ದಿನದ ಸುದ್ದಿ
ಗೇಮ್ ಚೇಂಜರ್ ಆದ ಲಸಿಕಾಕರಣಕ್ಕೆ ಯೋಜನೆ ರೂಪಿಸಿ ಕೋವಿಡ್ ಮುಕ್ತಗೊಳಿಸುವಲ್ಲಿ ದಾವಣಗೆರೆ ಜಿಲ್ಲೆ ಮಾದರಿಯಾಗಲಿ : ಎಸ್.ಆರ್.ಉಮಾಶಂಕರ್
ಸುದ್ದಿದಿನ,ದಾವಣಗೆರೆ: ಕೋವಿಡ್ ಮುಕ್ತವಾಗಿಸುವ ಹಾದಿಯಲ್ಲಿ ದಾವಣಗೆರೆ ಜಿಲ್ಲೆ ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಜಿಲ್ಲಾ ಮತ್ತು ತಾಲ್ಲೂಕು ತಂಡಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಾಗೂ ಗೇಮ್ ಚೇಂಜರ್ ಎಂದೇ ಪರಿಗಣಿಸಲಾದ ಲಸಿಕಾಕರಣವನ್ನು ಯೋಜಿತ ರೀತಿಯಲ್ಲಿ ಮಾಡಿ ಯಶಸ್ಸು ಸಾಧಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಕಿವಿಮಾತು ಹೇಳಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾ ತಂಡ ಉತ್ತಮವಾಗಿ ತಯಾರಿ ಮಾಡಿಕೊಂಡಿದೆ. ಅದೇ ರೀತಿಯಲ್ಲಿ ತಾಲ್ಲೂಕು ತಂಡಗಳು ಸಹ ತಯಾರಿ ಮಾಡಿಕೊಂಡು ಕೈಜೋಡಿಸಿದಲ್ಲಿ ಜಿಲ್ಲೆ ಕೊರೊನಾ ಮುಕ್ತವಾಗಿ, ಮಾದರಿ ಜಿಲ್ಲೆಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದರು.
ಲಸಿಕೆ – ಗೇಮ್ ಚೇಂಜರ್
ಕೋವಿಡ್ ಲಸಿಕೆ ಗೇಮ್ ಚೇಂಜರ್ ಆಗುವುದರಲ್ಲಿ ಅನುಮಾನವಿಲ್ಲ. ಹೆಚ್ಚೆಚ್ಚು ಲಸಿಕಾಕರಣವಾದಷ್ಟು ಕೊರೊನಾ ಮುಕ್ತರಾಗಲು ಸಾಧ್ಯವಿದೆ. ಆದ ಕಾರಣ ಟಾರ್ಗೆಟೆಡ್ ಸಮುದಾಯಗಳಾದ ಆರೋಗ್ಯ, ಫ್ರಂಟ್ಲೈನ್ ವರ್ಕರ್ಸ್ ಹಾಗೂ ಇ-ಕಾಮರ್ಸ್ ಡೆಲಿವರಿ ಬಾಯ್ಸ್, ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಗಳು ಈ ರೀತಿ ಸೇವಾನಿರತರಿಗೆ ಮೊದಲ ಆದ್ಯತೆಯಲ್ಲಿ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಬೇಕು.
ಈಗ ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿದೆ. ಮುಂದಿನ ದಿನಗಳಲ್ಲಿ ಲಸಿಕೆ ಪೂರೈಕೆ ಸಮರ್ಪಕವಾಗಿ ಆಗುವ ನಿರೀಕ್ಷೆ ಇದ್ದು ಈಗಿನಿಂದಲೇ ಲಸಿಕೆ ಹಾಕುವ ಬಗ್ಗೆ ಯೋಜನೆ ರೂಪಿಸಿಕೊಂಡು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ | ಕಲಾವಿದರಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ
ತಾಲ್ಲೂಕುಗಳ ತಹಶೀಲ್ದಾರರು, ಇಓ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಮತ್ತು ನಗರ ಭಾಗದಲ್ಲಿ ಟಾಸ್ಕ್ಫೋರ್ಸ್ ತಂಡಗಳನ್ನು ಚುರುಕುಗೊಳಿಸಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಗೊಳಿಸಬೇಕು. ಹೊನ್ನಾಳಿ ಸೇರಿದಂತೆ ಇತರೆ ತಾಲ್ಲೂಕುಗಳಲ್ಲಿ ಶಾಸಕರು ಮತ್ತು ಜನಪ್ರತಿನಿಧಿಗಳ ಸಹಕಾರ ಉತ್ತಮವಾಗಿದೆ. ಆದರೆ ಕೋವಿಡ್ ನಿಯಮಾವಳಿ ಪ್ರಕಾರವೇ ರೋಗಿಗಳನ್ನು ಉಪಚರಿಸಬೇಕು ಎಂದು ಸೂಚನೆ ನೀಡಿದರು.
ಹೋಂ ಐಸೊಲೇಷನ್ ಸೂಕ್ತವಲ್ಲ
ಗ್ರಾಮೀಣ ಪ್ರದೇಶಗಳಲ್ಲಿ ಕ್ಷಿಪ್ರಗತಿಯಲ್ಲಿ ಸೋಂಕು ಹರಡುತ್ತಿದೆ. ಅವರು ಹೋಂ ಐಸೊಲೇಷನ್ ನಿಯಮಗಳನ್ನು ಪಾಲಿಸದೇ ಇಡೀ ಮನೆ ಮತ್ತು ಸುತ್ತಮುತ್ತಲಿನವರಿಗೆ ಹರಡುತ್ತಿದ್ದಾರೆ. ಆದ ಕಾರಣ ತಹಶೀಲ್ದಾರ್, ಇಓ ಸೇರಿದಂತೆ ತಾಲ್ಲೂಕು ತಂಡ ಪಾಸಿಟಿವ್ ಇರುವವರ ಮನೆಗಳಿಗೆ ತೆರಳಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಬೇಕು ಎಂದು ಸೂಚನೆ ನೀಡಿದ ಅವರು ನಗರ ಪ್ರದೇಶದ ಎಲ್ಲ ಸೌಕರ್ಯ ಇರುವ ಮನೆಗಳಲ್ಲೂ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಸಿಸಿ ಗೆ ದಾಖಲಿಸಲು ಸೂಚನೆ ನೀಡಿದರು.
ಅನುಕೂಲ ಇರುವವರಿಗೆ ಖಾಸಗಿ ಆಸ್ಪತ್ರೆಗಳು ಲಾಡ್ಜ್ನಲ್ಲಿ ಕೋವಿಡ್ ಆರೈಕೆ ವ್ಯವಸ್ಥೆ ಮಾಡಬಹುದು. ಈ ನಿಟ್ಟಿನಲ್ಲಿ ಚಿಂತಿಸಿದರೆ ಕೋವಿಡ್ ಇಳಿಮುಖ ಆಗುವ ಸಾಧ್ಯತೆ ಇದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ದಾವಣಗೆರೆ ನಗರ ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲಿ ಇನ್ನು ಎರಡು ವಾರಗಳಲ್ಲಿ ಕೋವಿಡ್ ಸಂಪೂರ್ಣ ಇಳಿಮುಖಗೊಳಿಸಲು ತಹಶೀಲ್ದಾರರು ಮತ್ತು ಇತರ ಅಧಿಕಾರಿಗಳು ಏನೆಲ್ಲಾ ಕ್ರಮ ಕೈಗೊಂಡಿದ್ದಾರೆಂಬ ಬಗ್ಗೆ ಪರಿಶೀಲನೆ ನಡೆಸಿದ ಅವರು ತಾಲ್ಲೂಕುಗಳಲ್ಲಿ ಸಕ್ರಿಯ ಪ್ರಕರಣಗಳು ಇಲ್ಲದ ಗ್ರಾಮಗಳನ್ನು ಸಂರಕ್ಷಿಸುವ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಹಾಗೂ ದಿನೇ ದಿನೇ ಕೋವಿಡ್ ಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಗ್ರಾಮಸ್ಥರಾದಿಯಾಗಿ ಎಲ್ಲರೂ ಶ್ರಮಿಸಬೇಕು.
ಮನುಕುಲಕ್ಕೇ ಸವಾಲಾಗಿರುವ ಈ ಕೋವಿಡ್ನಿಂದ ಆಚೆ ಬರಬೇಕಿದೆ. ಎಲ್ಲರೂ ಪರಿಶ್ರಮದಿಂದ ಪ್ರಾಮಾಣಿಕ ಪ್ರಯತ್ನ ಮಾಡಿ, ನಿತ್ಯ ಅನುಸರಣೆ ಮಾಡಿ ಕೋವಿಡ್ನಿಂದ ಹೊರಬರಲು ಕ್ರಮಗಳನ್ನು ಕೈಗೊಳ್ಳಬೇಕೆಂದರು.
ಅಲ್ಪಕಾಲ ಮದುವೆ ನಿಷೇಧದ ಚಿಂತನೆ
ಮಾರ್ಗಸೂಚಿಗಳಾಚೆ ಮದುವೆಗಳು ಸೋಂಕು ಹರಡುವಿಕೆಗೆ ಕಾರಣವಾಗಿವೆ. ಈಗಾಗಲೇ ನಿಗದಿಯಾದ, ನಡೆಯುತ್ತಿರುವ ಮದುವೆಗಳನ್ನು ನಿಲ್ಲಿಸುವುದು ಕಷ್ಟ. ಆದ ಕಾರಣ ಜೂನ್ 5 ರ ನಂತರ 15 ದಿನಗಳ ಕಾಲ ಮದುವೆಗಳನ್ನು ನಿಷೇಧ ಮಾಡಿದಲ್ಲಿ ಸೋಂಕು ನಿಯಂತ್ರಣಕ್ಕೆ ತರಬಹುದೆಂಬ ಬಗ್ಗೆ ತಹಶೀಲ್ದಾರರ ಸಲಹೆ ಪಡೆದ ಅವರು ಜಿಲ್ಲಾಧಿಕಾರಿಗಳು ಈ ಬಗ್ಗೆ ಚಿಂತನೆ ನಡೆಸುವಂತೆ ಸೂಚಿಸಿದರು.
ವಾರದಲ್ಲಿ ಮೂರು ದಿನ ಸಂಪೂರ್ಣ ಬಂದ್ ಚಿಂತನೆ
ವಾರದಲ್ಲಿ 2 ರಿಂದ 3 ದಿನ ಬೆಳಿಗ್ಗೆ 6 ರಿಂದ 12 ಗಂಟೆವರೆಗೆ ದಿನಸಿ, ತರಕಾರಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಇನ್ನುಳಿದ ದಿನಗಳಂದು ಹಾಲು ಒಂದನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡುವ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಚಿಂತನೆ ನಡೆಸುವಂತೆ ತಿಳಿಸಲಾಗಿದೆ ಎಂದರು.
ದಾವಣಗೆರೆ ನಗರದಲ್ಲೂ ಹೆಚ್ಚು ಪ್ರಕರಣಗಳು ಇದ್ದು, ಸೋಂಕು ತಗ್ಗಿಸಲು ಕೋವಿಡ್ ಕೇರ್ ಸೆಂಟರ್ಗಳ ಬಳಕೆ ಹೆಚ್ಚಿಸಬೇಕು. ಇನ್ನು ಮುಂದೆ ಸೋಂಕು ಹೆಚ್ಚು ಹರಡದಂತೆ ಕ್ರಮ ವಹಿಸಬೇಕು. ಶೀಘ್ರ ಪರೀಕ್ಷೆ ಮತ್ತು ಚಿಕಿತ್ಸೆ ಹಾಗೂ ಹರಡದಂತೆ ಸಿಸಿಸಿ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು.
ಟಾರ್ಗೆಟೆಡ್ ಗುಂಪಿಗೆ ಲಸಿಕಾಕರಣದ ಯೋಜನೆ ಮಾಡಿಕೊಂಡು ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸುವಲ್ಲಿ ಪರಿಣಾಮಕಾರಿ ಕ್ರಮ ವಹಿಸಬೇಕೆಂದು ತಿಳಿಸಿದರು. ಜಿಲ್ಲಾ ತಂಡ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಇದೇ ರೀತಿ ತಾಲ್ಲೂಕು ಮಟ್ಟ ಹಾಗೂ ಗ್ರಾಮೀಣ ಮಟ್ಟದಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಕೋವಿಡ್ನ್ನು ಜಯಿಸಬೇಕೆಂದು ಸಲಹೆ, ಸೂಚನೆಗಳನ್ನು ನೀಡಿದರು.
ಕೋವಿಡ್ ಪಾಸಿಟಿವ್ ಇರುವವರ ಮನೆ ಮುಂದೆ ಪೋಸ್ಟರ್ ಅಂಟಿಸಿ
ಮುಂದಿನ ಎರಡು ವಾರಗಳ ಕಾಲ ಗಂಭೀರವಾಗಿ ಪರಿಶ್ರಮ ಪಟ್ಟು ಕೋವಿಡ್ ನಿಯಂತ್ರಿಸಲು ಯತ್ನಿಸಿದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ. ಆದ ಕಾರಣ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ಡೌನ್ ಮಾಡಬಹುದು ಅಥವಾ ದೊಡ್ಡದಾಗಿ ಪೋಸ್ಟರ್ ಅಂಟಿಸುವ ಕೆಲಸ ಆಗಬೇಕು. ಆಗ ಅವರಿಂದ ಇತರರಿಗೆ ಸೋಂಕು ಹರಡುವುದು ತಪ್ಪುತ್ತದೆ.
ಯಾರೂ ಕೂಡ ಕೋವಿಡ್ ಸೋಂಕಿನ ಕುರಿತು ವೈಯಕ್ತಿಕ ನಿರ್ಧಾರ ಕೈಗೊಳ್ಳುವುದು ಬೇಡ. ಸೋಂಕಿತರು, ಅವರ ಸಂಪರ್ಕಿತರು, ಎಸ್ಎಆರ್ಐ ಮತ್ತು ಐಎಲ್ಐ ಲಕ್ಷಣ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಿಸಿ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಇರಿಸಿ ಚಿಕಿತ್ಸೆ ನೀಡಬೇಕು.
| ಎಸ್.ಆರ್.ಉಮಾಶಂಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಕ್ಸಿಜನ್ ಮತ್ತು ಬೆಡ್ ಕೊರತೆ ಇಲ್ಲ. ಹೋಂ ಐಸೊಲೇಷನ್ ಬದಲಾಗಿ ಕೋವಿಡ್ ಕೇರ್ ಸೆಂಟರ್ಗೆ ಬರಲು ಮನವೊಲಿಸಿ ಕರೆತರಲಾಗುತ್ತಿದೆ. ಇನ್ನೂ ಹೆಚ್ಚಿನ ಶ್ರಮ ವಹಿಸಿ ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ಬಿ.ದಾನಮ್ಮನವರ್, ಎಡಿಸಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್ಎಲ್ಓ ರೇಷ್ಮಾ ಹಾನಗಲ್ ಡಿಹೆಚ್ಓ ಡಾ.ನಾಗರಾಜ್, ಡಿಎಸ್ ಡಾ.ಜಯಪ್ರಕಾಶ್, ಆರ್ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

