ನೆಲದನಿ
ನುಡಿ ನಿಲುವುಗಳನ್ನು ತಾತ್ವಿಕಗೊಳಿಸಿದ ಬಗೆಗಳು
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಕೇಶರಾಜನು ಸಂಸ್ಕೃತ ವರ್ಣಮಾಲೆಯ ಆಕಾರಾದಿಯನ್ನೇ ಮೊದಲು ಹೇಳಿ, ನಂತರ “ನಾಲ್ವತ್ತೇಲಾಯ್ತಳೆ ಅಚ್ಚಗನ್ನಡದ ಶುದ್ಧಗೆ” ಎಂದು ನಿರ್ಣಯಿಸುತ್ತಾನೆ. ಇದು ಕೂಡ ಕನ್ನಡ ನುಡಿಯ ತಾತ್ವಿಕತೆಯನ್ನು ನಿರ್ಣಯಿಸಲಾರದೆಂಬುದು ಗಮನಾರ್ಹ. ಕೇಶಿರಾಜನ ಈ ನಿರ್ಧಾರವನ್ನೇ ಕನ್ನಡದ ಮೌಲ್ಯ ನಿರ್ಧಾರವೆಂದು ತಪ್ಪಾಗಿ ಭಾವಿಸಿದುಂಟು.
ಯಾಕೆಂದರೆ, ಇಲ್ಲಿ ಕೇಶಿರಾಜ ಕೇವಲ ಸಂಸ್ಕೃತ ಕನ್ನಡ ವರ್ಣಮಾಲೆಯನ್ನು ವರ್ಗೀಕರಿಸುತ್ತಾನೆ ಹೊರತು ಅವುಗಳ ನಡುವಿನ ವ್ಯಾಕರಣದ ಮೂಲತತ್ವಗಳನ್ನು ವಿವರಿಸುವುದಿಲ್ಲ. “ಒಳವು ಮಹಪ್ರಾಣಂಗಳ್ ವಿಳಸತ್ಕರ್ಣಾಟ ಭಾಷೆಯೋಳ ಕೆಲವು ನಿಜೊಜ್ಜಳಮಾಗಿ” ಎನ್ನುವ ಮಾತುಗಳು, ಮಾಹಾಪ್ರಾಂಗಳು ಕನ್ನಡದಲ್ಲವೊಂದೂ ಪ್ರಾಕೃತ, ಸಂಸ್ಕೃತ ಮೂಲದಿಂದ ಬಂದವುವೆಂದು ವಿವರಿಸುತ್ತ, ಕನ್ನಡ ಭಾಷೆಯು “ಬೇಳ್ಪದ ಕೈವೊಕ್ಕ ನಿಧಿ” ಎಂದು ಶ್ಲಾಘಿಸುತ್ತಾನೆ.
ಕಾರಣ ಕನ್ನಡ ನುಡಿಯು ಯಾವುದೆ ಮಡಿ ಮೈಲಿಗೆಯ ಕಟ್ಟು ಪಾಡುಗಳನ್ನು ಆಚರಿಸುವ ಜಾಯಮಾನದಲ್ಲವೆಂಬ ಕೇಶಿರಾಜನ ಅಭಿಪ್ರಾಯ ನಿಜವಾದರೂ, ಕನ್ನಡ ವ್ಯಾಕರಣಕ್ಕೆ ಸಂಸ್ಕೃತ ಮಾದರಿ ಅಗತ್ಯವಲ್ಲವೆಂಬುದು ವೇಧ್ಯವಾಗದೇ ಹೋಗಿದೆ. ಈ ಧೋರಣೆಯೇ ಕೇಶಿರಾಜನಿಗೆ ಕ್ರಿಯಾಸಮಾಸ, ಸಮಸಂಸ್ಕೃತ, ಅರಿಸಮಾಸ, ಮಹಾಪ್ರಾಣ, ಸಂಸ್ಕೃತ ಸಂಧಿಗಳನ್ನು ಯತೇಚ್ಛವಾಗಿ ಕನ್ನಡಕ್ಕೆ ಒಗ್ಗಿಸಿಕೊಂಡು ಇದು ಕನ್ನಡದ ವಿವರಣಾತ್ಮಕ ವ್ಯಾಕರಣವೆಂಬ ಹೆಗ್ಗಳಿಕೆಯನ್ನು ಮೂಡಿಸಿದ್ದಾನೆ.
“ವ್ಯವಹರಿಪುವೆರಡು ರೂಪಿಂದವಕ್ಕರಂ” ಬರಹ ಮತ್ತು ಉಚ್ಚಾರಣೆಯ ನಡುವಿನ ನಂಟಸ್ತಿಕೆಯನ್ನು ಕುರಿತ ಈ ಉಲ್ಲೇಖ ಅಂತರ್-ವಿರೋಧದಿಂದ ಕೂಡಿದೆ ಎನ್ನುವುದು ದಿಟ. ಕನ್ನಡನುಡಿ ಬದಲಾವಣೆ ಕುರಿತ ವಿವರಗಳನ್ನು ನಿಗಾಯಿಟ್ಟು ಪತ್ತೆಹಚ್ಚಿ ನೋಡಿದರೆ, ನುಡಿ ಬದಲಾವಣೆಯ ಹಿಂದಿನ ಪ್ರಭಾವ ಹಾಗೂ ಪ್ರೇರಣೆ ಅರ್ಥವಾಗದೇ ಇರಲಾರದು. ಸಂಸ್ಕೃತವನ್ನು ಸಮಸಂಸ್ಕೃತ ಮತ್ತು ತದ್ಬವ ರೂಪಗಳಲ್ಲಿ ಕನ್ನಡಕ್ಕೆ ಒಗ್ಗಿಸಿಕೊಳ್ಳುವ ಒಪ್ಪಂದದ ಧೋರಣೆ, ಸಂಸ್ಕೃತ ಮತ್ತು ಸಮಸಂಸ್ಕೃತಗಳನ್ನು ಕನ್ನಡದಲ್ಲಿ ಸಮಾಸವಾಗಿಸದೇ ವಿರೋಧಿಸುವ ಜೈನರು, ತಮ್ಮ ಧೋರಣೆಗಳಲ್ಲಿ ಜೈನರ ವೇದನೆ ಹಾಗೂ ಸಂವೇದನೆ ಎದ್ದು ಕೇಳಿಸುತ್ತವೆ.
ಒಟ್ಟಿನಲ್ಲಿ ತಮ್ಮ ರಕ್ತವೆಂದು ಭಾವಿಸಿದ್ಧ ಕನ್ನಡದ “ರಕ್ತಶುದ್ಧಿ” ಸಂಸ್ಕೃತದ ಬಳಕೆಯಿಂದ ಹಾಳಾಗುವುದೆಂಬ ಭೀತಿ ಇವರಿಗೆ ಮಾತ್ರವಲ್ಲ, ಇಂತಹ ಸಂವೇದನೆಯನ್ನು ರೂಪಿಸಿಕೊಂಡ ಪ್ರತೀ ಕನ್ನಡ ನುಡಿಯಿಗರಿಗೂ ಅನ್ನಿಸುತ್ತದೆ.
ಉದಾ;
“ಪಗನ್ನಡಂ ಪುದುಂಗೊಳೆ
ಕೊಂಸಕ್ಕದಮಂ ತಗುೞ್ಜಿ ಜಾಣ್ಕಿಡೆ ಮುತ್ತುಂ
ಮೆಸುಂ ಕೋದಂತಿರೆ ಪೇಳ್ವಂಗವಿಗಳ ಬುದನರನೆರ್ದೆಗೊಳಿಸುಗುಮೇ ||”-[ನಾಗರ್ಮನ ಕಾವ್ಯಾವಲೋಕನ]
“ಸಕ್ಕದಮಂ ಪೇಂಳ್ವಡೆ ನೆರೆ
ಸಕ್ಕದಮಂ ಪೇೞ್ಗಿ ಸುದ್ಧಗನ್ನಡದೊಳ್ ತಂ
ದಿಕ್ಕುವುದೆ ಸಕ್ಕದಮಂ
ತಕ್ಕುವುದೆ ಬೆರಸಲ್ಕೆ ಘೃತಮುಮಂ ತೈಲಮುಮಂ ||”- [ನಯಸೇನನ ರ್ಮಮ್ರುತ]
ದಿಟ ಜೈನ ಕವಿಗಳು ಕನ್ನಡದ ಅರಿವಿನ ಲೋಕವನ್ನು ಹಿಗ್ಗಿಸಿ ಅದಕ್ಕೊಂದು ಸಾಮುದಾಯಿಕ ಗುರುತನ್ನು ಒದಗಿಸಿಕೊಟ್ಟರು. ಈ ಗುರುತುಗಳಲ್ಲಿಯೇ ಸಂಸ್ಕೃತದ ಹೆಜ್ಜೆಗುರುತುಗಳನ್ನು ಹುಡುಕುವ ಧೋರಣೆಯು ನೆಲೆಗೊಂಡಿದೆ. ಹೀಗೆ ನೋಡುವ ಪರಿಪಾಟದಿಂದ ಕನ್ನಡದ ಗುರುತುಗಳ ಬಗೆಗೆ ಗೊಂದಲವನ್ನು ಉಂಟುಮಾಡುವ ಕ್ರಮಗಳೂ ಮುಂಚೂಣೆಗೆ ಬಂದವು. ಇಂತಹದೇ ಇನ್ನೊಂದು ಬಗೆಯ ಜಿಗಿತವನ್ನು ವಚನಕಾರರಲ್ಲಿಯೂ ನೋಡಬಹುದು.
ವಚನ ಸಾಹಿತ್ಯದಲ್ಲಿರುವ ಸಾಂಸ್ಕೃತಿಕ ಹಾಗೂ ರಾಜಕೀಯ ಬಿಕ್ಕಟ್ಟುಗಳೊಂದಿಗೆ ಆ ಕಾಲಘಟ್ಟ ರೂಪಿಸಿಕೊಂಡ ಕನ್ನಡದ ಸವಾಲುಗಳನ್ನು ಎದುರಿಟ್ಟುಕೊಂಡು ನೋಡಿದರೂ ಕನ್ನಡದ್ದೇ ಗುರುತುಗಳಿವು ಎಂದು ಗುರುತಿಸಬಹುದು. ವಚನಕಾರರು ಮಡಿವಂತಿಕೆಯ ಬೇಲಿಯನ್ನು ದಾಟಿ ಜನಸಾಮಾನ್ಯರ ಅರುವಿಗೆಟಕುವ ಪರಿಭಾಷೆಯನ್ನು ಆಡುನುಡಿ ಕನ್ನಡದಲ್ಲಿ ಕಸಿ ಮಾಡಿದ ಬಗೆ ಬಹಳ ಮಹತ್ವದ್ದು ಎಂದೇ ಹೇಳಬೇಕು.
ಭಾಷಾ ಶುದ್ಧತೆ ಎನ್ನುವುದು ಇವರಿಗೆ ಯಾವತ್ತು ಸಮಸ್ಯೆ ಅನ್ನಿಸಲಿಲ್ಲ. ಹಾಗಾಗಿ ವಚನ ಸಾಹಿತ್ಯದಲ್ಲಿ ನುಡಿ ಬೆರಕೆ, ನುಡಿ ಜಿಗಿತ ಮತ್ತು ಹೈಬ್ರಿಡೈಜೇ಼ಶನ್ನ ಪ್ರಕ್ರಿಯೆಯು ಧಾರಾಳವಾಗಿ ನಡೆದಿದೆ. ಎತ್ತುಗೆಗಾಗಿ “ಬತ್ತೀಸರಾಗವ ಹಾಡಯ್ಯ”, “ಇದಕಾರಂಜುವರು ಇದಕಾರಳಕುವರು ಜಾತಸ್ಯಂ ಮರಣಂ ಧ್ರವಂ ಎಂಬುದಾಗಿ” ಮುಂತಾದವುಗಳನ್ನು ಕಾಣಬಹುದು. ಈ ಭಾಷಿಕ ಧೋರಣೆ ಕನ್ನಡದ ಅಸ್ಮಿತೆ ಹಾಗೂ ನಿರ್ದಿಷ್ಟತೆಯನ್ನು ಕಾಯ್ದುಕೊಂಡಿದ್ದಕ್ಕೆ ಇವೇ ಸಾಕ್ಷಿಗಳು.
ಕನ್ನಡದ ರಾಚನಿಕ ಮತ್ತು ಸಾಂಸ್ಕೃತಿಕ ಸಾಧ್ಯತೆಯನ್ನು ವಿಸ್ತರಿಸಿರುವ ಮಾದರಿಗಳು ಅನನ್ಯ ಇವುಗಳು ನುಡಿ ಉಚ್ಚಾರಣೆಯ ನಡುವಿನ ಕಂದರವನ್ನು ಮೀರುವ ಹಾಗೂ ಮೀರಿದ ಸಾಧ್ಯತೆಗಳನ್ನಾಗಿ ಕಾಣಬಹುದು. ಅದೇ ಸಮಯಕ್ಕೆ ಇವರು ಸಾಮಾಜಿಕತೆ ಮತ್ತು ಭಾಷಿಕ ಅಸ್ಪೃಶ್ಯತೆ ಪ್ರಶ್ನೆ ಎದುರಾದಾಗ, ಮತ್ತು ಸಂಸ್ಕೃತವು ಶೋಷಣೆಯ ಮಾಧ್ಯಮವಾದಾಗ ಸಂಸ್ಕೃತವನ್ನು ನಿರ್ಧಾಕ್ಷಣ್ಯವಾಗಿ ತಿರಸ್ಕರಿಸಿದ ನಿದರ್ಶನಗಳೂ ಇಲ್ಲಿ ಎದ್ದು ಕಾಣುತ್ತವೆ.
ಉದಾ:
“ಕಲ್ಲಿಯ ಹಾಕಿ, ನೆಲ್ಲವ ತಳೆದು
ಗುಬ್ಬಿಯ ಸಿಕ್ಕಿಸುವ ಕಳ್ಳನಂತೆ
ವಾಗದ್ವೆöತವ ಕಲಿತು
ಸಂಸ್ಕೃತದ ಮಾತಿನ ಪಸರವ
ಮುಂದಿಟ್ಟುಕೊಂಡು
ಮತ್ಸöನ ವಕ್ತೃದಲ್ಲಿ ಗ್ರಾಸ ಹಾಕುವನಂತೆ
ಅದೇತರ ನುಡಿ? ಮಾತಿನ ಮರೆ, ಆತುರವೈರಿ ಮಾರೇಶ್ವರಾ” [ನಗೆಯ ಮಾರಿತಂದೆ]
ಈ ವಚನದ ‘ಆದೇತರ ನುಡಿ’ಯು ಸಂಸ್ಕೃತ ನುಡಿಯ ಪ್ರಾಬಲ್ಯ ಮತ್ತು ಶೋಷಣೆಯ ಧೋರಣೆಯನ್ನು ಉಪೇಕ್ಷಿಸುವ ಸೂಚಕವಾಗಿದೆ. ನುಡಿಗಳನ್ನು ಆಡುವ ಸಮುದಾಯಗಳು ಚರಿತ್ರೆಯಲ್ಲಿ ಅನುಭವಿಸಿದ ಏರು ಪೇರುಗಳು ಆಯಾ ಭಾಷೆಗಳ ಮೇಲೆ ಹೇಗೆಲ್ಲ ಪರಿಣಾಮ ಬೀರಿರುತ್ತವೆ ಅನ್ನುವುದನ್ನೂ ಇಲ್ಲಿ ಕಾಣಬಹುದು “ಪ್ರಬಲ ಅಧಿಕಾರವುಳ್ಳ ಸಮುದಾಯದ ಭಾಷೆಗೆ ಮೊದಲು ಮಣೆ ದೊರಕುತ್ತದೆ.
ಹತ್ತು ಹಲವು ಬಗೆಗಳಲ್ಲಿ ಆ ಭಾಷೆ ಬಳಕೆಯಾಗುತ್ತದೆ, ಬೆಳೆಯುತ್ತದೆ. ಬದಲಾದ ಸನ್ನಿವೇಶದಲ್ಲಿ ಅಧಿಕಾರದ ಹಸ್ತಾಂತರವಾದಾಗ ಬೇರೊಂದು ಭಾಷೆಗೆ ಆ ಮನ್ನಣೆ ಒದಗುವುದು. ಸಂಸ್ಕೃತ, ಪರ್ಶಿಯನ್, ಅರಾಬಿಕ್ ಮತ್ತು ಇಂಗ್ಲಿಷ್ ಭಾಷೆಗಳು ಭಾರತದ ಚರಿತ್ರೆಯಲ್ಲಿ ಪಡೆದ ಮನ್ನಣೆಗಳನ್ನು ಗಮನಿಸಿದರೆ ಭಾಷೆಯ ಶ್ರೇಷ್ಠತೆಗೂ ಅದರಿಂದ ಅದಕ್ಕೆ ಒದಗುವ ಮನ್ನಣೆಗೂ ಸಾಮಾಜಿಕ-ರಾಜಕೀಯ ಸಂದರ್ಭಗಳಿಗೂ ಸಂಬಂಧ ಗೋಚರವಾಗುತ್ತದೆ.
ಅಲ್ಲದೆ ಆಯಾ ಭಾಷೆಯು ಪಡೆದ ಮನ್ನಣೆಗೆ ಅದರ ಅಂತರ್ಗತ ಲಕ್ಷಣಗಳಷ್ಟೇ ಕಾರಣವಲ್ಲವೆಂಬುದೂ ತಿಳಿಯುತ್ತದೆ. (ಕೆವಿಎನ್: ವಿಕೋ: 2000:ಪು-8)”. ಚಾರಿತ್ರಿಕ ಕಾರಣಗಳಿಂದ ಕೆಲವು ಭಾಷೆಗಳು ವಿಶೇಷ ಅವಕಾಶ, ಸೌಲಭ್ಯಗಳನ್ನು ಪಡೆದು ಉಳಿದ ಭಾಷೆಗಳಿಗಿಂತ ಶ್ರೇಷ್ಠವೆಂಬ ಜನನಂಬಿಕೆಯ ಮನ್ನಣೆಯನ್ನು ಪಡೆದಿವೆ. ಅಂದರೆ, ಈ ಶ್ರೇಷ್ಠತೆಯನ್ನು ನಿರ್ಧರಿಸಲು, ಗ್ರಹಿಸಲು ಭಾಷಾಶಾಸ್ತ್ರೀಯವಾದ ಯಾವ ಮಾನದಂಡವೂ ಈಗ ಲಭ್ಯವಿಲ್ಲ (ಅದೇ) ಭಾಷೆಯು ಸಾಂಸ್ಕೃತಿಕ ಸನ್ನಿವೇಶದ ಅಂಗವೇ ಆಗಿರುವುದರಿಂದ ಸಾಮಾಜಿಕ ಭಾಷಾಶಾಸ್ತ್ರೀಯ ಒಳನೋಟಗಳನ್ನು ಈ ಚರ್ಚೆಗಳ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ.
ಚರಿತ್ರೆಯ ಪ್ರತಿಯೊಂದು ಘಟ್ಟದಲ್ಲಿಯೂ ಪ್ರಭಾವಶಾಲಿಯಾದ ಒಂದು ಭಾಷೆಯ ಮುಂದಾಳುತನ/ಪ್ರಾಬಲ್ಯವನ್ನು (ಹೆಜಿಮೊನಿ) ಮರುಪರಿಶೀಲಸಬೇಕಿದೆ. ಕನ್ನಡವು ತನ್ನ ಭಾಷಿಕ ‘ರೂಪ’ ಮತ್ತು ‘ನಿರ್ದಿಷ್ಟತೆಯನ್ನು’ ರೂಪಿಸಿಕೊಳ್ಳುವಾಗ ಸಂಸ್ಕೃತ ಭಾಷೆಯ ಮುಂದಾಳುತನದ ಕಾರಣದಿಂದಲೇ ಕನ್ನಡವು ಸಂಸ್ಕೃತ ನುಡಿಯ ನಿರ್ದಿಷ್ಟತೆ ಮತ್ತು ರೂಪನಿಷ್ಠ ಆಕೃತಿಯನ್ನು ಅನುಸರಿಸಬೇಕಾಯ್ತು ಎಂಬ ಸಮಜಾಯಿಸಿ ಕೊಡುವ ರೂಢಿಗಳು ಬೆಳೆದು ಬಂದಿವೆ.
ಒಂದು ಪ್ರಾದೇಶಿಕ ನುಡಿಯ ಅಸ್ಮಿತೆಯ ನಿರ್ಮಾಣದ ಹಂತದಲ್ಲಿ ತನ್ನ ‘ರೂಪ’ ಮತ್ತು ‘ನಿರ್ದಿಷ್ಟತೆ’ಯನ್ನು ಕಂಡುಕೊಳ್ಳುವ ಮಾದರಿ ದಿಕ್ಕುತಪ್ಪಿ ಸಂಸ್ಕೃತದ ಆವರಣದಲ್ಲಿ ಸಿಕ್ಕಿಕೊಂಡಿದೆ ಎಂಬ ದಿಟವನ್ನೂ ಇಲ್ಲಿ ಕಾಣಬಹುದು. ಇದರ ಫಲಿತಗಳು ಕನ್ನಡದ ಬರಹ, ಸಂಪ್ರದಾಯ, ನಂಬಿಕೆ, ಆಚರಣೆ, ಪುರಾಣ, ಪುರಾಣಿಮೆ, ಐತಿಹ್ಯಗಳು ಸಂಸ್ಕೃತೀಕರಣಗೊಂಡಿವೆ.
ಇವತ್ತಿಗೂ ಸಂಸ್ಕೃತದ ಕಪಿಮುಷ್ಠಿಯಿಂದ ಕನ್ನಡ ಹೊರಬರಲಿಕ್ಕೆ ಆಗಿಲ್ಲ. ಇಂತಹ ಮಾದರಿಗಳಿಗೆ ಪರ್ಯಾಯ ಮಾದರಿಗಳನ್ನು ಅಂದರೆ, ಕನ್ನಡದ್ದೇ ಮಾದರಿಗಳನ್ನು ರೂಪಿಸುವ ಡಿ.ಎನ್.ಎಸ್.ಭಟ್ ಹಾಗೂ ಕೆವಿಎನ್ ಅವರ ಆಲೋಚನಾ ಮಾದರಿಗಳನ್ನು ಈಗಾಗಲೇ ಚರ್ಚಿಸಿದಂತೆ ಕನ್ನಡದ ವಿರೋಧಿ ನೆಲೆಗಳಾಗಿ ರೂಪಿಸುವ ಹುನ್ನಾರವೂ ಇವತ್ತು ನಡೆದಿದೆ.
ಕನ್ನಡಕ್ಕೆ ಸಂಸ್ಕೃತ ಎಷ್ಟರಮಟ್ಟಿಗೆ ಅನಿವಾರ್ಯ ಎನ್ನುವುದನ್ನು ಕುರಿತು ಆಲೋಚಿಸಲಿಕ್ಕೆ ಅವಕಾಶವನ್ನೇ ಕೊಡದ ‘ಸಂಸ್ಕೃತ ಪರ ವಿದ್ವಾಂಸರ’ ಪಡೆ ನಿರಂತರ ಕ್ನನಡದ ‘ಪರನೋ-ವಿರೋಧನೋ’ ಎನ್ನುವ ಭಾಷಿಕ ಸಾಂಸ್ಕೃತಿಕ ವೈರುಧ್ಯ ಮತ್ತು ಅಪಾಯವನ್ನು ಹುಟ್ಟಿಸಿದ್ದಾರೆ. ರಾಷ್ಟçಪ್ರಭುತ್ವವು ಕನ್ನಡವನ್ನು, ನೇರವಾಗಿ ಸಂಸ್ಕೃತದ ಅಂಕೆಗೆ ತಂದುಕೊಂಡು, ತಮ್ಮ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಅವಿರತ ಪ್ರಯತ್ನ ಮಾಡುತ್ತವೆ ಎನ್ನುವ ‘ಸಾಮಾಜಿಕ ಸಮ್ಮತಿ’ಯು ಕನ್ನಡದ ಸ್ವಂತಿಕೆ ಮತ್ತು ಅನನ್ಯತೆಯ ನಿರ್ಮಾಣದ ಕುಗ್ಗುವಿಕೆಗೆ ಕಾರಣವಾಗಿವೆ.
ಭಾಷಾನೀತಿ ಎನ್ನುವುದು ಯಾವಾಗಲೂ ತಾರತಮ್ಯದ ನೆಲೆಯಿಂದಲೇ ಕೂಡಿದೆ. ಪ್ರಭುತ್ವದ ಭಾಷಾ ನೀತಿ ಮತ್ತು ಸಾಮಾನ್ಯ ಜನರ ಭಾಷಾ ಬಳಕೆಯ ನಡುವೆ ಒಂದು ಸಂಘರ್ಷದ ನೆಲೆ ಇದ್ದೆ ಇರುತ್ತೆ. ಈ ಸಂಘರ್ಷವು ಪ್ರಭುತ್ವ ಮತ್ತು ಸಾಮಾನ್ಯರ ನಡುವಿನ ಅಂತರವನ್ನು ನಿರಂತರವಾಗಿ ಗೋಚರಿಸುತ್ತಲೇ ಬಂದಿರುವುದನ್ನು ಇಂದಿನ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನೋಡುತ್ತೇವೆ. ಇಂತಹ ಸಾಂಸ್ಕೃತಿಕ ವ್ಯಂಗ್ಯಕ್ಕೆ ಏನೆಂದು ಹೇಳಬೇಕು? ಭಾಷಿಕ ನಿಲುವುಗಳು ಈ ಬಗೆಯ ಸಾಂಸ್ಕೃತಿಕ ಹುನ್ನಾರಕ್ಕೆ ಬಲಿಪಶುವಾಗುವುದನ್ನು ಹೇಗೆ ತಪ್ಪಿಸಬೇಕು ಎನ್ನುವುದನ್ನು ನಾವೆಲ್ಲ ಯೋಚಿಸುವ ಅಗತ್ಯವಿದೆ ಎಂದು ಮಾತ್ರ ಹೇಳಿದರೆ ಸಾಲದು!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

