Connect with us

ನೆಲದನಿ

ನುಡಿಯ ಒಡಲು – 26 | ನುಡಿ ಒಲವು ಮತ್ತು ಧೋರಣೆ

Published

on

  • ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಭಾಷಿಕ ಒಲವು ಮತ್ತು ಧೋರಣೆ ಅನ್ನುವುದು ಮಾನಸಿಕ, ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯ ಪರಿಣಾಮದಿಂದ ಉಂಟಾಗಬಹುದಾದ ಒಂದು ‘ಭಾಷಿಕ ಮನಸ್ಥಿತಿ’ ಅಥವಾ ‘ಭಾಷಿಕ ಪರಿಭಾವನೆಗಳು’ ಎನ್ನಲಿಕ್ಕೆ ಅಡ್ಡಿಯಿಲ್ಲ. ಭಾರತದಂತಹ ಬಹುಭಾಷಾ ಸಂದರ್ಭದಲ್ಲಿ ಯಾವುದೇ ನುಡಿಯ ಇತಿಹಾಸ ಅಥವಾ ಪರಂಪರೆಯ ನೆಲೆಗಳನ್ನು ಗುರುತಿಸುವ ಬಗೆಗಳು ಒಂದು ಸ್ಪಷ್ಟವಾದ ವಿಭಾಜೀಕರಣದಿಂದ (ಡೈಕಾಟಾಮೈಜೇಶನ್) ರೂಪಗೊಳ್ಳುತ್ತವೆ. ಅವುಗಳೆಂದರೆ, ‘ಯಜಮಾನ್ಯ ನುಡಿಗಳು’ ಮತ್ತು ‘ಅಧೀನ ನುಡಿಗಳು’ ಎಂದು ಗುರುತಿಸಲಾಗಿದೆ.

ಹಾಗೂ ಈ ವಿಂಗಡನೆಯೇ ಮಾರ್ಗ ಹಾಗೂ ದೇಸಿ ಪರಂಪರೆಗೆ ಕಾರಣವಾಗಿವೆ ಎಂಬುದು ಗಮನಾರ್ಹ. ಇಂತಹ ಉದ್ದೇಶಗಳೇ ಯಾವುದೆ ಒಂದು ಭಾಷೆಗೆ ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮಹತ್ವ ಕಲ್ಪಿಸುತ್ತವೆ ಎಂಬ ಅಸಡ್ಡೆಯ ವಾದಗಳಿಗೇನು ಕಮ್ಮಿಯಿಲ್ಲ. ನುಡಿಯ ಇಂತಹ ಒಲವು ಮತ್ತು ಧೋರಣೆಯಿಂದ ಕನ್ನಡ ಸೊಲ್ಲರಿಮೆ, ಛಂದಸ್ಸು, ಶಬ್ದಕೋಶ, ಕಾವ್ಯಮೀಮಾಂಸೆ, ಸಾಮಾಜಿಕ ಶಾಸ್ತ್ರಗಳು ಮುಂತಾದವುಗಳನ್ನು ರೂಪಿಸಿದ ಪಂಡಿತರ ಒಲವು ಮತ್ತು ಧೋರಣೆ ಸಂಸ್ಕೃತದ ಮೇಲಿನ ಮೋಹದಿಂದಲೇ ಉಂಟಾಗಿದ್ದರಿಂದ ಅವರು ಸಂಸ್ಕೃತಕ್ಕೆ ಮಾತ್ರ ಸೀಮಿತವಾಗಿದ್ದರು.

ಎತ್ತುಗೆಗಾಗಿ “ಬ್ರಾಹ್ಮೀ ಲಿಪಿಯನ್ನು ಕನ್ನಡಕ್ಕೆ ಅಳವಡಿಸಿದ ಪಂಡಿತರು ಸಂಸ್ಕೃತದಿಂದ ಎರವಲಾಗಿ ಪಡೆದ ಪದಗಳನ್ನು ಹೆಚ್ಚುಕಡಿಮೆ ಸಂಸ್ಕೃತದಲ್ಲಿರುವ ಹಾಗೆಯೇ ಬರೆಯಬೇಕೆಂಬ ನಿಯಮವನ್ನು ಮಾಡಿಕೊಂಡಿದ್ದರು. ಹೀಗೆ ಮಾಡಲು ಅವರಿಗೆ ಸಂಸ್ಕೃತದ ಮೇಲಿದ್ದ ಕುರುಡು ಅಭಿಮಾನವೇ ಕಾರಣ. ಆ ನಿಯಮದಿಂದ ಕನ್ನಡಕ್ಕೆ ಯಾವ ಪ್ರಯೋಜನವೂ ಇಲ್ಲ” (ಡಿ.ಎನ್.ಎಸ್. ಭಟ್: ದೇಶಕಾಲ: ಸಂ: 15:2008). ಇಂತಹ ಕುರುಡು ಅಭಿಮಾನವು ಪ್ರತಿಯೊಂದು ನುಡಿಗೂ ಅದರದೇ ಆದ ಭಾಷಿಕ ರಚನಾ ನಿಯಮ ಮತ್ತು ಮೂಲತತ್ವಗಳು ಇರುತ್ತವೆ ಅನ್ನುವ ದಿಟವನ್ನೇ ಮರೆಮಾಚುತ್ತವೆ.

ಈ ಭಾಷಿಕ ಅಪಾಯಗಳೇ ಇವತ್ತಿನ ಕನ್ನಡದ ಬರಹ ಮತ್ತು ನುಡಿಯ ನಡುವೆ ಕಂದರವನ್ನು ಹುಟ್ಟಸಿವೆ. ಈ ಧೋರಣೆಗಳನ್ನು ಸರಿಪಡಿಸುವ ಅಥವಾ ಕನ್ನಡದ ಮೂಲತತ್ವ ಮತ್ತು ವಿಕಲ್ಪಗಳನ್ನು ಗುರುತಿಸುವ ಇರಾದೆಯೂ ಇಲ್ಲದೆ ಹೋದದ್ದು ಕನ್ನಡದಂತ ದೇಸಿ ಭಾಷೆಗಳಿಗೂ ಒಂದು ವ್ಯಾಕರಣವಿದಿಯೇ! ಎನ್ನುವ ಲೇವಡಿ ಹೇಳಿಕೆಯನ್ನು ಬಹಳ ತಾತ್ವಿಕ ಪೋಷಾಕಿನಲ್ಲಿ ಹೇಳುವ ಸಂಸ್ಕೃತ ವಿದ್ವಾಂಸರಿಗೇನು ಕಮ್ಮಿಯಿಲ್ಲ. ಈ ಮಾತನ್ನು ಡಿವಿಜಿಯವರು ಹೇಳಿದರೆಂದು ತಮ್ಮ ಹೊತ್ತಿಗೆಯಲ್ಲಿ ಶ್ರೀ ವಿದ್ವಾನ್ ರಂಗನಾಥ ಶರ್ಮಾ (2000:ವ್ಯಾಕರಣಶಾಸ್ತ್ರ) ನಮೂದಿಸಿದ್ದಾರೆ.

ಶರ್ಮಾ ಅವರೂ ಕೂಡ ಇದೇ ಚಿಂತನಾ ವಲಯಕ್ಕೆ ಸೇರಿದವರು ಎಂಬುದು ಗಮನಾರ್ಹ. ಒಂದು ಭಾಷೆಯ ಅಸ್ತಿತ್ವವನ್ನು ಇಂತಹ ಉಡಾಫೆಯ ಗ್ರಹಿಕೆಗಳ ಮೂಲಕ ನಿರ್ನಾಮಗೊಳಿಸುವ ಕ್ರಮ ದಿಟವಾಗಿಯೂ ಶೋಚನಿಯ ಸ್ಥಿತಿ ಎಂದೇ ಹೇಳಬೇಕು. ಈ ನಿಲವು ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ನಿಮಗೂ ಶಾರೀರಿಕ ಆಕೃತಿ ಮತ್ತು ಸಂರಚನೆ ಇದಿಯೇ ಎಂದು ಬಾಲಿಶವಾಗಿ ಕೇಳಿದಂತಿದೆ. ಈ ಧೋರಣೆಗಳೇ ಭಾಷಾನೀತಿ ಹಾಗೂ ಯೋಜನೆಯನ್ನು ರೂಪಿಸುವ ಪ್ರಭುತ್ವ ಮತ್ತು ವಿದ್ವಾಂಸರ ಮಾನದಂಡಗಳಾಗಿ ರೂಪಗೊಂಡಾಗ, ಆ ಭಾಷಾನೀತಿ ಮತ್ತು ಯೋಜನೆಗಳು ಸಹಜವಾಗಿಯೇ ತಾರತಮ್ಯದ ನೆಲೆಯಿಂದ ಕೂಡಿರುತ್ತವೆ.

ಈ ಕಾರಣಗಳಿಂದಲೇ ಸಾಮಾನ್ಯವಾಗಿ ನಮ್ಮ ಶಾಲೆಗಳಲ್ಲಿ ಕಲಿಸುವ ‘ಸೊಲ್ಲರಿಮೆ/ವ್ಯಾಕರಣ’ ಎಂತಹದು? ಎನ್ನುವುದನ್ನು ಪತ್ತೆಹಚ್ಚಿ ನೋಡಿದಾಗ, ಅದರ ಒಳ ಉದ್ದೇಶಗಳು ಇಲ್ಲವೇ ಹುನ್ನಾರಗಳು ನಿಚ್ಚಳವಾಗುತ್ತವೆ. ಇದು ಸಂಸ್ಕೃತ ವ್ಯಾಕರಣ ನಿಯಮಗಳನ್ನು ಕನ್ನಡಕ್ಕೆ ಒಗ್ಗಿಸಿ ಕನ್ನಡ ರಚನೆಯ ನೆಲೆಗಳನ್ನು ಅರ್ಥೈಸುವ ಮಾದರಿಯ ಹಿಂದಿನ ಉದ್ದೇಶ ಸಂಸ್ಕೃತವನ್ನು ಸಂಗೋಪಿಸುವುದಾಗಿದೆ ಹಾಗೂ ಆ ಮೂಲಕ ಅಧಿಕಾರ ನಂಟಸ್ತಿಕೆಯ ವಲಯಗಳನ್ನು ಹಾಗೇ ಉಳಿಸಿಕೊಳ್ಳುವ ಬಗೆಯೂ ಆಗಿದೆ.

ಇದನ್ನೆ ಡಿ.ಎನ್.ಎಸ್. ಭಟ್ ಅವರು, “ಕನ್ನಡಿಗರ ಮಾತಿನಲ್ಲಿ ಸಂಸ್ಕೃತಕ್ಕಿಂತ ತೀರ ಬೇರೆಯಾಗಿರುವ ಸೋಲ್ಲರಿಮೆಯ (ವ್ಯಾಕರಣ) ನಿಯಮಗಳು ಬಳಕೆಯಾಗುತ್ತವೆ. ಇವನ್ನೇ ನೇರವಾಗಿ ಕನ್ನಡದ ಉದಾಹರಣೆಗಳನ್ನು ಕೊಟ್ಟು ವಿವರಿಸಿದಲ್ಲಿ ಅವು ಕನ್ನಡಿಗರಿಗೆ ಅರ್ಥವಾಗದ ಕಗ್ಗಂಟೆAದು ಅನಿಸಲಾರದು. ಅಂತಹ ವಿವರಣೆ ಕುತೂಹಲಕಾರಿಯೂ ಆಗಬಲ್ಲದು” (ಮಾತಿನ ಒಳಗುಟ್ಟು:ಪು: 2008) ಈ ಮಾತುಗಳು ಕನ್ನಡಿಗರ ಭಾಷಿಕ ಪ್ರಜ್ಞೆಯ ಪ್ರತಿಪಾದನೆಯಾಗಿವೆ.

ಕನ್ನಡದ ಸಾಂಪ್ರದಾಯಿಕ ವ್ಯಾಕರಣ ರೂಪಗೊಂಡ ಬಗೆಗೂ ಆಧುನಿಕ ವ್ಯಾಕರಣ ರಚನೆಯ ನಡುವೆ ದೊಡ್ಡ ಕಂದರವೊAದು ನರ‍್ಮಾಣವಾಗಿಬಿಟ್ಟಿದೆ. ಸಂಸ್ಕೃತ ಮತ್ತು ಕನ್ನಡದ ನಡುವಿನ ಭಾಷಿಕ ನಂಟಸ್ತಿಕೆ ನಮಗೆ ಇಂದು ಪ್ರಸ್ತುತವಲ್ಲ. ಇಂತಹ ಭಾಷಿಕ ನೆಲೆಯೂ “ಸಂಸ್ಕೃತದ ಆರಾಧನ ನೆಲೆ”ಯಿಂದಲೇ ರೂಪಗೊಂಡಿದ್ದರಿಂದ, ಕನ್ನಡ ಭಾಷಿಕ ನೆಲೆಗಳ ಮಂಡನೆಯ ಕ್ರಮ ಕನ್ನಡ ಪರಂಪರೆಯಲ್ಲಿ ಕಾಣಿಸುತ್ತದೆ.

ಸಂಸ್ಕೃತ ವ್ಯಾಕರಣಕ್ಕೂ ಮತ್ತು ಕನ್ನಡ ವ್ಯಾಕರಣ ಪರಂಪರೆ ರೂಪಗೊಂಡ ಬಗೆಗೂ ಯಾವುದೆ ಸೈದ್ಧಾಂತಿಕ ಉದ್ದೇಶ ಇಲ್ಲದೆ ಹೋಗಿದ್ದರೆ, ಕನ್ನಡ ವ್ಯಾಕರಣವನ್ನು ಸಂಸ್ಕೃತದ ಚೌಕಟ್ಟಿನಲ್ಲಿ ರೂಪಿಸಬೇಕೆಂಬ ಮನಸ್ಥಿತಿಗೆ ಏನು ಕಾರಣ? ಎನ್ನುವ ಪ್ರಶ್ನೆಗೆ ಮಹತ್ವ ಬರುತ್ತದೆ. ಆಧುನಿಕ ಭಾಷಾತತ್ವಶಾಸ್ತ್ರೀಯ ನೆಲೆ ಮತ್ತು ಪರಿಕಲ್ಪನೆಗಳಿಗೆ ಅನುಗುಣವಾಗಿ ಕನ್ನಡ ವ್ಯಾಕರಣವನ್ನು ರೂಪಿಸುವ ಹೊಂದಾಣಿಕೆಯ ಕ್ರಮ ಯಾಕೆ ಸಾಧ್ಯವಾಗಿಲ್ಲ ಅನ್ನುವುದು ಕೂಡ ಮಹತ್ವದ ಪ್ರಶ್ನೆಯೇ ಆಗಿದೆ.

ಈಗ ಕನ್ನಡದ ವ್ಯಾಕರಣವನ್ನು ಪುರ‍್ರಚಿಸಬಹುದಾದ ಸಾಧ್ಯತೆಯ ಆಲೋಚನೆಯ ಕ್ರಮವನ್ನು (ಎತ್ತುಗೆಗಾಗಿ ಕೆ. ವಿ. ನಾರಾಯಣ ಹಾಗೂ ಡಿ.ಎನ್.ಎಸ್. ಭಟ್ ಅವರನ್ನು ಹೆಸರಿಸಬಹುದು) ಸಂಸ್ಕೃತದ ಮೇಲಿನ ದ್ವೇಷ ಹಾಗೂ ಕನ್ನಡದ ಏಳ್ಗೆಯನ್ನು ವಿರೋಧಿಸುವ ಬಗೆಯೆಂದು ಬಿಂಬಿಸಲಾಗಿದೆ. ಕೆವಿಎನ್ ಹಾಗೂ ಡಿಎನ್‌ಎಸ್ ಭಟ್ ಅವರುಗಳ ಆಲೋಚನಾ ಕ್ರಮವೂ ಕನ್ನಡ ನುಡಿಯ ಕಸುವಿನ ಮೇಲಿರುವ ನಂಬಿಕೆಯನ್ನುವುದು ಸಂಸ್ಕೃತಪರ ವಕಾಲತ್ತುವಹಿಸಿ ಮಾತ್ನಾಡುವವರಿಗೆ ಯಾಕೆ ಅರ್ಥವಾಗುತ್ತಿಲ್ಲ.

ನುಡಿಯ ಸ್ವಾಯತ್ತತೆಯನ್ನು ಮರುಪ್ರತಿಪಾದಿಸುವ ಬೇಡಿಕೆಗಳು ಆಯಾ ಸಮುದಾಯದ ಸಾಮಾಜಿಕ, ರಾಜಕೀಯ ನೆಲೆಗಳಿಂದ ರೂಪಗೊಳ್ಳಬೇಕಾದ ಅಗತ್ಯವಿದೆ ಎನ್ನುವುದು ಸ್ಪಷ್ಟ. ಇದಕ್ಕಿಂತ ಹೆಚ್ಚಾಗಿ, ಭಾಷಾ ಯೋಜನಕಾರರು ಒಂದು ನುಡಿ ಸಮುದಾಯಕ್ಕೆ ತನ್ನ ಅಂತರ್ಗತ ಭಾಷಿಕ ಪ್ರಜ್ಞೆಯನ್ನು ತನ್ನ ಸೊಲ್ಲರಿಮೆ/ವ್ಯಾಕರಣ ಮತ್ತು ಸಾಹಿತ್ಯದಲ್ಲಿ ಕ್ರೂಢೀಕರಿಸಿಕೊಳ್ಳುವ ಸ್ವಾತಂತ್ರ್ಯವನ್ನು ದಕ್ಕಿಸಿ ಕೊಡಬೇಕು.

ಭಾಷೆಯ ಸಾಮಾಜಿಕ–ರಾಜಕೀಯ ಅಂತಸ್ತು ಸ್ಥಾವರವಲ್ಲ. ಅದು ಬದಲಾವಣೆಯ ಹೊಣೆಯಾಗಿರುತ್ತೆ. ಏಂಕೆಂದರೆ, ಸಮಾಜ ಮತ್ತು ಸಾಮಾಜಿಕ ವ್ಯವಸ್ಥೆ ಚಲನಶೀಲವಾದದ್ದು. ಪ್ರಾಚೀನ ಕಾಲದಿಂದಲೂ ಭಾರತ ಬಹುಭಾಷಿಕ ಸನ್ನಿವೇಶ ಆದರೆ ಈ ಭಾಷೆಗಳ ನಡುವಿನ ಭಾಷಿಕ ಅಂತಸ್ತು ಕಾಲದೇಶಕ್ಕೆ ಅನುಗುಣವಾಗಿ ಬದಲಾಗುತ್ತಿವೆ. ಈ ಚಲನಶೀಲತೆಯು ಭಾರತದಲ್ಲಿಯ ಭಾಷಿಕ ಬಹುಳತೆಯ ಪ್ರಾಮುಖ್ಯತೆಯ ಲಕ್ಷಣವಾಗಿದೆ. ಭಾಷೆಯ ಸಾಮಾಜಿಕ, ಸಾಂಸ್ಕೃತಿಕ ಬದಲಾವಣೆಯ ನಡುವಣ ನಂಟಸ್ತಿಕೆಗಳು ನುಡಿಯ ಬಹುಳತೆಯನ್ನು ನೆಲೆಗೊಳಿಸುವ ಸಾಧ್ಯತೆಗಳಲ್ಲಿ ಹಲವು ಆಯಾಮಗಳು ಸೇರಿಕೊಂಡಿವೆ.

ಮುಖ್ಯವಾಗಿ, ಭಾರತೀಯತೆ ಎನ್ನುವ ತಿಳುವಳಿಕೆ ಕೇವಲ ಯಾವುದೇ ನುಡಿಯ ಮೂಲಕ ಗುರುತಿಸಿಕೊಂಡ ಜನಸಮುದಾಯಗಳ ಒಂದು ರಾಷ್ಟçವಲ್ಲ. ಆದ್ದರಿಂದ ಇವತ್ತೀನ ಆಧುನಿಕ ಸಂವಿಧಾನ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಈ ವೈವಿಧ್ಯತೆಯ ಗುರುತುಗಳನ್ನು ಹೇಗೆ ಕಾಣಬಹುದು ಎಂಬ ಪ್ರಶ್ನೆಯೊಂದು ಎದುರಾಗುತ್ತದೆ. ಬಹುಸಾಂಸ್ಕೃತಿಕ ಸಮೂಹಗಳ ನಂಬಿಕೆ, ಮೌಲ್ಯ, ರೂಢಿ, ಸಂವೇದನೆಗಳು ಈ ಭಾರತೀಯತೆಯ ದಿಟವಾದ ನೆಲೆಗಳಾಗಿರುವವೋ ಎನ್ನುವ ಸಂದೇಹ ಹುಸಿಯಾಗಿಲಾರದು.

ಆದರೆ ಪುರಾಣ ಮತ್ತು ಮಹಾಕಾವ್ಯಗಳು ರೂಪಿಸಿದ ಸಾಂಸ್ಕೃತಿಕ ವಿವೇಕ, ಮೌಲ್ಯ ಮತ್ತು ಸಂವೇದನೆಗೆ ಮೂಲ ಸಂಸ್ಕೃತ ಭಾಷೆ ಎಂಬ ಹುಸಿ ನಂಬಿಕಯೂ ಕನ್ನಡದಂತಹ ಇತರೆ ನುಡಿಗಳ ಅಸ್ತಿತ್ವವನ್ನು ಶೂನ್ಯವಾಗಿಸಿದೆ. ಇದನ್ನು ಹೊರತುಪಡಿಸಿಯೂ, ಯೋಚಿಸಿ ನೋಡಿದರೆ ಬಹುಮಂದಿಯರನ್ನು ಹಾಗೂ ಎಲ್ಲ ವರ್ಗದ ಮಹಿಳೆಯರನ್ನು ಒಳಗೊಂಡ ಸಂಸ್ಕೃತದ ಯಾವ ಪುರಾಣ ಇಲ್ಲವೇ ಕಾವ್ಯಗಳು ಇರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ.

ನಿರಂತರವಾಗಿ ಜನಸಾಮನ್ಯರನ್ನು ಸಾಮಾಜಿಕವಾಗಿ ನಿಶಿದ್ಧಿಸುತ್ತ ಹಾಗೂ ಶ್ರೇಣೀಕರಿಸುತ್ತು ಬಂದಿರುವ ಕ್ರಮಗಳೇ ಸಂಸ್ಕೃತ ಗುರಿಗಳು ಆಗಿರುತ್ತವೆ. ಈ ಪುರಾಣ ಮತ್ತು ಮಹಾಕಾವ್ಯಗಳು ಸಾಕ್ಷರತೆಯ ಹದ್ದುಮೀರಿ ಜನಸಾಮನ್ಯರ ಬದುಕಿನಲ್ಲಿ ಇಂದಿಗೂ ಹಾಸುಹೊಕ್ಕಾಗಿವೆ. ದಿಟ ಸಾಹಿತ್ಯಕ್ಕೂ ಸಾಕ್ಷರತೆಗೂ ಯಾವುದೇ ಬಗೆಯ ನೇರವಾದ ನಂಟಸ್ತಿಕೆಯಿಲ್ಲ. ಆದರೆ ಸಂಸ್ಕೃತ ನುಡಿಯ ಪರವಾಗಿ ವಕಾಲತ್ತು ವಹಿಸುವ ವರ್ಗಗಳೇ ಸಾಹಿತ್ಯ ಹಾಗೂ ಸಾಕ್ಷರತೆಗೆ ನೇರೆವಾದ ನಂಟನ್ನು ಆರೋಪಿಸಿವೆ.

ಇದಕ್ಕೆ ಕಾರಣ ಜನಸಾಮನ್ಯರ ನುಡಿಯಲ್ಲಿ ಮೌಖಿಕ ಪರಂಪರೆಯಾಗಿ ರೂಪುಗೊಂಡ ಕಾವ್ಯಗಳಿಗೂ ಬರಹದ ಕಾವುಗಳಿಗೂ ಅಂತರಗಳನ್ನು ಹುಟ್ಟುಹಾಕುವ ಹುನ್ನಾರದಿಂದ ಇಂತಹ ಬೆಳವಣಿಗೆಗಳು ಮುಂಚೂಣೆಗೆ ಬಂದಿವೆ. ಇಂತಹ ಬಿಕ್ಕಟ್ಟುಗಳಲ್ಲಿಯೂ ಮೌಖಿಕ ಪರಂಪರೆಯ ನಂಬಿಕೆಯನ್ನು ಶತಮಾನದುದ್ದಕ್ಕೂ ರವಾನಿಸುತ್ತ ಬಂದಿರುವುದೇ ದೇಶಿ ನುಡಿಗಳ ಚಲನಶೀಲತೆಯನ್ನು ತೋರಿಸುತ್ತದೆ. ಇಂತಹ ಮೌಖಿಕ ಪರಂಪರೆಗಳು ಬೇರೆ ಬೇರೆ ನುಡಿಗಳಲ್ಲಿ ಬರಹ ರೂಪಗಳಲ್ಲಿ ಹೊರಬಂದು, ವ್ಯಾಖ್ಯಾನಗಳು ಮಹಾಕಾವ್ಯಗಳ ಸಂವೇದನೆಗಳಾಗಿ ಸಾಮಾಜಿಕ ಭಿನ್ನತೆಗೆ ಕಾರಣವಾಗಿವೆ. ಮಾರ್ಗದ ಆವರಣದಲ್ಲಿ ಸಂಚರಿಸಿ ಬರಹ ನುಡಿಯ ಚಹರೆಗಳಾಗಿ ಮಾರ್ಪಟ್ಟಿರುತ್ತವೆ.

ಇಂತಹ ಐತಿಹಾಸಿಕ ಆಗು ಹೋಗುಗಳ ಸಂಚಾರವು ಸಂಸ್ಕೃತದಿಂದ ಇತರೆ ನುಡಿಗಳಿಗೆ ಹಾಗೂ ಮೌಖಿಕದಿಂದ ಬರಹಕ್ಕೆ ರೂಪಾಂತರಗೊಂಡಿದ್ದರಿಂದ, ಅಡುನುಡಿಯ ರೂಪ ಹಾಗೂ ಅದರ ವಸ್ತವಿಷಯಗಳು ಹೇಗೆ ಆಯಾ ನುಡಿಯಿಗರಿಗೇ ಹೊರತಾದ ನೆಲೆಗಳನ್ನು ಪಡೆದುಕೊಂಡವು ಎಂಬುದನ್ನು ಇಲ್ಲಿ ಕಾಣಬಹುದು. ದಿಟವಾಗಿಯೂ ಈ ನಿಲುವುಗಳನ್ನು ಸಾಂಸ್ಕೃತಿಕ ಅಪಾಯಗಳನ್ನು ಹುಟ್ಟುಹಾಕಿದ ನಿಲುವುಗಳಂದೇ ಹೇಳಬೇಕು.

ಯಾರಾದರೂ ಈ ಪುರಾಣ ಇಲ್ಲವೇ ಕಾವ್ಯಗಳ ವಸ್ತವಿಷಯವನ್ನು ಅರ್ಥೈಸಿಕೊಳ್ಳಬೇಕೆಂದರೆ ಸಂಸ್ಕೃತವನ್ನೇ ಕಲಿಯಬೇಕಾದ ಅಗತ್ಯವಿಲ್ಲ. ಹಾಗಾಗಿ ಪದಕೋಶದ ಮೂಲಕವೇ ಲೋಕಗ್ರಹಿಕೆಗಳನ್ನು ಪಲ್ಲಟಗೊಳಿಸುವ ಹುನ್ನಾರಗಳು ನಡೆಯುತ್ತಲೇ ಬಂದಿವೆ. ಹಾಗಾಗಿ ಕೇವಲ ಪದಕೋಶವನ್ನು ಪಡೆದುಕೊಳ್ಳುವ ಭಾಷೆಯಾಗದೇ ಆಯಾ ಭಾಷೆಯ ಮೂಲಕ ದಕ್ಕುವ ಅನುಭವವನ್ನೂ ಪಲ್ಲಟಗೊಳಿಸುವ ವಿದ್ಯಮಾನವಾಗಿದೆ. ಅದಕ್ಕಾಗಿ ಈ ಪ್ರಕ್ರಿಯೆಯಲ್ಲಿ ಬೇರೆ ಭಾಷಾರೂಪ/ಪದಗಳನ್ನು ಪಡೆದುಕೊಳ್ಳುವ ಬಗೆಯನ್ನು ಪ್ರತಿರೋಧಿಸುವ ನಿಲುವುಗಳು ಎಚ್ಚರಗೊಳ್ಳುವ ಅಗತ್ಯವಿದೆ.

ಆದರೆ ವಸ್ತುವಿಷಯವನ್ನು ಪಡೆಯುವ ಬಗೆಯಲ್ಲಿ ನುಡಿ ಕೇವಲ ಮಧ್ಯವರ್ತಿ ಮಾತ್ರವಾಗದೇ, ಅನುಭವವನ್ನು ಕಸಿ ಮಾಡುವ ನೆಲೆಯೂ ಆಗಿರುತ್ತದೆ. ಹಾಗಾಗಿ ನುಡಿ ಎನ್ನುವುದು ಒಂದ ತಟಸ್ಥವಾದ ವಿದ್ಯಮಾನವಲ್ಲ.
ಸಣ್ಣ-ಪುಟ್ಟ ನುಡಿಗÀಳಿಗೆ ಸಂಸ್ಕೃತದೊಂದಿಗೆ ನೇರ ಸಂಪರ್ಕ ಸಾಧ್ಯವಾಗದೆ ಇದ್ದಾಗ ಮತ್ಯಾವುದೆ ನುಡಿಯಿಂದ ಪಡೆದುಕೊಳ್ಳುವ ಸಾಧ್ಯತೆ ಇದೆ.

ಇಂತಹ ನೆಲೆಗಳು ಮೊದಲಾಗುವುದು ಕನ್ನಡದಂತಹ ನುಡಿಗಳಿಂದ, ಸಂಸ್ಕೃತ ಇಲ್ಲವೇ ಇಂಗ್ಲಿಶಿನಂತಹ ನುಡಿಗಳು ಹುಟ್ಟುಹಾಕುವ ಮತ್ತೊಂದು ಬಗೆಯ ಅಪಾಯಗಳು ಇವಾಗಿವೆ. ಈ ಪ್ರಕ್ರಿಯೆಯು ಅಧಿಕಾರದ ನಂಟಸ್ತಿಕೆಯ ಬಗೆಗಳ ಸ್ವರೂಪವನ್ನು ಅರಿಯುವ ಬೇರೆ ಬೇರೆ ಮಾದರಿಗಳು ಎಂದು ಹೇಳಬಹುದು. ಹೌದು ಇಂತಹ ಸಾಂಸ್ಕೃತಿಕ ತಿಳವಳಿಕೆಗಳು ಹಾಗೂ ಸಂವೇದನೆಗಳನ್ನು ಯಾವುದೇ ಒಂದು ನುಡಿಯಿಂದ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ವಾದಕ್ಕೆ ಅವಕಾಶವೇ ಇಲ್ಲ.

ಏಕೆಂದರೆ ಚರಿತ್ರೆಯುದ್ದಕ್ಕೂ ಇಂತಹ ಬೆಳವಣಿಗೆಗಳು ನಡೆದಿರುವುದಕ್ಕೆ ಪುರಾವೆಗಳಿವೆ. ಅಧಿಕಾರದ ಶ್ರೇಣಿಕರಣದಲ್ಲಿ ಸಂಸ್ಕೃತ ಕನ್ನಡದ ಮೇಲಿದ್ದರೇ, ಕನ್ನಡವು ತುಳು, ಕೊಡವ, ಲಂಬಾಣಿ ನುಡಿಗಳ ಮೇಲಿದೆ. ಇವೆರಡೂ ನುಡಿಗಳು ಯಜಮಾನ್ಯ ನುಡಿಗಳೇ ಆದರೆ ಸಂಸ್ಕೃತ ಮತ್ತು ಕನ್ನಡ ನುಡಿಗಳನ್ನು ಹೋಲಿಸಿದರೆ ಸಂಸ್ಕೃತವು ಯಜಮಾನ್ಯ ನುಡಿಯಾದರೆ ಕನ್ನಡವು ಅಧೀನ ನುಡಿಯಾಗಿರುತ್ತದೆ.

ಇದಕ್ಕೆ ಸಾಕ್ಷಿಯಾಗಿ ಶಲ್ಡನ್ ಪೊಲಾಕ್ ಅವರ ಮಾತುಗಳನ್ನು ಗಮನಿಸಬಹುದು, “ಕನ್ನಡಕ್ಕೆ ಸಂಸ್ಕೃತದ ಜ್ಞಾನಶಾಸ್ತ್ರೀಯ ಮನ್ನಣೆ ದೊರಕದೇ ಹೋಗಿದ್ದರೆ ಮತ್ತು ಭಾಷಾಪರಿಶೀಲನೆಯ ಉಪಕರಣಗಳು (ಅಂದರೆ, ಲಕ್ಷಣ ಗ್ರಂಥಗಳು) ಲಭ್ಯವಾಗದೇ ಹೋಗಿದ್ದರೆ ಅದಕ್ಕೆ ಈಗ ದೊರಕಿದ ಪ್ರತಿಷ್ಠೆಯನ್ನು ಸಾಧಿಸಲಾಗುತ್ತಿರಲ್ಲಿ” (ಶೆಲ್ಡನ್ ಪೊಲಾಕ್: 200: ಪುಟ:11). ಎನ್ನುವ ಈ ವಾದಕ್ಕೆ ಯಾವ ಪ್ರಾಮುಖ್ಯತೆ ಇಲ್ಲ ಎನ್ನುವುದು ನಿಚ್ಚಳವಾಗಿದ್ದರೂ, ಈ ವಾದವನ್ನು ನಂಬುವ ಹಾಗೂ ನಂಬಿಸುವ ಬಗೆಗಳು ಅಸ್ತಿತ್ವದಲ್ಲಿವೆ.

ದಿಟ ಇವು ಎಲ್ಲವೂ ಸಾಂಸ್ಕೃತಿಕ ರಾಜಕಾರಣದ ಪರಿಣಾಮಗಳೇ ಎನ್ನುವುದರಲ್ಲಿ ಯಾವ ಅನುಮಾನವಿಲ್ಲ. ಇತಿಹಾಸವನ್ನು ಮತ್ತೆ ಮತ್ತೆ ಮರುಪ್ರಶ್ನಿಸುವ ತಾತ್ವಿಕತೆ ನಿರಂತರ ಮುಂಚೂಣಿಗೆ ಬರುತ್ತಲೇ ಇದೆ. ಕಾರಣ ಇತಿಹಾಸದ ಹೆಚ್ಚಿನ ನಿರೂಪಣೆಗಳು ಏಕಪಕ್ಷೀಯ ತೀರ್ಮಾನದಿಂದ ರೂಪುಗೊಂಡಿರುತ್ತವೆ. ಇಂತಹ ನಿರ್ಧಾರಕ್ಕೆ ಸಾಕಷ್ಟು ಕಾರಣಗಳನ್ನು ಪಟ್ಟಿ ಮಾಡುವ ಪರಿಪಾಟವು ಜೊತೆ ಜೊತೆಗೇನೆ ಬೆಳೆದುಬಂದಿವೆ. ಯಾವುದೆ ಸಮುದಾಯ ಇಲ್ಲವೇ ವರ್ಗದ ಶಿಕ್ಷಣ, ನುಡಿ ಹಾಗೂ ಧರ್ಮದ ಮೇಲೆ ತನ್ನ ಪ್ರಾಬಲ್ಯ ಮತ್ತು ಯಜಮಾನಿಕೆಯನ್ನು ಸಾಧಿಸಿರುವುದೇ ಇದಕ್ಕೆ ಕಾರಣ.

ಪ್ರಭುತ್ವಶಕ್ತಿ ಅಥವಾ ಅಧಿಕಾರ ಕೇಂದ್ರಗಳು ರೂಪಿಸುವ ಸಮಾಜ ವ್ಯವಸ್ಥೆಗೆ ಪ್ರತಿರಚನೆಯಾಗಿ ಮನುಷ್ಯಸಮಾಜದಲ್ಲಿ ಸಾಹಿತ್ಯ ಇಲ್ಲವೇ ಸೃಜನಶೀಲ ಪ್ರಕ್ರಿಯೆಗಳು ಕಾಣಿಸಿಕೊಂಡಿವೆ. ಆದರೆ ಎಲ್ಲ ಪ್ರತಿರಚನೆಗಳೂ ವ್ಯವಸ್ಥೆಯ ಅಂಗವಾಗಿ ರೂಪಗೊಂಡಿದ್ದನ್ನು ನಾವು ಚರಿತ್ರೆಯಲ್ಲಿ ಕಾಣುತ್ತೇವೆ ಎಂಬ ವಾದವು ಮುಂಚೂಣೆಯಲ್ಲಿದೆ. ಈ ವಾದಕ್ಕೆ ಪಂಪ, ರನ್ನ, ಬಸವಣ್ಣ, ಕುಮಾರವ್ಯಾಸ ಮುಂತಾದವರನ್ನು ಸಾಕ್ಷಿಯಾಗಿ ಬಳಸಿಕೊಳ್ಳುತ್ತಾರೆ.

ಕನ್ನಡ ಸೃಜನಶೀಲ ಕ್ರಿಯೆಯಲ್ಲಿ ಅಪನಂಬಿಕೆಯನ್ನು ಹೊಂದಿದವರು ಹೀಗೆ ಮಾತಾಡುತ್ತಾರೆ ಎಂಬ ಮತ್ತೊಂದು ತುದಿಯ ವಾದವು ಚಾಲ್ತಿಯಲ್ಲಿದೆ. ಆದರೆ ಈ ಎಲ್ಲ ಸೃಜನಶೀಲ ಸ್ಪೋಟಗಳು ವ್ಯವಸ್ಥೆಯ ಭಾಗವಾಗಿಯೇ ವ್ಯವಸ್ಥೆ ಮತ್ತು ಅಧಿಕಾರಗಳಿಗೆ ಬಹಳ ಸೃಜನಾತ್ಮಕವಾಗಿ ಪ್ರತಿರೋಧವನ್ನು ಒಡ್ಡಿರುವುದನ್ನು ಅಲ್ಲಗಳಿಯುವಂತಿಲ್ಲ. ಈ ಸೃಜನಾತ್ಮಕ ಪ್ರತಿಕ್ರಿಯೆಗಳು ಕನ್ನಡದ ದೇಸಿ ಪ್ರಜ್ಞೆಯನ್ನು ರೂಪಿಸುವಲ್ಲಿ ಮತ್ತು ಅದನ್ನು ನಿರಂತರವಾಗಿ ಕಾಪಾಡುವಲ್ಲಿ ಎಂತಹ ಮಹತ್ವದ ಪಾತ್ರವನ್ನು ವಹಿಸಿರುತ್ತವೆ ಎಂಬುದು ಗಮನಾರ್ಹ.

“ದೇಸಿಯೊಳ್ ಪುಗುವುದು, ಪೊಕ್ಕು ಮಾರ್ಗದೊಳೆ ತಳ್ವದು” ಇಂತಹ ಅನೇಕ ನಿಲುವುಗಳನ್ನು ಪರಸ್ಪರ ವೀರೋಧಾತ್ಮಕ ನಂಟಿನ ಬಗೆಗಳನ್ನಾಗಿ ನಮ್ಮ ಪ್ರಾಚೀನ ಕಾವ್ಯಗಳ ಓದಿನ ಸನ್ನಿವೇಶದಲ್ಲಿ ಚರ್ಚಿಸಲಾಗಿದೆ. ಇಲ್ಲವಾದರೆ ಸಂಸ್ಕೃತ ಮಹಾಕಾವ್ಯಗಳ ಅನುವಾದವೇ ಈ ಕನ್ನಡ ಕಾವ್ಯವೆನ್ನುವ ಉಡಾಫೆಯ ನಿಲುವುಗಳು ಮುಂಚೂಣೆಗೆ ಬಂದಿವೆ. ಕನ್ನಡತನ ಅನ್ನುವುದು ಅದೊಂದು ವಸ್ತುವಿನ ಚಹರೆಯಲ್ಲಿರುವಂತಹ ಸಂಗತಿಯಲ್ಲ. ಬದಲಾಗಿ ಅನುಭವಗಳ ಮೊತ್ತವನ್ನು ಇಡಿಯಾಗಿ ನಿರೂಪಿಸುವ ಇಲ್ಲವೇ ದೇಶಿಯ ಚಹರೆಗಳ ಸ್ವರೂಪದಲ್ಲಿ ಪ್ರಕಟಗೊಳ್ಳಿಸುವ ಬಗೆಗಳೂ ಆಗಿರುತ್ತವೆ.

ಹಾಗಾಗಿ ಸಾಂಸ್ಕೃತಿಕ ಬೆಳವಣಿಗೆಗಳನ್ನು ಕೇವಲ ಅಂತರ್-ವಿರೋಧ ನೆಲೆಗಳಲ್ಲಿ ಗ್ರಹಿಸದೇ, ಅವುಗಳನ್ನು ಸಾಂಸ್ಕೃತಿಕ ರಾಜಕಾರಣದ ಪ್ರತಿರಚನೆಗಳಾಗಿ ಅಭಿವ್ಯಕ್ತಗೊಂಡ ಕನ್ನಡದ ಅಸ್ಮಿತೆಯ ರೂಪಗಳು ಎಂದು ಅರಿಯಬೇಕಾದ ಜರೂರಿದೆ. ಇಂತಹ ಸಾಂಸ್ಕೃತಿಕ ಅರಿವನ್ನು ಹಾಗೂ ಸಾಂಸ್ಕೃತಿಕ-ಭಾಷಿಕ ಪ್ರತಿರಚನೆಗಳನ್ನಾಗಿ ಗುರುತಿಸದ ಕುರುಡುತನ ನಮಗೆ ಕವಿದುಕೊಂಡಿರುವುದೇ ಸಂಸ್ಕೃತ ನುಡಿಯ ರಾಜಕಾರಣದಿಂದಲೇ ಎಂದು ಹೇಳಬಹುದು.

ಕನ್ನಡದ ಅಸ್ಮಿತೆಯ ರೂಪಕವನ್ನಾಗಿಯೇ
ಗುರುತಿಸುವ ಕವಿರಾಜಮಾರ್ಗದ ಬಗೆಗಿನ ಊಹಾಪೋಹಗಳನ್ನು ಗಮನಿಸಿದರೆ ಸಂಸ್ಕೃತ ನುಡಿಯು ನೆಲೆಗೊಳಸಿದ ಸಾಂಸ್ಕೃತಿಕ ರಾಜಕಾರಣದ ಪ್ರಭಾವ ಎಷ್ಟೊಂದು ದಟ್ಟವಾಗಿತ್ತೆಂಬುದು ತಿಳಿಯುತ್ತದೆ. ಹಾಗಾಗಿ “ಕವಿರಾಜಮಾರ್ಗವೆಂಬ ಲಕ್ಷಣಗ್ರಂಥವು ಸಂಸ್ಕೃತ ಸಾಹಿತ್ಯ ಹಾಗೂ ಕಾವ್ಯಮೀಮಾಂಸೆಯ ತಿಳುವಳಿಕೆಯಿಂದ ರಚಿತವಾದ ಕೃತಿ ಎಂಬುದನ್ನು ನೆನಪಿಸಿದರೆ, ಕನ್ನಡ ಸಾಹಿತ್ಯದ ಮೊದಲ ಕಾಲ, ದಟ್ಟವಾದ ಸಂಸ್ಕೃತದ ಪ್ರಭಾವಕ್ಕೆ ಒಳಗಾದ ಕಾಲವಾಗಿತ್ತೆಂದು ಸ್ಪಷ್ಟವಾಗುತ್ತದೆ” (ಎಸ್.ಶೆಟ್ಟರ್: ಶಂತಕನಾನು: 2007:ಪು:3).

ಇಂತಹ ಪ್ರಭಾವಗಳಿಂದ ಬಿಡುಗಡೆ ಪಡೆಯಲು ಕನ್ನಡ ನಡೆಸಿದ ಹೋರಾಟಗಳು ಕನ್ನಡ ಬೆಳೆದುಬಂದ ಬಗೆಯಯನ್ನು ಬಿಡಿಸಿನೋಡಿದರೆ, ಕನ್ನಡದ ಕಸುವು ಹಾಗೂ ಸೃಜನಶೀಲತೆಯ ಆಯಾಮಗಳು ಯಾವೆಲ್ಲ ಬಿಕ್ಕಟ್ಟುಗಳನ್ನು ಮೀರಿ ನೆಲೆಗೊಳ್ಳುತ್ತ ಬಂದಿದೆ ಎಂಬ ದಿಟ ನಮ್ಮರಿವಿಗೆ ಬರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

Trending