ಭಾವ ಭೈರಾಗಿ
ಯುದ್ಧ ಬೇಕಾ ಯುದ್ದ ?
ಈಗ ಎಲ್ಲೆಲ್ಲೂ ಯುದ್ಧದ ಕುರಿತೇ ಮಾತು. ನಮ್ಮ ಸಾಮಾಜಿಕ ಜಾಲತಾಣಗಳಂತೂ ಈಗ ಶುದ್ಧ ಕಸದ ತೊಟ್ಟಿಗಳಾಗಿವೆ. ಫೇಸ್ಬುಕ್ಕು ವಾಟ್ಸಾಪ್ಗಳು ನಮಗೆ ಬೇಕಿರುವುದು, ಬೇಡದಿರುವುದು, ನಮ್ಮ ಕೋಪ, ಅಸಹನೆ, ತಂತ್ರ, ಕುತಂತ್ರಗಳನ್ನು ಭಿತ್ತುವ ಮಹಾ ವೇಧಿಕೆಗಳಾಗಿವೆ. ಇನ್ನೂ ದುರಂತವೆಂದರೆ ಯುದ್ಧವನ್ನು ಬಯಸುತ್ತೇವೋ ಇಲ್ಲವೊ ಎಂಬುದು ನಮ್ಮ ದೇಶ ಭಕ್ತಿಯನ್ನಳೆಯುವ ಅಳತೆಗೋಲಾಗಿಬಿಟ್ಟಿದೆ. ಯುದ್ಧ ಬೇಕು ಪಾಕಿಸ್ತಾನದ ರಕ್ತ ಕುಡಿಯಬೇಕು ಎನ್ನುವವರನ್ನು ದೇಶಭಕ್ತರೆಂದೂ, ಯುದ್ಧ ಬೇಡ ಎಂದವರನ್ನು ದೇಶ ದ್ರೋಹಿಗಳೆಂದೂ ಪರಿಗಣಿಸುವ ಅಪಾಯಕಾರಿ ಬೆಳವಣಿಗೆಗಳಾಗುತ್ತಿವೆ, ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವ ಮಾತನಾಡಿದವರನ್ನು ಪಾಕಿಸ್ತಾನಕ್ಕೆ ಕಳಿಸಬೇಕೆಂದೂ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ.
ಹಿಂದುಸ್ಥಾನ್ ಜಿಂದಾಬಾದ್ ಎನ್ನುವುದಕ್ಕಿಂತಲೂ ಮುರ್ದಾಬಾದ್ ಎನ್ನುವುದೇ ನಮ್ಮ ದೇಶಭಕ್ತಿಯ ಸರ್ಟಿಫಿಕೇಟ್ ಆದಂತಿದೆ. ಖಂಡಿತವಾಗಿಯೂ ಇದೊಂದು ಸಮೂಹ ಸನ್ನಿಯಲ್ಲದೇ ಮತ್ತೇನು? ದೇಶಭಕ್ತಿ, ದೇಶಾಭಿಮಾನ ಎಂಬ ಪ್ಲೇ ಕಾರ್ಡ್ ಹಿಡಿದವರಿಗಂತೂ ತಾವು ಹೇಳಿದ್ದೇ ಸತ್ಯ ಎಂಬ ಅದಾವುದೋ ಭಾವ ನೆತ್ತಿಗೇರಿದೆ. ಅವರಿಗೆ ಸಂಯಮ ತಂದುಕೊಳ್ಳುವಂತೆ ಹೇಳಹೊರಟರೆ ಅಂಥವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಮೊದಲೇಹೇಳಿಬಿಡುತ್ತೇನೆ ನಾನಿದನ್ನು ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಗಳನ್ನಾಗಲೀ ಅಥವಾ ಎಡ,ಬಲ ಪಂಥಗಳನ್ನಾಗಲೀ ಮನಸಿನಲ್ಲಿಟ್ಟುಕೊಂಡು ಬರೆದಿಲ್ಲ. ಕೇವಲ ಯುದ್ಧದ ಕುರಿತು ಮಾತ್ರ ಮಾತನಾಡುತ್ತಿದ್ದೇನೆ.
ಸ್ವಲ್ಪ ಯೋಚಿಸಿ ನೋಡಿ. ಯುದ್ಧ ಯಾರಿಗೆ ಬೇಕು? ಯುದ್ಧದಿಂದ ನಾವು ಪಡೆದುಕೊಳ್ಳುವುದೇನಿದೆ? ಖಂಡಿತ ಏನೂ ಇಲ್ಲ ಆದರೆ ನಾವು ಕಳೆದುಕೊಳ್ಳುತ್ತೇವೆ, ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾವಿರಾರು ಸೈನಿಕರನ್ನು ನಾವು ಕಳೆದುಕೊಳ್ಳುತ್ತೇವೆ. ನಮ್ಮ ನಮ್ಮ ಮಾನಸಿಕ ಗೀಳುಗಳಿಗಾಗಿ ನಮ್ಮ ಹೆಮ್ಮೆಯ ಸೈನಿಕರನ್ನು ಬಲಿಕೊಡಲು ಯಾಕೋ ಮನಸ್ಸು ಒಪ್ಪುತ್ತಿಲ್ಲ . ಹಿಂದಿನ ಯುದ್ಧಗಳ ಇತಿಹಾಸವನ್ನೊಮ್ಮೆ ನೆನಪಿಸಿಕೊಳ್ಳಿ ಯಾವ ಯುದ್ಧಗಳೂ ಸೈನಿಕರ ಸಾವಿಲ್ಲದೇ ಮುಕ್ತಾಯವಾಗಿಲ್ಲ. ಯಾವ ಯುದ್ಧದಿಂದಲೂ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಅದು 1962 ಭಾರತ ಆಗತಾನೆ ಗಟ್ಟಿಗೊಳ್ಳುತ್ತಿದ್ದ ಸಮಯ, ನೆರೆಯ ಚೀನಾದಂತ ಚೀನಾ ಮೇಲೆ ಯುದ್ಧ ಮಾಡಬೇಕಾಯ್ತು ಆ ಇಂಡೋ ಚೀನಾ ಯುದ್ಧದಲ್ಲಿ ನಾವು ಹಸಿಹಸಿ ಕನಸೊತ್ತ 1385 ಸೈನಿಕರನ್ನು ಕಳೆದುಕೊಳ್ಳಬೇಕಾಯ್ತು. ಮತ್ತೆ 1965ರಲ್ಲಿ ಪಾಕಿಸ್ತಾನ ನಮ್ಮ ವಿರುದ್ಧ ಕಾಲ್ಕೆರೆಯಿತು, ಆಗ ನಡೆದ ಯುದ್ಧದಲ್ಲಿ 3000 ಕುಟುಂಬಗಳು ತಮ್ಮ ಆಧಾರ ಸ್ಥಂಬಗಳನ್ನು ಕಳೆದುಕೊಂಡು ಕಂಗಾಲಾಗಬೇಕಾಯ್ತು. ಪಾಕಿಸ್ತಾನದ ಸೊಂಟ ಮುರಿದು ಇಬ್ಬಾಗ ಮಾಡಿದ ಸಮಯ 1971.
ಅದು ಸುಲಭಕ್ಕೆ ನಡೆದ ಕೆಲಸವಲ್ಲ, ನಾನು ಮತ್ತೆ ಯುಗಾದಿಗೆ ಬರ್ತೇನೆ, ಮುಂದಿನಬಾರಿ ಅಮ್ಮನಿಗೆ ಸೀರೆ ತರ್ತೇನೆ, ಇನ್ನೇನು ಎರಡೇ ತಿಂಗಳ ಡ್ಯೂಟಿ ಮುಗಿಸಿ ಊರಿಗೆ ಬಂದು ಅಮ್ಮನ ಸೇವೆ ಮಾಡಿಕೊಂಡಿರ್ತೇನೆ, ಹೀಗೆ ಎದೆಷ್ಟೋ ಭರವಸೆಯ ಮಾತುಗಳನ್ನು ಕುಟುಂಭದವರಿಗೆ ನೀಡಿ ಬಂದಿದ್ದ 3843ಜನ ಸೈನಿಕರು ನೋಡನೋಡುತ್ತಿದ್ದಂತೆಯೇ ಶತೃಗಳ ಗುಂಡಿಗೆ ಎದೆಕೊಡಬೇಕಾಯ್ತು. ಇನ್ನು 1999ರ ಕಾರ್ಗಿಲ್ ಕದನ. ಹಿಂದಿನ ದಿನವಷ್ಟೇ ಅಮ್ಮನಿಗೆ ಪತ್ರಬರೆದವರು, ಎರಡು ತಿಂಗಳ ಹಿಂದಷ್ಟೇ ಮದುವೆಯಾದವರ, ಇನ್ನೂ ನೋಡಿರದ ತನ್ನ ಕಂದಮ್ಮನ ಸುತ್ತ ಕನಸು ಹೆಣೆದವರೂ ಸೇರಿ ಸತ್ತ ಸೈನಿಕರ ಸಂಖ್ಯೆ 528. ಇಂದೋ ನಾಳೆಯೋ ಯುದ್ಧವಾದರೆ ಮತ್ತೆ ನಾವು ಕಳೆದುಕೊಳ್ಳುವ ಸಂಖ್ಯೆ ದೊಡ್ಡದಾಗುತ್ತದೆಯೇ ಹೊರತು ಚಿಕ್ಕದಾಗುವುದಿಲ್ಲ.
ನೆನಪಿರಲಿ ಗೆಳೆಯರೇ ಈಗ ಯುದ್ಧವಾದರೆ ಸಾಯುವವರು ದೇಶ ಕಾಯುವ ಸೈನಿಕರೇ ಹೊರತು, ಫೇಸ್ ಬುಕ್ಕಿನಲ್ಲಿ ಪೋಸ್ಟ್ ಹಾಕುವ ನಾವು ನೀವಲ್ಲ, ಒಂದು ಹನಿರಕ್ತಕ್ಕೆ ಹತ್ತು ಹೆಣ ಕೆಡವುತ್ತೇನೆಂದು ಪ್ರತಿಜ್ಞೆ ಮಾಡುವ ರಾಜಕಾರಣಿಗಳೂ ಅಲ್ಲ. ಗೊತ್ತಿರಲಿ ಯುದ್ಧದ ನಂತರ ನಾವು ಮತ್ತೆ ಫೇಸ್ ಬುಕ್ಕಿನಲ್ಲಿ ಸತ್ತವರ ಲೆಕ್ಕ ಹೇಳುತ್ತೇವೆ, ಅವರಿಗೆ ಶ್ರದ್ಧಾಂಜಲಿ ಕೋರಿ ಪೋಸ್ಟ್ ಹಾಕುತ್ತೇವೆ ಮತ್ತು ನಮ್ಮ ಜನನಾಯಕರು ಅವರ ಸಾವಿನ ಸೇಡುತೀರಿಸಿಕೊಳ್ಲಲು ಮತ್ತೊಂದು ಅವಕಾಶ ಕೊಡಿ ಎಂದು ಓಟು ಕೇಳಲು ಬರುತ್ತಾರೆ. ಯುದ್ಧದ ಕುರಿತಂತೆ ರೂಸ್ ವೆಲ್ಟ್ ಹೇಳಿದ ಮಾತೊಂದು ಈಗ ನೆನಪಾಗುತ್ತಿದೆ . “ಯುದ್ದವೆಂದರೆ ಯುವಕರು ಸಾಯುವುದು ಮತ್ತು ಹಿರಿಯರು ಭಾಷಣಮಾಡುವುದೆ ಹೊರತು ಮತ್ತೇನು ಅಲ್ಲ.”
ನಾನೊಬ್ಬ ಪತ್ರಕರ್ತನಾಗಿ ಸಾಕಷ್ಟುಜನ ಸೈನಿಕರನ್ನೂ, ಮತ್ತು ಸೈನಿಕರ ಕುಟುಂಬಗಳನ್ನೂ ಹತ್ತಿರದಿಂದ ಬಲ್ಲೆ, ಅವರಲ್ಲಿ ರಕ್ತದಾಹಿಗಳಿಲ್ಲ, ಸಾವಿಗಾಗಿ ಹಪಹಪಿಸಿದವರಿಲ್ಲ, ಕೊಂದು ಸೇಡುತೀರಿಸಿಕೊಳ್ಳಿ ಎಂದು ಯಾರೂ ಕೇಳಲಿಲ್ಲ. ಹಾಗಾದರೆ ಪಾಕಿಸ್ತಾನವನ್ನು ಸುಮ್ಮನೇ ಬಿಡಬೇಕಾ? ಖಂಡಿತಾ ಇಲ್ಲ. ಪಾಕಿಸ್ತಾನವಷ್ಟೇ ಅಲ್ಲ ಜಗತ್ತಿನ ಯಾವುದೇ ರಾಷ್ಟ್ರವಾಗಿರಲಿ ಭಾರತದ ಆತ್ಮಗೌರವವನ್ನು ಕೆಣಕಿದರೆ ಸುಮ್ಮನೇ ಬಿಡಬೇಕಿಲ್ಲ, ಮತ್ತು ನಾವು ಹಾಗೆ ಕೆಣಕಿದವರನ್ನು ಸುಮ್ಮನೇ ಬಿಟ್ಟ ಉದಾಹರಣೆಗಳೂ ಇಲ್ಲ. ಆದರೆ ನೆನಪಿರಲಿ ಈಗ ನಾವು ಕಾದಾಡಬೇಕಿರುವುದು ಪಾಕಿಸ್ತಾನದ ವಿರುದ್ಧವಲ್ಲ ಬದಲಾಗಿ ಭಯೋತ್ಪಾದನೆಯ ವಿರುದ್ಧ. ಪುಲ್ವಾಮಾದಲ್ಲಿ ಸೈನಿಕರ ರಕ್ತಹರಿಸಿದವರು ಭಯೋತ್ಪಾದಕರೇ ಹೊರತು ಪಾಕಿಸ್ತಾನದ ಸೈನಿಕರಲ್ಲ, ನಿಮಗೆ ಗೊತ್ತಿರಲಿ, ಪುಲ್ವಾಮಾ ಘಟನೆಯನ್ನು ಭಾರತದಂತೆಯೇ ಪಾಕಿಸ್ತಾನವೂ ಕೂಡ ಸಂಸತ್ ನಲ್ಲಿ ಖಂಡಿಸಿದೆ.
ಹಾಗಂತ ನಾವು ಪಾಕಿಸ್ತಾನವನ್ನು ಅಪ್ಪಿ ಮುದ್ದಾಡಬೇಕಿಲ್ಲ. ನಮ್ಮ ತಂಟೆಗೆ ಬಂದಾಗ ಕೈಕಟ್ಟಿ ಕೂರಬೇಕಿಲ್ಲ. ಬದಲಿಗೆಅದರ ರಕ್ತಕುಡಿಯಲು ಹಾತೊರೆಯುವುದರಲ್ಲೂ ಅರ್ಥವಿಲ್ಲ. ಹಾಗಾದರೆ ಮಾಡಬೇಕಿರುವುದೇನು? ದೇಶದ ಮೂಲೆ ಮೂಲೆಯಲ್ಲಡಗಿರುವ ಭಯೋತ್ಪಾದಕರನ್ನು ಮಟ್ಟಹಾಕವುದು ನಮ್ಮ ಗುರಿಯಾಗಬೇಕು. ಆನಿಟ್ಟಿನಲ್ಲಿ ನಾವು ನಮ್ಮ ಸರ್ಕಾರಗಳಿಗೆ ಒತ್ತಡಹೇರಬೇಕೇ ವಿನಃ ಯುದ್ಧ ಮಾಡಲಲ್ಲ. ಭಾರತ ಶಾಂತಿಪ್ರಿಯ ರಾಷ್ಟ್ರ. ಈ ದೇಶಕ್ಕೆ ತನ್ನದೇ ಆದ ಇತಿಹಾಸವಿದೆ, ಭಾರತ ಯಾರ ಮೇಲೂ ಕಾಲ್ಕೆರೆದು ಯುದ್ಧ ಮಾಡಿದ ಉದಾಹರಣೆಗಳಿಲ್ಲ, ಯಾವುದೋ ಉನ್ಮಾದದಲ್ಲಿ ಭಾರತ ಯುದ್ಧ ಘೋಷಣೆ ಮಾಡುವುದಿಲ್ಲ. ನಾವು ಗಾಂಧಿಯನ್ನು ನೆನಪಿಟ್ಟುಕೊಂಡಿದ್ದೇವೋ ಇಲ್ಲವೋ ಗೊತ್ತಿಲ್ಲ ಆದರೆ ಅಂತ ಗಾಂಧಿಯಂತ ಗಾಂಧಿ ಹುಟ್ಟಿದ ನೆಲದವರು ನಾವು. ನಮ್ಮ ರಾಷ್ಟ್ರಧ್ವಜದ ಬಿಳಿಯ ಬಣ್ಣ ಶಾಂತಿ ಸಂಕೇತ ಎಂದು ನಾವು ಹೇಳಿಕೊಳ್ಳುತ್ತೇವೆ ಆದರೆ ಈಗ ನಾವು ನಡೆದುಕೊಳ್ಳುತ್ತಿರುವ ರೀತಿ ಯಾವುದು? ತಾನಾಗೆ ಬಂದ ಯಾರನ್ನೂ ಸುಮ್ಮನೇ ಉಳಿಸಿದ ಉದಾಹರಣೆಗಳೂ ಇತಿಹಾಸದ ಯಾವ ಮೂಲೆಯಲ್ಲೂ ಸಿಗುವುದಿಲ್ಲ. ನಮ್ಮ ಸೈನಿಕರಿರುವುದು ಕಾಯುವುದಕ್ಕೇ ಹೊರತು ಯಾರನ್ನೋ ಕೊಲ್ಲುವುದಕ್ಕಲ್ಲ. ರಕ್ಷಿಸುವ ಕೈಗಳನ್ನು ರಕ್ತ ಕುಡಿಯುವಂತೆ ಒತ್ತಾಯಿಸಬೇಕಿಲ್ಲ. ಕೊನೆಯದಾಗಿ ಯುದ್ಧದ ಕುರಿತು ಧೀರ ಯೋಧ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಕೆ. ಉನ್ನಿಕೃಷ್ಣನ್ ಹೇಳಿರುವ ಮಾತುಗಳನ್ನು ಯಥಾವತ್ತಾಗಿ ಹೇಳುತ್ತೇನೆ ಕೇಳಿ,
ನಾವೀಗ ಒಂದು ಸುಧೀರ್ಘದಾರಿಯ ದೊಡ್ಡ ತಿರುವಿನಲ್ಲಿದ್ದೇವೆ. ನಾವು ಪಾಕಿಸ್ತಾನದೊಂದಿಗೆ ಗುದ್ದಾಟದಲ್ಲಿಲ್ಲ, ಭಯೋತ್ಪಾದಕರೊಂದಿಗಿನ ಗುದ್ದಾಟದಲ್ಲಿದ್ದೇವೆ ಎಂದು ಹಲವರು ಹೇಳುತ್ತಾರೆ ಅದೇನೇ ಇರಲಿ, ದೇಶದಲ್ಲಿ ಏನಾಗುತ್ತಿದೆ ಎಂದು ನಾನು ಸುಮ್ಮನೇ ಗಮನಿಸುತ್ತಿದ್ದೇನೆ. ಈಗಾಗುತ್ತಿರುವ ಬೆಳವಣಿಗೆಗಳಿಂದ ಪಾಕಿಸ್ತಾನ ಏನನ್ನೂ ಕಳೆದುಕೊಳ್ಲುತ್ತಿಲ್ಲ, ಅವರು ಕಳೆದುಕೊಳ್ಳುತ್ತಿರುವುದು ಸಾಯಲು ಸಿದ್ದವಾಗಿರುವ ಭಯೋತ್ಪಾದಕರನ್ನು ಮಾತ್ರ. ಆದರೆ ನಾವು? ನಾವು ನಮ್ಮ ಭಾರತದ ಹೆಮ್ಮೆಯ ಸೈನಿಕರನ್ನು ಕಳೆದುಕೊಳ್ಲುತ್ತಿದ್ದೇವೆ. ಆ ಭಯೋತ್ಪಾದಕರಿಗೂ ನಮ್ಮ ಸೈನಿಕರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ನಾವು ನಮ್ಮ ಶತೃಗಳ ಸಾವನ್ನೂ ಸಂಭ್ರಮಿಸಲಾಗುವುದಿಲ್ಲ, ಅದು ನಮ್ಮ ಭಾರತದ ಸಂಸ್ಕತಿಯೂ ಅಲ್ಲ. ನಾವೀಗ ಬಹಲ ಜಾಗೃತವಾಗಿರಬೇಕು, ನಾವು ಯಾರ ಸಾವನ್ನೂ ಸಂಭ್ರಮಿಸಬಾರದು, ಅದು ನಮ್ಮ ಶತೃವಿನ ಸಾವಾಗಿದ್ದರೂ ಕೂಡ. ಯಾಕೆಂದರೆ ಯಾರ ಮನೆಯಲ್ಲಾದರೂ ಸಾವು ಸಾವೇ.
ಇದು ನನ್ನ ವೈಯಕ್ತಿಕ ಅನಿಸಿಕೆ. ಅನಿವಾರ್ಯತೆ ಬಂದಾಗ ಮಾತ್ರವೇ ನಾವು ಕೊಲ್ಲಬೇಕಾಗುತ್ತದೆ. ನಾವು ತಿಳಿದುಕೊಂಡಿರುವಂತೆ ನಮ್ಮ ಸೈನ್ಯ ಇರುವುದು ಯಾರನ್ನೋ ಕೊಲ್ಲುವುದಕ್ಕಲ್ಲ, ಅವರ ಕರ್ತವ್ಯವೇ ನಮ್ಮನ್ನು ಕಾಯುವುದು. “ನಮ್ಮನ್ನು ಕೊಲ್ಲುವವರಂತೆ ನೋಡಬೇಡಿ, ನಾವು ದೇಶಕ್ಕಾಗಿ ಕೆಲವೊಮ್ಮೆ ಕೊಲ್ಲಬಹುದು ಆದರೆ ನಮ್ಮ ಕೆಲಸ ಕೊಲ್ಲುವುದಲ್ಲ ಬದಲಾಗಿ ದೇಶ ಕಾಯುವುದು, ನಾವು ಅಲ್ಲಿರುವುದು ಯಾರನ್ನಾದರೂ ಕೊಲ್ಲುವುದಕ್ಕಲ್ಲ. ಕೊಲ್ಲುವವರನ್ನು ತಡೆಯುವುದಕ್ಕೆ ಎಂದು ಸಂದೀಪ್ ಉನ್ನಿಕೃಷ್ಣನ್ ಸದಾ ಹೇಳುತ್ತಿದ್ದರು.” ನೆನಪಿರಲಿ ಭಾರತ ತಾನಾಗಿಯೇ ಹೋಗಿ ಯಾರನ್ನೂ ಕೊಂದ ಇತಿಹಾಸವಿಲ್ಲ. ಇದು ಕೆ. ಉನ್ನಿಕೃಷ್ಣನ್ ಅವರ ಮಾತು, ದಯಮಾಡಿ ಸ್ವಲ್ಪ ಯೋಚಿಸಿ.
ಭಾರತ ಬೌದ್ಧಿಕವಾಗಿ ಹಿಂದೆಂದೂ ಕಾಣದಷ್ಟು ಇಬ್ಬಾಗವಾಗುತ್ತಿದೆ. ಅದಕ್ಕೆ ಕಾರಣ ನಮ್ಮ ಸಿದ್ಧಾಂತಗಳು, ಧರ್ಮ, ರಾಜಕೀಯ ಮತ್ತೇನೇನೋ,,, ಈದೇಶದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುವವರಾರನ್ನೂ ಸುಮ್ಮನೆ ಬಿಡಬೇಕಿಲ್ಲ, ಹಾಗೆಂದು ಯಾರದೋ ತಪ್ಪಿಗೆ ಮತ್ತಾರನ್ನೋ ಶಿಕ್ಷಿಸುವುದೂ ತರವಲ್ಲ. ದೇಶದ ಭದ್ರತೆ, ಸೇನೆ, ಸೈನಿಕರ ತ್ಯಾಗ, ದೇಶಭಕ್ತಿಯ ವಿಚಾರಬಂದಾಗ ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತಾರೆ ಅದು ನಮ್ಮ ದೇಶಧ ಸೌಂದರ್ಯ. ಹಿಂದೆ ಪಾಕಿಸ್ತಾನದ ವಿರುದ್ದ ನಡೆದ ಮೂರೂ ಯುದ್ಧಗಳಲ್ಲೂ ನಾವು ಗೆದ್ದಿದ್ದೇವೆ. ಮತ್ತು ನಾಳೆ ಯುದ್ಧ ನಡೆದರೂ ನಾವು ಗೆಲ್ಲುತ್ತೇವೆ ಅದು ಭಾರತದ ತಾಕತ್ತು. ಮುಂದೆಯು ಅಷ್ಟೆ ಅಧಿಕಾರದಲ್ಲಿ ಕಾಂಗ್ರೆಸ್ ಇರಲಿ ಅಥವಾ ಬಿಜೆಪಿಯಿರಲಿ ನಾವು ದೇಶದ ಪರವಾಗಿರೋಣ. ನೆನಪಿರಲಿ ದೇಶ ಎಂದರೆ ದೇಶದ ಜನರೇ ಹೊರತು ಆಳುವವರು ಮತ್ತು ಪಕ್ಷಗಳಲ್ಲ.
–ದರ್ಶನ್ ಆರಾಧ್ಯ
ಪತ್ರಕರ್ತ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ3 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ3 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

