ದಿನದ ಸುದ್ದಿ

ಪ್ರಮುಖ ಸುದ್ದಿ ಮುಖ್ಯಾಂಶಗಳು

Published

on

ಪ್ರಮುಖ ಸುದ್ದಿ ಮುಖ್ಯಾಂಶಗಳು

 

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು, ಶಿಗ್ಗಾವಿಯಲ್ಲಿ ಮಧ್ಯಾಹ್ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುವರು. ನಂತರ ಬೆಳಗಾವಿಯಲ್ಲಿ ಜಗನ್ನಾಥ ರಾವ್ ಜೋಶಿ ಅವರ ಜನ್ಮ ಶತಾಬ್ಧಿ ಸ್ಮಾರಕ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  2. ಬೆಂಗಳೂರು ನಗರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. 18 ವರ್ಷ ಮೇಲ್ಪಟ್ಟ ಶೇಕಡ 102ರಷ್ಟು ಮಂದಿಗೆ ಮೊದಲ ಡೋಸ್ ಹಾಗೂ ಶೇಕಡ 96ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
  3. ಇಸ್ಕಾನ್‌ನ ಅಕ್ಷಯ ಪಾತ್ರ ಪ್ರತಿಷ್ಠಾನದ ಮುಖ್ಯಸ್ಥ ಮಧುಪಂಡಿತ ದಾಸ್, ದೃಶ್ಯಕಲೆ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಕಲಾವಿದ ಎಸ್.ಜಿ. ವಾಸುದೇವ್, ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಶ್ರಮಿಸುತ್ತಿರುವ ಸಮಾಜ ಸೇವಕ ಎನ್.ಎಸ್. ಮುತ್ತುರಾಜ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
  4. 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಮಧ್ಯೆಯೇ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ನೇಮಕಾತಿ ಮಂಡಳಿಯ ಹೊಸ ಜವಾಬ್ದಾರಿ ನೀಡಲಾಗಿದೆ.
  5. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಅವರು ಕರ್ಬಿ ಅಂಗ್ಲಾಂಗ್ ಜಿಲ್ಲೆಯ ದಿಫುನಲ್ಲಿ ಬೆಳಗ್ಗೆ 11 ಗಂಟೆಗೆ ’ಶಾಂತಿ, ಏಕತೆ ಮತ್ತು ಅಭಿವೃದಿ’ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಭಾಗದಲ್ಲಿ ಶಾಂತಿ ಉಪಕ್ರಮಗಳಿಗೆ ಪ್ರಮುಖ ಉತ್ತೇಜನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಶೈಕ್ಷಣಿಕ ವಲಯದ 500 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  6. ಜಮ್ಮು-ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಚೆನಾಬ್ ನದಿ ತೀರದಲ್ಲಿ 4 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ 540 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ಯೋಜನೆಯಡಿ 1ಸಾವಿರದ 975 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಿದ್ದು, 54ತಿಂಗಳಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version