Connect with us

ದಿನದ ಸುದ್ದಿ

ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ

Published

on

ಕವಿ ಆನಂದ ಲಕ್ಕೂರು
  • ಉದಯ ಇಟಗಿ, ಪ್ರಾಂಶಯಪಾಲರು, ಡಿವಿಎಸ್ ಪದವಿ ಪೂರ್ವ ಕಾಲೇಜು, ಭರಮಸಾಗರ, ಚಿತ್ರದುರ್ಗ

ಆನಂದ ಲಕ್ಕೂರು ಇನ್ನಿಲ್ಲವೆಂಬ ಸುದ್ದಿ ಬಂದಿದೆ. ಈ ಸುದ್ದಿ ಸುಳ್ಳಾಗಲಿ ಎಂದು ಆಶಿಸುತ್ತಲೇ ನಾನಿದನ್ನು ಬೇರೆಯವರ ಹತ್ತಿರ ಇದು ನಿಜವೇ ಎಂದು ಖಾತ್ರಿಪಡಿಸಿಕೊಂಡ ಮೇಲೆ ಇದನ್ನು ವಿಷಾದದಿಂದ ಬರೆಯುತ್ತಿದ್ದೇನೆ.

ನಿಜ ಹೇಳಬೇಕೆಂದರೆ ನನಗೆ ಆನಂದ ಯಾರೂ ಎಂದು ಸರಿಯಾಗಿ ಗೊತ್ತಿರಲಿಲ್ಲ. ಒಂದು ಸಾರಿ ಅವರ “ಒಂದು ಕಪ್ ಕಾಫಿ” ಕವನವನ್ನು ಯಾರೋ ಫೇಸ್ಬ್ಕುಕ್‍ನಲ್ಲಿ ಹಾಕಿದ್ದರು. ನಾನಾಗ ಲಿಬಿಯಾದಲ್ಲಿದ್ದೆ. ನನಗೆ ಆ ಕವನವನ್ನು ಓದಿದ ತಕ್ಷಣ ತುಂಬಾ ಇಷ್ಟವಾಗಿ ಇಂಗ್ಲೀಷಿಗೆ ಅನುವಾದಿಸಿದ್ದೆ. ಆಮೇಲೆ ನಾನದನ್ನು ಮರೆತೂಬಿಟ್ಟಿದ್ದೆ. ಇಬ್ಬರು ಪ್ರೇಮಿಗಳು ಇಷ್ಟು ಚನ್ನಾಗಿ ವಿದಾಯ ಹೇಳಬಹುದೆ? ಎಂದು ಬೆರಗು ಮೂಡಿಸಿದ ಕವನವದು. ಹಾಗಾಗಿ ನಾನದನ್ನು ಇಂಗ್ಲಿಶಷಿಗೆ ತಕ್ಷಣ ಅನುವಾದಿಸಿದ್ದೆ.

ನಾನು ಮರಳಿ ಇಂಡಿಯಾಗೆ ಬಂದ ಮೇಲೆ ಗೊರವರ ಅವರ ಸಂಗಾತದ ಒಂದು ಸಂಚಿಕೆಗೆ ನಾನು ಒಂದಿಷ್ಟು ಅಸ್ಸಾಮಿ ಕವನಗಳನ್ನುಅನುವಾದಿಸಿಕೊಟ್ಟಿದ್ದೆ. ಅದು ಪ್ರಿಂಟಾಗಿ ಹೆಚ್ಚುಕಮ್ಮಿ ಎಂಟು ತಿಂಗಳ ನಂತರ ಅಲ್ಲಿ ನನ್ನ ಫೋನ್ ನಂಬರ್ ತೆಗೆದುಕೊಂಡು ತಮ್ಮ ಪರಿಚಯ ಮಾಡಿಕೊಂಡು ದಿನವೂ ಮಾತನಾಡಲು ಶುರುಮಾಡಿದರು. ನನಗೆ ಬರುಬರುತ್ತಾ ದಿನವೂ ಮಾತನಾಡುವಂಥದ್ದು ಏನಿದೆ ಎಂದು ರೇಜಿಗೆ ಎನಿಸಿದರೂ ಅವಾಯ್ಡ್ ಮಾಡಲಿಲ್ಲ.

ಅವರು ನನ್ನೊಂದಿಗೆ ಮಾತ್ರವಲ್ಲ ಅನೇಕ ಬರಹಗಾರರ ಜೊತೆ ಹೀಗೆ ಮಾತನಾಡುತ್ತಿದ್ದರು ಎಂದು ಆಮೇಲೆ ಗೊತ್ತಾಯಿತು. ಮುಂದೆ ಅವರು ಕುವೆಂಪು ಭಾಷಾ ಭಾರತಿಯಿಂದ ನನ್ನ ಅಸ್ಸಾಮಿ ಅನುವಾದಿತ ಕವನಗಳು ಹೊರಬರಲು ಪರೋಕ್ಷವಾಗಿ ಕಾರಣರಾದರು. ಮುಂದೆ ಅವರು ಒಂದು ಇಂಗ್ಲೀಷ್ ಕಾದಂಬರಿಯನ್ನು ಅನುವಾದಿಸಿದಾಗ ಅವರ ಕೋರಿಕೆಯ ಮೇರೆಗೆ ಮುನ್ನುಡಿ ಬರೆದುಕೊಟ್ಟಿದ್ದೆ.

ಆನಂದ ಬಗ್ಗೆ ಸಾಹಿತ್ಯ ವಲಯದಲ್ಲಿ ಗುಸುಗುಸು ಸುದ್ದಿಗಳು ಹರಿದಾಡುತ್ತಲೇ ಇದ್ದರೂ ಸಾಕ್ಷಿ ಸಮೇತ ಅವರು ನನ್ನ ಕೈಲಿ ಸಿಕ್ಕಿಹಾಕಿಕೊಂಡಿರಲಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಜೊತೆಗೆ ಸಾಹಿತ್ಯ ವಲಯದಲ್ಲಿ ಆನಂದ ಲಕ್ಕೂರು ಅವರ ಒಡನಾಟದಲ್ಲಿದ್ದವರೆಲ್ಲಾ ಕೃತಿಚೌರ್ಯ ಮಾಡುವವರು ಎನ್ನುವ ಅಲಿಖಿತ ನಿಯಮವೊಂದು ಜಾರಿಯಲ್ಲಿದ್ದಿದುರಿಂದ ಬಹಳಷ್ಟು ಜನ ಅವರ ಒಡನಾಟವನ್ನು ಇಷ್ಟಪಡುತ್ತಿರಲಿಲ್ಲ. ಆನಂದ ಒಬ್ಬ ಭಾವನಾ ಜೀವಿ. ಆದರೆ ಅಶಿಸ್ತಿನ ಮನುಷ್ಯ. ಬಹಳಷ್ಟು ಜನ ಹುಶಾರಾಗಿರಿ. ಅವರು ಯಾವಾಗ ಬೇಕಾದರೂ ದುಡ್ದು ಕೇಳಬಹುದು ಎಂದಿದ್ದರು. ಆದರೆ ಆನಂದ ಯಾವತ್ತೂ ನನ್ನನ್ನು ಒಂದು ಪೈಸೆಯೂ ಕೇಳದೆ ಪ್ರಾಮಾಣಿಕತೆಯನ್ನು ಮೆರೆದ ಮನುಷ್ಯ.

ಆದರೆ ತೀರಾ ಇತ್ತೀಚಿಗೆ ಅವರು ಒಂದು ಸ್ಥಿರವಾದ ಉದ್ಯೋಗವನ್ನು ಹೊಂದಿಲ್ಲದ ಮನುಷ್ಯ ಎನ್ನುವದು ಗೊತ್ತಾಯ್ತು. ಕುಡಿತದಿಂದ ಅವರ ಆರೋಗ್ಯ ಹದೆಗೆಟ್ಟಿದೆ ಎನ್ನುವದು ಕೂಡಾ ಗೊತ್ತಾಯಿತು. ಈಗ್ಗೆ ಒಂದು ತಿಂಗಳ ಹಿಂದೆ ನನಗೆ ಫೋನ್ ಮಾಡಿ ನಾನೀಗ ಗುಲ್ಬರ್ಗಾದಲ್ಲಿ ಪಿ.ಎಚ್ಡಿ. ಮಾಡುತ್ತಿರುವೆ ನನಗೆ ಸ್ಟೈಫಂಡ್ ಬರುತ್ತಿದೆ ಖುಷಿಯಾಗಿದ್ದೇನೆ ಎಂದು ಹೇಳಿದರು. ನಾನು ಹಾಗೆ ಖುಷಿಯಾಗಿ ಇರಿ ಎಂದು ಹರಿಸಿದ್ದೆ. ಈಗ ನೋಡಿದರೆ ಅವರು ಬಾರದ ಲೋಕಕ್ಕೆ ಹೊರಟುಹೋಗಿದ್ದಾರೆ. ಹೋಗಿ ಬಾ ಗೆಳೆಯ. ನಿನ್ನ ಕವನಗಳು ನಮ್ಮ ಮನದಲ್ಲಿ ಸದಾ ಹಸಿರಾಗಿರುತ್ತವೆ.

ನಾನು ಹಿಂದೆ ಇಂಗ್ಲೀಷಿಗೆ ಅನುವಾದಿಸಿದ ಅವರ ಒಂದು ಕವನವನ್ನು ಇಲ್ಲಿ ಹಾಕುವದರ ಮೂಲಕ ಅವರಿಗೆ ನುಡಿನಮನವನ್ನು ಸಲ್ಲಿಸುತ್ತಿದ್ದೇನೆ. ನಾನು ದೆಹಲಿಯಿಂದ ವಾಪಾಸಾಗುತ್ತಿರುವದರಿಂದ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಾಗುತ್ತಿಲ್ಲ ಎನ್ನುವ ದುಃಖವಿದೆ.

ಒಂದು ಕಪ್ ಕಾಫಿ

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ

~ಲಕ್ಕೂರು ಆನಂದ್

A Cup of Coffee

For the last time
Would you drink a cup of coffee with me?
No matter
Whether I erred
Or you erred,
Let’s forget it:

For the last time
Would you drink only one cup of coffee with me?
I will make this moment memorable
Who knows
It can take turn here itself!
Or we can split up!
Who could guess that?
I say something
And you something else
The speech rams are fighting with each other
The grief is frozen
On all the speech ways down to us

Who knows
We may have vast forests in front of us,
The grapes,
Being unable to bear the weight
May turn into clouds
By hanging down to the ground
Even the rare rivers can orbit around us,
But what is the benefit?
We both are not feeling thirsty ….
In the corner of our heart
There lies a breaking sound of a small branch
And also the falling sound of heartbreak tears
Each one’s grief
Is becoming
Unbearable burden for each other
There is no hatred
No jealousy and no anger at all
It’s just love
Will really kindness be this much cruel?

Even now
A layer of kindness is seen
In your eyes
But unfortunately
It doesn’t mean to both of us
We both have to wait
Until the sheath of despair dissipates
You are not be seen to my eyes
And I am not to be seen to your eyes
The dreams of past
Have dissolved in both of us
The two birds
With their wings broken
Have sat on each other’s heads.
Probably, this may be our last meeting!
Why should we drink coffee by sitting so closely?
All yesterdays are turning out to be as the long sighs of today
An oscillating confusion within you
Is softly touching me

Why should we drink coffee so quietly?
Even the funeral ceremony also
Won’t be this much silent!
This is our last visit
Come on, let’s have a cup of coffee at least
For the memory of our last visit
Earlier, these were just one by two cups
And now are two anonymous coffee cups
If you peep inside this coffee cup
You will find the pieces of yesterday
And also the introductions of ours
That are fighting like two very different dolls

From Kannada: Anand Lakkuru
To English: Uday Itagi

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

Published

on

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೂನ್ 30 ರಿಂದಲೇ ಬೂತ್ ಮಟ್ಟದ ಅಧಿಕಾರಿಗಳು ಎನುಮೆರೇಷನ್ ನಮೂನೆಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜೂನ್ 16ರ ವರೆಗಿನ ಅಂಕಿ-ಅಂಶಗಳಂತೆ ಜಿಲ್ಲೆಯಲ್ಲಿ ಒಟ್ಟು 14,99,282 ಮತದಾರರಿದ್ದಾರೆ. ಮತದಾರರ ನಿಖರ ಮಾಹಿತಿ ಪಡೆಯಲು ಈಗಾಗಲೇ 8,99,435 ಎನುಮೆರೇಷನ್ ನಮೂನೆಗಳನ್ನು ಬಿಎಲ್‍ಒಗಳ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಈ ಪೈಕಿ 38,003 ನಮೂನೆಗಳ ಗಣಕೀಕರಣ ಪ್ರಕ್ರಿಯೆಯೂ ಪೂರ್ಣಗೊಂಡಿದೆ.

ಕ್ಷೇತ್ರವಾರು ಮಾಹಿತಿ ಮತ್ತು ಪ್ರಗತಿ ವಿವರ

ಜಗಳೂರು: 2,00,836 ಒಟ್ಟು ಮತದಾರರಿದ್ದು, 1,27,608 ನಮೂನೆಗಳನ್ನು ವಿತರಿಸಲಾಗಿದೆ. ಹರಿಹರ: 2,11,023 ಮತದಾರರಿದ್ದು, 1,55,143 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ದಾವಣಗೆರೆ ಉತ್ತರ: 2,58,718 ಮತದಾರರ ಪೈಕಿ 69,881 ನಮೂನೆಗಳನ್ನು ವಿತರಿಸಲಾಗಿದೆ. ದಾವಣಗೆರೆ ದಕ್ಷಿಣ: 2,27,996 ಮತದಾರರಿದ್ದು, 79,365 ನಮೂನೆಗಳನ್ನು ಹಂಚಲಾಗಿದೆ. ಮಾಯಕೊಂಡ: 1,97,048 ಮತದಾರರಿದ್ದು, 1,66,618 ನಮೂನೆ ವಿತರಣೆಯಾಗಿದೆ. ಚನ್ನಗಿರಿ: 2,03,628 ಮತದಾರರ ಪೈಕಿ 1,64,380 ನಮೂನೆಗಳನ್ನು ತಲುಪಿಸಲಾಗಿದೆ. ಹೊನ್ನಾಳಿ: 2,00,033 ಒಟ್ಟು ಮತದಾರರಿದ್ದು, 1,36,440 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ.

ಸ್ಥಳಾಂತರ, ವಲಸೆ ಹಾಗೂ ಮರಣ ಪ್ರಕರಣಗಳ ಪತ್ತೆ: ಮನೆ ಮನೆ ಭೇಟಿಯ ಸಂದರ್ಭದಲ್ಲಿ ಬಿಎಲ್‍ಒಗಳು ಮತದಾರರ ವಿವರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಜುಲೈ 1ರ ವರೆಗಿನ ವರದಿಯ ಪ್ರಕಾರ, ಜಿಲ್ಲಾದ್ಯಂತ ಒಟ್ಟು 421 ವಿಶೇಷ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 188 ಮರಣ ಹೊಂದಿದ ಪ್ರಕರಣಗಳು, 153 ಶಾಶ್ವತವಾಗಿ ವಲಸೆ ಹೋದವರು, 71 ದ್ವಿಪ್ರತಿ ಮತದಾರರು ಹಾಗೂ 5 ಅಪೂರ್ಣ ಮಾಹಿತಿ ಇರುವ ಪ್ರಕರಣಗಳು ಸೇರಿವೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗರಿಷ್ಠ 110 ಹಾಗೂ ಮಾಯಕೊಂಡದಲ್ಲಿ 93 ಇಂತಹ ಪ್ರಕರಣಗಳು ಪತ್ತೆಯಾಗಿವೆ. ಈ ಮನೆ ಮನೆ ಭೇಟಿ ಹಾಗೂ ನಮೂನೆಗಳ ಸಂಗ್ರಹಣೆ ಮತ್ತು ಗಣಕೀಕರಣ ಪ್ರಕ್ರಿಯೆಯು ಜುಲೈ 29, 2026 ರವರೆಗೆ ಮುಂದುವರಿಯಲಿದ್ದು, ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

Published

on

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯನವರಿಗೆ ಹಾಗೂ ದೂಡಾ ಆಯುಕ್ತೆ ರೇಣುಕ ಇವರಿಗೆ ಮನವಿ ಸಲ್ಲಿಸಿದರು.

ನಗರದ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಮನವಿ ಸಲ್ಲಿಸಿದ ಹಳೇ ಕುಂದುವಾಡ ರೈತರು, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ರಿ. ಸರ್ವೆ ನಂಬರ್ 125ರಿಂದ 142ರಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮುಂದಾಗಿತ್ತು, ಆದರೆ ರೈತರು ಪ್ರಾಧಿಕಾರದ ಮಧ್ಯೆ ಒಡಂಬಡಿಕೆ ಆಗದ ಕಾರಣ ಪ್ರಕ್ರಿಯೆ ಕೈ ಬಿಟ್ಟಿತ್ತು. ಪ್ರಾಧಿಕಾರವು ಸಹ ಈ ಜಮೀನುಗಳ ದರ ಹೆಚ್ಚಿದ್ದು ಖರೀದಿ ಮಾಡುವುದಕ್ಕೆ ಆಗುವುದಿಲ್ಲ ಎಂದು ಸಹ ಹೇಳಿತ್ತು, ಅದರಂತೆ 19-02-2024 ರಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಸದರಿ ವಸತಿ ಯೋಜನೆ ಕೈ ಬಿಡಲು ಸಭೆ ತೀರ್ಮಾನಿಸಿ ನಗರಾಭಿವೃದ್ದಿ ಇಲಾಖೆಗೆ ಪತ್ರ ಬರೆದಿತ್ತು, ಆದರೆ ಇದುವರೆಗೂ ನಗರಾಭಿವೃದ್ಧಿ ಇಲಾಖೆ ಈ ಬಗ್ಗೆ ಕ್ರಮ ವಹಿಸಿಲ್ಲ, ಆರೇಳು ವರ್ಷಗಳಿಂದ ಅಲೆದಾಡಿಸುತ್ತಿದ್ದಾರೆ ಎಂದು ದೂರಿದರು.

ಇದರಿಂದ ರೈತರು ತುಂಬಾ ತೊಂದರೆಯಲ್ಲಿ ಸಿಲುಕಿದ್ದಾರೆ, ಕುರುಬ, ಮಡಿವಾಳ, ಉಪ್ಪಾರ ಜನಾಂಗ ಸೇರಿದಂತೆ ಬಹುತೇಕರು ಹಿಂದುಳಿದ ವರ್ಗದ ಸಣ್ಣ ಹಿಡುವಳಿದಾರರು ಇಲ್ಲಿದ್ದಾರೆ, ಸಾಲದ ಹೊರೆ ಜಾಸ್ತಿ ಆದ ಹಿನ್ನಲೆ ಹಲವರಿಗೆ ತೊಂದರೆ ಆಗಿದೆ, ಈ ವಸತಿ ಯೋಜನೆಯಲ್ಲಿ ಯಾವುದೇ ರೀತಿ ಭೂ ಸ್ವಾಧೀನ ಪ್ರಕ್ರಿಯೆ ನಡೆದಿರುವುದಿಲ್ಲ, ಯಾವುದೇ ಅಧಿಸೂಚನೆ (NOTIFICATION) ಆಗಿರುವುದಿಲ್ಲ. ಈ ಹಿಂದೆ ಸಚಿವರಾಗಿದ್ದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಮಿ ದರ ಹೆಚ್ಚಾಗಿದ್ದು, ಈ ಹಿನ್ನಲೆ ಸದರಿ ಯೋಜನೆ ಕೈ ಬಿಡುವಂತೆ ನಗರಾಭಿವೃದ್ದಿ ಇಲಾಖೆಗೆ ಪತ್ರ ಬರೆದಿದೆ, ಹೀಗಿದ್ದರು ನಮ್ಮಗಳ ಜಮೀನಿನ ಮೇಲೆ ದೂಡಾ ಹಕ್ಕು ಚಲಾಯಿಸಲು ಮುಂದಾಗಿ ಅಗ್ರಿಮೆಂಟ್, ರಿಜಿಸ್ಟ್ಟೇಷನ್, ಪೋಡು ಪ್ರಕ್ರಿಯೆ ಸೇರಿದಂತೆ ಇನ್ನಿತರೆ ಹಕ್ಕುಗಳನ್ನ ಚಲಾಯಿಸದಂತೆ ದಾವಣಗೆರೆ ಸಬ್ ರಿಜಿಸ್ಟ್ರಾರ್ ಗೆ ಪತ್ರ ಬರೆದು ಅಡ್ಡಿಪಡಿಸಿದೆ, ಈ ಹಿನ್ನಲೆ ನಗರಾಭಿವೃದ್ಧಿ ಇಲಾಖೆಯಿಂದ ದಯಮಾಡಿ ಈ ವಸತಿ ಯೋಜನೆ ಕೈ ಬಿಡಲು ಅನುಮತಿ ನೀಡುವಂತೆ ಹಾಗೂ ದಾವಣಗೆರೆ ಪ್ರಾಧೀಕಾರದ ಇಂದಿನ ಸಭೆಯಲ್ಲಿಯಲ್ಲಿಯೇ ಈ ಯೋಜನೆ ಕೈ ಬಿಡುವಂತೆ ಆದೇಶ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತರಿಗೆ ಭರವಸೆ ನೀಡಿದ ಯತೀಂದ್ರ ಅವರು, ಯಾವುದೇ ನೋಟಿಫಿಕೇಶನ್ ಆಗಿಲ್ಲ ಅನ್ನುವುದಾದರೇ ಬಲವಂತದಿಂದ ರೈತರ ಭೂಮಿ‌ ಕಿತ್ತುಕೊಳ್ಳುವುದು ಸರಿಯಲ್ಲ, ಈ ಬಗ್ಗೆ ಮಾಹಿತಿಯೊಂದಿಗೆ ಇಲಾಖೆಗೆ ಪತ್ರ ಬರೆಯಿರಿ, ಇಲಾಖೆಯಿಂದ ಯೋಜನೆ ಕೈ ಬಿಡುವ ಬಗ್ಗೆ ತೀರ್ಮಾನಿಸುತ್ತೇವೆ, ಬೇರೆ ಕಡೆಗಳಲ್ಲಿ ಜಾಗ ಗುರುತಿಸಿದ್ದು, ಅಲ್ಲಿ ವಸತಿ ಯೋಜನೆ ಮುಂದುವರೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಮುಖಂಡರಾದ ನರಸಪ್ಪರ ಶಿವಪ್ಪ, ಮಿಟ್ಲಕಟ್ಟೆ ಚಂದ್ರಪ್ಪ, ರೇವಣಪ್ಪ, ದೇವರಾಜ್, ಸಣ್ಣಿಂಗಪ್ಪ, ಮಧುನಾಗರಾಜ್, ಗೋಣೆಪ್ಪ, ರಾಮಣ್ಣ, ಹನುಮಂತಪ್ಪ, ಈಶಪ್ಪ, ಆನಂದಪ್ಪ, ಗುಡ್ಡಪ್ಪ, ರಮೇಶ್, ನಾಗರಾಜ್, ಹನುಮಂತ್ ಸೇರಿದಂತೆ ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending