Connect with us

ರಾಜಕೀಯ

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Published

on

  • ನಾ ದಿವಾಕರ

ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು ಸುದ್ದಿಯಾಗಿ ಕಾಣುತ್ತಿದೆ, ಅಥವಾ ಚುನಾವಣಾ ರಾಜಕಾರಣದ ಮಾರುಕಟ್ಟೆ ಸರಕುಗಳಂತೆ ಕಾಣುತ್ತಿವೆ. ಕಳೆದ ಒಂದು ವರ್ಷದಲ್ಲಿ ಕೋವಿದ್ ಸೋಂಕಿನಿಂದಲೇ ಭಾರತ ಎರಡು ಲಕ್ಷಕ್ಕೂ ಹೆಚ್ಚು ನಾಗರಿಕರನ್ನು ಕಳೆದುಕೊಂಡಿದೆ. ಭಾರತದಂತಹ ಸಂಕೀರ್ಣ ಸಮಾಜದಲ್ಲಿ 2 ಲಕ್ಷ ಜನರ ಸಾವು ಹತ್ತು ಲಕ್ಷ ಜನರ ಬದುಕಿಗೆ ನಿರ್ಣಾಯಕವಾಗುತ್ತದೆ. ಈ ಕನಿಷ್ಟ ಪ್ರಜ್ಞೆ ನಮ್ಮ ಈಗಿನ ರಾಜಕೀಯ ನಾಯಕರುಗಳಿಗೆ ಇಲ್ಲ ಎಂದು ಹೇಳಬೇಕಿಲ್ಲ.

ಆದರೂ ಕೊರೋನಾ ಮತ್ತೊಮ್ಮೆ ಜನಸಾಮಾನ್ಯರ ನಿತ್ಯ ಬದುಕಿನಲ್ಲಿ ಹತಾಶೆಯನ್ನುಂಟುಮಾಡಿದೆ. ಮಧ್ಯಮ, ಮೇಲ್ ಮಧ್ಯಮ ವರ್ಗಗಳಲ್ಲಿಯೇ ಈ ಸನ್ನಿವೇಶ ಹತಾಶ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಏಕೆ ಹೀಗೆ ಸಾಯುತ್ತಿದ್ದಾರೆ ? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ನಿಜ, ಸಾವಿಗೆ ಕಾರಣಗಳಿವೆ. ಕೋವಿದ್ ಸಂದರ್ಭದಲ್ಲಿ ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವವರು ಸುಲಭ ತುತ್ತಾಗುತ್ತಾರೆ. ನಿತ್ಯ ಬದುಕಿನ ಅನಿವಾರ್ಯತೆಗಳು ಅಸಂಖ್ಯಾತ ಜನರನ್ನು ಸಾವಿನ ದವಡೆಗೆ ದೂಡುತ್ತಿರುವುದನ್ನು ನೋಡುತ್ತಲೇ, ಸಂತಾಪ, ಶ್ರದ್ಧಾಂಜಲಿ ಮತ್ತು ಕಂಬನಿಗಳ ನಡುವೆ ಮತ್ತೊಂದು ಸಾವಿನ ಸುದ್ದಿಯ ನಿರೀಕ್ಷೆಯಲ್ಲಿ ದಿನ ಕಳೆಯುವಂತಾಗಿದೆ.

