ದಿನದ ಸುದ್ದಿ
ಪ್ರಮುಖ ಸುದ್ದಿ ಮುಖ್ಯಾಂಶಗಳು ; ಮಿಸ್ ಮಾಡ್ದೆ ಓದಿ
ಪ್ರಮುಖ ಸುದ್ದಿ ಮುಖ್ಯಾಂಶಗಳು ; ಮಿಸ್ ಮಾಡ್ದೆ ಓದಿ
-
- ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು ಉದ್ದೇಶಿಸಿರುವ ಮಹತ್ವದ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಲಿದ್ದಾರೆ.
- ನೈಸ್ ಕಂಪನಿಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ಸಚಿವ ಸಂಪುಟ ಉಪಸಮಿತಿ ಒಪ್ಪಿಗೆ ನೀಡಿದೆ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಈಗಾಗಲೇ ಅಂತ್ಯಗೊಂಡಿದ್ದು, ರೈತರ ಒತ್ತಾಯದ ಮೇರೆಗೆ ಪುನಃ ನೊಂದಣಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಜಿಲ್ಲೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ರಾಮನಗರದಲ್ಲಿ ತಿಳಿಸಿದ್ದಾರೆ.
- ಭಯೋತ್ಪಾದನೆ ಪಿಡುಗು ಜಾಗತಿಕವಾಗಿ ಹರಡಿದೆ. ಇದನ್ನು ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
- ಅನಧಿಕೃತವಾಗಿ ನೀರು ಮತ್ತು ಒಳಚರಂಡಿ ಸಂಪರ್ಕ ಪಡೆದಿರುವವರು ಖುದ್ದಾಗಿ ಮಾಹಿತಿ ನೀಡಿ, ಅವುಗಳನ್ನು ಸಕ್ರಮ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕಾನೂನು ಅನ್ವಯ ಕ್ರಮ ತೆಗೆದುಕೊಳ್ಳುವುದನ್ನು ಸಾರ್ವಜನಿಕರು ತಪ್ಪಿಸಬಹುದು ಎಂದು ಜಲಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು. ಭಾರತ-ಐರೋಪ್ಯ ಒಕ್ಕೂಟದ ನಡುವೆ ರಾಜಕೀಯ ವಲಯದಲ್ಲಿ ಹಾಗೂ ಉನ್ನತ ಮಟ್ಟದ ವ್ಯಾಪಾರ, ತಂತ್ರಜ್ಞಾನ ಆಯೋಗ ಸ್ಥಾಪನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಒಕ್ಕೂಟ ದೇಶಗಳ ನಾಯಕರು ಮಾತುಕತೆ ನಡೆಸಿದರು. ಹವಾಮಾನ ಬದಲಾವಣೆಯಿಂದಾಗುವ ವೈಪರೀತ್ಯ ಹಾಗೂ ಹಸಿರು ಜಲಜನಕ ಬಳಕೆ ಕುರಿತಂತೆ ದ್ವಿಪಕ್ಷೀಯ ಸಹಕಾರದ ಬಗ್ಗೆಯೂ ಒಕ್ಕೂಟ ದೇಶಗಳ ನಾಯಕರು ಚರ್ಚಿಸಿದರು.
- ಫಿಲಿಫೈನ್ಸ್ನ ಮನಿಲಾದಲ್ಲಿ ಇಂದಿನಿಂದ ಏಷ್ಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಆರಂಭವಾಗಲಿದೆ. ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು, ವಿಶ್ವಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದ ವಿಜೇತ ಲಕ್ಷ್ಯ ಸೇನ್ ಸೇರಿದಂತೆ ಭಾರತೀಯ ಆಟಗಾರರು ತಮ್ಮ ಅಭಿಯಾನ ಆರಂಭಿಸಲಿದ್ದಾರೆ.
- ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜನಜಂಗುಳಿಯ ಸ್ಥಳಗಳಲ್ಲಿ ಹಾಗೂ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಧ್ಯಕ್ಕೆ ಯಾವುದೇ ದಂಡ ವಿಧಿಸುವ ಆಲೋಚನೆ ಮಾಡಿಲ್ಲ. ಈ ಕುರಿತು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
- ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ವರದಿಗಳ ಪ್ರಕಾರ ಈವರೆಗೂ ಲಸಿಕೆ ಪಡೆಯದವರು ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಎಲ್ಲರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ 2 ಡೋಸ್ ಲಸಿಕೆ ಪಡೆದವರು ಮುನ್ನಚ್ಚರಿಕೆ ಡೋಸ್ ಲಸಿಕೆ ಪಡೆಯಬೇಕು ಎಂದು ಅವರು ಹೇಳಿದರು.
- ಚಿಕ್ಕಮಗಳೂರು-ಕೊಡುಗ-ಹಾಸನ-ಶಿವಮೊಗ್ಗ ಪ್ರದೇಶದಲ್ಲಿ ಬಗರ್ ಹುಕುಂ ಸಾಗುವಳಿ ಮೂಲಕ ಕಾಫಿ ಬೆಳೆಯುತ್ತಿರುವ ರೈತರ ಸಮಸ್ಯೆಗಳನ್ನು ಪರಿಹರಿಸಲು ಇದೇ 28 ರಂದು ಚಿಕ್ಕಮಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಸಮಾಲೋಚನೆ ನಡೆಸಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ತಿಳಿಸಿದ್ದಾರೆ.
- ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಒಂದು ತಿಂಗಳ ಉಚಿತ ಬ್ಯೂಟಿಪಾರ್ಲರ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು. ಇದರ ಜತೆಗೆ ವ್ಯಾಪಾರ, ಹವಾಮಾನ ಬದಲಾವಣೆ, ಡಿಜಿಟಲ್ ತಂತ್ರಜ್ಞಾನ ಕುರಿತಂತೆ ಒಕ್ಕೂಟ ದೇಶಗಳ ನಾಯಕರು ಸಮಾಲೋಚನೆ ನಡೆಸಿದರು.
- ಬರುವ ವರ್ಷದ ಚಳಿಗಾಲದ ಅಧಿವೇಶನವನ್ನು ಸಂಸತ್ನ ನೂತನ ಕಟ್ಟಡದಲ್ಲಿ ನಡೆಸಲಾಗುವುದು. ನೂತನ ಆವಿಷ್ಕಾರದ ಜತೆಗೆ ಹೊಸ ಸಂಸತ್ ಭವನವನ್ನು ಲೋಕಾರ್ಪಣೆ ಮಾಡಿ, ಅಲ್ಲಿ ಕಲಾಪ ನಡೆಸಲಾಗುವುದು. ತ್ವರಿತವಾಗಿ ಕಾಮಗಾರಿ ನಡೆಯುತ್ತಿದ್ದು, ನೂತನ ಕಟ್ಟಡ ಬಹುತೇಕ ಪೂರ್ಣವಾಗುವ ನಿರೀಕ್ಷೆ ಇದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243