ದಿನದ ಸುದ್ದಿ
ಧೂಮಪಾನ ರಹಿತ ದಿನ : ಭಾರತವನ್ನು ಶೇ. 100ರಷ್ಟು ಧೂಮಪಾನ ಮುಕ್ತಗೊಳಿಸಲು ಕೋಟ್ಪಾ ಕಾಯ್ದೆ ತಿದ್ದುಪಡಿಗೆ ವೈದ್ಯರು, ಕ್ಯಾನ್ಸರ್ ಪೀಡಿತರ ಬೆಂಬಲ
ಸುದ್ದಿದಿನ,ಬೆಂಗಳೂರು : ಪ್ರತಿವರ್ಷ ಮಾರ್ಚ್ ಎರಡನೇ ಬುಧವಾರದಂದು ಆಚರಿಸಲಾಗುವ ಧೂಮಪಾನ ರಹಿತ ದಿನದ ಹಿನ್ನೆಲೆಯಲ್ಲಿ ಜನರನ್ನು ಪರೋಕ್ಷ ಧೂಮಪಾನದಿಂದ ರಕ್ಷಿಸಲು ಹೋಟೆಲ್, ರೆಸ್ಟೋರೆಂಟ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿರ್ದಿಷ್ಟ ಧೂಮಪಾನ ಪ್ರದೇಶಗಳನ್ನು ತೆಗೆದುಹಾಕುವಂತೆ ವೈದ್ಯರು, ಕ್ಯಾನ್ಸರ್ ಪೀಡಿತರು ಮತ್ತು ಹೋಟೆಲ್ ಮಾಲೀಕರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ ಕೋಟ್ಪಾ (COTPA) 2003ಕ್ಕೆ ತಿದ್ದುಪಡಿ ಪ್ರಕ್ರಿಯೆ ಆರಂಭಿಸಿರುವ ಭಾರತ ಸರ್ಕಾರವನ್ನು ಅಭಿನಂದಿಸಿದ ಅವರು, ಭಾರತವನ್ನು ಶೇ. 100ರಷ್ಟು ಧೂಮಪಾನ ಮುಕ್ತಗೊಳಿಸಲು ಮತ್ತು ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ನಿರ್ದಿಷ್ಟ ಧೂಮಪಾನ ಪ್ರದೇಶಗಳಿಗೆ ಅನುಮತಿ ನೀಡುವ ಕಾನೂನನ್ನು ಕೂಡಲೇ ತೆಗೆದುಹಾಕಬೇಕೆಂದು ಮನವಿ ಮಾಡಿದ್ದಾರೆ.
“ಧೂಮಪಾನ ಕೋವಿಡ್ ಸೋಂಕಿಗೆ ದಾರಿ ಮಾಡಿಕೊಡಬಹುದು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಧೂಮಪಾನ ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಹದಗೆಡಿಸಿ, ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ಕೋವಿಡ್ ಸೋಂಕಿಗೆ ತುತ್ತಾಗುವ ಧೂಮಪಾನಿಗಳು ಹೆಚ್ಚಿನ ತೊಂದರೆ ಅನುಭವಿಸುವುದಲ್ಲದೆ ಮೃತಪಡುವ ಸಾಧ್ಯತೆ ಹೆಚ್ಚಿರುತ್ತದೆ.
ಸಂಪೂರ್ಣ ಧೂಮಪಾನ ಹೊಗೆ ಮುಕ್ತ ವಾತಾವರಣ ಕಲ್ಪಿಸಲು ಹೋಟೆಲ್, ರೆಸ್ಟೋರೆಂಟ್ಗಳು ಮಾತ್ರವಲ್ಲದೆ ವಿಮಾನ ನಿಲ್ದಾಣಗಳಲ್ಲಿಯೂ ಎಲ್ಲ ನಿರ್ದಿಷ್ಟ ಧೂಮಪಾನ ಪ್ರದೇಶಗಳನ್ನು ತೆಗೆದು ಹಾಕಬೇಕು. ಬಹುತೇಕ ನಿರ್ದಿಷ್ಟ ಧೂಮಪಾನ ಪ್ರದೇಶಗಳು ಕೋಟ್ಪಾ ನಿಯಮಗಳನ್ವಯ ತೆರೆದಿರುವುದಿಲ್ಲ ಮತ್ತು ಸಾರ್ವಜನಿಕರನ್ನು ಧೂಮಪಾನ ಹೊಗೆಗೆ ಒಡ್ಡಿಕೊಳ್ಳುವಂತೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ದೂಡುತ್ತಿವೆ,” ಎಂದು ಪ್ರಸಿದ್ಧ ಕ್ಯಾನ್ಸರ್ ತಜ್ಞರಾದ ಡಾ. ರಮೇಶ್ ಬಿಳಿಮಗ್ಗ ಹೇಳಿದ್ದಾರೆ.
ಇದನ್ನೂ ಓದಿ | ಬ್ಯಾಂಕ್ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ 2 ದಿನದ ಬ್ಯಾಂಕ್ ಮುಷ್ಕರ
ಭಾರತದಲ್ಲಿ ಕೋಟ್ಪಾ 2003ರ ಅನ್ವಯ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸಲಾಗಿದೆ. ಈ ಕಾಯ್ದೆಯ ನಾಲ್ಕನೇ ಸೆಕ್ಷನ್ ಸಾರ್ವಜನಿಕರಿಗೆ ಪ್ರವೇಶವಿರುವ ಯಾವುದೇ ಸ್ಥಳದಲ್ಲಿ ಧೂಮಪಾನವನ್ನು ನಿಷೇಧಿಸುತ್ತದೆ. ಆದರೆ, ರೆಸ್ಟೋರೆಂಟ್, ಹೋಟೆಲ್, ವಿಮಾನ ನಿಲ್ದಾಣ ಮುಂತಾದ ಸಾರ್ವಜನಿಕ ಸ್ಥಳಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಧೂಮಪಾನ ಮಾಡಲು ಕೋಟ್ಪಾ 2003 ಅವಕಾಶ ಒದಗಿಸುತ್ತದೆ.
“ಧೂಮಪಾನ ಮಾಡದ ಸಾವಿರಾರು ಜನ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ರೆಸ್ಟೋರೆಂಟ್, ಪಬ್ ಮತ್ತು ಕ್ಲಬ್ಗಳಲ್ಲಿ ಪರೋಕ್ಷ ಧೂಮಪಾನಕ್ಕೆ ಒಡ್ಡಿಕೊಂಡು ತಮ್ಮ ಪ್ರಾಣವನ್ನು ಪಣಕ್ಕಿಡುತ್ತಿದ್ದಾರೆ. ಸಿಗರೇಟ್ ಹೊಗೆ ಧೂಮಪಾನ ಪ್ರದೇಶಗಳಿಂದ ಇತರೆ ಪ್ರದೇಶಗಳಿಗೆ ಹಬ್ಬುವುದರಿಂದ, ಯಾವುದೇ ಆವರಣದಲ್ಲಿ ಧೂಮಪಾನಕ್ಕೆ ಅನುಮತಿ ನೀಡದಂತೆ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ಸ್ಥಳಗಳು ಸಂಪೂರ್ಣ ಧೂಮಪಾನ ಮುಕ್ತವಾಗಿರಬೇಕು”, ಎಂದು ಪರೋಕ್ಷ ಧೂಮಪಾನದ ಸಂತ್ರಸ್ತೆ ಮತ್ತು ಆರೋಗ್ಯ ಕಾರ್ಯಕರ್ತೆ ನಳಿನಿ ಸತ್ಯನಾರಾಯಣ್ ಮನವಿ ಮಾಡುತ್ತಾರೆ.
ಪರೋಕ್ಷ ಧೂಮಪಾನ ನೇರ ಧೂಮಪಾನದಷ್ಟೇ ಹಾನಿಕಾರಕವಾಗಿದೆ. ಪರೋಕ್ಷ ಧೂಮಪಾನಕ್ಕೆ ಒಡ್ಡಿಕೊಳ್ಳುವುದರಿಂದ ವಯಸ್ಕರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮತ್ತು ಹೃದ್ರೋಗ ಸಮಸ್ಯೆ ಉಂಟಾದರೆ ಮಕ್ಕಳಲ್ಲಿ ಶ್ವಾಸಕೋಶದ ದುರ್ಬಲತೆ ಮತ್ತು ಉಸಿರಾಟ ಸಂಬಂಧಿ ಸೋಂಕು ಸೇರಿದಂತೆ ಅನೇಕ ಖಾಯಿಲೆಗಳು ಉಂಟಾಗುತ್ತವೆ. ದುರ್ಬಲ ಉಸಿರಾಟ ಮತ್ತು ಹೃದಯ ರಕ್ತನಾಳದ ಸಮಸ್ಯೆ ಇರುವವರಿಗೆ ಕೋವಿಡ್-19 ಹೆಚ್ಚು ಬಾಧಿಸುವುದಲ್ಲದೆ ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ. ನಿರ್ದಿಷ್ಟ ಧೂಮಪಾನ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಪಾಲಿಸಲು ಮತ್ತು ಮಾಸ್ಕ್ ಧರಿಸಲು ಸಾಧ್ಯವಿಲ್ಲದ ಕಾರಣ ಹಾಗು ಧೂಮಪಾನಿಗಳು ಹೊಗೆ ತುಂಬಿದ ವಾತಾವರಣದಲ್ಲಿ ಸಿಲುಕುವುದರಿಂದ, ನಿರ್ದಿಷ್ಟ ಧೂಮಪಾನ ಪ್ರದೇಶಗಳು ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಹೆಚ್ಚಿಸುತ್ತವೆ.
“ನಮ್ಮ ರೆಸ್ಟೋರೆಂಟನ್ನು ಶೇ. 100ರಷ್ಟು ಧೂಮಪಾನ ಮುಕ್ತವನ್ನಾಗಿ ಮಾಡಿರುವುದರಿಂದ ಗ್ರಾಹಕರು ಮತ್ತು ಸಿಬ್ಬಂದಿಯ ಆರೋಗ್ಯ ವೃದ್ಧಿಸುತ್ತಿದೆಯಲ್ಲದೆ ವ್ಯಾಪಾರವನ್ನೂ ಹೆಚ್ಚಿಸಿದೆ. ಕುಟುಂಬ ಸಮೇತ ಬರುವ ಗ್ರಾಹಕರು ಧೂಮಪಾನಕ್ಕೆ ಅನುಮತಿ ನೀಡದ ಸ್ಥಳಗಳಲ್ಲಿ ಊಟ ಮಾಡಲು ಬಯಸುತ್ತಾರೆ. ತಂಬಾಕು ಹೊಗೆಗೆ ಒಡ್ಡಿಕೊಂಡಾಗ ಮಕ್ಕಳು, ಮಹಿಳೆಯರು ಮತ್ತು ಹಿರಿಯರು ಕಸಿವಿಸಿಗೊಳ್ಳುತ್ತಾರೆ.
ಧೂಮಪಾನ ಪ್ರದೇಶವನ್ನು ತೆರವುಗೊಳಿಸಿದ ನಂತರ ನಾವು ಹೆಚ್ಚು ಸಂತುಷ್ಟ ಗ್ರಾಹಕರನ್ನು ಪಡೆದಿದ್ದು, ಜಾಗದ ಆರೋಗ್ಯಕರ ಬಳಕೆಯೂ ಸಾಧ್ಯವಾಗಿದೆ,” ಎಂದು ಬೆಂಗಳೂರಿನ ಕಾರಾ ರೆಸ್ಟೋರೆಂಟ್ ಮಾಲೀಕರಾದ ಶ್ರೀಮತಿ. ರಾಧ ನಾಯರ್ ಹೇಳುತ್ತಾರೆ. ಹೆಚ್ಚುತ್ತಿರುವ ವಹಿವಾಟಿನಿಂದ ಸ್ಪೂರ್ತಿ ಪಡೆದಿರುವ ಅವರು, ತಮ್ಮ ವ್ಯವಹಾರವನ್ನು ಹೆಚ್ಚಿಸಿಕೊಳ್ಳಲು ಇತರೆ ಕೆಫೆ ಮತ್ತು ರೆಸ್ಟೋರೆಂಟ್ಗಳು ಕೂಡ ಶೇ. 100ರಷ್ಟು ಧೂಮಪಾನ ಮುಕ್ತ ಪ್ರದೇಶಗಳಾಗಬೇಕು ಎಂದು ಒತ್ತಾಯಿಸುತ್ತಾರೆ.
ಕೋಟ್ಪಾ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ಆರಂಭಿಸಿರುವ ಭಾರತ ಸರ್ಕಾರ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಪೂರೈಕೆ ಮತ್ತು ವಿತರಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ, 2020 ಅನ್ನು ಪರಿಚಯಿಸಿದೆ.
ಭಾರತದಲ್ಲಿ ನಡೆಸಿದ ಇತ್ತೀಚಿನ ಸಮೀಕ್ಷೆಯೊಂದು ಶೇ. 72ರಷ್ಟು ಜನ ಪರೋಕ್ಷ ಧೂಮಪಾನ ಗಂಭೀರ ಆರೋಗ್ಯ ಸಮಸ್ಯೆ ಎಂದು ಭಾವಿಸಿದ್ದಾರೆ ಮತ್ತು ಶೇ. 88ರಷ್ಟು ಜನ ಈ ಪಿಡುಗನ್ನು ನಿವಾರಿಸಲು ಪ್ರಸ್ತುತ ಜಾರಿಯಲ್ಲಿರುವ ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಪ್ರಬಲವಾಗಿ ಬೆಂಬಲಿಸುತ್ತಾರೆ ಎಂದು ಬಹಿರಂಗಗೊಳಿಸಿತ್ತು.
“ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ 2003ಕ್ಕೆ ತಿದ್ದುಪಡಿ ಪ್ರಕ್ರಿಯೆ ಆರಂಭಿಸಿರುವ ಭಾರತ ಸರ್ಕಾರವನ್ನು ನಾವು ಶ್ಲಾಘಿಸುತ್ತೇವೆ. ಇದು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ಪ್ರಮುಖ ಹೆಜ್ಜೆಯಾಗಿದೆ. ಬೇಜವಾಬ್ದಾರಿಯುತ ಧೂಮಪಾನಿಗಳು ಸುತ್ತಮುತ್ತಲಿನ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಕಾರಣ ಭಾರತವನ್ನು ಶೇ. 100ರಷ್ಟು ಧೂಮಪಾನ ಮುಕ್ತವಾಗಿಸುವ ನಿಟ್ಟಿನಲ್ಲಿ ಕಾನೂನುಗಳನ್ನು ಬಲಪಡಿಸುವ ತುರ್ತು ಅಗತ್ಯವಿದೆ.
ಧೂಮಪಾನಿಗಳಲ್ಲದವರು ಕೂಡ ಇದನ್ನು ಪ್ರತಿಭಟಿಸುವಲ್ಲಿಉದಾಸೀನ ತೋರುತ್ತಿದ್ದು, ಜವಾಬ್ದಾರಿಯುತ ಜನಪ್ರತಿನಿಧಿಗಳು ತಂಬಾಕು ಸಂಬಂಧಿತ ಖಾಯಿಲೆ ಮತ್ತು ಸಾವಿನಿಂದ ಜನರನ್ನು ರಕ್ಷಿಸಲು ಕಾನೂನನ್ನು ಕಠಿಣವಾಗಿ ಜಾರಿಗೆ ತರಲು ಅಷ್ಟೇನೂ ಕಾಳಜಿ ವಹಿಸುತ್ತಿಲ್ಲ,” ಎಂದು ಶ್ರೀ ಎಸ್ ಜೆ ಚಂದರ್, ಸಂಚಾಲಕರು, ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕ, ತಿಳಿಸಿದರು.
ತಂಬಾಕು ಬಳಕೆ ಜಾಗತಿಕವಾಗಿ ರೋಗ ಮತ್ತು ಅಕಾಲಿಕ ಮರಣಗಳಿಗೆ ಪ್ರಮುಖ ಹಾಗು ತಡೆಗಟ್ಟಬಹುದಾದ ಕಾರಣವಾಗಿದ್ದು, ಭಾರತದಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ. ಸಮಾಜದ ಎಲ್ಲ ಸ್ತರಗಳಿಗೆ ಸೇರಿದ 26 ಕೋಟಿಗೂ ಹೆಚ್ಚು ತಂಬಾಕು ಬಳಕೆದಾರರು ಭಾರತದಲ್ಲಿದ್ದಾರೆ.
ತಂಬಾಕು ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಪ್ರತಿವರ್ಷ 1,82,000 ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಇದು ಭಾರತದ ಜಿಡಿಪಿಯ ಶೇಕಡಾ 1.8% ರಷ್ಟಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ, ತಂಬಾಕಿನ ಎಲ್ಲ ರೀತಿಯ ಬಳಕೆಗೂ, ಅದು ಧೂಮಪಾನವಾಗಲಿ ಅಥವ ಜಗಿಯುವುದಾಗಲಿ, ಕೋವಿಡ್ ಸಂಬಂಧಿ ಸಾವು-ನೋವುಗಳಿಗೂ ಗಮನಾರ್ಹ ನಂಟಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243