ನೆಲದನಿ
ದ್ವಿಕಂಠ ಸಿರಿ ಮುರಾರ್ಜಿ ಎಂಬ ದಲಿತ ಕಲಾವಿದನ ಹೋರಾಟ ಕಥನ
ಭಾರತದಲ್ಲಿ ವೈದಿಕತೆಯು ತನ್ನ ಅಸ್ತಿತ್ವದ ಉಳಿವಿಗಾಗಿ ರೂಪಿಸಿಕೊಂಡು ಬಂದ ಶ್ರೇಣಿಕೃತ ವ್ಯವಸ್ಥೆಯಲ್ಲಿ ಅಸೃಶ್ಯರೆಂಬ ಪಟ್ಟವನ್ನು ಸ್ವೀಕರಿಸಿ, ಉನ್ನತ ವರ್ಗಗಳ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ನೆಡೆಸಿಕೊಂಡು ಬಂದವರು ನೆಲಮೂಲ ಸಂಸ್ಕøತಿಯ ಹೊಲೆಯ ಮತ್ತು ಮಾದಿಗ ಸಮುದಾಯದವರು. ಆಧುನಿಕ ಶಿಕ್ಷಣದಿಂದ ಜಾಗೃತರಾಗಿ ಈ ದಲಿತ ಸಮುದಾಯದ ವಿಮೋಚನೆಗಾಗಿ ಬಾಬಾಸಾಹೇಬ ಅಂಬೇಡ್ಕರರು ಸಂವಿಧಾನಿಕ ಹಕ್ಕು ಹಾಗೂ ಮೀಸಲಾತಿಯನ್ನು ಕಲ್ಪಿಸಿಕೊಡುವ ತನಕವೂ ಈ ಸಮುದಾಯದ ಸ್ಥಿತಿಗತಿಯನ್ನು ಕಲ್ಪಿಸಿಕೊಳ್ಳುವುದಕ್ಕೂ ಕಷ್ಟಸಾಧ್ಯವಾಗಿತ್ತು. ಆದರೆ ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ದಲಿತರು ನಾವು ಮಾನವರೆಂಬುದಾಗಿ ಸ್ವಲ್ಪ ನೆಮ್ಮದಿಯುತವಾಗಿ ಬದುಕುವಂತಾಗಿದೆ. ಇಂತಹ ದಮನಿತ ಸಮುದಾಯದಲ್ಲಿ ಬೆಳೆದುಬಂದು, ತಮ್ಮ ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದ ಕಲೆಯಿಂದಲೆ ತನ್ನ ಬದುಕನ್ನು ರೂಪಿಸಿಕೊಂಡು, ಆ ಮೂಲಕ ತನ್ನ ಸಮುದಾಯದ ಜನತೆ ಹಾಗೂ ಸಮಾಜದಲ್ಲಿನ ಮಾರಕ ನೆಲೆಯ ಸನ್ನಿವೇಶಗಳ ಕುರಿತಾಗಿ ಅರಿವು ಮೂಡಿಸುವ ನೆಲೆಯಲ್ಲಿ ಹಲವಾರು ದಮನಿತ ಕಲಾವಿದರು ನೆಲದ ದನಿಯಾಗಿ ತಮ್ಮ ಪ್ರಾಮಾಣಿಕ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ನಮ್ಮ ನಡುವೆ ಇರುವ ಇಂತಹ ಜೀವಪರ ದನಿಗಳನ್ನು ಗುರುತಿಸುವ ಕಿರು ಪ್ರಯತ್ನದ ಭಾಗವೇ ಪ್ರಸ್ತುತ ಲೇಖನದ ಆಶಯವಾಗಿದೆ.
ಜಾನಪದ ಸಾಹಿತ್ಯ, ಸಂಗೀತ ನೆಲೆಯೂರಿರುವುದೆ ಗ್ರಾಮೀಣ ಜನಜೀವನದಲ್ಲಿ, ಅದರಲ್ಲೂ ವಿಶೇಷವಾಗಿ ತಳಸಮುದಾಯಗಳು ಹಾಗೂ ಶ್ರಮಿಕ ವರ್ಗಗಳಲ್ಲಿ. ನಮ್ಮ ಜಾನಪದ ಪರಂಪರೆ ಹಾಗೂ ದೇಶಿ ಸಾಹಿತ್ಯದ ಸೊಬಗನ್ನು ಇಂದಿಗೂ ಜೀವಂತವಾಗಿ ಗುರುತಿಸುವುದಾದರೆ ಅದು ದಲಿತರು ಹಾಗೂ ತಳವರ್ಗಗಳಲ್ಲಿ ಮಾತ್ರ. ಆಧುನಿಕತೆಯ ಸ್ಪರ್ಶ ಹಾಗೂ ಆರ್ಥಿಕತೆಯ ಸುಧಾರಣೆಯ ಹಂತವನ್ನು ತಲುಪಿದ ಬಹುತೇಕ ಕುಟುಂಬಗಳಲ್ಲಿ ಈ ಮೌಖಿಕ ಜಾನಪದವು ಕಣ್ಮರೆಯಾಗಿರುವ ಸಾಧ್ಯತೆ ಹೆಚ್ಚಾಗಿ ಕಂಡುಬರುತ್ತದೆ. ಇದು ಪ್ರಕೃತಿಯ ಬದಲಾವಣೆಯ ನಿಯಮಗಳಲ್ಲೊಂದಾಗಿರುವ ಸಹಜ ಪ್ರಕ್ರಿಯೆಯಾಗಿದೆ. ಹಿಂದಿನಿಂದಲೂ ಜಾನಪದ ಸಾಹಿತ್ಯ ಪರಂಪರೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಜಾನಪದ ಮತ್ತು ಬಡತನಕ್ಕೂ ಅವಿನಾಭಾವ ಸಂಬಂಧವಿರುವುದು ಕಂಡುಬರುತ್ತದೆ. ಇಂದಿಗೂ ಎಷ್ಟೋ ಜನ ಜಾನಪದ ಕಲಾವಿದರು ತಮ್ಮ ಸಾಹಿತ್ಯ ಹಾಗೂ ಕಲೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೂ ಉಳಿಸುವ ಸಲುವಾಗಿ ಬಡತನದ ಬೇಗೆಯಲ್ಲಿ ತಾವು ಬೆಂದು, ತಮ್ಮ ಕಲೆಯನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿ ಜಾನಪದ ಸಾಹಿತ್ಯದ ಮೂಲಕವೇ ತನ್ನ ಬಡತನದ ಬದುಕು ಹಾಗೂ ಆರ್ಥಿಕತೆಯ ಮಟ್ಟವನ್ನು ಸುಧಾರಿಸಿಕೊಂಡ ಗ್ರಾಮೀಣ ಪ್ರತಿಭೆಯಾದ ಮುರಾರ್ಜಿ ಎಂಬ ದ್ವಿಕಂಠ ಕಲಾವಿದನ ಬದುಕಿನ ಸಂಕಥನವನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ದೇಶವಾಗಿದೆ.
2
ಚಿತ್ರದುರ್ಗ ಜಿಲ್ಲೆಯ ಚಿನ್ನೋಬನಹಳ್ಳಿ ಎಂಬ ಗ್ರಾಮದ ದಲಿತ ಕುಟುಂಬವೊಂದರಲ್ಲಿ ಶ್ರೀ ಡಿ.ಬಿ. ಓಬ್ಬಯ್ಯ ಹಾಗೂ ಶ್ರೀಮತಿ ಮಾರಮ್ಮ ಎಂಬ ದಂಪತಿಗಳ ಮಗನಾಗಿ ಜನ್ಮತಳೆದ ಶ್ರೀಯುತ ಮುರಾರ್ಜಿಯವರು ಬಾಲ್ಯದಿಂದಲೂ ಜಾನಪದ ಸಾಹಿತ್ಯ ಸಂಗೀತದಂತಹ ವಾತವರಣದ ನಡುವೆ ಬೆಳೆದು ಬಂದವರು. ಇವರ ತಂದೆ ತತ್ವಪದ ಹಾಗೂ ಭಜನೆಯಂತಹ ಸಾಹಿತ್ಯ ವಲಯದಲ್ಲಿ ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದು, ಇವರ ತಾಯಿ ಮಾರಮ್ಮನವರು ಸೋಬಾನೆ ಹಾಡುಗಾರ್ತಿಯಾಗಿಯೂ ಪ್ರಸಿದ್ದಿಯನ್ನು ಪಡೆದವರು. ಇವರ ಪ್ರಭಾವದ ನಡುವೆ ಬೆಳೆದು ಬಂದ ಮುರಾರ್ಜಿಯವರು ಜಾನಪದ ಸಂಗೀತ ಹಾಗೂ ನಾಟಕವನ್ನು ತಮ್ಮ ಕಾರ್ಯಕ್ಷೇತ್ರವಾಗಿ ಆಯ್ದುಕೊಂಡರು. ತನ್ನ ಬಡತನದ ಬದುಕಿನ ನಡುವೆಯೇ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡ ಇವರು, ತಮ್ಮ ಪ್ರಾದೇಶಿಕ ಪರಿಸರದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಸಾಮಾಜಿಕ ನಾಟಕಗಳಿಂದ ಪ್ರಭಾವಿತರಾದರು. ಈ ಸಾಮಾಜಿಕ ನಾಟಕಗಳ ಪ್ರಭಾವದಿಂದಾಗಿ ಹೆಣ್ಣು ಮತ್ತು ಗಂಡಿನ ದನಿಯನ್ನು ಅನುಕರಿಸುವ ಮೂಲಕವಾಗಿ ಹಾಡುಗಳನ್ನು ಮಧುರವಾಗಿ ಹಾಡತೊಡಗಿದರು. ಈ ಹಾಡುಗಾರಿಕೆಯನ್ನು ಮನರಂಜನೆಯ ಒಂದು ಭಾಗವಾಗಿ ಮುಂದುವರೆಸಿಕೊಂಡು ಬಂದ ಇವರಿಗೆ ಬಾಲ್ಯದಿಂದಲೂ ಗಾಯನ ಕಲೆಯು ಹತ್ತಿರದಿಂದ ಪರಿಚಿತವಾದ ಕಲೆಯಾಗಿತ್ತು.
ಇವರಲ್ಲಿ ಅಂತರ್ಗತವಾಗಿದ್ದ ಈ ಕಲೆಯ ಅನಾವರಣಕ್ಕೆ ಪ್ರಾರಂಭಿಕ ವೇದಿಕೆ ಲಭಿಸಿದ್ದು ಮಾತ್ರ ಕಿರಿಯ ಪ್ರಾಥಮಿಕ ಶಿಕ್ಷಣದ ಪಡೆಯುವ ಅವಧಿಯಲ್ಲಿ. ಈ ಅವಧಿಯಲ್ಲಿ ಶಾಲೆಯಲ್ಲಿ ನಡೆಸುತ್ತಿದ್ದ ಶಾರದ ಪೂಜೆ ಹಾಗೂ ಇತರೆ ಸಮಾರಂಭಗಳಲ್ಲಿ ಇವರೇ ಪ್ರಾರ್ಥನೆಯನ್ನು ನೆರವೇರಿಸುತ್ತಿದ್ದರು. ಈ ಹಂತದಲ್ಲಿ ಇವರ ಕಂಠವನ್ನು ಮೆಚ್ಚಿ ಪ್ರೋತ್ಸಹಿಸುತ್ತಿದ್ದ ಶಿಕ್ಷಕರಿಂದ ಇವರಲ್ಲಿ ಮತ್ತೊಷ್ಟು ಬೆಂಬಲ ಹಾಗೂ ಆತ್ಮಸ್ಥೈರ್ಯ ಒಡಮೂಡಿತು. ಇಂಥ ಪ್ರೋತ್ಸಾಹಗಳ ನಡುವೆ ಬೆಳೆದುಬಂದ ಮುರಾರ್ಜಿಯವರಿಗೆ ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣದ ಅವಧಿಯಲ್ಲಿ ಶಿಕ್ಷಕ ವರ್ಗದಿಂದ ಉತ್ತಮವಾದ ಸಹಕಾರ ಲಭಿಸಿತು. ಇವರಲ್ಲಿ ಅಂತರ್ಗತವಾಗಿದ್ದ ಗಾಯನ ಕಲೆಗೆ ಮನಸೋತ ಶಿಕ್ಷಕ ವರ್ಗವು ಬಡತನದಲ್ಲಿದ್ದ ಮುರಾರ್ಜಿ ಎಂಬ ಈ ಪ್ರತಿಭೆಯನ್ನು ಪ್ರಚೋದಿಸುವ ನೆಲೆಯಲ್ಲಿ ಇವರ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುತ್ತ ಬಂದರು. ಶಿಕ್ಷಕ ವರ್ಗದ ಇಂತಹ ಸಹಕಾರದಿಂದಾಗಿ ವಿದ್ಯಾಭ್ಯಾಸ ಹಾಗೂ ಗಾಯನ ಕಲೆಯಲ್ಲಿ ಸಾಕಷ್ಟು ಆಸಕ್ತಿಯನ್ನು ಪಡೆದುಕೊಂಡರು. ಕಾಡುಹಕ್ಕಿ ಹಕ್ಕಿಯಂತೆ ತನ್ನ ಸ್ವರ ಮಾಧುರ್ಯವನ್ನು ಮುಂದುವರೆಸುತ್ತ ಬಂದ ಈ ಹಳ್ಳಿಹಕ್ಕಿಗೆ ಗಾಯನ ಕಲೆಯೇ ತನ್ನ ಬದುಕಿಗೆ ಸಾಕಷ್ಟು ಹೆಸರು ತಂದು ಕೊಟ್ಟಿರುವುದು ಮಾತ್ರವಲ್ಲದೆ, ಇವರ ಬದುಕಿಗೆ ವರವಾಗಿ ಪರಿಣಮಿಸಿತು.
3
ಮುರಾರ್ಜಿಯವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ಬೆಳೆದುಬಂದವರು. ಇಂತಹ ಸಂದರ್ಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಓದುವುದಕ್ಕೆ ಹಲವಾರ ತೊಂದರೆಗಳು ಎದುರಾದವು. ಇವರು ಪಿ.ಯು ಕಾಲೇಜು ಶಿಕ್ಷಣವನ್ನು ಪಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಕಾಡುವ ಬಡತನದಿಂದಾಗಿ ಕುಟುಂಬ ನಿರ್ವಹಣೆಯ ಸಮಸ್ಯೆಯು ಎದುರಾದಾಗ ಇವರ ಶಿಕ್ಷಣ ಕುಂಟಿತವಾಯಿತು. ಈ ಅವಧಿಯಲ್ಲಿ ಕಾಲೇಜು ಶಿಕ್ಷಣದಿಂದ ವಂಚಿತರಾದ ಇವರನ್ನು ಸ್ವಗ್ರಾಮದಲ್ಲಿ ಜೀತಕ್ಕೆ ನೇಮಿಸಲಾಯಿತು. ಈ ಸಂದರ್ಭದಲ್ಲಿ ಎಮ್ಮೆ ಕಾಯಲು ಹೋಗುತ್ತಿರುವಾಗ ಬಿಡುವಿನ ವೇಳೆಯಲ್ಲಿ ತನ್ನ ಸಹೋದ್ಯೊಗಿಗಳ ಸಮ್ಮುಖದಲ್ಲಿ ಹಾಗೂ ಏಕಾಂತವಾಗಿರುವ ಸಮಯದಲ್ಲಿ ದ್ವಿಕಂಠದಲ್ಲಿ ತನ್ನ ಗಾಯನ ಕಲೆಯ ಪ್ರಯೋಗ ನಡೆಸುತ್ತಿದ್ದರು. ಈ ವೇಳೆಗಾಗಲೇ ಸಾಮಾಜಿಕ ನಾಟಕಗಳಿಂದ ಸಾಕಷ್ಟು ಪ್ರೇರಣೆಗೊಂಡಿದ್ದ ಇವರಿಗೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ತಾನು ಹಾಡಬೇಕು ಎಂಬ ಛಲ ಮೂಡಿತು. ಬಾಲ್ಯದಿಂದಲೂ ಮಧುರವಾದ ಕಂಠವನ್ನು ಹೊಂದಿದ್ದ ಇವರಿಗೆ ಇದು ಕಷ್ಟದ ಕೆಲಸವೇನು ಆಗಿರಲಿಲ್ಲ. ಆದರೆ ಏಕಕಾಲಕ್ಕೆ ಗಂಡು ಮತ್ತು ಹೆಣ್ಣಿನ ಸ್ವರವನ್ನು ಬದಲಾಯಿಸಿ ಹಾಡುವುದಕ್ಕೆ ತಾಲಿಮಿನ ಅವಶ್ಯಕತೆ ಇವರಿಗೆ ಬೇಕಿತ್ತು. ಈ ಸಂದರ್ಭದಲ್ಲಿ ಇವರು ಯಾವುದೇ ಗುರುವಿನ ಬಳಿ ಕಲಿಯದೆ ಸ್ವತಃ ತಾವೇ ಪ್ರಯೋಗ ನಡೆಸಿ ದ್ವಿಕಂಠ ಕಲೆಯಲ್ಲಿ ಪರಿಣಿತಿಯನ್ನು ಸಾಧಿಸಿದರು. ಹಗಲೆಲ್ಲ ಜೀತ ಕೆಲಸ ಮಾಡಿಕೊಂಡೆ ಹಾಡುಗಾರಿಕೆಯ ಪ್ರಯೋಗ ನಡೆಸಿ ರಾತ್ರಿಯ ವೇಳೆಯಲ್ಲಿ ಎಲ್ಲಿ ಸಾಮಾಜಿಕ ನಾಟಕಗಳು ನಡೆಯುತ್ತವೊ, ಇಲ್ಲವೇ ಸಾಮಾಜಿಕ ನಾಟಕಗಳ ಪೂರ್ವ ತಯಾರಿ ನಡೆಯುತ್ತಿರುತ್ತವೊ ಅಲ್ಲಿಗೆ ಹೋಗಿ ಹಾರ್ಮೊನಿಯಂ ಮಾಸ್ಟರ್ ಜೊತೆ ರಾತ್ರಿ ಪೂರ ಅಲ್ಲಿಯೇ ಕಾಲ ಕಳೆಯುತ್ತಿದ್ದರು. ಈ ಸಮಯದಲ್ಲಿ ಮುರಾರ್ಜಿಯವರ ಚಿಕ್ಕಪ್ಪನಾದ ಬರ್ತಿ ಓಬಳೇಶ್ ಎಂಬುವವರು ಹಾರ್ಮೊನಿಯಂ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ನಾಟಕಗಳ ತಾಲೀಮು ನಡೆಸುವ ಸಮಯದಲ್ಲಿ ಅವರ ಬಳಿ ಇದ್ದು ಅವರಂತೆ ಹಾಡುವ ಹವ್ಯಾಸವನ್ನು ಕಲಿತುಕೊಂಡರು.
ಮುರಾರ್ಜಿಯವರು ತಮ್ಮಲ್ಲಿ ಕರಗತವಾಗಿರುವ ದ್ವಿಕಂಠ ಕಲೆಯನ್ನು ಪ್ರದರ್ಶಿಸುವ ಅವಕಾಶಕ್ಕಾಗಿ ರಾತ್ರಿಯಿಡಿ ಕಾಯುತ್ತಿದ್ದರು. ಪ್ರಾರಂಭಿಕ ಹಂತದಲ್ಲಿ ನಾಟಕದ ಕೊನೆಯ ವೇಳೆಯಲ್ಲಿ ಒಂದು ಇಲ್ಲವೆ ಎರಡು ಹಾಡುಗಳನ್ನು ಹಾಡುವುದಕ್ಕೆ ಅವಕಾಶ ಲಭಿಸಿದರೆ ಇದೇ ಇವರಿಗೆ ತೃಪ್ತಿಯನ್ನು ತಂದು ಕೊಡುತ್ತಿತ್ತು. ಹೀಗೆ ಅವಕಾಶಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದ ಇವರು 1995 ರಲ್ಲಿ ಚಳ್ಳಕೆರೆ ತಾಲ್ಲೂಕು ದಿಮ್ಮಿನಕೆರೆ ಎಂಬ ಗ್ರಾಮದ ನಾಟಕವೊಂದರಲ್ಲಿ ಸ್ವತಂತ್ರ ಗಾಯಕನಾಗಿ ತನ್ನ ದ್ವಿಕಂಠ ಗಾಯನವನ್ನು ಪ್ರದರ್ಶಿಸಿದರು. ಈ ನಾಟಕದಿಂದ ಸಾಕಷ್ಟು ಹೆಸರು ಮಾಡಿ ಜನಮನ ಗೆದ್ದ ಮುರಾರ್ಜಿಯವರು ಇದೇ ಕ್ಷೇತ್ರದಲ್ಲಿ ಸಂಪೂರ್ಣವಾಗಿ ತನ್ನನ್ನು ತೊಡಗಿಸಿಕೊಂಡರು. ಇದರಿಂದ ಸಾಕಷ್ಟು ಅವಕಾಶಗಳು ಇವರನ್ನು ಹುಡುಕಿಕೊಂಡು ಬಂದವು. ಇದರಿಂದಾಗಿ ಇವರ ಕೌಟುಂಬಿಕ ಪರಿಸ್ಥಿತಿಯು ಸುಧಾರಣೆಯನ್ನು ಕಂಡುಕೊಂಡಿತು. ಹೀಗೆ ದ್ವಿಕಂಠ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡು ಬಂದ ಇವರು ಮುಂದೆ ಈ ಕಲೆಯನ್ನು ಪ್ರವೃತ್ತಿಯಾಗಿಸಿಕೊಂಡು ಬಂದರು. ಈ ಕಲೆಯ ಮೂಲಕವಾಗಿ ಚಿತ್ರದುರ್ಗ, ಬಳ್ಳಾರಿ, ದಾವಣಗೆ ಹಾಗೂ ಕರ್ನಾಟಕದ ವಿವಿಧ ಪ್ರಾಂತ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡರು.
ಗ್ರಾಮೀಣ ಭಾಗದ ಜನತೆಯ ಮನರಂಜನ ಕಲೆಗಳಲ್ಲಿ ಒಂದಾಗಿರುವ ಸಾಮಾಜಿಕ ನಾಟಕಗಳಲ್ಲಿ ಕಲಾವಿದರು ಹಾಡುಗಾರಿಕೆಯ ಮೂಲಕ ನಾಟಕ ಪ್ರದರ್ಶನ ಮಾಡುವುದು ಕಷ್ಟದ ಕೆಲಸವಾಗಿತ್ತು. ಅದರಲ್ಲೂ ಮಹಿಳೆಯರಿಗೆ ನಟನೆಯ ಜೊತೆ ಜೊತೆಯಲ್ಲಿ ಹಾಡುಗಾರಿಕೆಯನ್ನು ಪ್ರದರ್ಶಿಸುವುದು ತುಂಬ ಕಷ್ಟದ ಕೆಲಸವಾಗಿತ್ತು. ಹಾಡುಗಾರಿಕೆಯನ್ನು ವೃತ್ತಿಯಾಗಿಸಿಕೊಂಡ ಮಹಿಳೆಯರು ಕೂಡ ಲಭಿಸುತ್ತಿರಲಿಲ್ಲ. ಆದ ಕಾರಣದಿಂದಾಗಿ ಗಂಡು ಮತ್ತು ಹೆಣ್ಣಿನ ಎರಡು ಕಂಠಗಳನ್ನು ಹಾಡುವ ಕಲಾವಿದರಿಗೆ ಸಾಮಾಜಿಕ ನಾಟಕಗಳಲ್ಲಿ ಹೆಚ್ಚಿನ ಬೇಡಿಕೆಯೂ ಇತ್ತು. ಈ ಕಾರಣದಿಂದಾಗಿ ಮುರಾರ್ಜಿಯವರಿಗೆ ಕರಗತವಾಗಿದ್ದ ದ್ವಿಕಂಠ ಕಲೆಗೆ ಸಾಕಷ್ಟು ಬೇಡಿಕೆ ಲಭಿಸಿತು. ಈ ಕ್ಷೇತ್ರದಲ್ಲಿ ಮುನ್ನೆಡದ ಇವರು 1995 ರಿಂದ ಪ್ರತಿವರ್ಷ ಸುಮಾರು 150ಕ್ಕೂ ಅಧಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುತ್ತ ಬಂದಿದ್ದಾರೆ. ಇವರ ಅದಾಜಿನ ಪ್ರಕಾರ ಇಲ್ಲಿಯವರೆಗೆ ಸುಮಾರು 3000 ಸಾವಿರಕ್ಕೂ ಅಧಿಕ ನಾಟಕಗಳಿಗೆ ಹೆಣ್ಣು ಮತ್ತು ಗಂಡಿನ ಕಂಠವನ್ನು ನೀಡಿರುವುದಾಗಿ ತಿಳಿದುಬರುತ್ತದೆ.
4
ಶ್ರೀಯುತ ಮುರಾರ್ಜಿಯವರು ಸಾಮಾಜಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುವುದರ ಜೊತೆಗೆ ಸಾಮಾಜಿಕ ಜನಜೀವನದಲ್ಲಿ ಬೆರೆತುಕೊಂಡು ಸಾಮಾಜಿಕ ಸೇವೆಯನ್ನು ನೆರವೇರಿಸುತ್ತ ಬಂದಿದ್ದಾರೆ. ಒಬ್ಬ ಸೃಜನಶೀಲ ವ್ಯಕ್ತಿಯು ಒಂದೇ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದಿಲ್ಲ. ಯಾವಾಗಲು ತನ್ನ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವತ್ತ ಶ್ರಮಿಸುತ್ತಿರುತ್ತಾನೆ. ಇದಕ್ಕೆ ಮುರಾರ್ಜಿಯವರು ಸೂಕ್ತ ಉದಾಹರಣೆಯಾಗಿ ನಿಲ್ಲುತ್ತಾರೆ. ಗಾಯನ ಕಲೆಯ ಜೊತೆ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಶ್ರೀಯುತರು ಚಿತ್ರದುರ್ಗ ಜಿಲ್ಲಾ ದಲಿತ ಸಂಘರ್ಷ ಕಲಾ ಸಮಿತಿಯ ಸಂಚಾಲಕರಾಗಿ ಹಲವಾರು ಸಾಮಾಜಿಕ ಸುಧಾರಣೆಯ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದ್ದಾರೆ. ದಲಿತ ಕಲಾ ಮಂಡಳಿಯ ಅಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿ, ಸಾಕ್ಷರತ ಆಂದೋಲನ, ವಯಸ್ಕರ ಶಿಕ್ಷಣ ಪದ್ಧತಿಯಂತಹ ಕಾರ್ಯಕ್ರಮಗಳ ಕುರಿತಾಗಿ ಗ್ರಾಮೀಣ ಜನತೆಗೆ ಜಾಗೃತಿ ಮೂಡಿಸುವ ನೆಲೆಯಲ್ಲಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಹಾಗೆಯೇ ಸಾಮಾಜಿಕ ಸಮಸ್ಯೆಗಳಾದ ವರದಕ್ಷಿಣೆ, ಅಪರಾಧ ತಡೆ ಮಾಸಾಚರಣೆ, ಏಡ್ಸ್, ಸ್ವಚ್ಚ ಭಾರತ ಆಂದೋಲನದಂತಹ ವಿಶಿಷ್ಟವಾದ ಕಾರ್ಯಕ್ರಮಗಳ ಬಗೆಗೆ ಬೀದಿ ನಾಟಕಗಳ ಮೂಲಕವಾಗಿ ಅರಿವು ಮೂಡಿಸುವಲ್ಲಿ ಇವರು ಮಹತ್ವದ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ.
ಹೀಗೆ ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಗುರುತಿಸಿಕೊಂಡಿರುವ ಮುರಾರ್ಜಿಯವರು ಜನಪರವಾದ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆ ಮೂಲಕವಾಗಿ ಚಿತ್ರದುರ್ಗ ಜಿಲ್ಲಾ ಕಲಾವಿದರ ಒಕ್ಕೂಟವನ್ನು ರಚಿಸಿಕೊಂಡು ಸರ್ಕಾರದಿಂದ ಕಲಾವಿದರಿಗೆ ಲಭ್ಯವಿರುವ ವಿವಿಧ ಸವಲತ್ತುಗಳನ್ನು ಕಲ್ಪಿಸಿಕೊಡುವಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ. ಈ ಮೂಲಕ ಜಿಲ್ಲೆಯ ಕಲಾವಿದರ ದನಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇದರ ಜೊತೆಯಲ್ಲಿ ‘ಅಕ್ಷರ ಗ್ರಾಮೀಣ ವಿಕಾಸ ಸಂಸ್ಥೆ’ಯ ಅಡಿಯಲ್ಲಿ ಮಹಿಳೆಯರಿಗೆ ಗೃಹೋಪಯೋಗಿ ವಸ್ತು ತಯಾರಿಕೆ ತರಬೇತಿ, ಅನಕ್ಷರಸ್ಥ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶಿಕ್ಷಣ ತರಬೇತಿ, ಸರ್ಕಾರದ ‘ಬಿ ಆರ್ ಜಿ ಎಫ್’ ಯೋಜನೆಗಳ ಬಗೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಸಂಪೂರ್ಣ ಗ್ರಾಮ ನೈರ್ಮಲ್ಯ, ಸ್ವಚ್ಚ ಭಾರತ ಅಭಿಯಾನ, ಮಹಾತ್ಮಗಾಂಧಿ ಉದ್ಯೋಗಖಾತರಿ ಯೋಜನೆಗಳಂತಹ ವಿಶೇಷ ಕಾರ್ಯಕ್ರಮಗಳ ಕುರಿತಾಗಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದ್ದಾರೆ. ಬಾಲ್ಯದ ದಿನಗಳಿಂದಲೂ ಬಡತನದ ನಡುವೆಯೇ ಬೆಳೆದು ಬಂದ ಇವರು ತಮ್ಮ ಗ್ರಾಮೀಣ ಭಾಗದ ಜನತೆಗೆ ಅರಿವು ಮೂಡಿಸುವ ನೆಲೆಯಲ್ಲಿ ಇಂತಹ ಹಲವಾರು ಜನಪರವಾದ ಯೋಜನೆಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಇವರು ಕರಗತಮಾಡಿಕೊಂಡಿದ್ದ ರಂಗಭೂಮಿ ಕಲೆಯನ್ನು ಕೇವಲ ವೃತಿಯಾಗಿ ಬಳಸಿಕೊಳ್ಳದೆ ಇದರ ಅಡಿಯಲ್ಲಿ ಸಮಾಜ ಸೇವೆಯನ್ನು ಕೈಗೊಂಡರು. ಇದು ಕಲಾವಿದನೊಬ್ಬ ಸಮಾಜ ಸುಧಾರಕನಾಗಿಯೂ ತನ್ನನ್ನು ಗುರುತಿಸಿಕೊಳ್ಳಬಲ್ಲ ಎಂಬುದಕ್ಕೆ ಇವರು ಮಾದರಿಯಾಗಿ ನಿಲ್ಲುತ್ತಾರೆ. ನಮ್ಮ ಗ್ರಾಮೀಣ ಭಾಗದ ಜನರಲ್ಲಿ ಅಂತರ್ಗತವಾಗಿರುವ ಬಹುತೇಕ ಕಲೆಗಳು ಬಡತನದಲ್ಲಿ ಬಾಳಿ ಬೆಳಗಿದ ಬಗೆಯನ್ನು ನಾವು ಈಗಾಗಲೇ ನೋಡಿದ್ದೇವೆ. ಆದರೆ ಈ ಕಲೆಯ ಅಡಿಯಲ್ಲಿ ಆಧುನಿಕ ಬದುಕಿನ ತಲ್ಲಣಗಳಿಗೆ ಆರೋಗ್ಯಕರವಾದ ನೆಲೆಯಲ್ಲಿ ಸ್ಪಂದಿಸುವ ವಿಶೇಷ ಆಯಾಮವೊಂದನ್ನು ಇವರು ಕಂಡುಕೊಂಡಿದ್ದಾರೆ. ಇದು ಕಲಾ ಜೀವನದೊಂದಿಗೆ ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಕ್ರಮವಾಗಿದೆ.
ಶ್ರೀಯುತ ಮುರಾರ್ಜಿಯವರು ಕಲೆಯ ಮೂಲಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುತ್ತಲೆ ಕಲೆಯನ್ನು ಆಧುನಿಕ ಸಂದರ್ಭಕ್ಕೆ ತಕ್ಕಂತೆ ಪ್ರಗತಿಯತ್ತ ಮುನ್ನೆಡುಸುತ್ತ ಬಂದಿದ್ದಾರೆ. ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಕಲಾಕ್ಷೇತ್ರವನ್ನು ಪ್ರವೇಶಿಸಿದ ಇವರು ಸಂಗೀತ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆಗೂ ಮುಂದಾಗಿದ್ದಾರೆ. ತಮ್ಮ ಹೆಸರಿನಲ್ಲಿ ಅಡಿಯಲ್ಲಿ ‘ಮುರಾರ್ಜಿ ಸುಗಮ ಸಂಗೀತ ತಂಡ’ ಹಾಗೂ ‘ಮುರಾರ್ಜಿ ಆರ್ಕೆಸ್ಟ್ರಾ ತಂಡ’ಗಳನ್ನು ರಚಿಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಷ್ಟೇ ಅಲ್ಲದೇ ಜಾನಪದ ಹಾಡು, ತತ್ವಪದ ಹಾಡು, ಭಾವಗೀತೆಗಳು, ವಚನಗಳನ್ನು ಹೊರ ರಾಜ್ಯಗಳಲ್ಲೂ ಹಾಡುವ ಮೂಲಕವಾಗಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಹೀಗಾಗಿಯೇ ಮುರಾರ್ಜಿಯವರನ್ನು ಬಹುಮುಖ ಪ್ರತಿಭೆ ಎಂದು ಗುರುತಿಸಲಾಗಿದೆ.
5
ರಂಗಭೂಮಿ ಮತ್ತು ಗಾಯನ ಕಲೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಮುರಾರ್ಜಿಯವರು ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮುರಾರ್ಜಿಯವರು ತಮ್ಮ ಸಾಮಾಜಿಕ ಸೇವೆಯ ಮುಖಾಂತರವಾಗಿ ತಮ್ಮ ಭಾಗದಲ್ಲಿ ಸಾಕಷ್ಟು ಹೆಸರುಗಳಿಸಿದ್ದರು. ಹೀಗಾಗಿ ಜಿಲ್ಲಾ ಪಂಚಾಯಿತಿ ಮಹಿಳಾ ಮೀಸಲಾತಿ ಕ್ಷೇತ್ರಕ್ಕೆ ಇವರ ತಾಯಿಯವರು ಸ್ಪರ್ಧಿಸಿ ಜಯಶೀಲರಾಗಿರುತ್ತಾರೆ. ಈ ಚುನಾವಣ ಜಯಕ್ಕೆ ಮುರಾರ್ಜಿಯವರ ಕ್ರಿಯಾಶೀಲ ವ್ಯಕ್ತಿತ್ವವೇ ಪ್ರಮುಖ ಕಾರಣವಾಗಿರುತ್ತದೆ. ಅಷ್ಟೆ ಅಲ್ಲದೆ ಇವರ ಗಾಯನ ಕಲೆಯಿಂದಾಗಿ ಚಿತ್ರದುರ್ಗ ಹಾಗೂ ಬಳ್ಳಾರಿ ಪ್ರಾಂತ್ಯದ ಬಹುತೇಕ ಮಠಾಧೀಶರ ನೇರ ಸಂಪರ್ಕವನ್ನು ಗಳಿಸುವ ಮೂಲಕವಾಗಿ ಈ ಮಠಗಳ ವಿಶೇಷ ಕಾರ್ಯಕ್ರಮಗಳಲ್ಲಿ ಶರಣರ ವಚನಗಳನ್ನು ಗಾಯನ ಮಾಡಿತ್ತ ಬಂದಿದ್ದಾರೆ.
ಮುರಾರ್ಜಿಯವರಲ್ಲಿ ಅಂತರ್ಗತವಾಗಿರುವ ಈ ಗಾಯನ ಕಲೆಯು ವಂಶ ಪಾರಂಪರ್ಯವಾಗಿ ಬಂದ ಬಳುವಳಿಯಾಗಿದೆ. ಇವರ ಗ್ರಾಮ, ಅದರಲ್ಲೂ ಇವರ ಕೌಟುಂಬಿಕ ಪರಿಸರವು ಸಾಹಿತ್ಯ ಹಾಗೂ ಸಾಂಸ್ಕøತಿಕ ವಾತವರಣದಿಂದ ಕೂಡಿರುವಂತದ್ದಾಗಿದೆ. ಇವರ ತಂದೆ ತತ್ವಪದ, ಭಜನೆಪದ, ವಚನಗಳನ್ನು ಹಾಡುತ್ತ ಬಂದಿದ್ದು, ಸ್ವತಃ ತತ್ವಪದಗಳನ್ನು ರಚಿಸುವ ಕಲೆಯನ್ನು ರೂಢಿಸಿಕೊಂಡು ಬಂದಿದ್ದಾರೆ. ಇವರ ತಂದೆಯೇ ಇವರಿಗೆ ಗುರುವಾದರು. ಆರಂಭಿಕ ಹಂತದಲ್ಲಿ ಶಾಲೆಯ ಮೆಟ್ಟಿಲೇರಿರದ ಮುರಾರ್ಜಿಯವರಿಗೆ ಇವರ ತಂದೆ ಓಬಯ್ಯನವರೇ ಪ್ರಥಮ ಗುರುವಾದರು. ಆ ವೇಳೆಗಾಗಲೇ ನಾಲ್ಕನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದಿದ್ದ ಓಬಯ್ಯನವರು ತಮ್ಮ ಮಗನಿಗೆ ಕೈ ಹಿಡಿದು ಅಕ್ಷರ ಬರೆಯುವುದನ್ನು ಕಲಿಸಿದ್ದರು. ಅದರ ಜೊತೆಯಲ್ಲಿ ತಂದೆ ತಾಯಿಯರಲ್ಲಿ ಕರಗತವಾಗಿದ್ದ ಗಾಯನ ಕಲೆಯ ಪ್ರಭಾವವು ಮುರಾರ್ಜಿಯವರ ಮೇಲಾಗಿತ್ತು. ಮುಂದೆ ಇದನ್ನೆ ತಮ್ಮ ಬದುಕಿನ ಒಂದು ವೃತ್ತಿಯಾಗಿ ಆಯ್ದುಕೊಂಡ ಮುರಾರ್ಜಿಯವರು ಸಾಮಾಜಿಕವಾಗಿ, ರಾಜಕಿಯವಾಗಿ ಹಾಗೂ ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಿದರು. ಈ ಮೂಲಕವಾಗಿ ಜಾನಪದ ಕಲೆಯೊಂದು ಆಧುನಿಕ ಸಂದರ್ಭದಲ್ಲಿ ವಿವಿಧ ನೆಲೆಯಲ್ಲಿ ತನ್ನ ವಿಸ್ತಾರತೆಯನ್ನು ಕಂಡುಕೊಳ್ಳುವಂತಾಯಿತು.
ಹಾಗೆಯೇ ಈ ಜಾನಪದ ಸಾಹಿತ್ಯವು ಒಬ್ಬ ವ್ಯಕ್ತಿಯ ಬದುಕಿಗೆ ಆಸರೆಯಾಗಿ ಸಾಕಷ್ಟು ಕೀರ್ತಿಯನ್ನು ತಂದುಕೊಟ್ಟಿದೆ. ಜಾನಪದವು ನಿಂತ ನೀರಲ್ಲ, ಅದು ಸದಾ ಪ್ರವಹಿಸುತ್ತಿರುವ ಶುದ್ಧ ಜಲ. ಹೀಗಾಗಿ ಈ ಪ್ರಕಾರವು ಬದಲಾದ ಕಾಲಕ್ಕಿ ತಕ್ಕಂತೆ ಭೂತದೊಂದಿಗೆ ವರ್ತಮಾನವನ್ನು ಬೆಸೆಯುತ್ತ ಮನ್ನೆಡೆಯುತ್ತಿರುತ್ತದೆ. ಅದರಂತೆ ಮುರಾರ್ಜಿಯವರ ಬದುಕಿನಲ್ಲಿ ಕೂಡ ನಮ್ಮ ಜಾನಪದವು ಇದೇ ಮಾರ್ಗದಲ್ಲಿ ಮುಂದುವರೆಯುತ್ತ ಬಂದಿದೆ.
ನಮ್ಮ ಜಾನಪದ ಸಾಹಿತ್ಯ ಪ್ರಕಾರಗಳಲ್ಲಿ ಸಾಮಾಜಿಕ ನಾಟಕವು ಒಂದು ವಿಶಿಷ್ಟ ಪ್ರಕಾರವಾಗಿ ಕಂಡುಬರುತ್ತದೆ. ಈ ನಾಟಕಗಳು ಗ್ರಾಮೀಣ ಬದುಕಿನ ಬಹುಮುಖ್ಯ ಮನರಂಜನ ಮಾಧ್ಯಮವಾಗಿವೆ.
ಮುರಾರ್ಜಿಯವರಿಗೆ ಈ ನಾಟಕ ಪ್ರಪಂಚವು ಮೊದಲು ಆಕರ್ಷಿದ್ದು ಮಾತ್ರ ಅದೊಂದು ಮನರಂಜನೆಯ ಭಾಗವಾಗಿ. ಈ ವೇಳೆಗಾಗಲೆ ಶಾಲಾ ಹಂತದಿಂದ ತನ್ನಲ್ಲಿದ ಸುಮಧುರವಾದ ಗಾಯನ ಕಲೆಯಿಂದ ಶಿಕ್ಷರರು ಹಾಗೂ ತನ್ನ ಸುತ್ತಮುತ್ತಲಿನ ಜನತೆಯಿಂದ ಮೆಚ್ಚುಗೆಯನ್ನು ಗಳಿಸಿದ್ದ ಇವರಿಗೆ ಈ ಸಾಮಾಜಿಕ ನಾಟಕಗಳಲ್ಲಿ ತನ್ನ ಕಂಠವನ್ನು ಪ್ರದರ್ಶಿಸಬೇಕು ಎಂಬ ಕಾತುರ ಹಾಗೂ ತುಡಿತ ಇವರನ್ನು ಬಾದಿಸುತ್ತಿತ್ತು. ಇದಕ್ಕೆ ಕಾರಣವು ಇದೆ. ಈ ಸಂದರ್ಭಕ್ಕಾಗಲೆ ಇವರ ಶಿಕ್ಷಣವು ಮನೆಯಲ್ಲಿ ಕಾಡುವ ಬಡತನದಿಂದ ಕುಂಟಿತವಾಗಿತ್ತು. ತಾನು ಓದಿನಲ್ಲಿ ಮುಂದಿದ್ದರೂ ಓದುವುದಕ್ಕೆ ಸಾಧ್ಯವಾಗದೆ ಜೀತ ಮಾಡುವಂತಹ ಸ್ಥಿತಿಯನ್ನು ತಲುಪಿದಾಗ ಇವರನ್ನು ಆ ನೋವು ಬಲವಾಗಿ ಕಾಡಿರುವ ಸಾಧ್ಯತೆಯೂ ಇದೆ. ಇಂತಹ ಸಂದಿಗ್ದ ಸನ್ನಿವೇಶದಲ್ಲಿ ಇವರು ನಾಟಕದಂತಹ ಮನರಂಜನಾ ಕ್ಷೇತ್ರದತ್ತ ತಮ್ಮ ಚಿತ್ತವನ್ನು ಕೇಂದ್ರಿಕರಿಸುತ್ತಾರೆ.
ಪುರುಷ ದನಿಯಲ್ಲಿ ಸಹಜವಾಗಿ ಹಾಡುವುದನ್ನು ಬಾಲ್ಯದಿಂದಲೂ ಕರಗತ ಮಾಡಿಕೊಂಡಿದ್ದ ಇವರು ಹೆಣ್ಣಿನ ದನಿಯ ಮಹತ್ವವನ್ನು ಅರಿತು ಅದರಲ್ಲಿಯೂ ಪರಿಣಿತಿಯನ್ನು ಪಡೆದುಕೊಳ್ಳುತ್ತಾರೆ. ಈ ಹೆಣ್ಣಿನ ಕಂಠವನ್ನು ಅನುಕರಿಸುವುದು ಅಂದಿಗೆ ಅನಿವಾರ್ಯವು ಆಗಿತ್ತು. ಸಾಧನೆಯ ಮುಂದೆ ಯಾವುದು ಅಸಾಧ್ಯವಲ್ಲ ಎಂಬುದನ್ನರಿತ ಇವರು ಜೀತ ಮಾಡುತ್ತ ಎಮ್ಮೆ ಕಾಯುವ ಸಂದರ್ಭದ ಬಿಡುವಿನ ವೇಳೆಯಲ್ಲಿ ಸಹಜವಾಗಿಯೇ ಹೆಣ್ಣಿನ ಕಂಠದಲ್ಲಿ ಹಾಡುವ ಕಲೆಗಾರಿಕೆಯನ್ನು ಕರಗತ ಮಾಡಿಕೊಳ್ಳುತ್ತಾರೆ. ಏಕಕಾಲಕ್ಕೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ವ್ಯಕ್ತಪಡಿಸುವುದು ಸುಲಭದ ಮಾತಲ್ಲ. ಆದರೆ ಬದುಕಿನ ಅನಿವಾರ್ಯ ಒತ್ತಡ ಹಾಗೂ ರಂಗಭೂಮಿಯ ಮೇಲಿರುವ ಇವರ ಆಸಕ್ತಿಯಿಂದಾಗಿ ಇವರು ದ್ವಿಕಂಠ ಕಲೆಯಲ್ಲಿ ಸಿದ್ಧಿಯನ್ನು ಪಡೆದುಕೊಂಡು ನಾಡಿನಾದ್ಯಂತ ಸಾಕಷ್ಟು ಹೆಸರು ಮತ್ತು ಕೀರ್ತಿಯನ್ನು ಗಳಿಸಿದ್ದಾರೆ. ಆ ಮೂಲಕವಾಗಿ ಸಂಗೀತದ ವಿವಿಧ ಪ್ರಕಾರಗಳ್ನು ತಮ್ಮ ಕಲೆಯ ವ್ಯಾಪ್ತಿಗೊಳಪಡಿಸಿಕೊಂಡು ಹೊರ ರಾಜ್ಯಗಳಲ್ಲಿಯೂ ತಮ್ಮ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಇದಕ್ಕೆ ಪ್ರತಿಫಲವಾಗಿ ‘ಜಿಲ್ಲಾ ಪ್ರಶಸ್ತಿ’, ಯೋಜನಾ ಸೇವಾ ಪ್ರಶಸ್ತಿ, ಹಾಗೂ ಅಕ್ಷರ ಸಂಸ್ಥೆಯ ಅಡಿಯಲ್ಲಿನ ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಗಳು ಇವರಿಗೆ ಲಭಿಸಿವೆ.
ಶ್ರೀಯುತ ಮುರಾರ್ಜಿಯವರ ಸುಮಾರು ಈ ಇಪ್ಪತ್ತು ವರ್ಷಗಳ ಅವಧಿಯ ಸಂಗೀತ ಕ್ಷೇತ್ರದ ಪಯಣದಲ್ಲಿ ಸದಾ ಕ್ರಿಯಾಶೀಲರಾಗಿದ್ದು, ಸಾಮಾನ್ಯ ಜನತೆಯ ನೋವಿಗೆ ಸ್ಪಂದಿಸುತ್ತ ಬಂದಿದ್ದಾರೆ. ಸಮಾಜ ಸೇವೆಯನ್ನು ತಮ್ಮ ಬದುಕಿನ ಒಂದು ಭಾಗವಾಗಿಸಿಕೊಂಡ ಇವರು ತನಗೆ ಅನ್ನವನ್ನು ನೀಡಿ, ಬದುಕಿಗೆ ಆಶ್ರಯವನ್ನು ಕಲ್ಪಿಸಿದ ಈ ಕಲೆಯನ್ನು ಕೊನೆಯ ಉಸಿರಿರುವರೆಗೂ ಮುನ್ನೆಡೆಸುವ ಆಶಯವೊತ್ತು ಸಾಗುತ್ತಿದ್ದಾರೆ. ಜಾನಪದ ಬದುಕಿನೊಳಗೆ ಬೆಳೆದುಬಂದ ದಲಿತ ಪ್ರತಿಭೆಯೊಂದು ತನ್ನ ಕ್ರಿಯಾಶೀಲ ವ್ಯಕ್ತಿತ್ವದಿಂದ ವಿವಿಧ ಕ್ಷೇತ್ರಗಳನ್ನು ತನ್ನ ವ್ಯಾಪ್ತಿಯೊಳಗೆ ಸೇರಿಸಿಕೊಂಡು ಮುನ್ನಡೆಯುತ್ತಿರುವ ಬಗೆಯು ಜಾನಪದ ಸೊಗಡನ್ನು ಆಧುನಿಕ ಯುಗದಲ್ಲಿ ಜೀವಂತಗೊಳಿಸುವ ವಿಧಾನವಾಗಿ ಕಂಡುಬರುತ್ತದೆ.

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



