ಭಾವ ಭೈರಾಗಿ
ಕತೆ | ಒಂಟಿತನ
- ಮೂಲ: ಬ್ರುನೋ ಶುಲ್ಜ್ , ಕನ್ನಡಕ್ಕೆ: ಸುಭಾಷ್ ರಾಜಮಾನೆ
ನನಗೆ ಮತ್ತೊಮ್ಮೆ ಹೊರಗೆ ನಡೆದುಕೊಂಡು ಹೋಗಲು ದೊಡ್ಡ ಬಿಡುಗಡೆಯಂತೆ ಭಾಸವಾಗುತ್ತಿದೆ. ಆದರೆ ನಾನು ಎಷ್ಟೊಂದು ದೀರ್ಘ ಕಾಲದಿಂದ ಈ ಕೋಣೆಯೊಂದಿಗೆ ಬಂಧಿಯಾಗಿದ್ದೆ! ತುಂಬ ಕಹಿಯಾದ ದಿನಮಾನಗಳು. ನೋವಿನ ವರುಷಗಳೊಂದಿಗೆ ಬದುಕಿದೆ.
ಹಳೆಯ ಶಿಶುವಿಹಾರದ ಕೋಣೆಯಲ್ಲಿ ನಾನೇಕೆ ವಾಸವಾಗಿದ್ದೇನೆ ಎಂಬುದನ್ನು ವಿವರಿಸಲಾರೆ. ಬಹುಮಹಡಿ ಮನೆಯ ಹಿಂದಿನ ಕೋಣೆಯಿಂದ ಬಾಲ್ಕನಿಗೆ ಹೋಗಬಹುದಿತ್ತು. ಆ ಜಾಗ ನಮಗೆ ಸೇರಿದ್ದಲ್ಲ ಎಂದು ತಿಳಿದಿದ್ದರೂ ಹಿಂದೊಮ್ಮೆ ಅಪರೂಪವಾಗಿ ಅದನ್ನು ಬಳಸುತ್ತಿದ್ದೆ.
ನಾನಲ್ಲಿಗೆ ಹೇಗೆ ಹೋಗುತ್ತಿದ್ದೆ ಎಂಬುದೇ ನನಗೀಗ ನೆನಪಿಲ್ಲ. ಅದು ಚಂದ್ರನಿಲ್ಲದ ಶುಭ್ರ ವರ್ಣದ ರಾತ್ರಿ. ಆ ಮಂದ ಬೆಳಕಿನಲ್ಲಿ ಪ್ರತಿಯೊಂದನ್ನು ನಾನು ಕಾಣಬಲ್ಲವನಾಗಿದ್ದೆ. ಯಾರೋ ಆಗಷ್ಟೆ ನಿದ್ದೆಯಿಂದ ಎದ್ದು ಹೋಗಿರುವಂತೆ ಹಾಸಿಗೆ ಬಿದ್ದುಕೊಂಡಿತ್ತು. ಜನರು ನಿದ್ದೆಯಲ್ಲಿ ಸ್ಥಬ್ಧವಾಗಿರುವಂತೆ ಅವರ ಉಸಿರಾಟವನ್ನು ಆಲಿಸಿದೆ. ಆದರೆ ಇಲ್ಲಿ ನಿಜವಾಗಿಯೂ ಉಸಿರಾಡುತ್ತಿರುವವರು ಯಾರು? ಇದು ಅಂದಿನಿಂದ ನನ್ನದೇ ಕೋಣೆಯಾಯಿತು.
ಎಷ್ಟೋ ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ನನಗೆ, ಬೇಸರವೂ ಆಗಿದೆ. ಏನನ್ನಾದರೂ ಶೇಖರಣೆ ಮಾಡುವುದರ ಬಗ್ಗೆ ನಾನೇಕೆ ಮುಂಚಿತವಾಗಿಯೇ ಆಲೋಚಿಸುವುದಿಲ್ಲ! ಓಹೋ, ನಿಮಗೆ ಈಗಲೂ ಸಮಯವನ್ನು ನೀಡಿದ್ದರೆ, ನೀವಾದರು ಅದನ್ನು ಮಾಡಬಹುದಿತ್ತು. ಒಳ್ಳೆಯ ಪೌಷ್ಟಿಕವಾದ ಧಾನ್ಯಗಳನ್ನು ಮುಂಬರುವ ಚಳಿಗಾಲದ ದಿನಗಳಿಗಾಗಿ ನಾನು ಕೂಡಿಡಬೇಕಿತ್ತು.
ಹಸಿವಿನ ವರುಷಗಳು ಮುಂದಿವೆ. ಚಳಿಗಾಲದಲ್ಲಿ ಈಜಿಪ್ತಿನ ನೆಲ ಹಣ್ಣುಗಳನ್ನು ಬಿಡುವುದಿಲ್ಲ. ಅಯ್ಯೋ, ದೂರದೃಷ್ಟಿಯುಳ್ಳ ಮನುಷ್ಯ ನಾನಲ್ಲ. ಯಾವತ್ತೂ ನಾನೊಬ್ಬ ಹಗುರ ಹೃದಯದ ಇಲಿಯ ಹಾಗೆ. ನಾನು ನಾಳೆಯ ಚಿಂತೆಯಿಲ್ಲದೆ ಈ ದಿನವಷ್ಟೇ ಬದುಕಿರುವಾತ. ಹಸಿವಿನಿಂದ ಬಳಲುವ ಬುದ್ಧಿಯಲ್ಲಿ ನಂಬಿಕೆ ಇಟ್ಟಿರುವಾತ.
ಒಂದು ಇಲಿಯಂತೆ ಹಸಿವಿನ ಬಗ್ಗೆ ಏನಂತ ಕಾಳಜಿವಹಿಸುವುದು? ಅಂತಹ ದಾರಿದ್ರ್ಯವೇನಾದರೂ ಬಂದರೆ ಕಟ್ಟಿಗೆಯನ್ನೋ ಅಥವಾ ಕಾಗದವನ್ನೋ ಕೊರೆಯುತ್ತೇನೆ. ಅತ್ಯಂತ ಬಡ ಪ್ರಾಣಿಯಾದ ಕಂದು ಬಣ್ಣದ ಇಲಿ ಪುಸ್ತಕದ ತುದಿಯನ್ನು ಕಚ್ಚಿ ತಿನ್ನುವಂತೆ, ಯಾವುದರ ಮೇಲೂ ನನ್ನ ಅಸ್ತಿತ್ವವೇ ಇಲ್ಲ.
ಆದ್ದರಿಂದ ನಾನು ಈ ನಿರ್ಜೀವ ಕೋಣೆಯಲ್ಲಿ ವಾಸಿಸುತ್ತೇನೆ. ಎಷ್ಟೋ ಸಮಯದ ಹಿಂದೆ ಅನೇಕ ನೊಣಗಳು ಸತ್ತು ಬಿದ್ದಿವೆ. ಕಟ್ಟಿಗೆ ಹುಳುವಿನ ಸದ್ದನ್ನು ಕೇಳಲು ನನ್ನ ಕಿವಿಯನ್ನು ಆ ಕಟ್ಟಿಗೆಯ ಸಮೀಪಕ್ಕೆ ಒಯ್ಯುತ್ತೇನೆ. ಸ್ಮಶಾನ ಮೌನ. ಮೇಜಿನ ಮೇಲೆ, ಶೆಲ್ಪಿನ ಮೇಲೆ, ಚೇರುಗಳ ಮೇಲೆ, ಕೊನೆಯಿಲ್ಲದೆ ಓಡಾಡುತ್ತಿರುವ ಇಲಿ. ನಾನು ಕೂಡ ಅದರಂತೆಯೇ ಏಕಾಂಗಿ. ನಾನು ಕೋಣೆ ತುಂಬ ಓಡಾಡಿದಾಗ ಚಿಕ್ಕಮ್ಮಳಾದ ಥೆಕ್ಲಾಳ ಕಂದು ಬಣ್ಣದ ಉದ್ದನೆಯ ನಿಲುವಂಗಿ ನೆಲಕ್ಕೆ ತಾಗುತ್ತಿತ್ತು. ಚುರುಕಾದ, ಕ್ಷಿಪ್ರವಾದ, ಸಣ್ಣದಾದ ಬಾಲವೊಂದು ನನ್ನನ್ನು ಎಳೆಯುತ್ತಿದೆ.
ನಾನೀಗ ಪ್ರಖರ ಸೂರ್ಯನ ಬೆಳಕಿನ ಮೇಜಿನ ಮೇಲೆ ಅಚಲವಾಗಿ, ಹೊರಚಾಚಿದ ಹೊಳಪಿನ ಕಣ್ಣುಗಳೊಂದಿಗೆ ಕೂತಿದ್ದೇನೆ. ಬಾಯಿ ಮುಚ್ಚಿಕೊಂಡು ಕುಳಿತಿರುವ ನಾನು, ಚಟದ ಬಲದಿಂದ ಎಷ್ಟೋ ಹೊತ್ತಿನ ನಂತರ ಬಾಯಾಡಿಸುತ್ತೇನೆ.
ಇದನ್ನೆಲ್ಲ ಒಂದು ರೂಪಕದಂತೆಯೂ ಅರ್ಥ ಮಾಡಿಕೊಳ್ಳಬಹುದು. ನಿಜವಾಗಿಯೂ ನಾನೊಬ್ಬ ನಿವೃತ್ತ ವೇತನದಾರನೇ ಹೊರತು ಒಂದು ಇಲಿಯಂತು ಅಲ್ಲ. ಇದು ನನ್ನ ಅಸ್ತಿತ್ವದ ಭಾಗವಾಗಿ ರೂಪಕಗಳ ಮೇಲೆ ಪರಾವಲಂಬಿ ಆಗುವಂತಾಗಿದೆ. ಆದ್ದರಿಂದ ನಾನು ಸುಲಭವಾಗಿಯೇ ಮೊದಲು ಉಪಮೆಯನ್ನು ಹೊರಹಾಕಲು ಸಾಧ್ಯವಾಗಿದೆ. ಅವುಗಳನ್ನು ಹೊರಹಾಕಿದ ಮೇಲೆ, ನನ್ನ ಕಠಿಣ ದಿನಗಳಿಗೆ ಮತ್ತು ನಿಧಾನವಾಗಿ ನನ್ನ ಇಂದ್ರಿಯಗಳಿಗೆ ಮರಳಬೇಕು.
ನಾನು ಹೇಗೆ ಕಾಣುತ್ತೇನೆ? ಕೆಲವು ಸಲ ನನ್ನನ್ನೇ ನಾನು ಕನ್ನಡಿಯಲ್ಲಿ ನೋಡಿಕೊಳ್ಳುತ್ತೇನೆ. ಇದೊಂದು ವಿಚಿತ್ರವಾದ, ಹಾಸ್ಯಾಸ್ಪದ ಮತ್ತು ನೋವಿನ ಸಂಗತಿ! ಇದನ್ನು ಒಪ್ಪುವುದೇ ಅವಮಾನಕರ. ನಾನು ಯಾವತ್ತೂ ನನ್ನ ಮುಖವನ್ನು ಸಂಪೂರ್ಣವಾಗಿ ನೋಡಿಕೊಂಡಿಲ್ಲ. ಸ್ವಲ್ಪ ದೂರ ಸರಿದರೆ ನಾನು ಕನ್ನಡಿಯೊಳಗೆ, ಅದರ ಕೇಂದ್ರದಲ್ಲೇ ನಿಲ್ಲುತ್ತೇನೆ. ನಮ್ಮ ನೋಟಗಳು ಭೇಟಿಯಾಗುವುದನ್ನೇ ನಿಲ್ಲಿಸುತ್ತವೆ.
ನಾನು ಚಲಿಸಿದರೆ ನನ್ನ ಪ್ರತಿಬಿಂಬವೂ ಚಲಿಸುತ್ತದೆ. ಅದರೆ ಅರ್ಧ ತಿರುಗಿದ ಬೆನ್ನು, ಅದು ನನ್ನ ಬಗ್ಗೆ ತಿಳಿಯದಿದ್ದರೆ, ನನ್ನ ಹಿಂಭಾಗದಲ್ಲಿ ಹಲವು ಕನ್ನಡಿಗಳಿದ್ದಿದ್ದರೆ ಹಿಂದಕ್ಕೆ ಬರುತ್ತಿರಲಿಲ್ಲ. ನಾನಿದನ್ನು ದೂರದಿಂದ ಮತ್ತು ಅಭಿನ್ನವಾಗಿ ಕಂಡಾಗ ನನ್ನೆದೆಯಲ್ಲಿ ನೆತ್ತರು ಸುರಿಯುತ್ತದೆ. ಇದು ನೀನು ಎಂದು ಘೋಷಿಸುತ್ತೇನೆ; ನೀನು ಎಂದಿಗೂ ನನ್ನ ನಂಬಿಕೆಯ ಪ್ರತಿಬಿಂಬ.
ನೀನು ಬಹಳ ವರ್ಷಗಳಿಂದ ನನ್ನ ಜೊತೆಯಲ್ಲಿದ್ದೆ ಮತ್ತು ಈಗ ನನ್ನನ್ನು ಗರುತು ಹಿಡಿಯುತ್ತಿಲ್ಲ! ಓ ದೇವರೇ! ಅಪರಿಚಿತದ ಒಂದು ಬದಿಯನ್ನು ನೋಡುತ್ತಿರುವ, ನನ್ನ ಪ್ರತಿಬಿಂಬ ಅಲ್ಲೇ ನಿಲ್ಲುತ್ತದೆ. ಏನನ್ನೋ ಆಲಿಸುತ್ತಿರುವಂತೆ ಕಾಣುತ್ತದೆ. ಕನ್ನಡಿಯ ಆಳದಿಂದ ಬರುವ ಒಂದು ಶಬ್ದಕ್ಕೆ ಕಾದಂತೆ, ಯಾರಿಗೋ ವಿಧೇಯದಂತೆ, ಮತ್ತೊಂದು ತಾವಿನಿಂದ ಬರುವ ಆಜ್ಞೆಗಾಗಿ ಕಾಯುತ್ತಿರುವಂತೆ ಭಾಸವಾಗುತ್ತಿದೆ.
ಪ್ರಾಯಶಃ ನಾನು ಮೇಜಿನ ಮುಂದೆ ಕೂರುತ್ತೇನೆ. ಹಳದಿ ಬಣ್ಣಕ್ಕೆ ತಿರುಗಿರುವ ವಿಶ್ವವಿದ್ಯಾಲಯದ ನನ್ನ ಟಿಪ್ಪಣಿಯ ಪುಟಗಳನ್ನು ತಿರುವಿ ಹಾಕುತ್ತೇನೆ. ಇದು ನನ್ನ ಏಕೈಕ ಓದು.
ಚಳಿಗಾಲದ ತಣ್ಣನೆಯ ಗಾಳಿ ಕಿಟಕಿಯಿಂದ ಒಳಗೆ ನುಸುಳುತ್ತಿರುವಾಗ ಸೂರ್ಯನ ಬಿಸಿಲಿನಿಂದ ಮಾಸಿ ಹೋಗಿರುವ, ಧೂಳು ಮೆತ್ತಿಕೊಂಡಿರುವ ಪರದೆಯ ಕಡೆ ನನ್ನ ಗಮನ ಹರಿಯುತ್ತದೆ. ಆ ಪರದೆಗೆ ಹಾಕಿರುವ ಸಲಾಕೆಯನ್ನು ನಾನು ತಿರುಗಿಸಲು ಹೋಗುವುದಿಲ್ಲ. ಎಷ್ಟೊಂದು ಹಗುರವಾಗಿದ್ದರೂ ಅಂತರಲಾಗ ಹಾಕಿಕೊಂಡು ಬರಡಾದ ಗಾಳಿ ಬಳಲಿ ಹೋಗಿದೆ.
ಯಾರಾದರೂ ಸಹಜವಾಗಿ ಸೊಗಸಾಗಿ ತನ್ನದೇ ರೀತಿಯಲ್ಲಿ ಕಲ್ಪಿಸಿಕೊಳ್ಳಬಹುದಾದ ಒಂದು ಕಸರತ್ತು ಜರುಗುತ್ತಿದೆ. ಆಯ ತಪ್ಪದಂತೆ ನಿಶ್ಯಬ್ದವಾಗಿ ತುದಿಗಾಲಲ್ಲಿ ನಿಂತುಕೊಂಡರೆ ತಲೆ ಛಾವಣಿಗೆ ತಾಗುತ್ತಿದೆ; ತಲೆ ಮೇಲಕ್ಕೆ ಎತ್ತಿದಂತೆ ಇಡೀ ದೇಹ ಬೆಚ್ಚನೆಯ ಅನುಭವದ ಭ್ರಮೆಯಲ್ಲಿ ತೇಲಾಡುತ್ತದೆ. ಬಾಲ್ಯದ ದಿನಗಳಿಂದಲೂ ಇಡೀ ಕೋಣೆಯನ್ನು ಕಣ್ಣಾಡಿಸುವುದು ನನಗೆ ಪ್ರಿಯವಾದ ಕೆಲಸವಾಗಿದೆ.
ನಾನು ಕುಳಿತುಕೊಂಡು ಮೌನವನ್ನು ಆಲಿಸುತ್ತೇನೆ. ಕೋಣೆಯೆಲ್ಲ ಬಿಳುಚಿಕೊಂಡಿದೆ. ಬಿಳಿಯ ಛಾವಣಿಯಲ್ಲಿ ಕೆಲವು ಬಿರುಕುಗಳು ಕಾಣಿಸಿಕೊಳ್ಳುತ್ತವೆ. ಪ್ಲಾಸ್ಟರ್ ತುಣುಕುಗಳು ಕಳಚಿ ಬೀಳುತ್ತವೆ. ಗೋಡೆಯ ಒಳಗೆ ಕೋಣೆ ಇರುವುದನ್ನು ನಾನು ಕಾಣಿಸುವಂತೆ ಮಾಡುತ್ತೇನೆಯೇ? ಇದು ಹೇಗೆ ಸಾಧ್ಯ? ಗೋಡೆಯ ಒಳಗೆ? ನಾನಿದನ್ನು ಬಿಟ್ಟು ಹೋಗುವುದು ಹೇಗೆ? ಮನಸಿದ್ದರೆ ಮಾರ್ಗವಿದೆ; ಗಾಢವಾದ ಸಂಕಲ್ಪ ಎಲ್ಲವನ್ನೂ ಜಯಿಸಬಲ್ಲದು.
ನಾನು ಕೇವಲ ಒಂದು ಬಾಗಿಲನ್ನು ಕಲ್ಪಿಸಿಕೊಳ್ಳುತ್ತೇನೆ. ನಾನು ಬಾಲ್ಯದಲ್ಲಿ ಅಡುಗೆ ಮನೆಯಲ್ಲಿ ಕಂಡಿದ್ದ ಹಳೆಯ ಕಾಲದ ಒಳ್ಳೆಯ ಬಾಗಿಲನ್ನು ಇಷ್ಟಪಡುತ್ತೇನೆ. ಆ ಬಾಗಿಲಿಗೆ ಕಬ್ಬಿಣದ ಹಿಡಿಕೆ ಮತ್ತು ಒಂದು ಅಗುಳಿ ಇರಬೇಕಷ್ಟೇ. ಆ ಕೋಣೆಯಲ್ಲಿ ಗೋಡೆಯೇ ಇರಬಾರದು. ಅದು ಏನು ಮಾಡಿದರೂ ತೆರೆಯದಷ್ಟು ನಂಬಿಕೆಗೆ ಅರ್ಹವಾದ ಬಾಗಿಲು ಆಗಿರಬೇಕು. ಅಂತಹದೊಂದು ಭದ್ರವಾದ ಬಾಗಿಲು ಇರುತ್ತದೆ ಎನ್ನುವುದು ಅದರ ಅಸ್ತಿತ್ವದಿಂದಲೇ ತಿಳಿದು ಬರಬೇಕಷ್ಟೇ.
(ಇಪ್ಪತ್ತನೇ ಶತಮಾನದ ಅತ್ಯಂತ ಪ್ರಭಾವಿ ಲೇಖಕನೆಂದು ಖ್ಯಾತನಾದವನು ಬ್ರುನೋ ಶುಲ್ಜ್. ಈತ ಪೋಲೆಂಡ್ ದೇಶದವನು. ಆತನ ‘ದಿ ಸ್ಟ್ರೀಟ್ ಕ್ರೋಕೊಡೈಲ್ಸ್’(1933) ಮತ್ತು ‘ಸನಟೋರಿಯಮ್ ಅಂಡರ್ ದಿ ಸೈನ್ ಆಫ್ ದಿ ಅವರ್ಗ್ಲಾಸ್’(1937) ಎಂಬ ಎರಡೂ ಕಥಾ ಸಂಕಲನಗಳು ಅಭಿಜಾತ ಕೃತಿಗಳೆಂದೇ ಪರಿಗಣಿತವಾಗಿವೆ. ಬ್ರುನೋನ ಕತೆಗಳ ಭಾಷೆಯು ವ್ಯಂಗ್ಯ, ವಿಡಂಬನೆ ಮತ್ತು ರೂಪಕಗಳಿಂದ ಕೂಡಿರುತ್ತದೆ. ಈ ಲೇಖಕ ಮೊದಲ ಓದಿಗೆ ರುಚಿಸಲಾರನೆಂಬುದು ಸತ್ಯವೇ. ಆಧುನಿಕ ಯುರೋಪನ ಸೋಪಜ್ಞೆ ಪ್ರತಿಬೆ ಎಂದೇ ಗುರುತಿಸಲ್ಪಟ್ಟಿರುವ ಬ್ರುನೋ ಅತ್ಯಂತ ಆಳದಿಂದ ಬರೆಯುವ ಹಾಗೂ ಅಷ್ಟೇ ಗಾಢವಾಗಿ ಕಾಡುವ ಲೇಖಕನಾಗಿದ್ದಾನೆ. ಪ್ರಸ್ತುತ ಕತೆಯು ಆತನ ಎರಡನೇ ಕಥಾ ಸಂಕಲನದಲ್ಲಿರುವ ‘ಲೋನ್ಲಿನೆಸ್’ ಕತೆಯ ಅನುವಾದವಾಗಿದೆ.)
(ಅನುವಾದಕರ ವಿಳಾಸ:
ಡಾ. ಸುಭಾಷ್ ರಾಜಮಾನೆ
ಕನ್ನಡ ಸಹಾಯಕ ಪ್ರಧ್ಯಾಪಕ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು,
ಬಂಕಾಪುರ, ಹಾವೇರಿ ಜಿಲ್ಲೆ
(ಮೊ:8073397463
rajamanesubash98@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ15 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ಅಂತರಂಗ21 minutes agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು


