ದಿನದ ಸುದ್ದಿ
ಪೊಲೀಸ್ ಗೌರವದೊಂದಿಗೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ : ಕೇಂದ್ರ ಹಾಗೂ ರಾಜ್ಯದ ಸಚಿವರಿಂದ ಅಂತಿಮ ದರ್ಶನ
ಸುದ್ದಿದಿನ,ಧಾರವಾಡ : ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು (ಫೆ.16) ಬೆಳಿಗ್ಗೆ ನಿಧನರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಏರ್ಪಡಿಸಲಾಗಿತ್ತು. ಸಂಜೆ ಕೆಲಗೇರಿ ಸಮೀಪದ “ಸೃಷ್ಠಿ” ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು, ಗಣ್ಯರು, ಸಾಹಿತಿಗಳು ಅಂತಿಮದರ್ಶನ ಪಡೆದು ಗೌರವ ಸಲ್ಲಿಸಿದರು.
ಬೆಳಿಗ್ಗೆ ಸುದ್ದಿ ತಿಳಿದ ಕೂಡಲೇ ಸತ್ತೂರಿನ ಎಸ್ಡಿಎಂ ಆಸ್ಪತ್ರೆಗೆ ಧಾವಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಡಾ.ಚೆನ್ನವೀರ ಕಣವಿ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಮತ್ತು ಅಂತ್ಯಕ್ರಿಯೆ ಕುರಿತು ನಿರ್ಧಾರ ಪ್ರಕಟಿಸಿದರು.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಾ.ಚೆನ್ನವೀರ ಕಣವಿ ಅವರ ಕಲ್ಯಾಣ ನಗರದ ಚೆಂಬೆಳಕು ನಿವಾಸಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೊಗಲಾಯಿತು. ಗದುಗಿನ ತೋಂಟದ ಡಾ. ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ.ಕಣವಿ ಅವರ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ ತಮ್ಮ ಕುಟುಂಬದ ಸದಸ್ಯರು, ಬಂಧುಗಳೊಂದಿಗೆ ಪೂಜೆ ಸಲ್ಲಿಸಿದರು.
ಸಾರ್ವಜನಿಕರ ದರ್ಶನಕ್ಕಾಗಿ ಕರ್ನಾಟಕ ಕಾಲೇಜು ಮುಖ್ಯ ಕಟ್ಟಡದ ಆವರಣದಲ್ಲಿ ಮಧ್ಯಾಹ್ನ ಡಾ. ಕಣವಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ವಿವಿಧ ಮಠಾಧೀಶರು, ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕರ್ನಾಟಕ ಲೇಖಕಿಯರ ಸಂಘ, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕ, ವಿವಿಧ ಶಿಕ್ಷಣ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಸೇರಿದಂತೆ ಡಾ.ಚೆನ್ನವೀರ ಕಣವಿ ಅವರ ಆಪ್ತರು, ಅಭಿಮಾನಿಗಳು, ಶಿಷ್ಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣತೋಂಟದಾರ್ಯ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಭೈರನಟ್ಟಿಯ ಶಾಂತವೀರ ಸ್ವಾಮೀಜಿ, ಕರ್ನಾಟಕ ಕಲಾ ಕಾಲೇಜು ಪ್ರಾಚಾರ್ಯ ಡಾ.ಡಿ.ಬಿ.ಕರಡೋಣಿ, ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ. ಶಿವಾನಂದ ಚೌಗಲಾ ಸೇರಿದಂತೆ ಅನೇಕರು ಡಾ.ಕಣವಿ ಅವರಿಗೆ ಪುಷ್ಪಗುಚ್ಚ ಇರಿಸಿ ಅಂತಿಮ ನಮನ ಸಲ್ಲಿಸಿದರು.
ಸಂಜೆ ಹೊತ್ತಿಗೆ ಡಾ.ಕಣವಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಕರ್ನಾಟಕ ಕಾಲೇಜು ಆವರಣದಿಂದ ಕೆಲಗೇರಿ ಹತ್ತಿರದಲ್ಲಿರುವ ಅವರ ತೋಟಕ್ಕೆ ಸಾಗಿತು. ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಸಂಸ್ಕಾರ ನಡೆಯಿತು.
ಕನ್ನಡದಲ್ಲಿ ಪೊಲೀಸ್ ಕವಾಯತ ಗೌರವ ಸಲ್ಲಿಕೆ
ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರಕ್ಕೆ ಗೌರವ ರಕ್ಷೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರ ನೇತೃತ್ವದಲ್ಲಿ ನೀಡಲಾಯಿತು. ಕನ್ನಡದಲ್ಲಿ ಕವಾಯತು ಆಜ್ಞೆಗಳನ್ನು ನೀಡಿ ಪೊಲೀಸ್ ಗೌರವ ಸಲ್ಲಿಸಿ, ಗಾಲಿಯಲ್ಲಿ 3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಅರ್ಪಿಸಲಾಯಿತು.
ಅಂತ್ಯಕ್ರಿಯೆ ಸ್ಥಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರು ನುಡಿನಮನ ಸಲ್ಲಿಸಿದರು.
ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಕವಿವಿ ವಿಶ್ರಾಂತ ಕುಲಪತಿ ಪ್ರೊ ಎಚ್.ಬಿ.ವಾಲಿಕಾರ, ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ, ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಪ್ರೊ. ಎಸ್.ಎಂ.ಶಿವಪ್ರಸಾದ, ಮಾಜಿ ಶಾಸಕ ಮೋಹನ ಲಿಂಬಿಕಾಯಿ, ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಜಿ.ಪಂ.ಸಿಇಓ ಡಾ.ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ.ಬಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ ಡಾ.ಸಂತೋಷಕುಮಾರ ಬಿರಾದಾರ, ಲೋಕೋಪಯೋಗ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ.ಚೌಡಣ್ಣವರ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಸಂಘಟಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಗಣ್ಯರ ಅಭಿಪ್ರಾಯಗಳು
- ಚೆಂಬೆಳಕಿನ ಕವಿ, ಸಹೃದಯಿ, ಅಂತಃಕರಣದ ಮಾನವೀಯ ಮೌಲ್ಯಗಳಿಗೆ ಪ್ರಾಧಾನ್ಯತೆ ಕೊಟ್ಟ ಸ್ನೇಹಜೀವಿ. ಚೆನ್ನವೀರ ಕಣವಿ ಅವರು ವಿಶ್ವಭಾರತಿಗೆ ಕನ್ನಡದಾರುತಿ ಎಂಬ ಗೀತೆಯ ಮೂಲಕ ನಾಡು ಹಾಗೂ ದೇಶದ ಸಮಗ್ರತೆಯನ್ನು ಸಾರಿದ್ದಾರೆ. ಹಲವಾರು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಅವರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಿದೆ. ತಮಗಾಗಿ ಏನನ್ನೂ ಕೇಳಲಿಲ್ಲ. ಧಾರವಾಡದ ಅಭಿವೃದ್ಧಿ, ಮಾತೃ ಭಾಷೆ ಶಿಕ್ಷಣ ನೀತಿಗಳ ಬಗ್ಗೆ ಚರ್ಚಿಸುತ್ತಿದ್ದರು. ಅವರ ವಿಚಾರಗಳು ಅಜರಾಮರವಾಗಿರುತ್ತವೆ.
| ಪ್ರಲ್ಹಾದ್ ಜೋಶಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರು
- ಕಣವಿ ಅವರು ಕರ್ನಾಟಕದ ಹೆಮ್ಮೆಯ ಕವಿ, ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಗಾಧವಾದದ್ದು, ಅವರ ಅಗಲಿಕೆಯು ಇಡೀ ರಾಜ್ಯಕ್ಕೆ ತುಂಬಲಾರದಂತಹ ನಷ್ಟವನ್ನುಂಟುಮಾಡಿದೆ. ಭರತ ಹುಣ್ಣಿಮೆ ದಿನ ಕವಿಯು ಬೆಳಕಿನಲ್ಲಿ ಲೀನವಾಗಿದ್ದಾರೆ. ರಾಷ್ಟ್ರಕವಿ ಬಿರುದಿನ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಚರ್ಚಿಸುತ್ತೇನೆ ಎಂದರು.
| ಆಚಾರ ಹಾಲಪ್ಪ ಬಸಪ್ಪ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು
- ಚೆಂಬೆಳಕಿನ ಸಹೃದಯ ಕವಿಯ ಅಗಲಿಕೆ ತುಂಬಾ ನೋವುನ್ನುಂಟು ಮಾಡಿದೆ. ಅವರ ಕೊಡುಗೆ ಧಾರವಾಡಕ್ಕೆ ಅಷ್ಟೇ ಅಲ್ಲ ಇಡೀ ಕನ್ನಡ ನಾಡಿಗೆ ಮಹತ್ತರವಾದದ್ದು. ಕನ್ನಡ ತಾಯಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಅಂತಹ ವ್ಯಕ್ತಿಯನ್ನು ಕಳೆದುಕೊಂಡಿದ್ದು ದುಃಖಕರ ಸಂಗತಿಯಾಗಿದೆ.
| ಅರವಿಂದ ಬೆಲ್ಲದ, ಶಾಸಕರು
- ಕನ್ನಡ ನಾಡು ಕಂಡ ಸಮನ್ವಯ ಕವಿ, ವಿದ್ವಾಂಸರಾದ ಚೆನ್ನವೀರ ಕಣವಿ ಅವರು ಇಡೀ ಕರ್ನಾಟಕದಾದ್ಯಂತ ಓದುಗರು, ಅಭಿಮಾನಿಗಳನ್ನು ಹೊಂದಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ.
| ನಿತೇಶ್ ಪಾಟೀಲ, ಜಿಲ್ಲಾಧಿಕಾರಿಗಳು, ಧಾರವಾಡ
- ಕಣವಿ ಅವರು ನಮಗೆ ದೊಡ್ಡ ಆದರ್ಶ ವ್ಯಕ್ತಿ. ಸಮನ್ವಯದ ಪ್ರತಿಪಾದಕರು. ವಯಸ್ಸಾದ ನಂತರ ಅವರ ಮಾತಿನಲ್ಲಿ ತೊದಲುವಿಕೆ ಇತ್ತೇ ಹೊರತು ಬರವಣಿಗೆಗೆ ತೊಡಕು ಇರಲಿಲ್ಲ. ಬೇಂದ್ರೆ ಅವರ ನಂತರ ಭಾಷಿಕವಾಗಿ, ಸಾಂಸ್ಕøತಿಕವಾಗಿ ಧಾರವಾಡವನ್ನು ಪ್ರತಿನಿಧಿಸಿದರು. ಮಹತ್ವದ ಕವಿಯನ್ನು ಕಳೆದುಕೊಂಡ ಧಾರವಾಡ ಸಾಂಸ್ಕøತಿಕವಾಗಿ ಬರಿದಾಗುತ್ತಿದೆ. ಕರ್ನಾಟಕ ಅಷ್ಟೇ ಅಲ್ಲ ರಾಷ್ಟ್ರದಲ್ಲೂ ಧಾರವಾಡದ ಹಿರಿಮೆಯನ್ನು ಹೆಚ್ಚಿಸಿದವರು. ಅವರ ಸ್ವಭಾವದಂತೆ ಶಾಂತವಾಗಿಯೇ ಕವಿತೆಗಳನ್ನು ಬರೆಯುತ್ತಿದ್ದರು. ಕಣವಿ ಅವರ ಜೊತೆಯ ಒಡನಾಟ ಸದಾ ಸ್ಮರಣೆಯಲ್ಲಿರುತ್ತದೆ.
| ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಹಿರಿಯ ಸಾಹಿತಿ
- ಚೆನ್ನವೀರ ಕಣವಿ ಅವರು ಮುರುಘಾಮಠದ ಉತ್ತಮ ವಿದ್ಯಾರ್ಥಿ. ಧಾರವಾಡ ಮುರುಘಾಮಠದಲ್ಲಿ ತಯಾರಾಗಿ ಚೊಕ್ಕ ಚಿನ್ನವಾಗಿ ಹೊರಹೊಮ್ಮಿದ ವ್ಯಕ್ತಿ. ಅವರ ನಿಧನ ನಮಗೆ ತುಂಬಾ ಕಳವಳವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ದೇವರು ಕರುಣಿಸಲಿ.
| ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮುರಘಾಮಠ, ಧಾರವಾಡ
- ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಸಾರಾಂಗ ವಿಭಾಗ ಆರಂಭಿಸಲು ಕಾರಣೀಭೂತರಾದ ಚೆನ್ನವೀರ ಕಣವಿ ಅವರ ಕೊಡುಗೆ ಅಪಾರ. ಕವಿವಿಯ ಎಲ್ಲ ಪ್ರಕಟಣೆಗಳು ಜನರನ್ನು ಮುಟ್ಟುತ್ತಿವೆ ಎಂದರೆ ಅದಕ್ಕೆ ಚೆನ್ನವೀರ ಕಣವಿ ಅವರೇ ಕಾರಣ.
| ಪ್ರೊ. ಕೆ.ಬಿ.ಗುಡಸಿ, ಕುಲಪತಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
- ಧರೆಯಿಂದ ಮರೆಯಾದಂತಹ ಕವಿ. ವಿಶ್ವಭಾರತಿಗೆ ಕನ್ನಡದ ಆರತಿಯನ್ನು ಬೆಳಗಿಸಿದಂತಹ ಕವಿ. ಕಣವಿ ಅವರ ನೆನಪು ಸದಾ ಜನಮನದಲ್ಲಿರುತ್ತದೆ. ಅವರ ಸಜ್ಜನಿಕೆ, ಸೌಜನ್ಯ, ತಾಳ್ಮೆಯ ಗುಣಗಳು ಮಾದರಿಯಾದವು.
| ಡಾ.ಮಹೇಶ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
ಸುದ್ದಿದಿನ.ಕಾಂ|ವಾಟ್ಸಾಪ್|9980346243