡೆಯುತ್ತವೊ, ಇಲ್ಲವೇ ಸಾಮಾಜಿಕ ನಾಟಕಗಳ ಪೂರ್ವ ತಯಾರಿ ನಡೆಯುತ್ತಿರುತ್ತವೊ ಅಲ್ಲಿಗೆ ಹೋಗಿ ಹಾರ್ಮೊನಿಯಂ ಮಾಸ್ಟರ್ ಜೊತೆ ರಾತ್ರಿ ಪೂರ ಅಲ್ಲಿಯೇ ಕಾಲ ಕಳೆಯುತ್ತಿದ್ದರು. ಈ ಸಮಯದಲ್ಲಿ ಮುರಾರ್ಜಿಯವರ ಚಿಕ್ಕಪ್ಪನಾದ ಬರ್ತಿ ಓಬಳೇಶ್ ಎಂಬುವವರು ಹಾರ್ಮೊನಿಯಂ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ನಾಟಕಗಳ ತಾಲೀಮು ನಡೆಸುವ ಸಮಯದಲ್ಲಿ ಅವರ ಬಳಿ ಇದ್ದು ಅವರಂತೆ ಹಾಡುವ ಹವ್ಯಾಸವನ್ನು ಕಲಿತುಕೊಂಡರು.

ಮುರಾರ್ಜಿಯವರು ತಮ್ಮಲ್ಲಿ ಕರಗತವಾಗಿರುವ ದ್ವಿಕಂಠ ಕಲೆಯನ್ನು ಪ್ರದರ್ಶಿಸುವ ಅವಕಾಶಕ್ಕಾಗಿ ರಾತ್ರಿಯಿಡಿ ಕಾಯುತ್ತಿದ್ದರು. ಪ್ರಾರಂಭಿಕ ಹಂತದಲ್ಲಿ ನಾಟಕದ ಕೊನೆಯ ವೇಳೆಯಲ್ಲಿ ಒಂದು ಇಲ್ಲವೆ ಎರಡು ಹಾಡುಗಳನ್ನು ಹಾಡುವುದಕ್ಕೆ ಅವಕಾಶ ಲಭಿಸಿದರೆ ಇದೇ ಇವರಿಗೆ ತೃಪ್ತಿಯನ್ನು ತಂದು ಕೊಡುತ್ತಿತ್ತು. ಹೀಗೆ ಅವಕಾಶಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದ ಇವರು 1995 ರಲ್ಲಿ ಚಳ್ಳಕೆರೆ ತಾಲ್ಲೂಕು ದಿಮ್ಮಿನಕೆರೆ ಎಂಬ ಗ್ರಾಮದ ನಾಟಕವೊಂದರಲ್ಲಿ ಸ್ವತಂತ್ರ ಗಾಯಕನಾಗಿ ತನ್ನ ದ್ವಿಕಂಠ ಗಾಯನವನ್ನು ಪ್ರದರ್ಶಿಸಿದರು. ಈ ನಾಟಕದಿಂದ ಸಾಕಷ್ಟು ಹೆಸರು ಮಾಡಿ ಜನಮನ ಗೆದ್ದ ಮುರಾರ್ಜಿಯವರು ಇದೇ ಕ್ಷೇತ್ರದಲ್ಲಿ ಸಂಪೂರ್ಣವಾಗಿ ತನ್ನನ್ನು ತೊಡಗಿಸಿಕೊಂಡರು. ಇದರಿಂದ ಸಾಕಷ್ಟು ಅವಕಾಶಗಳು ಇವರನ್ನು ಹುಡುಕಿಕೊಂಡು ಬಂದವು. ಇದರಿಂದಾಗಿ ಇವರ ಕೌಟುಂಬಿಕ ಪರಿಸ್ಥಿತಿಯು ಸುಧಾರಣೆಯನ್ನು ಕಂಡುಕೊಂಡಿತು. ಹೀಗೆ ದ್ವಿಕಂಠ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡು ಬಂದ ಇವರು ಮುಂದೆ ಈ ಕಲೆಯನ್ನು ಪ್ರವೃತ್ತಿಯಾಗಿಸಿಕೊಂಡು ಬಂದರು. ಈ ಕಲೆಯ ಮೂಲಕವಾಗಿ ಚಿತ್ರದುರ್ಗ, ಬಳ್ಳಾರಿ, ದಾವಣಗೆ ಹಾಗೂ ಕರ್ನಾಟಕದ ವಿವಿಧ ಪ್ರಾಂತ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡರು.
ಗ್ರಾಮೀಣ ಭಾಗದ ಜನತೆಯ ಮನರಂಜನ ಕಲೆಗಳಲ್ಲಿ ಒಂದಾಗಿರುವ ಸಾಮಾಜಿಕ ನಾಟಕಗಳಲ್ಲಿ ಕಲಾವಿದರು ಹಾಡುಗಾರಿಕೆಯ ಮೂಲಕ ನಾಟಕ ಪ್ರದರ್ಶನ ಮಾಡುವುದು ಕಷ್ಟದ ಕೆಲಸವಾಗಿತ್ತು. ಅದರಲ್ಲೂ ಮಹಿಳೆಯರಿಗೆ ನಟನೆಯ ಜೊತೆ ಜೊತೆಯಲ್ಲಿ ಹಾಡುಗಾರಿಕೆಯನ್ನು ಪ್ರದರ್ಶಿಸುವುದು ತುಂಬ ಕಷ್ಟದ ಕೆಲಸವಾಗಿತ್ತು. ಹಾಡುಗಾರಿಕೆಯನ್ನು ವೃತ್ತಿಯಾಗಿಸಿಕೊಂಡ ಮಹಿಳೆಯರು ಕೂಡ ಲಭಿಸುತ್ತಿರಲಿಲ್ಲ. ಆದ ಕಾರಣದಿಂದಾಗಿ ಗಂಡು ಮತ್ತು ಹೆಣ್ಣಿನ ಎರಡು ಕಂಠಗಳನ್ನು ಹಾಡುವ ಕಲಾವಿದರಿಗೆ ಸಾಮಾಜಿಕ ನಾಟಕಗಳಲ್ಲಿ ಹೆಚ್ಚಿನ ಬೇಡಿಕೆಯೂ ಇತ್ತು. ಈ ಕಾರಣದಿಂದಾಗಿ ಮುರಾರ್ಜಿಯವರಿಗೆ ಕರಗತವಾಗಿದ್ದ ದ್ವಿಕಂಠ ಕಲೆಗೆ ಸಾಕಷ್ಟು ಬೇಡಿಕೆ ಲಭಿಸಿತು. ಈ ಕ್ಷೇತ್ರದಲ್ಲಿ ಮುನ್ನೆಡದ ಇವರು 1995 ರಿಂದ ಪ್ರತಿವರ್ಷ ಸುಮಾರು 150ಕ್ಕೂ ಅಧಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುತ್ತ ಬಂದಿದ್ದಾರೆ. ಇವರ ಅದಾಜಿನ ಪ್ರಕಾರ ಇಲ್ಲಿಯವರೆಗೆ ಸುಮಾರು 3000 ಸಾವಿರಕ್ಕೂ ಅಧಿಕ ನಾಟಕಗಳಿಗೆ ಹೆಣ್ಣು ಮತ್ತು ಗಂಡಿನ ಕಂಠವನ್ನು ನೀಡಿರುವುದಾಗಿ ತಿಳಿದುಬರುತ್ತದೆ.

4

ಶ್ರೀಯುತ ಮುರಾರ್ಜಿಯವರು ಸಾಮಾಜಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುವುದರ ಜೊತೆಗೆ ಸಾಮಾಜಿಕ ಜನಜೀವನದಲ್ಲಿ ಬೆರೆತುಕೊಂಡು ಸಾಮಾಜಿಕ ಸೇವೆಯನ್ನು ನೆರವೇರಿಸುತ್ತ ಬಂದಿದ್ದಾರೆ. ಒಬ್ಬ ಸೃಜನಶೀಲ ವ್ಯಕ್ತಿಯು ಒಂದೇ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದಿಲ್ಲ. ಯಾವಾಗಲು ತನ್ನ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವತ್ತ ಶ್ರಮಿಸುತ್ತಿರುತ್ತಾನೆ. ಇದಕ್ಕೆ ಮುರಾರ್ಜಿಯವರು ಸೂಕ್ತ ಉದಾಹರಣೆಯಾಗಿ ನಿಲ್ಲುತ್ತಾರೆ. ಗಾಯನ ಕಲೆಯ ಜೊತೆ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಶ್ರೀಯುತರು ಚಿತ್ರದುರ್ಗ ಜಿಲ್ಲಾ ದಲಿತ ಸಂಘರ್ಷ ಕಲಾ ಸಮಿತಿಯ ಸಂಚಾಲಕರಾಗಿ ಹಲವಾರು ಸಾಮಾಜಿಕ ಸುಧಾರಣೆಯ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದ್ದಾರೆ. ದಲಿತ ಕಲಾ ಮಂಡಳಿಯ ಅಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿ, ಸಾಕ್ಷರತ ಆಂದೋಲನ, ವಯಸ್ಕರ ಶಿಕ್ಷಣ ಪದ್ಧತಿಯಂತಹ ಕಾರ್ಯಕ್ರಮಗಳ ಕುರಿತಾಗಿ ಗ್ರಾಮೀಣ ಜನತೆಗೆ ಜಾಗೃತಿ ಮೂಡಿಸುವ ನೆಲೆಯಲ್ಲಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಹಾಗೆಯೇ ಸಾಮಾಜಿಕ ಸಮಸ್ಯೆಗಳಾದ ವರದಕ್ಷಿಣೆ, ಅಪರಾಧ ತಡೆ ಮಾಸಾಚರಣೆ, ಏಡ್ಸ್, ಸ್ವಚ್ಚ ಭಾರತ ಆಂದೋಲನದಂತಹ ವಿಶಿಷ್ಟವಾದ ಕಾರ್ಯಕ್ರಮಗಳ ಬಗೆಗೆ ಬೀದಿ ನಾಟಕಗಳ ಮೂಲಕವಾಗಿ ಅರಿವು ಮೂಡಿಸುವಲ್ಲಿ ಇವರು ಮಹತ್ವದ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ.

ಹೀಗೆ ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಗುರುತಿಸಿಕೊಂಡಿರುವ ಮುರಾರ್ಜಿಯವರು ಜನಪರವಾದ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆ ಮೂಲಕವಾಗಿ ಚಿತ್ರದುರ್ಗ ಜಿಲ್ಲಾ ಕಲಾವಿದರ ಒಕ್ಕೂಟವನ್ನು ರಚಿಸಿಕೊಂಡು ಸರ್ಕಾರದಿಂದ ಕಲಾವಿದರಿಗೆ ಲಭ್ಯವಿರುವ ವಿವಿಧ ಸವಲತ್ತುಗಳನ್ನು ಕಲ್ಪಿಸಿಕೊಡುವಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ. ಈ ಮೂಲಕ ಜಿಲ್ಲೆಯ ಕಲಾವಿದರ ದನಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇದರ ಜೊತೆಯಲ್ಲಿ ‘ಅಕ್ಷರ ಗ್ರಾಮೀಣ ವಿಕಾಸ ಸಂಸ್ಥೆ’ಯ ಅಡಿಯಲ್ಲಿ ಮಹಿಳೆಯರಿಗೆ ಗೃಹೋಪಯೋಗಿ ವಸ್ತು ತಯಾರಿಕೆ ತರಬೇತಿ, ಅನಕ್ಷರಸ್ಥ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶಿಕ್ಷಣ ತರಬೇತಿ, ಸರ್ಕಾರದ ‘ಬಿ ಆರ್ ಜಿ ಎಫ್’ ಯೋಜನೆಗಳ ಬಗೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಸಂಪೂರ್ಣ ಗ್ರಾಮ ನೈರ್ಮಲ್ಯ, ಸ್ವಚ್ಚ ಭಾರತ ಅಭಿಯಾನ, ಮಹಾತ್ಮಗಾಂಧಿ ಉದ್ಯೋಗಖಾತರಿ ಯೋಜನೆಗಳಂತಹ ವಿಶೇಷ ಕಾರ್ಯಕ್ರಮಗಳ ಕುರಿತಾಗಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದ್ದಾರೆ. ಬಾಲ್ಯದ ದಿನಗಳಿಂದಲೂ ಬಡತನದ ನಡುವೆಯೇ ಬೆಳೆದು ಬಂದ ಇವರು ತಮ್ಮ ಗ್ರಾಮೀಣ ಭಾಗದ ಜನತೆಗೆ ಅರಿವು ಮೂಡಿಸುವ ನೆಲೆಯಲ್ಲಿ ಇಂತಹ ಹಲವಾರು ಜನಪರವಾದ ಯೋಜನೆಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಇವರು ಕರಗತಮಾಡಿಕೊಂಡಿದ್ದ ರಂಗಭೂಮಿ ಕಲೆಯನ್ನು ಕೇವಲ ವೃತಿಯಾಗಿ ಬಳಸಿಕೊಳ್ಳದೆ ಇದರ ಅಡಿಯಲ್ಲಿ ಸಮಾಜ ಸೇವೆಯನ್ನು ಕೈಗೊಂಡರು. ಇದು ಕಲಾವಿದನೊಬ್ಬ ಸಮಾಜ ಸುಧಾರಕನಾಗಿಯೂ ತನ್ನನ್ನು ಗುರುತಿಸಿಕೊಳ್ಳಬಲ್ಲ ಎಂಬುದಕ್ಕೆ ಇವರು ಮಾದರಿಯಾಗಿ ನಿಲ್ಲುತ್ತಾರೆ. ನಮ್ಮ ಗ್ರಾಮೀಣ ಭಾಗದ ಜನರಲ್ಲಿ ಅಂತರ್ಗತವಾಗಿರುವ ಬಹುತೇಕ ಕಲೆಗಳು ಬಡತನದಲ್ಲಿ ಬಾಳಿ ಬೆಳಗಿದ ಬಗೆಯನ್ನು ನಾವು ಈಗಾಗಲೇ ನೋಡಿದ್ದೇವೆ. ಆದರೆ ಈ ಕಲೆಯ ಅಡಿಯಲ್ಲಿ ಆಧುನಿಕ ಬದುಕಿನ ತಲ್ಲಣಗಳಿಗೆ ಆರೋಗ್ಯಕರವಾದ ನೆಲೆಯಲ್ಲಿ ಸ್ಪಂದಿಸುವ ವಿಶೇಷ ಆಯಾಮವೊಂದನ್ನು ಇವರು ಕಂಡುಕೊಂಡಿದ್ದಾರೆ. ಇದು ಕಲಾ ಜೀವನದೊಂದಿಗೆ ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಕ್ರಮವಾಗಿದೆ.

ಶ್ರೀಯುತ ಮುರಾರ್ಜಿಯವರು ಕಲೆಯ ಮೂಲಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುತ್ತಲೆ ಕಲೆಯನ್ನು ಆಧುನಿಕ ಸಂದರ್ಭಕ್ಕೆ ತಕ್ಕಂತೆ ಪ್ರಗತಿಯತ್ತ ಮುನ್ನೆಡುಸುತ್ತ ಬಂದಿದ್ದಾರೆ. ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಕಲಾಕ್ಷೇತ್ರವನ್ನು ಪ್ರವೇಶಿಸಿದ ಇವರು ಸಂಗೀತ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆಗೂ ಮುಂದಾಗಿದ್ದಾರೆ. ತಮ್ಮ ಹೆಸರಿನಲ್ಲಿ ಅಡಿಯಲ್ಲಿ ‘ಮುರಾರ್ಜಿ ಸುಗಮ ಸಂಗೀತ ತಂಡ’ ಹಾಗೂ ‘ಮುರಾರ್ಜಿ ಆರ್ಕೆಸ್ಟ್ರಾ ತಂಡ’ಗಳನ್ನು ರಚಿಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಷ್ಟೇ ಅಲ್ಲದೇ ಜಾನಪದ ಹಾಡು, ತತ್ವಪದ ಹಾಡು, ಭಾವಗೀತೆಗಳು, ವಚನಗಳನ್ನು ಹೊರ ರಾಜ್ಯಗಳಲ್ಲೂ ಹಾಡುವ ಮೂಲಕವಾಗಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಹೀಗಾಗಿಯೇ ಮುರಾರ್ಜಿಯವರನ್ನು ಬಹುಮುಖ ಪ್ರತಿಭೆ ಎಂದು ಗುರುತಿಸಲಾಗಿದೆ.

5

ರಂಗಭೂಮಿ ಮತ್ತು ಗಾಯನ ಕಲೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಮುರಾರ್ಜಿಯವರು ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮುರಾರ್ಜಿಯವರು ತಮ್ಮ ಸಾಮಾಜಿಕ ಸೇವೆಯ ಮುಖಾಂತರವಾಗಿ ತಮ್ಮ ಭಾಗದಲ್ಲಿ ಸಾಕಷ್ಟು ಹೆಸರುಗಳಿಸಿದ್ದರು. ಹೀಗಾಗಿ ಜಿಲ್ಲಾ ಪಂಚಾಯಿತಿ ಮಹಿಳಾ ಮೀಸಲಾತಿ ಕ್ಷೇತ್ರಕ್ಕೆ ಇವರ ತಾಯಿಯವರು ಸ್ಪರ್ಧಿಸಿ ಜಯಶೀಲರಾಗಿರುತ್ತಾರೆ. ಈ ಚುನಾವಣ ಜಯಕ್ಕೆ ಮುರಾರ್ಜಿಯವರ ಕ್ರಿಯಾಶೀಲ ವ್ಯಕ್ತಿತ್ವವೇ ಪ್ರಮುಖ ಕಾರಣವಾಗಿರುತ್ತದೆ. ಅಷ್ಟೆ ಅಲ್ಲದೆ ಇವರ ಗಾಯನ ಕಲೆಯಿಂದಾಗಿ ಚಿತ್ರದುರ್ಗ ಹಾಗೂ ಬಳ್ಳಾರಿ ಪ್ರಾಂತ್ಯದ ಬಹುತೇಕ ಮಠಾಧೀಶರ ನೇರ ಸಂಪರ್ಕವನ್ನು ಗಳಿಸುವ ಮೂಲಕವಾಗಿ ಈ ಮಠಗಳ ವಿಶೇಷ ಕಾರ್ಯಕ್ರಮಗಳಲ್ಲಿ ಶರಣರ ವಚನಗಳನ್ನು ಗಾಯನ ಮಾಡಿತ್ತ ಬಂದಿದ್ದಾರೆ.

ಮುರಾರ್ಜಿಯವರಲ್ಲಿ ಅಂತರ್ಗತವಾಗಿರುವ ಈ ಗಾಯನ ಕಲೆಯು ವಂಶ ಪಾರಂಪರ್ಯವಾಗಿ ಬಂದ ಬಳುವಳಿಯಾಗಿದೆ. ಇವರ ಗ್ರಾಮ, ಅದರಲ್ಲೂ ಇವರ ಕೌಟುಂಬಿಕ ಪರಿಸರವು ಸಾಹಿತ್ಯ ಹಾಗೂ ಸಾಂಸ್ಕøತಿಕ ವಾತವರಣದಿಂದ ಕೂಡಿರುವಂತದ್ದಾಗಿದೆ. ಇವರ ತಂದೆ ತತ್ವಪದ, ಭಜನೆಪದ, ವಚನಗಳನ್ನು ಹಾಡುತ್ತ ಬಂದಿದ್ದು, ಸ್ವತಃ ತತ್ವಪದಗಳನ್ನು ರಚಿಸುವ ಕಲೆಯನ್ನು ರೂಢಿಸಿಕೊಂಡು ಬಂದಿದ್ದಾರೆ. ಇವರ ತಂದೆಯೇ ಇವರಿಗೆ ಗುರುವಾದರು. ಆರಂಭಿಕ ಹಂತದಲ್ಲಿ ಶಾಲೆಯ ಮೆಟ್ಟಿಲೇರಿರದ ಮುರಾರ್ಜಿಯವರಿಗೆ ಇವರ ತಂದೆ ಓಬಯ್ಯನವರೇ ಪ್ರಥಮ ಗುರುವಾದರು. ಆ ವೇಳೆಗಾಗಲೇ ನಾಲ್ಕನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದಿದ್ದ ಓಬಯ್ಯನವರು ತಮ್ಮ ಮಗನಿಗೆ ಕೈ ಹಿಡಿದು ಅಕ್ಷರ ಬರೆಯುವುದನ್ನು ಕಲಿಸಿದ್ದರು. ಅದರ ಜೊತೆಯಲ್ಲಿ ತಂದೆ ತಾಯಿಯರಲ್ಲಿ ಕರಗತವಾಗಿದ್ದ ಗಾಯನ ಕಲೆಯ ಪ್ರಭಾವವು ಮುರಾರ್ಜಿಯವರ ಮೇಲಾಗಿತ್ತು. ಮುಂದೆ ಇದನ್ನೆ ತಮ್ಮ ಬದುಕಿನ ಒಂದು ವೃತ್ತಿಯಾಗಿ ಆಯ್ದುಕೊಂಡ ಮುರಾರ್ಜಿಯವರು ಸಾಮಾಜಿಕವಾಗಿ, ರಾಜಕಿಯವಾಗಿ ಹಾಗೂ ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಿದರು. ಈ ಮೂಲಕವಾಗಿ ಜಾನಪದ ಕಲೆಯೊಂದು ಆಧುನಿಕ ಸಂದರ್ಭದಲ್ಲಿ ವಿವಿಧ ನೆಲೆಯಲ್ಲಿ ತನ್ನ ವಿಸ್ತಾರತೆಯನ್ನು ಕಂಡುಕೊಳ್ಳುವಂತಾಯಿತು.

ಹಾಗೆಯೇ ಈ ಜಾನಪದ ಸಾಹಿತ್ಯವು ಒಬ್ಬ ವ್ಯಕ್ತಿಯ ಬದುಕಿಗೆ ಆಸರೆಯಾಗಿ ಸಾಕಷ್ಟು ಕೀರ್ತಿಯನ್ನು ತಂದುಕೊಟ್ಟಿದೆ. ಜಾನಪದವು ನಿಂತ ನೀರಲ್ಲ, ಅದು ಸದಾ ಪ್ರವಹಿಸುತ್ತಿರುವ ಶುದ್ಧ ಜಲ. ಹೀಗಾಗಿ ಈ ಪ್ರಕಾರವು ಬದಲಾದ ಕಾಲಕ್ಕಿ ತಕ್ಕಂತೆ ಭೂತದೊಂದಿಗೆ ವರ್ತಮಾನವನ್ನು ಬೆಸೆಯುತ್ತ ಮನ್ನೆಡೆಯುತ್ತಿರುತ್ತದೆ. ಅದರಂತೆ ಮುರಾರ್ಜಿಯವರ ಬದುಕಿನಲ್ಲಿ ಕೂಡ ನಮ್ಮ ಜಾನಪದವು ಇದೇ ಮಾರ್ಗದಲ್ಲಿ ಮುಂದುವರೆಯುತ್ತ ಬಂದಿದೆ.
ನಮ್ಮ ಜಾನಪದ ಸಾಹಿತ್ಯ ಪ್ರಕಾರಗಳಲ್ಲಿ ಸಾಮಾಜಿಕ ನಾಟಕವು ಒಂದು ವಿಶಿಷ್ಟ ಪ್ರಕಾರವಾಗಿ ಕಂಡುಬರುತ್ತದೆ. ಈ ನಾಟಕಗಳು ಗ್ರಾಮೀಣ ಬದುಕಿನ ಬಹುಮುಖ್ಯ ಮನರಂಜನ ಮಾಧ್ಯಮವಾಗಿವೆ.

ಮುರಾರ್ಜಿಯವರಿಗೆ ಈ ನಾಟಕ ಪ್ರಪಂಚವು ಮೊದಲು ಆಕರ್ಷಿದ್ದು ಮಾತ್ರ ಅದೊಂದು ಮನರಂಜನೆಯ ಭಾಗವಾಗಿ. ಈ ವೇಳೆಗಾಗಲೆ ಶಾಲಾ ಹಂತದಿಂದ ತನ್ನಲ್ಲಿದ ಸುಮಧುರವಾದ ಗಾಯನ ಕಲೆಯಿಂದ ಶಿಕ್ಷರರು ಹಾಗೂ ತನ್ನ ಸುತ್ತಮುತ್ತಲಿನ ಜನತೆಯಿಂದ ಮೆಚ್ಚುಗೆಯನ್ನು ಗಳಿಸಿದ್ದ ಇವರಿಗೆ ಈ ಸಾಮಾಜಿಕ ನಾಟಕಗಳಲ್ಲಿ ತನ್ನ ಕಂಠವನ್ನು ಪ್ರದರ್ಶಿಸಬೇಕು ಎಂಬ ಕಾತುರ ಹಾಗೂ ತುಡಿತ ಇವರನ್ನು ಬಾದಿಸುತ್ತಿತ್ತು. ಇದಕ್ಕೆ ಕಾರಣವು ಇದೆ. ಈ ಸಂದರ್ಭಕ್ಕಾಗಲೆ ಇವರ ಶಿಕ್ಷಣವು ಮನೆಯಲ್ಲಿ ಕಾಡುವ ಬಡತನದಿಂದ ಕುಂಟಿತವಾಗಿತ್ತು. ತಾನು ಓದಿನಲ್ಲಿ ಮುಂದಿದ್ದರೂ ಓದುವುದಕ್ಕೆ ಸಾಧ್ಯವಾಗದೆ ಜೀತ ಮಾಡುವಂತಹ ಸ್ಥಿತಿಯನ್ನು ತಲುಪಿದಾಗ ಇವರನ್ನು ಆ ನೋವು ಬಲವಾಗಿ ಕಾಡಿರುವ ಸಾಧ್ಯತೆಯೂ ಇದೆ. ಇಂತಹ ಸಂದಿಗ್ದ ಸನ್ನಿವೇಶದಲ್ಲಿ ಇವರು ನಾಟಕದಂತಹ ಮನರಂಜನಾ ಕ್ಷೇತ್ರದತ್ತ ತಮ್ಮ ಚಿತ್ತವನ್ನು ಕೇಂದ್ರಿಕರಿಸುತ್ತಾರೆ.

ಪುರುಷ ದನಿಯಲ್ಲಿ ಸಹಜವಾಗಿ ಹಾಡುವುದನ್ನು ಬಾಲ್ಯದಿಂದಲೂ ಕರಗತ ಮಾಡಿಕೊಂಡಿದ್ದ ಇವರು ಹೆಣ್ಣಿನ ದನಿಯ ಮಹತ್ವವನ್ನು ಅರಿತು ಅದರಲ್ಲಿಯೂ ಪರಿಣಿತಿಯನ್ನು ಪಡೆದುಕೊಳ್ಳುತ್ತಾರೆ. ಈ ಹೆಣ್ಣಿನ ಕಂಠವನ್ನು ಅನುಕರಿಸುವುದು ಅಂದಿಗೆ ಅನಿವಾರ್ಯವು ಆಗಿತ್ತು. ಸಾಧನೆಯ ಮುಂದೆ ಯಾವುದು ಅಸಾಧ್ಯವಲ್ಲ ಎಂಬುದನ್ನರಿತ ಇವರು ಜೀತ ಮಾಡುತ್ತ ಎಮ್ಮೆ ಕಾಯುವ ಸಂದರ್ಭದ ಬಿಡುವಿನ ವೇಳೆಯಲ್ಲಿ ಸಹಜವಾಗಿಯೇ ಹೆಣ್ಣಿನ ಕಂಠದಲ್ಲಿ ಹಾಡುವ ಕಲೆಗಾರಿಕೆಯನ್ನು ಕರಗತ ಮಾಡಿಕೊಳ್ಳುತ್ತಾರೆ. ಏಕಕಾಲಕ್ಕೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ವ್ಯಕ್ತಪಡಿಸುವುದು ಸುಲಭದ ಮಾತಲ್ಲ. ಆದರೆ ಬದುಕಿನ ಅನಿವಾರ್ಯ ಒತ್ತಡ ಹಾಗೂ ರಂಗಭೂಮಿಯ ಮೇಲಿರುವ ಇವರ ಆಸಕ್ತಿಯಿಂದಾಗಿ ಇವರು ದ್ವಿಕಂಠ ಕಲೆಯಲ್ಲಿ ಸಿದ್ಧಿಯನ್ನು ಪಡೆದುಕೊಂಡು ನಾಡಿನಾದ್ಯಂತ ಸಾಕಷ್ಟು ಹೆಸರು ಮತ್ತು ಕೀರ್ತಿಯನ್ನು ಗಳಿಸಿದ್ದಾರೆ. ಆ ಮೂಲಕವಾಗಿ ಸಂಗೀತದ ವಿವಿಧ ಪ್ರಕಾರಗಳ್ನು ತಮ್ಮ ಕಲೆಯ ವ್ಯಾಪ್ತಿಗೊಳಪಡಿಸಿಕೊಂಡು ಹೊರ ರಾಜ್ಯಗಳಲ್ಲಿಯೂ ತಮ್ಮ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಇದಕ್ಕೆ ಪ್ರತಿಫಲವಾಗಿ ‘ಜಿಲ್ಲಾ ಪ್ರಶಸ್ತಿ’, ಯೋಜನಾ ಸೇವಾ ಪ್ರಶಸ್ತಿ, ಹಾಗೂ ಅಕ್ಷರ ಸಂಸ್ಥೆಯ ಅಡಿಯಲ್ಲಿನ ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಗಳು ಇವರಿಗೆ ಲಭಿಸಿವೆ.

ಶ್ರೀಯುತ ಮುರಾರ್ಜಿಯವರ ಸುಮಾರು ಈ ಇಪ್ಪತ್ತು ವರ್ಷಗಳ ಅವಧಿಯ ಸಂಗೀತ ಕ್ಷೇತ್ರದ ಪಯಣದಲ್ಲಿ ಸದಾ ಕ್ರಿಯಾಶೀಲರಾಗಿದ್ದು, ಸಾಮಾನ್ಯ ಜನತೆಯ ನೋವಿಗೆ ಸ್ಪಂದಿಸುತ್ತ ಬಂದಿದ್ದಾರೆ. ಸಮಾಜ ಸೇವೆಯನ್ನು ತಮ್ಮ ಬದುಕಿನ ಒಂದು ಭಾಗವಾಗಿಸಿಕೊಂಡ ಇವರು ತನಗೆ ಅನ್ನವನ್ನು ನೀಡಿ, ಬದುಕಿಗೆ ಆಶ್ರಯವನ್ನು ಕಲ್ಪಿಸಿದ ಈ ಕಲೆಯನ್ನು ಕೊನೆಯ ಉಸಿರಿರುವರೆಗೂ ಮುನ್ನೆಡೆಸುವ ಆಶಯವೊತ್ತು ಸಾಗುತ್ತಿದ್ದಾರೆ. ಜಾನಪದ ಬದುಕಿನೊಳಗೆ ಬೆಳೆದುಬಂದ ದಲಿತ ಪ್ರತಿಭೆಯೊಂದು ತನ್ನ ಕ್ರಿಯಾಶೀಲ ವ್ಯಕ್ತಿತ್ವದಿಂದ ವಿವಿಧ ಕ್ಷೇತ್ರಗಳನ್ನು ತನ್ನ ವ್ಯಾಪ್ತಿಯೊಳಗೆ ಸೇರಿಸಿಕೊಂಡು ಮುನ್ನಡೆಯುತ್ತಿರುವ ಬಗೆಯು ಜಾನಪದ ಸೊಗಡನ್ನು ಆಧುನಿಕ ಯುಗದಲ್ಲಿ ಜೀವಂತಗೊಳಿಸುವ ವಿಧಾನವಾಗಿ ಕಂಡುಬರುತ್ತದೆ.

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ5 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ5 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ7 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ1 week ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ1 week ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ2 weeks ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ2 weeks ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending