Connect with us

ಲೈಫ್ ಸ್ಟೈಲ್

ಭಾಗ 1 | ಏನಿದು ಮೆಡಿಕಲ್ ಮಾಫಿಯಾ..?

Published

on

  • ಡಾ. ಎನ್ ಬಿ.ಶ್ರೀಧರ,ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ

ಮಾತೆತ್ತಿದರೆ “ಮೆಡಿಕಲ್ ಮಾಫಿಯಾ ಪ್ರಪಂಚವನ್ನೇ ಆಳುತ್ತಿದೆ. ವೈದ್ಯರೆಲ್ಲಾ ಇದರ ಕೈಗೊಂಬೆಗಳು. ಔಷಧ ಕಂಪನಿಗಳೆಲ್ಲಾ ಧನಪಿಪಾಸುಗಳು, ವೈದ್ಯರೆಲ್ಲಾ ಇವರ ಗುಲಾಮರು. ಕಾರ್ಪೋರೇಟ್ ಆಸ್ಪತ್ರೆಗಳೆಲ್ಲಾ ಮನುಷ್ಯರ ಅನಾರೋಗ್ಯವನ್ನೇ ಶೋಷಣೆ ಮಾಡಿಕೊಂಡು ಹಣಕೀಳುವ ಸಂಸ್ಥೆಗಳು” ಎಂದು ನಾವು ಸಾಮಾಜಿಕ ಜಾಲತಾಣಗಳು, ಮಾಧ್ಯಮಗಳು ಮತ್ತು ಅನೇಕ ಜನಸಾಮಾನ್ಯರ ಚರ್ಚೆಯಲ್ಲಿ ನೋಡುತ್ತಾ ಜನ ಈ ವ್ಯವಸ್ಥೆಯ ಬಗ್ಗೆ ರೇಜಿಗೆ ಬೆಳೆಸಿಕೊಂಡಿರುವುದನ್ನು ನೋಡುತ್ತೇವೆ.

ಮುಂದುವರೆದು ಸಮಾಜದಲ್ಲಿ ಪ್ರತಿಷ್ಠಿರಾಗಿರುವ ಡಾ: ಬಿ.ಎಂ.ಹೆಗಡೆಯವರೂ ಸಹ ಇದನ್ನು ಪುರಸ್ಕರಿಸಿಯೇ ಮಾತನಾಡುತ್ತಾರೆ. ಇದನ್ನು ಅಲ್ಲಗಳೆಯುವಂತಿಲ್ಲವಾದರೂ ಸಹ ಪೂರ್ಣವಾಗಿ ಒಪ್ಪಿಕೊಳ್ಳಬೇಕೆಂದೇನೂ ಇಲ್ಲ. ಮೂಲತ ವೈದ್ಯಕೀಯ ವೃತ್ತಿ ಮತ್ತು ಉಧ್ಯಮ ಇದರಲ್ಲಿ ವ್ಯತ್ಯಾಸವಿದೆ ಎಂಬುದನ್ನು ನಾವು ಅರಿಯಲೇ ಬೇಕು. “ರೋಗ ಗುಣಪಡಿಸುವಿಕೆ ಒಂದು ಕಲೆ, ವೈದ್ಯಕೀಯ ಶಿಕ್ಷಣ ಒಂದು ವೃತ್ತಿ, ಆದರೆ ಆರೋಗ್ಯ ರಕ್ಷಣೆ ಒಂದು ಉಧ್ಯಮ ಎಂಬ” ಘೋಷವಾಖ್ಯವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಲೇಬೇಕು.

ವೈದ್ಯಕೀಯ ಶಿಕ್ಷಣ ಸಾಮಾನ್ಯರ ಪಾಲಿಗೆ ಇಂದು ಗಗನ ಕುಸುಮ. ಎಷ್ಟೇ ಪ್ರತಿಭಾನ್ವಿತರಾದರೂ ಸಹ ಪ್ರತಿಭಾ ಸ್ಪರ್ಧೆಯನ್ನು ಎದುರಿಸಿ, ವೈದ್ಯಕೀಯಕ್ಕೆ ಸೀಟು ಪಡೆದು 5 ವರೆ ವರ್ಷಗಳ ಕಠಿಣ ಪರಿಶ್ರಮವೆದುರಿಸಿ ಪಾಸಾಗಿ ಹೊರಬಂದರೆ ಆತನದು ಮುಗಿಯುವುದು ಎಂಬಿಬಿಎಸ್ ಎಂಬ ಸ್ನಾತಕ ಪದವಿ ಮಾತ್ರ. ಇಂದು ಈ ಪದವಿ ಕೇವಲ ಡೊಲೊ 650 ಮಾತ್ರೆ ಬರೆದು ಕೊಡುವುದಕ್ಕೆ ಸೀಮಿತಗೊಳಿಸಿದೆ ಸಮಾಜ.

ಹಾಗಿದ್ದರೆ ಸ್ನಾತಕೋತ್ತರ ಪದವಿ ಪಡೆಯುವುದು ಸುಲಭವೇ ? ಕೊಟ್ಯಾಂತರ ಕೊಟ್ಟು ಸೀಟು ಪಡೆದು ಎಂ ಡಿ ಅಥವಾ ಎಂ ಎಸ್ ಮಾಡಬೇಕು. ಅದರಲ್ಲೂ ಸಹ ಉತ್ತಮ ಶಾಖೆಗಳಲ್ಲಿ ಸ್ನಾತಕ ಪಡವಿ ಪಡೆಯುವುದು ಸುಲಭವೇ? ಜೀವವನ್ನೇ ತೇಯಬೇಕು. ಒಬ್ಬ ವೈದ್ಯ ಎಂ ಡಿ ಅಥವಾ ಎಂ ಎಸ್ ಪದವಿ ಮುಗಿಸಿ ಹೊರಬರಬೇಕಾದರೆ ಕನೀಷ್ಟ 2-3 ಕೋಟಿ ಖರ್ಚು ಮಾಡಬೇಕಾದ ಅನಿವಾರ್ಯತೆ ಇದೆ.

ಸಾಲ ಸೋಲ ಮಾಡಿ ಪದವಿ ಪಡೆದರೆ ಅದರ ಅಸಲು ಮತ್ತು ಬಡ್ಡಿ ತೆರಬೇಕಾಗುವುದು ಪದವಿ ಮುಗಿದ ಕೂಡಲೇ ಪ್ರಾರಂಭವಾಗಿ ಬಿಡುತ್ತದೆ. ಇದಾದ ನಂತರ ಯಾವುದೋ ಕಾರ್ಪೋರೇಟ್ ಆಸ್ಪತ್ರೆಯಲ್ಲಿ ಅವರು ಕೊಟ್ಟ ಸಂಬಳ ಪಡೆದು ಒಂದಿಷ್ಟು ವರ್ಷ ಕೆಲಸ ನಿರ್ವಹಿಸಬೇಕು. ಅಲ್ಲಿ ಎಷ್ಟು ವರ್ಷ ಇರಲಿ ಸಾಧ್ಯ? ಪದವಿ ಮುಗಿಸಿದ ಎಲ್ಲರೂ ಜನಪ್ರಿಯರಾಗಲು ಸಾಧ್ಯವೇ? ಕಷ್ಟಪಡಬೇಕಲ್ಲ? ಒಂದಿಷ್ಟು ಹೆಚ್ಚುಕಮ್ಮಿಯಾದರೂ ಸಹ ಜನರಿಂದ ಬೈಗುಳ, ಹೊಡೆತ, ಗ್ರಾಹಕರ ವೇದಿಕೆಯಿಂದ ಕೋಟ್ಯಾಂತರ ದಂಡ ಎಲ್ಲಾ ಗ್ಯಾರಂಟಿ.

ಇದಾದ ಮೇಲೆ ಡಾ: ಬಿ ಎಂ ಹೆಗಡೆಯರಂತ ಪ್ರಖ್ಯಾತ ಪದ್ಮವಿಭೂಷಣರಿಂದ “ವೈದ್ಯರಾಜ ನಮಸ್ತುಭ್ಯಂ ಯಮರಾಜ ಸಹೋದರ|ಯಮಸ್ತು ಹರತಿ ಪ್ರಾಣಾನ್ ವೈದ್ಯಯೋ ಪ್ರಾಣಾನ್ ಧನಾತಿಚ|” ಅಂದರೆ “ಯಮರಾಜ ಸಹೋದರನಾದ ಓ ವೈದ್ಯರಾಜನೇ, ನಿನಗೆ ನಮಸ್ಕಾರ. ಯಮ ಪ್ರಾಣವನ್ನು ಮಾತ್ರ ಕಿತ್ತುಕೊಳ್ಳುತ್ತಾನೆ. ವೈದ್ಯ ಪ್ರಾಣದೊಂದಿಗೆ ಹಣವನ್ನೂ ಕಿತ್ತುಕೊಳ್ಳುತ್ತಾನೆ” ಎಂಬಂತ ಮಾತು ಕೇಳಿಸಿಕೊಳ್ಳಬೇಕು.

ತಮಗಾದ ಒಂದಿಷ್ಟು ಕಹಿ ಅನುಭವವನ್ನು ಆಧರಿಸಿ ಇಡೀ ಆಧುನಿಕ ವೈದ್ಯಕೀಯ ವಿಜ್ಞಾನ ವ್ಯವಸ್ಥೆಯನ್ನೇ ಅತ್ಯಂತ ಹೀನಾಯವಾಗಿ ತೆಗಳುವ ಜನಕ್ಕೆ ಈ ಶುಭಾಷಿತ ವೇದ ವಾಕ್ಯವೇ ಆಗಿದೆ !.ಇದನ್ನೇ ಹೆಗಡೆಯವರು ಮೇಲಿಂದ ಮೇಲೆ ಉಲ್ಲೇಖಿಸಿ ಸಾರಾಸಗಾಟವಾಗಿ ಇಡೀ ವೈದ್ಯ ಕುಲವನ್ನು ಬಾಯಿಗೆ ಬಂದAತೆ ದೂಷಿಸುವುದು !

ರೋಗಿಗಳನ್ನೇ ದೇವರೆಂದು ತಿಳಿದು ಹಗಲು ರಾತ್ರಿ ಅವರ ಸೇವೆಯನ್ನೇ ಪ್ರಾಣದ ಹಂಗು ತೊರೆದು ದೇವರ ಸೇವೆಯೆಂದು ಮಾಡುವ ವೈದ್ಯರಿಲ್ಲವೇ? ಇವರ ಸಂಖ್ಯೇನು ಕಡಿಮೆಯೇ? ಅವರು ಆಧುನಿಕ ವೈದ್ಯತಿಯನ್ನು ಸಾರಾಸಾಗಾಟಾಗಿ ಪಕ್ಕಾ ದುಡ್ಡು ಮಾಡುವ ದಂಧೆಯೆಂದು ಕರೆಯುವುದು ಅನೇಕರಿಗೆ ಅಪ್ಯಾಯಮಾನವಾಗಿ ಕಂಡು ಬಿಡುತ್ತದೆ. ಆದರೆ ವ್ಯವಸ್ಥೆಯಲ್ಲಿ ಯಾರ ಹತ್ತಿರವೂ ಹೇಳಲಾರದ ಮೂಕವೇದನೆ ಅನುಭಿಸುವ ವೈದ್ಯರು ಅವರ ದು:ಖವನ್ನು ರೋಗಿಗಳ ಸೇವೆ ಮಾಡುವಲ್ಲಿ ಮರೆಯುತ್ತಾರೆ.

ಅವರು ಹೇಳುವುದು ಅರ್ಧ ಸತ್ಯ ಮಾತ್ರ. ನೆನಪಿರಲಿ ! ತಾಂತ್ರಿಕ ಶಬ್ಧಗಳನ್ನು ಸರಳಗೊಳಿಸಿ ಸಾಮಾನ್ಯರಿಗೂ ಅರ್ಥವಾಗುವಂತೆ ತಿಳಿಯಪಡಿಸಿ ಉಳಿದೆಲ್ಲವನ್ನು ಮೂಢನಂಬಿಕೆಯ ಆಸುಪಾಸು ಒಯ್ಯುವುದು ಅವರ ಹವ್ಯಾಸ. ಪದ್ಮಭೂಷಣ, ಖ್ಯಾತ ಹೃದಯ ತಜ್ಜ, ವಿದೇಶದಲ್ಲಿ ಓದಿರುವವರು, ಪ್ರಖ್ಯಾತ ವಿಶ್ವವಿದ್ಯಾಲಯವೊಂದರ ವಿಶ್ರಾಂತ ಕುಲಪತಿಗಳು ಎಂಬೆಲ್ಲಾ ವಿಶೇಷಣಗಳಿರುವುದರಿಂದ ಅವರ ಮಾತಿಗೆ ಬಹಳ ಬೆಲೆ. ಲಕ್ಷಾಂತರ ಅಭಿಮಾನಿಗಳನ್ನು ಮತ್ತು ಆರಾಧಕರನ್ನು ಹೊಂದಿರುವುದು ಇವರ ಹೆಗ್ಗಳಿಕೆ. ಇವರ ಮಾತಿಗೆ ಅದರದೇ ಆದ ತೂಕವಿದೆ !

ಹೆಗಡೆಯಂತಹ ಅತ್ಯಂತ ಗಣ್ಯರು, ಅದೂ ಅವರೇ ಕುಲಪತಿಗಳಾದ ಮಣಿಪಾಲ ಅಕಾಡೆಮಿಯಲ್ಲೇ ಈ ಕ್ಯಾಪಿಟೇಶನ್ ಹಾವಳಿ ತಡೆದು ಬಡವರಿಗೆ ವೈದ್ಯಕೀಯ ಶಿಕ್ಷಣ ದಾನ ಮಾಡಿ ತಾವೇ ದೇಶಕ್ಕೆ ಮಾದರಿಯಾಗಿ ಉಪದೇಶ ಮಾಡಬಹುದಿತ್ತಲ್ಲ? ಎನ್ನುತ್ತಾರೆ ಜನ ಸಾಮಾನ್ಯರು.

ವೈದ್ಯಕೀಯ ವೃತ್ತಿಯನ್ನು ಹಿಗ್ಗಾ ಮುಗ್ಗಾ ಟೀಕಿಸುವ ಭರದಲ್ಲಿ ಹೆಗಡೆಯವರು ಅವರು ಧನದಾಹಿಗಳಾಗಲು ಕಾರಣವಾದ ವೈದ್ಯಕೀಯ ಶಿಕ್ಷಣದ ವ್ಯವಸ್ಥೆಯ ವಾಣಿಜ್ಯೀಕರಣದ ಬಗ್ಗೆ ಒಂದು ಕಾಲದಲ್ಲಿ ಅವರೇ ಅದರ ಭಾಗವಾದದ್ದರ ಬಗ್ಗೆ ಮರೆತು ಜಾಣ ಕುರುಡು ಮತ್ತು ಜಾಣ ಕಿವುಡು ಪ್ರದರ್ಶಿಸುತ್ತಾರೆ !!. ಅದರಲ್ಲೂ ಅವರಿಗೆ ಇದು ನೆನಪು ಬಂದಿದ್ದು ಅವರು ನಿವೃತ್ತರಾದ ಮೇಲೆ ಅಲ್ಲವೇ?

ಪದ್ಮವಿಭೂಷಣದಂತ ಉನ್ನತ ಗೌರವ ಪಡೆದ ಅವರು ಶಿಕ್ಷಣದಲ್ಲಿ ಬೃಹತ್ ಆಗಿ ಆಳವಾಗಿ ಬೇರು ಬಿಟ್ಟಿರುವ ಕ್ಯಾಪಿಟೇಶನ್ ಲಾಬಿಯನ್ನು ತಡೆಯಬಹುದಿತ್ತಲ್ಲ! ವೃತ್ತಿಯಲ್ಲಿದ್ದಾಗ ಯಾರ ವಿರುದ್ಧವೂ ತುಟಿ ಪಿಟಕ್ ಎನ್ನದ ಇವರು ನಿವೃತ್ತಿಯಾದ ಕೂಡಲೇ ವೈದ್ಯಕೀಯ ವೃತ್ತಿಯನ್ನೇ ಹಾಸ್ಯಕ್ಕೀಡು ಮಾಡಿ ಅವರು ಹೆಸರು ಗಳಿಸಲು ಕಾರಣವಾದ ವಿದ್ಯೆಯನ್ನೇ ಹೀಗಳೆಯುವುದು ಇವರ ಜನಪ್ರಿಯತೆಯ ಹಪಹಪಿಕೆ ಮನ್ನಣೆಯ ದಾಹದ ಒಂದು ಮುಖ ಎಂದು ಹೇಳದೇ ಬೇರೆ ದಾರಿಯೇ ಇಲ್ಲ.

ವೈದ್ಯಕೀಯ ಸೇವೆಯಲ್ಲಿದ್ದಾಗ ಚಕಾರ ಶಬ್ಧವೆತ್ತದ ಅವರು ನಿವೃತ್ತಿಯಾದ ಕೂಡಲೇ ಅವರ ವೃತ್ತಿಯನ್ನೇ ನಿಂದಿಸುತ್ತಾ, ಆಧುನಿಕ ವೈದ್ಯಕೀಯ ಪದ್ಧತಿಯ ವೈದ್ಯರನ್ನೆಲ್ಲಾ ಹಣ ಪಿಪಾಸುಗಳು, ರಕ್ತದಾಹಿಗಳು, ಬ್ರಹ್ಮರಾಕ್ಷಸರು, ಕರುಣೆಯಿಲ್ಲದವರು ಎಂದೆಲ್ಲಾ ಬಿಂಬಿಸುತ್ತಾ ಮದುಮೇಹ, ಕೊಲೆಸ್ಟೆರಾಲ್ ಇತ್ಯಾದಿಗಳಿಗೆ ಇರುವ ಔಷಧಗಳೆಲ್ಲಾ ಔಷಧ ಕಂಪನಿಗಳ ಲಾಬಿ ಎಂದೆಲ್ಲಾ ಆಧಾರವಿಲ್ಲದೇ ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಒಂದಿಷ್ಟು ಸೋಜಿಗವೇ ಸರಿ. ಅದರಲ್ಲಿಯೂ ಸಹ ವೈದ್ಯಕೀಯ ವೃತ್ತಿ ಮತ್ತು ವೈದ್ಯಕೀಯ ಉಧ್ಯಮ ಎರಡನ್ನೂ ಸಹ ಪ್ರತ್ಯೇಕವಾಗಿ ನೋಡುವ ಸಾಹಸಕ್ಕೇ ಹೋಗಲಿಲ್ಲ ಹೆಗಡೆಯಂತಹ ಅನೇಕ ಗಣ್ಯರು !!.

ಹಾಗೆಯೇ ಗಿಡಮೂಲಿಕೆ ಔಷಧಿಗಳಲ್ಲಿನ ಲಾಭಕೋರತನ, ಗುಣ ಮಟ್ಟ ಪರೀಕ್ಷೆಯ ಕೊರತೆ, ಸಂಶೋಧನೆಯ ಕೊರತೆ, ಅಜ್ಞಾನ ಇವೆಲ್ಲವೂ ಇವರ ಕಣ್ಣಿಗೆ ಕಾಣುವುದೇ ಇಲ್ಲ..!!. ಕೊಬ್ಬರಿ ಎಣ್ಣೆ ಅತ್ಯಂತ ಲಾಭಕರ, ಅಲೋವಿರಾ ಎಲ್ಲದಕ್ಕೂ ದಿವ್ಯೌಷ್ಯದಿ ಎಂದೆಲ್ಲಾ ಹೇಳುವುದು ಒಂದಿಷ್ಟು ಸತ್ಯಕ್ಕೆ ಸಮೀಪ ಆದರೆ ಇದೆಲ್ಲಾ ಸಂಶೋಧನೆಯ ಮೂಲಕವೇ ಸಾಬೀತಾಗಬೇಕು ಎಂದು ಸಂಶೋಧನೆಯ ಅನುಭವವಿರುವವರಿಗೆ ಗೊತ್ತಿರುವ ಸಂಗತಿ ಈ ಗಣ್ಯಮಾನ್ಯರಿಗೆ ತಿಳಿದಿಲ್ಲವೇ?.

ಕಂಡದ್ದೆನ್ನಾ ಕುರುಡಾಗಿ ನಂಬುವವರಿಗೆ ಅವರ ನಂಬಿಕೆಯನ್ನು ಅತ್ಯಂತ ದೊಡ್ಡ ಹಿನ್ನೆಲೆಯ ವ್ಯಕ್ತಿ ಹೇಳಿದಾಗ ಅಪ್ಯಾಯಮಾನವಾಗಿ ತೋರುವುದರಲ್ಲಿ ಸಂಶಯವಿಲ್ಲ. ಜೀವನ ಶೈಲಿಯ ಬದಲಾವಣೆ, ಉತ್ತಮ ಆಹಾರ ಪದ್ಧತಿ, ಯೋಗದ ಸಾಧನೆ ಎಂಬುದನ್ನೆಲ್ಲಾ ಸಮರ್ಥಿಸುವ ಅವರು ಆಧುನಿಕ ವೈದ್ಯಕೀಯ ವಿಜ್ಞಾನಿಕ ವಿಧಾನವನ್ನು ಟೀಕಿಸುವ ಭರದಲ್ಲಿ ಮೂಢನಂಬಿಕೆಯತ್ತ ಜಾರಿ ಬಿಡುತ್ತಾರೆ. ಭಾಷಣ ಮಾಡುವಾಗ ಬರುವ ಚಪ್ಪಾಳೆಗಳು ಅವರಿಗೆ ಬಹುಶ: ಅತ್ಯಂತ ಖುಷಿ ತಂದಿರಬೇಕು. ಹಾಗೆಂದ ಮಾತ್ರಕ್ಕೆ ಅವರು ಹೇಳಿದ್ದೆಲ್ಲಾ ನಿಜವಲ್ಲ. ಬಹುಷ: ಅವರಿಗೆ ವಯಸ್ಸಾಗಿರುವುದರಿಂದ ವಯೋಸಹಜ ಅರುಮರು ಬಂದಿರಬಹುದು ಎಂದುಕೊಳ್ಳಬೇಕು ಅಷ್ಟೇ!!

ಇವರು ಹೇಳುವಂತೆ ಕಾಯಿಲೆಗಳು ಬರಲು ದ್ವೇಷ ಕಾರಣವಂತೆ! ಇದು ಮನುಷ್ಯರ ಮಟ್ಟಿಗೆ ನಿಜ. ಹಾಗೆಂದರೆ ಯಾರನ್ನೂ ಜೀವನದಲ್ಲೇ ದ್ವೇಷಿಸದ ಗಿಡ, ಮರ, ಪ್ರಾಣಿ, ಪಕ್ಷಿ ಮತ್ತು ಹಸುಗೂಸು, ಬುದ್ಧಿ ಮಾಂಧ್ಯರಿಗೆಲ್ಲಾ ಕಾಯಿಲೆಯೇ ಬರಬಾರದಿತ್ತು. ಅಷ್ಟೇ ಯಾಕೆ ? ನಮಗೆ ಕಾಯಿಲೆ ತರುವ ಬ್ಯಾಕ್ಟೀರಿಯಾ ಮತ್ತು ವೈರಾಣುಗಳಿಗೂ ಸಹ ಕಾಯಿಲೆ ಬರುತ್ತವೆ. ಇವುಗಳಿಗೇ ಕಾಯಿಲೆ ತರುವ ಬೇರೆ ಬ್ಯಾಕ್ಟಿರಿಯಾ ಮತ್ತು ವೈರಸ್‌ಗಳಿವೆ. ಇವು ಯಾರನ್ನು ದ್ವೇಷಿಸಿವೆ?

ಇವರು ಮೇಲಿಂದ ಮೇಲೆ ಹೇಳುವ ಸಂಸ್ಕೃತದ “ವೈದ್ಯರಾಜೋ ನಮಸ್ತುಭ್ಯಂ ಯಮರಾಜ ಸಹೋದರ” ಎಂಬುದು ಅನೇಕರಿಗೆ ಅಪ್ಯಾಯಮಾನ !!. ಇದರಲ್ಲಿ ಇತರ ಎಲ್ಲ ಪದ್ಧತಿಯ ವೈದ್ಯರನ್ನೂ ಅವರು ಜಾಣತನದಿಂದ ಅವರು ಸೇರಿಸುವುದೇ ಇಲ್ಲ. ಅಥವಾ ಅವರ ಪ್ರಕಾರ ಅವರು ವೈದ್ಯರಲ್ಲವೇನೋ?


ಹಾಗಿದ್ದರೆ ಏನಿದು ಮೆಡಿಕಲ್ ಮಾಫಿಯಾ? ವೈದ್ಯಕೀಯ ವೃತ್ತಿ ಮತ್ತು ವೈದ್ಯಕೀಯ ಉಧ್ಯಮಗಳ ನಡುವಿನ ವ್ಯತ್ಯಾಸ ತಿಳಿಯಬೇಕೆ? ಭಾಗ-2 ಓದಲು ಸಿದ್ಧರಾಗಿ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending