ಲೈಫ್ ಸ್ಟೈಲ್
ಭಾಗ 1 | ಏನಿದು ಮೆಡಿಕಲ್ ಮಾಫಿಯಾ..?
- ಡಾ. ಎನ್ ಬಿ.ಶ್ರೀಧರ,ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ
ಮಾತೆತ್ತಿದರೆ “ಮೆಡಿಕಲ್ ಮಾಫಿಯಾ ಪ್ರಪಂಚವನ್ನೇ ಆಳುತ್ತಿದೆ. ವೈದ್ಯರೆಲ್ಲಾ ಇದರ ಕೈಗೊಂಬೆಗಳು. ಔಷಧ ಕಂಪನಿಗಳೆಲ್ಲಾ ಧನಪಿಪಾಸುಗಳು, ವೈದ್ಯರೆಲ್ಲಾ ಇವರ ಗುಲಾಮರು. ಕಾರ್ಪೋರೇಟ್ ಆಸ್ಪತ್ರೆಗಳೆಲ್ಲಾ ಮನುಷ್ಯರ ಅನಾರೋಗ್ಯವನ್ನೇ ಶೋಷಣೆ ಮಾಡಿಕೊಂಡು ಹಣಕೀಳುವ ಸಂಸ್ಥೆಗಳು” ಎಂದು ನಾವು ಸಾಮಾಜಿಕ ಜಾಲತಾಣಗಳು, ಮಾಧ್ಯಮಗಳು ಮತ್ತು ಅನೇಕ ಜನಸಾಮಾನ್ಯರ ಚರ್ಚೆಯಲ್ಲಿ ನೋಡುತ್ತಾ ಜನ ಈ ವ್ಯವಸ್ಥೆಯ ಬಗ್ಗೆ ರೇಜಿಗೆ ಬೆಳೆಸಿಕೊಂಡಿರುವುದನ್ನು ನೋಡುತ್ತೇವೆ.
ಮುಂದುವರೆದು ಸಮಾಜದಲ್ಲಿ ಪ್ರತಿಷ್ಠಿರಾಗಿರುವ ಡಾ: ಬಿ.ಎಂ.ಹೆಗಡೆಯವರೂ ಸಹ ಇದನ್ನು ಪುರಸ್ಕರಿಸಿಯೇ ಮಾತನಾಡುತ್ತಾರೆ. ಇದನ್ನು ಅಲ್ಲಗಳೆಯುವಂತಿಲ್ಲವಾದರೂ ಸಹ ಪೂರ್ಣವಾಗಿ ಒಪ್ಪಿಕೊಳ್ಳಬೇಕೆಂದೇನೂ ಇಲ್ಲ. ಮೂಲತ ವೈದ್ಯಕೀಯ ವೃತ್ತಿ ಮತ್ತು ಉಧ್ಯಮ ಇದರಲ್ಲಿ ವ್ಯತ್ಯಾಸವಿದೆ ಎಂಬುದನ್ನು ನಾವು ಅರಿಯಲೇ ಬೇಕು. “ರೋಗ ಗುಣಪಡಿಸುವಿಕೆ ಒಂದು ಕಲೆ, ವೈದ್ಯಕೀಯ ಶಿಕ್ಷಣ ಒಂದು ವೃತ್ತಿ, ಆದರೆ ಆರೋಗ್ಯ ರಕ್ಷಣೆ ಒಂದು ಉಧ್ಯಮ ಎಂಬ” ಘೋಷವಾಖ್ಯವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಲೇಬೇಕು.
ವೈದ್ಯಕೀಯ ಶಿಕ್ಷಣ ಸಾಮಾನ್ಯರ ಪಾಲಿಗೆ ಇಂದು ಗಗನ ಕುಸುಮ. ಎಷ್ಟೇ ಪ್ರತಿಭಾನ್ವಿತರಾದರೂ ಸಹ ಪ್ರತಿಭಾ ಸ್ಪರ್ಧೆಯನ್ನು ಎದುರಿಸಿ, ವೈದ್ಯಕೀಯಕ್ಕೆ ಸೀಟು ಪಡೆದು 5 ವರೆ ವರ್ಷಗಳ ಕಠಿಣ ಪರಿಶ್ರಮವೆದುರಿಸಿ ಪಾಸಾಗಿ ಹೊರಬಂದರೆ ಆತನದು ಮುಗಿಯುವುದು ಎಂಬಿಬಿಎಸ್ ಎಂಬ ಸ್ನಾತಕ ಪದವಿ ಮಾತ್ರ. ಇಂದು ಈ ಪದವಿ ಕೇವಲ ಡೊಲೊ 650 ಮಾತ್ರೆ ಬರೆದು ಕೊಡುವುದಕ್ಕೆ ಸೀಮಿತಗೊಳಿಸಿದೆ ಸಮಾಜ.
ಹಾಗಿದ್ದರೆ ಸ್ನಾತಕೋತ್ತರ ಪದವಿ ಪಡೆಯುವುದು ಸುಲಭವೇ ? ಕೊಟ್ಯಾಂತರ ಕೊಟ್ಟು ಸೀಟು ಪಡೆದು ಎಂ ಡಿ ಅಥವಾ ಎಂ ಎಸ್ ಮಾಡಬೇಕು. ಅದರಲ್ಲೂ ಸಹ ಉತ್ತಮ ಶಾಖೆಗಳಲ್ಲಿ ಸ್ನಾತಕ ಪಡವಿ ಪಡೆಯುವುದು ಸುಲಭವೇ? ಜೀವವನ್ನೇ ತೇಯಬೇಕು. ಒಬ್ಬ ವೈದ್ಯ ಎಂ ಡಿ ಅಥವಾ ಎಂ ಎಸ್ ಪದವಿ ಮುಗಿಸಿ ಹೊರಬರಬೇಕಾದರೆ ಕನೀಷ್ಟ 2-3 ಕೋಟಿ ಖರ್ಚು ಮಾಡಬೇಕಾದ ಅನಿವಾರ್ಯತೆ ಇದೆ.
ಸಾಲ ಸೋಲ ಮಾಡಿ ಪದವಿ ಪಡೆದರೆ ಅದರ ಅಸಲು ಮತ್ತು ಬಡ್ಡಿ ತೆರಬೇಕಾಗುವುದು ಪದವಿ ಮುಗಿದ ಕೂಡಲೇ ಪ್ರಾರಂಭವಾಗಿ ಬಿಡುತ್ತದೆ. ಇದಾದ ನಂತರ ಯಾವುದೋ ಕಾರ್ಪೋರೇಟ್ ಆಸ್ಪತ್ರೆಯಲ್ಲಿ ಅವರು ಕೊಟ್ಟ ಸಂಬಳ ಪಡೆದು ಒಂದಿಷ್ಟು ವರ್ಷ ಕೆಲಸ ನಿರ್ವಹಿಸಬೇಕು. ಅಲ್ಲಿ ಎಷ್ಟು ವರ್ಷ ಇರಲಿ ಸಾಧ್ಯ? ಪದವಿ ಮುಗಿಸಿದ ಎಲ್ಲರೂ ಜನಪ್ರಿಯರಾಗಲು ಸಾಧ್ಯವೇ? ಕಷ್ಟಪಡಬೇಕಲ್ಲ? ಒಂದಿಷ್ಟು ಹೆಚ್ಚುಕಮ್ಮಿಯಾದರೂ ಸಹ ಜನರಿಂದ ಬೈಗುಳ, ಹೊಡೆತ, ಗ್ರಾಹಕರ ವೇದಿಕೆಯಿಂದ ಕೋಟ್ಯಾಂತರ ದಂಡ ಎಲ್ಲಾ ಗ್ಯಾರಂಟಿ.
ಇದಾದ ಮೇಲೆ ಡಾ: ಬಿ ಎಂ ಹೆಗಡೆಯರಂತ ಪ್ರಖ್ಯಾತ ಪದ್ಮವಿಭೂಷಣರಿಂದ “ವೈದ್ಯರಾಜ ನಮಸ್ತುಭ್ಯಂ ಯಮರಾಜ ಸಹೋದರ|ಯಮಸ್ತು ಹರತಿ ಪ್ರಾಣಾನ್ ವೈದ್ಯಯೋ ಪ್ರಾಣಾನ್ ಧನಾತಿಚ|” ಅಂದರೆ “ಯಮರಾಜ ಸಹೋದರನಾದ ಓ ವೈದ್ಯರಾಜನೇ, ನಿನಗೆ ನಮಸ್ಕಾರ. ಯಮ ಪ್ರಾಣವನ್ನು ಮಾತ್ರ ಕಿತ್ತುಕೊಳ್ಳುತ್ತಾನೆ. ವೈದ್ಯ ಪ್ರಾಣದೊಂದಿಗೆ ಹಣವನ್ನೂ ಕಿತ್ತುಕೊಳ್ಳುತ್ತಾನೆ” ಎಂಬಂತ ಮಾತು ಕೇಳಿಸಿಕೊಳ್ಳಬೇಕು.
ತಮಗಾದ ಒಂದಿಷ್ಟು ಕಹಿ ಅನುಭವವನ್ನು ಆಧರಿಸಿ ಇಡೀ ಆಧುನಿಕ ವೈದ್ಯಕೀಯ ವಿಜ್ಞಾನ ವ್ಯವಸ್ಥೆಯನ್ನೇ ಅತ್ಯಂತ ಹೀನಾಯವಾಗಿ ತೆಗಳುವ ಜನಕ್ಕೆ ಈ ಶುಭಾಷಿತ ವೇದ ವಾಕ್ಯವೇ ಆಗಿದೆ !.ಇದನ್ನೇ ಹೆಗಡೆಯವರು ಮೇಲಿಂದ ಮೇಲೆ ಉಲ್ಲೇಖಿಸಿ ಸಾರಾಸಗಾಟವಾಗಿ ಇಡೀ ವೈದ್ಯ ಕುಲವನ್ನು ಬಾಯಿಗೆ ಬಂದAತೆ ದೂಷಿಸುವುದು !
ರೋಗಿಗಳನ್ನೇ ದೇವರೆಂದು ತಿಳಿದು ಹಗಲು ರಾತ್ರಿ ಅವರ ಸೇವೆಯನ್ನೇ ಪ್ರಾಣದ ಹಂಗು ತೊರೆದು ದೇವರ ಸೇವೆಯೆಂದು ಮಾಡುವ ವೈದ್ಯರಿಲ್ಲವೇ? ಇವರ ಸಂಖ್ಯೇನು ಕಡಿಮೆಯೇ? ಅವರು ಆಧುನಿಕ ವೈದ್ಯತಿಯನ್ನು ಸಾರಾಸಾಗಾಟಾಗಿ ಪಕ್ಕಾ ದುಡ್ಡು ಮಾಡುವ ದಂಧೆಯೆಂದು ಕರೆಯುವುದು ಅನೇಕರಿಗೆ ಅಪ್ಯಾಯಮಾನವಾಗಿ ಕಂಡು ಬಿಡುತ್ತದೆ. ಆದರೆ ವ್ಯವಸ್ಥೆಯಲ್ಲಿ ಯಾರ ಹತ್ತಿರವೂ ಹೇಳಲಾರದ ಮೂಕವೇದನೆ ಅನುಭಿಸುವ ವೈದ್ಯರು ಅವರ ದು:ಖವನ್ನು ರೋಗಿಗಳ ಸೇವೆ ಮಾಡುವಲ್ಲಿ ಮರೆಯುತ್ತಾರೆ.
ಅವರು ಹೇಳುವುದು ಅರ್ಧ ಸತ್ಯ ಮಾತ್ರ. ನೆನಪಿರಲಿ ! ತಾಂತ್ರಿಕ ಶಬ್ಧಗಳನ್ನು ಸರಳಗೊಳಿಸಿ ಸಾಮಾನ್ಯರಿಗೂ ಅರ್ಥವಾಗುವಂತೆ ತಿಳಿಯಪಡಿಸಿ ಉಳಿದೆಲ್ಲವನ್ನು ಮೂಢನಂಬಿಕೆಯ ಆಸುಪಾಸು ಒಯ್ಯುವುದು ಅವರ ಹವ್ಯಾಸ. ಪದ್ಮಭೂಷಣ, ಖ್ಯಾತ ಹೃದಯ ತಜ್ಜ, ವಿದೇಶದಲ್ಲಿ ಓದಿರುವವರು, ಪ್ರಖ್ಯಾತ ವಿಶ್ವವಿದ್ಯಾಲಯವೊಂದರ ವಿಶ್ರಾಂತ ಕುಲಪತಿಗಳು ಎಂಬೆಲ್ಲಾ ವಿಶೇಷಣಗಳಿರುವುದರಿಂದ ಅವರ ಮಾತಿಗೆ ಬಹಳ ಬೆಲೆ. ಲಕ್ಷಾಂತರ ಅಭಿಮಾನಿಗಳನ್ನು ಮತ್ತು ಆರಾಧಕರನ್ನು ಹೊಂದಿರುವುದು ಇವರ ಹೆಗ್ಗಳಿಕೆ. ಇವರ ಮಾತಿಗೆ ಅದರದೇ ಆದ ತೂಕವಿದೆ !
ಹೆಗಡೆಯಂತಹ ಅತ್ಯಂತ ಗಣ್ಯರು, ಅದೂ ಅವರೇ ಕುಲಪತಿಗಳಾದ ಮಣಿಪಾಲ ಅಕಾಡೆಮಿಯಲ್ಲೇ ಈ ಕ್ಯಾಪಿಟೇಶನ್ ಹಾವಳಿ ತಡೆದು ಬಡವರಿಗೆ ವೈದ್ಯಕೀಯ ಶಿಕ್ಷಣ ದಾನ ಮಾಡಿ ತಾವೇ ದೇಶಕ್ಕೆ ಮಾದರಿಯಾಗಿ ಉಪದೇಶ ಮಾಡಬಹುದಿತ್ತಲ್ಲ? ಎನ್ನುತ್ತಾರೆ ಜನ ಸಾಮಾನ್ಯರು.
ವೈದ್ಯಕೀಯ ವೃತ್ತಿಯನ್ನು ಹಿಗ್ಗಾ ಮುಗ್ಗಾ ಟೀಕಿಸುವ ಭರದಲ್ಲಿ ಹೆಗಡೆಯವರು ಅವರು ಧನದಾಹಿಗಳಾಗಲು ಕಾರಣವಾದ ವೈದ್ಯಕೀಯ ಶಿಕ್ಷಣದ ವ್ಯವಸ್ಥೆಯ ವಾಣಿಜ್ಯೀಕರಣದ ಬಗ್ಗೆ ಒಂದು ಕಾಲದಲ್ಲಿ ಅವರೇ ಅದರ ಭಾಗವಾದದ್ದರ ಬಗ್ಗೆ ಮರೆತು ಜಾಣ ಕುರುಡು ಮತ್ತು ಜಾಣ ಕಿವುಡು ಪ್ರದರ್ಶಿಸುತ್ತಾರೆ !!. ಅದರಲ್ಲೂ ಅವರಿಗೆ ಇದು ನೆನಪು ಬಂದಿದ್ದು ಅವರು ನಿವೃತ್ತರಾದ ಮೇಲೆ ಅಲ್ಲವೇ?
ಪದ್ಮವಿಭೂಷಣದಂತ ಉನ್ನತ ಗೌರವ ಪಡೆದ ಅವರು ಶಿಕ್ಷಣದಲ್ಲಿ ಬೃಹತ್ ಆಗಿ ಆಳವಾಗಿ ಬೇರು ಬಿಟ್ಟಿರುವ ಕ್ಯಾಪಿಟೇಶನ್ ಲಾಬಿಯನ್ನು ತಡೆಯಬಹುದಿತ್ತಲ್ಲ! ವೃತ್ತಿಯಲ್ಲಿದ್ದಾಗ ಯಾರ ವಿರುದ್ಧವೂ ತುಟಿ ಪಿಟಕ್ ಎನ್ನದ ಇವರು ನಿವೃತ್ತಿಯಾದ ಕೂಡಲೇ ವೈದ್ಯಕೀಯ ವೃತ್ತಿಯನ್ನೇ ಹಾಸ್ಯಕ್ಕೀಡು ಮಾಡಿ ಅವರು ಹೆಸರು ಗಳಿಸಲು ಕಾರಣವಾದ ವಿದ್ಯೆಯನ್ನೇ ಹೀಗಳೆಯುವುದು ಇವರ ಜನಪ್ರಿಯತೆಯ ಹಪಹಪಿಕೆ ಮನ್ನಣೆಯ ದಾಹದ ಒಂದು ಮುಖ ಎಂದು ಹೇಳದೇ ಬೇರೆ ದಾರಿಯೇ ಇಲ್ಲ.
ವೈದ್ಯಕೀಯ ಸೇವೆಯಲ್ಲಿದ್ದಾಗ ಚಕಾರ ಶಬ್ಧವೆತ್ತದ ಅವರು ನಿವೃತ್ತಿಯಾದ ಕೂಡಲೇ ಅವರ ವೃತ್ತಿಯನ್ನೇ ನಿಂದಿಸುತ್ತಾ, ಆಧುನಿಕ ವೈದ್ಯಕೀಯ ಪದ್ಧತಿಯ ವೈದ್ಯರನ್ನೆಲ್ಲಾ ಹಣ ಪಿಪಾಸುಗಳು, ರಕ್ತದಾಹಿಗಳು, ಬ್ರಹ್ಮರಾಕ್ಷಸರು, ಕರುಣೆಯಿಲ್ಲದವರು ಎಂದೆಲ್ಲಾ ಬಿಂಬಿಸುತ್ತಾ ಮದುಮೇಹ, ಕೊಲೆಸ್ಟೆರಾಲ್ ಇತ್ಯಾದಿಗಳಿಗೆ ಇರುವ ಔಷಧಗಳೆಲ್ಲಾ ಔಷಧ ಕಂಪನಿಗಳ ಲಾಬಿ ಎಂದೆಲ್ಲಾ ಆಧಾರವಿಲ್ಲದೇ ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಒಂದಿಷ್ಟು ಸೋಜಿಗವೇ ಸರಿ. ಅದರಲ್ಲಿಯೂ ಸಹ ವೈದ್ಯಕೀಯ ವೃತ್ತಿ ಮತ್ತು ವೈದ್ಯಕೀಯ ಉಧ್ಯಮ ಎರಡನ್ನೂ ಸಹ ಪ್ರತ್ಯೇಕವಾಗಿ ನೋಡುವ ಸಾಹಸಕ್ಕೇ ಹೋಗಲಿಲ್ಲ ಹೆಗಡೆಯಂತಹ ಅನೇಕ ಗಣ್ಯರು !!.
ಹಾಗೆಯೇ ಗಿಡಮೂಲಿಕೆ ಔಷಧಿಗಳಲ್ಲಿನ ಲಾಭಕೋರತನ, ಗುಣ ಮಟ್ಟ ಪರೀಕ್ಷೆಯ ಕೊರತೆ, ಸಂಶೋಧನೆಯ ಕೊರತೆ, ಅಜ್ಞಾನ ಇವೆಲ್ಲವೂ ಇವರ ಕಣ್ಣಿಗೆ ಕಾಣುವುದೇ ಇಲ್ಲ..!!. ಕೊಬ್ಬರಿ ಎಣ್ಣೆ ಅತ್ಯಂತ ಲಾಭಕರ, ಅಲೋವಿರಾ ಎಲ್ಲದಕ್ಕೂ ದಿವ್ಯೌಷ್ಯದಿ ಎಂದೆಲ್ಲಾ ಹೇಳುವುದು ಒಂದಿಷ್ಟು ಸತ್ಯಕ್ಕೆ ಸಮೀಪ ಆದರೆ ಇದೆಲ್ಲಾ ಸಂಶೋಧನೆಯ ಮೂಲಕವೇ ಸಾಬೀತಾಗಬೇಕು ಎಂದು ಸಂಶೋಧನೆಯ ಅನುಭವವಿರುವವರಿಗೆ ಗೊತ್ತಿರುವ ಸಂಗತಿ ಈ ಗಣ್ಯಮಾನ್ಯರಿಗೆ ತಿಳಿದಿಲ್ಲವೇ?.
ಕಂಡದ್ದೆನ್ನಾ ಕುರುಡಾಗಿ ನಂಬುವವರಿಗೆ ಅವರ ನಂಬಿಕೆಯನ್ನು ಅತ್ಯಂತ ದೊಡ್ಡ ಹಿನ್ನೆಲೆಯ ವ್ಯಕ್ತಿ ಹೇಳಿದಾಗ ಅಪ್ಯಾಯಮಾನವಾಗಿ ತೋರುವುದರಲ್ಲಿ ಸಂಶಯವಿಲ್ಲ. ಜೀವನ ಶೈಲಿಯ ಬದಲಾವಣೆ, ಉತ್ತಮ ಆಹಾರ ಪದ್ಧತಿ, ಯೋಗದ ಸಾಧನೆ ಎಂಬುದನ್ನೆಲ್ಲಾ ಸಮರ್ಥಿಸುವ ಅವರು ಆಧುನಿಕ ವೈದ್ಯಕೀಯ ವಿಜ್ಞಾನಿಕ ವಿಧಾನವನ್ನು ಟೀಕಿಸುವ ಭರದಲ್ಲಿ ಮೂಢನಂಬಿಕೆಯತ್ತ ಜಾರಿ ಬಿಡುತ್ತಾರೆ. ಭಾಷಣ ಮಾಡುವಾಗ ಬರುವ ಚಪ್ಪಾಳೆಗಳು ಅವರಿಗೆ ಬಹುಶ: ಅತ್ಯಂತ ಖುಷಿ ತಂದಿರಬೇಕು. ಹಾಗೆಂದ ಮಾತ್ರಕ್ಕೆ ಅವರು ಹೇಳಿದ್ದೆಲ್ಲಾ ನಿಜವಲ್ಲ. ಬಹುಷ: ಅವರಿಗೆ ವಯಸ್ಸಾಗಿರುವುದರಿಂದ ವಯೋಸಹಜ ಅರುಮರು ಬಂದಿರಬಹುದು ಎಂದುಕೊಳ್ಳಬೇಕು ಅಷ್ಟೇ!!
ಇವರು ಹೇಳುವಂತೆ ಕಾಯಿಲೆಗಳು ಬರಲು ದ್ವೇಷ ಕಾರಣವಂತೆ! ಇದು ಮನುಷ್ಯರ ಮಟ್ಟಿಗೆ ನಿಜ. ಹಾಗೆಂದರೆ ಯಾರನ್ನೂ ಜೀವನದಲ್ಲೇ ದ್ವೇಷಿಸದ ಗಿಡ, ಮರ, ಪ್ರಾಣಿ, ಪಕ್ಷಿ ಮತ್ತು ಹಸುಗೂಸು, ಬುದ್ಧಿ ಮಾಂಧ್ಯರಿಗೆಲ್ಲಾ ಕಾಯಿಲೆಯೇ ಬರಬಾರದಿತ್ತು. ಅಷ್ಟೇ ಯಾಕೆ ? ನಮಗೆ ಕಾಯಿಲೆ ತರುವ ಬ್ಯಾಕ್ಟೀರಿಯಾ ಮತ್ತು ವೈರಾಣುಗಳಿಗೂ ಸಹ ಕಾಯಿಲೆ ಬರುತ್ತವೆ. ಇವುಗಳಿಗೇ ಕಾಯಿಲೆ ತರುವ ಬೇರೆ ಬ್ಯಾಕ್ಟಿರಿಯಾ ಮತ್ತು ವೈರಸ್ಗಳಿವೆ. ಇವು ಯಾರನ್ನು ದ್ವೇಷಿಸಿವೆ?
ಇವರು ಮೇಲಿಂದ ಮೇಲೆ ಹೇಳುವ ಸಂಸ್ಕೃತದ “ವೈದ್ಯರಾಜೋ ನಮಸ್ತುಭ್ಯಂ ಯಮರಾಜ ಸಹೋದರ” ಎಂಬುದು ಅನೇಕರಿಗೆ ಅಪ್ಯಾಯಮಾನ !!. ಇದರಲ್ಲಿ ಇತರ ಎಲ್ಲ ಪದ್ಧತಿಯ ವೈದ್ಯರನ್ನೂ ಅವರು ಜಾಣತನದಿಂದ ಅವರು ಸೇರಿಸುವುದೇ ಇಲ್ಲ. ಅಥವಾ ಅವರ ಪ್ರಕಾರ ಅವರು ವೈದ್ಯರಲ್ಲವೇನೋ?
ಹಾಗಿದ್ದರೆ ಏನಿದು ಮೆಡಿಕಲ್ ಮಾಫಿಯಾ? ವೈದ್ಯಕೀಯ ವೃತ್ತಿ ಮತ್ತು ವೈದ್ಯಕೀಯ ಉಧ್ಯಮಗಳ ನಡುವಿನ ವ್ಯತ್ಯಾಸ ತಿಳಿಯಬೇಕೆ? ಭಾಗ-2 ಓದಲು ಸಿದ್ಧರಾಗಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


