Connect with us

ಭಾವ ಭೈರಾಗಿ

ಯುದ್ಧ ಬೇಕಾ ಯುದ್ದ ?

Published

on

Photo courtesy : cartoon movement

ಈಗ ಎಲ್ಲೆಲ್ಲೂ ಯುದ್ಧದ ಕುರಿತೇ ಮಾತು. ನಮ್ಮ ಸಾಮಾಜಿಕ ಜಾಲತಾಣಗಳಂತೂ ಈಗ ಶುದ್ಧ ಕಸದ ತೊಟ್ಟಿಗಳಾಗಿವೆ. ಫೇಸ್‍ಬುಕ್ಕು ವಾಟ್ಸಾಪ್‍ಗಳು ನಮಗೆ ಬೇಕಿರುವುದು, ಬೇಡದಿರುವುದು, ನಮ್ಮ ಕೋಪ, ಅಸಹನೆ, ತಂತ್ರ, ಕುತಂತ್ರಗಳನ್ನು ಭಿತ್ತುವ ಮಹಾ ವೇಧಿಕೆಗಳಾಗಿವೆ. ಇನ್ನೂ ದುರಂತವೆಂದರೆ ಯುದ್ಧವನ್ನು ಬಯಸುತ್ತೇವೋ ಇಲ್ಲವೊ ಎಂಬುದು ನಮ್ಮ ದೇಶ ಭಕ್ತಿಯನ್ನಳೆಯುವ ಅಳತೆಗೋಲಾಗಿಬಿಟ್ಟಿದೆ. ಯುದ್ಧ ಬೇಕು ಪಾಕಿಸ್ತಾನದ ರಕ್ತ ಕುಡಿಯಬೇಕು ಎನ್ನುವವರನ್ನು ದೇಶಭಕ್ತರೆಂದೂ, ಯುದ್ಧ ಬೇಡ ಎಂದವರನ್ನು ದೇಶ ದ್ರೋಹಿಗಳೆಂದೂ ಪರಿಗಣಿಸುವ ಅಪಾಯಕಾರಿ ಬೆಳವಣಿಗೆಗಳಾಗುತ್ತಿವೆ, ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವ ಮಾತನಾಡಿದವರನ್ನು ಪಾಕಿಸ್ತಾನಕ್ಕೆ ಕಳಿಸಬೇಕೆಂದೂ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ.

ಹಿಂದುಸ್ಥಾನ್ ಜಿಂದಾಬಾದ್ ಎನ್ನುವುದಕ್ಕಿಂತಲೂ ಮುರ್ದಾಬಾದ್ ಎನ್ನುವುದೇ ನಮ್ಮ ದೇಶಭಕ್ತಿಯ ಸರ್ಟಿಫಿಕೇಟ್ ಆದಂತಿದೆ. ಖಂಡಿತವಾಗಿಯೂ ಇದೊಂದು ಸಮೂಹ ಸನ್ನಿಯಲ್ಲದೇ ಮತ್ತೇನು? ದೇಶಭಕ್ತಿ, ದೇಶಾಭಿಮಾನ ಎಂಬ ಪ್ಲೇ ಕಾರ್ಡ್ ಹಿಡಿದವರಿಗಂತೂ ತಾವು ಹೇಳಿದ್ದೇ ಸತ್ಯ ಎಂಬ ಅದಾವುದೋ ಭಾವ ನೆತ್ತಿಗೇರಿದೆ. ಅವರಿಗೆ ಸಂಯಮ ತಂದುಕೊಳ್ಳುವಂತೆ ಹೇಳಹೊರಟರೆ ಅಂಥವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಮೊದಲೇಹೇಳಿಬಿಡುತ್ತೇನೆ ನಾನಿದನ್ನು ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಗಳನ್ನಾಗಲೀ ಅಥವಾ ಎಡ,ಬಲ ಪಂಥಗಳನ್ನಾಗಲೀ ಮನಸಿನಲ್ಲಿಟ್ಟುಕೊಂಡು ಬರೆದಿಲ್ಲ. ಕೇವಲ ಯುದ್ಧದ ಕುರಿತು ಮಾತ್ರ ಮಾತನಾಡುತ್ತಿದ್ದೇನೆ.

ಸ್ವಲ್ಪ ಯೋಚಿಸಿ ನೋಡಿ. ಯುದ್ಧ ಯಾರಿಗೆ ಬೇಕು? ಯುದ್ಧದಿಂದ ನಾವು ಪಡೆದುಕೊಳ್ಳುವುದೇನಿದೆ? ಖಂಡಿತ ಏನೂ ಇಲ್ಲ ಆದರೆ ನಾವು ಕಳೆದುಕೊಳ್ಳುತ್ತೇವೆ, ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾವಿರಾರು ಸೈನಿಕರನ್ನು ನಾವು ಕಳೆದುಕೊಳ್ಳುತ್ತೇವೆ. ನಮ್ಮ ನಮ್ಮ ಮಾನಸಿಕ ಗೀಳುಗಳಿಗಾಗಿ ನಮ್ಮ ಹೆಮ್ಮೆಯ ಸೈನಿಕರನ್ನು ಬಲಿಕೊಡಲು ಯಾಕೋ ಮನಸ್ಸು ಒಪ್ಪುತ್ತಿಲ್ಲ‌ . ಹಿಂದಿನ ಯುದ್ಧಗಳ ಇತಿಹಾಸವನ್ನೊಮ್ಮೆ ನೆನಪಿಸಿಕೊಳ್ಳಿ ಯಾವ ಯುದ್ಧಗಳೂ ಸೈನಿಕರ ಸಾವಿಲ್ಲದೇ ಮುಕ್ತಾಯವಾಗಿಲ್ಲ. ಯಾವ ಯುದ್ಧದಿಂದಲೂ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಅದು 1962 ಭಾರತ ಆಗತಾನೆ ಗಟ್ಟಿಗೊಳ್ಳುತ್ತಿದ್ದ ಸಮಯ, ನೆರೆಯ ಚೀನಾದಂತ ಚೀನಾ ಮೇಲೆ ಯುದ್ಧ ಮಾಡಬೇಕಾಯ್ತು ಆ ಇಂಡೋ ಚೀನಾ ಯುದ್ಧದಲ್ಲಿ ನಾವು ಹಸಿಹಸಿ ಕನಸೊತ್ತ 1385 ಸೈನಿಕರನ್ನು ಕಳೆದುಕೊಳ್ಳಬೇಕಾಯ್ತು. ಮತ್ತೆ 1965ರಲ್ಲಿ ಪಾಕಿಸ್ತಾನ ನಮ್ಮ ವಿರುದ್ಧ ಕಾಲ್ಕೆರೆಯಿತು, ಆಗ ನಡೆದ ಯುದ್ಧದಲ್ಲಿ 3000 ಕುಟುಂಬಗಳು ತಮ್ಮ ಆಧಾರ ಸ್ಥಂಬಗಳನ್ನು ಕಳೆದುಕೊಂಡು ಕಂಗಾಲಾಗಬೇಕಾಯ್ತು. ಪಾಕಿಸ್ತಾನದ ಸೊಂಟ ಮುರಿದು ಇಬ್ಬಾಗ ಮಾಡಿದ ಸಮಯ 1971.

ಅದು ಸುಲಭಕ್ಕೆ ನಡೆದ ಕೆಲಸವಲ್ಲ, ನಾನು ಮತ್ತೆ ಯುಗಾದಿಗೆ ಬರ್ತೇನೆ, ಮುಂದಿನಬಾರಿ ಅಮ್ಮನಿಗೆ ಸೀರೆ ತರ್ತೇನೆ, ಇನ್ನೇನು ಎರಡೇ ತಿಂಗಳ ಡ್ಯೂಟಿ ಮುಗಿಸಿ ಊರಿಗೆ ಬಂದು ಅಮ್ಮನ ಸೇವೆ ಮಾಡಿಕೊಂಡಿರ್ತೇನೆ, ಹೀಗೆ ಎದೆಷ್ಟೋ ಭರವಸೆಯ ಮಾತುಗಳನ್ನು ಕುಟುಂಭದವರಿಗೆ ನೀಡಿ ಬಂದಿದ್ದ 3843ಜನ ಸೈನಿಕರು ನೋಡನೋಡುತ್ತಿದ್ದಂತೆಯೇ ಶತೃಗಳ ಗುಂಡಿಗೆ ಎದೆಕೊಡಬೇಕಾಯ್ತು. ಇನ್ನು 1999ರ ಕಾರ್ಗಿಲ್ ಕದನ. ಹಿಂದಿನ ದಿನವಷ್ಟೇ ಅಮ್ಮನಿಗೆ ಪತ್ರಬರೆದವರು, ಎರಡು ತಿಂಗಳ ಹಿಂದಷ್ಟೇ ಮದುವೆಯಾದವರ, ಇನ್ನೂ ನೋಡಿರದ ತನ್ನ ಕಂದಮ್ಮನ ಸುತ್ತ ಕನಸು ಹೆಣೆದವರೂ ಸೇರಿ ಸತ್ತ ಸೈನಿಕರ ಸಂಖ್ಯೆ 528. ಇಂದೋ ನಾಳೆಯೋ ಯುದ್ಧವಾದರೆ ಮತ್ತೆ ನಾವು ಕಳೆದುಕೊಳ್ಳುವ ಸಂಖ್ಯೆ ದೊಡ್ಡದಾಗುತ್ತದೆಯೇ ಹೊರತು ಚಿಕ್ಕದಾಗುವುದಿಲ್ಲ.

ನೆನಪಿರಲಿ ಗೆಳೆಯರೇ ಈಗ ಯುದ್ಧವಾದರೆ ಸಾಯುವವರು ದೇಶ ಕಾಯುವ ಸೈನಿಕರೇ ಹೊರತು, ಫೇಸ್ ಬುಕ್ಕಿನಲ್ಲಿ ಪೋಸ್ಟ್ ಹಾಕುವ ನಾವು ನೀವಲ್ಲ, ಒಂದು ಹನಿರಕ್ತಕ್ಕೆ ಹತ್ತು ಹೆಣ ಕೆಡವುತ್ತೇನೆಂದು ಪ್ರತಿಜ್ಞೆ ಮಾಡುವ ರಾಜಕಾರಣಿಗಳೂ ಅಲ್ಲ. ಗೊತ್ತಿರಲಿ ಯುದ್ಧದ ನಂತರ ನಾವು ಮತ್ತೆ ಫೇಸ್ ಬುಕ್ಕಿನಲ್ಲಿ ಸತ್ತವರ ಲೆಕ್ಕ ಹೇಳುತ್ತೇವೆ, ಅವರಿಗೆ ಶ್ರದ್ಧಾಂಜಲಿ ಕೋರಿ ಪೋಸ್ಟ್ ಹಾಕುತ್ತೇವೆ ಮತ್ತು ನಮ್ಮ ಜನನಾಯಕರು ಅವರ ಸಾವಿನ ಸೇಡುತೀರಿಸಿಕೊಳ್ಲಲು ಮತ್ತೊಂದು ಅವಕಾಶ ಕೊಡಿ ಎಂದು ಓಟು ಕೇಳಲು ಬರುತ್ತಾರೆ. ಯುದ್ಧದ ಕುರಿತಂತೆ ರೂಸ್ ವೆಲ್ಟ್ ಹೇಳಿದ ಮಾತೊಂದು ಈಗ ನೆನಪಾಗುತ್ತಿದೆ . “ಯುದ್ದವೆಂದರೆ ಯುವಕರು ಸಾಯುವುದು ಮತ್ತು ಹಿರಿಯರು ಭಾಷಣಮಾಡುವುದೆ ಹೊರತು ಮತ್ತೇನು ಅಲ್ಲ.”

ನಾನೊಬ್ಬ ಪತ್ರಕರ್ತನಾಗಿ ಸಾಕಷ್ಟುಜನ ಸೈನಿಕರನ್ನೂ, ಮತ್ತು ಸೈನಿಕರ ಕುಟುಂಬಗಳನ್ನೂ ಹತ್ತಿರದಿಂದ ಬಲ್ಲೆ, ಅವರಲ್ಲಿ ರಕ್ತದಾಹಿಗಳಿಲ್ಲ, ಸಾವಿಗಾಗಿ ಹಪಹಪಿಸಿದವರಿಲ್ಲ, ಕೊಂದು ಸೇಡುತೀರಿಸಿಕೊಳ್ಳಿ ಎಂದು ಯಾರೂ ಕೇಳಲಿಲ್ಲ. ಹಾಗಾದರೆ ಪಾಕಿಸ್ತಾನವನ್ನು ಸುಮ್ಮನೇ ಬಿಡಬೇಕಾ? ಖಂಡಿತಾ ಇಲ್ಲ. ಪಾಕಿಸ್ತಾನವಷ್ಟೇ ಅಲ್ಲ ಜಗತ್ತಿನ ಯಾವುದೇ ರಾಷ್ಟ್ರವಾಗಿರಲಿ ಭಾರತದ ಆತ್ಮಗೌರವವನ್ನು ಕೆಣಕಿದರೆ ಸುಮ್ಮನೇ ಬಿಡಬೇಕಿಲ್ಲ, ಮತ್ತು ನಾವು ಹಾಗೆ ಕೆಣಕಿದವರನ್ನು ಸುಮ್ಮನೇ ಬಿಟ್ಟ ಉದಾಹರಣೆಗಳೂ ಇಲ್ಲ. ಆದರೆ ನೆನಪಿರಲಿ ಈಗ ನಾವು ಕಾದಾಡಬೇಕಿರುವುದು ಪಾಕಿಸ್ತಾನದ ವಿರುದ್ಧವಲ್ಲ ಬದಲಾಗಿ ಭಯೋತ್ಪಾದನೆಯ ವಿರುದ್ಧ. ಪುಲ್ವಾಮಾದಲ್ಲಿ ಸೈನಿಕರ ರಕ್ತಹರಿಸಿದವರು ಭಯೋತ್ಪಾದಕರೇ ಹೊರತು ಪಾಕಿಸ್ತಾನದ ಸೈನಿಕರಲ್ಲ, ನಿಮಗೆ ಗೊತ್ತಿರಲಿ, ಪುಲ್ವಾಮಾ ಘಟನೆಯನ್ನು ಭಾರತದಂತೆಯೇ ಪಾಕಿಸ್ತಾನವೂ ಕೂಡ ಸಂಸತ್ ನಲ್ಲಿ ಖಂಡಿಸಿದೆ.

ಹಾಗಂತ ನಾವು ಪಾಕಿಸ್ತಾನವನ್ನು ಅಪ್ಪಿ ಮುದ್ದಾಡಬೇಕಿಲ್ಲ. ನಮ್ಮ ತಂಟೆಗೆ ಬಂದಾಗ ಕೈಕಟ್ಟಿ ಕೂರಬೇಕಿಲ್ಲ. ಬದಲಿಗೆಅದರ ರಕ್ತಕುಡಿಯಲು ಹಾತೊರೆಯುವುದರಲ್ಲೂ ಅರ್ಥವಿಲ್ಲ. ಹಾಗಾದರೆ ಮಾಡಬೇಕಿರುವುದೇನು? ದೇಶದ ಮೂಲೆ ಮೂಲೆಯಲ್ಲಡಗಿರುವ ಭಯೋತ್ಪಾದಕರನ್ನು ಮಟ್ಟಹಾಕವುದು ನಮ್ಮ ಗುರಿಯಾಗಬೇಕು. ಆನಿಟ್ಟಿನಲ್ಲಿ ನಾವು ನಮ್ಮ ಸರ್ಕಾರಗಳಿಗೆ ಒತ್ತಡಹೇರಬೇಕೇ ವಿನಃ ಯುದ್ಧ ಮಾಡಲಲ್ಲ. ಭಾರತ ಶಾಂತಿಪ್ರಿಯ ರಾಷ್ಟ್ರ. ಈ ದೇಶಕ್ಕೆ ತನ್ನದೇ ಆದ ಇತಿಹಾಸವಿದೆ, ಭಾರತ ಯಾರ ಮೇಲೂ ಕಾಲ್ಕೆರೆದು ಯುದ್ಧ ಮಾಡಿದ ಉದಾಹರಣೆಗಳಿಲ್ಲ, ಯಾವುದೋ ಉನ್ಮಾದದಲ್ಲಿ ಭಾರತ ಯುದ್ಧ ಘೋಷಣೆ ಮಾಡುವುದಿಲ್ಲ. ನಾವು ಗಾಂಧಿಯನ್ನು ನೆನಪಿಟ್ಟುಕೊಂಡಿದ್ದೇವೋ ಇಲ್ಲವೋ ಗೊತ್ತಿಲ್ಲ ಆದರೆ ಅಂತ ಗಾಂಧಿಯಂತ ಗಾಂಧಿ ಹುಟ್ಟಿದ ನೆಲದವರು ನಾವು. ನಮ್ಮ ರಾಷ್ಟ್ರಧ್ವಜದ ಬಿಳಿಯ ಬಣ್ಣ ಶಾಂತಿ ಸಂಕೇತ ಎಂದು ನಾವು ಹೇಳಿಕೊಳ್ಳುತ್ತೇವೆ ಆದರೆ ಈಗ ನಾವು ನಡೆದುಕೊಳ್ಳುತ್ತಿರುವ ರೀತಿ ಯಾವುದು? ತಾನಾಗೆ ಬಂದ ಯಾರನ್ನೂ ಸುಮ್ಮನೇ ಉಳಿಸಿದ ಉದಾಹರಣೆಗಳೂ ಇತಿಹಾಸದ ಯಾವ ಮೂಲೆಯಲ್ಲೂ ಸಿಗುವುದಿಲ್ಲ. ನಮ್ಮ ಸೈನಿಕರಿರುವುದು ಕಾಯುವುದಕ್ಕೇ ಹೊರತು ಯಾರನ್ನೋ ಕೊಲ್ಲುವುದಕ್ಕಲ್ಲ. ರಕ್ಷಿಸುವ ಕೈಗಳನ್ನು ರಕ್ತ ಕುಡಿಯುವಂತೆ ಒತ್ತಾಯಿಸಬೇಕಿಲ್ಲ. ಕೊನೆಯದಾಗಿ ಯುದ್ಧದ ಕುರಿತು ಧೀರ ಯೋಧ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಕೆ. ಉನ್ನಿಕೃಷ್ಣನ್ ಹೇಳಿರುವ ಮಾತುಗಳನ್ನು ಯಥಾವತ್ತಾಗಿ ಹೇಳುತ್ತೇನೆ ಕೇಳಿ,

ನಾವೀಗ ಒಂದು ಸುಧೀರ್ಘದಾರಿಯ ದೊಡ್ಡ ತಿರುವಿನಲ್ಲಿದ್ದೇವೆ. ನಾವು ಪಾಕಿಸ್ತಾನದೊಂದಿಗೆ ಗುದ್ದಾಟದಲ್ಲಿಲ್ಲ, ಭಯೋತ್ಪಾದಕರೊಂದಿಗಿನ ಗುದ್ದಾಟದಲ್ಲಿದ್ದೇವೆ ಎಂದು ಹಲವರು ಹೇಳುತ್ತಾರೆ ಅದೇನೇ ಇರಲಿ, ದೇಶದಲ್ಲಿ ಏನಾಗುತ್ತಿದೆ ಎಂದು ನಾನು ಸುಮ್ಮನೇ ಗಮನಿಸುತ್ತಿದ್ದೇನೆ. ಈಗಾಗುತ್ತಿರುವ ಬೆಳವಣಿಗೆಗಳಿಂದ ಪಾಕಿಸ್ತಾನ ಏನನ್ನೂ ಕಳೆದುಕೊಳ್ಲುತ್ತಿಲ್ಲ, ಅವರು ಕಳೆದುಕೊಳ್ಳುತ್ತಿರುವುದು ಸಾಯಲು ಸಿದ್ದವಾಗಿರುವ ಭಯೋತ್ಪಾದಕರನ್ನು ಮಾತ್ರ. ಆದರೆ ನಾವು? ನಾವು ನಮ್ಮ ಭಾರತದ ಹೆಮ್ಮೆಯ ಸೈನಿಕರನ್ನು ಕಳೆದುಕೊಳ್ಲುತ್ತಿದ್ದೇವೆ. ಆ ಭಯೋತ್ಪಾದಕರಿಗೂ ನಮ್ಮ ಸೈನಿಕರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ನಾವು ನಮ್ಮ ಶತೃಗಳ ಸಾವನ್ನೂ ಸಂಭ್ರಮಿಸಲಾಗುವುದಿಲ್ಲ, ಅದು ನಮ್ಮ ಭಾರತದ ಸಂಸ್ಕತಿಯೂ ಅಲ್ಲ. ನಾವೀಗ ಬಹಲ ಜಾಗೃತವಾಗಿರಬೇಕು, ನಾವು ಯಾರ ಸಾವನ್ನೂ ಸಂಭ್ರಮಿಸಬಾರದು, ಅದು ನಮ್ಮ ಶತೃವಿನ ಸಾವಾಗಿದ್ದರೂ ಕೂಡ. ಯಾಕೆಂದರೆ ಯಾರ ಮನೆಯಲ್ಲಾದರೂ ಸಾವು ಸಾವೇ.

ಇದು ನನ್ನ ವೈಯಕ್ತಿಕ ಅನಿಸಿಕೆ. ಅನಿವಾರ್ಯತೆ ಬಂದಾಗ ಮಾತ್ರವೇ ನಾವು ಕೊಲ್ಲಬೇಕಾಗುತ್ತದೆ. ನಾವು ತಿಳಿದುಕೊಂಡಿರುವಂತೆ ನಮ್ಮ ಸೈನ್ಯ ಇರುವುದು ಯಾರನ್ನೋ ಕೊಲ್ಲುವುದಕ್ಕಲ್ಲ, ಅವರ ಕರ್ತವ್ಯವೇ ನಮ್ಮನ್ನು ಕಾಯುವುದು. “ನಮ್ಮನ್ನು ಕೊಲ್ಲುವವರಂತೆ ನೋಡಬೇಡಿ, ನಾವು ದೇಶಕ್ಕಾಗಿ ಕೆಲವೊಮ್ಮೆ ಕೊಲ್ಲಬಹುದು ಆದರೆ ನಮ್ಮ ಕೆಲಸ ಕೊಲ್ಲುವುದಲ್ಲ ಬದಲಾಗಿ ದೇಶ ಕಾಯುವುದು, ನಾವು ಅಲ್ಲಿರುವುದು ಯಾರನ್ನಾದರೂ ಕೊಲ್ಲುವುದಕ್ಕಲ್ಲ. ಕೊಲ್ಲುವವರನ್ನು ತಡೆಯುವುದಕ್ಕೆ ಎಂದು ಸಂದೀಪ್ ಉನ್ನಿಕೃಷ್ಣನ್ ಸದಾ ಹೇಳುತ್ತಿದ್ದರು.” ನೆನಪಿರಲಿ ಭಾರತ ತಾನಾಗಿಯೇ ಹೋಗಿ ಯಾರನ್ನೂ ಕೊಂದ ಇತಿಹಾಸವಿಲ್ಲ. ಇದು ಕೆ. ಉನ್ನಿಕೃಷ್ಣನ್ ಅವರ ಮಾತು, ದಯಮಾಡಿ ಸ್ವಲ್ಪ ಯೋಚಿಸಿ.

ಭಾರತ ಬೌದ್ಧಿಕವಾಗಿ ಹಿಂದೆಂದೂ ಕಾಣದಷ್ಟು ಇಬ್ಬಾಗವಾಗುತ್ತಿದೆ. ಅದಕ್ಕೆ ಕಾರಣ ನಮ್ಮ ಸಿದ್ಧಾಂತಗಳು, ಧರ್ಮ, ರಾಜಕೀಯ ಮತ್ತೇನೇನೋ,,, ಈದೇಶದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುವವರಾರನ್ನೂ ಸುಮ್ಮನೆ ಬಿಡಬೇಕಿಲ್ಲ, ಹಾಗೆಂದು ಯಾರದೋ ತಪ್ಪಿಗೆ ಮತ್ತಾರನ್ನೋ ಶಿಕ್ಷಿಸುವುದೂ ತರವಲ್ಲ. ದೇಶದ ಭದ್ರತೆ, ಸೇನೆ, ಸೈನಿಕರ ತ್ಯಾಗ, ದೇಶಭಕ್ತಿಯ ವಿಚಾರಬಂದಾಗ ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತಾರೆ ಅದು ನಮ್ಮ ದೇಶಧ ಸೌಂದರ್ಯ. ಹಿಂದೆ ಪಾಕಿಸ್ತಾನದ ವಿರುದ್ದ ನಡೆದ ಮೂರೂ ಯುದ್ಧಗಳಲ್ಲೂ ನಾವು ಗೆದ್ದಿದ್ದೇವೆ. ಮತ್ತು ನಾಳೆ ಯುದ್ಧ ನಡೆದರೂ ನಾವು ಗೆಲ್ಲುತ್ತೇವೆ ಅದು ಭಾರತದ ತಾಕತ್ತು. ಮುಂದೆಯು ಅಷ್ಟೆ ಅಧಿಕಾರದಲ್ಲಿ ಕಾಂಗ್ರೆಸ್ ಇರಲಿ ಅಥವಾ ಬಿಜೆಪಿಯಿರಲಿ ನಾವು ದೇಶದ ಪರವಾಗಿರೋಣ. ನೆನಪಿರಲಿ ದೇಶ ಎಂದರೆ ದೇಶದ ಜನರೇ ಹೊರತು ಆಳುವವರು ಮತ್ತು ಪಕ್ಷಗಳಲ್ಲ.

ದರ್ಶನ್ ಆರಾಧ್ಯ
ಪತ್ರಕರ್ತ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕವಿ, ಬರಹಗಾರ, ಪತ್ರಕರ್ತ ದರ್ಶನ್ ಆರಾಧ್ಯ ಹಾಸನ ಜಿಲ್ಲೆಯ ಬೇಲೂರಿನವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿಎ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋಧ್ಯಮ ವಿಭಾಗದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ಪ್ರೀತಿಯ ಪಕಳೆಗಳು ಇವರ ಪ್ರಕಟಿತ ಕವನಸಂಕಲನ. ಮಯೂರ ಸುದ್ದಿವಾಹಿನಿಯಲ್ಲಿ ವಾರ್ತಾ ನಿರ್ಮಾಪಕರು, ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಕನ್ನಡದ ಟಿವಿ೧ ನ್ಯೂಸ್ ನಲ್ಲಿ ರಾಜಕೀಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೋನ್:8495980857 Mail: snehajeevidarshan@gmail.com

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ಅಂಕಣ17 hours ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ4 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ5 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ6 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

Trending