137 ಕೋಟಿ ಜನರ ಪೈಕಿ ಕೇವಲ ಎರಡು ಲಕ್ಷ ಜನರು ಸತ್ತಿದ್ದಾರೆ. ನಗಣ್ಯ ಅಲ್ಲವೇ ? ಕರ್ನಾಟಕದ ಆರೋಗ್ಯ ಸಚಿವರು ಹೌದೆನ್ನುತ್ತಾರೆ. ಚಾಮರಾಜನಗರದಲ್ಲಿ 24 ಅಮಾಯಕ ಜೀವಗಳು ಆಮ್ಲಜನಕ ಇಲ್ಲದೆ ಅಸುನೀಗಿದಾಗ, ಕೇವಲ ಮೂರೇ ಜನ ಎಂದು ಎಣಿಸಿ ಹೇಳುವವರನ್ನು ನಾವು ಆರೋಗ್ಯ ಮಂತ್ರಿ ಎಂದು ಗೌರವಿಸುತ್ತಿದ್ದೇವೆ. ಹೆಣಗಳ ಎಣಿಕೆ ನಮ್ಮ ರಾಜಕೀಯ ಜೀವನದಲ್ಲಿ ಒಂದು ಸಂಸ್ಕೃತಿಯಾಗಿಯೇ ನೆಲೆಸಿಬಿಟ್ಟಿದೆ. ಹಣ ಎಣಿಸಿ ಮತ ಗಳಿಸುವುದು, ಮತ ಎಣಿಸಿ ಅಧಿಕಾರ ಗಳಿಸುವುದು, ಹೆಣ ಎಣಿಸಿ ಅಧಿಕಾರ ಉಳಿಸಿಕೊಳ್ಳುವುದು ಇದು ನವ ಭಾರತದ ಆಡಳಿತ ಸಂಹಿತೆಯಾಗಿರುವುದನ್ನು ವಿಷಾದದಿಂದಲೇ ಒಪ್ಪಿಕೊಳ್ಳಬೇಕಿದೆ.

ವಿಜಯೋತ್ಸವದ ಗುಂಗಿನಲ್ಲಿ ಜೀವ ಹರಣ ಮಾಡುವ ಒಂದು ವಿಕೃತ ಸಂಸ್ಕೃತಿಯನ್ನೂ ನಾವೇ ಬೆಳೆಸಿಕೊಂಡುಬಂದಿದ್ದೇವೆ. ಪಶ್ಚಿಮಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಒಂದು ಪ್ರಾತ್ಯಕ್ಷಿಕೆಯನ್ನು ನಮ್ಮ ಮುಂದಿಟ್ಟಿದೆ. ಸೋಲಿನ ಹತಾಶೆಯೂ ಜೀವ ನಾಶಕ್ಕೆ ಕಾರಣವಾಗುವುದನ್ನೂ ನೋಡಿದ್ದೇವೆ. ಈ ಘಟನೆಗಳು ನಮ್ಮ ಪ್ರಜ್ಞೆಯನ್ನು ಕಲಕುವುದಿಲ್ಲ, ತಾತ್ವಿಕ ನೆಲೆಯಲ್ಲಿ ಅಪರಾಧಿಗಳ ಶೋಧಕ್ಕೆ ಪ್ರೇರೇಪಿಸುತ್ತವೆ. ಏಕೆ ಹೀಗಾಗುತ್ತಿದೆ ಎಂಬ ಜಿಜ್ಞಾಸೆ ನಮ್ಮನ್ನು ಮತ್ತಷ್ಟು ಚಿಂತನೆಗೆ ದೂಡುವುದಿಲ್ಲ. ಬದಲಾಗಿ ರಾಜಕೀಯ/ಸೈದ್ಧಾಂತಿಕ ಗೋಡೆಗಳ ಹಿಂದೆ ನಿಂತು ಹೆಣಗಳಲ್ಲಿ ಅಧಿಕಾರದ ಮೆಟ್ಟಿಲುಗಳನ್ನು ಕಾಣತೊಡಗುತ್ತೇವೆ. ಹಾಗಾಗಿಯೇ ಸಾವಿರಾರು ಸಾವುಗಳನ್ನು ಸಂಭ್ರಮಿಸುವ ಮನಸುಗಳೂ ಏಳೆಂಟು ಜೀವಗಳಿಗೆ ಲೆಕ್ಕ ಕೇಳಲು ಮುಂದಾಗುತ್ತವೆ.

ಇದನ್ನೂ ಓದಿ |ರಾಜ್ಯದಲ್ಲಿ ಮೇ 10 ರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ

ಇಲ್ಲಿ ನಮಗೆ ಜಾರ್ಜ್ ಫ್ಲಾಯ್ಡ್ ಮತ್ತೆ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ಆ ಹತಾಶೆಯ ಧ್ವನಿ ಭಾರತದ ಉದ್ದಗಲಕ್ಕೂ ಧ್ವನಿಸುತ್ತಲೇ ಇದೆ. ಇಲ್ಲಿ ಜನಸಾಮಾನ್ಯರ ಕತ್ತು ಹಿಸುಕುತ್ತಿರುವುದು ಪೊಲೀಸರಲ್ಲ, ಒಂದು ವೈರಾಣು. ಉಸಿರಾಡುವ ಗಾಳಿ ಒದಗಿಸುವ ಹೊಣೆ ಆಡಳಿತ ನಿರ್ವಹಣೆ ಮಾಡುವ ಸರ್ಕಾರದ್ದು. ಎಷ್ಟು ಸುಂದರ ಶ್ರೇಣೀಕೃತ ಅಧಿಕಾರದ ಮೆಟ್ಟಿಲುಗಳನ್ನು ನಾವು ಸೃಷ್ಟಿಸಿಕೊಂಡಿದ್ದೇವೆ. ಮಂಡಲ ಪಂಚಾಯತಿಯಿಂದ ಸಂಸತ್ತಿನವರೆಗೆ. ಈ ಮೆಟ್ಟಲುಗಳ ಮೇಲೆ ನಡೆದಾಡುವ ಸಾಲಂಕೃತ ಪ್ರತಿನಿಧಿಗಳಿಗೆ ಮನುಜ ಪ್ರಜ್ಞೆ ಇದ್ದಿದ್ದರೆ ಬಹುಶಃ ಭಾರತ ಸಾವಿನ ಕೂಪ ಆಗುತ್ತಿರಲಿಲ್ಲ. ನಮ್ಮ ದೂಷಣೆಗೆ, ನಿಂದನೆಗೆ ಈಗ ಚೀನಾ, ಜಮಾತ್, ತಬ್ಲೀಗಿಗಳು ನಿಲುಕುವುದಿಲ್ಲ. ಅದು ಮುಗಿದ ಅಧ್ಯಾಯ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ನಿಭಾಯಿಸಲು ಸಿದ್ಧತೆ ನಡೆಸುತ್ತಿರುವುದನ್ನು ನೋಡಿದರೆ ನಮ್ಮ ದೇಶಕ್ಕೆ ಕೋವಿದ್ 19 ಈ ವರ್ಷವೇ ಪ್ರವೇಶಿಸಿದೆ ಎಂದು ಭಾಸವಾಗುತ್ತದೆ. ಆರು ತಿಂಗಳ ಕಾಲ ಮೈಮರೆತು ನಿದ್ರಿಸಿದ ಆಡಳಿತ ವ್ಯವಸ್ಥೆ ಈ ಒಮ್ಮೆಲೆ ಪುಟಿದೆದ್ದು ನಿಲ್ಲಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನಮ್ಮ ದೇಶದ ಆರೋಗ್ಯ ವ್ಯವಸ್ಥೆಗೆ ಸುಭದ್ರ ಬುನಾದಿ ಇಲ್ಲ. ಸಾಂದರ್ಭಿಕ, ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದನ್ನು ನಿರ್ವಹಣೆ ಎನ್ನುವುದಿಲ್ಲ, ಮೇಲ್ವಿಚಾರಣೆ ಎನ್ನುತ್ತಾರೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರಗಳು ಮಾಡುತ್ತಿರುವುದು ಮೇಲ್ವಿಚಾರಣೆ ಮಾತ್ರ.

ಹಾಗಾಗಿಯೇ ಈಗ ದೇಶಾದ್ಯಂತ ಹಾಹಾಕಾರ ಎದ್ದಿದೆ. ಆಸ್ಪತ್ರೆಯ ಸೌಲಭ್ಯಗಳಿಲ್ಲ, ಹಾಸಿಗೆಗಳು ದೊರೆಯುತ್ತಿಲ್ಲ, ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ, ವೆಂಟಿಲೇಟರ್ ಕೊರತೆ ಇದೆ, ರೆಮಿಡಿಸಿವಿರ್‍ನಂತಹ ಔಷಧಿಗಳಿಗೂ ಕೊರತೆ ಇದೆ. ಆದರೆ ಎಲ್ಲವೂ ಕಾಳಸಂತೆಯಲ್ಲಿ ದೊರೆಯುತ್ತಿದೆ. ಇಂತಹ ವಿಷಮ ಸನ್ನಿವೇಶದಲ್ಲೂ ಕರಾಳದಂಧೆಯೇ ಎಂದು ಹುಬ್ಬೇರಿಸುವುದು ಸಹಜ. ಅಚ್ಚರಿ ಬೇಕಿಲ್ಲ ಏಕೆಂದರೆ, ಇದು ಮಾರುಕಟ್ಟೆ ಪ್ರಪಂಚ. ಹೆಣವೂ ಬಿಕರಿಯಾಗುವ ಕರಾಳ ಮಾರುಕಟ್ಟೆಯಲ್ಲಿ ನಾವು ಮೌಲ್ಯಯುತ ಆಡಳಿತದ ನಿರೀಕ್ಷೆಯಲ್ಲಿದ್ದೇವೆ. ಕಾಳಸಂತೆ ವ್ಯಾಪಾರದ ಮೂಲ ಇರುವುದೇ ಸರಬರಾಜಿನ ಕೊರತೆಯಲ್ಲಿ, ಉತ್ಪಾದನೆಯ ಕೊರತೆಯಲ್ಲಿ ಅಲ್ಲ. ಈ ಸರಬರಾಜು ಅನಿರ್ಬಂಧಿತವಾಗಿ, ಶಿಸ್ತುಬದ್ಧತೆಯಿಂದ, ಕಾನೂನುರೀತ್ಯಾ ಚಾಲ್ತಿಯಲ್ಲಿರಬೇಕೆಂದರೆ ಇದನ್ನು ನಿರ್ವಹಿಸಲು ಒಂದು ಜವಾಬ್ದಾರಿಯುತ ಸರ್ಕಾರ ಅಗತ್ಯ.

ನಮ್ಮ ಕೊರತೆ ಇರುವುದೇ ಇಲ್ಲಿ. ಕಳೆದ ಎರಡು ದಶಕಗಳಲ್ಲಿ ನಾವು ಶಾಸನಸಭೆಗಳಿಗೆ ಆಯ್ಕೆ ಮಾಡುತ್ತಿರುವುದು ವ್ಯಾಪಾರಿಗಳನ್ನೇ ಹೊರತು, ನುರಿತ ಪ್ರಜ್ಞಾವಂತ ರಾಜಕಾರಣಿಗಳನ್ನು ಅಲ್ಲ. ಸಾಮಾಜಿಕ ಜನಾಂದೋಲನಗಳು, ಜನಪರ ಚಳುವಳಿಗಳು, ಕಾರ್ಮಿಕ ಹೋರಾಟಗಳ ಮಧ್ಯದಿಂದ ಮುನ್ನೆಲೆಗೆ ಬಂದಿರುವವರು ಮತ್ತು ಬೌದ್ಧಿಕವಾಗಿ ಪ್ರಬುದ್ಧತೆ ಹೊಂದಿರುವ ವ್ಯಕ್ತಿಗಳು ಅಧಿಕಾರ ರಾಜಕಾರಣದ ಚೌಕಟ್ಟಿನಿಂದಲೇ ಹೊರಗಿದ್ದಾರೆ.

ಒಂದು ವೇಳೆ ಒಳಗಿದ್ದರೂ ಬಹಿಷ್ಕೃತರಾಗಿ, ನಿರ್ಲಕ್ಷಿತರಾಗಿ ಅಧಿಕಾರ ಕೇಂದ್ರಗಳಿಂದ ದೂರವೇ ಇರುತ್ತಾರೆ. ಸೂಕ್ಷ್ಮ ಸಂವೇದನೆಯ ಅರ್ಥವನ್ನಾದರೂ ಅರಿತಿರುವ ಇಂಥವರ ಸ್ಥಾನವನ್ನು ಗುತ್ತಿಗೆದಾರರು, ಗಣಿ ಉದ್ಯಮಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ದಂಗೆಕೋರರು, ಮಾಫಿಯಾಗಳು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಆಕ್ರಮಿಸಿಕೊಳ್ಳುತ್ತಿದ್ದಾರೆ.

ಅಧಿಕಾರ ಸ್ಥಾನಗಳನ್ನು ಆಕ್ರಮಿಸಿಕೊಳ್ಳುವವರು ಇಂತಹ ಜನಪ್ರತಿನಿಧಿಗಳಿಗೆ ಬದ್ಧರಾಗಿರುತ್ತಾರೆ ಅಥವಾ ಕೆಲವೊಮ್ಮೆ ಇದೇ ಹಿನ್ನೆಲೆ ಇರುವವರೂ ಆಗಿರುತ್ತಾರೆ. ಸುಸ್ಥಿರ ಸರ್ಕಾರ ಎನ್ನುವ ಕಲ್ಪನೆ ಈ ಸ್ವಾರ್ಥ ರಾಜಕಾರಣವನ್ನು ಸಂರಕ್ಷಿಸುವ ಒಂದು ಪ್ರಜಾಸತ್ತಾತ್ಮಕ ವಿಧಾನ ಎಂದಷ್ಟೇ ಹೇಳಬಹುದು. ಆದ್ದರಿಂದಲೇ ಎಂತಹ ಪ್ರಮಾದವೇ ನಡೆದರೂ, ನೂರಾರು ಜನರ ಸಾವು ಸಂಭವಿಸಿದರೂ ಸಚಿವರೊಬ್ಬರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ದೃಶ್ಯವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಈ ರಾಜಕೀಯ ನಾಯಕರುಗಳಿಗೆ ತಮ್ಮ ಸ್ವಹಿತಾಸಕ್ತಿ ಮತ್ತು ತಾವು ನಂಬಿರುವ ಪಕ್ಷದ ಅಧಿಕಾರಾಸಕ್ತಿ ಎರಡೇ ಮುಖ್ಯವಾಗುತ್ತದೆ. ಜನರ ಸಾವು ನೋವುಗಳು ನಗಣ್ಯ ಎನಿಸಿಬಿಡುತ್ತವೆ.

ಇದನ್ನು ಚಾಮರಾಜನಗರದಲ್ಲಿ ಸಂಭವಿಸಿದ 24 ಸಾವುಗಳ ಹಿನ್ನೆಲೆಯಲ್ಲೇ ಗಮನಿಸಬಹುದು. ಸಂಸದ ತೇಜಸ್ವಿ ಸೂರ್ಯ ತಮ್ಮ ರಹಸ್ಯ ಕಾರ್ಯಾಚರಣೆಯ ಮೂಲಕ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ಹಗರಣದಲ್ಲೂ ಗಮನಿಸಬಹುದು. ಈ ಅವಘಡಗಳಿಗೆ ಯಾರು ಕಾರಣ ? ಎರಡೂ ಪ್ರಕರಣಗಳಲ್ಲಿ ಯಾವುದೋ ಅಗೋಚರ ಮಾಫಿಯಾ ಕೈವಾಡವಿರುತ್ತದೆ. ಉನ್ನತ ಮಟ್ಟದ ಅಧಿಕಾರಿಗಳಿಂದ ವಿಧಾನಸೌಧದವರೆಗೆ ಈ ಮಾಫಿಯಾದ ಬಾಹುಗಳು ಚಾಚಿರುತ್ತವೆ. ಬಿಬಿಎಂಪಿ ಹಗರಣದ ಹಿಂದೆ ಅಲ್ಲಿ ಗುತ್ತಿಗೆ ಕೆಲಸ ಮಾಡುವ ಕೆಳಮಟ್ಟದ ಅಧಿಕಾರಿಗಳೋ ಅಥವಾ ಗುತ್ತಿಗೆ ನೌಕರರೋ ಕಾರಣವಾಗಿರುವುದಿಲ್ಲ. ಇವರು ನಿಮಿತ್ತ ಮಾತ್ರ. ಬಿಬಿಎಂಪಿ ಉಸ್ತುವಾರಿ ಸಚಿವರ ಗಮನಕ್ಕೆ ಬಾರದೆ ಇಷ್ಟೆಲ್ಲಾ ನಡೆದಿರುತ್ತದೆ ಎಂದು ನಂಬಲು ಆಧಾರಗಳೂ ಇಲ್ಲ.

ಇಲ್ಲಿ ನಾವು ಗಮನಿಸಬೇಕಿರುವ ಒಂದು ಸಂಗತಿ ಇದೆ. ಮಂಡಲ್ ಪಂಚಾಯತ್ ಹಂತದಿಂದ ದೆಹಲಿಯವರೆಗೆ ಪ್ರತಿಯೊಂದು ಹಂತದಲ್ಲೂ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಇರುತ್ತಾನೆ. ಈ ಪ್ರತಿನಿಧಿಗೆ ತನ್ನ ಸುತ್ತಲಿನ ಆಡಳಿತದ ಮೇಲ್ವಿಚಾರಣೆ ನಡೆಸುವ ಅಧಿಕಾರ ಮತ್ತು ನೈತಿಕ ಹೊಣೆ ಇರುತ್ತದೆ. ಕನಿಷ್ಟ ತನ್ನ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏನು ನಡೆಯುತ್ತಿದೆ ಎಂದು ಅರಿತಿರಬೇಕಾದ್ದು ಈ ಪ್ರತಿನಿಧಿಯ ಸಾಂವಿಧಾನಿಕ ಕರ್ತವ್ಯವಲ್ಲವೇ ? ಆಡಳಿತ ನಿರ್ವಹಣೆಯಲ್ಲಿ ಉಂಟಾಗುವ ಪ್ರತಿಯೊಂದು ಲೋಪವನ್ನೂ ಗಮನಿಸಿ ಸರಿಪಡಿಸಲು ಒಬ್ಬ ಸಚಿವ ಇರುತ್ತಾನೆ. ನಡುವೆ ಸು(ಉ)ಸ್ತುವಾರಿ ಸಚಿವರೂ ಇರುತ್ತಾರೆ. ಸಚಿವರನ್ನು ಗಮನಿಸಲು ಮುಖ್ಯಮಂತ್ರಿಯ ಕುರ್ಚಿ ಇರುತ್ತದೆ. ಈ ಸರಪಳಿಯ ಒಂದು ಕೊಂಡಿ ಸಡಿಲವಾದರೂ ಅವಘಡಗಳು ಸಂಭವಿಸುತ್ತವೆ. ಆದರೆ ಹೊಣೆ ಯಾರದು ?

ಇಲ್ಲಿ ಅಧಿಕಾರ ರಾಜಕಾರಣದ ತೋಳ್ಬಲ ಮುನ್ನೆಲೆಗೆ ಬರುತ್ತದೆ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸತ್ತಿದ್ದು ಮೂರೇ ಜನ ಎಂದು ರಾಜ್ಯ ಆರೋಗ್ಯ ಸಚಿವರು ಹೇಳುತ್ತಾರೆ. ಅಂದರೆ ಉಳಿದವರೇನು ಆತ್ಮಹತ್ಯೆ ಮಾಡಿಕೊಂಡರೇ ? ಮೂರೇ ಜನ ಸತ್ತರು ಎಂದರೆ ಆ ಮೂರು ಜೀವಗಳಿಗೆ ಮೌಲ್ಯ ಇಲ್ಲವೇ ? ಇಂತಹ ದಾರುಣ ಸಾವು ಸಂಭವಿಸಿದರೂ, ಇಷ್ಟೆಲ್ಲಾ ಅನಾಹುತವಾದರೂ ಕೊಂಚವೂ ಪಾಪಪ್ರಜ್ಞೆ ಇಲ್ಲದೆ ತಮ್ಮ ಸ್ಥಾನಭದ್ರತೆಗಾಗಿ ಅನ್ಯ ಮಾರ್ಗಗಳನ್ನು ಹುಡುಕುತ್ತಾ ಹೋಗುವಂತಹ ಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡಿದ್ದೇವೆ. ಇವರೇಕೆ ಹೀಗೆ ? ಏಕೆಂದರೆ ಇವರು ಮೂಲತಃ ವ್ಯಾಪಾರಿಗಳು. ಗುತ್ತಿಗೆದಾರರು. ಸಾವು, ನೋವು, ನಷ್ಟ, ಸಂಕಷ್ಟ ಎಲ್ಲವೂ ವ್ಯಾಪಾರದ ಒಂದು ಭಾಗ. ಅಷ್ಟೇ ಅಲ್ಲವೇ ?

ಭೂಪಾಲ್ ಅನಿಲ ದುರಂತದಿಂದ ವಿಶಾಖಪಟ್ಟಣಂ ದುರಂತದವರೆಗೆ, ಇತ್ತೀಚೆಗೆ ಕರ್ನಾಟಕದಲ್ಲೇ ನಡೆದ ಗಣಿ ಸ್ಪೋಟದವರೆಗೆ ಪ್ರಾಣ ಕಳೆದುಕೊಂಡ ಅಮಾಯಕ ಕಾರ್ಮಿಕರಿಗೆ ಪರಿಹಾರದ ಚೆಕ್ ಹೊರತುಪಡಿಸಿ ಮತ್ತಾವ ಪರಿಹಾರ ದೊರೆತಿದೆ ? ಈಗ ಕೊರೋನಾ ಪೀಡಿತರೂ ಇವರ ಸಾಲಿಗೇ ಸೇರುತ್ತಾರೆ. ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ತಿಳಿದಿದ್ದರೂ ಚುನಾವಣಾ ಸಭೆಗಳನ್ನು ನಡೆಸಿ, ಲಕ್ಷಾಂತರ ಜನರು ಸೇರುವಂತೆ ಮಾಡಿದ ರಾಜಕೀಯ ಪಕ್ಷಗಳು ಹೊಣೆ ಹೊರುವುದಿಲ್ಲ. ಭಾರತ ಕೋವಿದ್ ವಿರುದ್ಧ ಗೆದ್ದಿದೆ ಎಂದು ಆತ್ಮರತಿಯಿಂದ ಬೀಗಿದ ಪ್ರಧಾನಮಂತ್ರಿ ಇಂದಿನ ಪರಿಸ್ಥಿತಿಗೆ ನೈತಿಕ ಹೊಣೆ ಹೊರುವುದಿಲ್ಲ. ಕುಂಭಮೇಳ ನಡೆಸಿದ ಉತ್ತರಖಾಂಡ ಸರ್ಕಾರ ಹೊಣೆ ಹೊರುವುದಿಲ್ಲ. ಏಕೆಂದರೆ ಬಲಿಯಾಗುತ್ತಿರುವ ಮತದಾರರು, ಮತ್ತೊಂದು ಮತದಾನದ ವೇಳೆಗೆ ಇವೆಲ್ಲವನ್ನೂ ಮರೆತಿರುತ್ತಾರೆ.

ಇಂದು ಭಾರತ ಕೋವಿದ್ 19 ಹಿನ್ನೆಲೆಯಲ್ಲಿ ಎದುರಿಸುತ್ತಿರುವ ಮೂಲ ಸಮಸ್ಯೆಗಳೆಂದರೆ, ಆಮ್ಲಜನಕ ಪೂರೈಕೆ, ಆಕ್ಸಿಜನ್ ಇರುವ ಹಾಸಿಗೆಯ ಕೊರತೆ, ಸೋಂಕಿತರಿಗೆ ಆಸ್ಪತ್ರೆಗಳ ಕೊರತೆ, ಕೆಲವೆಡೆ ರೆಮಿಡಿಸಿವರ್ ನಂತಹ ಶಮನಕಾರಿ ಔಷಧಿಯ ಕೊರತೆ , ವೆಂಟಿಲೇಟರ್ ಕೊರತೆ. ಈ ಕೊರತೆಗಳು ಸೃಷ್ಟಿಯಾಗಲು ಕಾರಣವೇನು ? ಕೇಂದ್ರ ಸರ್ಕಾರ ಭಾರತ ಕೋವಿದ್ ಮುಕ್ತವಾಗಿದೆ ಎಂಬ ಆತ್ಮರತಿಯಲ್ಲಿ ಮುಳುಗಿಹೋಗಿದ್ದುದು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿಯೂ ಇದೇ ಸ್ವಪ್ರಶಂಸೆಯ ಮಾತುಗಳನ್ನು ದಾಖಲಿಸಲಾಗಿದೆ. ಈ ಎಲ್ಲ ಕೊರತೆಗಳು ಕಳೆದ ಬಾರಿಯ ಕೋವಿದ್ ಸಂದರ್ಭದಲ್ಲೂ ತಲೆದೋರಿದ್ದವು ಎಂದ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದಿತ್ತಲ್ಲವೇ ? ಈ ಲೋಪಕ್ಕೆ ಯಾರು ಹೊಣೆ. ನಮ್ಮ ಜನಪ್ರತಿನಿಧಿಗಳಿಗೆ ನೈತಿಕತೆ ಇದ್ದರೆ ಪ್ರಧಾನಿಯಿಂದ ಮಂಡಲ ಪಂಚಾಯತಿ ಸದಸ್ಯನವರೆಗೂ ಈ ಹೊಣೆ ಹೊರಬೇಕಾಗುತ್ತದೆ.

ಪ್ರಜಾತಂತ್ರ ವ್ಯವಸ್ಥೆ ಇದನ್ನೇ ಬಯಸುತ್ತದೆ. ಆದರೆ ನಾವು ಪ್ರಜಾತಂತ್ರವನ್ನು ಮತಪೆಟ್ಟಿಗೆಯಿಂದ ಹೊರತೆಗೆದೇ ಇಲ್ಲ. ಪ್ರಜಾತಂತ್ರದ ಸಾಂವಿಧಾನಿಕ ಮೌಲ್ಯಗಳ ಪರಿವೆಯೇ ಇಲ್ಲದ ಉದ್ಯಮಿಗಳನ್ನು ನಾವೇ ಆಯ್ಕೆ ಮಾಡಿದ್ದೇವೆ. ಊಳಿಗಮಾನ್ಯ ಧೋರಣೆಯಿಂದ ಇಂದಿಗೂ ಹೊರಬರದ ಈ ಔದ್ಯಮಿಕ ಹಿತಾಸಕ್ತಿಗಳಿಗೆ ಪ್ರಜೆಗಳ ಅಮೂಲ್ಯ ಜೀವಗಳೂ ಮಾರುಕಟ್ಟೆ ಸರಕುಗಳಂತೆಯೇ ಕಾಣುತ್ತವೆ. ಅನಿಲ ಸೋರಿಕೆಯೋ, ಬಾಂಬ್ ಸ್ಫೋಟವೋ, ರೈಲು ಅಪಘಾತವೋ, ಕೋಮು ದಂಗೆಯೋ, ಹತ್ಯಾಕಾಂಡವೋ, ಭಯೋತ್ಪಾದನೆಯೋ ಜೀವ ಕಳೆದುಕೊಳ್ಳುವ ದೇಹಗಳು ಹೆಣಗಳ ಎಣಿಕೆಯ ನಂತರ ನಗಣ್ಯವಾಗಿಬಿಡುತ್ತದೆ. ಚಾಮರಾಜನಗರದ 24 ಶವಗಳಿಗೂ, ದೇಶಾದ್ಯಂತ ನಿತ್ಯ ಆಮ್ಲಜನಕ ಇಲ್ಲದೆ ಸಾಯುತ್ತಿರುವವರಿಗೂ ವ್ಯತ್ಯಾಸವೇನಾದರೂ ಇದ್ದರೆ ಅದು ಭೌಗೋಳಿಕ ಅಂತರವಷ್ಟೇ.

ಕೊರೋನಾ ನಮ್ಮನ್ನು ಕೊಲ್ಲುತ್ತಿಲ್ಲ. ಸುದ್ದಿಮನೆಗಳಲ್ಲಿ ಹೇಳುವಂತೆ ಅದು ಮಹಾಮಾರಿಯೂ ಅಲ್ಲ, ಹೆಮ್ಮಾರಿಯೂ ಅಲ್ಲ, ರಣಚಂಡಿಯೂ ಅಲ್ಲ. ಈ ವೈರಾಣುವನ್ನು ಎದುರಿಸಲು ಅಗತ್ಯವಾಗಿದ್ದ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ನಮ್ಮ “ರಣಕಲಿಗಳು ” ವಿಫಲವಾಗಿರುವುದು ಈ ಸಾವುಗಳಿಗೆ ಕಾರಣ. ಮತ್ತೆ ಫ್ಲಾಯ್ಡ್ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ನೋವಿನ ಧ್ವನಿಗಳು ನಮ್ಮ ನಡುವೆ ಕೇಳಿಬರುತ್ತಲೇ ಇದೆ. ಸರ್ಕಾರಗಳು ಕೋವಿದ್ ವಿರುದ್ಧ ಹೋರಾಡಲಿ. ನಾವು ಹೋರಾಡಬೇಕಿರುವುದು ಈ ಹಂತಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತಿರುವ ಹೊಣೆಗೇಡಿ ರಾಜಕೀಯ ಶಕ್ತಿಗಳ ವಿರುದ್ಧ. ಇಲ್ಲವಾದಲ್ಲಿ ಫ್ಲಾಯ್ಡ್‍ಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತದೆ. #ನನಗೆಉಸಿರಾಡಲಾಗುತ್ತಿಲ್ಲ ಈ ನೋವಿನ ಧ್ವನಿ ಸಾರ್ವತ್ರಿಕವಾಗಿಬಿಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending