ದಿನದ ಸುದ್ದಿ
ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಸ್ಥಿತಿ-ಗತಿಗಳ ವಿವರವುಳ್ಳ ಬುಲೆಟಿನ್ ಬಿಡುಗಡೆಗೆ ಸೂಚನೆ : ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ಡೆಸ್ಕ್ ಪ್ರಾರಂಭಿಸಿ : ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್ಗಳು, ವೆಂಟಿಲೇಟರ್, ಐಸಿಯು ಹಾಗೂ ಖಾಲಿ ಇರುವ ಬೆಡ್ಗಳ ಸಂಖ್ಯೆ ಸೇರಿದಂತೆ ಎಲ್ಲ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ಡೆಸ್ಕ್ ಪ್ರಾರಂಭಿಸುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕಿತರು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಎಡತಾಕುತ್ತಿದ್ದು, ಅಲ್ಲಿ ಲಭ್ಯವಿರುವ ಬೆಡ್ಗಳ ವಿವರದ ಮಾಹಿತಿ ಸಮರ್ಪಕವಾಗಿ ದೊರೆಯದೆ, ಅಥವಾ ಜವಾಬ್ದಾರಿಯುತ ಅಧಿಕಾರಿಗಳಿಂದ ಮಾಹಿತಿ ಪಡೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ರೋಗಿಗಳು ಅಲೆದಾಡುತ್ತಿದ್ದಾರೆ, ಆಸ್ಪತ್ರೆಗಳ ಪರಿಚಾರಕರು, ಗ್ರೂಪ್-ಡಿ ಸಿಬ್ಬಂದಿಗಳು, ಕಾವಲುಗಾರರೇ ಸಾರ್ವಜನಿಕರಿಗೆ ಇಲ್ಲಿ ಬೆಡ್ ಖಾಲಿ ಇಲ್ಲ ಎಂದು ರೋಗಿಗಳನ್ನು ಸಾಗಹಾಕುತ್ತಿದ್ದಾರೆ, ಆಂಬುಲೆನ್ಸ್ ವ್ಯವಸ್ಥೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರು, ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ.
ಹೀಗಾಗಿ ಆಸ್ಪತ್ರೆಗಳಲ್ಲಿ ಭರ್ತಿಯಾಗಿರುವ ಹಾಗೂ ಖಾಲಿ ಇರುವ ಬೆಡ್ಗಳ ವಿವರ ನಿಖರವಾಗಿ ಸಮಪರ್ಕವಾಗಿ ಸಾರ್ವಜನಿಕರಿಗೆ ದೊರೆಯುವಂತಾಗಲು, ಸರ್ಕಾರಿ ಹಾಗೂ ಎಲ್ಲ ಖಾಸಗಿ ಆಸ್ಪತ್ರೆಗಳ ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್ ಪ್ರಾರಂಭಿಸಬೇಕು. ಆಸ್ಪತ್ರೆವಾರು ಬೆಡ್ಗಳ ಭರ್ತಿ ಹಾಗೂ ಲಭ್ಯತೆ ಕುರಿತ ವಿವರವುಳ್ಳ ಬುಲೆಟಿನ್ ಅನ್ನು ನಿತ್ಯ ಜಿಲ್ಲಾಧಿಕಾರಿಗಳು ಪ್ರಕಟಿಸಬೇಕು.
ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕ ಹಾಗೂ ರೆಮ್ಡೆಸಿವರ್ ಔಷಧ ಸಮರ್ಪಕ ಪೂರೈಕೆ ಹಾಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಇದನ್ನೂ ಓದಿ | ದಾವಣಗೆರೆ |ಆಮ್ಲಜನಕ ಪೂರೈಕೆ ಕಾರ್ಖಾನೆಗೆ ಉಸ್ತುವಾರಿ ಸಚಿವರ ಭೇಟಿ
13 ಕೆ.ಎಲ್. ಸಾಮಥ್ರ್ಯದ ಆಮ್ಲಜನಕ ಘಟಕ : ಸದ್ಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 06 ಕೆ.ಎಲ್. ಸಾಮಥ್ರ್ಯದ ಆಕ್ಸಿಜನ್ ಘಟಕ ಸ್ಥಾಪಿಸಲಾಗಿದ್ದು, ಇದರಿಂದ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. 13 ಕೆ.ಎಲ್. ಸಾಮಥ್ರ್ಯದ ಇನ್ನೊಂದು ಆಮ್ಲಜನಕ ಘಟಕ ಸ್ಥಾಪನೆಗೆ ಮಂಜೂರಾತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಮಂಜೂರಾತಿ ಪತ್ರಕ್ಕಾಗಿ ಕಾಯದೆ, 13 ಕೆ.ಎಲ್ ಸಾಮಥ್ರ್ಯದ ಆಮ್ಲಜನಕ ಘಟಕ ಸ್ಥಾಪನೆಗೆ ಬೇಕಾದ ಎಲ್ಲ ಪ್ರಕ್ರಿಯೆಗಳನ್ನು ನೀವು ಪ್ರಾರಂಭಿಸಿ. ಇದಕ್ಕೆ ಸಂಪೂರ್ಣ ಅಧಿಕಾರವನ್ನು ನಿಮಗೇ ಕೊಡುತ್ತಿದ್ದೇನೆ ಎಂದರು. ಜಿಲ್ಲಾಧಿಕಾರಿಗಳು ಉತ್ತರಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ ತಕ್ಷಣದಲ್ಲಿ ದೊರೆಯುವುದು ಕಷ್ಟ.
ಇವು ಗುಜರಾತ್ನಲ್ಲಿ ಮಾತ್ರ ಉತ್ಪಾದನೆಯಾಗುತ್ತವೆ, ಆದರೂ ಸಂಬಂಧಪಟ್ಟವರಿಂದ ಮಾಹಿತಿ ಪಡೆದು, ಆದಷ್ಟು ಶೀಘ್ರ ಘಟಕ ಸ್ಥಾಪನೆಗೆ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಪ್ರತಿಕ್ರಿಯಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ ದೊರೆಯುವುದು ಕಷ್ಟವಿದ್ದಲ್ಲಿ, 06 ಕೆ.ಎಲ್. ಸಾಮಥ್ರ್ಯದ ಎರಡು ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಲಾಕ್ಡೌನ್ ಜಾರಿಗೆ ಒಕ್ಕೊರಲ ಮನವಿ : ಜಿಲ್ಲೆಯಲ್ಲಿ ಈವರೆಗೆ ಒಟ್ಟು 27222 ಕೋವಿಡ್ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟಾರೆ 290 ಜನ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ ಪ್ರಕರಣಗಳಿವೆ. ಈ ವರ್ಷ ಏಪ್ರಿಲ್ನಿಂದ ಈವರೆಗೆ ಕೋವಿಡ್ನ 3485 ಪ್ರಕರಣ ಪತ್ತೆಯಾಗಿದ್ದು, 26 ಮರಣ ದಾಖಲಾಗಿದೆ.
ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ ಕಫ್ರ್ಯೂ ಪರಿಣಾಮಕಾರಿಯಾಗಿಲ್ಲ. ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ, ಜನತಾ ಕಫ್ರ್ಯೂಗೆ ಸಾರ್ವಜನಿಕರ ಸಹಕಾರ ದೊರೆಯುತ್ತಿಲ್ಲ. ಹಳ್ಳಿಗಳಲ್ಲಿ ಇಸ್ಪೀಟ್ ಆಡಲು ಜೂಜು ಅಡ್ಡೆಗಳು ಪ್ರಾರಂಭವಾಗಿವೆ.
ಜನರು ತಮ್ಮ ಸ್ವಭಾವ ಬದಲಿಸಿಕೊಳ್ಳದಿದ್ದರೆ ಸರ್ಕಾರ ಮತ್ತು ಅಧಿಕಾರಿಗಳು ಏನೂ ಮಾಡಲು ಆಗಲ್ಲ. ಜನರ ಪ್ರಾಣದ ಹಿತದೃಷ್ಟಿಯಿಂದ ಕೋವಿಡ್ ಸರಪಳಿಯನ್ನು ತುಂಡರಿಸುವುದು ತೀವ್ರ ಅಗತ್ಯವಾಗಿದ್ದು, ಲಾಕ್ಡೌನ್ ಜಾರಿಗೊಳಿಸುವುದು ಅನಿವಾರ್ಯವಾಗಿದೆ.
ಹೀಗಾಗಿ ಮೇ. 31 ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ, ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರ, ಪ್ರೊ. ಲಿಂಗಣ್ಣ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಒಕ್ಕೊರಲ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಮ್ಮ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸೋಂಕು ಮುಚ್ಚಿಡಬೇಡಿ
ಜನರು ತಮ್ಮಲ್ಲಿ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಕೋವಿಡ್ನ ಯಾವುದೇ ರೋಗಲಕ್ಷಣಗಳು ಇದ್ದರೂ, ಪರೀಕ್ಷೆಗೆ ಒಳಗಾಗಲು ಮುಂದಾಗುತ್ತಿಲ್ಲ. ಜ್ವರ, ಕೆಮ್ಮಿಗೆ ಗುಳಿಗೆಗಳನ್ನು ನುಂಗಿ ಸುಮ್ಮನಾಗುವ ಪ್ರವೃತ್ತಿ ತೋರಿಸುತ್ತಿದ್ದಾರೆ. ಗ್ರಾಮಗಳಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಇವರಿಗೂ ಸಹಕಾರ ನೀಡುತ್ತಿಲ್ಲ. ತೀವ್ರ ಉಸಿರಾಟ ತೊಂದರೆ ಪ್ರಾರಂಭವಾದಾಗ ಆಸ್ಪತ್ರೆಗೆ ಬರುತ್ತಾರೆ.
ರೋಗ ತೀವ್ರ ಉಲ್ಬಣವಾದಾಗ ಆಸ್ಪತ್ರೆಗೆ ಬಂದರೆ ಅವರಿಗೆ ಚಿಕಿತ್ಸೆ ದೊರಕುವುದು ಕಷ್ಟಸಾಧ್ಯ. ಹೀಗಾಗಿ ಸಾರ್ವಜನಿಕರು ರೋಗ ಮುಚ್ಚಿಡುವುದರಿಂದ ಆ ರೋಗಿಗೆ ಮಾತ್ರವಲ್ಲ ತಮ್ಮ ಕುಟುಂಬ, ಅಕ್ಕಪಕ್ಕದವರು, ಇಡೀ ಗ್ರಾಮವೇ ತೊಂದರೆಗೆ ಸಿಲುಕುತ್ತದೆ ಎಂಬ ಅಂಶವನ್ನು ಅರಿತು ಜವಾಬ್ದಾರಿಯಿಂದ ವರ್ತಿಸಬೇಕು. ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು.
ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಅನಗತ್ಯವಾಗಿ ಮನೆಯಿಂದ ಹೊರಗೆ ಅಡ್ಡಾಡುವುದನ್ನು ಬಿಡಬೇಕು ಎಂದು ಸಚಿವರು, ಸಂಸದರು ಒಳಗೊಂಡಂತೆ ಎಲ್ಲ ಶಾಸಕರುಗಳು, ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.
ವಾರದೊಳಗೆ ಕೋವಿಡ್ ಇಳಿಮುಖವಾಗಬೇಕು
ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿಗೊಂಡಿಲ್ಲ. ಜನರು ಹಾಗೂ ವಾಹನಗಳು ನಿಗದಿತ ಅವಧಿಯ ಬಳಿಕವೂ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ತರಕಾರಿ ಮತ್ತಿತರ ಸಾಮಗ್ರಿ ಖರೀದಿ ಸ್ಥಳದಲ್ಲಿ ಈಗಲೂ ಜನಸಂದಣಿ ಕಂಡುಬರುತ್ತಿದೆ.
ಹೀಗಾದಲ್ಲಿ ಕೋವಿಡ್ ಇನ್ನಷ್ಟು ವ್ಯಾಪಕವಾಗಿ ಹರಡಲು ಕಾರಣವಾಗುತ್ತದೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ ಪ್ರಕರಣಗಳಿವೆ. ಬರುವ ಒಂದು ವಾರದ ಒಳಗಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇನ್ನಷ್ಟು ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಜರುಗಿಸಲು ಮುಂದಾಗಬೇಕು. ತಹಸಿಲ್ದಾರರು, ಪೊಲೀಸ್ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳಲಿ.
ಯಾವುದೇ ಕಠಿಣ ಕ್ರಮಗಳಿಗೆ ನಾವು ಬೆಂಬಲ ನೀಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಸಂಸದರು, ಶಾಸಕರುಗಳೂ ಕೂಡ ಬೆಂಬಲಿಸುವುದಾಗಿ ಭರವಸೆ ನೀಡಿದರು.
ಸಮರ್ಪಕ ಲಸಿಕೆ ದೊರಕಿಸಲು ಕ್ರಮ
ಜಿಲ್ಲೆಯಲ್ಲಿ ಈವರೆಗೆ 14697 ಆರೋಗ್ಯ ಕಾರ್ಯಕರ್ತರು, 5916 ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲ್ಪಟ್ಟ 153130 ಜನರಿಗೆ ಮೊದಲ ಡೋಸ್, 25571 ಜನರಿಗೆ ಎರಡನೆ ಡೋಸ್ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ.
ಈವರೆಗೆ ಚನ್ನಗಿರಿ ತಾಲ್ಲೂಕಿಗೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಸೇರಿದಂತೆ ಒಟ್ಟು 39700 ಡೋಸ್, ಹೊನ್ನಾಳಿ-32610, ಹರಿಹರ-29250, ಜಗಳೂರು-16270, ಹಾಗೂ ದಾವಣಗೆರೆ ತಾಲ್ಲೂಕಿಗೆ 67520 ಡೋಸ್ ಲಸಿಕೆ ಪೂರೈಸಲಾಗಿದೆ. ಈವರೆಗೆ ಒಟ್ಟು 1.84 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 22620 ಡೋಸ್ ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಮಾಡಲಾಗಿದೆ.
ಕೋವಿಶೀಲ್ಡ್ ಲಸಿಕೆ ಪೂರೈಕೆಯಾಗುತ್ತಿದ್ದು, ಕೋವ್ಯಾಕ್ಸಿನ್ ಲಸಿಕೆ ಪೂರೈಕೆಯಾಗುತ್ತಿಲ್ಲ. ಕೋವ್ಯಾಕ್ಸಿನ್ನ 850 ಜನ ಎರಡನೆ ಡೋಸ್ ಪಡೆಯುವುದು ಬಾಕಿ ಉಳಿದಿದ್ದು, ಕೋವ್ಯಾಕ್ಸಿನ್ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಶೀಲ್ಡ್ನ 2ನೇ ಡೋಸ್ ಬಾಕಿ ಇರುವವರಿಗೆ ಮಾತ್ರ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ತಿಳಿಸಿದರು.
ಸಂಸದರು ಪ್ರತಿಕ್ರಿಯಿಸಿ ಜಿಲ್ಲೆಗೆ ನಿತ್ಯ 40 ರಿಂದ 50 ಸಾವಿರ ಡೋಸ್ ಲಸಿಕೆ ಪೂರೈಕೆಯಾಗಬೇಕು. ಅಂದಾಗ ಮಾತ್ರ ಲಸಿಕಾಕರಣ ಪರಿಣಾಮಕಾರಿಯಾಗಿಸಲು ಸಾದ್ಯ. ಈ ನಿಟ್ಟಿನಲ್ಲಿ ಸಚಿವರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು. ಉತ್ತರಿಸಿದ ಸಚಿವರು ಸರ್ಕಾರ 3 ಕೋಟಿ ಲಸಿಕೆ ಖರೀದಿಗೆ ಕ್ರಮ ಕೈಗೊಂಡಿದೆ ಅಲ್ಲದೆ, 1.20 ಕೋಟಿ ರೆಮ್ಡೆಸಿವರ್ ಔಷಧಿ ಖರೀದಿಗೂ ಮುಂದಾಗಿದೆ. ಬರುವ ಒಂದು ವಾರದೊಳಗೆ ಲಸಿಕೆ ಪೂರೈಕೆ ಸಮರ್ಪಕವಾಗಲಿದೆ ಎಂದು ಭರವಸೆ ನೀಡಿದರು.
ಕೋವಿಡ್ ಕೇರ್ ಸೆಂಟರ್ಗೆ ಕರೆತನ್ನಿ
ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿಯೂ ಹಾಸ್ಟೆಲ್ ಮುಂತಾದೆಡೆ ಕೋವಿಡ್ ಕೇರ್ ಸೆಂಟರ್ಗಳನ್ನು ಪ್ರಾರಂಭಿಸಿ ಉತ್ತಮ ಊಟೋಪಹಾರ, ವೈದ್ಯಕೀಯ ನೆರವು ಕಲ್ಪಿಸಲಾಗುತ್ತಿದೆ. ರೋಗಲಕ್ಷಣ ರಹಿತ ಹಾಗೂ ಕಡಿಮೆ ತೀವ್ರತೆಯ ಕೋವಿಡ್ ಸೋಂಕಿತರಿಗೆ ಮನೆಗಳಲ್ಲಿ ಪ್ರತ್ಯೇಕವಾದ ಮೂಲಭೂತ ಸೌಕರ್ಯ ಇಲ್ಲದಿದ್ದಲ್ಲಿ, ಹೋಂ ಐಸೋಲೇಷನ್ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಅವರನ್ನು ಆದಷ್ಟು ಕೋವಿಡ್ ಕೇರ್ ಸೆಂಟರ್ಗೆ ಕರೆತರುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕು.
ಸದ್ಯ ಜಿಲ್ಲೆಯಲ್ಲಿ 1095 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ ಉತ್ತಮ ಊಟೋಪಹಾರ, ವೈದ್ಯಕೀಯ ನೆರವು ಸೇರಿದಂತೆ ಸಮರ್ಪಕ ವ್ಯವಸ್ಥೆ ದೊರಕಿಸುವ ವಿಶ್ವಾಸವನ್ನು ಅಧಿಕಾರಿಗಳು ರೋಗಿಗಳಿಗೆ ನೀಡಬೇಕು. ಸಮರ್ಪಕ ವ್ಯವಸ್ಥೆ ಇಲ್ಲದೆ ಹೋಂ ಐಸೋಲೇಷನ್ಗೆ ಒಳಗಾಗುವವರು, ಸೋಂಕನ್ನು ವ್ಯಾಪಕವಾಗಿ ಹರಡಲು ಕಾರಣಕರ್ತರಾಗುತ್ತಾರೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.
ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

