ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version