ನೆಲದನಿ
ನುಡಿಯ ಒಡಲು – 26 | ನುಡಿ ಒಲವು ಮತ್ತು ಧೋರಣೆ
- ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಭಾಷಿಕ ಒಲವು ಮತ್ತು ಧೋರಣೆ ಅನ್ನುವುದು ಮಾನಸಿಕ, ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯ ಪರಿಣಾಮದಿಂದ ಉಂಟಾಗಬಹುದಾದ ಒಂದು ‘ಭಾಷಿಕ ಮನಸ್ಥಿತಿ’ ಅಥವಾ ‘ಭಾಷಿಕ ಪರಿಭಾವನೆಗಳು’ ಎನ್ನಲಿಕ್ಕೆ ಅಡ್ಡಿಯಿಲ್ಲ. ಭಾರತದಂತಹ ಬಹುಭಾಷಾ ಸಂದರ್ಭದಲ್ಲಿ ಯಾವುದೇ ನುಡಿಯ ಇತಿಹಾಸ ಅಥವಾ ಪರಂಪರೆಯ ನೆಲೆಗಳನ್ನು ಗುರುತಿಸುವ ಬಗೆಗಳು ಒಂದು ಸ್ಪಷ್ಟವಾದ ವಿಭಾಜೀಕರಣದಿಂದ (ಡೈಕಾಟಾಮೈಜೇಶನ್) ರೂಪಗೊಳ್ಳುತ್ತವೆ. ಅವುಗಳೆಂದರೆ, ‘ಯಜಮಾನ್ಯ ನುಡಿಗಳು’ ಮತ್ತು ‘ಅಧೀನ ನುಡಿಗಳು’ ಎಂದು ಗುರುತಿಸಲಾಗಿದೆ.
ಹಾಗೂ ಈ ವಿಂಗಡನೆಯೇ ಮಾರ್ಗ ಹಾಗೂ ದೇಸಿ ಪರಂಪರೆಗೆ ಕಾರಣವಾಗಿವೆ ಎಂಬುದು ಗಮನಾರ್ಹ. ಇಂತಹ ಉದ್ದೇಶಗಳೇ ಯಾವುದೆ ಒಂದು ಭಾಷೆಗೆ ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮಹತ್ವ ಕಲ್ಪಿಸುತ್ತವೆ ಎಂಬ ಅಸಡ್ಡೆಯ ವಾದಗಳಿಗೇನು ಕಮ್ಮಿಯಿಲ್ಲ. ನುಡಿಯ ಇಂತಹ ಒಲವು ಮತ್ತು ಧೋರಣೆಯಿಂದ ಕನ್ನಡ ಸೊಲ್ಲರಿಮೆ, ಛಂದಸ್ಸು, ಶಬ್ದಕೋಶ, ಕಾವ್ಯಮೀಮಾಂಸೆ, ಸಾಮಾಜಿಕ ಶಾಸ್ತ್ರಗಳು ಮುಂತಾದವುಗಳನ್ನು ರೂಪಿಸಿದ ಪಂಡಿತರ ಒಲವು ಮತ್ತು ಧೋರಣೆ ಸಂಸ್ಕೃತದ ಮೇಲಿನ ಮೋಹದಿಂದಲೇ ಉಂಟಾಗಿದ್ದರಿಂದ ಅವರು ಸಂಸ್ಕೃತಕ್ಕೆ ಮಾತ್ರ ಸೀಮಿತವಾಗಿದ್ದರು.
ಎತ್ತುಗೆಗಾಗಿ “ಬ್ರಾಹ್ಮೀ ಲಿಪಿಯನ್ನು ಕನ್ನಡಕ್ಕೆ ಅಳವಡಿಸಿದ ಪಂಡಿತರು ಸಂಸ್ಕೃತದಿಂದ ಎರವಲಾಗಿ ಪಡೆದ ಪದಗಳನ್ನು ಹೆಚ್ಚುಕಡಿಮೆ ಸಂಸ್ಕೃತದಲ್ಲಿರುವ ಹಾಗೆಯೇ ಬರೆಯಬೇಕೆಂಬ ನಿಯಮವನ್ನು ಮಾಡಿಕೊಂಡಿದ್ದರು. ಹೀಗೆ ಮಾಡಲು ಅವರಿಗೆ ಸಂಸ್ಕೃತದ ಮೇಲಿದ್ದ ಕುರುಡು ಅಭಿಮಾನವೇ ಕಾರಣ. ಆ ನಿಯಮದಿಂದ ಕನ್ನಡಕ್ಕೆ ಯಾವ ಪ್ರಯೋಜನವೂ ಇಲ್ಲ” (ಡಿ.ಎನ್.ಎಸ್. ಭಟ್: ದೇಶಕಾಲ: ಸಂ: 15:2008). ಇಂತಹ ಕುರುಡು ಅಭಿಮಾನವು ಪ್ರತಿಯೊಂದು ನುಡಿಗೂ ಅದರದೇ ಆದ ಭಾಷಿಕ ರಚನಾ ನಿಯಮ ಮತ್ತು ಮೂಲತತ್ವಗಳು ಇರುತ್ತವೆ ಅನ್ನುವ ದಿಟವನ್ನೇ ಮರೆಮಾಚುತ್ತವೆ.
ಈ ಭಾಷಿಕ ಅಪಾಯಗಳೇ ಇವತ್ತಿನ ಕನ್ನಡದ ಬರಹ ಮತ್ತು ನುಡಿಯ ನಡುವೆ ಕಂದರವನ್ನು ಹುಟ್ಟಸಿವೆ. ಈ ಧೋರಣೆಗಳನ್ನು ಸರಿಪಡಿಸುವ ಅಥವಾ ಕನ್ನಡದ ಮೂಲತತ್ವ ಮತ್ತು ವಿಕಲ್ಪಗಳನ್ನು ಗುರುತಿಸುವ ಇರಾದೆಯೂ ಇಲ್ಲದೆ ಹೋದದ್ದು ಕನ್ನಡದಂತ ದೇಸಿ ಭಾಷೆಗಳಿಗೂ ಒಂದು ವ್ಯಾಕರಣವಿದಿಯೇ! ಎನ್ನುವ ಲೇವಡಿ ಹೇಳಿಕೆಯನ್ನು ಬಹಳ ತಾತ್ವಿಕ ಪೋಷಾಕಿನಲ್ಲಿ ಹೇಳುವ ಸಂಸ್ಕೃತ ವಿದ್ವಾಂಸರಿಗೇನು ಕಮ್ಮಿಯಿಲ್ಲ. ಈ ಮಾತನ್ನು ಡಿವಿಜಿಯವರು ಹೇಳಿದರೆಂದು ತಮ್ಮ ಹೊತ್ತಿಗೆಯಲ್ಲಿ ಶ್ರೀ ವಿದ್ವಾನ್ ರಂಗನಾಥ ಶರ್ಮಾ (2000:ವ್ಯಾಕರಣಶಾಸ್ತ್ರ) ನಮೂದಿಸಿದ್ದಾರೆ.
ಶರ್ಮಾ ಅವರೂ ಕೂಡ ಇದೇ ಚಿಂತನಾ ವಲಯಕ್ಕೆ ಸೇರಿದವರು ಎಂಬುದು ಗಮನಾರ್ಹ. ಒಂದು ಭಾಷೆಯ ಅಸ್ತಿತ್ವವನ್ನು ಇಂತಹ ಉಡಾಫೆಯ ಗ್ರಹಿಕೆಗಳ ಮೂಲಕ ನಿರ್ನಾಮಗೊಳಿಸುವ ಕ್ರಮ ದಿಟವಾಗಿಯೂ ಶೋಚನಿಯ ಸ್ಥಿತಿ ಎಂದೇ ಹೇಳಬೇಕು. ಈ ನಿಲವು ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ನಿಮಗೂ ಶಾರೀರಿಕ ಆಕೃತಿ ಮತ್ತು ಸಂರಚನೆ ಇದಿಯೇ ಎಂದು ಬಾಲಿಶವಾಗಿ ಕೇಳಿದಂತಿದೆ. ಈ ಧೋರಣೆಗಳೇ ಭಾಷಾನೀತಿ ಹಾಗೂ ಯೋಜನೆಯನ್ನು ರೂಪಿಸುವ ಪ್ರಭುತ್ವ ಮತ್ತು ವಿದ್ವಾಂಸರ ಮಾನದಂಡಗಳಾಗಿ ರೂಪಗೊಂಡಾಗ, ಆ ಭಾಷಾನೀತಿ ಮತ್ತು ಯೋಜನೆಗಳು ಸಹಜವಾಗಿಯೇ ತಾರತಮ್ಯದ ನೆಲೆಯಿಂದ ಕೂಡಿರುತ್ತವೆ.
ಈ ಕಾರಣಗಳಿಂದಲೇ ಸಾಮಾನ್ಯವಾಗಿ ನಮ್ಮ ಶಾಲೆಗಳಲ್ಲಿ ಕಲಿಸುವ ‘ಸೊಲ್ಲರಿಮೆ/ವ್ಯಾಕರಣ’ ಎಂತಹದು? ಎನ್ನುವುದನ್ನು ಪತ್ತೆಹಚ್ಚಿ ನೋಡಿದಾಗ, ಅದರ ಒಳ ಉದ್ದೇಶಗಳು ಇಲ್ಲವೇ ಹುನ್ನಾರಗಳು ನಿಚ್ಚಳವಾಗುತ್ತವೆ. ಇದು ಸಂಸ್ಕೃತ ವ್ಯಾಕರಣ ನಿಯಮಗಳನ್ನು ಕನ್ನಡಕ್ಕೆ ಒಗ್ಗಿಸಿ ಕನ್ನಡ ರಚನೆಯ ನೆಲೆಗಳನ್ನು ಅರ್ಥೈಸುವ ಮಾದರಿಯ ಹಿಂದಿನ ಉದ್ದೇಶ ಸಂಸ್ಕೃತವನ್ನು ಸಂಗೋಪಿಸುವುದಾಗಿದೆ ಹಾಗೂ ಆ ಮೂಲಕ ಅಧಿಕಾರ ನಂಟಸ್ತಿಕೆಯ ವಲಯಗಳನ್ನು ಹಾಗೇ ಉಳಿಸಿಕೊಳ್ಳುವ ಬಗೆಯೂ ಆಗಿದೆ.
ಇದನ್ನೆ ಡಿ.ಎನ್.ಎಸ್. ಭಟ್ ಅವರು, “ಕನ್ನಡಿಗರ ಮಾತಿನಲ್ಲಿ ಸಂಸ್ಕೃತಕ್ಕಿಂತ ತೀರ ಬೇರೆಯಾಗಿರುವ ಸೋಲ್ಲರಿಮೆಯ (ವ್ಯಾಕರಣ) ನಿಯಮಗಳು ಬಳಕೆಯಾಗುತ್ತವೆ. ಇವನ್ನೇ ನೇರವಾಗಿ ಕನ್ನಡದ ಉದಾಹರಣೆಗಳನ್ನು ಕೊಟ್ಟು ವಿವರಿಸಿದಲ್ಲಿ ಅವು ಕನ್ನಡಿಗರಿಗೆ ಅರ್ಥವಾಗದ ಕಗ್ಗಂಟೆAದು ಅನಿಸಲಾರದು. ಅಂತಹ ವಿವರಣೆ ಕುತೂಹಲಕಾರಿಯೂ ಆಗಬಲ್ಲದು” (ಮಾತಿನ ಒಳಗುಟ್ಟು:ಪು: 2008) ಈ ಮಾತುಗಳು ಕನ್ನಡಿಗರ ಭಾಷಿಕ ಪ್ರಜ್ಞೆಯ ಪ್ರತಿಪಾದನೆಯಾಗಿವೆ.
ಕನ್ನಡದ ಸಾಂಪ್ರದಾಯಿಕ ವ್ಯಾಕರಣ ರೂಪಗೊಂಡ ಬಗೆಗೂ ಆಧುನಿಕ ವ್ಯಾಕರಣ ರಚನೆಯ ನಡುವೆ ದೊಡ್ಡ ಕಂದರವೊAದು ನರ್ಮಾಣವಾಗಿಬಿಟ್ಟಿದೆ. ಸಂಸ್ಕೃತ ಮತ್ತು ಕನ್ನಡದ ನಡುವಿನ ಭಾಷಿಕ ನಂಟಸ್ತಿಕೆ ನಮಗೆ ಇಂದು ಪ್ರಸ್ತುತವಲ್ಲ. ಇಂತಹ ಭಾಷಿಕ ನೆಲೆಯೂ “ಸಂಸ್ಕೃತದ ಆರಾಧನ ನೆಲೆ”ಯಿಂದಲೇ ರೂಪಗೊಂಡಿದ್ದರಿಂದ, ಕನ್ನಡ ಭಾಷಿಕ ನೆಲೆಗಳ ಮಂಡನೆಯ ಕ್ರಮ ಕನ್ನಡ ಪರಂಪರೆಯಲ್ಲಿ ಕಾಣಿಸುತ್ತದೆ.
ಸಂಸ್ಕೃತ ವ್ಯಾಕರಣಕ್ಕೂ ಮತ್ತು ಕನ್ನಡ ವ್ಯಾಕರಣ ಪರಂಪರೆ ರೂಪಗೊಂಡ ಬಗೆಗೂ ಯಾವುದೆ ಸೈದ್ಧಾಂತಿಕ ಉದ್ದೇಶ ಇಲ್ಲದೆ ಹೋಗಿದ್ದರೆ, ಕನ್ನಡ ವ್ಯಾಕರಣವನ್ನು ಸಂಸ್ಕೃತದ ಚೌಕಟ್ಟಿನಲ್ಲಿ ರೂಪಿಸಬೇಕೆಂಬ ಮನಸ್ಥಿತಿಗೆ ಏನು ಕಾರಣ? ಎನ್ನುವ ಪ್ರಶ್ನೆಗೆ ಮಹತ್ವ ಬರುತ್ತದೆ. ಆಧುನಿಕ ಭಾಷಾತತ್ವಶಾಸ್ತ್ರೀಯ ನೆಲೆ ಮತ್ತು ಪರಿಕಲ್ಪನೆಗಳಿಗೆ ಅನುಗುಣವಾಗಿ ಕನ್ನಡ ವ್ಯಾಕರಣವನ್ನು ರೂಪಿಸುವ ಹೊಂದಾಣಿಕೆಯ ಕ್ರಮ ಯಾಕೆ ಸಾಧ್ಯವಾಗಿಲ್ಲ ಅನ್ನುವುದು ಕೂಡ ಮಹತ್ವದ ಪ್ರಶ್ನೆಯೇ ಆಗಿದೆ.
ಈಗ ಕನ್ನಡದ ವ್ಯಾಕರಣವನ್ನು ಪುರ್ರಚಿಸಬಹುದಾದ ಸಾಧ್ಯತೆಯ ಆಲೋಚನೆಯ ಕ್ರಮವನ್ನು (ಎತ್ತುಗೆಗಾಗಿ ಕೆ. ವಿ. ನಾರಾಯಣ ಹಾಗೂ ಡಿ.ಎನ್.ಎಸ್. ಭಟ್ ಅವರನ್ನು ಹೆಸರಿಸಬಹುದು) ಸಂಸ್ಕೃತದ ಮೇಲಿನ ದ್ವೇಷ ಹಾಗೂ ಕನ್ನಡದ ಏಳ್ಗೆಯನ್ನು ವಿರೋಧಿಸುವ ಬಗೆಯೆಂದು ಬಿಂಬಿಸಲಾಗಿದೆ. ಕೆವಿಎನ್ ಹಾಗೂ ಡಿಎನ್ಎಸ್ ಭಟ್ ಅವರುಗಳ ಆಲೋಚನಾ ಕ್ರಮವೂ ಕನ್ನಡ ನುಡಿಯ ಕಸುವಿನ ಮೇಲಿರುವ ನಂಬಿಕೆಯನ್ನುವುದು ಸಂಸ್ಕೃತಪರ ವಕಾಲತ್ತುವಹಿಸಿ ಮಾತ್ನಾಡುವವರಿಗೆ ಯಾಕೆ ಅರ್ಥವಾಗುತ್ತಿಲ್ಲ.
ನುಡಿಯ ಸ್ವಾಯತ್ತತೆಯನ್ನು ಮರುಪ್ರತಿಪಾದಿಸುವ ಬೇಡಿಕೆಗಳು ಆಯಾ ಸಮುದಾಯದ ಸಾಮಾಜಿಕ, ರಾಜಕೀಯ ನೆಲೆಗಳಿಂದ ರೂಪಗೊಳ್ಳಬೇಕಾದ ಅಗತ್ಯವಿದೆ ಎನ್ನುವುದು ಸ್ಪಷ್ಟ. ಇದಕ್ಕಿಂತ ಹೆಚ್ಚಾಗಿ, ಭಾಷಾ ಯೋಜನಕಾರರು ಒಂದು ನುಡಿ ಸಮುದಾಯಕ್ಕೆ ತನ್ನ ಅಂತರ್ಗತ ಭಾಷಿಕ ಪ್ರಜ್ಞೆಯನ್ನು ತನ್ನ ಸೊಲ್ಲರಿಮೆ/ವ್ಯಾಕರಣ ಮತ್ತು ಸಾಹಿತ್ಯದಲ್ಲಿ ಕ್ರೂಢೀಕರಿಸಿಕೊಳ್ಳುವ ಸ್ವಾತಂತ್ರ್ಯವನ್ನು ದಕ್ಕಿಸಿ ಕೊಡಬೇಕು.
ಭಾಷೆಯ ಸಾಮಾಜಿಕ–ರಾಜಕೀಯ ಅಂತಸ್ತು ಸ್ಥಾವರವಲ್ಲ. ಅದು ಬದಲಾವಣೆಯ ಹೊಣೆಯಾಗಿರುತ್ತೆ. ಏಂಕೆಂದರೆ, ಸಮಾಜ ಮತ್ತು ಸಾಮಾಜಿಕ ವ್ಯವಸ್ಥೆ ಚಲನಶೀಲವಾದದ್ದು. ಪ್ರಾಚೀನ ಕಾಲದಿಂದಲೂ ಭಾರತ ಬಹುಭಾಷಿಕ ಸನ್ನಿವೇಶ ಆದರೆ ಈ ಭಾಷೆಗಳ ನಡುವಿನ ಭಾಷಿಕ ಅಂತಸ್ತು ಕಾಲದೇಶಕ್ಕೆ ಅನುಗುಣವಾಗಿ ಬದಲಾಗುತ್ತಿವೆ. ಈ ಚಲನಶೀಲತೆಯು ಭಾರತದಲ್ಲಿಯ ಭಾಷಿಕ ಬಹುಳತೆಯ ಪ್ರಾಮುಖ್ಯತೆಯ ಲಕ್ಷಣವಾಗಿದೆ. ಭಾಷೆಯ ಸಾಮಾಜಿಕ, ಸಾಂಸ್ಕೃತಿಕ ಬದಲಾವಣೆಯ ನಡುವಣ ನಂಟಸ್ತಿಕೆಗಳು ನುಡಿಯ ಬಹುಳತೆಯನ್ನು ನೆಲೆಗೊಳಿಸುವ ಸಾಧ್ಯತೆಗಳಲ್ಲಿ ಹಲವು ಆಯಾಮಗಳು ಸೇರಿಕೊಂಡಿವೆ.
ಮುಖ್ಯವಾಗಿ, ಭಾರತೀಯತೆ ಎನ್ನುವ ತಿಳುವಳಿಕೆ ಕೇವಲ ಯಾವುದೇ ನುಡಿಯ ಮೂಲಕ ಗುರುತಿಸಿಕೊಂಡ ಜನಸಮುದಾಯಗಳ ಒಂದು ರಾಷ್ಟçವಲ್ಲ. ಆದ್ದರಿಂದ ಇವತ್ತೀನ ಆಧುನಿಕ ಸಂವಿಧಾನ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಈ ವೈವಿಧ್ಯತೆಯ ಗುರುತುಗಳನ್ನು ಹೇಗೆ ಕಾಣಬಹುದು ಎಂಬ ಪ್ರಶ್ನೆಯೊಂದು ಎದುರಾಗುತ್ತದೆ. ಬಹುಸಾಂಸ್ಕೃತಿಕ ಸಮೂಹಗಳ ನಂಬಿಕೆ, ಮೌಲ್ಯ, ರೂಢಿ, ಸಂವೇದನೆಗಳು ಈ ಭಾರತೀಯತೆಯ ದಿಟವಾದ ನೆಲೆಗಳಾಗಿರುವವೋ ಎನ್ನುವ ಸಂದೇಹ ಹುಸಿಯಾಗಿಲಾರದು.
ಆದರೆ ಪುರಾಣ ಮತ್ತು ಮಹಾಕಾವ್ಯಗಳು ರೂಪಿಸಿದ ಸಾಂಸ್ಕೃತಿಕ ವಿವೇಕ, ಮೌಲ್ಯ ಮತ್ತು ಸಂವೇದನೆಗೆ ಮೂಲ ಸಂಸ್ಕೃತ ಭಾಷೆ ಎಂಬ ಹುಸಿ ನಂಬಿಕಯೂ ಕನ್ನಡದಂತಹ ಇತರೆ ನುಡಿಗಳ ಅಸ್ತಿತ್ವವನ್ನು ಶೂನ್ಯವಾಗಿಸಿದೆ. ಇದನ್ನು ಹೊರತುಪಡಿಸಿಯೂ, ಯೋಚಿಸಿ ನೋಡಿದರೆ ಬಹುಮಂದಿಯರನ್ನು ಹಾಗೂ ಎಲ್ಲ ವರ್ಗದ ಮಹಿಳೆಯರನ್ನು ಒಳಗೊಂಡ ಸಂಸ್ಕೃತದ ಯಾವ ಪುರಾಣ ಇಲ್ಲವೇ ಕಾವ್ಯಗಳು ಇರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ.
ನಿರಂತರವಾಗಿ ಜನಸಾಮನ್ಯರನ್ನು ಸಾಮಾಜಿಕವಾಗಿ ನಿಶಿದ್ಧಿಸುತ್ತ ಹಾಗೂ ಶ್ರೇಣೀಕರಿಸುತ್ತು ಬಂದಿರುವ ಕ್ರಮಗಳೇ ಸಂಸ್ಕೃತ ಗುರಿಗಳು ಆಗಿರುತ್ತವೆ. ಈ ಪುರಾಣ ಮತ್ತು ಮಹಾಕಾವ್ಯಗಳು ಸಾಕ್ಷರತೆಯ ಹದ್ದುಮೀರಿ ಜನಸಾಮನ್ಯರ ಬದುಕಿನಲ್ಲಿ ಇಂದಿಗೂ ಹಾಸುಹೊಕ್ಕಾಗಿವೆ. ದಿಟ ಸಾಹಿತ್ಯಕ್ಕೂ ಸಾಕ್ಷರತೆಗೂ ಯಾವುದೇ ಬಗೆಯ ನೇರವಾದ ನಂಟಸ್ತಿಕೆಯಿಲ್ಲ. ಆದರೆ ಸಂಸ್ಕೃತ ನುಡಿಯ ಪರವಾಗಿ ವಕಾಲತ್ತು ವಹಿಸುವ ವರ್ಗಗಳೇ ಸಾಹಿತ್ಯ ಹಾಗೂ ಸಾಕ್ಷರತೆಗೆ ನೇರೆವಾದ ನಂಟನ್ನು ಆರೋಪಿಸಿವೆ.
ಇದಕ್ಕೆ ಕಾರಣ ಜನಸಾಮನ್ಯರ ನುಡಿಯಲ್ಲಿ ಮೌಖಿಕ ಪರಂಪರೆಯಾಗಿ ರೂಪುಗೊಂಡ ಕಾವ್ಯಗಳಿಗೂ ಬರಹದ ಕಾವುಗಳಿಗೂ ಅಂತರಗಳನ್ನು ಹುಟ್ಟುಹಾಕುವ ಹುನ್ನಾರದಿಂದ ಇಂತಹ ಬೆಳವಣಿಗೆಗಳು ಮುಂಚೂಣೆಗೆ ಬಂದಿವೆ. ಇಂತಹ ಬಿಕ್ಕಟ್ಟುಗಳಲ್ಲಿಯೂ ಮೌಖಿಕ ಪರಂಪರೆಯ ನಂಬಿಕೆಯನ್ನು ಶತಮಾನದುದ್ದಕ್ಕೂ ರವಾನಿಸುತ್ತ ಬಂದಿರುವುದೇ ದೇಶಿ ನುಡಿಗಳ ಚಲನಶೀಲತೆಯನ್ನು ತೋರಿಸುತ್ತದೆ. ಇಂತಹ ಮೌಖಿಕ ಪರಂಪರೆಗಳು ಬೇರೆ ಬೇರೆ ನುಡಿಗಳಲ್ಲಿ ಬರಹ ರೂಪಗಳಲ್ಲಿ ಹೊರಬಂದು, ವ್ಯಾಖ್ಯಾನಗಳು ಮಹಾಕಾವ್ಯಗಳ ಸಂವೇದನೆಗಳಾಗಿ ಸಾಮಾಜಿಕ ಭಿನ್ನತೆಗೆ ಕಾರಣವಾಗಿವೆ. ಮಾರ್ಗದ ಆವರಣದಲ್ಲಿ ಸಂಚರಿಸಿ ಬರಹ ನುಡಿಯ ಚಹರೆಗಳಾಗಿ ಮಾರ್ಪಟ್ಟಿರುತ್ತವೆ.
ಇಂತಹ ಐತಿಹಾಸಿಕ ಆಗು ಹೋಗುಗಳ ಸಂಚಾರವು ಸಂಸ್ಕೃತದಿಂದ ಇತರೆ ನುಡಿಗಳಿಗೆ ಹಾಗೂ ಮೌಖಿಕದಿಂದ ಬರಹಕ್ಕೆ ರೂಪಾಂತರಗೊಂಡಿದ್ದರಿಂದ, ಅಡುನುಡಿಯ ರೂಪ ಹಾಗೂ ಅದರ ವಸ್ತವಿಷಯಗಳು ಹೇಗೆ ಆಯಾ ನುಡಿಯಿಗರಿಗೇ ಹೊರತಾದ ನೆಲೆಗಳನ್ನು ಪಡೆದುಕೊಂಡವು ಎಂಬುದನ್ನು ಇಲ್ಲಿ ಕಾಣಬಹುದು. ದಿಟವಾಗಿಯೂ ಈ ನಿಲುವುಗಳನ್ನು ಸಾಂಸ್ಕೃತಿಕ ಅಪಾಯಗಳನ್ನು ಹುಟ್ಟುಹಾಕಿದ ನಿಲುವುಗಳಂದೇ ಹೇಳಬೇಕು.
ಯಾರಾದರೂ ಈ ಪುರಾಣ ಇಲ್ಲವೇ ಕಾವ್ಯಗಳ ವಸ್ತವಿಷಯವನ್ನು ಅರ್ಥೈಸಿಕೊಳ್ಳಬೇಕೆಂದರೆ ಸಂಸ್ಕೃತವನ್ನೇ ಕಲಿಯಬೇಕಾದ ಅಗತ್ಯವಿಲ್ಲ. ಹಾಗಾಗಿ ಪದಕೋಶದ ಮೂಲಕವೇ ಲೋಕಗ್ರಹಿಕೆಗಳನ್ನು ಪಲ್ಲಟಗೊಳಿಸುವ ಹುನ್ನಾರಗಳು ನಡೆಯುತ್ತಲೇ ಬಂದಿವೆ. ಹಾಗಾಗಿ ಕೇವಲ ಪದಕೋಶವನ್ನು ಪಡೆದುಕೊಳ್ಳುವ ಭಾಷೆಯಾಗದೇ ಆಯಾ ಭಾಷೆಯ ಮೂಲಕ ದಕ್ಕುವ ಅನುಭವವನ್ನೂ ಪಲ್ಲಟಗೊಳಿಸುವ ವಿದ್ಯಮಾನವಾಗಿದೆ. ಅದಕ್ಕಾಗಿ ಈ ಪ್ರಕ್ರಿಯೆಯಲ್ಲಿ ಬೇರೆ ಭಾಷಾರೂಪ/ಪದಗಳನ್ನು ಪಡೆದುಕೊಳ್ಳುವ ಬಗೆಯನ್ನು ಪ್ರತಿರೋಧಿಸುವ ನಿಲುವುಗಳು ಎಚ್ಚರಗೊಳ್ಳುವ ಅಗತ್ಯವಿದೆ.
ಆದರೆ ವಸ್ತುವಿಷಯವನ್ನು ಪಡೆಯುವ ಬಗೆಯಲ್ಲಿ ನುಡಿ ಕೇವಲ ಮಧ್ಯವರ್ತಿ ಮಾತ್ರವಾಗದೇ, ಅನುಭವವನ್ನು ಕಸಿ ಮಾಡುವ ನೆಲೆಯೂ ಆಗಿರುತ್ತದೆ. ಹಾಗಾಗಿ ನುಡಿ ಎನ್ನುವುದು ಒಂದ ತಟಸ್ಥವಾದ ವಿದ್ಯಮಾನವಲ್ಲ.
ಸಣ್ಣ-ಪುಟ್ಟ ನುಡಿಗÀಳಿಗೆ ಸಂಸ್ಕೃತದೊಂದಿಗೆ ನೇರ ಸಂಪರ್ಕ ಸಾಧ್ಯವಾಗದೆ ಇದ್ದಾಗ ಮತ್ಯಾವುದೆ ನುಡಿಯಿಂದ ಪಡೆದುಕೊಳ್ಳುವ ಸಾಧ್ಯತೆ ಇದೆ.
ಇಂತಹ ನೆಲೆಗಳು ಮೊದಲಾಗುವುದು ಕನ್ನಡದಂತಹ ನುಡಿಗಳಿಂದ, ಸಂಸ್ಕೃತ ಇಲ್ಲವೇ ಇಂಗ್ಲಿಶಿನಂತಹ ನುಡಿಗಳು ಹುಟ್ಟುಹಾಕುವ ಮತ್ತೊಂದು ಬಗೆಯ ಅಪಾಯಗಳು ಇವಾಗಿವೆ. ಈ ಪ್ರಕ್ರಿಯೆಯು ಅಧಿಕಾರದ ನಂಟಸ್ತಿಕೆಯ ಬಗೆಗಳ ಸ್ವರೂಪವನ್ನು ಅರಿಯುವ ಬೇರೆ ಬೇರೆ ಮಾದರಿಗಳು ಎಂದು ಹೇಳಬಹುದು. ಹೌದು ಇಂತಹ ಸಾಂಸ್ಕೃತಿಕ ತಿಳವಳಿಕೆಗಳು ಹಾಗೂ ಸಂವೇದನೆಗಳನ್ನು ಯಾವುದೇ ಒಂದು ನುಡಿಯಿಂದ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ವಾದಕ್ಕೆ ಅವಕಾಶವೇ ಇಲ್ಲ.
ಏಕೆಂದರೆ ಚರಿತ್ರೆಯುದ್ದಕ್ಕೂ ಇಂತಹ ಬೆಳವಣಿಗೆಗಳು ನಡೆದಿರುವುದಕ್ಕೆ ಪುರಾವೆಗಳಿವೆ. ಅಧಿಕಾರದ ಶ್ರೇಣಿಕರಣದಲ್ಲಿ ಸಂಸ್ಕೃತ ಕನ್ನಡದ ಮೇಲಿದ್ದರೇ, ಕನ್ನಡವು ತುಳು, ಕೊಡವ, ಲಂಬಾಣಿ ನುಡಿಗಳ ಮೇಲಿದೆ. ಇವೆರಡೂ ನುಡಿಗಳು ಯಜಮಾನ್ಯ ನುಡಿಗಳೇ ಆದರೆ ಸಂಸ್ಕೃತ ಮತ್ತು ಕನ್ನಡ ನುಡಿಗಳನ್ನು ಹೋಲಿಸಿದರೆ ಸಂಸ್ಕೃತವು ಯಜಮಾನ್ಯ ನುಡಿಯಾದರೆ ಕನ್ನಡವು ಅಧೀನ ನುಡಿಯಾಗಿರುತ್ತದೆ.
ಇದಕ್ಕೆ ಸಾಕ್ಷಿಯಾಗಿ ಶಲ್ಡನ್ ಪೊಲಾಕ್ ಅವರ ಮಾತುಗಳನ್ನು ಗಮನಿಸಬಹುದು, “ಕನ್ನಡಕ್ಕೆ ಸಂಸ್ಕೃತದ ಜ್ಞಾನಶಾಸ್ತ್ರೀಯ ಮನ್ನಣೆ ದೊರಕದೇ ಹೋಗಿದ್ದರೆ ಮತ್ತು ಭಾಷಾಪರಿಶೀಲನೆಯ ಉಪಕರಣಗಳು (ಅಂದರೆ, ಲಕ್ಷಣ ಗ್ರಂಥಗಳು) ಲಭ್ಯವಾಗದೇ ಹೋಗಿದ್ದರೆ ಅದಕ್ಕೆ ಈಗ ದೊರಕಿದ ಪ್ರತಿಷ್ಠೆಯನ್ನು ಸಾಧಿಸಲಾಗುತ್ತಿರಲ್ಲಿ” (ಶೆಲ್ಡನ್ ಪೊಲಾಕ್: 200: ಪುಟ:11). ಎನ್ನುವ ಈ ವಾದಕ್ಕೆ ಯಾವ ಪ್ರಾಮುಖ್ಯತೆ ಇಲ್ಲ ಎನ್ನುವುದು ನಿಚ್ಚಳವಾಗಿದ್ದರೂ, ಈ ವಾದವನ್ನು ನಂಬುವ ಹಾಗೂ ನಂಬಿಸುವ ಬಗೆಗಳು ಅಸ್ತಿತ್ವದಲ್ಲಿವೆ.
ದಿಟ ಇವು ಎಲ್ಲವೂ ಸಾಂಸ್ಕೃತಿಕ ರಾಜಕಾರಣದ ಪರಿಣಾಮಗಳೇ ಎನ್ನುವುದರಲ್ಲಿ ಯಾವ ಅನುಮಾನವಿಲ್ಲ. ಇತಿಹಾಸವನ್ನು ಮತ್ತೆ ಮತ್ತೆ ಮರುಪ್ರಶ್ನಿಸುವ ತಾತ್ವಿಕತೆ ನಿರಂತರ ಮುಂಚೂಣಿಗೆ ಬರುತ್ತಲೇ ಇದೆ. ಕಾರಣ ಇತಿಹಾಸದ ಹೆಚ್ಚಿನ ನಿರೂಪಣೆಗಳು ಏಕಪಕ್ಷೀಯ ತೀರ್ಮಾನದಿಂದ ರೂಪುಗೊಂಡಿರುತ್ತವೆ. ಇಂತಹ ನಿರ್ಧಾರಕ್ಕೆ ಸಾಕಷ್ಟು ಕಾರಣಗಳನ್ನು ಪಟ್ಟಿ ಮಾಡುವ ಪರಿಪಾಟವು ಜೊತೆ ಜೊತೆಗೇನೆ ಬೆಳೆದುಬಂದಿವೆ. ಯಾವುದೆ ಸಮುದಾಯ ಇಲ್ಲವೇ ವರ್ಗದ ಶಿಕ್ಷಣ, ನುಡಿ ಹಾಗೂ ಧರ್ಮದ ಮೇಲೆ ತನ್ನ ಪ್ರಾಬಲ್ಯ ಮತ್ತು ಯಜಮಾನಿಕೆಯನ್ನು ಸಾಧಿಸಿರುವುದೇ ಇದಕ್ಕೆ ಕಾರಣ.
ಪ್ರಭುತ್ವಶಕ್ತಿ ಅಥವಾ ಅಧಿಕಾರ ಕೇಂದ್ರಗಳು ರೂಪಿಸುವ ಸಮಾಜ ವ್ಯವಸ್ಥೆಗೆ ಪ್ರತಿರಚನೆಯಾಗಿ ಮನುಷ್ಯಸಮಾಜದಲ್ಲಿ ಸಾಹಿತ್ಯ ಇಲ್ಲವೇ ಸೃಜನಶೀಲ ಪ್ರಕ್ರಿಯೆಗಳು ಕಾಣಿಸಿಕೊಂಡಿವೆ. ಆದರೆ ಎಲ್ಲ ಪ್ರತಿರಚನೆಗಳೂ ವ್ಯವಸ್ಥೆಯ ಅಂಗವಾಗಿ ರೂಪಗೊಂಡಿದ್ದನ್ನು ನಾವು ಚರಿತ್ರೆಯಲ್ಲಿ ಕಾಣುತ್ತೇವೆ ಎಂಬ ವಾದವು ಮುಂಚೂಣೆಯಲ್ಲಿದೆ. ಈ ವಾದಕ್ಕೆ ಪಂಪ, ರನ್ನ, ಬಸವಣ್ಣ, ಕುಮಾರವ್ಯಾಸ ಮುಂತಾದವರನ್ನು ಸಾಕ್ಷಿಯಾಗಿ ಬಳಸಿಕೊಳ್ಳುತ್ತಾರೆ.
ಕನ್ನಡ ಸೃಜನಶೀಲ ಕ್ರಿಯೆಯಲ್ಲಿ ಅಪನಂಬಿಕೆಯನ್ನು ಹೊಂದಿದವರು ಹೀಗೆ ಮಾತಾಡುತ್ತಾರೆ ಎಂಬ ಮತ್ತೊಂದು ತುದಿಯ ವಾದವು ಚಾಲ್ತಿಯಲ್ಲಿದೆ. ಆದರೆ ಈ ಎಲ್ಲ ಸೃಜನಶೀಲ ಸ್ಪೋಟಗಳು ವ್ಯವಸ್ಥೆಯ ಭಾಗವಾಗಿಯೇ ವ್ಯವಸ್ಥೆ ಮತ್ತು ಅಧಿಕಾರಗಳಿಗೆ ಬಹಳ ಸೃಜನಾತ್ಮಕವಾಗಿ ಪ್ರತಿರೋಧವನ್ನು ಒಡ್ಡಿರುವುದನ್ನು ಅಲ್ಲಗಳಿಯುವಂತಿಲ್ಲ. ಈ ಸೃಜನಾತ್ಮಕ ಪ್ರತಿಕ್ರಿಯೆಗಳು ಕನ್ನಡದ ದೇಸಿ ಪ್ರಜ್ಞೆಯನ್ನು ರೂಪಿಸುವಲ್ಲಿ ಮತ್ತು ಅದನ್ನು ನಿರಂತರವಾಗಿ ಕಾಪಾಡುವಲ್ಲಿ ಎಂತಹ ಮಹತ್ವದ ಪಾತ್ರವನ್ನು ವಹಿಸಿರುತ್ತವೆ ಎಂಬುದು ಗಮನಾರ್ಹ.
“ದೇಸಿಯೊಳ್ ಪುಗುವುದು, ಪೊಕ್ಕು ಮಾರ್ಗದೊಳೆ ತಳ್ವದು” ಇಂತಹ ಅನೇಕ ನಿಲುವುಗಳನ್ನು ಪರಸ್ಪರ ವೀರೋಧಾತ್ಮಕ ನಂಟಿನ ಬಗೆಗಳನ್ನಾಗಿ ನಮ್ಮ ಪ್ರಾಚೀನ ಕಾವ್ಯಗಳ ಓದಿನ ಸನ್ನಿವೇಶದಲ್ಲಿ ಚರ್ಚಿಸಲಾಗಿದೆ. ಇಲ್ಲವಾದರೆ ಸಂಸ್ಕೃತ ಮಹಾಕಾವ್ಯಗಳ ಅನುವಾದವೇ ಈ ಕನ್ನಡ ಕಾವ್ಯವೆನ್ನುವ ಉಡಾಫೆಯ ನಿಲುವುಗಳು ಮುಂಚೂಣೆಗೆ ಬಂದಿವೆ. ಕನ್ನಡತನ ಅನ್ನುವುದು ಅದೊಂದು ವಸ್ತುವಿನ ಚಹರೆಯಲ್ಲಿರುವಂತಹ ಸಂಗತಿಯಲ್ಲ. ಬದಲಾಗಿ ಅನುಭವಗಳ ಮೊತ್ತವನ್ನು ಇಡಿಯಾಗಿ ನಿರೂಪಿಸುವ ಇಲ್ಲವೇ ದೇಶಿಯ ಚಹರೆಗಳ ಸ್ವರೂಪದಲ್ಲಿ ಪ್ರಕಟಗೊಳ್ಳಿಸುವ ಬಗೆಗಳೂ ಆಗಿರುತ್ತವೆ.
ಹಾಗಾಗಿ ಸಾಂಸ್ಕೃತಿಕ ಬೆಳವಣಿಗೆಗಳನ್ನು ಕೇವಲ ಅಂತರ್-ವಿರೋಧ ನೆಲೆಗಳಲ್ಲಿ ಗ್ರಹಿಸದೇ, ಅವುಗಳನ್ನು ಸಾಂಸ್ಕೃತಿಕ ರಾಜಕಾರಣದ ಪ್ರತಿರಚನೆಗಳಾಗಿ ಅಭಿವ್ಯಕ್ತಗೊಂಡ ಕನ್ನಡದ ಅಸ್ಮಿತೆಯ ರೂಪಗಳು ಎಂದು ಅರಿಯಬೇಕಾದ ಜರೂರಿದೆ. ಇಂತಹ ಸಾಂಸ್ಕೃತಿಕ ಅರಿವನ್ನು ಹಾಗೂ ಸಾಂಸ್ಕೃತಿಕ-ಭಾಷಿಕ ಪ್ರತಿರಚನೆಗಳನ್ನಾಗಿ ಗುರುತಿಸದ ಕುರುಡುತನ ನಮಗೆ ಕವಿದುಕೊಂಡಿರುವುದೇ ಸಂಸ್ಕೃತ ನುಡಿಯ ರಾಜಕಾರಣದಿಂದಲೇ ಎಂದು ಹೇಳಬಹುದು.
ಕನ್ನಡದ ಅಸ್ಮಿತೆಯ ರೂಪಕವನ್ನಾಗಿಯೇ
ಗುರುತಿಸುವ ಕವಿರಾಜಮಾರ್ಗದ ಬಗೆಗಿನ ಊಹಾಪೋಹಗಳನ್ನು ಗಮನಿಸಿದರೆ ಸಂಸ್ಕೃತ ನುಡಿಯು ನೆಲೆಗೊಳಸಿದ ಸಾಂಸ್ಕೃತಿಕ ರಾಜಕಾರಣದ ಪ್ರಭಾವ ಎಷ್ಟೊಂದು ದಟ್ಟವಾಗಿತ್ತೆಂಬುದು ತಿಳಿಯುತ್ತದೆ. ಹಾಗಾಗಿ “ಕವಿರಾಜಮಾರ್ಗವೆಂಬ ಲಕ್ಷಣಗ್ರಂಥವು ಸಂಸ್ಕೃತ ಸಾಹಿತ್ಯ ಹಾಗೂ ಕಾವ್ಯಮೀಮಾಂಸೆಯ ತಿಳುವಳಿಕೆಯಿಂದ ರಚಿತವಾದ ಕೃತಿ ಎಂಬುದನ್ನು ನೆನಪಿಸಿದರೆ, ಕನ್ನಡ ಸಾಹಿತ್ಯದ ಮೊದಲ ಕಾಲ, ದಟ್ಟವಾದ ಸಂಸ್ಕೃತದ ಪ್ರಭಾವಕ್ಕೆ ಒಳಗಾದ ಕಾಲವಾಗಿತ್ತೆಂದು ಸ್ಪಷ್ಟವಾಗುತ್ತದೆ” (ಎಸ್.ಶೆಟ್ಟರ್: ಶಂತಕನಾನು: 2007:ಪು:3).
ಇಂತಹ ಪ್ರಭಾವಗಳಿಂದ ಬಿಡುಗಡೆ ಪಡೆಯಲು ಕನ್ನಡ ನಡೆಸಿದ ಹೋರಾಟಗಳು ಕನ್ನಡ ಬೆಳೆದುಬಂದ ಬಗೆಯಯನ್ನು ಬಿಡಿಸಿನೋಡಿದರೆ, ಕನ್ನಡದ ಕಸುವು ಹಾಗೂ ಸೃಜನಶೀಲತೆಯ ಆಯಾಮಗಳು ಯಾವೆಲ್ಲ ಬಿಕ್ಕಟ್ಟುಗಳನ್ನು ಮೀರಿ ನೆಲೆಗೊಳ್ಳುತ್ತ ಬಂದಿದೆ ಎಂಬ ದಿಟ ನಮ್ಮರಿವಿಗೆ ಬರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ12 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ


