ಕ್ರೀಡೆ
ಬೆಳಗಿನ ಸುದ್ದಿ ಮುಖ್ಯಾಂಶಗಳು
ಬೆಳಗಿನ ಸುದ್ದಿ ಮುಖ್ಯಾಂಶಗಳು
- ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
- ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
- ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
- ತೈವಾನ್ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
- ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
- ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
- ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243