ರಾಜಕೀಯ
ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ
- ನಾ ದಿವಾಕರ
ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು ಸುದ್ದಿಯಾಗಿ ಕಾಣುತ್ತಿದೆ, ಅಥವಾ ಚುನಾವಣಾ ರಾಜಕಾರಣದ ಮಾರುಕಟ್ಟೆ ಸರಕುಗಳಂತೆ ಕಾಣುತ್ತಿವೆ. ಕಳೆದ ಒಂದು ವರ್ಷದಲ್ಲಿ ಕೋವಿದ್ ಸೋಂಕಿನಿಂದಲೇ ಭಾರತ ಎರಡು ಲಕ್ಷಕ್ಕೂ ಹೆಚ್ಚು ನಾಗರಿಕರನ್ನು ಕಳೆದುಕೊಂಡಿದೆ. ಭಾರತದಂತಹ ಸಂಕೀರ್ಣ ಸಮಾಜದಲ್ಲಿ 2 ಲಕ್ಷ ಜನರ ಸಾವು ಹತ್ತು ಲಕ್ಷ ಜನರ ಬದುಕಿಗೆ ನಿರ್ಣಾಯಕವಾಗುತ್ತದೆ. ಈ ಕನಿಷ್ಟ ಪ್ರಜ್ಞೆ ನಮ್ಮ ಈಗಿನ ರಾಜಕೀಯ ನಾಯಕರುಗಳಿಗೆ ಇಲ್ಲ ಎಂದು ಹೇಳಬೇಕಿಲ್ಲ.
ಆದರೂ ಕೊರೋನಾ ಮತ್ತೊಮ್ಮೆ ಜನಸಾಮಾನ್ಯರ ನಿತ್ಯ ಬದುಕಿನಲ್ಲಿ ಹತಾಶೆಯನ್ನುಂಟುಮಾಡಿದೆ. ಮಧ್ಯಮ, ಮೇಲ್ ಮಧ್ಯಮ ವರ್ಗಗಳಲ್ಲಿಯೇ ಈ ಸನ್ನಿವೇಶ ಹತಾಶ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಏಕೆ ಹೀಗೆ ಸಾಯುತ್ತಿದ್ದಾರೆ ? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ನಿಜ, ಸಾವಿಗೆ ಕಾರಣಗಳಿವೆ. ಕೋವಿದ್ ಸಂದರ್ಭದಲ್ಲಿ ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವವರು ಸುಲಭ ತುತ್ತಾಗುತ್ತಾರೆ. ನಿತ್ಯ ಬದುಕಿನ ಅನಿವಾರ್ಯತೆಗಳು ಅಸಂಖ್ಯಾತ ಜನರನ್ನು ಸಾವಿನ ದವಡೆಗೆ ದೂಡುತ್ತಿರುವುದನ್ನು ನೋಡುತ್ತಲೇ, ಸಂತಾಪ, ಶ್ರದ್ಧಾಂಜಲಿ ಮತ್ತು ಕಂಬನಿಗಳ ನಡುವೆ ಮತ್ತೊಂದು ಸಾವಿನ ಸುದ್ದಿಯ ನಿರೀಕ್ಷೆಯಲ್ಲಿ ದಿನ ಕಳೆಯುವಂತಾಗಿದೆ.
137 ಕೋಟಿ ಜನರ ಪೈಕಿ ಕೇವಲ ಎರಡು ಲಕ್ಷ ಜನರು ಸತ್ತಿದ್ದಾರೆ. ನಗಣ್ಯ ಅಲ್ಲವೇ ? ಕರ್ನಾಟಕದ ಆರೋಗ್ಯ ಸಚಿವರು ಹೌದೆನ್ನುತ್ತಾರೆ. ಚಾಮರಾಜನಗರದಲ್ಲಿ 24 ಅಮಾಯಕ ಜೀವಗಳು ಆಮ್ಲಜನಕ ಇಲ್ಲದೆ ಅಸುನೀಗಿದಾಗ, ಕೇವಲ ಮೂರೇ ಜನ ಎಂದು ಎಣಿಸಿ ಹೇಳುವವರನ್ನು ನಾವು ಆರೋಗ್ಯ ಮಂತ್ರಿ ಎಂದು ಗೌರವಿಸುತ್ತಿದ್ದೇವೆ. ಹೆಣಗಳ ಎಣಿಕೆ ನಮ್ಮ ರಾಜಕೀಯ ಜೀವನದಲ್ಲಿ ಒಂದು ಸಂಸ್ಕೃತಿಯಾಗಿಯೇ ನೆಲೆಸಿಬಿಟ್ಟಿದೆ. ಹಣ ಎಣಿಸಿ ಮತ ಗಳಿಸುವುದು, ಮತ ಎಣಿಸಿ ಅಧಿಕಾರ ಗಳಿಸುವುದು, ಹೆಣ ಎಣಿಸಿ ಅಧಿಕಾರ ಉಳಿಸಿಕೊಳ್ಳುವುದು ಇದು ನವ ಭಾರತದ ಆಡಳಿತ ಸಂಹಿತೆಯಾಗಿರುವುದನ್ನು ವಿಷಾದದಿಂದಲೇ ಒಪ್ಪಿಕೊಳ್ಳಬೇಕಿದೆ.
ವಿಜಯೋತ್ಸವದ ಗುಂಗಿನಲ್ಲಿ ಜೀವ ಹರಣ ಮಾಡುವ ಒಂದು ವಿಕೃತ ಸಂಸ್ಕೃತಿಯನ್ನೂ ನಾವೇ ಬೆಳೆಸಿಕೊಂಡುಬಂದಿದ್ದೇವೆ. ಪಶ್ಚಿಮಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಒಂದು ಪ್ರಾತ್ಯಕ್ಷಿಕೆಯನ್ನು ನಮ್ಮ ಮುಂದಿಟ್ಟಿದೆ. ಸೋಲಿನ ಹತಾಶೆಯೂ ಜೀವ ನಾಶಕ್ಕೆ ಕಾರಣವಾಗುವುದನ್ನೂ ನೋಡಿದ್ದೇವೆ. ಈ ಘಟನೆಗಳು ನಮ್ಮ ಪ್ರಜ್ಞೆಯನ್ನು ಕಲಕುವುದಿಲ್ಲ, ತಾತ್ವಿಕ ನೆಲೆಯಲ್ಲಿ ಅಪರಾಧಿಗಳ ಶೋಧಕ್ಕೆ ಪ್ರೇರೇಪಿಸುತ್ತವೆ. ಏಕೆ ಹೀಗಾಗುತ್ತಿದೆ ಎಂಬ ಜಿಜ್ಞಾಸೆ ನಮ್ಮನ್ನು ಮತ್ತಷ್ಟು ಚಿಂತನೆಗೆ ದೂಡುವುದಿಲ್ಲ. ಬದಲಾಗಿ ರಾಜಕೀಯ/ಸೈದ್ಧಾಂತಿಕ ಗೋಡೆಗಳ ಹಿಂದೆ ನಿಂತು ಹೆಣಗಳಲ್ಲಿ ಅಧಿಕಾರದ ಮೆಟ್ಟಿಲುಗಳನ್ನು ಕಾಣತೊಡಗುತ್ತೇವೆ. ಹಾಗಾಗಿಯೇ ಸಾವಿರಾರು ಸಾವುಗಳನ್ನು ಸಂಭ್ರಮಿಸುವ ಮನಸುಗಳೂ ಏಳೆಂಟು ಜೀವಗಳಿಗೆ ಲೆಕ್ಕ ಕೇಳಲು ಮುಂದಾಗುತ್ತವೆ.
ಇದನ್ನೂ ಓದಿ |ರಾಜ್ಯದಲ್ಲಿ ಮೇ 10 ರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ
ಇಲ್ಲಿ ನಮಗೆ ಜಾರ್ಜ್ ಫ್ಲಾಯ್ಡ್ ಮತ್ತೆ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ಆ ಹತಾಶೆಯ ಧ್ವನಿ ಭಾರತದ ಉದ್ದಗಲಕ್ಕೂ ಧ್ವನಿಸುತ್ತಲೇ ಇದೆ. ಇಲ್ಲಿ ಜನಸಾಮಾನ್ಯರ ಕತ್ತು ಹಿಸುಕುತ್ತಿರುವುದು ಪೊಲೀಸರಲ್ಲ, ಒಂದು ವೈರಾಣು. ಉಸಿರಾಡುವ ಗಾಳಿ ಒದಗಿಸುವ ಹೊಣೆ ಆಡಳಿತ ನಿರ್ವಹಣೆ ಮಾಡುವ ಸರ್ಕಾರದ್ದು. ಎಷ್ಟು ಸುಂದರ ಶ್ರೇಣೀಕೃತ ಅಧಿಕಾರದ ಮೆಟ್ಟಿಲುಗಳನ್ನು ನಾವು ಸೃಷ್ಟಿಸಿಕೊಂಡಿದ್ದೇವೆ. ಮಂಡಲ ಪಂಚಾಯತಿಯಿಂದ ಸಂಸತ್ತಿನವರೆಗೆ. ಈ ಮೆಟ್ಟಲುಗಳ ಮೇಲೆ ನಡೆದಾಡುವ ಸಾಲಂಕೃತ ಪ್ರತಿನಿಧಿಗಳಿಗೆ ಮನುಜ ಪ್ರಜ್ಞೆ ಇದ್ದಿದ್ದರೆ ಬಹುಶಃ ಭಾರತ ಸಾವಿನ ಕೂಪ ಆಗುತ್ತಿರಲಿಲ್ಲ. ನಮ್ಮ ದೂಷಣೆಗೆ, ನಿಂದನೆಗೆ ಈಗ ಚೀನಾ, ಜಮಾತ್, ತಬ್ಲೀಗಿಗಳು ನಿಲುಕುವುದಿಲ್ಲ. ಅದು ಮುಗಿದ ಅಧ್ಯಾಯ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ನಿಭಾಯಿಸಲು ಸಿದ್ಧತೆ ನಡೆಸುತ್ತಿರುವುದನ್ನು ನೋಡಿದರೆ ನಮ್ಮ ದೇಶಕ್ಕೆ ಕೋವಿದ್ 19 ಈ ವರ್ಷವೇ ಪ್ರವೇಶಿಸಿದೆ ಎಂದು ಭಾಸವಾಗುತ್ತದೆ. ಆರು ತಿಂಗಳ ಕಾಲ ಮೈಮರೆತು ನಿದ್ರಿಸಿದ ಆಡಳಿತ ವ್ಯವಸ್ಥೆ ಈ ಒಮ್ಮೆಲೆ ಪುಟಿದೆದ್ದು ನಿಲ್ಲಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನಮ್ಮ ದೇಶದ ಆರೋಗ್ಯ ವ್ಯವಸ್ಥೆಗೆ ಸುಭದ್ರ ಬುನಾದಿ ಇಲ್ಲ. ಸಾಂದರ್ಭಿಕ, ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದನ್ನು ನಿರ್ವಹಣೆ ಎನ್ನುವುದಿಲ್ಲ, ಮೇಲ್ವಿಚಾರಣೆ ಎನ್ನುತ್ತಾರೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರಗಳು ಮಾಡುತ್ತಿರುವುದು ಮೇಲ್ವಿಚಾರಣೆ ಮಾತ್ರ.
ಹಾಗಾಗಿಯೇ ಈಗ ದೇಶಾದ್ಯಂತ ಹಾಹಾಕಾರ ಎದ್ದಿದೆ. ಆಸ್ಪತ್ರೆಯ ಸೌಲಭ್ಯಗಳಿಲ್ಲ, ಹಾಸಿಗೆಗಳು ದೊರೆಯುತ್ತಿಲ್ಲ, ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ, ವೆಂಟಿಲೇಟರ್ ಕೊರತೆ ಇದೆ, ರೆಮಿಡಿಸಿವಿರ್ನಂತಹ ಔಷಧಿಗಳಿಗೂ ಕೊರತೆ ಇದೆ. ಆದರೆ ಎಲ್ಲವೂ ಕಾಳಸಂತೆಯಲ್ಲಿ ದೊರೆಯುತ್ತಿದೆ. ಇಂತಹ ವಿಷಮ ಸನ್ನಿವೇಶದಲ್ಲೂ ಕರಾಳದಂಧೆಯೇ ಎಂದು ಹುಬ್ಬೇರಿಸುವುದು ಸಹಜ. ಅಚ್ಚರಿ ಬೇಕಿಲ್ಲ ಏಕೆಂದರೆ, ಇದು ಮಾರುಕಟ್ಟೆ ಪ್ರಪಂಚ. ಹೆಣವೂ ಬಿಕರಿಯಾಗುವ ಕರಾಳ ಮಾರುಕಟ್ಟೆಯಲ್ಲಿ ನಾವು ಮೌಲ್ಯಯುತ ಆಡಳಿತದ ನಿರೀಕ್ಷೆಯಲ್ಲಿದ್ದೇವೆ. ಕಾಳಸಂತೆ ವ್ಯಾಪಾರದ ಮೂಲ ಇರುವುದೇ ಸರಬರಾಜಿನ ಕೊರತೆಯಲ್ಲಿ, ಉತ್ಪಾದನೆಯ ಕೊರತೆಯಲ್ಲಿ ಅಲ್ಲ. ಈ ಸರಬರಾಜು ಅನಿರ್ಬಂಧಿತವಾಗಿ, ಶಿಸ್ತುಬದ್ಧತೆಯಿಂದ, ಕಾನೂನುರೀತ್ಯಾ ಚಾಲ್ತಿಯಲ್ಲಿರಬೇಕೆಂದರೆ ಇದನ್ನು ನಿರ್ವಹಿಸಲು ಒಂದು ಜವಾಬ್ದಾರಿಯುತ ಸರ್ಕಾರ ಅಗತ್ಯ.
ನಮ್ಮ ಕೊರತೆ ಇರುವುದೇ ಇಲ್ಲಿ. ಕಳೆದ ಎರಡು ದಶಕಗಳಲ್ಲಿ ನಾವು ಶಾಸನಸಭೆಗಳಿಗೆ ಆಯ್ಕೆ ಮಾಡುತ್ತಿರುವುದು ವ್ಯಾಪಾರಿಗಳನ್ನೇ ಹೊರತು, ನುರಿತ ಪ್ರಜ್ಞಾವಂತ ರಾಜಕಾರಣಿಗಳನ್ನು ಅಲ್ಲ. ಸಾಮಾಜಿಕ ಜನಾಂದೋಲನಗಳು, ಜನಪರ ಚಳುವಳಿಗಳು, ಕಾರ್ಮಿಕ ಹೋರಾಟಗಳ ಮಧ್ಯದಿಂದ ಮುನ್ನೆಲೆಗೆ ಬಂದಿರುವವರು ಮತ್ತು ಬೌದ್ಧಿಕವಾಗಿ ಪ್ರಬುದ್ಧತೆ ಹೊಂದಿರುವ ವ್ಯಕ್ತಿಗಳು ಅಧಿಕಾರ ರಾಜಕಾರಣದ ಚೌಕಟ್ಟಿನಿಂದಲೇ ಹೊರಗಿದ್ದಾರೆ.
ಒಂದು ವೇಳೆ ಒಳಗಿದ್ದರೂ ಬಹಿಷ್ಕೃತರಾಗಿ, ನಿರ್ಲಕ್ಷಿತರಾಗಿ ಅಧಿಕಾರ ಕೇಂದ್ರಗಳಿಂದ ದೂರವೇ ಇರುತ್ತಾರೆ. ಸೂಕ್ಷ್ಮ ಸಂವೇದನೆಯ ಅರ್ಥವನ್ನಾದರೂ ಅರಿತಿರುವ ಇಂಥವರ ಸ್ಥಾನವನ್ನು ಗುತ್ತಿಗೆದಾರರು, ಗಣಿ ಉದ್ಯಮಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ದಂಗೆಕೋರರು, ಮಾಫಿಯಾಗಳು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಆಕ್ರಮಿಸಿಕೊಳ್ಳುತ್ತಿದ್ದಾರೆ.
ಅಧಿಕಾರ ಸ್ಥಾನಗಳನ್ನು ಆಕ್ರಮಿಸಿಕೊಳ್ಳುವವರು ಇಂತಹ ಜನಪ್ರತಿನಿಧಿಗಳಿಗೆ ಬದ್ಧರಾಗಿರುತ್ತಾರೆ ಅಥವಾ ಕೆಲವೊಮ್ಮೆ ಇದೇ ಹಿನ್ನೆಲೆ ಇರುವವರೂ ಆಗಿರುತ್ತಾರೆ. ಸುಸ್ಥಿರ ಸರ್ಕಾರ ಎನ್ನುವ ಕಲ್ಪನೆ ಈ ಸ್ವಾರ್ಥ ರಾಜಕಾರಣವನ್ನು ಸಂರಕ್ಷಿಸುವ ಒಂದು ಪ್ರಜಾಸತ್ತಾತ್ಮಕ ವಿಧಾನ ಎಂದಷ್ಟೇ ಹೇಳಬಹುದು. ಆದ್ದರಿಂದಲೇ ಎಂತಹ ಪ್ರಮಾದವೇ ನಡೆದರೂ, ನೂರಾರು ಜನರ ಸಾವು ಸಂಭವಿಸಿದರೂ ಸಚಿವರೊಬ್ಬರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ದೃಶ್ಯವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಈ ರಾಜಕೀಯ ನಾಯಕರುಗಳಿಗೆ ತಮ್ಮ ಸ್ವಹಿತಾಸಕ್ತಿ ಮತ್ತು ತಾವು ನಂಬಿರುವ ಪಕ್ಷದ ಅಧಿಕಾರಾಸಕ್ತಿ ಎರಡೇ ಮುಖ್ಯವಾಗುತ್ತದೆ. ಜನರ ಸಾವು ನೋವುಗಳು ನಗಣ್ಯ ಎನಿಸಿಬಿಡುತ್ತವೆ.
ಇದನ್ನು ಚಾಮರಾಜನಗರದಲ್ಲಿ ಸಂಭವಿಸಿದ 24 ಸಾವುಗಳ ಹಿನ್ನೆಲೆಯಲ್ಲೇ ಗಮನಿಸಬಹುದು. ಸಂಸದ ತೇಜಸ್ವಿ ಸೂರ್ಯ ತಮ್ಮ ರಹಸ್ಯ ಕಾರ್ಯಾಚರಣೆಯ ಮೂಲಕ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ಹಗರಣದಲ್ಲೂ ಗಮನಿಸಬಹುದು. ಈ ಅವಘಡಗಳಿಗೆ ಯಾರು ಕಾರಣ ? ಎರಡೂ ಪ್ರಕರಣಗಳಲ್ಲಿ ಯಾವುದೋ ಅಗೋಚರ ಮಾಫಿಯಾ ಕೈವಾಡವಿರುತ್ತದೆ. ಉನ್ನತ ಮಟ್ಟದ ಅಧಿಕಾರಿಗಳಿಂದ ವಿಧಾನಸೌಧದವರೆಗೆ ಈ ಮಾಫಿಯಾದ ಬಾಹುಗಳು ಚಾಚಿರುತ್ತವೆ. ಬಿಬಿಎಂಪಿ ಹಗರಣದ ಹಿಂದೆ ಅಲ್ಲಿ ಗುತ್ತಿಗೆ ಕೆಲಸ ಮಾಡುವ ಕೆಳಮಟ್ಟದ ಅಧಿಕಾರಿಗಳೋ ಅಥವಾ ಗುತ್ತಿಗೆ ನೌಕರರೋ ಕಾರಣವಾಗಿರುವುದಿಲ್ಲ. ಇವರು ನಿಮಿತ್ತ ಮಾತ್ರ. ಬಿಬಿಎಂಪಿ ಉಸ್ತುವಾರಿ ಸಚಿವರ ಗಮನಕ್ಕೆ ಬಾರದೆ ಇಷ್ಟೆಲ್ಲಾ ನಡೆದಿರುತ್ತದೆ ಎಂದು ನಂಬಲು ಆಧಾರಗಳೂ ಇಲ್ಲ.
ಇಲ್ಲಿ ನಾವು ಗಮನಿಸಬೇಕಿರುವ ಒಂದು ಸಂಗತಿ ಇದೆ. ಮಂಡಲ್ ಪಂಚಾಯತ್ ಹಂತದಿಂದ ದೆಹಲಿಯವರೆಗೆ ಪ್ರತಿಯೊಂದು ಹಂತದಲ್ಲೂ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಇರುತ್ತಾನೆ. ಈ ಪ್ರತಿನಿಧಿಗೆ ತನ್ನ ಸುತ್ತಲಿನ ಆಡಳಿತದ ಮೇಲ್ವಿಚಾರಣೆ ನಡೆಸುವ ಅಧಿಕಾರ ಮತ್ತು ನೈತಿಕ ಹೊಣೆ ಇರುತ್ತದೆ. ಕನಿಷ್ಟ ತನ್ನ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏನು ನಡೆಯುತ್ತಿದೆ ಎಂದು ಅರಿತಿರಬೇಕಾದ್ದು ಈ ಪ್ರತಿನಿಧಿಯ ಸಾಂವಿಧಾನಿಕ ಕರ್ತವ್ಯವಲ್ಲವೇ ? ಆಡಳಿತ ನಿರ್ವಹಣೆಯಲ್ಲಿ ಉಂಟಾಗುವ ಪ್ರತಿಯೊಂದು ಲೋಪವನ್ನೂ ಗಮನಿಸಿ ಸರಿಪಡಿಸಲು ಒಬ್ಬ ಸಚಿವ ಇರುತ್ತಾನೆ. ನಡುವೆ ಸು(ಉ)ಸ್ತುವಾರಿ ಸಚಿವರೂ ಇರುತ್ತಾರೆ. ಸಚಿವರನ್ನು ಗಮನಿಸಲು ಮುಖ್ಯಮಂತ್ರಿಯ ಕುರ್ಚಿ ಇರುತ್ತದೆ. ಈ ಸರಪಳಿಯ ಒಂದು ಕೊಂಡಿ ಸಡಿಲವಾದರೂ ಅವಘಡಗಳು ಸಂಭವಿಸುತ್ತವೆ. ಆದರೆ ಹೊಣೆ ಯಾರದು ?
ಇಲ್ಲಿ ಅಧಿಕಾರ ರಾಜಕಾರಣದ ತೋಳ್ಬಲ ಮುನ್ನೆಲೆಗೆ ಬರುತ್ತದೆ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸತ್ತಿದ್ದು ಮೂರೇ ಜನ ಎಂದು ರಾಜ್ಯ ಆರೋಗ್ಯ ಸಚಿವರು ಹೇಳುತ್ತಾರೆ. ಅಂದರೆ ಉಳಿದವರೇನು ಆತ್ಮಹತ್ಯೆ ಮಾಡಿಕೊಂಡರೇ ? ಮೂರೇ ಜನ ಸತ್ತರು ಎಂದರೆ ಆ ಮೂರು ಜೀವಗಳಿಗೆ ಮೌಲ್ಯ ಇಲ್ಲವೇ ? ಇಂತಹ ದಾರುಣ ಸಾವು ಸಂಭವಿಸಿದರೂ, ಇಷ್ಟೆಲ್ಲಾ ಅನಾಹುತವಾದರೂ ಕೊಂಚವೂ ಪಾಪಪ್ರಜ್ಞೆ ಇಲ್ಲದೆ ತಮ್ಮ ಸ್ಥಾನಭದ್ರತೆಗಾಗಿ ಅನ್ಯ ಮಾರ್ಗಗಳನ್ನು ಹುಡುಕುತ್ತಾ ಹೋಗುವಂತಹ ಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡಿದ್ದೇವೆ. ಇವರೇಕೆ ಹೀಗೆ ? ಏಕೆಂದರೆ ಇವರು ಮೂಲತಃ ವ್ಯಾಪಾರಿಗಳು. ಗುತ್ತಿಗೆದಾರರು. ಸಾವು, ನೋವು, ನಷ್ಟ, ಸಂಕಷ್ಟ ಎಲ್ಲವೂ ವ್ಯಾಪಾರದ ಒಂದು ಭಾಗ. ಅಷ್ಟೇ ಅಲ್ಲವೇ ?
ಭೂಪಾಲ್ ಅನಿಲ ದುರಂತದಿಂದ ವಿಶಾಖಪಟ್ಟಣಂ ದುರಂತದವರೆಗೆ, ಇತ್ತೀಚೆಗೆ ಕರ್ನಾಟಕದಲ್ಲೇ ನಡೆದ ಗಣಿ ಸ್ಪೋಟದವರೆಗೆ ಪ್ರಾಣ ಕಳೆದುಕೊಂಡ ಅಮಾಯಕ ಕಾರ್ಮಿಕರಿಗೆ ಪರಿಹಾರದ ಚೆಕ್ ಹೊರತುಪಡಿಸಿ ಮತ್ತಾವ ಪರಿಹಾರ ದೊರೆತಿದೆ ? ಈಗ ಕೊರೋನಾ ಪೀಡಿತರೂ ಇವರ ಸಾಲಿಗೇ ಸೇರುತ್ತಾರೆ. ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ತಿಳಿದಿದ್ದರೂ ಚುನಾವಣಾ ಸಭೆಗಳನ್ನು ನಡೆಸಿ, ಲಕ್ಷಾಂತರ ಜನರು ಸೇರುವಂತೆ ಮಾಡಿದ ರಾಜಕೀಯ ಪಕ್ಷಗಳು ಹೊಣೆ ಹೊರುವುದಿಲ್ಲ. ಭಾರತ ಕೋವಿದ್ ವಿರುದ್ಧ ಗೆದ್ದಿದೆ ಎಂದು ಆತ್ಮರತಿಯಿಂದ ಬೀಗಿದ ಪ್ರಧಾನಮಂತ್ರಿ ಇಂದಿನ ಪರಿಸ್ಥಿತಿಗೆ ನೈತಿಕ ಹೊಣೆ ಹೊರುವುದಿಲ್ಲ. ಕುಂಭಮೇಳ ನಡೆಸಿದ ಉತ್ತರಖಾಂಡ ಸರ್ಕಾರ ಹೊಣೆ ಹೊರುವುದಿಲ್ಲ. ಏಕೆಂದರೆ ಬಲಿಯಾಗುತ್ತಿರುವ ಮತದಾರರು, ಮತ್ತೊಂದು ಮತದಾನದ ವೇಳೆಗೆ ಇವೆಲ್ಲವನ್ನೂ ಮರೆತಿರುತ್ತಾರೆ.
ಇಂದು ಭಾರತ ಕೋವಿದ್ 19 ಹಿನ್ನೆಲೆಯಲ್ಲಿ ಎದುರಿಸುತ್ತಿರುವ ಮೂಲ ಸಮಸ್ಯೆಗಳೆಂದರೆ, ಆಮ್ಲಜನಕ ಪೂರೈಕೆ, ಆಕ್ಸಿಜನ್ ಇರುವ ಹಾಸಿಗೆಯ ಕೊರತೆ, ಸೋಂಕಿತರಿಗೆ ಆಸ್ಪತ್ರೆಗಳ ಕೊರತೆ, ಕೆಲವೆಡೆ ರೆಮಿಡಿಸಿವರ್ ನಂತಹ ಶಮನಕಾರಿ ಔಷಧಿಯ ಕೊರತೆ , ವೆಂಟಿಲೇಟರ್ ಕೊರತೆ. ಈ ಕೊರತೆಗಳು ಸೃಷ್ಟಿಯಾಗಲು ಕಾರಣವೇನು ? ಕೇಂದ್ರ ಸರ್ಕಾರ ಭಾರತ ಕೋವಿದ್ ಮುಕ್ತವಾಗಿದೆ ಎಂಬ ಆತ್ಮರತಿಯಲ್ಲಿ ಮುಳುಗಿಹೋಗಿದ್ದುದು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿಯೂ ಇದೇ ಸ್ವಪ್ರಶಂಸೆಯ ಮಾತುಗಳನ್ನು ದಾಖಲಿಸಲಾಗಿದೆ. ಈ ಎಲ್ಲ ಕೊರತೆಗಳು ಕಳೆದ ಬಾರಿಯ ಕೋವಿದ್ ಸಂದರ್ಭದಲ್ಲೂ ತಲೆದೋರಿದ್ದವು ಎಂದ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದಿತ್ತಲ್ಲವೇ ? ಈ ಲೋಪಕ್ಕೆ ಯಾರು ಹೊಣೆ. ನಮ್ಮ ಜನಪ್ರತಿನಿಧಿಗಳಿಗೆ ನೈತಿಕತೆ ಇದ್ದರೆ ಪ್ರಧಾನಿಯಿಂದ ಮಂಡಲ ಪಂಚಾಯತಿ ಸದಸ್ಯನವರೆಗೂ ಈ ಹೊಣೆ ಹೊರಬೇಕಾಗುತ್ತದೆ.
ಪ್ರಜಾತಂತ್ರ ವ್ಯವಸ್ಥೆ ಇದನ್ನೇ ಬಯಸುತ್ತದೆ. ಆದರೆ ನಾವು ಪ್ರಜಾತಂತ್ರವನ್ನು ಮತಪೆಟ್ಟಿಗೆಯಿಂದ ಹೊರತೆಗೆದೇ ಇಲ್ಲ. ಪ್ರಜಾತಂತ್ರದ ಸಾಂವಿಧಾನಿಕ ಮೌಲ್ಯಗಳ ಪರಿವೆಯೇ ಇಲ್ಲದ ಉದ್ಯಮಿಗಳನ್ನು ನಾವೇ ಆಯ್ಕೆ ಮಾಡಿದ್ದೇವೆ. ಊಳಿಗಮಾನ್ಯ ಧೋರಣೆಯಿಂದ ಇಂದಿಗೂ ಹೊರಬರದ ಈ ಔದ್ಯಮಿಕ ಹಿತಾಸಕ್ತಿಗಳಿಗೆ ಪ್ರಜೆಗಳ ಅಮೂಲ್ಯ ಜೀವಗಳೂ ಮಾರುಕಟ್ಟೆ ಸರಕುಗಳಂತೆಯೇ ಕಾಣುತ್ತವೆ. ಅನಿಲ ಸೋರಿಕೆಯೋ, ಬಾಂಬ್ ಸ್ಫೋಟವೋ, ರೈಲು ಅಪಘಾತವೋ, ಕೋಮು ದಂಗೆಯೋ, ಹತ್ಯಾಕಾಂಡವೋ, ಭಯೋತ್ಪಾದನೆಯೋ ಜೀವ ಕಳೆದುಕೊಳ್ಳುವ ದೇಹಗಳು ಹೆಣಗಳ ಎಣಿಕೆಯ ನಂತರ ನಗಣ್ಯವಾಗಿಬಿಡುತ್ತದೆ. ಚಾಮರಾಜನಗರದ 24 ಶವಗಳಿಗೂ, ದೇಶಾದ್ಯಂತ ನಿತ್ಯ ಆಮ್ಲಜನಕ ಇಲ್ಲದೆ ಸಾಯುತ್ತಿರುವವರಿಗೂ ವ್ಯತ್ಯಾಸವೇನಾದರೂ ಇದ್ದರೆ ಅದು ಭೌಗೋಳಿಕ ಅಂತರವಷ್ಟೇ.
ಕೊರೋನಾ ನಮ್ಮನ್ನು ಕೊಲ್ಲುತ್ತಿಲ್ಲ. ಸುದ್ದಿಮನೆಗಳಲ್ಲಿ ಹೇಳುವಂತೆ ಅದು ಮಹಾಮಾರಿಯೂ ಅಲ್ಲ, ಹೆಮ್ಮಾರಿಯೂ ಅಲ್ಲ, ರಣಚಂಡಿಯೂ ಅಲ್ಲ. ಈ ವೈರಾಣುವನ್ನು ಎದುರಿಸಲು ಅಗತ್ಯವಾಗಿದ್ದ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ನಮ್ಮ “ರಣಕಲಿಗಳು ” ವಿಫಲವಾಗಿರುವುದು ಈ ಸಾವುಗಳಿಗೆ ಕಾರಣ. ಮತ್ತೆ ಫ್ಲಾಯ್ಡ್ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ನೋವಿನ ಧ್ವನಿಗಳು ನಮ್ಮ ನಡುವೆ ಕೇಳಿಬರುತ್ತಲೇ ಇದೆ. ಸರ್ಕಾರಗಳು ಕೋವಿದ್ ವಿರುದ್ಧ ಹೋರಾಡಲಿ. ನಾವು ಹೋರಾಡಬೇಕಿರುವುದು ಈ ಹಂತಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತಿರುವ ಹೊಣೆಗೇಡಿ ರಾಜಕೀಯ ಶಕ್ತಿಗಳ ವಿರುದ್ಧ. ಇಲ್ಲವಾದಲ್ಲಿ ಫ್ಲಾಯ್ಡ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತದೆ. #ನನಗೆಉಸಿರಾಡಲಾಗುತ್ತಿಲ್ಲ ಈ ನೋವಿನ ಧ್ವನಿ ಸಾರ್ವತ್ರಿಕವಾಗಿಬಿಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

