ಬಹಿರಂಗ
ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕಕ್ಕೂ ಲಗ್ಗೆ ಇಟ್ಟ ಮತೀಯ ರಾಜಕಾರಣ
- ನಾ ದಿವಾಕರ
ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..?
ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು ಆಳ್ವಿಕೆಯಿಂದ ವಿಮೋಚನೆ ಪಡೆಯುವ ಮುನ್ನ ಭಾರತ ಆಂತರಿಕವಾಗಿ ಅನುಭವಿಸಿದ ತುಮುಲಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ, ಸಾಮಾಜಿಕ ಚೌಕಟ್ಟಿನಲ್ಲಿ ಮತ್ತು ರಾಜಕೀಯ ಭೂಮಿಕೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗುತ್ತದೆ.
ಗಾಂಧಿ ಅನುಸರಿಸಿದ ಅಹಿಂಸಾ ಮಾರ್ಗದ ಮೂಲಕವೇ ಭಾರತ ದಾಸ್ಯದಿಂದ ವಿಮೋಚನೆ ಪಡೆದಿದೆ ಎಂಬ ಸಾಮಾನ್ಯ ಗ್ರಹಿಕೆಯ ಹೊರತಾಗಿಯೂ ಸ್ವಾತಂತ್ರ್ಯ ಪೂರ್ವ ಇತಿಹಾಸದಲ್ಲಿ ಬ್ರಿಟೀಷ್ ವಸಾಹತುಶಾಹಿಯ ದಬ್ಬಾಳಿಕೆಗೆ ನೂರಾರು ಜೀವಗಳು ಬಲಿಯಾಗಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಸ್ವಾತಂತ್ರ್ಯದ ಹೊಸ್ತಿಲಲ್ಲೂ ಸಹ ಮತದ್ವೇಷ ಮತ್ತು ಮತಾಂಧತೆಗೆ ಗುರಿಯಾದ ಭಾರತ ಲಕ್ಷಾಂತರ ಸಾವು ನೋವುಗಳನ್ನು ಕಂಡಿದೆ.
ಸಾವಿರಾರು ಜನರ ತ್ಯಾಗ, ಬಲಿದಾನ, ನಿಸ್ವಾರ್ಥ ಹೋರಾಟದ ಪ್ರತಿಫಲವನ್ನು 1947ರ ಸ್ವಾತಂತ್ರ್ಯದಲ್ಲಿ ಕಾಣಬಹುದು. ರಾಜಕೀಯ ಸ್ವಾತಂತ್ರ್ಯ ಪಡೆಯುತ್ತಿದ್ದೇವೆ ಎಂಬ ಹೆಮ್ಮೆಯೊಂದಿಗೇ ಸಾಮಾಜಿಕ ಶೋಷಣೆ ಮತ್ತು ಸಾಂಸ್ಕೃತಿಕ ದಬ್ಬಾಳಿಕೆ ಸ್ವಾತಂತ್ರ್ಯಾನಂತರವೂ ಜೀವಂತವಾಗಿರುತ್ತದೆ ಎಂಬ ಆತಂಕದೊಡನೆಯೇ ಈ ದೇಶದ ಬಹುಸಂಖ್ಯಾತ ಶೋಷಿತ ಜನತೆ ಈ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಅಲ್ಲಗಳೆಯಳಾಗುವುದಿಲ್ಲ. ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ನಡೆದ ಸುದೀರ್ಘ ಸಂಘರ್ಷದಲ್ಲಿ ಹಲವು ವಿಚಾರಧಾರೆಗಳು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿವೆ. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧಿ ನೇತೃತ್ವದ ಕಾಂಗ್ರೆಸ್ ಸಹ 1885 ರಿಂದ 1935ರವರೆಗಿನ ಯಾತ್ರೆಯಲ್ಲಿ ಹಲವು ರೂಪಾಂತರಗಳನ್ನು ಕಂಡು, ಸವಾಲುಗಳನ್ನೂ ಎದುರಿಸಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಸೌಮ್ಯ ಮಾರ್ಗ, ಮೃದು ಮಾರ್ಗ, ರಾಜೀ ಮಾರ್ಗ, ತೀವ್ರಗಾಮಿ ಮಾರ್ಗ ಮತ್ತು ಕ್ರಾಂತಿಕಾರಿ ಧೋರಣೆಗಳ ಹಲವು ವಿಚಾರಧಾರೆಗಳು ಈ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದ್ದನ್ನು ನಿರಾಕರಿಸಲಾಗುವುದಿಲ್ಲ.
ಈ ವಿಭಿನ್ನ ವಿಚಾರಧಾರೆ ಮತ್ತು ಹೋರಾಟದ ಮಾರ್ಗಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯಂತೆಯೇ ಭಿನ್ನ ಧೋರಣೆಗಳನ್ನು ವ್ಯಕ್ತಪಡಿಸಿವೆ. 1757ರ ಪ್ಲಾಸಿ ಕದನದಿಂದ 1947ರವರೆಗೆ, ನಂತರ 1961ರ ಗೋವಾ ವಿಮೋಚನೆಯವರೆಗಿನ ಹೋರಾಟದ ಹಾದಿಯಲ್ಲಿ ಲಕ್ಷಾಂತರ ಭಾರತೀಯರು ತಮ್ಮ ಸಾಂಸ್ಕೃತಿಕ ಅಥವಾ ಧಾರ್ಮಿಕ ಗಡಿರೇಖೆಗಳನ್ನು ಮರೆತು, ಅಖಂಡ ಭಾರತಕ್ಕಾಗಿ ಜೀವ ಸವೆಸಿದ್ದಾರೆ, ತೆತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಹೀಗೆ ವಿಭಿನ್ನ ಮತಧರ್ಮಗಳ ಅನುಯಾಯಿಗಳು, ಆದಿವಾಸಿಗಳು, ಬುಡಕಟ್ಟು ಸಮುದಾಯಗಳು, ಶೋಷಿತ ವರ್ಗಗಳು ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ವೀರೋಚಿತ ಹೋರಾಟಗಳನ್ನು ನಡೆಸಿವೆ. ಈ ಎರಡು ಶತಮಾನಗಳ ಇತಿಹಾಸದಲ್ಲೇ ಆಂತರಿಕವಾಗಿ ಜಾತಿ ಶೋಷಣೆಯ ವಿರುದ್ಧ, ಅಸ್ಪೃಶ್ಯತೆಯ ವಿರುದ್ಧ, ಸಾಮಾಜಿಕ ಅಸಮಾನತೆಗಳ ವಿರುದ್ಧ, ಊಳಿಗಮಾನ್ಯ ದಬ್ಬಾಳಿಕೆಯ ವಿರುದ್ಧ ಶೋಷಿತ ವರ್ಗಗಳ, ರೈತಾಪಿ ವರ್ಗಗಳ ವೀರೋಚಿತ ಹೋರಾಟಗಳನ್ನೂ ಕಾಣಬಹುದು. ಬಿರ್ಸಾ ಮುಂಡಾ ಹೋರಾಟದಿಂದ ತೆಲಂಗಾಣ ರೈತರ ಹೋರಾಟದವರೆಗೆ ಈ ಪರಂಪರೆ ವಿಸ್ತರಿಸುತ್ತದೆ.
ಈ ಹೋರಾಟಗಳ ನಡುವೆಯೇ ಬ್ರಿಟೀಷರೊಡನೆ ವೀರೋಚಿತವಾಗಿ ಹೋರಾಡಿ ಪ್ರಾಣತೆತ್ತ ಅನೇಕ ಪ್ರಾಂತೀಯ ಸಂಸ್ಥಾನಗಳ ಇತಿಹಾಸವನ್ನೂ ದಾಖಲಿಸಲಾಗಿದೆ. ಟಿಪ್ಪುಸುಲ್ತಾನ್, ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ, ಸಂಗೊಳ್ಳಿರಾಯಣ್ಣ ಮುಂತಾದವರು ಹುತಾತ್ಮರಾಗಿದ್ದಾರೆ. ಭಾರತ ಅಹಿಂಸಾ ಮಾರ್ಗದ ಮೂಲಕ ರಕ್ತಪಾತ ಇಲ್ಲದೆ ಸ್ವಾತಂತ್ರ್ಯ ಪಡೆದಿದೆ ಎನ್ನುವುದು ಒಟ್ಟಾರೆ ಸ್ವಾತಂತ್ರ್ಯ ಸಂಗ್ರಾಮದ ದೃಷ್ಟಿಯಿಂದ ಸಮರ್ಥನೀಯವೆನಿಸಿದರೂ, ಬ್ರಿಟೀಷರ ಕೋವಿಗಳು ಸಾವಿರಾರು ಭಾರತೀಯರ ರಕ್ತ ಹರಿಸಿಯೇ ತನ್ನ ಆಳ್ವಿಕೆಯನ್ನು ಕೊನೆಗೊಳಿಸಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. 20ನೆಯ ಶತಮಾನದ ನಂತರದ ರಕ್ತಸಿಕ್ತ ಇತಿಹಾಸದಲ್ಲಿ ಎರಡು ಪ್ರಮುಖ ಘಟನೆಗಳನ್ನು ನೆನೆಯುವುದಾದರೆ ಮೊದಲನೆಯದಾಗಿ ಜಲಿಯನ್ವಾಲಾ ಬಾಗ್ ನೆನಪಾದರೆ, ಮತ್ತೊಂದು ಕರ್ನಾಟಕದ ವಿದುರಾಶ್ವತ್ಥ ನೆನಪಾಗುತ್ತದೆ. ಸಹಜವಾಗಿಯೇ ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಕರೆಯಲಾಗುತ್ತದೆ.
ವಿದುರಾಶ್ವತ್ಥದ ಐತಿಹ್ಯ ಮತ್ತು ಇತಿಹಾಸ
ಅವಿಭಜಿತ ಕೋಲಾರ ಜಿಲ್ಲೆಯ, ಈಗಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪ ಪಿನಾಕಿನಿ ನದಿಯ ತೀರದಲ್ಲಿರುವ ಒಂದು ಪುಟ್ಟ ಗ್ರಾಮ ವಿದುರಾಶ್ವತ್ಥ. ಪೌರಾಣಿಕ ಐತಿಹ್ಯಗಳಿಂದ ಇತಿಹಾಸ ಪ್ರಸಿದ್ಧವಾಗಿರುವ ಈ ಗ್ರಾಮ ಆಸ್ತಿಕರಿಗೆ ಒಂದು ಪುಣ್ಯಕ್ಷೇತ್ರ ಮತ್ತು ಯಾತ್ರಾಸ್ಥಳವೂ ಹೌದು. ಇಲ್ಲಿನ ಅಶ್ವತ್ಥಮರದ ಪಾದತಳದಲ್ಲಿ ನಾಗರಪ್ರತಿಷ್ಠೆ ಮಾಡುವ ಮೂಲಕ ತಮ್ಮ ಪಾಪಗಳನ್ನು ನಿವೇದಿಸಿಕೊಂಡು ಬದುಕಿನ ಸಂಕಷ್ಟಗಳಿಂದ ಪರಿಹಾರ ಕೋರುವ ಸಾವಿರಾರು ಭಕ್ತಾದಿಗಳು ಈ ಕ್ಷೇತ್ರಕ್ಕೆ ವರ್ಷವಿಡೀ ಬರುತ್ತಲೇ ಇರುತ್ತಾರೆ. ಮಹಾಭಾರತ ಕಾಲದ ಐತಿಹ್ಯ ಇರುವ ಈ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮಾಡಿದರೆ ತಮ್ಮ ಕಷ್ಟಗಳು ಪರಿಹಾರವಾಗುತ್ತವೆ ಎಂಬ ಬಲವಾದ ನಂಬಿಕೆಯೇ ಈ ಕ್ಷೇತ್ರವನ್ನು ಕರ್ನಾಟಕದ ಯಾತ್ರಾಸ್ಥಳವನ್ನಾಗಿ ಮಾಡಿದೆ. ಪ್ರತಿವರ್ಷ ಏಪ್ರಿಲ್ ಮಾಹೆಯಲ್ಲಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಪಿನಾಕಿನಿ ನದಿಯ ತೀರದಲ್ಲಿರುವ ಈ ಗ್ರಾಮ ಆಸ್ತಿಕ ಹಿಂದೂಗಳಿಗೆ ಒಂದು ಪವಿತ್ರ ಕ್ಷೇತ್ರವೂ ಆಗಿದೆ. ಹಾಗೆಯೇ ಭಾರತದ ಬಹುಸಂಸ್ಕೃತಿಯ ಒಂದು ಪ್ರತೀಕವಾಗಿಯೂ ನಡೆದುಬಂದಿರುವ ವಿದುರಾಶ್ವತ್ಥಕ್ಕೆ ಅನ್ಯ ಧರ್ಮದ ಜನರೂ ಭೇಟಿ ನೀಡುವುದನ್ನು ಕಾಣಬಹುದು.
ಮತಶ್ರದ್ಧೆ, ಜನಸಾಮಾನ್ಯರ ನಂಬಿಕೆ ಮತ್ತು ಪೌರಾಣಿಕ ಐತಿಹ್ಯಗಳ ಹೊರತಾಗಿಯೂ ವಿದುರಾಶ್ವತ್ಥ ಚಾರಿತ್ರಿಕವಾಗಿ ಭಾರತದ ಭೂಪಟದಲ್ಲಿ ಒಂದು ಶಾಶ್ವತ ಸ್ಥಾನ ಗಳಿಸಿರುವುದೂ ಹೌದು. ಭಕ್ತಿ, ನಂಬಿಕೆ, ಶ್ರದ್ಧೆ ಮತ್ತು ಧಾರ್ಮಿಕ ಆಚರಣೆಗಳು ನಿರಂತರವಾಗಿ ಹರಿಯುತ್ತಿದ್ದ ಪಿನಾಕಿನಿ ನದಿ ತೀರದ ಈ ಪುಟ್ಟ ಗ್ರಾಮದಲ್ಲಿ ಬ್ರಿಟೀಷ್ ವಸಾಹತುಶಾಹಿಯು ರಕ್ತದ ಹೊಳೆ ಹರಿಸಿದ ರಕ್ತಸಿಕ್ತ ಚರಿತ್ರೆ ಇಲ್ಲಿ ದಾಖಲಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಈಸೂರು, ಶಿವಪುರ ದಾಖಲಾಗಿರುವಂತೆಯೇ ವಿದುರಾಶ್ವತ್ಥವೂ ಸಹ ಧ್ವಜ ಸತ್ಯಾಗ್ರಹ ಕೇಂದ್ರವಾಗಿ, ಬ್ರಿಟೀಷರ ಕ್ರೌರ್ಯಕ್ಕೆ ಬಲಿಯಾದ ಹುತಾತ್ಮರ ಕತೆಯನ್ನು ಸಾರುತ್ತದೆ. 1938ರ ಏಪ್ರಿಲ್ 25ರಂದು ಇದೇ ಸ್ಥಳದಲ್ಲೇ ಬ್ರಿಟೀಷರ ಗುಂಡೇಟಿಗೆ 32 ಸ್ವಾತಂತ್ರ್ಯ ಸಂಗ್ರಾಮಿಗಳು ಹುತಾತ್ಮರಾಗಿದ್ದರು. ಈ ಹುತಾತ್ಮರನ್ನು ಸಾರ್ವಕಾಲಿಕವಾಗಿ ಸ್ಮರಿಸಲೆಂದೇ ಇಲ್ಲೊಂದು ಸ್ಮಾರಕವನ್ನೂ ನಿರ್ಮಿಸಲಾಗಿದ್ದು, ಸ್ವಾತಂತ್ರ್ಯ ಸಂಗ್ರಾಮದ 200 ವರ್ಷಗಳ ಇತಿಹಾಸವನ್ನು ದಾಖಲಿಸುವ ಒಂದು ಚಿತ್ರ ಗ್ಯಾಲರಿಯನ್ನೂ ನಿರ್ಮಿಸಲಾಗಿದೆ.
1938ರಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಶಿವಪುರದಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನವು ಕರ್ನಾಟಕದ ಸ್ವಾತಂತ್ರ್ಯ ಚಳುವಳಿಗೆ ಚಾಲನೆ ನೀಡಿದ ಒಂದು ಘಟನೆ. ಧ್ವಜಾರೋಹಣೆಯ ಮೂಲಕ ಭಾರತದ ಸಾರ್ವಭೌಮತ್ವವನ್ನು ಸಾರುವ ನಿಟ್ಟಿನಲ್ಲಿ ಸಂಸ್ಥಾನದ ವಿವಿಧೆಡೆಗಳಲ್ಲಿ ಧ್ವಜ ಸತ್ಯಾಗ್ರಹಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಶಿವಪುರದಲ್ಲಿ ನಡೆಯಬೇಕಿದ್ದ ಮೂರು ದಿನದ ಅಧಿವೇಶನಕ್ಕೆ ಮೈಸೂರು ಸರ್ಕಾರ ಅಡ್ಡಿಪಡಿಸಿದ ಕಾರಣ ಈ ಸಂದರ್ಭದಲ್ಲಿ ಶಿವಪುರದಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಸತ್ಯಾಗ್ರಹಿಗಳ ಮೇಲೆ ಗುಂಡಿನ ದಾಳಿ ನಡೆಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆಜ್ಞಾಪಿಸಿದ್ದರೂ, ಶಾಂತಿಯುತವಾಗಿ ನಡೆಯುತ್ತಿರುವ ಸಭೆಯ ಮೇಲೆ ಗುಂಡು ಹಾರಿಸಲು ನಿರಾಕರಿಸಿದ ಜಿಲ್ಲಾಧಿಕಾರಿ ಇನಾಯತ್ ಉಲ್ಲಾ ಮೇಕ್ರಿ ವರ್ಗಾವಣೆಯ ಶಿಕ್ಷೆ ಎದುರಿಸಬೇಕಾಯಿತು. ಮೂರು ದಿನವೂ ಸಭೆ ನಡೆದು ನಂತರ ಹಲವಾರು ನಾಯಕರು ಬಂಧನಕ್ಕೊಳಗಾಗಿದ್ದರು.
ಇದೇ ಸ್ಫೂರ್ತಿಯೊಂದಿಗೆ ವಿದುರಾಶ್ವತ್ಥದಲ್ಲೂ ಧ್ವಜ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ 1938ರ ಏಪ್ರಿಲ್ 18ರಂದು ದೇಶಭಕ್ತರ ದಿನಾಚರಣೆಯನ್ನು ಆಚರಿಸಲು ಸ್ಥಳೀಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಏಪ್ರಿಲ್ 14 ರಿಂದ 29ರವರೆಗೆ ಇಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲೇ ಈ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಲಾಯಿತು. ಏಕೆಂದರೆ ಈ ಜಾತ್ರೆಯಲ್ಲಿ ದನದ ಜಾತ್ರೆಯೂ ನಡೆಯುವುದರಿಂದ ಲಕ್ಷಾಂತರ ಜನರು ಸೇರುತ್ತಿದ್ದರು. ಏಪ್ರಿಲ್ 18ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆಗೇ ಜಿಲ್ಲಾಡಳಿತವು ಇಡೀ ಪ್ರದೇಶದಲ್ಲಿ 15 ದಿನಗಳ ಕಾಲ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನು ಹೇರಿತ್ತು. ಆದರೆ ಇದಾವುದನ್ನೂ ಲೆಕ್ಕಿಸದ ಸ್ಥಳೀಯ ಕಾಂಗ್ರೆಸ್ ನಾಯಕರು ಧ್ವಜಸತ್ಯಾಗ್ರಹದ ಅಧ್ಯಕ್ಷರಾದ ಎನ್ ಸಿ ನಾಗಯ್ಯರೆಡ್ಡಿ ನೇತೃತ್ವದಲ್ಲಿ ಶಾಂತಿಯುತ ಸಭೆ ನಡೆಸಿದ್ದರು. ಏಪ್ರಿಲ್ 22ರಂದು ನಾಗಯ್ಯರೆಡ್ಡಿ ಮುಂದಾಳತ್ವದಲ್ಲಿ ಸತ್ಯಾಗ್ರಹಿಗಳು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಆಗಮಿಸಿ ಅಲ್ಲಿ ಕರಪತ್ರಗಳನ್ನು ಹಂಚುವುದರ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ದಿಟ್ಟ ಹೋರಾಟಕ್ಕೆ ಚಾಲನೆ ನೀಡಿದ್ದರು. ಈ ಘಟನೆಯಲ್ಲಿ ನಾಗಯ್ಯರೆಡ್ಡಿ ಅವರೊಂದಿಗೆ ಶ್ರೀಪಾಲಯ್ಯ, ನಾರಾಯಣಪ್ಪ, ಹೆಚ್ ಎಲ್ ವೆಂಕಟ್ರಾಮರಾವ್ ಮುಂತಾದ ಹಲವು ನಾಯಕರನ್ನು ಬಂಧಿಸಲಾಯಿತು. ಕ್ಷಮೆ ಯಾಚಿಸಲು ನಿರಾಕರಿಸಿದ ಈ ಹೋರಾಟಗಾರರಿಗೆ ಬಿಡುಗಡೆಯೂ ದೊರೆಯಲಿಲ್ಲ.
ಏಪ್ರಿಲ್ 23ರಂದು ಗೌರಿಬಿದನೂರಿನಿಂದ ರಾಮಯ್ಯ ಶೆಟ್ಟಿ ಮತ್ತು ಜ್ವಾಲನಯ್ಯವರ ಮುಂದಾಳತ್ವದಲ್ಲಿ ಮುನ್ನೂರಕ್ಕೂ ಹೆಚ್ಚು ಜನರು ವಿದುರಾಶ್ವತ್ಥಕ್ಕೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಈ ಇಬ್ಬರೂ ನಾಯಕರನ್ನು ಬಂಧಿಸಲಾಯಿತು. ಈ ಬಂಧನಗಳ ಸುದ್ದಿ ವ್ಯಾಪಿಸುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಶಭಕ್ತಿಯ ಅಲೆ ಪ್ರವಹಿಸಲಾರಂಭಿಸಿತ್ತು. ಕೋಲಾರ ಜಿಲ್ಲೆಯ ಹಲವು ಗ್ರಾಮಗಳಿಂದ ಜನರು ತಂಡೋಪತಂಡವಾಗಿ ಧ್ವಜ ಸತ್ಯಾಗ್ರಹ ನಡೆಯಲಿದ್ದ ವಿದುರಾಶ್ವತ್ಥದ ಕಡೆ ಹೆಜ್ಜೆ ಹಾಕತೊಡಗಿದರು. ನೆರೆಯ ಆಂಧ್ರ ಪ್ರದೇಶದ ಹಿಂದೂಪುರದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರು ಕಲ್ಲೂರು ಸುಬ್ಬರಾವ್ ಮುಂದಾಳತ್ವದಲ್ಲಿ ಇಲ್ಲಿಗೆ ಆಗಮಿಸಿದರು. ಇಲ್ಲಿ ನೆರೆದ ಸಾವಿರಾರು ಕಾರ್ಯಕರ್ತರು ತಾವು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಧ್ವಜಸತ್ಯಾಗ್ರಹ ನಡೆಸುವುದಾಗಿ ಪಣತೊಟ್ಟರು. ಏಪ್ರಿಲ್ 25ರಂದು ಗೌರಿಬಿದನೂರು ಮತ್ತು ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಸಾವಿರ ಸಾವಿರ ಸಂಖ್ಯೆಯಲ್ಲಿ ವಿದುರಾಶ್ವತ್ಥದೆಡೆಗೆ ಹೆಜ್ಜೆ ಹಾಕಲಾರಂಭಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಂದು ಧ್ವಜಸತ್ಯಾಗ್ರಹದಲ್ಲಿ ಭಾಗವಹಿಸಲು 25 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು ಎನ್ನಲಾಗುತ್ತದೆ.
ಈ ಸಂದರ್ಭದಲ್ಲಿ ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತಿದ್ದ, ಅಲ್ಲಿ ನೆರೆದಿದ್ದ ಜನರ ಮೇಲೆ ಮ್ಯಾಜಿಸ್ಟ್ರೇಟರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ಚದುರಲಾರಂಭಿಸಿದ ಜನರು ಕಲ್ಲು ತೂರಾಟದಲ್ಲಿ ತೊಡಗಿದ್ದರು. ಈ ಗಲಭೆಯ ನಡುವೆಯೇ ಅಲ್ಲಿ ನೆರೆದಿದ್ದ 80ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ರೈಫಲ್ ಪಡೆಗೆ ಗುಂಡುಹಾರಿಸಲು ಆಜ್ಞಾಪಿಸಲಾಯಿತು. ಮೂರು ಬಾರಿ ನಡೆದ ಈ ಗುಂಡಿನ ದಾಳಿಯಲ್ಲಿ ಪೊಲೀಸರು 96 ಸುತ್ತು ಗುಂಡುಗಳನ್ನು ಹಾರಿಸಿದ್ದರು. ಈ ಗುಂಡಿನ ದಾಳಿಗೆ ಸ್ಥಳದಲ್ಲೇ 32 ಜನರು ಹುತಾತ್ಮರಾದರು. 48 ಮಂದಿ ಗಾಯಗೊಂಡಿದ್ದರು. ಸರ್ಕಾರದ ವರದಿಯ ಪ್ರಕಾರ 15 ಜನರು ಮೃತರಾಗಿರುವುದಾಗಿ ದಾಖಲಾಗಿದ್ದರೂ, ಕೆಲವು ಪತ್ರಿಕಾ ವರದಿಗಳು ಮತ್ತು ಬಿಬಿಸಿ ವರದಿಯ ಪ್ರಕಾರ ಕನಿಷ್ಟ 32 ಜನರು ಹುತಾತ್ಮರಾಗಿದ್ದರು. ಈ ಮಾರಣಹೋಮದಿಂದ ಪುಣ್ಯಕ್ಷೇತ್ರವಾಗಿದ್ದ ವಿದುರಾಶ್ವತ್ಥ ಭೀಕರ ಮಸಣವಾಯಿತು. ಪಿನಾಕಿನಿ ನದಿಯ ನೀರಿನೊಂದಿಗೇ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಹೊಳೆಯೂ ಹರಿದಿತ್ತು. ಪಿನಾಕಿನಿ ನದಿಯು ಸ್ವಾತಂತ್ರ್ಯ ಸಂಗ್ರಾಮಿಗಳ ರಕ್ತದ ಮಡುವಿಗೆ ಸಾಕ್ಷಿಯಾಯಿತು. ಈ ಘಟನೆಯಲ್ಲಿ ಭಾಗಿಯಾಗಿದ್ದ ಪ್ರತ್ಯಕ್ಷದರ್ಶಿಗಳಾಗಿ ಮೂವರು ಮಹನೀಯರು, ಇತ್ತೀಚಿನವರೆಗೂ ಜೀವಂತವಾಗಿದ್ದರು.
ಸ್ಮಾರಕ ಮತ್ತು ಚಾರಿತ್ರಿಕ ಸ್ಮರಣೆ
ಕರ್ನಾಟಕದ ಜಲಿಯನ್ವಾಲಾ ಬಾಗ್ ಎಂದೇ ಹೆಸರಾದ ಈ ಚಾರಿತ್ರಿಕ ಘಟನೆಯು 1973ರಲ್ಲಿ ಸ್ಥಾಪಿಸಿದ ಸ್ಮಾರಕ ಶಿಲೆ ಮತ್ತು 2004ರಲ್ಲಿ ಸ್ಥಾಪಿತವಾದ ವೀರಸೌಧದ ಮೂಲಕ ಇಂದಿಗೂ ಅಂದಿನ ಕರಾಳ ಚರಿತ್ರೆಯನ್ನು ನೆನಪಿಸುತ್ತಿವೆ. ಈ ಚರಿತ್ರಾರ್ಹ ಘಟನೆಯನ್ನು ಸಾರ್ವಕಾಲಿಕವಾಗಿ ಸ್ಮರಿಸಲು ನೆರವಾಗುವಂತಹ ಒಂದು ಚಿತ್ರ ಗ್ಯಾಲರಿಯನ್ನು ರೂಪಿಸಲಾಗಿದೆ. ಚರಕದ ಆಕಾರದಲ್ಲಿರುವ ಒಂದು ಸುಂದರ ವಿನ್ಯಾಸದ ಕಟ್ಟಡದಲ್ಲಿ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನೊಳಗೊಂಡ ಗ್ರಂಥಾಲಯವನ್ನೂ ನಿರ್ಮಿಸಲಾಗಿದೆ. ಸ್ಥಳೀಯ ಶಾಸಕರಾದ ಶಿವಶಂಕರ ರೆಡ್ಡಿ ಮತ್ತು ಗೌರಿಬಿದನೂರಿನ ನಿವೃತ್ತ ಪ್ರಾಧ್ಯಾಪಕ, ಲೇಖಕ ಬಿ ಗಂಗಾಧರಮೂರ್ತಿ ಮತ್ತು ಕೆಲವು ಸಮಾನಾಸಕ್ತ ಗೆಳೆಯರ ಪರಿಶ್ರಮದೊಂದಿಗೆ ಈ ಗ್ಯಾಲರಿ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. 1757ರ ಪ್ಲಾಸಿ ಕದನದಿಂದ 1961ರ ಗೋವಾ ವಿಮೋಚನೆಯವರೆಗೆ ಭಾರತದ ವಸಾಹತುವಿರೋಧಿ ಹೋರಾಟದ ವಿವಿಧ ಮಗ್ಗುಲುಗಳನ್ನು ಬಿಂಬಿಸುವ 104 ವರ್ಣಚಿತ್ರ ಫಲಕಗಳನ್ನು ಈ ಗ್ಯಾಲರಿಯಲ್ಲಿ ಕಾಲಾನುಕ್ರಮವಾಗಿ ಜೋಡಿಸಲಾಗಿದೆ.
ಈ ಅವಧಿಯಲ್ಲಿ ನಡೆದ ಹೋರಾಟಗಳು, ದಂಗೆಗಳು, ಆಂದೋಲನಗಳು, ಯುದ್ಧಗಳು ಎಲ್ಲವನ್ನೂ ಈ ವರ್ಣಚಿತ್ರಗಳಲ್ಲಿ ಸಂಕ್ಷಿಪ್ತ ವಿವರಗಳೊಂದಿಗೆ ಬಿಂಬಿಸಲಾಗಿದೆ. ಕಿತ್ತೂರು ರಾಣಿ, ಝಾನ್ಸಿ ರಾಣಿ, 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಟಿಪ್ಪು, ಸಂಗೊಳ್ಳಿ ರಾಯಣ್ಣ, ಬಿರ್ಸಾ ಮುಂಡಾ ಹೀಗೆ ಹಲವು ಮಜಲುಗಳ ಬ್ರಿಟೀಷ್ ವಿರೋಧಿ ಹೋರಾಟಗಾರರನ್ನು ಬಿಂಬಿಸಲಾಗಿದ್ದು ದಾಖಲಿತ ಅಧಿಕೃತ ಇತಿಹಾಸದಲ್ಲಿರುವ ಚಾರಿತ್ರಿಕ ಸಂಗತಿಗಳನ್ನು ಇಲ್ಲಿ ಬಿತ್ತರಿಸಲಾಗಿದೆ. ಸಹಜವಾಗಿಯೇ 20ನೆಯ ಶತಮಾನದಲ್ಲಿ ರೂಪುಗೊಂಡ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಣಬಹುದಾದ ವೈವಿಧ್ಯಮಯ ವಿಚಾರಧಾರೆಗಳು, ಹೋರಾಟದ ಧೋರಣೆಗಳು, ಮಾರ್ಗಗಳು ಇಲ್ಲಿ ಬಿಂಬಿತವಾಗಿವೆ. ಸೈದ್ಧಾಂತಿಕ, ತಾತ್ವಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಐಕಮತ್ಯದೊಂದಿಗೆ, ಐಕ್ಯತೆಯಿಂದ ಬ್ರಿಟೀಷ್ ವಸಾಹತುಶಾಹಿಯ ಸಂಕೋಲೆಗಳನ್ನು ಕಿತ್ತು ಹಾಕಿದ ರಾಷ್ಟ್ರನಾಯಕರ ಸ್ಮರಣೆ ಇಲ್ಲಿ ವಸ್ತುನಿಷ್ಠತೆಯಿಂದ ದಾಖಲಾಗಿದೆ. ಆ ಸಂದರ್ಭದಲ್ಲೇ ಕಂಡುಬಂದಿದ್ದ ಎಡಪಂಥೀಯ, ಬಲಪಂಥೀಯ, ತೀವ್ರಗಾಮಿ, ರಾಷ್ಟ್ರೀಯವಾದಿ ಹೋರಾಟಗಳ ವಿಭಿನ್ನ ಮಜಲುಗಳನ್ನೂ ಪರಿಚಯಿಸಲಾಗಿದೆ.
1905ರಲ್ಲಿ ಕ್ರಾಂತಿಕಾರಿಗಳ ಜೊತೆಗಿದ್ದ ಸಾವರ್ಕರ್ ಅವರ ಚಿತ್ರ ಇರುವಂತೆಯೇ, ಗಾಂಧಿ ಹತ್ಯೆಯ ನಂತರ ನಡೆದ ಬೆಳವಣಿಗೆಗಳಲ್ಲೂ ಅವರ ಚಿತ್ರ ಇಲ್ಲಿ ಕಾಣುತ್ತದೆ. ಹಾಗೆಯೇ ಭಗತ್ ಸಿಂಗ್ ಮುಂತಾದವರ ಎಡಪಂಥೀಯ ಕ್ರಾಂತಿಕಾರಿ ಹೆಜ್ಜೆಗಳ ನಡುವೆಯೇ ಉಗಮಿಸಿದ್ದ ಹಿಂದೂ ಮಹಾಸಭಾ ಮುಂತಾದ ಬಲಪಂಥೀಯ ಸಂಘಟನೆಗಳ ಪ್ರಸ್ತಾಪವನ್ನೂ ಕಾಣಬಹುದು. ಭಾರತದ ಶೋಷಿತ ಜನಸಮುದಾಯಗಳಿಗೆ ಬೆಳಕಿನ ಕಿಂಡಿ ತೋರಿ ಒಂದು ಸಮಸಮಾಜ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರೂ ಇಲ್ಲಿ ಜ್ವಲಿಸುತ್ತಾರೆ. ಗಾಂಧಿ ಮಾರ್ಗವನ್ನು ಒಪ್ಪುವ ಮತ್ತು ಒಪ್ಪದಿರುವ ಎಲ್ಲ ವಿಚಾರಧಾರೆಗಳನ್ನು ಚಾರಿತ್ರಿಕ ಮಾಹಿತಿಯೊಂದಿಗೆ ಸಚಿತ್ರವಾಗಿ ಈ ಗ್ಯಾಲರಿಯಲ್ಲಿ ಬಿಂಬಿಸಲಾಗಿದೆ. 200 ವರ್ಷಗಳ ಸುದೀರ್ಘ ಇತಿಹಾಸವನ್ನು ಮತ್ತು ಈ ಚರಿತ್ರೆಯ ಹಾದಿಯಲ್ಲಿ ಆಗಿಹೋದ ನೂರಾರು ಹುತಾತ್ಮರನ್ನು ಮತ್ತೆ ಮತ್ತೆ ನೆನಪಿಸುವ ರೀತಿಯಲ್ಲಿ ಈ ಗ್ಯಾಲರಿಯನ್ನು ರೂಪಿಸಲಾಗಿದೆ. ದೇಶದ ಹಲವಾರು ರಾಜಕೀಯ ನಾಯಕರು, ಪಕ್ಷಾತೀತವಾಗಿ ಇಲ್ಲಿಗೆ ಭೇಟಿ ನೀಡಿ, ಈ ಗ್ಯಾಲರಿಯನ್ನು ಪ್ರಶಂಸಿಸಿ ದಾಖಲಿಸಿದ್ದಾರೆ.
ಆದರೆ ಇತ್ತೀಚೆಗೆ ಕೆಲವು ಬಲಪಂಥೀಯ ಗುಂಪುಗಳು ಗ್ಯಾಲರಿಯಲ್ಲಿರುವ ಕೆಲವು ವರ್ಣಚಿತ್ರಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದಾಗಿ ತಿಳಿದುಬಂದಿದೆ. ಮಹಾತ್ಮ ಗಾಂಧಿಗೆ ಹೆಚ್ಚು ಪ್ರಾಶಸ್ತ್ಯ ನೀಡಿರುವುದು, ಸಾವರ್ಕರ್ಗೆ ಅಪಮಾನವಾಗುವಂತೆ ಚಿತ್ರಿಸಿರುವುದು, ಪ್ರತಿಯೊಂದು ಫಲಕದಲ್ಲೂ ಮುಸ್ಲಿಂ ಸಂಗ್ರಾಮಿಗಳನ್ನು ಬಿಂಬಿಸಿರುವುದು, ಟಿಪ್ಪು ಸುಲ್ತಾನ್ನನ್ನು ಬಿತ್ತರಿಸಿರುವುದು, ಹಿಂದೂ ರಾಷ್ಟ್ರೀಯವಾದಿಗಳನ್ನು ಬಲಪಂಥೀಯರು ಎಂದು ಗುರುತಿಸಿರುವುದು ಇವೇ ಮುಂತಾದ ಕೆಲವು ಆಕ್ಷೇಪಗಳು ವ್ಯಕ್ತವಾಗಿದ್ದು, ಕೆಲವು ಗುಂಪುಗಳಿಂದ ಗ್ಯಾಲರಿಗೆ ಹಾನಿ ಉಂಟುಮಾಡುವ ಬೆದರಿಕೆಯೂ ಕೇಳಿಬಂದಿದೆ. ಇತಿಹಾಸ ಎಂದಿಗೂ ಸಾರ್ವತ್ರಿಕ ಸಮ್ಮತಿ ಪಡೆಯುವುದಿಲ್ಲ. ನೋಡುಗರ, ಓದುಗರ ದೃಷ್ಟಿಯೇ ಚರಿತ್ರೆಯ ಸರಿ ತಪ್ಪುಗಳನ್ನು ನಿಷ್ಕರ್ಷೆ ಮಾಡುವುದನ್ನು ಕಾಣುತ್ತಲೇ ಬಂದಿದ್ದೇವೆ. ಆಕ್ಷೇಪಗಳು, ಆರೋಪ ಪ್ರತ್ಯಾರೋಪಗಳ ನಡುವೆಯೇ ಚರಿತ್ರೆಯನ್ನು ನೋಡುತ್ತಾ, ಹೊಸ ಚರಿತ್ರೆಯನ್ನು ಕಟ್ಟುವುದು ನಾಗರಿಕ ಮಾನವ ಸಮಾಜದ ಆದ್ಯತೆಯಾಗಬೇಕು.
ಕೆಲವೇ ವ್ಯಕ್ತಿಗಳ, ಹಲವು ವರ್ಷಗಳ ಪರಿಶ್ರಮದಿಂದ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಿರ್ಮಿಸಲಾಗಿರುವ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಮತ್ತು ನಾಗರಿಕರ ಜವಾಬ್ದಾರಿಯೂ ಹೌದು. ವಿದುರಾಶ್ವತ್ಥ ಬ್ರಿಟೀಷ್ ವಸಾಹತು ಕಾಲದ ರಕ್ತಸಿಕ್ತ ಇತಿಹಾಸವನ್ನು ಸಾರಿ ಸಾರಿ ಹೇಳುತ್ತದೆ. ಸ್ಥಳೀಯರು ಈ ಚರಿತ್ರೆಯ ಪುಟಗಳೊಡನೆಯೇ ಇಲ್ಲಿನ ಸ್ಮಾರಕವನ್ನು ಕಾಪಾಡಿಕೊಂಡು ಬಂದಿದ್ದಾರೆ. 27 ವರ್ಷಗಳ ಕಾಲ ಬತ್ತಿಹೋಗಿದ್ದು ಮರಳುಗಣಿಗಾರಿಕೆಯ ಮಾಫಿಯಾಗಳಿಗೆ ಚಿನ್ನದ ಗಣಿಯಂತಾಗಿದ್ದ ಪಿನಾಕಿನಿ ನದಿ ಈ ವರ್ಷ ತುಂಬಿ ಹರಿಯುತ್ತಿದೆ. ಈ ನದಿಯ ಝುಳುಝಳು ನಾದದೊಂದಿಗೆ , ಅಶ್ವತ್ಥ ವೃಕ್ಷದಲ್ಲಿ ನಲಿಯುವ ಹಕ್ಕಿಗಳ ಕಲರವದೊಂದಿಗೇ, ಕರ್ನಾಟಕದ ಮತ್ತು ನೆರೆ ರಾಜ್ಯಗಳ ಶ್ರದ್ಧಾಭಕ್ತಿಗಳ ಪ್ರಾರ್ಥನೆಯೊಂದಿಗೇ, ಈ ಚಿತ್ರ ಗ್ಯಾಲರಿಯನ್ನು ಜೀವಂತವಾಗಿರಿಸಿ, ಸ್ವಾತಂತ್ರ್ಯ ಸಂಗ್ರಾಮದ ಹೆಜ್ಜೆ ಗುರುತುಗಳನ್ನು ಜೀವಂತಿಕೆಯಿಂದಿರಿಸುವ ಹೊಣೆ ನಮ್ಮದಾಗಿದೆ.
ಕೆಲವೇ ಬಲಪಂಥೀಯ ಸಂಘಟನೆಗಳ ಮತಾಂಧತೆಗೆ ಈ ಗ್ಯಾಲರಿ ಬಲಿಯಾಗದಂತೆ ಜಾಗ್ರತೆ ವಹಿಸುವ ಜವಾಬ್ದಾರಿ ಸರ್ಕಾರ ಮತ್ತು ಜಿಲ್ಲಾಡಳಿತದ ಮೇಲಿದೆ. ಬ್ರಿಟೀಷರು ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್ವಾಲಾಬಾಗ್ ಮಾಡಿ ಕರಾಳ ಛಾಯೆಯನ್ನು ಹರಡಿ ಹೋಗಿದ್ದಾರೆ. ಭಾರತದ 75ನೆಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವಿದುರಾಶ್ವತ್ಥದ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿ ಮತ್ತೊಂದು ಕಂಬಾಲಪಲ್ಲಿ ಆಗುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ16 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ15 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ1 hour agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ

