ಅಂಕಣ
ಕವಿತೆ | ಇಷ್ಟಂತೂ ಹೇಳಬಲ್ಲೆ..!

- ರಂಗಮ್ಮ ಹೊದೇಕಲ್, ತುಮಕೂರು
ನಾವು
ಗುಡಿಸಲಿನಲ್ಲಿ ಹುಟ್ಟಿ
ಅವ್ವನೆದೆಯ ಹಾಲು ಕುಡಿದು
ಗೋಣಿತಾಟಿನ ಮೇಲೆ ಮಲಗಿ
ನಕ್ಷತ್ರ ಎಣಿಸಿದವರು!
ಚೀಕಲು ರಾಗಿಯ ಅಂಬಲಿ ಕುಡಿದು
ತಂಗಳು ಹಿಟ್ಟಿಗೆ ಉಪ್ಪು ಸವರಿ
ಹಸಿವ ನೀಗಿಸಿಕೊಂಡವರು
ದಾಹಕ್ಕೆ ಕಣ್ಣೀರನ್ನೇ ಕುಡಿದವರು!
ದಾಸಯ್ಯನಂತಹ ಅಪ್ಪ
ಭೂಮ್ತಾಯಿಯಂತಹ ಅವ್ವ
ಎದೆಗಿಳಿಸಿದ್ದು
ಅಕ್ಷರ ಮತ್ತು ಅಂತಃಕರಣ!
ಯಾರು ಯಾರೋ ಕೊಟ್ಟ
ಹರಿದ ಚೀಲ,ಮುರುಕು ಸ್ಲೇಟು
ತುಂಡು ಬಳಪ,ಬಳಸಿ ಎಸೆದ ಬಟ್ಟೆ
ನಮ್ಮ ಪ್ರಿಯವಾದ ಆಸ್ತಿಗಳು!
ಬುಡ್ಡಿದೀಪದ ಬೆಳಕಿನಲ್ಲಿ
ಅಕ್ಷರಗಳ ಜೊತೆ ಆಡಿದ ನಾವು
ಯಾರದೋ ಸಂಭ್ರಮದಲ್ಲಿ
ಉಳಿದ ಅನ್ನಕ್ಕೆ ಕಾದಿದ್ದು
ಇನ್ನೂ ಹಸಿಯಾಗಿದೆ!
ಯಾರದೋ ಜಮೀನಿಗೆ
ಬೆವರು ಬಸಿದ
ಅಪ್ಪ ಅವ್ವ
ಅರ್ಧ ಉಂಡು ಕಣ್ಣೀರಾದದ್ದೂ
ನೆನಪಿದೆ!
ಅಂದೂ ನಾವು
ಶಾಪವಾಗಲಿಲ್ಲ
ಕೇಡನ್ನೂ ಹಾಡಲಿಲ್ಲ!
ಉಪ್ಪಿಟ್ಟಿನಿಂದ ಅನ್ನಕ್ಕೆ ಬದಲಾದ
ಈ ಯುಗದಲ್ಲಿಯೂ
ನೀವು ನಿಮಗೆ ಪರಂಪರೆಯಿಂದ ಬಂದಿರುವ ಆಸ್ತಿ,ಅಂತಸ್ತು
ಸೇವಕರು…ಇತ್ಯಾದಿತ್ಯಾದಿಗಳನ್ನು
ಪ್ರದರ್ಶಿಸುತ್ತಲೇ ಇದ್ದೀರಿ!
ಸಹ್ಯವಾಗದ ಅಸ್ತ್ರಗಳನ್ನೇ
ನೀವು ಮಸೆಯುವಾಗ
ನಿಮ್ಮ ಅಜ್ಞಾನಕ್ಕೂ ನಮ್ಮ ಅನುಕಂಪವಿದೆ!
ನಾವು ಈ ನೆಲದ ಮಕ್ಕಳು
ಬೆಂಕಿಯೂ.ಬೆಳಕೂ ಆಗಬಲ್ಲ ಕಿಡಿಗಳು
ಭದ್ರ ಬೇರೂರಿ ಆಕಾಶಕ್ಕೆ ಚಿಮ್ಮಿ
ನಿಮ್ಮ ಕಣ್ಣಲ್ಲೂ ಮತಾಪು ಹೊತ್ತಿಸಬಲ್ಲವರು!! (ರಂಗಮ್ಮ ಹೊದೇಕಲ್, ತುಮಕೂರು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಚಳಿಗಾಲದ ಎರಡು ಜೀವರಸಗಳು

- ಜಿ. ದೇವೂ ಮಾಕೊಂಡ
ನಮ್ಮಿಬ್ಬರ ಸಂಗಮಕ್ಕೆ ಈ ಚಳಿಗಾಲ
ಎಷ್ಟೊಂದು ನಿಶಬ್ದವಾಗಿ ಕರೆಯುತ್ತಿದೆ
ಒಂದು ಕಡೆ ಕಾಫಿಯ ಸ್ವಾಗತ
ಮತ್ತೊಂದು ಕಡೆ ಮುತ್ತಿನ ಸೆಳೆತ.
ಯಾವುದು ಆರಿಸಿಕೊಳ್ಳಲಿ
ಈ ನಿಶಬ್ಧ ಚಳಿಯಲಿ?
ಕಾಫಿಯ ಇಚ್ಚೆಯನ್ನೊ?
ಮುತ್ತಿನ ಬಿಸಿಯನ್ನೊ?
ಇಷ್ಟೊಂದು ಚಡಪಡಿಕೆಯಿರಬಾರದು
ಇಚ್ಚೆಯ ಸಂಚಯನಗಳಲ್ಲಿ!
ನಮ್ಮ ಆರಂಭದ ಭೇಟಿಗೆ,
ಒಂದರ ನೆನಪಿಗೆ ಇನ್ನೊಂದು
ಸುಂಕವಾಗಲಿ
‘ಬೈ ವನ್ ಗೆಟ್ ವನ್ ಫ್ರಿ’
ಚಳಿಗಾಲದ ಜಾಹಿರಾತು ಆಫರ್.
ಕೊನೆಗೊಂದು ದಿನ ಕುರುಹುಗಳಂತೆ ನೆನಪಿಸಿಕೊಳ್ಳೊಣ
ಇದು ಆರಂಭವೊ ಅಥವ
ಅಂತ್ಯವಾಗುವುದೊ?
ಯಾರಿಗ್ಗೊತ್ತು?
ಈ ಕಾಫಿ
ಈ ಮುತ್ತು
ಯುದ್ದೋನ್ಮಾದದ ಸಂಕೇತಗಳಾ?
ಅಥವ
ಕೊನೆಯ ಯುದ್ದದ
ಕರಾರುಗಳಾ?
ನೆನಪಿಗೆ ಒಂದೊಂದು ಸೆಲ್ಫಿ ಇರಲಿ
ಜೊತೆಗೊಂದಿಷ್ಟು ಭಿನ್ನ ನಗುವಿರಲಿ.. (ಕವಿ: ಜಿ.ದೇವೂ ಮಾಕೊಂಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ನಟಿಸುತ್ತೇನೆ ಈ ಚಿತ್ರಶಾಲೆಯಲ್ಲಿ

- ಉದಯ್ ಕುಮಾರ್. ಎಂ, ಬಸವನತ್ತೂರು-ಕೊಡಗು
ದುಗುಡದ ದನಿಗಳೆಲ್ಲ
ಹುದುಗಿ ಹೋಗಲಿ
ನನ್ನೊಳಗೆ
ದುಃಖದ ನದಿಗಳೆಲ್ಲ
ಹಾದು ಹೋಗಲಿ..
ನಾನು ಕೂಡ ನಿನ್ನಂತೆ
ನಗೆಯ ನಟಿಸುತ್ತೇನೆ..
ನಿರಾಕಾರ ಕ್ಯಾನ್ವಾಸಿನ ಮೇಲೆ
ಬೇಕಾದ್ದನ್ನು ಗೀಚಿಕೊಳ್ಳುತ್ತೇನೆ
ಒಮ್ಮೊಮ್ಮೆ ಬೇಡದ್ದೂ..
ಯಾರ್ಯಾರದ್ದೊ ಇಷ್ಟಾನಿಷ್ಟದಂತೆ!
ಗತದ ಘೋರ ಪಾತಕವನ್ನು
ತರಚು ಗಾಯವೆಂದು ಕರೆದು,
ಹೋದಲ್ಲಿ, ಬಂದಲ್ಲಿ
ಅದನ್ನೇ ಜಪಿಸಿ ತಳವೂರುತ್ತೇನೆ…
ಹುಸಿ ನೆಮ್ಮದಿಯ ನಿಟ್ಟುಸಿರ
ಹೊರಸೂಸಿ..
ಅತ್ಯಾಸೆಯ ರೆಕ್ಕೆಗಳ
ಮುರಿದುಕೊಳ್ಳುತ್ತೇನೆ
ದಿಗಂತದೆಡೆಗೆ ಹಾರುವ
ಕನಸುಗಳ ಸುಟ್ಟು,
ಅದರ ಬೂದಿಯನ್ನೆ
ವಿಭೂತಿಯಾಗಿ ಬಳಿದು,
ವೈರಾಗ್ಯದ
ಮಾತುಗಳನುದುರಿಸುತ್ತಾ..
ಸುತ್ತಲಿನ ಸತ್ತ ಮೆದುಳುಗಳೊಳಗೆ ನಿರಾಕಾರವಾದವುಗಳೆನೇನೋ ಮೊಳೆತು,
ಬೇರು ಬಿಟ್ಟು, ಆಳಕ್ಕಿಳಿದು
ಕೈಕೊಡಲಿಗಳಾಗಿ
ಕತ್ತು ಕತ್ತರಿಸುವ ಫರ್ಮಾನು
ಹೊರಡಿಸುವಾಗಲೂ
ನಿಶ್ಚಿಂತೆಯ ನಟಿಸುತ್ತೇನೆ!
ಮಹನೀಯನ ಚಿತ್ರಗಳು
ಬೇಕಾದಂತೆ ಬರೆಯಲ್ಪಡುವ,
ಬಿಕರಿಯಾಗುವ, ಚಿತ್ರಶಾಲೆಯಲ್ಲಿ;
ಜೀ..ಹುಜೂರ್..ಉಸುರುತ್ತಾ,
ನಿಂತ ಮೂಢರ ಗುಂಪುಗಳೊಳಗೆ
ಕಾಲ ಸವೆಸುತ್ತೇನೆ. (ಕವಿ:ಉದಯ್ ಕುಮಾರ್. ಎಂ, ಬಸವನತ್ತೂರು-ಕೊಡಗು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.
ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.
ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.
ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.
ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.
ವಸ್ತು ಪ್ರದರ್ಶನ
ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.
ದೇಸೀ ಆಟಗಳು
ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.
ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ಉತ್ಸವ’-2025.
| ಡಾ.ಬಿ.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

-
ದಿನದ ಸುದ್ದಿ7 days ago
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ | ಕೇಂದ್ರ ಕೊಡದಿದ್ದರೂ ರಾಜ್ಯ ಸರ್ಕಾರ ನೀಡಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
-
ದಿನದ ಸುದ್ದಿ6 days ago
ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ
-
ದಿನದ ಸುದ್ದಿ7 days ago
ದಾವಣಗೆರೆ | ಮಕ್ಕಳ ಬೇಸಿಗೆ ರಜೆಗೆ ಶುಭ ಕೋರಿದ ತಿಂಗಳ ಅಂಗಳ
-
ದಿನದ ಸುದ್ದಿ6 days ago
ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ
-
ದಿನದ ಸುದ್ದಿ6 days ago
ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು
-
ದಿನದ ಸುದ್ದಿ5 days ago
ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
-
ದಿನದ ಸುದ್ದಿ6 days ago
ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್
-
ದಿನದ ಸುದ್ದಿ6 days ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’