ನೆಲದನಿ
ನುಡಿಯ ಒಡಲು-06 : ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಭಾಗ-02
ಈ ಬರಹದ ಮೊದಲ ಭಾಗದಲ್ಲಿ ಮನುಷ್ಯ ಘನತೆ ಮತ್ತು ಭಾಷಿಕ ಕ್ರಿಯೆ ಎಂಬೀ ಎರಡೂ ಪರಿಕಲ್ಪನೆಗಳ ನಡುವಣ ನಂಟಸ್ತಿಕೆಯನ್ನು ಕುರಿತು ಕೆಲವು ತಾತ್ವಿಕ ಸಂಗತಿಗಳನ್ನು ಚರ್ಚಿಸಲಾಗಿದೆ. ಈ ಭಾಗದಲ್ಲಿ ಮನುಷ್ಯ ಘನತೆಯ ಪ್ರಾಥಮಿಕ ನೆಲೆಗಳನ್ನು ಭಾಷಿಕ ಆಯಾಮಗಳ ಮೂಲಕ ವಿಶ್ಲೇಷಿಸುವ ಪ್ರಯತ್ನವನ್ನು ಮಾಡೋಣ.
ಮನುಷ್ಯ ಘನತೆಯ ಪ್ರಶ್ನೆ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವ್ಯಾಪಕವಾಗಿ ಚರ್ಚೆಯಾಗುವುದು, ಪ್ರಮುಖವಾಗಿ ಕಾನೂನು ದಾಖಲೆಗಳಲ್ಲಿ. ಅಂದರೆ ಕಾನೂನು ಪರಿಭಾಷೆ ಮತ್ತು ಪರಿಕಲ್ಪನೆಗಳಲ್ಲಿ ಪ್ರಕಟಗೊಳ್ಳುತ್ತದೆ. ಕೆಲವು ನಿರ್ದಿಷ್ಟ ಕಾನೂನಾತ್ಮಕ ವಿವರಗಳ ಮೂಲಕ ಈ ಮನುಷ್ಯ ಘನತೆ ಎನ್ನುವ ಪರಿಕಲ್ಪನೆಯನ್ನು ಯಾವುದೇ ಒಂದು ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಮರ್ಥನೆಗಳನ್ನು ಮಂಡಿಸಲು ಬಳಸಲಾಗುತ್ತದೆ.
ಸಹಜವಾಗಿಯೇ ಆಯಾ ಸಂದರ್ಭಕ್ಕೆ ಅನುಸಾರವಾಗಿ ಈ ಪರಿಕಲ್ಪನೆಯ ವಿನ್ಯಾಸಗಳು ಕಾನೂನಾತ್ಮಕ ದಾಖಲೆಗಳಲ್ಲಿ ವ್ಯತ್ಯಾಸವಾಗುತ್ತವೆ. ಆದರೆ ಈ ಎಲ್ಲ ನಿಬಂಧನೆಗಳಿಗೆ ಮನುಷ್ಯ ಘನತೆಯನ್ನು ಎತ್ತಿಹಿಡಿಯುವ ಉದ್ದೇಶವೇ ಮುಖ್ಯವಾಗುತ್ತದೆ. ಉದಾಹರಣೆಗಾಗಿ ರಾಷ್ಟ್ರ-ಅಂತರ್ರಾಷ್ಟ್ರ ಮಟ್ಟದ ಕಾನೂನು ಪರಿಕರ ಮತ್ತು ದಾಖಲೆಗಳ ಪರಿಭಾಷೆ ಹಾಗೂ ಭಾಷಿಕ ಕ್ರಿಯೆಯನ್ನು ಪರಿಶೀಲಿಸಿದರೆ, ಭಾಷಿಕ ಕ್ರಿಯೆಯ ವ್ಯಾಪಕತೆ ಎಂತಹದು ಅನ್ನುವುದು ನಮಗೆಲ್ಲ ಅರ್ಥವಾಗುತ್ತದೆ.
ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ‘ನಾವು ಭಾರತೀಯರು...’ ಎಂಬ ಉದ್ಗಾರದಿಂದ ಶುರುವಾಗುವ ಈ ಹೇಳಿಕೆಯ ಮೊದಲ ಉದ್ದೇಶವೇ ನಮ್ಮೆಲ್ಲರ ನಡುವಣ ಘನತೆ ಮತ್ತು ಸಂಬಂಧವನ್ನು ಸೂಚಿಸುವುದಾಗಿದೆ. ಹಾಗಾಗಿ ಜಾತ್ಯತೀತತೆ, ಧರ್ಮನಿರಪೇಕ್ಷತೆ ಎಂಬೆಲ್ಲ ಪದಗಳನ್ನು ನೆಲೆಗೊಳಿಸಲು ಕಾರಣವೇ ಮನುಷ್ಯ ಘನತೆಯನ್ನು ಮನಗಾಣಲು ನಮಗೆ ಬೇಕಾಗಿರುವುದು ಕೇವಲ ನಾವು ಮನುಷ್ಯರು ಮತ್ತು ಆ ಅಸ್ತಿತ್ವದಲ್ಲಿ ಯಾವುದೇ ಭೇದಭಾವ ಇರಕೂಡದು ಎಂಬ ತಿಳಿವಳಿಕೆ ಮಾತ್ರ ಸಾಕು ಅನ್ನುವುದಾಗಿದೆ.
ಹೊರತು ನಮ್ಮ ಅಸ್ತಿತ್ವ, ಅಸ್ಮಿತೆ, ಘನತೆಗಳನ್ನು ಅರಿಯಲು ಯಾವುದೇ ಜಾತಿ, ಧರ್ಮ, ಪ್ರದೇಶ, ಭಾಷೆ, ಲಿಂಗ ಇತ್ಯಾದಿ ಸಂಗತಿಗಳ ಮಹತ್ವದ ಮೇಲೆ ವ್ಯಕ್ತಿಗಳ ಘನತೆಯನ್ನು ಅಳಿಯುವುದಾಗಲೀ ಇಲ್ಲವೇ ಮೌಲ್ಯನಿರ್ಣಯ ಮಾಡುವುದಾಗಲೀ ಕೊನೆಯಪಕ್ಷ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿ ಪರಿಭಾವಿಸಕೂಡದು ಅನ್ನುವ ತಾತ್ಪರ್ಯವನ್ನು ಇಲ್ಲಿ ಕಾಣುತ್ತೇವೆ.
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮನುಷ್ಯ ಘನತೆಯನ್ನು ಪ್ರತಿಪಾದಿಸುವ ದಾಖಲೆಗಾಗಿ, ದಿ ಚಾರ್ಟರ್ ಆಫ್ ಯುನೈಟೆಡ್ ನೇಶನ್ಸ್ (1945) ಪೀಠಿಕೆಯಲ್ಲಿ ನಿರೂಪಿಸಲಾದ ಹೇಳಿಕೆಗಳನ್ನು ಇಲ್ಲಿ ಗಮನಿಸಬಹುದು. ‘ಮುಂಬರುವ ಪೀಳಿಗೆಗಳನ್ನು ಯುದ್ಧದ ಭೀಕರತೆ ಮತ್ತು ದುಖದಿಂದ ರಕ್ಷಿಸಬೇಕು.
ಇಂತಹ ಯುದ್ಧಗಳಿಂದ ಈಗಾಗಲೇ ನಾವು ಕೇಳರಿಯದ ದುಖವನ್ನು ನಮ್ಮ ಬದುಕಿನವಧಿಯಲ್ಲಿ ಎರಡುಸಲ ಕಂಡಿದ್ದೇವೆ. ಮಾನವ ಹಕ್ಕು ಮತ್ತು ಮನುಷ್ಯ ಘನತೆಯಲ್ಲಿ ನಂಬಿಕೆಯನ್ನು ಮರುಪ್ರತಿಪಾದಿಸಬೇಕಿದೆ.ಯಾವುದರ ಮೂಲಕ ಮನುಷ್ಯ ಘನತೆ, ಗಂಡು-ಹೆಣ್ಣುಗಳ ನಡುವಣ ಸಮಾನ ಹಕ್ಕುಗಳು ಹಾಗೂ ದೊಡ್ಡ ಮತ್ತು ಚಿಕ್ಕ ದೇಶಗಳು ಎಂಬ ಭೇದವಿಲ್ಲದ ವಾತಾವರಣವನ್ನು ಸೃಷ್ಟಿಸಬೇಕೆಂದು ನಾವು ಯುನೈಟೆಡ್ ರಾಷ್ಟ್ರಗಳ ಜನತೆ ನಿರ್ಧರಿಸಿದ್ದೇವೆ’. ಈ ಘೋಷಣೆಯ ಹಿಂದಿನ ತಾತ್ವಿಕ ಮತ್ತು ನೈತಿಕ ಹೊಣೆಗಾರಿಕೆಯನ್ನು ಇಲ್ಲಿ ಬಳಸಲಾದ ಪದಗಳ ಮೂಲಕ ಅರಿಯಲು ಸಾಧ್ಯ.
ಇಲ್ಲಿಯ ಯಾವುದೇ ಪದವು ನಿಶ್ಚಿತವೂ ಮತ್ತು ನಿರಂತರವೂ ಆಗಿರುವ ಅರ್ಥವನ್ನು ಹೊಂದಿರುವುದಿಲ್ಲ. ಆದರೆ ಆಯಾ ಸನ್ನಿವೇಶಗಳ ಮೂಲಕ ನಾವು ಘನವಾದ ಮತ್ತು ತೆಳುವಾದ ಅರ್ಥಗಳನ್ನು ಪರಿಭಾವಿಸುತ್ತೇವೆ. ಇದು ಕೇವಲ ಯಾದೃಚ್ಛಿಕವಾಗಿ (ದಿಟ, ಪ್ರಾಥಿಮಿಕ ಅರ್ಥಗಳು ಯಾದೃಚ್ಛಿಕವಾಗಿಯೇ ಇರುತ್ತವೆ) ನಡೆಯುವುದಲ್ಲ. ಸನ್ನವೇಶಗಳು ಅಗಾಧವಾದ ಪಾತ್ರವನ್ನು ವಹಿಸುತ್ತವೆ. ಇದಕ್ಕೆ ಪ್ರಮುಖ ಕಾರಣವೇ ಭಾಷಿಕ ಕ್ರಿಯೆಗಳು ಎಂಬುದು ಇಲ್ಲಿ ನಿರ್ವಿವಿವಾದ.
ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ (1948) ಪೀಠಿಕೆಯಲ್ಲಿಯೂ ಈ ಬಗೆಯ ಸಂಗತಿಗಳನ್ನೇ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಅಂದರೆ ಈ ಜಗತ್ತಿನ ಮನುಷ್ಯರೆಲ್ಲರಲ್ಲಿ ಅಂತರ್ನಿಹಿತವಾದ ಘನತೆ ಮತ್ತು ಮನುಷ್ಯ ಸಮೂಹಗಳಿಗೆ ಸಮಾನ ಮತ್ತು ಆತ್ಯಂತಿಕವಾದ ಹಕ್ಕುಗಳನ್ನು ಮಾನ್ಯಗೊಳಿಸಬೇಕು.
ಈ ಜಗತ್ತಿನಲ್ಲಿ ಸ್ವಾತಂತ್ರ್ಯ, ನ್ಯಾಯ ಹಾಗೂ ಶಾಂತಿಯನ್ನು ನೆಲೆಗೊಳಿಸಲು ಇವುಗಳು ಅಡಿಪಾಯವಾಗಿವೆ. ಆದರೆ ಈ ಮಾನವ ಹಕ್ಕುಗಳ ಬಗೆಗೆ ನಿರ್ಲಕ್ಷ್ಯ ಹಾಗೂ ತಿರಸ್ಕಾರವು ಅನಾಗರಿಕ ಕೃತ್ಯಗಳಿಗೆ ಕಾರಣವಾಗಿವೆ. ಇದು ಮಾನವಕುಲದ ಆತ್ಮಸಾಕ್ಷಿಯನ್ನೇ ಕೆರಳಿಸಿದೆ. ಇಡೀ ಜಗತ್ತಿನ ಮನುಷ್ಯರಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ನಂಬಿಕೆ ಹಾಗೂ ಭಯದಿಂದ ಬಿಡುಗಡೆಯನ್ನು ನೆಲೆಗೊಳಿಸಲು ಇದು ಒತ್ತಾಸೆಯಾಗುತ್ತದೆ.
ಸಾಮಾನ್ಯ ಜನರ ಆಶೋತ್ತರಗಳನ್ನು ಎತ್ತಿಹಿಡಿಯುವ ಮಹತ್ತರವಾದ ಘೋಷಣೆ ಇದಾಗಿದೆ. ಮನುಷ್ಯ ಘನತೆ ಮತ್ತು ಮಾನವ ಹಕ್ಕುಗಳು ಎಂಬೀ ಎರಡೂ ಪರಿಕಲ್ಪನೆಗಳು ಪ್ರತ್ಯೇಕ ಮತ್ತು ಪರಸ್ಪರ ಅವಲಂಬಿತವೆಂದು ಯಾರಾದರೂ ಹೇಳಬಹುದು. ಆದರೆ ಇದುವರೆಗೂ ಯಾರು ಕೂಡ ಈ ಎರಡೂ ಪರಿಕಲ್ಪನೆಗಳ ನಡುವಣ ಪರಸ್ಪರ ಅವಲಂಬನೆಯನ್ನು ಯಾವುದೇ ವ್ಯವಸ್ಥಿತ ಮತ್ತು ಸ್ಪಷ್ಟ ಸೂತ್ರಗಳ ಮೂಲಕ ವ್ಯಾಖ್ಯಾನಿಸಿಲ್ಲ ಅನ್ನುವುದು ಗಮನಾರ್ಹ.
ವಿಶ್ವಸಂಸ್ಥೆಯ ಇನ್ನೆರಡು ನಡೆಗಳನ್ನು ಅವಲೋಕಿಸಿದರೆ, ಈ ಪರಿಕಲ್ಪನೆಗಳ ನಡುವಿನ ನಂಟಸ್ತಿಕೆಯನ್ನು ಇನ್ನಷ್ಟು ನಿಚ್ಚಳಗೊಳಿಸುತ್ತವೆ. ವಿಶ್ವಸಂಸ್ಥೆಯ ಚಾರ್ಟರ್ನಲ್ಲಿ ಘೋಷಿಸಲಾದ ತತ್ವಗಳಿಗೆ ಪೂರಕವಾಗಿ, ಮನುಷ್ಯನ ಅಂತರ್ಗತ ಘನತೆಯನ್ನು ಮತ್ತು ಇಡೀ ಜಗತ್ತಿನ ಮನುಷ್ಯರಲ್ಲಿ ಸಮಾನ ಹಾಗೂ ಆತ್ಯಂತಿಕ ಹಕ್ಕುಗಳನ್ನು ಮಾನ್ಯ ಮಾಡುವುದರಿಂದ ಈ ಲೋಕದ ಜನರ ಸ್ವಾತಂತ್ರ್ಯ, ನ್ಯಾಯ ಮತ್ತು ಶಾಂತಿಯನ್ನು ನಿರಂತರಗೊಳಿಸುವಲ್ಲಿ ಇವು ಅಡಿಪಾಯವಾಗುತ್ತವೆ.
ಮನುಷ್ಯನ ಅಂತರ್ಗತ ಘನತೆಯಿಂದಲೇ ರೂಪಿಸಲಾಗುವ ಈ ಹಕ್ಕುಗಳನ್ನು ಮಾನ್ಯಗೊಳಿಸುವುದು ಮುಖ್ಯ. ವಿಶ್ವಸಂಸ್ಥೆಯ ಈ ದಾಖಲೆಗಳು ಹೇಳುವಂತೆ, ಮನುಷ್ಯ ಘನತೆ ಎಂಬುದು ಅತ್ಯಂತ ಶ್ರೇಷ್ಠವಾದ ಮೌಲ್ಯವಾಗಿದೆ ಎಂದು ಪರಿಗಣಿಸುತ್ತವೆ. ಇದು ಮಾನವ ಹಕ್ಕುಗಳಿಂದ ಮಾತ್ರ ಪ್ರತ್ಯೇಕಗೊಳ್ಳುವುದಷ್ಟೆಯಲ್ಲ, ಆ ಪರಿಕಲ್ಪನೆಯನ್ನೇ ಪಲ್ಲಟಗೊಳಿಸಿದೆ. ಮನುಷ್ಯ ಘನತೆಯಿಂದಲೇ ಮೈದಾಳಿದ ಈ ಮಾನವ ಹಕ್ಕುಗಳ ಪರಿಕಲ್ಪನೆ ಆ ನಂತರದಲ್ಲಿ ತನ್ನದೆಯಾದ ಗುಣಲಕ್ಷಣಗಳನ್ನು ಮೈಗೂಡಿಸಿಕೊಂಡಿದೆ.
ಎಷ್ಟೋ ಸನ್ನಿವೇಶಗಳಲ್ಲಿ ಈ ಮನುಷ್ಯ ಘನತೆಯ ಗುಣಗಳು ಎಂತಹವು ಎನ್ನುವುದನ್ನು ಸ್ಪಷ್ಟಪಡಿಸದೇ ಕೇವಲ ಒಂದು ಕಾನೂನಿನ ಪದವನ್ನಾಗಿ ಬಳಸಲಾಗುತ್ತದೆ. ಮನುಷ್ಯ ಘನತೆಯ ಮೂಲತತ್ವಗಳಾವವು? ಅನ್ನುವುದನ್ನು ಈ ಕಾನೂನು ಪದಕೋಶವು ನಿಚ್ಚಳಗೊಳಿಸದು. ಹಾಗಾಗಿ ಭಾಷಿಕ ನಿರೂಪಣೆಗಳು ನಮ್ಮ ಸಾಮಾಜಿಕ ವಿವೇಕವನ್ನು ಹೇಗೆ ಪ್ರಕಟಿಸುತ್ತವೆ ಎಂಬ ಸಂವೇದನೆಯನ್ನು ಹೊಂದುವುದು ಅವಶ್ಯ.
ಸಾಮಾಜಿಕ ಅಂತಸ್ತಿಗೆ ಅನುಗುಣವಾಗಿ ಮನುಷ್ಯ ಘನತೆಯನ್ನು ಸೂಚಿಸುವ ಭಾಷಿಕ ಕ್ರಿಯೆಗಳೇ ನಮ್ಮನಮ್ಮ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಸಮರ್ಥಿಸುತ್ತವೆ. ಹೀಗೆ ಏರ್ಪಡುವ ಅಸಮಾನತೆ ಇಲ್ಲವೇ ತಾರತಮ್ಯವನ್ನು ಅಳಿಸಲು ಬೇಕಾಗುವ ಪರಿಕರವೇ, ಈ ಮನುಷ್ಯ ಘನತೆ.
ಆದ್ದರಿಂದ ಭಾರತೀಯ ಸಂವಿಧಾನವು ತನ್ನೆಲ ನಾಗರಿಕರಲ್ಲಿ ಸಹೋದರತ್ವ/ಭ್ರಾತೃತ್ವವನ್ನು ಉತ್ತೇಜಿಸುವ ಮೂಲಕ ವ್ಯಕ್ತಿಯ ಘನತೆ ಮತ್ತು ರಾಷ್ಟ್ರದ ಏಕತೆ ಹಾಗೂ ಐಕ್ಯತೆಯನ್ನು ಸಾಧಿಸಲು ಆಶಿಸುತ್ತದೆ. ಹಾಗಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವ್ಯಕ್ತಿ ಘನತೆಯ ಮಹತ್ವವನ್ನು ಆಳವಾಗಿ ಬಲ್ಲವರಾದ್ದರಿಂದ, ಸ್ವಾತಂತ್ರ್ಯ (ಲಿಬರ್ಟಿ), ಸಮಾನತೆ (ಇಕ್ವಿಟಿ) ಹಾಗೂ ಸಹೋದರತ್ವ (ಫ್ರೆಟರ್ನಿಟಿ) ಎಂಬೀ ತ್ರಿಕೂಟ (ಟ್ರಿನಿಟಿ) ಪರಿಕಲ್ಪನೆಗಳನ್ನು ರೂಪಿಸಿದರು ಹಾಗೂ ಅವುಗಳಿಗೆ ಸಂವಿಧಾನಾತ್ಮಕ ಮಾನ್ಯತೆಯನ್ನೂ ಕೊಟ್ಟರು.
ಒಟ್ಟಿನಲ್ಲಿ ಈ ತ್ರಿಕೂಟ ಪರಿಕಲ್ಪನೆಗಳ ತಾತ್ಪರ್ಯವೇನೆಂದರೆ, ಮನುಷ್ಯ ಘನತೆಯನ್ನು ಉಲ್ಲಂಘಿಸಲಾಗದು ಅನ್ನುವುದಾಗಿದೆ. ಈ ಎಲ್ಲ ವಿಶ್ಲೇಷಣೆಗಳ ಮೂಲಕ ಸ್ವಾತಂತ್ರ್ಯ, ದೇಶದ ಐಕ್ಯತೆ, ನ್ಯಾಯಸಮ್ಮತ ಸಮಾಜ, ಒಗ್ಗಟ್ಟು ಮೊದಲಾದ ಶ್ರೇಷ್ಠ ಮೌಲ್ಯಗಳ ಜೊತೆಗೆ ಮನುಷ್ಯ ಘನತೆಯನ್ನು ಅತ್ಯಂತ ಶ್ರೇಷ್ಠ ಮೌಲ್ಯವೆಂದು ಮನಗಾಣಲಾಗಿದೆ. ನೈತಿಕತೆಯ ಪ್ರಶ್ನೆಯೂ ಇಲ್ಲಿ ಮುಖ್ಯವಾಗುತ್ತದೆ. ಸಂವಿಧಾನದ ಆಶಯವೇ ಇದಾಗಿರುತ್ತದೆ.
ಆದರೆ ಈ ಎಲ್ಲ ಮೌಲ್ಯಗಳನ್ನು ಕೇವಲ ಕಾನೂನಾತ್ಮಕ ಪದಕೋಶದಂತೆ ಪರಿಗಣಿಸಿದಾಗ, ನೈತಿಕತೆಯೂ ಇರುವುದಿಲ್ಲ ಹಾಗೂ ಮನುಷ್ಯ ಘನತೆ ಎಂಬುದು ನೆಲೆಗೊಳ್ಳಲು ಸಾಧ್ಯವಾಗುವುದಿಲ್ಲ. ಆವಾಗ ನಮ್ಮ ಸಂವಿಧಾನದ ಆದರ್ಶ ಮತ್ತು ಆಚರಣೆಗಳ ನಡುವೆ ಅಗಾಧವಾದ ಕಂದಕ ಏರ್ಪಡುತ್ತದೆ.
ಇದುವರೆಗೂ ಗಮನಿಸಿದಂತೆ, ಮನುಷ್ಯ ಘನತೆಯ ಭಾಷಿಕ ರೂಪಗಳು ಕಾನೂನಾತ್ಮಕ ಪರಿಕರಗಳಲ್ಲಿ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಹೇಗೆ ಸಮರ್ಥಿಸುವ ಕ್ರಿಯೆಯಾಗಿದೆ ಅನ್ನುವುದನ್ನು ನೋಡಿದೆವು. ಅಂದರೆ ಮನುಷ್ಯ ಘನತೆ ಎನ್ನುವುದು ಕೇವಲ ಕಾನೂನಾತ್ಮಕ ಪರಿಕಲ್ಪನೆಯಲ್ಲ ಬದಲಾಗಿ ಬದುಕಿನ ಕೆಲವು ನಿರ್ದಿಷ್ಟ ತತ್ವಗಳನ್ನು ವ್ಯಕ್ತಪಡಿಸುತ್ತದೆ.
ವಾಸ್ತವದಲ್ಲಿ, ಈ ಮನುಷ್ಯ ಘನತೆ ಎಂಬುದು ನೈತಿಕ-ತಾತ್ವಿಕ ಪರಿಕಲ್ಪನೆಯೂ ಆಗಿರುತ್ತದೆ. ಇತರೆ ನೈತಿಕ ಪರಿಕಲ್ಪನೆಗಳಿಗೆ ಇರುವಂತೆ ಹಲವು ಬಗೆಯ ಅರ್ಥ ವಿನ್ಯಾಸ ಹಾಗೂ ಸಾಧ್ಯತೆಗಳು ಸಂದರ್ಭಕ್ಕೆ ಅನುಗುಣವಾಗಿ ಈ ಪರಿಕಲ್ಪನೆಯ ಸನ್ನಿವೇಶದಲ್ಲಿಯೂ ಹಲವು ಭಾಷಿಕ ಕ್ರಿಯೆಗಳ ಮೂಲಕ ಏರ್ಪಡುತ್ತವೆ. ಹಾಗಾಗಿ ಈ ಪರಿಭಾಷೆಯನ್ನು ಘನವಾದ ಮತ್ತು ತೆಳುವಾದ ಅರ್ಥಗಳಲ್ಲಿ ಬಳಸಲಾಗುತ್ತದೆ. ‘ನೈತಿಕ ಪದಗಳು ಸಂಕುಚಿತ ಮತ್ತು ವ್ಯಾಪಕವಾದ ಅರ್ಥಗಳನ್ನು ಹೊಂದಿರುತ್ತವೆ.ಆಯಾ ಸನ್ನಿವೇಶಗಳ ಪ್ರಮಾಣಕ್ಕೆ ಅನುಗುಣವಾಗಿ ಈ ಎರಡೂ ಸಾಂದರ್ಭಿಕ ಅರ್ಥಗಳನ್ನು ನಾವು ಬಳಸುತ್ತೇವೆ. ವಿಭಿನ್ನ ಸನ್ನಿವೇಶದಲ್ಲಿ ಇವುಗಳು ಅತ್ಯಂತ ಸೂಕ್ತವಾಗಿರುತ್ತವೆ ಮತ್ತು ವಿಭಿನ್ನ ಉದ್ದೇಶಗಳನ್ನು ಪೊರೈಸುತ್ತವೆ’ (1994,2) ಎಂದು ಮೈಕಲ್ ವಾಲ್ಜರ್ ಸ್ಪಷ್ಟವಾಗಿ ಹೇಳುತ್ತಾರೆ. ಇದನ್ನು ಇನ್ನಷ್ಟು ವಿಷದೀಕರಿಸಿ ನೋಡಿದರೆ, ಮನುಷ್ಯ ಘನತೆಯೊಂದಿಗೆ ಹೆಣೆದುಕೊಂಡಿರುವ ಭಾಷಿಕ ಕ್ರಿಯೆಗಳ ನಡುವಣ ಮುಖ್ಯವಾದ ವ್ಯತ್ಯಾಸಗಳನ್ನು ಈ ನೈತಿಕ ಅರ್ಥಗಳು ಪ್ರತಿಬಿಂಬಿಸುತ್ತವೆ.
ವ್ಯಾಪಕ ಅರ್ಥದಲ್ಲಿ ಇದನ್ನೊಂದು ನೈತಿಕ ಪರಿಕಲ್ಪನೆಯನ್ನಾಗಿ ಬಳಸಿದರೆ, ಮನುಷ್ಯ ಘನತೆಯು ‘ಮಾನವ’ ಮತ್ತು ‘ಘನತೆ’ ಎಂಬ ಎರಡೂ ಮೂಲಭೂತ ಹಾಗೂ ಪರಸ್ಪರ ಅಂತರ್ಸಂಬಂಧವನ್ನು ಹೊಂದಿರುವ ಆಯಾಮಗಳನ್ನು ಸೂಚಿಸುತ್ತದೆ. ವಾಸ್ತವದಲ್ಲಿ ಘನತೆಯ ಪ್ರಜ್ಞೆಯು ಈ ಲೋಕ ಮತ್ತು ಲೋಕದ ಜನರನ್ನು ನಾವು ಪರಿಭಾವಿಸುವ ವಿಧಾನದಲ್ಲಿಯೇ ಅಂತರ್ಗತವಾಗಿರುತ್ತದೆ.
ಆದರೆ ಮಾನವ ಎಂಬ ಪದವು ನಮ್ಮ ಪ್ರಜ್ಞೆ ಇಲ್ಲವೇ ಸೂಪ್ತಪ್ರಜ್ಞೆಯ ಮೂಲಕ ಮನುಷ್ಯ ಸ್ವಭಾವದ ಗ್ರಹಿಕೆಗಳಿಗೆ ಸಂಬಂಧಿಸಿರುತ್ತದೆ. ಲೋಕದ ವರ್ತನೆ, ಮೌಲ್ಯ ಹಾಗೂ ಪ್ರಾಪಂಚಿಕ ಬದುಕಿನ ಗುಣಲಕ್ಷಣಗಳನ್ನು ಮೌಲ್ಯ ನಿರ್ಣಯವನ್ನು ಮಾಡುವಲ್ಲಿ ಈ ಪ್ರಜ್ಞೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ.
ಒಟ್ಟಂದದಲ್ಲಿ ಮನುಷ್ಯ ಘನತೆ ಎಂಬೀ ವ್ಯಾಪಕ ಅರ್ಥವು ನೈತಿಕ ದೃಷ್ಟಿಕೋನಗಳನ್ನು ರೂಪಿಸುತ್ತದೆ. ಅಂದರೆ ಮನುಷ್ಯ ಬದುಕಿನ ಅಸ್ತಿತ್ವವೇ ಪ್ರಧಾನ ವಿನ್ಯಾಸವಾಗಿ, ಜಾತಿ, ಮತ, ಧರ್ಮ, ಭಾಷೆ, ಲಿಂಗ, ಪ್ರದೇಶಗಳು ಕೇವಲ ಸಾಮಾಜಿಕ ಭಿನ್ನತೆಯ ವಿನ್ಯಾಸಗಳಾಗುತ್ತವೆ.
ಮನುಷ್ಯ ಸಮೂಹದ ಘನತೆಯನ್ನು ಎತ್ತಿಹಿಡಿಯುವ ಇಂತಹ ಹಲವು ಸನ್ನಿವೇಶಗಳನ್ನು ನಮ್ಮ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪರಂಪರೆಗಳಲ್ಲಿಯೂ ಕಾಣುತ್ತೇವೆ. ಉದಾ.ಗೆ ಕುವೆಂಪು ಅವರು ತಮ್ಮ ಮಲೆಗಳಲ್ಲಿ ಮದುಮಗಳು ಕಾದಂಬರಿಯ ಪೀಠಿಕೆಯನ್ನಾಗಿ ಬಳಸಿಕೊಂಡಿರುವ ಈ ಮಾತುಗಳ ತಾತ್ಪರ್ಯವೂ ಮನುಷ್ಯ ಘನತೆಯ ಮಹತ್ವವನ್ನು ಕಂಡರಿಯುವ ಬಗೆಯಾಗಿದೆ.
“ಯಾರೂ ಮುಖ್ಯರಲ್ಲ ಅಮುಖ್ಯರೂ ಅಲ್ಲ,
ಯಾವುದೂ ಯಃಕಷ್ಚಿತವಲ್ಲ
ಯಾವುದಕ್ಕೂ ಮೊದಲಿಲ್ಲ
ಯಾವುದಕ್ಕೂ ತುದಿಯಿಲ್ಲ
ಯಾವುದೂ ಎಲ್ಲಿಯೂ ನಿಲ್ಲುವುದೂ ಇಲ್ಲ
ಕೊನೆ ಮುಟ್ಟುವುದೂ ಇಲ್ಲ,
ಕೊನೆ ಮುಟ್ಟುವುದೂ ಇಲ್ಲ,
ಎಲ್ಲಕ್ಕೂ ಇದೆ ಅರ್ಥ
ಯಾವುದೂ ಅಲ್ಲ ವ್ಯರ್ಥ
ನೀರೆಲ್ಲ ಊ ತೀರ್ಥ”.
–ಕುವೆಂಪು
ಈ ಪೀಠಿಕೆಯ ಮೂಲಕ ಮೈದಾಳಬಹುದಾದ ಭಾಷಿಕ ಕ್ರಿಯೆಗಳು ಮತ್ತು ಅರ್ಥಗಳನ್ನು ಯಾವುದೇ ಸೀಮಿತ ಸನ್ನಿವೇಶಕ್ಕೆ ಮಾತ್ರ ಸಂಬಂಧಿಸಿ ಹೇಳಲು ಸಾಧ್ಯವಿಲ್ಲ. ಆದರೆ ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ನಿರೂಪಿಸಿದ ಪಾತ್ರಗಳನ್ನು ಇಡೀಯಾಗಿ ಅವಲೋಕಿಸಿದರೆ, ಕುವೆಂಪು ಅವರ ಈ ಮಾತುಗಳಿಗೆ ನಿಶ್ಚಿತವಾಗಿಯೂ ಒಂದು ಮಹತ್ವ ದೊರೆಯುತ್ತದೆ.
ಅಂದರೆ ಇಡಿಯಾಗಿ ಮನುಷ್ಯ ಘನತೆಯ ಮಹತ್ವವನ್ನು ಸಾರುವ ನುಡಿಗಳಾಗಿ ಈ ಮಾತುಗಳು ಇಲ್ಲಿ ಸಾಕ್ಷಿಯಾಗುತ್ತವೆ. ಇದಕ್ಕೆ ಪೂರಕವಾಗಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಮಾಜವಾದಿ ತತ್ವವನ್ನು ಕುವೆಂಪು ಅವರು ಅತ್ಯಂತ ಬಲವಾಗಿ ನಂಬಿದ್ದರು.
ಇವರ ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ನೈತಿಕ ಮತ್ತು ತಾತ್ವಿಕ ಸ್ಪಷ್ಟತೆಯನ್ನು ನೋಡುತ್ತೇವೆ ಹಾಗೂ ಮನುಷ್ಯ ಘನತೆಯನ್ನು ಪರಿಪೂರ್ಣವಾಗಿ ನಂಬಿದ್ದ, ಕುವೆಂಪು ಅವರ ಕಾದಂಬರಿಗಳ ಬಗೆಗೆ ಪ್ರೊ. ಬಿ ಕೃಷ್ಣಪ್ಪನವರು ‘ಕುವೆಂಪು ಕಾದಂಬರಿಗಳಲ್ಲಿ ದಲಿತ ಜೀವನಕ್ರಮ’ ಎಂಬ ಮಹತ್ವದ ಲೇಖನವನ್ನು ಬರೆದಿರುವರು. ಈ ಲೇಖನದಲ್ಲಿ ಇವರು ಎತ್ತಿರುವ ಪ್ರಶ್ನೆಗಳು ತಾತ್ವಿಕವಾಗಿ, ಸಾಮಾಜಿಕ ನ್ಯಾಯ ಮತ್ತು ಸಾಂಸ್ಕೃತಿಕ ನ್ಯಾಯದ ಪ್ರಶ್ನೆಗಳಾಗಿ ಸರಿಯಾಗಿವೆ.
ಏಕೆಂದರೆ ಮನುಷ್ಯ ಘನತೆಯ ಪ್ರಶ್ನೆಯನ್ನೇ ವಿಶೇಷವಾಗಿ ದಲಿತ ಮತ್ತು ವಂಚಿತ ಸಮುದಾಯಗಳನ್ನು ಕೇಂದ್ರವಾಗಿಟ್ಟುಕೊಂಡ ಈ ಘನತೆಯ ಪ್ರಶ್ನೆಗಳು ಇಲ್ಲಿ ಮಹತ್ವವನ್ನು ಪಡೆಯುತ್ತವೆ. ಹಾಗಾದರೆ ಮನುಷ್ಯ ಘನತೆ ಕುರಿತ ಕುವೆಂಪು ಮತ್ತು ಕೃಷ್ಣಪ್ಪನವರ ನಡುವಣ ಗ್ರಹಿಕೆಗಳು ಪರಸ್ಪರ ಭಿನ್ನವಾಗಿವೆಯೇ? ಅಥವಾ ಸಾಹಿತ್ಯ ನಿರೂಪಣೆಗಳ ಬಗೆಗೆ ಈ ತರಹದ ಪ್ರಶ್ನೆಯನ್ನು ಕೇಳುವುದೇ ತಪ್ಪೇ? ಎನ್ನುವ ಅನುಮಾನಗಳೂ ಇಲ್ಲಿ ತಲೆಯೆತ್ತುತ್ತವೆ.
ಕನ್ನಡ ಸಾಹಿತ್ಯ ವಿಮರ್ಶೆಯ ಲೋಕ ಕೃಷ್ಣಪ್ಪವರ ಪ್ರಶ್ನೆಯೊಳಗೆ ಅಂತರ್ಗತವಾಗಿರುವ ಮನುಷ್ಯ ಘನತೆಯ ಪ್ರಶ್ನೆಯನ್ನೇ ನಗಣ್ಯಗೊಳಿಸಿವೆ. ಸಮಾಜ ವಿಜ್ಞಾನದ ಪ್ರಶ್ನೆಯನ್ನಾಗಿ ಪರಿಗಣಿಸಿ ಕೃಷ್ಣಪ್ಪನವರ ಪ್ರಶ್ನೆಯ ಘನತೆಯನ್ನು ಸಾಹಿತ್ಯ ವಿಮರ್ಶೆಯಲ್ಲಿ ತಳ್ಳಿಹಾಕಲಾಗಿದೆಯೇ? ಕುವೆಂಪು ಮತ್ತು ಕೃಷ್ಣಪ್ಪನವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾಳಜಿಗಳ ನಡುವೆ ಇಂತಹದೊಂದು ಕಂದಕವನ್ನು ಸಾಹಿತ್ಯ ವಿಮರ್ಶೆಯಲ್ಲಿ ಯಾಕೇ ಸೃಷ್ಟಿಸಲಾಗಿದೆ? ಅಂದರೆ ಕೃಷ್ಣಪ್ಪನವರ ಪ್ರಶ್ನೆಯನ್ನು ಕನ್ನಡ ವಿಮರ್ಶೆ ನಿಭಾಯಿಸಿದ ಬಗೆಯಲ್ಲಿಯೇ ಸಮಸ್ಯೆಗಳಿವೆ ಎನ್ನುವುದನ್ನು, ಈ ಕುರಿತ ವಾಗ್ವಾದಗಳಿಂದ ಗ್ರಹಿಸಬಹುದು. ಒಟ್ಟಿನಲ್ಲಿ ಮನುಷ್ಯ ಘನತೆಯನ್ನು ನಿರ್ವಹಿಸಿದ ಚರ್ಚೆಗಳೂ ಒಂದು ಸಾರ್ವತ್ರಿಕ ತಾತ್ವಿಕ ಚೌಕಟ್ಟನ್ನು ರೂಪಿಸಿ ಆ ಮೂಲಕ ಮನುಷ್ಯ ಘನತೆಯ ಸವಾಲುಗಳನ್ನು ನಾವು ಎದುರುಗೊಂಡಿಲ್ಲ ಅನ್ನುವುದು ಈಗಲಾದರೂ ನಮಗೆ ಮನವರಿಯಾಗುತ್ತದೆ ಅಂದುಕೊಂಡಿರುವೆ.
ಈ ಸಮಸ್ಯೆಗಳನ್ನು ಅತ್ಯಂತ ವ್ಯಾಪಕವಾಗಿ ಕನ್ನಡ ಸಾಹಿತ್ಯ ಪರಂಪರೆಯಲ್ಲಿಯೇ ನೋಡುತ್ತೇವೆ. ಉದಾ.ಗೆ ನಡೆ, ನುಡಿ, ಉಡಿಗೆ, ಆಹಾರ, ಜಾತಿ, ಧರ್ಮ, ಲಿಂಗ ಮೊದಲಾದ ವಿದ್ಯಮಾನಗಳನ್ನು ಕುರಿತ ವಚನಕಾರರ ನಿಲುವುಗಳ ಆಶಯವು ಮನುಷ್ಯ ಘನತೆಯನ್ನು ನೆಲೆಗೊಳಿಸುವುದೇ ಆಗಿರುತ್ತದೆ. ಇಲ್ಲಿಯೂ ಇಂತಹದೇ ಕಂದಕವನ್ನು ಹಲವು ವಚನಕಾರರಲ್ಲಿ ಕಾಣುತ್ತೇವೆ.
ಕಾರಣವೇನೆಂದರೆ, ವಚನಕಾರರ ಪೂರ್ವಾಶ್ರಮದ ವಾಸನೆ ಮತ್ತು ಕಳಂಕ, ಈ ಮನುಷ್ಯ ಘನತೆಯನ್ನು ಪಡೆದುಕೊಳ್ಳುವಲ್ಲಿ ಹೇಗೆ ಬಿಕ್ಕಟ್ಟುಗಳನ್ನು ರೂಪಿಸಿವೆ ಅನ್ನುವುದನ್ನು ವಚನ ವಾಂಜ್ಞಮಯದಲ್ಲಿ ಕಾಣುತ್ತೇವೆ. ಈ ಕುರಿತು ಸಾಕಷ್ಟು ಚರ್ಚೆಗಳನ್ನು ಬೆಳಸಬಹುದು ಆದರೆ ಈ ಬರಹದ ವ್ಯಾಪ್ತಿಯಲ್ಲಿ ಅದು ಸಾಧ್ಯವಾಗುತ್ತಿಲ್ಲ.
ಈ ಟಿಪ್ಪಣಿಯ ಚರ್ಚೆಗಳ ತಲೆಬರಹವು ‘ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ’ ಎಂದಾಗಿದೆ. ಆದರೆ ಪಗಗಳನ್ನೋ ಇಲ್ಲವೇ ವಾಕ್ಯಗಳನ್ನೋ ಉಲ್ಲೇಖಿಸಿ ಪ್ರತಿಯೊಂದಕ್ಕೂ ಇದು ಈ ಅರ್ಥ ಅದು ಆ ಅರ್ಥ ಎಂದು ವಿವರಣಾತ್ಮಕ ನಿದರ್ಶನಗಳನ್ನು ಕೊಡದೆ, ಇಡೀ ಭಾಷಿಕ ಸಂಕಥನದಲ್ಲಿ ಹಾಗೂ ನಾವು ನಮ್ಮ ಬದುಕಿನಲ್ಲಿ ರೂಪಿಸುವ ಸಂಕಥನಗಳ ಮೂಲಕ ಮನುಷ್ಯ ಘನತೆಯ ಪ್ರಶ್ನೆಯನ್ನು ಹೇಗೆ ನಿರ್ವಹಿಸುತ್ತೇವೆ? ಮತ್ತು ನಿಭಾಯಿಸಿದ್ದೇವೆ? ಪರಿಣಾಮವಾಗಿ ಸಾಮಾಜಿಕ-ಸಾಂಸ್ಕೃತಿಕ ಬಿಕ್ಕಟ್ಟುಗಳನ್ನು ಇಂದಿನ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿಯೂ ನಾವು ಹೇಗೆ ಅನುಭವಿಸುತ್ತೇವೆ.
ಹಾಗೂ ಮನುಷ್ಯ ಅಸ್ತಿತ್ವ ಮತ್ತು ಸ್ವಭಾವಗಳೊಡನೆ ತಳುಕು ಹಾಕಿಕೊಂಡಿರುವ ಈ “ಮನುಷ್ಯ ಘನತೆ”ಯೆಂಬ ಮೂಲಭೂತ ಪರಿಕಲ್ಪನೆಯನ್ನು ಅರಿಯದೇ, ಅದು ಹೇಗೆ ಪ್ರಜಾಸತ್ತಾತ್ಮಕ ಹಾಗೂ ನ್ಯಾಯಸಮ್ಮತ ಬದುಕನ್ನು ನಾವು ಬದುಕಲು ಸಾಧ್ಯ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!


