ಭಾವ ಭೈರಾಗಿ
ಕವಿತೆ | ನಿನ್ನ ಮಗನ ಕೊಂದರು…
- ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ
“ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು
ಹೋರಾಟದ ಜೀವಿ ಒಡನಾಡಿ ಬಂಧುವನ್ನು
ನಿನ್ನ ಮಗನ ಕೊಂದರು.
ಅವನಂಥ ಮೈಕೈಗಳು ಕಟ್ಟಿದಂಥ ಗ್ವಾಡೆ ತಾವು
ಬಿಸಿಲೇರದ ಬೆಳಗಿನಲ್ಲಿ ನಿನ್ನ ಮಗನ ಕೊಂದರು
ಬೆವರ ಬಸಿದ ಅವನ ಎದೆಗೆ ಗುರಿಯಿಟ್ಟರು
ಗುಂಡಿಕ್ಕಿದರು.
ಗುಂಡೊಂದು ಕಾಣಲಿಲ್ಲ ಕೊಲೆಗಡುಕರ ಕೆಲಸವೆಲ್ಲ
ಸತ್ತ ಮಗನ ಕಣ್ಣಿನಲ್ಲಿ ಮಿಂಚಿಮಾಯವಾಯಿತು
ಹೊರಗಿನವರು ಕೊಲ್ಲಲಿಲ್ಲ ಎಲ್ಲ ಇವನ ಬಂಧುಬಳಗ
ನೆರೆಹೊರೆಯವರು
ಸುತ್ತಿದಂಥ ಸರಪಳಿಯಲಿ ಧರಧರಧರ ಎಳೆಯುವಾಗ
ಕ್ರಾಂತಿವೀರರೆಲ್ಲ ಬಂದು ಮುತ್ತಿಕೊಂಡರು.
ಗಿಟುಕಾಸಿದ ಗಿರಣಿಗಳು ಚಿಮಣಿ ಹೊತ್ತು ನಿಂತಿದ್ದೊ
ಅವನ ಕಾಲ ಮಿಂಚಿತ್ತು ಹೊಳೆಯಿತೇನೊ ಮನಸಿಗೆ
ಶೂನ್ಯವಾದ ಗಿರಣಿಗಳಲಿ ದಿನದಿನಕ್ಕೂ ಬೆಳೆಯುವಂಥ
ಬೆಟ್ಟದಂಥ ಶಕ್ತಿಯೊಂದು ಕಂಡಿತವನ ಕಣ್ಣಿಗೆ
ತೊಟ್ಟಿಕ್ಕಿತು ಕಣ್ಣೀರು ಹೋದನವನು ಮಣ್ಣಿಗೆ
ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು
ಹೋರಾಟದ ಜೀವಿಯನ್ನು ಒಡನಾಡಿ ಬಂಧುವನ್ನು
ನಿನ್ನ ಮಗನ ಕೊಂದರು.”
ಸುದ್ದಿದಿನ|ವಾಟ್ಸಾಪ್|9980346243