Connect with us

ದಿನದ ಸುದ್ದಿ

ವರ್ಚುವಲ್ ಪಂಚಲಿಂಗದರ್ಶನ ಮಹೋತ್ಸವ; ಕೋವಿಡ್ ಹಿನ್ನೆಲೆ ಸರಳ ದಸರಾದಂತೆ ಆಚರಣೆಗೆ ಒತ್ತು : ಸಚಿವ ಎಸ್.ಟಿ. ಸೋಮಶೇಖರ್

Published

on

ಸುದ್ದಿದಿನ,ಮೈಸೂರು: ಕೋವಿಡ್ 19 ರ ಹಿನ್ನೆಲೆಯಲ್ಲಿ ದಸರಾವನ್ನು ಹೇಗೆ ಸರಳವಾಗಿ ಮಾಡಲಾಯಿತೋ ಹಾಗೆಯೇ ಪಂಚಲಿಂಗದರ್ಶನ ಮಹೋತ್ಸವವನ್ನೂ ಮಾಡೋಣ. ವರ್ಚುವಲ್ ವ್ಯವಸ್ಥೆಯನ್ನು ಮಾಡುವುದು ಒಳ್ಳೆಯದು. ಈ ಬಗ್ಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಬಳಿಯೂ ಚರ್ಚಿಸಿದ್ದೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಪಂಚಲಿಂಗ ದರ್ಶನ ಮಹೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಲಹೆ, ಮಾಹಿತಿಯನ್ನು ಪಡೆದು ಸಚಿವರು ಮಾಹಿತಿ ನೀಡಿದರು.

ತಜ್ಞರ ಸಮಿತಿಯೊಂದನ್ನು ರಚಿಸಬೇಕಿದೆ. ಈ ತಂಡ ತಲಕಾಡಿಗೆ ಭೇಟಿ ನೀಡಿ ವರದಿ ಕೊಡಲಿ. ಅವರ ವರದಿ ಆಧಾರದ ಮೇಲೆ ಆಚರಣೆ ಮಾಡೋಣ. ಜೊತೆಗೆ ಚಳಿಗಾಲ ಬರುತ್ತಿರುವುದರಿಂದ ಹೆಚ್ಚಿನ ನಿಗಾ ವಹಿಸುವುದು ಒಳ್ಳೆಯದು ಎಂದು ಸಚಿವರು ತಿಳಿಸಿದರು.

ತಲಕಾಡಿನಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಬೇಕು. ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ ಮಹೋತ್ಸವ ಆರಂಭವಾಗುತ್ತಿರುವುದರಿಂದ ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಾಗುವುದಿಲ್ಲ. ತುರ್ತು ಕೆಲಸಗಳನ್ನು ಈಗ ಮಾಡಿಕೊಳ್ಳಿ. ಹಂತಹಂತವಾಗಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ ಎಂದು ಸಚಿವರಾದ ಸೋಮಶೇಖರ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ತಜ್ಞರ ತಂಡದ ವರದಿ ಬಳಿಕ ತೀರ್ಮಾನ

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ 5-6 ಮಂದಿಯ ತಂಡ ರಚಿಸಲಾಗುವುದು. ಈ ತಂಡ ತಲಕಾಡಿಗೆ ಭೇಟಿ ನೀಡಿ ವರದಿ ಸಿದ್ಧಪಡಿಸಲಿದೆ. ಇನ್ನು ತಜ್ಞರ ತಂಡ ನೀಡುವ ವರದಿ ಆಧಾರದಲ್ಲಿ ಎಷ್ಟು ಜನ ಇರಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ

ಪಂಚಲಿಂಗದರ್ಶನ ಮಹೋತ್ಸವಕ್ಕೆ ಬೇಕಾದ ತಯಾರಿಗಳು ನಡೆಯಲಿ. ಸುಣ್ಣ ಬಣ್ಣ, ದೀಪಾಲಂಕಾರ, ರಸ್ತೆ, ಚರಂಡಿ ವ್ಯವಸ್ಥೆಗಳು ಸೇರಿದಂತೆ ಪ್ರತಿ ಬಾರಿ ನಡೆಯುವ ಕಾರ್ಯಕ್ರಮದಂತೆ ನಡೆಸುವ ಕಾಮಗಾರಿಗಳಿಗೆ ಎಷ್ಟು ಖರ್ಚು ಬೇಕಾಗುತ್ತದೆ ಎಂದು ಅಂದಾಜು ವೆಚ್ಚವನ್ನು ಪಟ್ಟಿ ಮಾಡಿ ಜಿಲ್ಲಾಡಳಿತ ಮುಖಾಂತರ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ನಿರ್ಧಾರದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳೋಣ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಜ್ಞರ ತಂಡ ಪರಿಶೀಲಿಸಲಿ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಪಂಚಲಿಂಗ ದರ್ಶನವನ್ನು ದಸರಾ ಮಾದರಿಯಲ್ಲಿ ವರ್ಚುವಲ್ ಆಗಿ ಆಚರಿಸುವುದು ಒಳ್ಳೆಯದು. ಎಲ್ಲರೂ ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಲಿ. ಅಲ್ಲದೆ, ತಜ್ಞರ ತಂಡವನ್ನು ಕರೆಸಿ ವರದಿ ಪಡೆದರೆ, ಅವರ ಸೂಚನೆಯಂತೆ ಆಚರಣೆ ಮಾಡುವುದು ಒಳ್ಳೆಯದು ಎಂದು ತಿಳಿಸಿದರು.

ಸಭೆಯ ಅಭಿಪ್ರಾಯಗಳು

ತಲಕಾಡು ಪ್ರಸಿದ್ಧವಾದ ಸ್ಥಳವಾಗಿದ್ದು, ಪ್ರತಿ ಬಾರಿ ಕಾರ್ತಿಕ ಮಾಸ, ವೃಶ್ಚಿಕ ಅಮವಾಸ್ಯೆ, ಸೋಮವಾರ ಕುಹಯೋಗ, ವಿಶಾಖ ನಕ್ಷತ್ರದ ಶುಭ ಲಗ್ನದಲ್ಲಿ ನಡೆಯುವ ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸೇರುತ್ತಾರೆ. ಈ ಬಾರಿ ಕೋವಿಡ್ ಇರುವುದರಿಂದ ಸರಳವಾಗಿ ಆಚರಿಸುವುದು ಒಳ್ಳೆಯದು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ತಲಕಾಡು ಕ್ಷೇತ್ರದ ಶ್ರೀವೈದ್ಯೇಶ್ವರ, ಶ್ರೀ ಪಾತಾಳೇಶ್ವರ, ಶ್ರೀ ಮರುಳೇಶ್ವರ, ಶ್ರೀ ಅರ್ಕೇಶ್ವರ ಮತ್ತು ಶ್ರೀ ಮುಡುಕುತೊರೆ ಮಲ್ಲಿಕಾರ್ಜುನೇಶ್ವರದ ಐದು ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇವುಗಳಿಗೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಸಭೆಯಲ್ಲಿ ಮನವಿಗಳು ವ್ಯಕ್ತವಾದವು.

ಕಳೆದ ಬಾರಿ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವಕ್ಕೆ 12 ಕೋಟಿ ರೂ.ಅನುದಾನ ಮಂಜೂರಾಗಿತ್ತು. ಅದರಲ್ಲಿ 6,78,01,740 ರೂ. ಖರ್ಚಾಗಿದ್ದು, ಇದರಲ್ಲಿ 5,58,00,000 ರೂಪಾಯಿ ಉಳಿಕೆಯಾಗಿತ್ತು. ಇದನ್ನು ಸಮೂಹ ದೇವಸ್ಥಾನಗಳಲ್ಲೊಂದಾದ ಮುಡುಕುತೊರೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ಶಾಶ್ವತ ಕಾಮಗಾರಿಗಳಿಗೆ ಉಪಯೋಗಿಸಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅಂದಾಜು ವೆಚ್ಚ ಪಟ್ಟಿ

ವರ್ಚುವಲ್ ವ್ಯವಸ್ಥೆ ಮಾಡಲು 9 ಲಕ್ಷ ರೂಪಾಯಿ, ಧಾರ್ಮಿಕ ಕಾರ್ಯಕ್ರಮಕ್ಕೆ 32 ಲಕ್ಷ ರೂಪಾಯಿಯನ್ನು ಅಂದಾಜು ಮಾಡಲಾಗಿದೆ. ಆದರೆ, ಇದರಲ್ಲಿ ಯಾವುದೇ ದೀಪಾಲಂಕಾರಗಳು ಯಾವುದೂ ಸೇರಿಲ್ಲ ಎಂಬ ಮಾಹಿತಿಯನ್ನು ಸಭೆಗೆ ಅಧಿಕಾರಿಗಳು ನೀಡಿದರು.

ಆರೋಗ್ಯ, ಪೊಲೀಸ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಸಿದ್ಧತೆ ಹಾಗೂ ಕಾರ್ಯಕ್ರಮವನ್ನು ನಡೆಸಿದರೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending