Connect with us

ಬಹಿರಂಗ

ಅಸಹನೆಯಿಂದ ಕಂಗೆಟ್ಟರುವ ಪಾಕಿಸ್ತಾನ ಮತ್ತು ಅದರ ಮುಖ್ಯಸ್ಥ ಇಮ್ರಾನ್ ಖಾನ್

Published

on

ಒಂದು ನಿಮಿಷ, ಇದಕ್ಕಾಗಿ ಯಾರೂ ಸಂಭ್ರಮಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಹತಾಶ ಮನಸ್ಥಿತಿಯ ಮತ್ತೊಂದು ಮುಂದುವರಿದ ಭಾಗವೇ ಅಪಾಯಕಾರಿ ಚಟುವಟಿಕೆ. ಭಾರತದ ಬೃಹತ್ ಸೈನಿಕ ಶಕ್ತಿಯ ಮುಂದೆ ಪಾಕಿಸ್ತಾನದ ಶಕ್ತಿ ಕಡಿಮೆ ಎಂಬುದು ನಿಜ. ಆದರೆ ಯುದ್ಧ ಎಂಬ ವಿನಾಶಕಾರಿ ಆಟದಲ್ಲಿ ಶಕ್ತಿಯ ಜೊತೆಗೆ ದುಷ್ಟತನ ಸಹ ಪರಿಣಾಮ ಬೀರುತ್ತದೆ ಎಂಬುದನ್ನು ಗಮನಿಸಬೇಕಿದೆ.

ಒಂದು ಹಂತದವರೆಗೆ ಹೊಡೆದಾಟ ಬಡಿದಾಟ ಎಲ್ಲವೂ ನಡೆಯುತ್ತದೆ. ಆದರೆ ಒಂದು ವೇಳೆ ಭಾರತ ಪಾಕಿಸ್ತಾನದ ಮೇಲೆ ಅಥವಾ ಪಾಕಿಸ್ತಾನ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಿದ್ದೇ ಆದರೆ ಮೊದಲು ಪ್ರಯೋಗಸಿದ ದೇಶವನ್ನು ಇಡೀ ವಿಶ್ವದ ಮಾನವ ಸಂಕುಲ ಕ್ಷಮಿಸುವುದಿಲ್ಲ ಎಂಬುದನ್ನು ಮರೆಯದಿರೋಣ.

ಜಪಾನಿನ ಹಿರೋಷಿಮಾ ನಾಗಸಾಕಿ ನಗರಗಳ ಮೇಲೆ ಅಮೆರಿಕ ಅಣು ಬಾಂಬ್ ಪ್ರಯೋಗಿಸಿ ಈಗಲೂ ಬಲಾಡ್ಯವಾಗಿ ಉಳಿದಿಲ್ಲವೇ ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಮೂಡಬಹುದು.ಹೌದು, ಅಮೆರಿಕ ಪರ್ಲ್ ಹಾರ್ಬರ್ ದ್ವೀಪದ ಮೇಲೆ ಜಪಾನಿನ ದಾಳಿಗೆ ವಿರುದ್ದವಾಗಿ ಹಿರೋಷಿಮಾ ಮತ್ತು ನಾಗಸಾಕಿ ನಗರಗಳಲ್ಲಿ ಅತ್ಯಂತ ಅಮಾನವೀಯ ಕೃತ್ಯವನ್ನು ಎಸಗಿಯೂ ಅದನ್ನು ಸಮರ್ಥಿಸಿಕೊಂಡು ಯಶಸ್ವಿಯಾಗಿದೆ. ಅದಕ್ಕೆ ಕಾರಣ ಅಮೆರಿಕಾದ Extraordinary ಎಂದು ಹೇಳಬಹುದಾದ ಆರ್ಥಿಕ ಮತ್ತು ಸೈನಿಕ ಶಕ್ತಿ. ಅಷ್ಟು ಶಕ್ತಿ ಅಥವಾ ಆ ಉದಾಹರಣೆಯನ್ನುಭಾರತ ಪಾಕಿಸ್ತಾನದ ವಿಷಯದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತವಲ್ಲ.

ನೀವೇ ಯೋಚಿಸಿ ನೋಡಿ. ಭಾರತ ಪಾಕಿಸ್ತಾನದ ಮೇಲೆ ಅಣು ಬಾಬ್ ಹಾಕಿದರೆ ಬಹುಶಃ 10 ಲಕ್ಷ ಜನ ನೇರವಾಗಿ ಇನ್ನೊಂದು ಹತ್ತು ಲಕ್ಷ ಜನ ಪರೋಕ್ಷವಾಗಿ ಸಾಯುತ್ತಾರೆ. ಕೆಲವು ಚದರ ಕಿಲೋಮೀಟರ್ ಗಳಷ್ಟು ಭೂಮಿ ವಾಸಿಸಲು ಅಯೋಗ್ಯವಾಗುತ್ತದೆ.
ಅದೇರೀತಿ ಭಾರತದ ಮೇಲೆ ಪಾಕಿಸ್ತಾನ ಬಾಂಬ್ ಹಾಕಿದರು ಪರಿಣಾಮ ಅಷ್ಟೇ ತೀವ್ರವಾಗಿ ಇರುತ್ತದೆ.

ಇದು ಬೇಕೆ ? ತಡೆಯುವ ಮಾರ್ಗಗಳು ಇಲ್ಲವೇ ? ಭಾರತ ಮತ್ತು ಪಾಕಿಸ್ತಾನದಲ್ಲಿ ಒಳ್ಳೆಯ, ಹೃದಯವಂತ, ಬುದ್ದಿವಂತ ಜನರಾರು ಇಲ್ಲವೇ ? ಎಲ್ಲರೂ ಸತ್ತು ಹೋಗಿದ್ದಾರೆಯೇ ? ಯಾರೋ ಕೆಲವು ಮೂಲಭೂತವಾದಿ ಭಯೋತ್ಪಾದಕರ ಹುಚ್ಚಾಟಕ್ಕೆ ಅಮಾಯಕ 20 ಲಕ್ಷ ಜನ ಸಾಯಬೇಕೆ ?

ಭಾರತದ ಸರ್ವೋಚ್ಚ ನಾಯಕ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಸರ್ವೋಚ್ಚ ನಾಯಕ ಇಮ್ರಾನ್ ಖಾನ್ ಗೆ ಇದು ತಿಳಿದಿಲ್ಲವೇ ? ಇಬ್ಬರ ನಡುವೆ ಸಣ್ಣ ಪ್ರದೇಶ ಕಾಶ್ಮೀರದ ಬಗ್ಗೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳುವಷ್ಟು ಇಬ್ಬರಿಗೂ ಸಾಮರ್ಥ್ಯ ಇಲ್ಲವೇ ?

ಹಾಗಾದರೆ ಸರ್ವೋತ್ಕೃಷ್ಟ ಶಾಂತಿ ಸಹನೆ ಪ್ರೀತಿ ಹೇಳುತ್ತದೆ ಎನ್ನುವ ನಂಬಿಕೆಯ ಹಿಂದೂ ಮತ್ತು ಇಸ್ಲಾಂ ಧರ್ಮದ ತಿರುಳುಗಳು ಸುಳ್ಳೆ ? ಧರ್ಮ ಇರುವುದು ಕೇವಲ ಭೋದಿಸಲು ಮಾತ್ರ ಅನುಸರಿಸಲು ಅಲ್ಲ ಎಂದು ಭಾವಿಸೋಣವೇ ? ನಿಮ್ಮ ನಿಮ್ಮ ದೇವರು ಧರ್ಮಗಳು ಕೇವಲ ಒಂದು ಸಣ್ಣ ಜಾಗದ ವಿಷಯ ಪರಿಹರಿಸುವಷ್ಟು ತಿಳಿವಳಿಕೆ, ಸಹನೆ, ತ್ಯಾಗ ಕಲಿಸುವುದಿಲ್ಲ ಅದಕ್ಕಾಗಿ ದಶಕಗಳ ಕಾಲ ರಕ್ತಪಾತ ನಡೆಸಬೇಕು ಎನ್ನುವುದಾದರೆ ಧರ್ಮ ದೇವರುಗಳ ಅವಶ್ಯಕತೆ ಇದೆಯೇ ?

ಚಿಕ್ಕ ಮಕ್ಕಳು ಗೋಲಿ ಆಡುವಾಗ ನಿನ್ನದು ತಪ್ಪು ನನ್ನದು ಸರಿ ಎನ್ನುವ ಬಾಲಿಶ ವರ್ತನೆ ಒಂದು ದೇಶದ ಮುಖ್ಯಸ್ಥರಿಗೆ ಇದ್ದರೆ ಹೇಗೆ ? ಸಮಸ್ಯೆ ಇರುವುದು ನಿಜ. ಕಾರಣ ಏನೇ ಇರಲಿ ಬಗೆಹರಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮ ಎಲ್ಲಾ ಪ್ರವಚನ, ಭೋದನೆ, ಮಂದಿರ, ಮಸೀದಿ ಗ್ರಂಥಗಳನ್ನು ಕಟ್ಟಿ ಮೂಲೆಗೆ ಬಿಸಾಕಿ.
” ಬಲವೇ ನ್ಯಾಯ ” ಎಂಬುದನ್ನು ಜ‌ನರಿಗೆ ಹೇಳಿ.‌ತಾಖತ್ತು ಇದ್ದವರು ಉಳಿಯಲಿ ದುರ್ಬಲರು ಸಾಯಲಿ. ಇದೇ ಕಾಡಿನ ನ್ಯಾಯ.ಇದು ಖಂಡಿತ ಆದರ್ಶದ ಮಾತಲ್ಲ. ಈಗಲೂ ಕಾಶ್ಮೀರದ ಸಮಸ್ಯೆಗೆ ಒಂದು ಪರಿಹಾರವಿದೆ.

ಮುಖ್ಯವಾಗಿ ಈ 6 ಜನ 15 ದಿನಕ್ಕೆ ಒಮ್ಮೆ 10 ಬಾರಿ 3 ಗಂಟೆಯಷ್ಟು ಪ್ರತಿಸಲ ಕುಳಿತು ಚರ್ಚಿಸಿದರೆ ಖಂಡಿತ ಭಯೋತ್ಪಾದನೆ ಹೊರತುಪಡಿಸಿದ ಎಲ್ಲಾ ಸಮಸ್ಯೆಗಳು ಪರಿಹಾರಗುತ್ತದೆ. ಅದರ ನಂತರ ಒಮ್ಮೆ ವಿಶ್ವಾಸ ಮೂಡಿದರೆ ಭಯೋತ್ಪಾದನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನದ ಜಂಟಿ ಕಾರ್ಯಾಚರಣೆ ಪ್ರಾರಂಭ ಮಾಡಬಹುದು.

ಆ 6 ಜನರೆಂದರೆ

  1. ಭಾರತದ ಪ್ರಧಾನಿ ನರೇಂದ್ರ ಮೋದಿ.
  2. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್
  3. ಭಾರತ ಸೈನ್ಯದ ಮುಖ್ಯಸ್ಥ.
  4. ಪಾಕಿಸ್ತಾನ ಸೈನ್ಯದ ಮುಖ್ಯಸ್ಥ.
  5. ಈ ಕ್ಷಣದ ಭಾರತದ ಬಹು ದೊಡ್ಡ ಸಂಘಟನೆ ಮತ್ತು ಪಾಕಿಸ್ತಾನದ ಕಡು ವಿರೋಧಿ ಹಾಗೂ ಕಾಶ್ಮೀರದ ಬಗ್ಗೆ ಕಠಿಣ ನಿಲುವು ತಳೆದಿರುವ RSS ಮುಖ್ಯಸ್ಥ.
  6. ಪಾಕಿಸ್ತಾನದ ಇಸ್ಲಾಂ ಧರ್ಮದ ಅತ್ಯಂತ ಹೆಚ್ಚು ಪ್ರಭಾವಿ ನಾಯಕ.

ಇವರ ಜೊತೆಗೆ ಸರ್ಕಾರಗಳ ಉನ್ನತ ಮಟ್ಟದ ಅಧಿಕಾರಿ ವರ್ಗ. ಈ ಚರ್ಚೆಯನ್ನು ಎರಡೂ ದೇಶದ ಎಲ್ಲಾ ರೀತಿಯ ಮಾಧ್ಯಮಗಳು ಯಾವುದೇ ಎಡಿಟಿಂಗ್ ಮಾಡದೆ ನೇರ ಪ್ರಸಾರ ಮಾಡಬೇಕು. ಆಗ ಜನರಿಗೆ ಯಾವ ದೇಶ ಕೆಟ್ಟ ವರ್ತನೆ ತೋರುತ್ತಿದೆ, ಯಾವ ದೇಶ ನಿಜವಾಗಿಯೂ ಸಮಸ್ಯೆಯನ್ನು ಹುಟ್ಟು ಹಾಕುತ್ತಿದೆ ಎಂದು ತಿಳಿಯುತ್ತದೆ.

ಈ ಸಂದರ್ಭದಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮಗಳಿಗೆ ಅವಕಾಶ ನೀಡಬಾರದು. ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದರೂ ಈ ಮಾಧ್ಯಮಗಳು ಕೊಡು ಕೊಳ್ಳುವಿಕೆಯ ಸಣ್ಣ ‌ವಿಷಯವನ್ನು ದೊಡ್ಡದು ಮಾಡಿ ಜನರಲ್ಲಿ ‌ತಪ್ಪು‌ ಅಭಿಪ್ರಾಯ ಮೂಡಿಸಿ ಜನರನ್ನು ರೊಚ್ಚಿಗೆಬ್ಬಿಸುವ ಸಾಧ್ಯತೆ ಇದೆ.

ಮೇಲೆ ಹೇಳಿದ ಆರು ಜನರ ಟೀಮ್ ಸೇರಿ ಒಂದು ತೀರ್ಮಾನಕ್ಕೆ ಬಂದು ಜಂಟಿ ಒಪ್ಪಂದ ಘೋಷಿಸಿದರೆ ಒಂದಷ್ಟು ವಿರೋಧದ ನಡುವೆಯೂ ಎರಡೂ ದೇಶದ ಬಹುತೇಕ ಜನ ಒಪ್ಪಬಹುದು.

ಏಕೆಂದರೆ ಸಾಮಾನ್ಯ ಜನರಿಗೆ ಯುದ್ಧ ಬೇಕಿಲ್ಲ. ಮೇಲೆ ಹೇಳಿದ ನಾಯಕರು ಮತ್ತು ಅವರ ಸಂಘಟನೆಗಳೇ ಈ ಘರ್ಷಣೆಯ ಮೂಲ ಪ್ರೇರೇಪಿತರು. ಅವರೇ ಒಂದು ನಿರ್ಧಾರ ಕೈಗೊಂಡರೆ ಹೆಚ್ಚಿನ ಪ್ರತಿರೋಧ ಇರುವುದಿಲ್ಲ.

ಯುದ್ದೋತ್ಸಾಹಿ ಜನರೇ ದಯವಿಟ್ಟು ಅರ್ಥಮಾಡಿಕೊಳ್ಳಿ ,
ಒಂದು ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಪಾಕಿಸ್ತಾನ ಸೋಲು ಖಚಿತ. ಆ ಭಯದಲ್ಲಿ ಅವರೇ ಮೊದಲು ಅಣು ಬಾಂಬ್ ಪ್ರಯೋಗಿಸುತ್ತಾರೆ. ನಾವು ನಂತರ ಪ್ರಯೋಗಿಸಬಹುದು. ಆದರೆ ಏನೂ ಇಲ್ಲದ ಪಾಕಿಸ್ತಾನಕ್ಕಿಂತ ಹೆಚ್ಚು ಇರುವ ನಾವೇ ಕಳೆದುಕೊಳ್ಳುವುದು ಜಾಸ್ತಿ.

ಅಲ್ಲದೆ ಈ ಯುದ್ಧದ ಸಂದರ್ಭಕ್ಕಾಗಿ ಕಾಯುತ್ತಿರುವ ಚೀನಾ ಕೆಲವೇ ದಿನಗಳಲ್ಲಿ ನಮ್ಮ ಅರುಣಾಚಲ ಪ್ರದೇಶವನ್ನು ಆಕ್ರಮಿಸುವ ಸಾಧ್ಯತೆ ಇದೆ. ಶಾಂತಿ ಸಮಯದಲ್ಲಿಯೇ ದೋಖ್ಲಾಂ ಪ್ರವೇಶಿಸುವ ಚೀನಾ ಅನುಕೂಲಕರ ವಾತಾವರಣದಲ್ಲಿ ಸುಮ್ಮನಿರುವುದಿಲ್ಲ.

ಜೊತೆಗೆ ಒಂದು ನೆನಪಿಡಿ. ಅದು ಯಾವ ದೇಶವೇ ಆಗಿರಲಿ, ವ್ಯಕ್ತಿಯೇ ಆಗಿರಲಿ, ಅಮೆರಿಕ ಚೀನಾ ಪಾಕಿಸ್ತಾನ ಭಾರತ ಆಫ್ರಿಕಾವೇ ಆಗಿರಲಿ ಯುದ್ಧದ ಬಗ್ಗೆ ಭಯವಿರುತ್ತದೆ ನಿಜ. ಆದರೆ ತನ್ನ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಯಾವ ಹಂತಕ್ಕೆ ಹೋಗಲು ಸಿದ್ದವಾಗುತ್ತಾರೆ. ಪಾಕಿಸ್ತಾನ ಸಹ ಮಿತಿಮೀರಿದಾಗ ಯಾವ ಹಂತಕ್ಕೆ ಹೋಗಲೂ ಹೇಸುವುದಿಲ್ಲ.ಇದು ಬೇಕೆ ? ” ಗೆದ್ದವನು ಸೋತ ಸೋತವನು‌ ಸತ್ತ ” ಎಂಬುದು ತಿಳಿದಿದ್ದರೂ ದುರಹಂಕಾರ ಒಳ್ಳೆಯದಲ್ಲ.

ಇದು ನನ್ನ ಅಭಿಪ್ರಾಯ. ಇದಕ್ಕಿಂತ ಉತ್ತಮ ಅಭಿಪ್ರಾಯ ದೇಶದ ಹಿತದೃಷ್ಟಿಯಿಂದ ನಿಮ್ಮದಾಗಿದ್ದರೆ ಸಂತೋಷ ಮತ್ತು ಸ್ವಾಗತಾರ್ಹ.ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,ಮನಸ್ಸುಗಳ ಅಂತರಂಗದ ಚಳವಳಿ.

ವಿವೇಕಾನಂದ. ಹೆಚ್.ಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending