ರಾಜಕೀಯ
ಮಾಜಿ ಸಚಿವ ಎಚ್.ಆಂಜನೇಯ ಪ್ರತಿಷ್ಠೆ ಮಣ್ಣುಪಾಲು !
ಸುದ್ದಿದಿನ ವಿಶೇಷ: ಚಿತ್ರದುರ್ಗ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಾರುಪತ್ಯ ಸಾಧಿಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ತೀವ್ರ ಮುಖಭಂಗವಾಗಿದೆ.
ಚಿತ್ರದುರ್ಗ ನಗರಸಭೆಯ 32ರಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಸಿ.ತಾರಕೇಶ್ವರಿ ಗೆಲುವು ಸಾಧಿಸಿದ್ದು, ಮಾಜಿ ಸಚಿವರ ಪ್ರತಿಷ್ಠೆ ಮಣ್ಣು ಪಾಲಾಗಿದೆ. ಮಾಜಿ ಸಚಿವರು ವಿಶೇಷವಾಗಿ ಗಮನ ಹರಿಸಿದ್ದ ಕ್ಷೇತ್ರದಲ್ಲಿ ಗೆಲವು ಸಾಧಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಆದರೆ ಕೊನೆಗೆ ಬಿಜೆಪಿ ಅಭ್ಯರ್ಥಿ ಗೆಲುವಿನಿಂದ ನಿರಾಸೆ ಮೂಡಿಸಿದೆ.
ಹಿಂದೆ ಕಾಂಗ್ರೆಸ್ನ ಭದ್ರ ಕೋಟೆ ಎಂದು ಬಿಂಬಿತವಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಕಮಲ ಪಕ್ಷ ಎಲ್ಲೆಲ್ಲೂ ಅರಳಿ ನಿಂತಿದೆ. ಅತ್ತ ಹೊಸದುರ್ಗದಲ್ಲಿ ಕೂಡ ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದ ಬಿಜೆಪಿ ಪಕ್ಷ ತನ್ನ ಪ್ರಾಬಲ್ಯ ಸಾಧಿಸಿದೆ.
ಈ ಬಾರಿಯ ಮೂರು ಸ್ಥಳೀಯ ಸಂಸ್ಥೆಗಳ ಪೈಕಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಾಯಕರಾದ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜ್ ಸೇರಿದಂತೆ ಹಲವರ ಶ್ರಮ ಹೇಳ ಹೆಸರಿಲ್ಲದಂತಾಗಿದೆ.

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ34 minutes agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

