Connect with us

ಬಹಿರಂಗ

ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕಕ್ಕೂ ಲಗ್ಗೆ ಇಟ್ಟ ಮತೀಯ ರಾಜಕಾರಣ

Published

on

  • ನಾ ದಿವಾಕರ

ಕರ್ನಾಟಕದ ಜಲಿಯನ್‌ವಾಲಾಬಾಗ್‌ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..?


ರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್‌ ವಸಾಹತು ಆಳ್ವಿಕೆಯಿಂದ ವಿಮೋಚನೆ ಪಡೆಯುವ ಮುನ್ನ ಭಾರತ ಆಂತರಿಕವಾಗಿ ಅನುಭವಿಸಿದ ತುಮುಲಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ, ಸಾಮಾಜಿಕ ಚೌಕಟ್ಟಿನಲ್ಲಿ ಮತ್ತು ರಾಜಕೀಯ ಭೂಮಿಕೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗುತ್ತದೆ.

ಗಾಂಧಿ ಅನುಸರಿಸಿದ ಅಹಿಂಸಾ ಮಾರ್ಗದ ಮೂಲಕವೇ ಭಾರತ ದಾಸ್ಯದಿಂದ ವಿಮೋಚನೆ ಪಡೆದಿದೆ ಎಂಬ ಸಾಮಾನ್ಯ ಗ್ರಹಿಕೆಯ ಹೊರತಾಗಿಯೂ ಸ್ವಾತಂತ್ರ್ಯ ಪೂರ್ವ ಇತಿಹಾಸದಲ್ಲಿ ಬ್ರಿಟೀಷ್‌ ವಸಾಹತುಶಾಹಿಯ ದಬ್ಬಾಳಿಕೆಗೆ ನೂರಾರು ಜೀವಗಳು ಬಲಿಯಾಗಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಸ್ವಾತಂತ್ರ್ಯದ ಹೊಸ್ತಿಲಲ್ಲೂ ಸಹ ಮತದ್ವೇಷ ಮತ್ತು ಮತಾಂಧತೆಗೆ ಗುರಿಯಾದ ಭಾರತ ಲಕ್ಷಾಂತರ ಸಾವು ನೋವುಗಳನ್ನು ಕಂಡಿದೆ.

ಸಾವಿರಾರು ಜನರ ತ್ಯಾಗ, ಬಲಿದಾನ, ನಿಸ್ವಾರ್ಥ ಹೋರಾಟದ ಪ್ರತಿಫಲವನ್ನು 1947ರ ಸ್ವಾತಂತ್ರ್ಯದಲ್ಲಿ ಕಾಣಬಹುದು. ರಾಜಕೀಯ ಸ್ವಾತಂತ್ರ್ಯ ಪಡೆಯುತ್ತಿದ್ದೇವೆ ಎಂಬ ಹೆಮ್ಮೆಯೊಂದಿಗೇ ಸಾಮಾಜಿಕ ಶೋಷಣೆ ಮತ್ತು ಸಾಂಸ್ಕೃತಿಕ ದಬ್ಬಾಳಿಕೆ ಸ್ವಾತಂತ್ರ್ಯಾನಂತರವೂ ಜೀವಂತವಾಗಿರುತ್ತದೆ ಎಂಬ ಆತಂಕದೊಡನೆಯೇ ಈ ದೇಶದ ಬಹುಸಂಖ್ಯಾತ ಶೋಷಿತ ಜನತೆ ಈ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಅಲ್ಲಗಳೆಯಳಾಗುವುದಿಲ್ಲ. ಬ್ರಿಟೀಷ್‌ ವಸಾಹತುಶಾಹಿಯ ವಿರುದ್ಧ ನಡೆದ ಸುದೀರ್ಘ ಸಂಘರ್ಷದಲ್ಲಿ ಹಲವು ವಿಚಾರಧಾರೆಗಳು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿವೆ. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸಹ 1885 ರಿಂದ 1935ರವರೆಗಿನ ಯಾತ್ರೆಯಲ್ಲಿ ಹಲವು ರೂಪಾಂತರಗಳನ್ನು ಕಂಡು, ಸವಾಲುಗಳನ್ನೂ ಎದುರಿಸಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಸೌಮ್ಯ ಮಾರ್ಗ, ಮೃದು ಮಾರ್ಗ, ರಾಜೀ ಮಾರ್ಗ, ತೀವ್ರಗಾಮಿ ಮಾರ್ಗ ಮತ್ತು ಕ್ರಾಂತಿಕಾರಿ ಧೋರಣೆಗಳ ಹಲವು ವಿಚಾರಧಾರೆಗಳು ಈ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದ್ದನ್ನು ನಿರಾಕರಿಸಲಾಗುವುದಿಲ್ಲ.

ಈ ವಿಭಿನ್ನ ವಿಚಾರಧಾರೆ ಮತ್ತು ಹೋರಾಟದ ಮಾರ್ಗಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯಂತೆಯೇ ಭಿನ್ನ ಧೋರಣೆಗಳನ್ನು ವ್ಯಕ್ತಪಡಿಸಿವೆ. 1757ರ ಪ್ಲಾಸಿ ಕದನದಿಂದ 1947ರವರೆಗೆ, ನಂತರ 1961ರ ಗೋವಾ ವಿಮೋಚನೆಯವರೆಗಿನ ಹೋರಾಟದ ಹಾದಿಯಲ್ಲಿ ಲಕ್ಷಾಂತರ ಭಾರತೀಯರು ತಮ್ಮ ಸಾಂಸ್ಕೃತಿಕ ಅಥವಾ ಧಾರ್ಮಿಕ ಗಡಿರೇಖೆಗಳನ್ನು ಮರೆತು, ಅಖಂಡ ಭಾರತಕ್ಕಾಗಿ ಜೀವ ಸವೆಸಿದ್ದಾರೆ, ತೆತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್‌, ಪಾರ್ಸಿ ಹೀಗೆ ವಿಭಿನ್ನ ಮತಧರ್ಮಗಳ ಅನುಯಾಯಿಗಳು, ಆದಿವಾಸಿಗಳು, ಬುಡಕಟ್ಟು ಸಮುದಾಯಗಳು, ಶೋಷಿತ ವರ್ಗಗಳು ಬ್ರಿಟೀಷ್‌ ವಸಾಹತುಶಾಹಿಯ ವಿರುದ್ಧ ವೀರೋಚಿತ ಹೋರಾಟಗಳನ್ನು ನಡೆಸಿವೆ. ಈ ಎರಡು ಶತಮಾನಗಳ ಇತಿಹಾಸದಲ್ಲೇ ಆಂತರಿಕವಾಗಿ ಜಾತಿ ಶೋಷಣೆಯ ವಿರುದ್ಧ, ಅಸ್ಪೃಶ್ಯತೆಯ ವಿರುದ್ಧ, ಸಾಮಾಜಿಕ ಅಸಮಾನತೆಗಳ ವಿರುದ್ಧ, ಊಳಿಗಮಾನ್ಯ ದಬ್ಬಾಳಿಕೆಯ ವಿರುದ್ಧ ಶೋಷಿತ ವರ್ಗಗಳ, ರೈತಾಪಿ ವರ್ಗಗಳ ವೀರೋಚಿತ ಹೋರಾಟಗಳನ್ನೂ ಕಾಣಬಹುದು. ಬಿರ್ಸಾ ಮುಂಡಾ ಹೋರಾಟದಿಂದ ತೆಲಂಗಾಣ ರೈತರ ಹೋರಾಟದವರೆಗೆ ಈ ಪರಂಪರೆ ವಿಸ್ತರಿಸುತ್ತದೆ.

ಈ ಹೋರಾಟಗಳ ನಡುವೆಯೇ ಬ್ರಿಟೀಷರೊಡನೆ ವೀರೋಚಿತವಾಗಿ ಹೋರಾಡಿ ಪ್ರಾಣತೆತ್ತ ಅನೇಕ ಪ್ರಾಂತೀಯ ಸಂಸ್ಥಾನಗಳ ಇತಿಹಾಸವನ್ನೂ ದಾಖಲಿಸಲಾಗಿದೆ. ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ, ಸಂಗೊಳ್ಳಿರಾಯಣ್ಣ ಮುಂತಾದವರು ಹುತಾತ್ಮರಾಗಿದ್ದಾರೆ. ಭಾರತ ಅಹಿಂಸಾ ಮಾರ್ಗದ ಮೂಲಕ ರಕ್ತಪಾತ ಇಲ್ಲದೆ ಸ್ವಾತಂತ್ರ್ಯ ಪಡೆದಿದೆ ಎನ್ನುವುದು ಒಟ್ಟಾರೆ ಸ್ವಾತಂತ್ರ್ಯ ಸಂಗ್ರಾಮದ ದೃಷ್ಟಿಯಿಂದ ಸಮರ್ಥನೀಯವೆನಿಸಿದರೂ, ಬ್ರಿಟೀಷರ ಕೋವಿಗಳು ಸಾವಿರಾರು ಭಾರತೀಯರ ರಕ್ತ ಹರಿಸಿಯೇ ತನ್ನ ಆಳ್ವಿಕೆಯನ್ನು ಕೊನೆಗೊಳಿಸಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. 20ನೆಯ ಶತಮಾನದ ನಂತರದ ರಕ್ತಸಿಕ್ತ ಇತಿಹಾಸದಲ್ಲಿ ಎರಡು ಪ್ರಮುಖ ಘಟನೆಗಳನ್ನು ನೆನೆಯುವುದಾದರೆ ಮೊದಲನೆಯದಾಗಿ ಜಲಿಯನ್‌ವಾಲಾ ಬಾಗ್‌ ನೆನಪಾದರೆ, ಮತ್ತೊಂದು ಕರ್ನಾಟಕದ ವಿದುರಾಶ್ವತ್ಥ ನೆನಪಾಗುತ್ತದೆ. ಸಹಜವಾಗಿಯೇ ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್‌ವಾಲಾಬಾಗ್‌ ಎಂದೇ ಕರೆಯಲಾಗುತ್ತದೆ.

ವಿದುರಾಶ್ವತ್ಥದ ಐತಿಹ್ಯ ಮತ್ತು ಇತಿಹಾಸ

ಅವಿಭಜಿತ ಕೋಲಾರ ಜಿಲ್ಲೆಯ, ಈಗಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪ ಪಿನಾಕಿನಿ ನದಿಯ ತೀರದಲ್ಲಿರುವ ಒಂದು ಪುಟ್ಟ ಗ್ರಾಮ ವಿದುರಾಶ್ವತ್ಥ. ಪೌರಾಣಿಕ ಐತಿಹ್ಯಗಳಿಂದ ಇತಿಹಾಸ ಪ್ರಸಿದ್ಧವಾಗಿರುವ ಈ ಗ್ರಾಮ ಆಸ್ತಿಕರಿಗೆ ಒಂದು ಪುಣ್ಯಕ್ಷೇತ್ರ ಮತ್ತು ಯಾತ್ರಾಸ್ಥಳವೂ ಹೌದು. ಇಲ್ಲಿನ ಅಶ್ವತ್ಥಮರದ ಪಾದತಳದಲ್ಲಿ ನಾಗರಪ್ರತಿಷ್ಠೆ ಮಾಡುವ ಮೂಲಕ ತಮ್ಮ ಪಾಪಗಳನ್ನು ನಿವೇದಿಸಿಕೊಂಡು ಬದುಕಿನ ಸಂಕಷ್ಟಗಳಿಂದ ಪರಿಹಾರ ಕೋರುವ ಸಾವಿರಾರು ಭಕ್ತಾದಿಗಳು ಈ ಕ್ಷೇತ್ರಕ್ಕೆ ವರ್ಷವಿಡೀ ಬರುತ್ತಲೇ ಇರುತ್ತಾರೆ. ಮಹಾಭಾರತ ಕಾಲದ ಐತಿಹ್ಯ ಇರುವ ಈ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮಾಡಿದರೆ ತಮ್ಮ ಕಷ್ಟಗಳು ಪರಿಹಾರವಾಗುತ್ತವೆ ಎಂಬ ಬಲವಾದ ನಂಬಿಕೆಯೇ ಈ ಕ್ಷೇತ್ರವನ್ನು ಕರ್ನಾಟಕದ ಯಾತ್ರಾಸ್ಥಳವನ್ನಾಗಿ ಮಾಡಿದೆ. ಪ್ರತಿವರ್ಷ ಏಪ್ರಿಲ್‌ ಮಾಹೆಯಲ್ಲಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಪಿನಾಕಿನಿ ನದಿಯ ತೀರದಲ್ಲಿರುವ ಈ ಗ್ರಾಮ ಆಸ್ತಿಕ ಹಿಂದೂಗಳಿಗೆ ಒಂದು ಪವಿತ್ರ ಕ್ಷೇತ್ರವೂ ಆಗಿದೆ. ಹಾಗೆಯೇ ಭಾರತದ ಬಹುಸಂಸ್ಕೃತಿಯ ಒಂದು ಪ್ರತೀಕವಾಗಿಯೂ ನಡೆದುಬಂದಿರುವ ವಿದುರಾಶ್ವತ್ಥಕ್ಕೆ ಅನ್ಯ ಧರ್ಮದ ಜನರೂ ಭೇಟಿ ನೀಡುವುದನ್ನು ಕಾಣಬಹುದು.

ಮತಶ್ರದ್ಧೆ, ಜನಸಾಮಾನ್ಯರ ನಂಬಿಕೆ ಮತ್ತು ಪೌರಾಣಿಕ ಐತಿಹ್ಯಗಳ ಹೊರತಾಗಿಯೂ ವಿದುರಾಶ್ವತ್ಥ ಚಾರಿತ್ರಿಕವಾಗಿ ಭಾರತದ ಭೂಪಟದಲ್ಲಿ ಒಂದು ಶಾಶ್ವತ ಸ್ಥಾನ ಗಳಿಸಿರುವುದೂ ಹೌದು. ಭಕ್ತಿ, ನಂಬಿಕೆ, ಶ್ರದ್ಧೆ ಮತ್ತು ಧಾರ್ಮಿಕ ಆಚರಣೆಗಳು ನಿರಂತರವಾಗಿ ಹರಿಯುತ್ತಿದ್ದ ಪಿನಾಕಿನಿ ನದಿ ತೀರದ ಈ ಪುಟ್ಟ ಗ್ರಾಮದಲ್ಲಿ ಬ್ರಿಟೀಷ್‌ ವಸಾಹತುಶಾಹಿಯು ರಕ್ತದ ಹೊಳೆ ಹರಿಸಿದ ರಕ್ತಸಿಕ್ತ ಚರಿತ್ರೆ ಇಲ್ಲಿ ದಾಖಲಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಈಸೂರು, ಶಿವಪುರ ದಾಖಲಾಗಿರುವಂತೆಯೇ ವಿದುರಾಶ್ವತ್ಥವೂ ಸಹ ಧ್ವಜ ಸತ್ಯಾಗ್ರಹ ಕೇಂದ್ರವಾಗಿ, ಬ್ರಿಟೀಷರ ಕ್ರೌರ್ಯಕ್ಕೆ ಬಲಿಯಾದ ಹುತಾತ್ಮರ ಕತೆಯನ್ನು ಸಾರುತ್ತದೆ. 1938ರ ಏಪ್ರಿಲ್‌ 25ರಂದು ಇದೇ ಸ್ಥಳದಲ್ಲೇ ಬ್ರಿಟೀಷರ ಗುಂಡೇಟಿಗೆ 32 ಸ್ವಾತಂತ್ರ್ಯ ಸಂಗ್ರಾಮಿಗಳು ಹುತಾತ್ಮರಾಗಿದ್ದರು. ಈ ಹುತಾತ್ಮರನ್ನು ಸಾರ್ವಕಾಲಿಕವಾಗಿ ಸ್ಮರಿಸಲೆಂದೇ ಇಲ್ಲೊಂದು ಸ್ಮಾರಕವನ್ನೂ ನಿರ್ಮಿಸಲಾಗಿದ್ದು, ಸ್ವಾತಂತ್ರ್ಯ ಸಂಗ್ರಾಮದ 200 ವರ್ಷಗಳ ಇತಿಹಾಸವನ್ನು ದಾಖಲಿಸುವ ಒಂದು ಚಿತ್ರ ಗ್ಯಾಲರಿಯನ್ನೂ ನಿರ್ಮಿಸಲಾಗಿದೆ.

1938ರಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಶಿವಪುರದಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್‌ ಅಧಿವೇಶನವು ಕರ್ನಾಟಕದ ಸ್ವಾತಂತ್ರ್ಯ ಚಳುವಳಿಗೆ ಚಾಲನೆ ನೀಡಿದ ಒಂದು ಘಟನೆ. ಧ್ವಜಾರೋಹಣೆಯ ಮೂಲಕ ಭಾರತದ ಸಾರ್ವಭೌಮತ್ವವನ್ನು ಸಾರುವ ನಿಟ್ಟಿನಲ್ಲಿ ಸಂಸ್ಥಾನದ ವಿವಿಧೆಡೆಗಳಲ್ಲಿ ಧ್ವಜ ಸತ್ಯಾಗ್ರಹಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಶಿವಪುರದಲ್ಲಿ ನಡೆಯಬೇಕಿದ್ದ ಮೂರು ದಿನದ ಅಧಿವೇಶನಕ್ಕೆ ಮೈಸೂರು ಸರ್ಕಾರ ಅಡ್ಡಿಪಡಿಸಿದ ಕಾರಣ ಈ ಸಂದರ್ಭದಲ್ಲಿ ಶಿವಪುರದಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಸತ್ಯಾಗ್ರಹಿಗಳ ಮೇಲೆ ಗುಂಡಿನ ದಾಳಿ ನಡೆಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆಜ್ಞಾಪಿಸಿದ್ದರೂ, ಶಾಂತಿಯುತವಾಗಿ ನಡೆಯುತ್ತಿರುವ ಸಭೆಯ ಮೇಲೆ ಗುಂಡು ಹಾರಿಸಲು ನಿರಾಕರಿಸಿದ ಜಿಲ್ಲಾಧಿಕಾರಿ ಇನಾಯತ್‌ ಉಲ್ಲಾ ಮೇಕ್ರಿ ವರ್ಗಾವಣೆಯ ಶಿಕ್ಷೆ ಎದುರಿಸಬೇಕಾಯಿತು. ಮೂರು ದಿನವೂ ಸಭೆ ನಡೆದು ನಂತರ ಹಲವಾರು ನಾಯಕರು ಬಂಧನಕ್ಕೊಳಗಾಗಿದ್ದರು.

ಇದೇ ಸ್ಫೂರ್ತಿಯೊಂದಿಗೆ ವಿದುರಾಶ್ವತ್ಥದಲ್ಲೂ ಧ್ವಜ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ 1938ರ ಏಪ್ರಿಲ್‌ 18ರಂದು ದೇಶಭಕ್ತರ ದಿನಾಚರಣೆಯನ್ನು ಆಚರಿಸಲು ಸ್ಥಳೀಯ ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದರು. ಏಪ್ರಿಲ್‌ 14 ರಿಂದ 29ರವರೆಗೆ ಇಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲೇ ಈ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಲಾಯಿತು. ಏಕೆಂದರೆ ಈ ಜಾತ್ರೆಯಲ್ಲಿ ದನದ ಜಾತ್ರೆಯೂ ನಡೆಯುವುದರಿಂದ ಲಕ್ಷಾಂತರ ಜನರು ಸೇರುತ್ತಿದ್ದರು. ಏಪ್ರಿಲ್‌ 18ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆಗೇ ಜಿಲ್ಲಾಡಳಿತವು ಇಡೀ ಪ್ರದೇಶದಲ್ಲಿ 15 ದಿನಗಳ ಕಾಲ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆಯನ್ನು ಹೇರಿತ್ತು. ಆದರೆ ಇದಾವುದನ್ನೂ ಲೆಕ್ಕಿಸದ ಸ್ಥಳೀಯ ಕಾಂಗ್ರೆಸ್‌ ನಾಯಕರು ಧ್ವಜಸತ್ಯಾಗ್ರಹದ ಅಧ್ಯಕ್ಷರಾದ ಎನ್‌ ಸಿ ನಾಗಯ್ಯರೆಡ್ಡಿ ನೇತೃತ್ವದಲ್ಲಿ ಶಾಂತಿಯುತ ಸಭೆ ನಡೆಸಿದ್ದರು. ಏಪ್ರಿಲ್‌ 22ರಂದು ನಾಗಯ್ಯರೆಡ್ಡಿ ಮುಂದಾಳತ್ವದಲ್ಲಿ ಸತ್ಯಾಗ್ರಹಿಗಳು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಆಗಮಿಸಿ ಅಲ್ಲಿ ಕರಪತ್ರಗಳನ್ನು ಹಂಚುವುದರ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ದಿಟ್ಟ ಹೋರಾಟಕ್ಕೆ ಚಾಲನೆ ನೀಡಿದ್ದರು. ಈ ಘಟನೆಯಲ್ಲಿ ನಾಗಯ್ಯರೆಡ್ಡಿ ಅವರೊಂದಿಗೆ ಶ್ರೀಪಾಲಯ್ಯ, ನಾರಾಯಣಪ್ಪ, ಹೆಚ್‌ ಎಲ್‌ ವೆಂಕಟ್ರಾಮರಾವ್‌ ಮುಂತಾದ ಹಲವು ನಾಯಕರನ್ನು ಬಂಧಿಸಲಾಯಿತು. ಕ್ಷಮೆ ಯಾಚಿಸಲು ನಿರಾಕರಿಸಿದ ಈ ಹೋರಾಟಗಾರರಿಗೆ ಬಿಡುಗಡೆಯೂ ದೊರೆಯಲಿಲ್ಲ.

ಏಪ್ರಿಲ್‌ 23ರಂದು ಗೌರಿಬಿದನೂರಿನಿಂದ ರಾಮಯ್ಯ ಶೆಟ್ಟಿ ಮತ್ತು ಜ್ವಾಲನಯ್ಯವರ ಮುಂದಾಳತ್ವದಲ್ಲಿ ಮುನ್ನೂರಕ್ಕೂ ಹೆಚ್ಚು ಜನರು ವಿದುರಾಶ್ವತ್ಥಕ್ಕೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಈ ಇಬ್ಬರೂ ನಾಯಕರನ್ನು ಬಂಧಿಸಲಾಯಿತು. ಈ ಬಂಧನಗಳ ಸುದ್ದಿ ವ್ಯಾಪಿಸುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಶಭಕ್ತಿಯ ಅಲೆ ಪ್ರವಹಿಸಲಾರಂಭಿಸಿತ್ತು. ಕೋಲಾರ ಜಿಲ್ಲೆಯ ಹಲವು ಗ್ರಾಮಗಳಿಂದ ಜನರು ತಂಡೋಪತಂಡವಾಗಿ ಧ್ವಜ ಸತ್ಯಾಗ್ರಹ ನಡೆಯಲಿದ್ದ ವಿದುರಾಶ್ವತ್ಥದ ಕಡೆ ಹೆಜ್ಜೆ ಹಾಕತೊಡಗಿದರು. ನೆರೆಯ ಆಂಧ್ರ ಪ್ರದೇಶದ ಹಿಂದೂಪುರದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರು ಕಲ್ಲೂರು ಸುಬ್ಬರಾವ್‌ ಮುಂದಾಳತ್ವದಲ್ಲಿ ಇಲ್ಲಿಗೆ ಆಗಮಿಸಿದರು. ಇಲ್ಲಿ ನೆರೆದ ಸಾವಿರಾರು ಕಾರ್ಯಕರ್ತರು ತಾವು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಧ್ವಜಸತ್ಯಾಗ್ರಹ ನಡೆಸುವುದಾಗಿ ಪಣತೊಟ್ಟರು. ಏಪ್ರಿಲ್‌ 25ರಂದು ಗೌರಿಬಿದನೂರು ಮತ್ತು ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಸಾವಿರ ಸಾವಿರ ಸಂಖ್ಯೆಯಲ್ಲಿ ವಿದುರಾಶ್ವತ್ಥದೆಡೆಗೆ ಹೆಜ್ಜೆ ಹಾಕಲಾರಂಭಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಂದು ಧ್ವಜಸತ್ಯಾಗ್ರಹದಲ್ಲಿ ಭಾಗವಹಿಸಲು 25 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು ಎನ್ನಲಾಗುತ್ತದೆ.

ಈ ಸಂದರ್ಭದಲ್ಲಿ ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತಿದ್ದ, ಅಲ್ಲಿ ನೆರೆದಿದ್ದ ಜನರ ಮೇಲೆ ಮ್ಯಾಜಿಸ್ಟ್ರೇಟರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ಚದುರಲಾರಂಭಿಸಿದ ಜನರು ಕಲ್ಲು ತೂರಾಟದಲ್ಲಿ ತೊಡಗಿದ್ದರು. ಈ ಗಲಭೆಯ ನಡುವೆಯೇ ಅಲ್ಲಿ ನೆರೆದಿದ್ದ 80ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯ ರೈಫಲ್‌ ಪಡೆಗೆ ಗುಂಡುಹಾರಿಸಲು ಆಜ್ಞಾಪಿಸಲಾಯಿತು. ಮೂರು ಬಾರಿ ನಡೆದ ಈ ಗುಂಡಿನ ದಾಳಿಯಲ್ಲಿ ಪೊಲೀಸರು 96 ಸುತ್ತು ಗುಂಡುಗಳನ್ನು ಹಾರಿಸಿದ್ದರು. ಈ ಗುಂಡಿನ ದಾಳಿಗೆ ಸ್ಥಳದಲ್ಲೇ 32 ಜನರು ಹುತಾತ್ಮರಾದರು. 48 ಮಂದಿ ಗಾಯಗೊಂಡಿದ್ದರು. ಸರ್ಕಾರದ ವರದಿಯ ಪ್ರಕಾರ 15 ಜನರು ಮೃತರಾಗಿರುವುದಾಗಿ ದಾಖಲಾಗಿದ್ದರೂ, ಕೆಲವು ಪತ್ರಿಕಾ ವರದಿಗಳು ಮತ್ತು ಬಿಬಿಸಿ ವರದಿಯ ಪ್ರಕಾರ ಕನಿಷ್ಟ 32 ಜನರು ಹುತಾತ್ಮರಾಗಿದ್ದರು. ಈ ಮಾರಣಹೋಮದಿಂದ ಪುಣ್ಯಕ್ಷೇತ್ರವಾಗಿದ್ದ ವಿದುರಾಶ್ವತ್ಥ ಭೀಕರ ಮಸಣವಾಯಿತು. ಪಿನಾಕಿನಿ ನದಿಯ ನೀರಿನೊಂದಿಗೇ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಹೊಳೆಯೂ ಹರಿದಿತ್ತು. ಪಿನಾಕಿನಿ ನದಿಯು ಸ್ವಾತಂತ್ರ್ಯ ಸಂಗ್ರಾಮಿಗಳ ರಕ್ತದ ಮಡುವಿಗೆ ಸಾಕ್ಷಿಯಾಯಿತು. ಈ ಘಟನೆಯಲ್ಲಿ ಭಾಗಿಯಾಗಿದ್ದ ಪ್ರತ್ಯಕ್ಷದರ್ಶಿಗಳಾಗಿ ಮೂವರು ಮಹನೀಯರು, ಇತ್ತೀಚಿನವರೆಗೂ ಜೀವಂತವಾಗಿದ್ದರು.

ಸ್ಮಾರಕ ಮತ್ತು ಚಾರಿತ್ರಿಕ ಸ್ಮರಣೆ

ಕರ್ನಾಟಕದ ಜಲಿಯನ್‌ವಾಲಾ ಬಾಗ್‌ ಎಂದೇ ಹೆಸರಾದ ಈ ಚಾರಿತ್ರಿಕ ಘಟನೆಯು 1973ರಲ್ಲಿ ಸ್ಥಾಪಿಸಿದ ಸ್ಮಾರಕ ಶಿಲೆ ಮತ್ತು 2004ರಲ್ಲಿ ಸ್ಥಾಪಿತವಾದ ವೀರಸೌಧದ ಮೂಲಕ ಇಂದಿಗೂ ಅಂದಿನ ಕರಾಳ ಚರಿತ್ರೆಯನ್ನು ನೆನಪಿಸುತ್ತಿವೆ. ಈ ಚರಿತ್ರಾರ್ಹ ಘಟನೆಯನ್ನು ಸಾರ್ವಕಾಲಿಕವಾಗಿ ಸ್ಮರಿಸಲು ನೆರವಾಗುವಂತಹ ಒಂದು ಚಿತ್ರ ಗ್ಯಾಲರಿಯನ್ನು ರೂಪಿಸಲಾಗಿದೆ. ಚರಕದ ಆಕಾರದಲ್ಲಿರುವ ಒಂದು ಸುಂದರ ವಿನ್ಯಾಸದ ಕಟ್ಟಡದಲ್ಲಿ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನೊಳಗೊಂಡ ಗ್ರಂಥಾಲಯವನ್ನೂ ನಿರ್ಮಿಸಲಾಗಿದೆ. ಸ್ಥಳೀಯ ಶಾಸಕರಾದ ಶಿವಶಂಕರ ರೆಡ್ಡಿ ಮತ್ತು ಗೌರಿಬಿದನೂರಿನ ನಿವೃತ್ತ ಪ್ರಾಧ್ಯಾಪಕ, ಲೇಖಕ ಬಿ ಗಂಗಾಧರಮೂರ್ತಿ ಮತ್ತು ಕೆಲವು ಸಮಾನಾಸಕ್ತ ಗೆಳೆಯರ ಪರಿಶ್ರಮದೊಂದಿಗೆ ಈ ಗ್ಯಾಲರಿ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. 1757ರ ಪ್ಲಾಸಿ ಕದನದಿಂದ 1961ರ ಗೋವಾ ವಿಮೋಚನೆಯವರೆಗೆ ಭಾರತದ ವಸಾಹತುವಿರೋಧಿ ಹೋರಾಟದ ವಿವಿಧ ಮಗ್ಗುಲುಗಳನ್ನು ಬಿಂಬಿಸುವ 104 ವರ್ಣಚಿತ್ರ ಫಲಕಗಳನ್ನು ಈ ಗ್ಯಾಲರಿಯಲ್ಲಿ ಕಾಲಾನುಕ್ರಮವಾಗಿ ಜೋಡಿಸಲಾಗಿದೆ.

ಈ ಅವಧಿಯಲ್ಲಿ ನಡೆದ ಹೋರಾಟಗಳು, ದಂಗೆಗಳು, ಆಂದೋಲನಗಳು, ಯುದ್ಧಗಳು ಎಲ್ಲವನ್ನೂ ಈ ವರ್ಣಚಿತ್ರಗಳಲ್ಲಿ ಸಂಕ್ಷಿಪ್ತ ವಿವರಗಳೊಂದಿಗೆ ಬಿಂಬಿಸಲಾಗಿದೆ. ಕಿತ್ತೂರು ರಾಣಿ, ಝಾನ್ಸಿ ರಾಣಿ, 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಟಿಪ್ಪು, ಸಂಗೊಳ್ಳಿ ರಾಯಣ್ಣ, ಬಿರ್ಸಾ ಮುಂಡಾ ಹೀಗೆ ಹಲವು ಮಜಲುಗಳ ಬ್ರಿಟೀಷ್‌ ವಿರೋಧಿ ಹೋರಾಟಗಾರರನ್ನು ಬಿಂಬಿಸಲಾಗಿದ್ದು ದಾಖಲಿತ ಅಧಿಕೃತ ಇತಿಹಾಸದಲ್ಲಿರುವ ಚಾರಿತ್ರಿಕ ಸಂಗತಿಗಳನ್ನು ಇಲ್ಲಿ ಬಿತ್ತರಿಸಲಾಗಿದೆ. ಸಹಜವಾಗಿಯೇ 20ನೆಯ ಶತಮಾನದಲ್ಲಿ ರೂಪುಗೊಂಡ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಣಬಹುದಾದ ವೈವಿಧ್ಯಮಯ ವಿಚಾರಧಾರೆಗಳು, ಹೋರಾಟದ ಧೋರಣೆಗಳು, ಮಾರ್ಗಗಳು ಇಲ್ಲಿ ಬಿಂಬಿತವಾಗಿವೆ. ಸೈದ್ಧಾಂತಿಕ, ತಾತ್ವಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಐಕಮತ್ಯದೊಂದಿಗೆ, ಐಕ್ಯತೆಯಿಂದ ಬ್ರಿಟೀಷ್‌ ವಸಾಹತುಶಾಹಿಯ ಸಂಕೋಲೆಗಳನ್ನು ಕಿತ್ತು ಹಾಕಿದ ರಾಷ್ಟ್ರನಾಯಕರ ಸ್ಮರಣೆ ಇಲ್ಲಿ ವಸ್ತುನಿಷ್ಠತೆಯಿಂದ ದಾಖಲಾಗಿದೆ. ಆ ಸಂದರ್ಭದಲ್ಲೇ ಕಂಡುಬಂದಿದ್ದ ಎಡಪಂಥೀಯ, ಬಲಪಂಥೀಯ, ತೀವ್ರಗಾಮಿ, ರಾಷ್ಟ್ರೀಯವಾದಿ ಹೋರಾಟಗಳ ವಿಭಿನ್ನ ಮಜಲುಗಳನ್ನೂ ಪರಿಚಯಿಸಲಾಗಿದೆ.

1905ರಲ್ಲಿ ಕ್ರಾಂತಿಕಾರಿಗಳ ಜೊತೆಗಿದ್ದ ಸಾವರ್ಕರ್‌ ಅವರ ಚಿತ್ರ ಇರುವಂತೆಯೇ, ಗಾಂಧಿ ಹತ್ಯೆಯ ನಂತರ ನಡೆದ ಬೆಳವಣಿಗೆಗಳಲ್ಲೂ ಅವರ ಚಿತ್ರ ಇಲ್ಲಿ ಕಾಣುತ್ತದೆ. ಹಾಗೆಯೇ ಭಗತ್‌ ಸಿಂಗ್‌ ಮುಂತಾದವರ ಎಡಪಂಥೀಯ ಕ್ರಾಂತಿಕಾರಿ ಹೆಜ್ಜೆಗಳ ನಡುವೆಯೇ ಉಗಮಿಸಿದ್ದ ಹಿಂದೂ ಮಹಾಸಭಾ ಮುಂತಾದ ಬಲಪಂಥೀಯ ಸಂಘಟನೆಗಳ ಪ್ರಸ್ತಾಪವನ್ನೂ ಕಾಣಬಹುದು. ಭಾರತದ ಶೋಷಿತ ಜನಸಮುದಾಯಗಳಿಗೆ ಬೆಳಕಿನ ಕಿಂಡಿ ತೋರಿ ಒಂದು ಸಮಸಮಾಜ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ರಚಿಸಿದ ಅಂಬೇಡ್ಕರ್‌ ಅವರೂ ಇಲ್ಲಿ ಜ್ವಲಿಸುತ್ತಾರೆ. ಗಾಂಧಿ ಮಾರ್ಗವನ್ನು ಒಪ್ಪುವ ಮತ್ತು ಒಪ್ಪದಿರುವ ಎಲ್ಲ ವಿಚಾರಧಾರೆಗಳನ್ನು ಚಾರಿತ್ರಿಕ ಮಾಹಿತಿಯೊಂದಿಗೆ ಸಚಿತ್ರವಾಗಿ ಈ ಗ್ಯಾಲರಿಯಲ್ಲಿ ಬಿಂಬಿಸಲಾಗಿದೆ. 200 ವರ್ಷಗಳ ಸುದೀರ್ಘ ಇತಿಹಾಸವನ್ನು ಮತ್ತು ಈ ಚರಿತ್ರೆಯ ಹಾದಿಯಲ್ಲಿ ಆಗಿಹೋದ ನೂರಾರು ಹುತಾತ್ಮರನ್ನು ಮತ್ತೆ ಮತ್ತೆ ನೆನಪಿಸುವ ರೀತಿಯಲ್ಲಿ ಈ ಗ್ಯಾಲರಿಯನ್ನು ರೂಪಿಸಲಾಗಿದೆ. ದೇಶದ ಹಲವಾರು ರಾಜಕೀಯ ನಾಯಕರು, ಪಕ್ಷಾತೀತವಾಗಿ ಇಲ್ಲಿಗೆ ಭೇಟಿ ನೀಡಿ, ಈ ಗ್ಯಾಲರಿಯನ್ನು ಪ್ರಶಂಸಿಸಿ ದಾಖಲಿಸಿದ್ದಾರೆ.

ಆದರೆ ಇತ್ತೀಚೆಗೆ ಕೆಲವು ಬಲಪಂಥೀಯ ಗುಂಪುಗಳು ಗ್ಯಾಲರಿಯಲ್ಲಿರುವ ಕೆಲವು ವರ್ಣಚಿತ್ರಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದಾಗಿ ತಿಳಿದುಬಂದಿದೆ. ಮಹಾತ್ಮ ಗಾಂಧಿಗೆ ಹೆಚ್ಚು ಪ್ರಾಶಸ್ತ್ಯ ನೀಡಿರುವುದು, ಸಾವರ್ಕರ್‌ಗೆ ಅಪಮಾನವಾಗುವಂತೆ ಚಿತ್ರಿಸಿರುವುದು, ಪ್ರತಿಯೊಂದು ಫಲಕದಲ್ಲೂ ಮುಸ್ಲಿಂ ಸಂಗ್ರಾಮಿಗಳನ್ನು ಬಿಂಬಿಸಿರುವುದು, ಟಿಪ್ಪು ಸುಲ್ತಾನ್‌ನನ್ನು ಬಿತ್ತರಿಸಿರುವುದು, ಹಿಂದೂ ರಾಷ್ಟ್ರೀಯವಾದಿಗಳನ್ನು ಬಲಪಂಥೀಯರು ಎಂದು ಗುರುತಿಸಿರುವುದು ಇವೇ ಮುಂತಾದ ಕೆಲವು ಆಕ್ಷೇಪಗಳು ವ್ಯಕ್ತವಾಗಿದ್ದು, ಕೆಲವು ಗುಂಪುಗಳಿಂದ ಗ್ಯಾಲರಿಗೆ ಹಾನಿ ಉಂಟುಮಾಡುವ ಬೆದರಿಕೆಯೂ ಕೇಳಿಬಂದಿದೆ. ಇತಿಹಾಸ ಎಂದಿಗೂ ಸಾರ್ವತ್ರಿಕ ಸಮ್ಮತಿ ಪಡೆಯುವುದಿಲ್ಲ. ನೋಡುಗರ, ಓದುಗರ ದೃಷ್ಟಿಯೇ ಚರಿತ್ರೆಯ ಸರಿ ತಪ್ಪುಗಳನ್ನು ನಿಷ್ಕರ್ಷೆ ಮಾಡುವುದನ್ನು ಕಾಣುತ್ತಲೇ ಬಂದಿದ್ದೇವೆ. ಆಕ್ಷೇಪಗಳು, ಆರೋಪ ಪ್ರತ್ಯಾರೋಪಗಳ ನಡುವೆಯೇ ಚರಿತ್ರೆಯನ್ನು ನೋಡುತ್ತಾ, ಹೊಸ ಚರಿತ್ರೆಯನ್ನು ಕಟ್ಟುವುದು ನಾಗರಿಕ ಮಾನವ ಸಮಾಜದ ಆದ್ಯತೆಯಾಗಬೇಕು.

ಕೆಲವೇ ವ್ಯಕ್ತಿಗಳ, ಹಲವು ವರ್ಷಗಳ ಪರಿಶ್ರಮದಿಂದ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಿರ್ಮಿಸಲಾಗಿರುವ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಮತ್ತು ನಾಗರಿಕರ ಜವಾಬ್ದಾರಿಯೂ ಹೌದು. ವಿದುರಾಶ್ವತ್ಥ ಬ್ರಿಟೀಷ್‌ ವಸಾಹತು ಕಾಲದ ರಕ್ತಸಿಕ್ತ ಇತಿಹಾಸವನ್ನು ಸಾರಿ ಸಾರಿ ಹೇಳುತ್ತದೆ. ಸ್ಥಳೀಯರು ಈ ಚರಿತ್ರೆಯ ಪುಟಗಳೊಡನೆಯೇ ಇಲ್ಲಿನ ಸ್ಮಾರಕವನ್ನು ಕಾಪಾಡಿಕೊಂಡು ಬಂದಿದ್ದಾರೆ. 27 ವರ್ಷಗಳ ಕಾಲ ಬತ್ತಿಹೋಗಿದ್ದು ಮರಳುಗಣಿಗಾರಿಕೆಯ ಮಾಫಿಯಾಗಳಿಗೆ ಚಿನ್ನದ ಗಣಿಯಂತಾಗಿದ್ದ ಪಿನಾಕಿನಿ ನದಿ ಈ ವರ್ಷ ತುಂಬಿ ಹರಿಯುತ್ತಿದೆ. ಈ ನದಿಯ ಝುಳುಝಳು ನಾದದೊಂದಿಗೆ , ಅಶ್ವತ್ಥ ವೃಕ್ಷದಲ್ಲಿ ನಲಿಯುವ ಹಕ್ಕಿಗಳ ಕಲರವದೊಂದಿಗೇ, ಕರ್ನಾಟಕದ ಮತ್ತು ನೆರೆ ರಾಜ್ಯಗಳ ಶ್ರದ್ಧಾಭಕ್ತಿಗಳ ಪ್ರಾರ್ಥನೆಯೊಂದಿಗೇ, ಈ ಚಿತ್ರ ಗ್ಯಾಲರಿಯನ್ನು ಜೀವಂತವಾಗಿರಿಸಿ, ಸ್ವಾತಂತ್ರ್ಯ ಸಂಗ್ರಾಮದ ಹೆಜ್ಜೆ ಗುರುತುಗಳನ್ನು ಜೀವಂತಿಕೆಯಿಂದಿರಿಸುವ ಹೊಣೆ ನಮ್ಮದಾಗಿದೆ.

ಕೆಲವೇ ಬಲಪಂಥೀಯ ಸಂಘಟನೆಗಳ ಮತಾಂಧತೆಗೆ ಈ ಗ್ಯಾಲರಿ ಬಲಿಯಾಗದಂತೆ ಜಾಗ್ರತೆ ವಹಿಸುವ ಜವಾಬ್ದಾರಿ ಸರ್ಕಾರ ಮತ್ತು ಜಿಲ್ಲಾಡಳಿತದ ಮೇಲಿದೆ. ಬ್ರಿಟೀಷರು ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್‌ವಾಲಾಬಾಗ್‌ ಮಾಡಿ ಕರಾಳ ಛಾಯೆಯನ್ನು ಹರಡಿ ಹೋಗಿದ್ದಾರೆ. ಭಾರತದ 75ನೆಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವಿದುರಾಶ್ವತ್ಥದ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿ ಮತ್ತೊಂದು ಕಂಬಾಲಪಲ್ಲಿ ಆಗುವುದು ಬೇಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending