ನೆಲದನಿ
ನುಡಿಯ ಒಡಲು-06 : ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಭಾಗ-02
ಈ ಬರಹದ ಮೊದಲ ಭಾಗದಲ್ಲಿ ಮನುಷ್ಯ ಘನತೆ ಮತ್ತು ಭಾಷಿಕ ಕ್ರಿಯೆ ಎಂಬೀ ಎರಡೂ ಪರಿಕಲ್ಪನೆಗಳ ನಡುವಣ ನಂಟಸ್ತಿಕೆಯನ್ನು ಕುರಿತು ಕೆಲವು ತಾತ್ವಿಕ ಸಂಗತಿಗಳನ್ನು ಚರ್ಚಿಸಲಾಗಿದೆ. ಈ ಭಾಗದಲ್ಲಿ ಮನುಷ್ಯ ಘನತೆಯ ಪ್ರಾಥಮಿಕ ನೆಲೆಗಳನ್ನು ಭಾಷಿಕ ಆಯಾಮಗಳ ಮೂಲಕ ವಿಶ್ಲೇಷಿಸುವ ಪ್ರಯತ್ನವನ್ನು ಮಾಡೋಣ.
ಮನುಷ್ಯ ಘನತೆಯ ಪ್ರಶ್ನೆ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವ್ಯಾಪಕವಾಗಿ ಚರ್ಚೆಯಾಗುವುದು, ಪ್ರಮುಖವಾಗಿ ಕಾನೂನು ದಾಖಲೆಗಳಲ್ಲಿ. ಅಂದರೆ ಕಾನೂನು ಪರಿಭಾಷೆ ಮತ್ತು ಪರಿಕಲ್ಪನೆಗಳಲ್ಲಿ ಪ್ರಕಟಗೊಳ್ಳುತ್ತದೆ. ಕೆಲವು ನಿರ್ದಿಷ್ಟ ಕಾನೂನಾತ್ಮಕ ವಿವರಗಳ ಮೂಲಕ ಈ ಮನುಷ್ಯ ಘನತೆ ಎನ್ನುವ ಪರಿಕಲ್ಪನೆಯನ್ನು ಯಾವುದೇ ಒಂದು ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಮರ್ಥನೆಗಳನ್ನು ಮಂಡಿಸಲು ಬಳಸಲಾಗುತ್ತದೆ.
ಸಹಜವಾಗಿಯೇ ಆಯಾ ಸಂದರ್ಭಕ್ಕೆ ಅನುಸಾರವಾಗಿ ಈ ಪರಿಕಲ್ಪನೆಯ ವಿನ್ಯಾಸಗಳು ಕಾನೂನಾತ್ಮಕ ದಾಖಲೆಗಳಲ್ಲಿ ವ್ಯತ್ಯಾಸವಾಗುತ್ತವೆ. ಆದರೆ ಈ ಎಲ್ಲ ನಿಬಂಧನೆಗಳಿಗೆ ಮನುಷ್ಯ ಘನತೆಯನ್ನು ಎತ್ತಿಹಿಡಿಯುವ ಉದ್ದೇಶವೇ ಮುಖ್ಯವಾಗುತ್ತದೆ. ಉದಾಹರಣೆಗಾಗಿ ರಾಷ್ಟ್ರ-ಅಂತರ್ರಾಷ್ಟ್ರ ಮಟ್ಟದ ಕಾನೂನು ಪರಿಕರ ಮತ್ತು ದಾಖಲೆಗಳ ಪರಿಭಾಷೆ ಹಾಗೂ ಭಾಷಿಕ ಕ್ರಿಯೆಯನ್ನು ಪರಿಶೀಲಿಸಿದರೆ, ಭಾಷಿಕ ಕ್ರಿಯೆಯ ವ್ಯಾಪಕತೆ ಎಂತಹದು ಅನ್ನುವುದು ನಮಗೆಲ್ಲ ಅರ್ಥವಾಗುತ್ತದೆ.
ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ‘ನಾವು ಭಾರತೀಯರು...’ ಎಂಬ ಉದ್ಗಾರದಿಂದ ಶುರುವಾಗುವ ಈ ಹೇಳಿಕೆಯ ಮೊದಲ ಉದ್ದೇಶವೇ ನಮ್ಮೆಲ್ಲರ ನಡುವಣ ಘನತೆ ಮತ್ತು ಸಂಬಂಧವನ್ನು ಸೂಚಿಸುವುದಾಗಿದೆ. ಹಾಗಾಗಿ ಜಾತ್ಯತೀತತೆ, ಧರ್ಮನಿರಪೇಕ್ಷತೆ ಎಂಬೆಲ್ಲ ಪದಗಳನ್ನು ನೆಲೆಗೊಳಿಸಲು ಕಾರಣವೇ ಮನುಷ್ಯ ಘನತೆಯನ್ನು ಮನಗಾಣಲು ನಮಗೆ ಬೇಕಾಗಿರುವುದು ಕೇವಲ ನಾವು ಮನುಷ್ಯರು ಮತ್ತು ಆ ಅಸ್ತಿತ್ವದಲ್ಲಿ ಯಾವುದೇ ಭೇದಭಾವ ಇರಕೂಡದು ಎಂಬ ತಿಳಿವಳಿಕೆ ಮಾತ್ರ ಸಾಕು ಅನ್ನುವುದಾಗಿದೆ.
ಹೊರತು ನಮ್ಮ ಅಸ್ತಿತ್ವ, ಅಸ್ಮಿತೆ, ಘನತೆಗಳನ್ನು ಅರಿಯಲು ಯಾವುದೇ ಜಾತಿ, ಧರ್ಮ, ಪ್ರದೇಶ, ಭಾಷೆ, ಲಿಂಗ ಇತ್ಯಾದಿ ಸಂಗತಿಗಳ ಮಹತ್ವದ ಮೇಲೆ ವ್ಯಕ್ತಿಗಳ ಘನತೆಯನ್ನು ಅಳಿಯುವುದಾಗಲೀ ಇಲ್ಲವೇ ಮೌಲ್ಯನಿರ್ಣಯ ಮಾಡುವುದಾಗಲೀ ಕೊನೆಯಪಕ್ಷ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿ ಪರಿಭಾವಿಸಕೂಡದು ಅನ್ನುವ ತಾತ್ಪರ್ಯವನ್ನು ಇಲ್ಲಿ ಕಾಣುತ್ತೇವೆ.
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮನುಷ್ಯ ಘನತೆಯನ್ನು ಪ್ರತಿಪಾದಿಸುವ ದಾಖಲೆಗಾಗಿ, ದಿ ಚಾರ್ಟರ್ ಆಫ್ ಯುನೈಟೆಡ್ ನೇಶನ್ಸ್ (1945) ಪೀಠಿಕೆಯಲ್ಲಿ ನಿರೂಪಿಸಲಾದ ಹೇಳಿಕೆಗಳನ್ನು ಇಲ್ಲಿ ಗಮನಿಸಬಹುದು. ‘ಮುಂಬರುವ ಪೀಳಿಗೆಗಳನ್ನು ಯುದ್ಧದ ಭೀಕರತೆ ಮತ್ತು ದುಖದಿಂದ ರಕ್ಷಿಸಬೇಕು.
ಇಂತಹ ಯುದ್ಧಗಳಿಂದ ಈಗಾಗಲೇ ನಾವು ಕೇಳರಿಯದ ದುಖವನ್ನು ನಮ್ಮ ಬದುಕಿನವಧಿಯಲ್ಲಿ ಎರಡುಸಲ ಕಂಡಿದ್ದೇವೆ. ಮಾನವ ಹಕ್ಕು ಮತ್ತು ಮನುಷ್ಯ ಘನತೆಯಲ್ಲಿ ನಂಬಿಕೆಯನ್ನು ಮರುಪ್ರತಿಪಾದಿಸಬೇಕಿದೆ.ಯಾವುದರ ಮೂಲಕ ಮನುಷ್ಯ ಘನತೆ, ಗಂಡು-ಹೆಣ್ಣುಗಳ ನಡುವಣ ಸಮಾನ ಹಕ್ಕುಗಳು ಹಾಗೂ ದೊಡ್ಡ ಮತ್ತು ಚಿಕ್ಕ ದೇಶಗಳು ಎಂಬ ಭೇದವಿಲ್ಲದ ವಾತಾವರಣವನ್ನು ಸೃಷ್ಟಿಸಬೇಕೆಂದು ನಾವು ಯುನೈಟೆಡ್ ರಾಷ್ಟ್ರಗಳ ಜನತೆ ನಿರ್ಧರಿಸಿದ್ದೇವೆ’. ಈ ಘೋಷಣೆಯ ಹಿಂದಿನ ತಾತ್ವಿಕ ಮತ್ತು ನೈತಿಕ ಹೊಣೆಗಾರಿಕೆಯನ್ನು ಇಲ್ಲಿ ಬಳಸಲಾದ ಪದಗಳ ಮೂಲಕ ಅರಿಯಲು ಸಾಧ್ಯ.
ಇಲ್ಲಿಯ ಯಾವುದೇ ಪದವು ನಿಶ್ಚಿತವೂ ಮತ್ತು ನಿರಂತರವೂ ಆಗಿರುವ ಅರ್ಥವನ್ನು ಹೊಂದಿರುವುದಿಲ್ಲ. ಆದರೆ ಆಯಾ ಸನ್ನಿವೇಶಗಳ ಮೂಲಕ ನಾವು ಘನವಾದ ಮತ್ತು ತೆಳುವಾದ ಅರ್ಥಗಳನ್ನು ಪರಿಭಾವಿಸುತ್ತೇವೆ. ಇದು ಕೇವಲ ಯಾದೃಚ್ಛಿಕವಾಗಿ (ದಿಟ, ಪ್ರಾಥಿಮಿಕ ಅರ್ಥಗಳು ಯಾದೃಚ್ಛಿಕವಾಗಿಯೇ ಇರುತ್ತವೆ) ನಡೆಯುವುದಲ್ಲ. ಸನ್ನವೇಶಗಳು ಅಗಾಧವಾದ ಪಾತ್ರವನ್ನು ವಹಿಸುತ್ತವೆ. ಇದಕ್ಕೆ ಪ್ರಮುಖ ಕಾರಣವೇ ಭಾಷಿಕ ಕ್ರಿಯೆಗಳು ಎಂಬುದು ಇಲ್ಲಿ ನಿರ್ವಿವಿವಾದ.
ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ (1948) ಪೀಠಿಕೆಯಲ್ಲಿಯೂ ಈ ಬಗೆಯ ಸಂಗತಿಗಳನ್ನೇ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಅಂದರೆ ಈ ಜಗತ್ತಿನ ಮನುಷ್ಯರೆಲ್ಲರಲ್ಲಿ ಅಂತರ್ನಿಹಿತವಾದ ಘನತೆ ಮತ್ತು ಮನುಷ್ಯ ಸಮೂಹಗಳಿಗೆ ಸಮಾನ ಮತ್ತು ಆತ್ಯಂತಿಕವಾದ ಹಕ್ಕುಗಳನ್ನು ಮಾನ್ಯಗೊಳಿಸಬೇಕು.
ಈ ಜಗತ್ತಿನಲ್ಲಿ ಸ್ವಾತಂತ್ರ್ಯ, ನ್ಯಾಯ ಹಾಗೂ ಶಾಂತಿಯನ್ನು ನೆಲೆಗೊಳಿಸಲು ಇವುಗಳು ಅಡಿಪಾಯವಾಗಿವೆ. ಆದರೆ ಈ ಮಾನವ ಹಕ್ಕುಗಳ ಬಗೆಗೆ ನಿರ್ಲಕ್ಷ್ಯ ಹಾಗೂ ತಿರಸ್ಕಾರವು ಅನಾಗರಿಕ ಕೃತ್ಯಗಳಿಗೆ ಕಾರಣವಾಗಿವೆ. ಇದು ಮಾನವಕುಲದ ಆತ್ಮಸಾಕ್ಷಿಯನ್ನೇ ಕೆರಳಿಸಿದೆ. ಇಡೀ ಜಗತ್ತಿನ ಮನುಷ್ಯರಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ನಂಬಿಕೆ ಹಾಗೂ ಭಯದಿಂದ ಬಿಡುಗಡೆಯನ್ನು ನೆಲೆಗೊಳಿಸಲು ಇದು ಒತ್ತಾಸೆಯಾಗುತ್ತದೆ.
ಸಾಮಾನ್ಯ ಜನರ ಆಶೋತ್ತರಗಳನ್ನು ಎತ್ತಿಹಿಡಿಯುವ ಮಹತ್ತರವಾದ ಘೋಷಣೆ ಇದಾಗಿದೆ. ಮನುಷ್ಯ ಘನತೆ ಮತ್ತು ಮಾನವ ಹಕ್ಕುಗಳು ಎಂಬೀ ಎರಡೂ ಪರಿಕಲ್ಪನೆಗಳು ಪ್ರತ್ಯೇಕ ಮತ್ತು ಪರಸ್ಪರ ಅವಲಂಬಿತವೆಂದು ಯಾರಾದರೂ ಹೇಳಬಹುದು. ಆದರೆ ಇದುವರೆಗೂ ಯಾರು ಕೂಡ ಈ ಎರಡೂ ಪರಿಕಲ್ಪನೆಗಳ ನಡುವಣ ಪರಸ್ಪರ ಅವಲಂಬನೆಯನ್ನು ಯಾವುದೇ ವ್ಯವಸ್ಥಿತ ಮತ್ತು ಸ್ಪಷ್ಟ ಸೂತ್ರಗಳ ಮೂಲಕ ವ್ಯಾಖ್ಯಾನಿಸಿಲ್ಲ ಅನ್ನುವುದು ಗಮನಾರ್ಹ.
ವಿಶ್ವಸಂಸ್ಥೆಯ ಇನ್ನೆರಡು ನಡೆಗಳನ್ನು ಅವಲೋಕಿಸಿದರೆ, ಈ ಪರಿಕಲ್ಪನೆಗಳ ನಡುವಿನ ನಂಟಸ್ತಿಕೆಯನ್ನು ಇನ್ನಷ್ಟು ನಿಚ್ಚಳಗೊಳಿಸುತ್ತವೆ. ವಿಶ್ವಸಂಸ್ಥೆಯ ಚಾರ್ಟರ್ನಲ್ಲಿ ಘೋಷಿಸಲಾದ ತತ್ವಗಳಿಗೆ ಪೂರಕವಾಗಿ, ಮನುಷ್ಯನ ಅಂತರ್ಗತ ಘನತೆಯನ್ನು ಮತ್ತು ಇಡೀ ಜಗತ್ತಿನ ಮನುಷ್ಯರಲ್ಲಿ ಸಮಾನ ಹಾಗೂ ಆತ್ಯಂತಿಕ ಹಕ್ಕುಗಳನ್ನು ಮಾನ್ಯ ಮಾಡುವುದರಿಂದ ಈ ಲೋಕದ ಜನರ ಸ್ವಾತಂತ್ರ್ಯ, ನ್ಯಾಯ ಮತ್ತು ಶಾಂತಿಯನ್ನು ನಿರಂತರಗೊಳಿಸುವಲ್ಲಿ ಇವು ಅಡಿಪಾಯವಾಗುತ್ತವೆ.
ಮನುಷ್ಯನ ಅಂತರ್ಗತ ಘನತೆಯಿಂದಲೇ ರೂಪಿಸಲಾಗುವ ಈ ಹಕ್ಕುಗಳನ್ನು ಮಾನ್ಯಗೊಳಿಸುವುದು ಮುಖ್ಯ. ವಿಶ್ವಸಂಸ್ಥೆಯ ಈ ದಾಖಲೆಗಳು ಹೇಳುವಂತೆ, ಮನುಷ್ಯ ಘನತೆ ಎಂಬುದು ಅತ್ಯಂತ ಶ್ರೇಷ್ಠವಾದ ಮೌಲ್ಯವಾಗಿದೆ ಎಂದು ಪರಿಗಣಿಸುತ್ತವೆ. ಇದು ಮಾನವ ಹಕ್ಕುಗಳಿಂದ ಮಾತ್ರ ಪ್ರತ್ಯೇಕಗೊಳ್ಳುವುದಷ್ಟೆಯಲ್ಲ, ಆ ಪರಿಕಲ್ಪನೆಯನ್ನೇ ಪಲ್ಲಟಗೊಳಿಸಿದೆ. ಮನುಷ್ಯ ಘನತೆಯಿಂದಲೇ ಮೈದಾಳಿದ ಈ ಮಾನವ ಹಕ್ಕುಗಳ ಪರಿಕಲ್ಪನೆ ಆ ನಂತರದಲ್ಲಿ ತನ್ನದೆಯಾದ ಗುಣಲಕ್ಷಣಗಳನ್ನು ಮೈಗೂಡಿಸಿಕೊಂಡಿದೆ.
ಎಷ್ಟೋ ಸನ್ನಿವೇಶಗಳಲ್ಲಿ ಈ ಮನುಷ್ಯ ಘನತೆಯ ಗುಣಗಳು ಎಂತಹವು ಎನ್ನುವುದನ್ನು ಸ್ಪಷ್ಟಪಡಿಸದೇ ಕೇವಲ ಒಂದು ಕಾನೂನಿನ ಪದವನ್ನಾಗಿ ಬಳಸಲಾಗುತ್ತದೆ. ಮನುಷ್ಯ ಘನತೆಯ ಮೂಲತತ್ವಗಳಾವವು? ಅನ್ನುವುದನ್ನು ಈ ಕಾನೂನು ಪದಕೋಶವು ನಿಚ್ಚಳಗೊಳಿಸದು. ಹಾಗಾಗಿ ಭಾಷಿಕ ನಿರೂಪಣೆಗಳು ನಮ್ಮ ಸಾಮಾಜಿಕ ವಿವೇಕವನ್ನು ಹೇಗೆ ಪ್ರಕಟಿಸುತ್ತವೆ ಎಂಬ ಸಂವೇದನೆಯನ್ನು ಹೊಂದುವುದು ಅವಶ್ಯ.
ಸಾಮಾಜಿಕ ಅಂತಸ್ತಿಗೆ ಅನುಗುಣವಾಗಿ ಮನುಷ್ಯ ಘನತೆಯನ್ನು ಸೂಚಿಸುವ ಭಾಷಿಕ ಕ್ರಿಯೆಗಳೇ ನಮ್ಮನಮ್ಮ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಸಮರ್ಥಿಸುತ್ತವೆ. ಹೀಗೆ ಏರ್ಪಡುವ ಅಸಮಾನತೆ ಇಲ್ಲವೇ ತಾರತಮ್ಯವನ್ನು ಅಳಿಸಲು ಬೇಕಾಗುವ ಪರಿಕರವೇ, ಈ ಮನುಷ್ಯ ಘನತೆ.
ಆದ್ದರಿಂದ ಭಾರತೀಯ ಸಂವಿಧಾನವು ತನ್ನೆಲ ನಾಗರಿಕರಲ್ಲಿ ಸಹೋದರತ್ವ/ಭ್ರಾತೃತ್ವವನ್ನು ಉತ್ತೇಜಿಸುವ ಮೂಲಕ ವ್ಯಕ್ತಿಯ ಘನತೆ ಮತ್ತು ರಾಷ್ಟ್ರದ ಏಕತೆ ಹಾಗೂ ಐಕ್ಯತೆಯನ್ನು ಸಾಧಿಸಲು ಆಶಿಸುತ್ತದೆ. ಹಾಗಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವ್ಯಕ್ತಿ ಘನತೆಯ ಮಹತ್ವವನ್ನು ಆಳವಾಗಿ ಬಲ್ಲವರಾದ್ದರಿಂದ, ಸ್ವಾತಂತ್ರ್ಯ (ಲಿಬರ್ಟಿ), ಸಮಾನತೆ (ಇಕ್ವಿಟಿ) ಹಾಗೂ ಸಹೋದರತ್ವ (ಫ್ರೆಟರ್ನಿಟಿ) ಎಂಬೀ ತ್ರಿಕೂಟ (ಟ್ರಿನಿಟಿ) ಪರಿಕಲ್ಪನೆಗಳನ್ನು ರೂಪಿಸಿದರು ಹಾಗೂ ಅವುಗಳಿಗೆ ಸಂವಿಧಾನಾತ್ಮಕ ಮಾನ್ಯತೆಯನ್ನೂ ಕೊಟ್ಟರು.
ಒಟ್ಟಿನಲ್ಲಿ ಈ ತ್ರಿಕೂಟ ಪರಿಕಲ್ಪನೆಗಳ ತಾತ್ಪರ್ಯವೇನೆಂದರೆ, ಮನುಷ್ಯ ಘನತೆಯನ್ನು ಉಲ್ಲಂಘಿಸಲಾಗದು ಅನ್ನುವುದಾಗಿದೆ. ಈ ಎಲ್ಲ ವಿಶ್ಲೇಷಣೆಗಳ ಮೂಲಕ ಸ್ವಾತಂತ್ರ್ಯ, ದೇಶದ ಐಕ್ಯತೆ, ನ್ಯಾಯಸಮ್ಮತ ಸಮಾಜ, ಒಗ್ಗಟ್ಟು ಮೊದಲಾದ ಶ್ರೇಷ್ಠ ಮೌಲ್ಯಗಳ ಜೊತೆಗೆ ಮನುಷ್ಯ ಘನತೆಯನ್ನು ಅತ್ಯಂತ ಶ್ರೇಷ್ಠ ಮೌಲ್ಯವೆಂದು ಮನಗಾಣಲಾಗಿದೆ. ನೈತಿಕತೆಯ ಪ್ರಶ್ನೆಯೂ ಇಲ್ಲಿ ಮುಖ್ಯವಾಗುತ್ತದೆ. ಸಂವಿಧಾನದ ಆಶಯವೇ ಇದಾಗಿರುತ್ತದೆ.
ಆದರೆ ಈ ಎಲ್ಲ ಮೌಲ್ಯಗಳನ್ನು ಕೇವಲ ಕಾನೂನಾತ್ಮಕ ಪದಕೋಶದಂತೆ ಪರಿಗಣಿಸಿದಾಗ, ನೈತಿಕತೆಯೂ ಇರುವುದಿಲ್ಲ ಹಾಗೂ ಮನುಷ್ಯ ಘನತೆ ಎಂಬುದು ನೆಲೆಗೊಳ್ಳಲು ಸಾಧ್ಯವಾಗುವುದಿಲ್ಲ. ಆವಾಗ ನಮ್ಮ ಸಂವಿಧಾನದ ಆದರ್ಶ ಮತ್ತು ಆಚರಣೆಗಳ ನಡುವೆ ಅಗಾಧವಾದ ಕಂದಕ ಏರ್ಪಡುತ್ತದೆ.
ಇದುವರೆಗೂ ಗಮನಿಸಿದಂತೆ, ಮನುಷ್ಯ ಘನತೆಯ ಭಾಷಿಕ ರೂಪಗಳು ಕಾನೂನಾತ್ಮಕ ಪರಿಕರಗಳಲ್ಲಿ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಹೇಗೆ ಸಮರ್ಥಿಸುವ ಕ್ರಿಯೆಯಾಗಿದೆ ಅನ್ನುವುದನ್ನು ನೋಡಿದೆವು. ಅಂದರೆ ಮನುಷ್ಯ ಘನತೆ ಎನ್ನುವುದು ಕೇವಲ ಕಾನೂನಾತ್ಮಕ ಪರಿಕಲ್ಪನೆಯಲ್ಲ ಬದಲಾಗಿ ಬದುಕಿನ ಕೆಲವು ನಿರ್ದಿಷ್ಟ ತತ್ವಗಳನ್ನು ವ್ಯಕ್ತಪಡಿಸುತ್ತದೆ.
ವಾಸ್ತವದಲ್ಲಿ, ಈ ಮನುಷ್ಯ ಘನತೆ ಎಂಬುದು ನೈತಿಕ-ತಾತ್ವಿಕ ಪರಿಕಲ್ಪನೆಯೂ ಆಗಿರುತ್ತದೆ. ಇತರೆ ನೈತಿಕ ಪರಿಕಲ್ಪನೆಗಳಿಗೆ ಇರುವಂತೆ ಹಲವು ಬಗೆಯ ಅರ್ಥ ವಿನ್ಯಾಸ ಹಾಗೂ ಸಾಧ್ಯತೆಗಳು ಸಂದರ್ಭಕ್ಕೆ ಅನುಗುಣವಾಗಿ ಈ ಪರಿಕಲ್ಪನೆಯ ಸನ್ನಿವೇಶದಲ್ಲಿಯೂ ಹಲವು ಭಾಷಿಕ ಕ್ರಿಯೆಗಳ ಮೂಲಕ ಏರ್ಪಡುತ್ತವೆ. ಹಾಗಾಗಿ ಈ ಪರಿಭಾಷೆಯನ್ನು ಘನವಾದ ಮತ್ತು ತೆಳುವಾದ ಅರ್ಥಗಳಲ್ಲಿ ಬಳಸಲಾಗುತ್ತದೆ. ‘ನೈತಿಕ ಪದಗಳು ಸಂಕುಚಿತ ಮತ್ತು ವ್ಯಾಪಕವಾದ ಅರ್ಥಗಳನ್ನು ಹೊಂದಿರುತ್ತವೆ.ಆಯಾ ಸನ್ನಿವೇಶಗಳ ಪ್ರಮಾಣಕ್ಕೆ ಅನುಗುಣವಾಗಿ ಈ ಎರಡೂ ಸಾಂದರ್ಭಿಕ ಅರ್ಥಗಳನ್ನು ನಾವು ಬಳಸುತ್ತೇವೆ. ವಿಭಿನ್ನ ಸನ್ನಿವೇಶದಲ್ಲಿ ಇವುಗಳು ಅತ್ಯಂತ ಸೂಕ್ತವಾಗಿರುತ್ತವೆ ಮತ್ತು ವಿಭಿನ್ನ ಉದ್ದೇಶಗಳನ್ನು ಪೊರೈಸುತ್ತವೆ’ (1994,2) ಎಂದು ಮೈಕಲ್ ವಾಲ್ಜರ್ ಸ್ಪಷ್ಟವಾಗಿ ಹೇಳುತ್ತಾರೆ. ಇದನ್ನು ಇನ್ನಷ್ಟು ವಿಷದೀಕರಿಸಿ ನೋಡಿದರೆ, ಮನುಷ್ಯ ಘನತೆಯೊಂದಿಗೆ ಹೆಣೆದುಕೊಂಡಿರುವ ಭಾಷಿಕ ಕ್ರಿಯೆಗಳ ನಡುವಣ ಮುಖ್ಯವಾದ ವ್ಯತ್ಯಾಸಗಳನ್ನು ಈ ನೈತಿಕ ಅರ್ಥಗಳು ಪ್ರತಿಬಿಂಬಿಸುತ್ತವೆ.
ವ್ಯಾಪಕ ಅರ್ಥದಲ್ಲಿ ಇದನ್ನೊಂದು ನೈತಿಕ ಪರಿಕಲ್ಪನೆಯನ್ನಾಗಿ ಬಳಸಿದರೆ, ಮನುಷ್ಯ ಘನತೆಯು ‘ಮಾನವ’ ಮತ್ತು ‘ಘನತೆ’ ಎಂಬ ಎರಡೂ ಮೂಲಭೂತ ಹಾಗೂ ಪರಸ್ಪರ ಅಂತರ್ಸಂಬಂಧವನ್ನು ಹೊಂದಿರುವ ಆಯಾಮಗಳನ್ನು ಸೂಚಿಸುತ್ತದೆ. ವಾಸ್ತವದಲ್ಲಿ ಘನತೆಯ ಪ್ರಜ್ಞೆಯು ಈ ಲೋಕ ಮತ್ತು ಲೋಕದ ಜನರನ್ನು ನಾವು ಪರಿಭಾವಿಸುವ ವಿಧಾನದಲ್ಲಿಯೇ ಅಂತರ್ಗತವಾಗಿರುತ್ತದೆ.
ಆದರೆ ಮಾನವ ಎಂಬ ಪದವು ನಮ್ಮ ಪ್ರಜ್ಞೆ ಇಲ್ಲವೇ ಸೂಪ್ತಪ್ರಜ್ಞೆಯ ಮೂಲಕ ಮನುಷ್ಯ ಸ್ವಭಾವದ ಗ್ರಹಿಕೆಗಳಿಗೆ ಸಂಬಂಧಿಸಿರುತ್ತದೆ. ಲೋಕದ ವರ್ತನೆ, ಮೌಲ್ಯ ಹಾಗೂ ಪ್ರಾಪಂಚಿಕ ಬದುಕಿನ ಗುಣಲಕ್ಷಣಗಳನ್ನು ಮೌಲ್ಯ ನಿರ್ಣಯವನ್ನು ಮಾಡುವಲ್ಲಿ ಈ ಪ್ರಜ್ಞೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ.
ಒಟ್ಟಂದದಲ್ಲಿ ಮನುಷ್ಯ ಘನತೆ ಎಂಬೀ ವ್ಯಾಪಕ ಅರ್ಥವು ನೈತಿಕ ದೃಷ್ಟಿಕೋನಗಳನ್ನು ರೂಪಿಸುತ್ತದೆ. ಅಂದರೆ ಮನುಷ್ಯ ಬದುಕಿನ ಅಸ್ತಿತ್ವವೇ ಪ್ರಧಾನ ವಿನ್ಯಾಸವಾಗಿ, ಜಾತಿ, ಮತ, ಧರ್ಮ, ಭಾಷೆ, ಲಿಂಗ, ಪ್ರದೇಶಗಳು ಕೇವಲ ಸಾಮಾಜಿಕ ಭಿನ್ನತೆಯ ವಿನ್ಯಾಸಗಳಾಗುತ್ತವೆ.
ಮನುಷ್ಯ ಸಮೂಹದ ಘನತೆಯನ್ನು ಎತ್ತಿಹಿಡಿಯುವ ಇಂತಹ ಹಲವು ಸನ್ನಿವೇಶಗಳನ್ನು ನಮ್ಮ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪರಂಪರೆಗಳಲ್ಲಿಯೂ ಕಾಣುತ್ತೇವೆ. ಉದಾ.ಗೆ ಕುವೆಂಪು ಅವರು ತಮ್ಮ ಮಲೆಗಳಲ್ಲಿ ಮದುಮಗಳು ಕಾದಂಬರಿಯ ಪೀಠಿಕೆಯನ್ನಾಗಿ ಬಳಸಿಕೊಂಡಿರುವ ಈ ಮಾತುಗಳ ತಾತ್ಪರ್ಯವೂ ಮನುಷ್ಯ ಘನತೆಯ ಮಹತ್ವವನ್ನು ಕಂಡರಿಯುವ ಬಗೆಯಾಗಿದೆ.
“ಯಾರೂ ಮುಖ್ಯರಲ್ಲ ಅಮುಖ್ಯರೂ ಅಲ್ಲ,
ಯಾವುದೂ ಯಃಕಷ್ಚಿತವಲ್ಲ
ಯಾವುದಕ್ಕೂ ಮೊದಲಿಲ್ಲ
ಯಾವುದಕ್ಕೂ ತುದಿಯಿಲ್ಲ
ಯಾವುದೂ ಎಲ್ಲಿಯೂ ನಿಲ್ಲುವುದೂ ಇಲ್ಲ
ಕೊನೆ ಮುಟ್ಟುವುದೂ ಇಲ್ಲ,
ಕೊನೆ ಮುಟ್ಟುವುದೂ ಇಲ್ಲ,
ಎಲ್ಲಕ್ಕೂ ಇದೆ ಅರ್ಥ
ಯಾವುದೂ ಅಲ್ಲ ವ್ಯರ್ಥ
ನೀರೆಲ್ಲ ಊ ತೀರ್ಥ”.
–ಕುವೆಂಪು
ಈ ಪೀಠಿಕೆಯ ಮೂಲಕ ಮೈದಾಳಬಹುದಾದ ಭಾಷಿಕ ಕ್ರಿಯೆಗಳು ಮತ್ತು ಅರ್ಥಗಳನ್ನು ಯಾವುದೇ ಸೀಮಿತ ಸನ್ನಿವೇಶಕ್ಕೆ ಮಾತ್ರ ಸಂಬಂಧಿಸಿ ಹೇಳಲು ಸಾಧ್ಯವಿಲ್ಲ. ಆದರೆ ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ನಿರೂಪಿಸಿದ ಪಾತ್ರಗಳನ್ನು ಇಡೀಯಾಗಿ ಅವಲೋಕಿಸಿದರೆ, ಕುವೆಂಪು ಅವರ ಈ ಮಾತುಗಳಿಗೆ ನಿಶ್ಚಿತವಾಗಿಯೂ ಒಂದು ಮಹತ್ವ ದೊರೆಯುತ್ತದೆ.
ಅಂದರೆ ಇಡಿಯಾಗಿ ಮನುಷ್ಯ ಘನತೆಯ ಮಹತ್ವವನ್ನು ಸಾರುವ ನುಡಿಗಳಾಗಿ ಈ ಮಾತುಗಳು ಇಲ್ಲಿ ಸಾಕ್ಷಿಯಾಗುತ್ತವೆ. ಇದಕ್ಕೆ ಪೂರಕವಾಗಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಮಾಜವಾದಿ ತತ್ವವನ್ನು ಕುವೆಂಪು ಅವರು ಅತ್ಯಂತ ಬಲವಾಗಿ ನಂಬಿದ್ದರು.
ಇವರ ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ನೈತಿಕ ಮತ್ತು ತಾತ್ವಿಕ ಸ್ಪಷ್ಟತೆಯನ್ನು ನೋಡುತ್ತೇವೆ ಹಾಗೂ ಮನುಷ್ಯ ಘನತೆಯನ್ನು ಪರಿಪೂರ್ಣವಾಗಿ ನಂಬಿದ್ದ, ಕುವೆಂಪು ಅವರ ಕಾದಂಬರಿಗಳ ಬಗೆಗೆ ಪ್ರೊ. ಬಿ ಕೃಷ್ಣಪ್ಪನವರು ‘ಕುವೆಂಪು ಕಾದಂಬರಿಗಳಲ್ಲಿ ದಲಿತ ಜೀವನಕ್ರಮ’ ಎಂಬ ಮಹತ್ವದ ಲೇಖನವನ್ನು ಬರೆದಿರುವರು. ಈ ಲೇಖನದಲ್ಲಿ ಇವರು ಎತ್ತಿರುವ ಪ್ರಶ್ನೆಗಳು ತಾತ್ವಿಕವಾಗಿ, ಸಾಮಾಜಿಕ ನ್ಯಾಯ ಮತ್ತು ಸಾಂಸ್ಕೃತಿಕ ನ್ಯಾಯದ ಪ್ರಶ್ನೆಗಳಾಗಿ ಸರಿಯಾಗಿವೆ.
ಏಕೆಂದರೆ ಮನುಷ್ಯ ಘನತೆಯ ಪ್ರಶ್ನೆಯನ್ನೇ ವಿಶೇಷವಾಗಿ ದಲಿತ ಮತ್ತು ವಂಚಿತ ಸಮುದಾಯಗಳನ್ನು ಕೇಂದ್ರವಾಗಿಟ್ಟುಕೊಂಡ ಈ ಘನತೆಯ ಪ್ರಶ್ನೆಗಳು ಇಲ್ಲಿ ಮಹತ್ವವನ್ನು ಪಡೆಯುತ್ತವೆ. ಹಾಗಾದರೆ ಮನುಷ್ಯ ಘನತೆ ಕುರಿತ ಕುವೆಂಪು ಮತ್ತು ಕೃಷ್ಣಪ್ಪನವರ ನಡುವಣ ಗ್ರಹಿಕೆಗಳು ಪರಸ್ಪರ ಭಿನ್ನವಾಗಿವೆಯೇ? ಅಥವಾ ಸಾಹಿತ್ಯ ನಿರೂಪಣೆಗಳ ಬಗೆಗೆ ಈ ತರಹದ ಪ್ರಶ್ನೆಯನ್ನು ಕೇಳುವುದೇ ತಪ್ಪೇ? ಎನ್ನುವ ಅನುಮಾನಗಳೂ ಇಲ್ಲಿ ತಲೆಯೆತ್ತುತ್ತವೆ.
ಕನ್ನಡ ಸಾಹಿತ್ಯ ವಿಮರ್ಶೆಯ ಲೋಕ ಕೃಷ್ಣಪ್ಪವರ ಪ್ರಶ್ನೆಯೊಳಗೆ ಅಂತರ್ಗತವಾಗಿರುವ ಮನುಷ್ಯ ಘನತೆಯ ಪ್ರಶ್ನೆಯನ್ನೇ ನಗಣ್ಯಗೊಳಿಸಿವೆ. ಸಮಾಜ ವಿಜ್ಞಾನದ ಪ್ರಶ್ನೆಯನ್ನಾಗಿ ಪರಿಗಣಿಸಿ ಕೃಷ್ಣಪ್ಪನವರ ಪ್ರಶ್ನೆಯ ಘನತೆಯನ್ನು ಸಾಹಿತ್ಯ ವಿಮರ್ಶೆಯಲ್ಲಿ ತಳ್ಳಿಹಾಕಲಾಗಿದೆಯೇ? ಕುವೆಂಪು ಮತ್ತು ಕೃಷ್ಣಪ್ಪನವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾಳಜಿಗಳ ನಡುವೆ ಇಂತಹದೊಂದು ಕಂದಕವನ್ನು ಸಾಹಿತ್ಯ ವಿಮರ್ಶೆಯಲ್ಲಿ ಯಾಕೇ ಸೃಷ್ಟಿಸಲಾಗಿದೆ? ಅಂದರೆ ಕೃಷ್ಣಪ್ಪನವರ ಪ್ರಶ್ನೆಯನ್ನು ಕನ್ನಡ ವಿಮರ್ಶೆ ನಿಭಾಯಿಸಿದ ಬಗೆಯಲ್ಲಿಯೇ ಸಮಸ್ಯೆಗಳಿವೆ ಎನ್ನುವುದನ್ನು, ಈ ಕುರಿತ ವಾಗ್ವಾದಗಳಿಂದ ಗ್ರಹಿಸಬಹುದು. ಒಟ್ಟಿನಲ್ಲಿ ಮನುಷ್ಯ ಘನತೆಯನ್ನು ನಿರ್ವಹಿಸಿದ ಚರ್ಚೆಗಳೂ ಒಂದು ಸಾರ್ವತ್ರಿಕ ತಾತ್ವಿಕ ಚೌಕಟ್ಟನ್ನು ರೂಪಿಸಿ ಆ ಮೂಲಕ ಮನುಷ್ಯ ಘನತೆಯ ಸವಾಲುಗಳನ್ನು ನಾವು ಎದುರುಗೊಂಡಿಲ್ಲ ಅನ್ನುವುದು ಈಗಲಾದರೂ ನಮಗೆ ಮನವರಿಯಾಗುತ್ತದೆ ಅಂದುಕೊಂಡಿರುವೆ.
ಈ ಸಮಸ್ಯೆಗಳನ್ನು ಅತ್ಯಂತ ವ್ಯಾಪಕವಾಗಿ ಕನ್ನಡ ಸಾಹಿತ್ಯ ಪರಂಪರೆಯಲ್ಲಿಯೇ ನೋಡುತ್ತೇವೆ. ಉದಾ.ಗೆ ನಡೆ, ನುಡಿ, ಉಡಿಗೆ, ಆಹಾರ, ಜಾತಿ, ಧರ್ಮ, ಲಿಂಗ ಮೊದಲಾದ ವಿದ್ಯಮಾನಗಳನ್ನು ಕುರಿತ ವಚನಕಾರರ ನಿಲುವುಗಳ ಆಶಯವು ಮನುಷ್ಯ ಘನತೆಯನ್ನು ನೆಲೆಗೊಳಿಸುವುದೇ ಆಗಿರುತ್ತದೆ. ಇಲ್ಲಿಯೂ ಇಂತಹದೇ ಕಂದಕವನ್ನು ಹಲವು ವಚನಕಾರರಲ್ಲಿ ಕಾಣುತ್ತೇವೆ.
ಕಾರಣವೇನೆಂದರೆ, ವಚನಕಾರರ ಪೂರ್ವಾಶ್ರಮದ ವಾಸನೆ ಮತ್ತು ಕಳಂಕ, ಈ ಮನುಷ್ಯ ಘನತೆಯನ್ನು ಪಡೆದುಕೊಳ್ಳುವಲ್ಲಿ ಹೇಗೆ ಬಿಕ್ಕಟ್ಟುಗಳನ್ನು ರೂಪಿಸಿವೆ ಅನ್ನುವುದನ್ನು ವಚನ ವಾಂಜ್ಞಮಯದಲ್ಲಿ ಕಾಣುತ್ತೇವೆ. ಈ ಕುರಿತು ಸಾಕಷ್ಟು ಚರ್ಚೆಗಳನ್ನು ಬೆಳಸಬಹುದು ಆದರೆ ಈ ಬರಹದ ವ್ಯಾಪ್ತಿಯಲ್ಲಿ ಅದು ಸಾಧ್ಯವಾಗುತ್ತಿಲ್ಲ.
ಈ ಟಿಪ್ಪಣಿಯ ಚರ್ಚೆಗಳ ತಲೆಬರಹವು ‘ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ’ ಎಂದಾಗಿದೆ. ಆದರೆ ಪಗಗಳನ್ನೋ ಇಲ್ಲವೇ ವಾಕ್ಯಗಳನ್ನೋ ಉಲ್ಲೇಖಿಸಿ ಪ್ರತಿಯೊಂದಕ್ಕೂ ಇದು ಈ ಅರ್ಥ ಅದು ಆ ಅರ್ಥ ಎಂದು ವಿವರಣಾತ್ಮಕ ನಿದರ್ಶನಗಳನ್ನು ಕೊಡದೆ, ಇಡೀ ಭಾಷಿಕ ಸಂಕಥನದಲ್ಲಿ ಹಾಗೂ ನಾವು ನಮ್ಮ ಬದುಕಿನಲ್ಲಿ ರೂಪಿಸುವ ಸಂಕಥನಗಳ ಮೂಲಕ ಮನುಷ್ಯ ಘನತೆಯ ಪ್ರಶ್ನೆಯನ್ನು ಹೇಗೆ ನಿರ್ವಹಿಸುತ್ತೇವೆ? ಮತ್ತು ನಿಭಾಯಿಸಿದ್ದೇವೆ? ಪರಿಣಾಮವಾಗಿ ಸಾಮಾಜಿಕ-ಸಾಂಸ್ಕೃತಿಕ ಬಿಕ್ಕಟ್ಟುಗಳನ್ನು ಇಂದಿನ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿಯೂ ನಾವು ಹೇಗೆ ಅನುಭವಿಸುತ್ತೇವೆ.
ಹಾಗೂ ಮನುಷ್ಯ ಅಸ್ತಿತ್ವ ಮತ್ತು ಸ್ವಭಾವಗಳೊಡನೆ ತಳುಕು ಹಾಕಿಕೊಂಡಿರುವ ಈ “ಮನುಷ್ಯ ಘನತೆ”ಯೆಂಬ ಮೂಲಭೂತ ಪರಿಕಲ್ಪನೆಯನ್ನು ಅರಿಯದೇ, ಅದು ಹೇಗೆ ಪ್ರಜಾಸತ್ತಾತ್ಮಕ ಹಾಗೂ ನ್ಯಾಯಸಮ್ಮತ ಬದುಕನ್ನು ನಾವು ಬದುಕಲು ಸಾಧ್ಯ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243



