ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243