Connect with us

ನೆಲದನಿ

ನುಡಿಯ ಒಡಲು-06 : ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ

Published

on

  • ಡಾ‌. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಭಾಗ-02

ಬರಹದ ಮೊದಲ ಭಾಗದಲ್ಲಿ ಮನುಷ್ಯ ಘನತೆ ಮತ್ತು ಭಾಷಿಕ ಕ್ರಿಯೆ ಎಂಬೀ ಎರಡೂ ಪರಿಕಲ್ಪನೆಗಳ ನಡುವಣ ನಂಟಸ್ತಿಕೆಯನ್ನು ಕುರಿತು ಕೆಲವು ತಾತ್ವಿಕ ಸಂಗತಿಗಳನ್ನು ಚರ್ಚಿಸಲಾಗಿದೆ. ಈ ಭಾಗದಲ್ಲಿ ಮನುಷ್ಯ ಘನತೆಯ ಪ್ರಾಥಮಿಕ ನೆಲೆಗಳನ್ನು ಭಾಷಿಕ ಆಯಾಮಗಳ ಮೂಲಕ ವಿಶ್ಲೇಷಿಸುವ ಪ್ರಯತ್ನವನ್ನು ಮಾಡೋಣ.

ಮನುಷ್ಯ ಘನತೆಯ ಪ್ರಶ್ನೆ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವ್ಯಾಪಕವಾಗಿ ಚರ್ಚೆಯಾಗುವುದು, ಪ್ರಮುಖವಾಗಿ ಕಾನೂನು ದಾಖಲೆಗಳಲ್ಲಿ. ಅಂದರೆ ಕಾನೂನು ಪರಿಭಾಷೆ ಮತ್ತು ಪರಿಕಲ್ಪನೆಗಳಲ್ಲಿ ಪ್ರಕಟಗೊಳ್ಳುತ್ತದೆ. ಕೆಲವು ನಿರ್ದಿಷ್ಟ ಕಾನೂನಾತ್ಮಕ ವಿವರಗಳ ಮೂಲಕ ಈ ಮನುಷ್ಯ ಘನತೆ ಎನ್ನುವ ಪರಿಕಲ್ಪನೆಯನ್ನು ಯಾವುದೇ ಒಂದು ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಮರ್ಥನೆಗಳನ್ನು ಮಂಡಿಸಲು ಬಳಸಲಾಗುತ್ತದೆ.

ಸಹಜವಾಗಿಯೇ ಆಯಾ ಸಂದರ್ಭಕ್ಕೆ ಅನುಸಾರವಾಗಿ ಈ ಪರಿಕಲ್ಪನೆಯ ವಿನ್ಯಾಸಗಳು ಕಾನೂನಾತ್ಮಕ ದಾಖಲೆಗಳಲ್ಲಿ ವ್ಯತ್ಯಾಸವಾಗುತ್ತವೆ. ಆದರೆ ಈ ಎಲ್ಲ ನಿಬಂಧನೆಗಳಿಗೆ ಮನುಷ್ಯ ಘನತೆಯನ್ನು ಎತ್ತಿಹಿಡಿಯುವ ಉದ್ದೇಶವೇ ಮುಖ್ಯವಾಗುತ್ತದೆ. ಉದಾಹರಣೆಗಾಗಿ ರಾಷ್ಟ್ರ-ಅಂತರ್ರಾಷ್ಟ್ರ ಮಟ್ಟದ ಕಾನೂನು ಪರಿಕರ ಮತ್ತು ದಾಖಲೆಗಳ ಪರಿಭಾಷೆ ಹಾಗೂ ಭಾಷಿಕ ಕ್ರಿಯೆಯನ್ನು ಪರಿಶೀಲಿಸಿದರೆ, ಭಾಷಿಕ ಕ್ರಿಯೆಯ ವ್ಯಾಪಕತೆ ಎಂತಹದು ಅನ್ನುವುದು ನಮಗೆಲ್ಲ ಅರ್ಥವಾಗುತ್ತದೆ.

ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ‘ನಾವು ಭಾರತೀಯರು...’ ಎಂಬ ಉದ್ಗಾರದಿಂದ ಶುರುವಾಗುವ ಈ ಹೇಳಿಕೆಯ ಮೊದಲ ಉದ್ದೇಶವೇ ನಮ್ಮೆಲ್ಲರ ನಡುವಣ ಘನತೆ ಮತ್ತು ಸಂಬಂಧವನ್ನು ಸೂಚಿಸುವುದಾಗಿದೆ. ಹಾಗಾಗಿ ಜಾತ್ಯತೀತತೆ, ಧರ್ಮನಿರಪೇಕ್ಷತೆ ಎಂಬೆಲ್ಲ ಪದಗಳನ್ನು ನೆಲೆಗೊಳಿಸಲು ಕಾರಣವೇ ಮನುಷ್ಯ ಘನತೆಯನ್ನು ಮನಗಾಣಲು ನಮಗೆ ಬೇಕಾಗಿರುವುದು ಕೇವಲ ನಾವು ಮನುಷ್ಯರು ಮತ್ತು ಆ ಅಸ್ತಿತ್ವದಲ್ಲಿ ಯಾವುದೇ ಭೇದಭಾವ ಇರಕೂಡದು ಎಂಬ ತಿಳಿವಳಿಕೆ ಮಾತ್ರ ಸಾಕು ಅನ್ನುವುದಾಗಿದೆ.

ಹೊರತು ನಮ್ಮ ಅಸ್ತಿತ್ವ, ಅಸ್ಮಿತೆ, ಘನತೆಗಳನ್ನು ಅರಿಯಲು ಯಾವುದೇ ಜಾತಿ, ಧರ್ಮ, ಪ್ರದೇಶ, ಭಾಷೆ, ಲಿಂಗ ಇತ್ಯಾದಿ ಸಂಗತಿಗಳ ಮಹತ್ವದ ಮೇಲೆ ವ್ಯಕ್ತಿಗಳ ಘನತೆಯನ್ನು ಅಳಿಯುವುದಾಗಲೀ ಇಲ್ಲವೇ ಮೌಲ್ಯನಿರ್ಣಯ ಮಾಡುವುದಾಗಲೀ ಕೊನೆಯಪಕ್ಷ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿ ಪರಿಭಾವಿಸಕೂಡದು ಅನ್ನುವ ತಾತ್ಪರ್ಯವನ್ನು ಇಲ್ಲಿ ಕಾಣುತ್ತೇವೆ.

ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮನುಷ್ಯ ಘನತೆಯನ್ನು ಪ್ರತಿಪಾದಿಸುವ ದಾಖಲೆಗಾಗಿ, ದಿ ಚಾರ್ಟರ್ ಆಫ್ ಯುನೈಟೆಡ್ ನೇಶನ್ಸ್ (1945) ಪೀಠಿಕೆಯಲ್ಲಿ ನಿರೂಪಿಸಲಾದ ಹೇಳಿಕೆಗಳನ್ನು ಇಲ್ಲಿ ಗಮನಿಸಬಹುದು. ‘ಮುಂಬರುವ ಪೀಳಿಗೆಗಳನ್ನು ಯುದ್ಧದ ಭೀಕರತೆ ಮತ್ತು ದುಖದಿಂದ ರಕ್ಷಿಸಬೇಕು.
ಇಂತಹ ಯುದ್ಧಗಳಿಂದ ಈಗಾಗಲೇ ನಾವು ಕೇಳರಿಯದ ದುಖವನ್ನು ನಮ್ಮ ಬದುಕಿನವಧಿಯಲ್ಲಿ ಎರಡುಸಲ ಕಂಡಿದ್ದೇವೆ. ಮಾನವ ಹಕ್ಕು ಮತ್ತು ಮನುಷ್ಯ ಘನತೆಯಲ್ಲಿ ನಂಬಿಕೆಯನ್ನು ಮರುಪ್ರತಿಪಾದಿಸಬೇಕಿದೆ.ಯಾವುದರ ಮೂಲಕ ಮನುಷ್ಯ ಘನತೆ, ಗಂಡು-ಹೆಣ್ಣುಗಳ ನಡುವಣ ಸಮಾನ ಹಕ್ಕುಗಳು ಹಾಗೂ ದೊಡ್ಡ ಮತ್ತು ಚಿಕ್ಕ ದೇಶಗಳು ಎಂಬ ಭೇದವಿಲ್ಲದ ವಾತಾವರಣವನ್ನು ಸೃಷ್ಟಿಸಬೇಕೆಂದು ನಾವು ಯುನೈಟೆಡ್ ರಾಷ್ಟ್ರಗಳ ಜನತೆ ನಿರ್ಧರಿಸಿದ್ದೇವೆ’. ಈ ಘೋಷಣೆಯ ಹಿಂದಿನ ತಾತ್ವಿಕ ಮತ್ತು ನೈತಿಕ ಹೊಣೆಗಾರಿಕೆಯನ್ನು ಇಲ್ಲಿ ಬಳಸಲಾದ ಪದಗಳ ಮೂಲಕ ಅರಿಯಲು ಸಾಧ್ಯ.

ಇಲ್ಲಿಯ ಯಾವುದೇ ಪದವು ನಿಶ್ಚಿತವೂ ಮತ್ತು ನಿರಂತರವೂ ಆಗಿರುವ ಅರ್ಥವನ್ನು ಹೊಂದಿರುವುದಿಲ್ಲ. ಆದರೆ ಆಯಾ ಸನ್ನಿವೇಶಗಳ ಮೂಲಕ ನಾವು ಘನವಾದ ಮತ್ತು ತೆಳುವಾದ ಅರ್ಥಗಳನ್ನು ಪರಿಭಾವಿಸುತ್ತೇವೆ. ಇದು ಕೇವಲ ಯಾದೃಚ್ಛಿಕವಾಗಿ (ದಿಟ, ಪ್ರಾಥಿಮಿಕ ಅರ್ಥಗಳು ಯಾದೃಚ್ಛಿಕವಾಗಿಯೇ ಇರುತ್ತವೆ) ನಡೆಯುವುದಲ್ಲ. ಸನ್ನವೇಶಗಳು ಅಗಾಧವಾದ ಪಾತ್ರವನ್ನು ವಹಿಸುತ್ತವೆ. ಇದಕ್ಕೆ ಪ್ರಮುಖ ಕಾರಣವೇ ಭಾಷಿಕ ಕ್ರಿಯೆಗಳು ಎಂಬುದು ಇಲ್ಲಿ ನಿರ್ವಿವಿವಾದ.

ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ (1948) ಪೀಠಿಕೆಯಲ್ಲಿಯೂ ಈ ಬಗೆಯ ಸಂಗತಿಗಳನ್ನೇ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಅಂದರೆ ಈ ಜಗತ್ತಿನ ಮನುಷ್ಯರೆಲ್ಲರಲ್ಲಿ ಅಂತರ್ನಿಹಿತವಾದ ಘನತೆ ಮತ್ತು ಮನುಷ್ಯ ಸಮೂಹಗಳಿಗೆ ಸಮಾನ ಮತ್ತು ಆತ್ಯಂತಿಕವಾದ ಹಕ್ಕುಗಳನ್ನು ಮಾನ್ಯಗೊಳಿಸಬೇಕು.

ಈ ಜಗತ್ತಿನಲ್ಲಿ ಸ್ವಾತಂತ್ರ್ಯ, ನ್ಯಾಯ ಹಾಗೂ ಶಾಂತಿಯನ್ನು ನೆಲೆಗೊಳಿಸಲು ಇವುಗಳು ಅಡಿಪಾಯವಾಗಿವೆ. ಆದರೆ ಈ ಮಾನವ ಹಕ್ಕುಗಳ ಬಗೆಗೆ ನಿರ್ಲಕ್ಷ್ಯ ಹಾಗೂ ತಿರಸ್ಕಾರವು ಅನಾಗರಿಕ ಕೃತ್ಯಗಳಿಗೆ ಕಾರಣವಾಗಿವೆ. ಇದು ಮಾನವಕುಲದ ಆತ್ಮಸಾಕ್ಷಿಯನ್ನೇ ಕೆರಳಿಸಿದೆ. ಇಡೀ ಜಗತ್ತಿನ ಮನುಷ್ಯರಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ನಂಬಿಕೆ ಹಾಗೂ ಭಯದಿಂದ ಬಿಡುಗಡೆಯನ್ನು ನೆಲೆಗೊಳಿಸಲು ಇದು ಒತ್ತಾಸೆಯಾಗುತ್ತದೆ.

ಸಾಮಾನ್ಯ ಜನರ ಆಶೋತ್ತರಗಳನ್ನು ಎತ್ತಿಹಿಡಿಯುವ ಮಹತ್ತರವಾದ ಘೋಷಣೆ ಇದಾಗಿದೆ. ಮನುಷ್ಯ ಘನತೆ ಮತ್ತು ಮಾನವ ಹಕ್ಕುಗಳು ಎಂಬೀ ಎರಡೂ ಪರಿಕಲ್ಪನೆಗಳು ಪ್ರತ್ಯೇಕ ಮತ್ತು ಪರಸ್ಪರ ಅವಲಂಬಿತವೆಂದು ಯಾರಾದರೂ ಹೇಳಬಹುದು. ಆದರೆ ಇದುವರೆಗೂ ಯಾರು ಕೂಡ ಈ ಎರಡೂ ಪರಿಕಲ್ಪನೆಗಳ ನಡುವಣ ಪರಸ್ಪರ ಅವಲಂಬನೆಯನ್ನು ಯಾವುದೇ ವ್ಯವಸ್ಥಿತ ಮತ್ತು ಸ್ಪಷ್ಟ ಸೂತ್ರಗಳ ಮೂಲಕ ವ್ಯಾಖ್ಯಾನಿಸಿಲ್ಲ ಅನ್ನುವುದು ಗಮನಾರ್ಹ.

ವಿಶ್ವಸಂಸ್ಥೆಯ ಇನ್ನೆರಡು ನಡೆಗಳನ್ನು ಅವಲೋಕಿಸಿದರೆ, ಈ ಪರಿಕಲ್ಪನೆಗಳ ನಡುವಿನ ನಂಟಸ್ತಿಕೆಯನ್ನು ಇನ್ನಷ್ಟು ನಿಚ್ಚಳಗೊಳಿಸುತ್ತವೆ. ವಿಶ್ವಸಂಸ್ಥೆಯ ಚಾರ್ಟರ್ನಲ್ಲಿ ಘೋಷಿಸಲಾದ ತತ್ವಗಳಿಗೆ ಪೂರಕವಾಗಿ, ಮನುಷ್ಯನ ಅಂತರ್ಗತ ಘನತೆಯನ್ನು ಮತ್ತು ಇಡೀ ಜಗತ್ತಿನ ಮನುಷ್ಯರಲ್ಲಿ ಸಮಾನ ಹಾಗೂ ಆತ್ಯಂತಿಕ ಹಕ್ಕುಗಳನ್ನು ಮಾನ್ಯ ಮಾಡುವುದರಿಂದ ಈ ಲೋಕದ ಜನರ ಸ್ವಾತಂತ್ರ್ಯ, ನ್ಯಾಯ ಮತ್ತು ಶಾಂತಿಯನ್ನು ನಿರಂತರಗೊಳಿಸುವಲ್ಲಿ ಇವು ಅಡಿಪಾಯವಾಗುತ್ತವೆ.

ಮನುಷ್ಯನ ಅಂತರ್ಗತ ಘನತೆಯಿಂದಲೇ ರೂಪಿಸಲಾಗುವ ಈ ಹಕ್ಕುಗಳನ್ನು ಮಾನ್ಯಗೊಳಿಸುವುದು ಮುಖ್ಯ. ವಿಶ್ವಸಂಸ್ಥೆಯ ಈ ದಾಖಲೆಗಳು ಹೇಳುವಂತೆ, ಮನುಷ್ಯ ಘನತೆ ಎಂಬುದು ಅತ್ಯಂತ ಶ್ರೇಷ್ಠವಾದ ಮೌಲ್ಯವಾಗಿದೆ ಎಂದು ಪರಿಗಣಿಸುತ್ತವೆ. ಇದು ಮಾನವ ಹಕ್ಕುಗಳಿಂದ ಮಾತ್ರ ಪ್ರತ್ಯೇಕಗೊಳ್ಳುವುದಷ್ಟೆಯಲ್ಲ, ಆ ಪರಿಕಲ್ಪನೆಯನ್ನೇ ಪಲ್ಲಟಗೊಳಿಸಿದೆ. ಮನುಷ್ಯ ಘನತೆಯಿಂದಲೇ ಮೈದಾಳಿದ ಈ ಮಾನವ ಹಕ್ಕುಗಳ ಪರಿಕಲ್ಪನೆ ಆ ನಂತರದಲ್ಲಿ ತನ್ನದೆಯಾದ ಗುಣಲಕ್ಷಣಗಳನ್ನು ಮೈಗೂಡಿಸಿಕೊಂಡಿದೆ.

ಎಷ್ಟೋ ಸನ್ನಿವೇಶಗಳಲ್ಲಿ ಈ ಮನುಷ್ಯ ಘನತೆಯ ಗುಣಗಳು ಎಂತಹವು ಎನ್ನುವುದನ್ನು ಸ್ಪಷ್ಟಪಡಿಸದೇ ಕೇವಲ ಒಂದು ಕಾನೂನಿನ ಪದವನ್ನಾಗಿ ಬಳಸಲಾಗುತ್ತದೆ. ಮನುಷ್ಯ ಘನತೆಯ ಮೂಲತತ್ವಗಳಾವವು? ಅನ್ನುವುದನ್ನು ಈ ಕಾನೂನು ಪದಕೋಶವು ನಿಚ್ಚಳಗೊಳಿಸದು. ಹಾಗಾಗಿ ಭಾಷಿಕ ನಿರೂಪಣೆಗಳು ನಮ್ಮ ಸಾಮಾಜಿಕ ವಿವೇಕವನ್ನು ಹೇಗೆ ಪ್ರಕಟಿಸುತ್ತವೆ ಎಂಬ ಸಂವೇದನೆಯನ್ನು ಹೊಂದುವುದು ಅವಶ್ಯ.

ಸಾಮಾಜಿಕ ಅಂತಸ್ತಿಗೆ ಅನುಗುಣವಾಗಿ ಮನುಷ್ಯ ಘನತೆಯನ್ನು ಸೂಚಿಸುವ ಭಾಷಿಕ ಕ್ರಿಯೆಗಳೇ ನಮ್ಮನಮ್ಮ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಸಮರ್ಥಿಸುತ್ತವೆ. ಹೀಗೆ ಏರ್ಪಡುವ ಅಸಮಾನತೆ ಇಲ್ಲವೇ ತಾರತಮ್ಯವನ್ನು ಅಳಿಸಲು ಬೇಕಾಗುವ ಪರಿಕರವೇ, ಈ ಮನುಷ್ಯ ಘನತೆ.

ಆದ್ದರಿಂದ ಭಾರತೀಯ ಸಂವಿಧಾನವು ತನ್ನೆಲ ನಾಗರಿಕರಲ್ಲಿ ಸಹೋದರತ್ವ/ಭ್ರಾತೃತ್ವವನ್ನು ಉತ್ತೇಜಿಸುವ ಮೂಲಕ ವ್ಯಕ್ತಿಯ ಘನತೆ ಮತ್ತು ರಾಷ್ಟ್ರದ ಏಕತೆ ಹಾಗೂ ಐಕ್ಯತೆಯನ್ನು ಸಾಧಿಸಲು ಆಶಿಸುತ್ತದೆ. ಹಾಗಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವ್ಯಕ್ತಿ ಘನತೆಯ ಮಹತ್ವವನ್ನು ಆಳವಾಗಿ ಬಲ್ಲವರಾದ್ದರಿಂದ, ಸ್ವಾತಂತ್ರ್ಯ (ಲಿಬರ್ಟಿ), ಸಮಾನತೆ (ಇಕ್ವಿಟಿ) ಹಾಗೂ ಸಹೋದರತ್ವ (ಫ್ರೆಟರ್ನಿಟಿ) ಎಂಬೀ ತ್ರಿಕೂಟ (ಟ್ರಿನಿಟಿ) ಪರಿಕಲ್ಪನೆಗಳನ್ನು ರೂಪಿಸಿದರು ಹಾಗೂ ಅವುಗಳಿಗೆ ಸಂವಿಧಾನಾತ್ಮಕ ಮಾನ್ಯತೆಯನ್ನೂ ಕೊಟ್ಟರು.

ಒಟ್ಟಿನಲ್ಲಿ ಈ ತ್ರಿಕೂಟ ಪರಿಕಲ್ಪನೆಗಳ ತಾತ್ಪರ್ಯವೇನೆಂದರೆ, ಮನುಷ್ಯ ಘನತೆಯನ್ನು ಉಲ್ಲಂಘಿಸಲಾಗದು ಅನ್ನುವುದಾಗಿದೆ. ಈ ಎಲ್ಲ ವಿಶ್ಲೇಷಣೆಗಳ ಮೂಲಕ ಸ್ವಾತಂತ್ರ್ಯ, ದೇಶದ ಐಕ್ಯತೆ, ನ್ಯಾಯಸಮ್ಮತ ಸಮಾಜ, ಒಗ್ಗಟ್ಟು ಮೊದಲಾದ ಶ್ರೇಷ್ಠ ಮೌಲ್ಯಗಳ ಜೊತೆಗೆ ಮನುಷ್ಯ ಘನತೆಯನ್ನು ಅತ್ಯಂತ ಶ್ರೇಷ್ಠ ಮೌಲ್ಯವೆಂದು ಮನಗಾಣಲಾಗಿದೆ. ನೈತಿಕತೆಯ ಪ್ರಶ್ನೆಯೂ ಇಲ್ಲಿ ಮುಖ್ಯವಾಗುತ್ತದೆ. ಸಂವಿಧಾನದ ಆಶಯವೇ ಇದಾಗಿರುತ್ತದೆ.

ಆದರೆ ಈ ಎಲ್ಲ ಮೌಲ್ಯಗಳನ್ನು ಕೇವಲ ಕಾನೂನಾತ್ಮಕ ಪದಕೋಶದಂತೆ ಪರಿಗಣಿಸಿದಾಗ, ನೈತಿಕತೆಯೂ ಇರುವುದಿಲ್ಲ ಹಾಗೂ ಮನುಷ್ಯ ಘನತೆ ಎಂಬುದು ನೆಲೆಗೊಳ್ಳಲು ಸಾಧ್ಯವಾಗುವುದಿಲ್ಲ. ಆವಾಗ ನಮ್ಮ ಸಂವಿಧಾನದ ಆದರ್ಶ ಮತ್ತು ಆಚರಣೆಗಳ ನಡುವೆ ಅಗಾಧವಾದ ಕಂದಕ ಏರ್ಪಡುತ್ತದೆ.

ಇದುವರೆಗೂ ಗಮನಿಸಿದಂತೆ, ಮನುಷ್ಯ ಘನತೆಯ ಭಾಷಿಕ ರೂಪಗಳು ಕಾನೂನಾತ್ಮಕ ಪರಿಕರಗಳಲ್ಲಿ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಹೇಗೆ ಸಮರ್ಥಿಸುವ ಕ್ರಿಯೆಯಾಗಿದೆ ಅನ್ನುವುದನ್ನು ನೋಡಿದೆವು. ಅಂದರೆ ಮನುಷ್ಯ ಘನತೆ ಎನ್ನುವುದು ಕೇವಲ ಕಾನೂನಾತ್ಮಕ ಪರಿಕಲ್ಪನೆಯಲ್ಲ ಬದಲಾಗಿ ಬದುಕಿನ ಕೆಲವು ನಿರ್ದಿಷ್ಟ ತತ್ವಗಳನ್ನು ವ್ಯಕ್ತಪಡಿಸುತ್ತದೆ.

ವಾಸ್ತವದಲ್ಲಿ, ಈ ಮನುಷ್ಯ ಘನತೆ ಎಂಬುದು ನೈತಿಕ-ತಾತ್ವಿಕ ಪರಿಕಲ್ಪನೆಯೂ ಆಗಿರುತ್ತದೆ. ಇತರೆ ನೈತಿಕ ಪರಿಕಲ್ಪನೆಗಳಿಗೆ ಇರುವಂತೆ ಹಲವು ಬಗೆಯ ಅರ್ಥ ವಿನ್ಯಾಸ ಹಾಗೂ ಸಾಧ್ಯತೆಗಳು ಸಂದರ್ಭಕ್ಕೆ ಅನುಗುಣವಾಗಿ ಈ ಪರಿಕಲ್ಪನೆಯ ಸನ್ನಿವೇಶದಲ್ಲಿಯೂ ಹಲವು ಭಾಷಿಕ ಕ್ರಿಯೆಗಳ ಮೂಲಕ ಏರ್ಪಡುತ್ತವೆ. ಹಾಗಾಗಿ ಈ ಪರಿಭಾಷೆಯನ್ನು ಘನವಾದ ಮತ್ತು ತೆಳುವಾದ ಅರ್ಥಗಳಲ್ಲಿ ಬಳಸಲಾಗುತ್ತದೆ. ‘ನೈತಿಕ ಪದಗಳು ಸಂಕುಚಿತ ಮತ್ತು ವ್ಯಾಪಕವಾದ ಅರ್ಥಗಳನ್ನು ಹೊಂದಿರುತ್ತವೆ.ಆಯಾ ಸನ್ನಿವೇಶಗಳ ಪ್ರಮಾಣಕ್ಕೆ ಅನುಗುಣವಾಗಿ ಈ ಎರಡೂ ಸಾಂದರ್ಭಿಕ ಅರ್ಥಗಳನ್ನು ನಾವು ಬಳಸುತ್ತೇವೆ. ವಿಭಿನ್ನ ಸನ್ನಿವೇಶದಲ್ಲಿ ಇವುಗಳು ಅತ್ಯಂತ ಸೂಕ್ತವಾಗಿರುತ್ತವೆ ಮತ್ತು ವಿಭಿನ್ನ ಉದ್ದೇಶಗಳನ್ನು ಪೊರೈಸುತ್ತವೆ’ (1994,2) ಎಂದು ಮೈಕಲ್ ವಾಲ್ಜರ್ ಸ್ಪಷ್ಟವಾಗಿ ಹೇಳುತ್ತಾರೆ. ಇದನ್ನು ಇನ್ನಷ್ಟು ವಿಷದೀಕರಿಸಿ ನೋಡಿದರೆ, ಮನುಷ್ಯ ಘನತೆಯೊಂದಿಗೆ ಹೆಣೆದುಕೊಂಡಿರುವ ಭಾಷಿಕ ಕ್ರಿಯೆಗಳ ನಡುವಣ ಮುಖ್ಯವಾದ ವ್ಯತ್ಯಾಸಗಳನ್ನು ಈ ನೈತಿಕ ಅರ್ಥಗಳು ಪ್ರತಿಬಿಂಬಿಸುತ್ತವೆ.

ವ್ಯಾಪಕ ಅರ್ಥದಲ್ಲಿ ಇದನ್ನೊಂದು ನೈತಿಕ ಪರಿಕಲ್ಪನೆಯನ್ನಾಗಿ ಬಳಸಿದರೆ, ಮನುಷ್ಯ ಘನತೆಯು ‘ಮಾನವ’ ಮತ್ತು ‘ಘನತೆ’ ಎಂಬ ಎರಡೂ ಮೂಲಭೂತ ಹಾಗೂ ಪರಸ್ಪರ ಅಂತರ್ಸಂಬಂಧವನ್ನು ಹೊಂದಿರುವ ಆಯಾಮಗಳನ್ನು ಸೂಚಿಸುತ್ತದೆ. ವಾಸ್ತವದಲ್ಲಿ ಘನತೆಯ ಪ್ರಜ್ಞೆಯು ಈ ಲೋಕ ಮತ್ತು ಲೋಕದ ಜನರನ್ನು ನಾವು ಪರಿಭಾವಿಸುವ ವಿಧಾನದಲ್ಲಿಯೇ ಅಂತರ್ಗತವಾಗಿರುತ್ತದೆ.

ಡಾ.ಮೇಟಿ ಮಲ್ಲಿಕಾರ್ಜುನ್, ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಆದರೆ ಮಾನವ ಎಂಬ ಪದವು ನಮ್ಮ ಪ್ರಜ್ಞೆ ಇಲ್ಲವೇ ಸೂಪ್ತಪ್ರಜ್ಞೆಯ ಮೂಲಕ ಮನುಷ್ಯ ಸ್ವಭಾವದ ಗ್ರಹಿಕೆಗಳಿಗೆ ಸಂಬಂಧಿಸಿರುತ್ತದೆ. ಲೋಕದ ವರ್ತನೆ, ಮೌಲ್ಯ ಹಾಗೂ ಪ್ರಾಪಂಚಿಕ ಬದುಕಿನ ಗುಣಲಕ್ಷಣಗಳನ್ನು ಮೌಲ್ಯ ನಿರ್ಣಯವನ್ನು ಮಾಡುವಲ್ಲಿ ಈ ಪ್ರಜ್ಞೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ.

ಒಟ್ಟಂದದಲ್ಲಿ ಮನುಷ್ಯ ಘನತೆ ಎಂಬೀ ವ್ಯಾಪಕ ಅರ್ಥವು ನೈತಿಕ ದೃಷ್ಟಿಕೋನಗಳನ್ನು ರೂಪಿಸುತ್ತದೆ. ಅಂದರೆ ಮನುಷ್ಯ ಬದುಕಿನ ಅಸ್ತಿತ್ವವೇ ಪ್ರಧಾನ ವಿನ್ಯಾಸವಾಗಿ, ಜಾತಿ, ಮತ, ಧರ್ಮ, ಭಾಷೆ, ಲಿಂಗ, ಪ್ರದೇಶಗಳು ಕೇವಲ ಸಾಮಾಜಿಕ ಭಿನ್ನತೆಯ ವಿನ್ಯಾಸಗಳಾಗುತ್ತವೆ.

ಮನುಷ್ಯ ಸಮೂಹದ ಘನತೆಯನ್ನು ಎತ್ತಿಹಿಡಿಯುವ ಇಂತಹ ಹಲವು ಸನ್ನಿವೇಶಗಳನ್ನು ನಮ್ಮ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪರಂಪರೆಗಳಲ್ಲಿಯೂ ಕಾಣುತ್ತೇವೆ. ಉದಾ.ಗೆ ಕುವೆಂಪು ಅವರು ತಮ್ಮ ಮಲೆಗಳಲ್ಲಿ ಮದುಮಗಳು ಕಾದಂಬರಿಯ ಪೀಠಿಕೆಯನ್ನಾಗಿ ಬಳಸಿಕೊಂಡಿರುವ ಈ ಮಾತುಗಳ ತಾತ್ಪರ್ಯವೂ ಮನುಷ್ಯ ಘನತೆಯ ಮಹತ್ವವನ್ನು ಕಂಡರಿಯುವ ಬಗೆಯಾಗಿದೆ.

ಯಾರೂ ಮುಖ್ಯರಲ್ಲ ಅಮುಖ್ಯರೂ ಅಲ್ಲ,

ಯಾವುದೂ ಯಃಕಷ್ಚಿತವಲ್ಲ

ಯಾವುದಕ್ಕೂ ಮೊದಲಿಲ್ಲ

ಯಾವುದಕ್ಕೂ ತುದಿಯಿಲ್ಲ

ಯಾವುದೂ ಎಲ್ಲಿಯೂ ನಿಲ್ಲುವುದೂ ಇಲ್ಲ

ಕೊನೆ ಮುಟ್ಟುವುದೂ ಇಲ್ಲ,

ಕೊನೆ ಮುಟ್ಟುವುದೂ ಇಲ್ಲ,

ಎಲ್ಲಕ್ಕೂ ಇದೆ ಅರ್ಥ
ಯಾವುದೂ ಅಲ್ಲ ವ್ಯರ್ಥ
ನೀರೆಲ್ಲ ಊ ತೀರ್ಥ”.

ಕುವೆಂಪು

ಈ ಪೀಠಿಕೆಯ ಮೂಲಕ ಮೈದಾಳಬಹುದಾದ ಭಾಷಿಕ ಕ್ರಿಯೆಗಳು ಮತ್ತು ಅರ್ಥಗಳನ್ನು ಯಾವುದೇ ಸೀಮಿತ ಸನ್ನಿವೇಶಕ್ಕೆ ಮಾತ್ರ ಸಂಬಂಧಿಸಿ ಹೇಳಲು ಸಾಧ್ಯವಿಲ್ಲ. ಆದರೆ ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ನಿರೂಪಿಸಿದ ಪಾತ್ರಗಳನ್ನು ಇಡೀಯಾಗಿ ಅವಲೋಕಿಸಿದರೆ, ಕುವೆಂಪು ಅವರ ಈ ಮಾತುಗಳಿಗೆ ನಿಶ್ಚಿತವಾಗಿಯೂ ಒಂದು ಮಹತ್ವ ದೊರೆಯುತ್ತದೆ.

ಅಂದರೆ ಇಡಿಯಾಗಿ ಮನುಷ್ಯ ಘನತೆಯ ಮಹತ್ವವನ್ನು ಸಾರುವ ನುಡಿಗಳಾಗಿ ಈ ಮಾತುಗಳು ಇಲ್ಲಿ ಸಾಕ್ಷಿಯಾಗುತ್ತವೆ. ಇದಕ್ಕೆ ಪೂರಕವಾಗಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಮಾಜವಾದಿ ತತ್ವವನ್ನು ಕುವೆಂಪು ಅವರು ಅತ್ಯಂತ ಬಲವಾಗಿ ನಂಬಿದ್ದರು.

ಇವರ ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ನೈತಿಕ ಮತ್ತು ತಾತ್ವಿಕ ಸ್ಪಷ್ಟತೆಯನ್ನು ನೋಡುತ್ತೇವೆ ಹಾಗೂ ಮನುಷ್ಯ ಘನತೆಯನ್ನು ಪರಿಪೂರ್ಣವಾಗಿ ನಂಬಿದ್ದ, ಕುವೆಂಪು ಅವರ ಕಾದಂಬರಿಗಳ ಬಗೆಗೆ ಪ್ರೊ. ಬಿ ಕೃಷ್ಣಪ್ಪನವರು ‘ಕುವೆಂಪು ಕಾದಂಬರಿಗಳಲ್ಲಿ ದಲಿತ ಜೀವನಕ್ರಮ’ ಎಂಬ ಮಹತ್ವದ ಲೇಖನವನ್ನು ಬರೆದಿರುವರು. ಈ ಲೇಖನದಲ್ಲಿ ಇವರು ಎತ್ತಿರುವ ಪ್ರಶ್ನೆಗಳು ತಾತ್ವಿಕವಾಗಿ, ಸಾಮಾಜಿಕ ನ್ಯಾಯ ಮತ್ತು ಸಾಂಸ್ಕೃತಿಕ ನ್ಯಾಯದ ಪ್ರಶ್ನೆಗಳಾಗಿ ಸರಿಯಾಗಿವೆ.

ಏಕೆಂದರೆ ಮನುಷ್ಯ ಘನತೆಯ ಪ್ರಶ್ನೆಯನ್ನೇ ವಿಶೇಷವಾಗಿ ದಲಿತ ಮತ್ತು ವಂಚಿತ ಸಮುದಾಯಗಳನ್ನು ಕೇಂದ್ರವಾಗಿಟ್ಟುಕೊಂಡ ಈ ಘನತೆಯ ಪ್ರಶ್ನೆಗಳು ಇಲ್ಲಿ ಮಹತ್ವವನ್ನು ಪಡೆಯುತ್ತವೆ. ಹಾಗಾದರೆ ಮನುಷ್ಯ ಘನತೆ ಕುರಿತ ಕುವೆಂಪು ಮತ್ತು ಕೃಷ್ಣಪ್ಪನವರ ನಡುವಣ ಗ್ರಹಿಕೆಗಳು ಪರಸ್ಪರ ಭಿನ್ನವಾಗಿವೆಯೇ? ಅಥವಾ ಸಾಹಿತ್ಯ ನಿರೂಪಣೆಗಳ ಬಗೆಗೆ ಈ ತರಹದ ಪ್ರಶ್ನೆಯನ್ನು ಕೇಳುವುದೇ ತಪ್ಪೇ? ಎನ್ನುವ ಅನುಮಾನಗಳೂ ಇಲ್ಲಿ ತಲೆಯೆತ್ತುತ್ತವೆ.

ಕನ್ನಡ ಸಾಹಿತ್ಯ ವಿಮರ್ಶೆಯ ಲೋಕ ಕೃಷ್ಣಪ್ಪವರ ಪ್ರಶ್ನೆಯೊಳಗೆ ಅಂತರ್ಗತವಾಗಿರುವ ಮನುಷ್ಯ ಘನತೆಯ ಪ್ರಶ್ನೆಯನ್ನೇ ನಗಣ್ಯಗೊಳಿಸಿವೆ. ಸಮಾಜ ವಿಜ್ಞಾನದ ಪ್ರಶ್ನೆಯನ್ನಾಗಿ ಪರಿಗಣಿಸಿ ಕೃಷ್ಣಪ್ಪನವರ ಪ್ರಶ್ನೆಯ ಘನತೆಯನ್ನು ಸಾಹಿತ್ಯ ವಿಮರ್ಶೆಯಲ್ಲಿ ತಳ್ಳಿಹಾಕಲಾಗಿದೆಯೇ? ಕುವೆಂಪು ಮತ್ತು ಕೃಷ್ಣಪ್ಪನವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾಳಜಿಗಳ ನಡುವೆ ಇಂತಹದೊಂದು ಕಂದಕವನ್ನು ಸಾಹಿತ್ಯ ವಿಮರ್ಶೆಯಲ್ಲಿ ಯಾಕೇ ಸೃಷ್ಟಿಸಲಾಗಿದೆ? ಅಂದರೆ ಕೃಷ್ಣಪ್ಪನವರ ಪ್ರಶ್ನೆಯನ್ನು ಕನ್ನಡ ವಿಮರ್ಶೆ ನಿಭಾಯಿಸಿದ ಬಗೆಯಲ್ಲಿಯೇ ಸಮಸ್ಯೆಗಳಿವೆ ಎನ್ನುವುದನ್ನು, ಈ ಕುರಿತ ವಾಗ್ವಾದಗಳಿಂದ ಗ್ರಹಿಸಬಹುದು. ಒಟ್ಟಿನಲ್ಲಿ ಮನುಷ್ಯ ಘನತೆಯನ್ನು ನಿರ್ವಹಿಸಿದ ಚರ್ಚೆಗಳೂ ಒಂದು ಸಾರ್ವತ್ರಿಕ ತಾತ್ವಿಕ ಚೌಕಟ್ಟನ್ನು ರೂಪಿಸಿ ಆ ಮೂಲಕ ಮನುಷ್ಯ ಘನತೆಯ ಸವಾಲುಗಳನ್ನು ನಾವು ಎದುರುಗೊಂಡಿಲ್ಲ ಅನ್ನುವುದು ಈಗಲಾದರೂ ನಮಗೆ ಮನವರಿಯಾಗುತ್ತದೆ ಅಂದುಕೊಂಡಿರುವೆ.

ಈ ಸಮಸ್ಯೆಗಳನ್ನು ಅತ್ಯಂತ ವ್ಯಾಪಕವಾಗಿ ಕನ್ನಡ ಸಾಹಿತ್ಯ ಪರಂಪರೆಯಲ್ಲಿಯೇ ನೋಡುತ್ತೇವೆ. ಉದಾ.ಗೆ ನಡೆ, ನುಡಿ, ಉಡಿಗೆ, ಆಹಾರ, ಜಾತಿ, ಧರ್ಮ, ಲಿಂಗ ಮೊದಲಾದ ವಿದ್ಯಮಾನಗಳನ್ನು ಕುರಿತ ವಚನಕಾರರ ನಿಲುವುಗಳ ಆಶಯವು ಮನುಷ್ಯ ಘನತೆಯನ್ನು ನೆಲೆಗೊಳಿಸುವುದೇ ಆಗಿರುತ್ತದೆ. ಇಲ್ಲಿಯೂ ಇಂತಹದೇ ಕಂದಕವನ್ನು ಹಲವು ವಚನಕಾರರಲ್ಲಿ ಕಾಣುತ್ತೇವೆ.

ಕಾರಣವೇನೆಂದರೆ, ವಚನಕಾರರ ಪೂರ್ವಾಶ್ರಮದ ವಾಸನೆ ಮತ್ತು ಕಳಂಕ, ಈ ಮನುಷ್ಯ ಘನತೆಯನ್ನು ಪಡೆದುಕೊಳ್ಳುವಲ್ಲಿ ಹೇಗೆ ಬಿಕ್ಕಟ್ಟುಗಳನ್ನು ರೂಪಿಸಿವೆ ಅನ್ನುವುದನ್ನು ವಚನ ವಾಂಜ್ಞಮಯದಲ್ಲಿ ಕಾಣುತ್ತೇವೆ. ಈ ಕುರಿತು ಸಾಕಷ್ಟು ಚರ್ಚೆಗಳನ್ನು ಬೆಳಸಬಹುದು ಆದರೆ ಈ ಬರಹದ ವ್ಯಾಪ್ತಿಯಲ್ಲಿ ಅದು ಸಾಧ್ಯವಾಗುತ್ತಿಲ್ಲ.

ಈ ಟಿಪ್ಪಣಿಯ ಚರ್ಚೆಗಳ ತಲೆಬರಹವು ‘ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ’ ಎಂದಾಗಿದೆ. ಆದರೆ ಪಗಗಳನ್ನೋ ಇಲ್ಲವೇ ವಾಕ್ಯಗಳನ್ನೋ ಉಲ್ಲೇಖಿಸಿ ಪ್ರತಿಯೊಂದಕ್ಕೂ ಇದು ಈ ಅರ್ಥ ಅದು ಆ ಅರ್ಥ ಎಂದು ವಿವರಣಾತ್ಮಕ ನಿದರ್ಶನಗಳನ್ನು ಕೊಡದೆ, ಇಡೀ ಭಾಷಿಕ ಸಂಕಥನದಲ್ಲಿ ಹಾಗೂ ನಾವು ನಮ್ಮ ಬದುಕಿನಲ್ಲಿ ರೂಪಿಸುವ ಸಂಕಥನಗಳ ಮೂಲಕ ಮನುಷ್ಯ ಘನತೆಯ ಪ್ರಶ್ನೆಯನ್ನು ಹೇಗೆ ನಿರ್ವಹಿಸುತ್ತೇವೆ? ಮತ್ತು ನಿಭಾಯಿಸಿದ್ದೇವೆ? ಪರಿಣಾಮವಾಗಿ ಸಾಮಾಜಿಕ-ಸಾಂಸ್ಕೃತಿಕ ಬಿಕ್ಕಟ್ಟುಗಳನ್ನು ಇಂದಿನ ಪ್ರಜಾಸತ್ತಾತ್ಮಕ ಸನ್ನಿವೇಶದಲ್ಲಿಯೂ ನಾವು ಹೇಗೆ ಅನುಭವಿಸುತ್ತೇವೆ.

ಹಾಗೂ ಮನುಷ್ಯ ಅಸ್ತಿತ್ವ ಮತ್ತು ಸ್ವಭಾವಗಳೊಡನೆ ತಳುಕು ಹಾಕಿಕೊಂಡಿರುವ ಈ “ಮನುಷ್ಯ ಘನತೆ”ಯೆಂಬ ಮೂಲಭೂತ ಪರಿಕಲ್ಪನೆಯನ್ನು ಅರಿಯದೇ, ಅದು ಹೇಗೆ ಪ್ರಜಾಸತ್ತಾತ್ಮಕ ಹಾಗೂ ನ್ಯಾಯಸಮ್ಮತ ಬದುಕನ್ನು ನಾವು ಬದುಕಲು ಸಾಧ್ಯ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending