ರಾಜಕೀಯ
ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ
- ನಾ ದಿವಾಕರ
ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು ಸುದ್ದಿಯಾಗಿ ಕಾಣುತ್ತಿದೆ, ಅಥವಾ ಚುನಾವಣಾ ರಾಜಕಾರಣದ ಮಾರುಕಟ್ಟೆ ಸರಕುಗಳಂತೆ ಕಾಣುತ್ತಿವೆ. ಕಳೆದ ಒಂದು ವರ್ಷದಲ್ಲಿ ಕೋವಿದ್ ಸೋಂಕಿನಿಂದಲೇ ಭಾರತ ಎರಡು ಲಕ್ಷಕ್ಕೂ ಹೆಚ್ಚು ನಾಗರಿಕರನ್ನು ಕಳೆದುಕೊಂಡಿದೆ. ಭಾರತದಂತಹ ಸಂಕೀರ್ಣ ಸಮಾಜದಲ್ಲಿ 2 ಲಕ್ಷ ಜನರ ಸಾವು ಹತ್ತು ಲಕ್ಷ ಜನರ ಬದುಕಿಗೆ ನಿರ್ಣಾಯಕವಾಗುತ್ತದೆ. ಈ ಕನಿಷ್ಟ ಪ್ರಜ್ಞೆ ನಮ್ಮ ಈಗಿನ ರಾಜಕೀಯ ನಾಯಕರುಗಳಿಗೆ ಇಲ್ಲ ಎಂದು ಹೇಳಬೇಕಿಲ್ಲ.
ಆದರೂ ಕೊರೋನಾ ಮತ್ತೊಮ್ಮೆ ಜನಸಾಮಾನ್ಯರ ನಿತ್ಯ ಬದುಕಿನಲ್ಲಿ ಹತಾಶೆಯನ್ನುಂಟುಮಾಡಿದೆ. ಮಧ್ಯಮ, ಮೇಲ್ ಮಧ್ಯಮ ವರ್ಗಗಳಲ್ಲಿಯೇ ಈ ಸನ್ನಿವೇಶ ಹತಾಶ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಏಕೆ ಹೀಗೆ ಸಾಯುತ್ತಿದ್ದಾರೆ ? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ನಿಜ, ಸಾವಿಗೆ ಕಾರಣಗಳಿವೆ. ಕೋವಿದ್ ಸಂದರ್ಭದಲ್ಲಿ ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವವರು ಸುಲಭ ತುತ್ತಾಗುತ್ತಾರೆ. ನಿತ್ಯ ಬದುಕಿನ ಅನಿವಾರ್ಯತೆಗಳು ಅಸಂಖ್ಯಾತ ಜನರನ್ನು ಸಾವಿನ ದವಡೆಗೆ ದೂಡುತ್ತಿರುವುದನ್ನು ನೋಡುತ್ತಲೇ, ಸಂತಾಪ, ಶ್ರದ್ಧಾಂಜಲಿ ಮತ್ತು ಕಂಬನಿಗಳ ನಡುವೆ ಮತ್ತೊಂದು ಸಾವಿನ ಸುದ್ದಿಯ ನಿರೀಕ್ಷೆಯಲ್ಲಿ ದಿನ ಕಳೆಯುವಂತಾಗಿದೆ.
137 ಕೋಟಿ ಜನರ ಪೈಕಿ ಕೇವಲ ಎರಡು ಲಕ್ಷ ಜನರು ಸತ್ತಿದ್ದಾರೆ. ನಗಣ್ಯ ಅಲ್ಲವೇ ? ಕರ್ನಾಟಕದ ಆರೋಗ್ಯ ಸಚಿವರು ಹೌದೆನ್ನುತ್ತಾರೆ. ಚಾಮರಾಜನಗರದಲ್ಲಿ 24 ಅಮಾಯಕ ಜೀವಗಳು ಆಮ್ಲಜನಕ ಇಲ್ಲದೆ ಅಸುನೀಗಿದಾಗ, ಕೇವಲ ಮೂರೇ ಜನ ಎಂದು ಎಣಿಸಿ ಹೇಳುವವರನ್ನು ನಾವು ಆರೋಗ್ಯ ಮಂತ್ರಿ ಎಂದು ಗೌರವಿಸುತ್ತಿದ್ದೇವೆ. ಹೆಣಗಳ ಎಣಿಕೆ ನಮ್ಮ ರಾಜಕೀಯ ಜೀವನದಲ್ಲಿ ಒಂದು ಸಂಸ್ಕೃತಿಯಾಗಿಯೇ ನೆಲೆಸಿಬಿಟ್ಟಿದೆ. ಹಣ ಎಣಿಸಿ ಮತ ಗಳಿಸುವುದು, ಮತ ಎಣಿಸಿ ಅಧಿಕಾರ ಗಳಿಸುವುದು, ಹೆಣ ಎಣಿಸಿ ಅಧಿಕಾರ ಉಳಿಸಿಕೊಳ್ಳುವುದು ಇದು ನವ ಭಾರತದ ಆಡಳಿತ ಸಂಹಿತೆಯಾಗಿರುವುದನ್ನು ವಿಷಾದದಿಂದಲೇ ಒಪ್ಪಿಕೊಳ್ಳಬೇಕಿದೆ.
ವಿಜಯೋತ್ಸವದ ಗುಂಗಿನಲ್ಲಿ ಜೀವ ಹರಣ ಮಾಡುವ ಒಂದು ವಿಕೃತ ಸಂಸ್ಕೃತಿಯನ್ನೂ ನಾವೇ ಬೆಳೆಸಿಕೊಂಡುಬಂದಿದ್ದೇವೆ. ಪಶ್ಚಿಮಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಒಂದು ಪ್ರಾತ್ಯಕ್ಷಿಕೆಯನ್ನು ನಮ್ಮ ಮುಂದಿಟ್ಟಿದೆ. ಸೋಲಿನ ಹತಾಶೆಯೂ ಜೀವ ನಾಶಕ್ಕೆ ಕಾರಣವಾಗುವುದನ್ನೂ ನೋಡಿದ್ದೇವೆ. ಈ ಘಟನೆಗಳು ನಮ್ಮ ಪ್ರಜ್ಞೆಯನ್ನು ಕಲಕುವುದಿಲ್ಲ, ತಾತ್ವಿಕ ನೆಲೆಯಲ್ಲಿ ಅಪರಾಧಿಗಳ ಶೋಧಕ್ಕೆ ಪ್ರೇರೇಪಿಸುತ್ತವೆ. ಏಕೆ ಹೀಗಾಗುತ್ತಿದೆ ಎಂಬ ಜಿಜ್ಞಾಸೆ ನಮ್ಮನ್ನು ಮತ್ತಷ್ಟು ಚಿಂತನೆಗೆ ದೂಡುವುದಿಲ್ಲ. ಬದಲಾಗಿ ರಾಜಕೀಯ/ಸೈದ್ಧಾಂತಿಕ ಗೋಡೆಗಳ ಹಿಂದೆ ನಿಂತು ಹೆಣಗಳಲ್ಲಿ ಅಧಿಕಾರದ ಮೆಟ್ಟಿಲುಗಳನ್ನು ಕಾಣತೊಡಗುತ್ತೇವೆ. ಹಾಗಾಗಿಯೇ ಸಾವಿರಾರು ಸಾವುಗಳನ್ನು ಸಂಭ್ರಮಿಸುವ ಮನಸುಗಳೂ ಏಳೆಂಟು ಜೀವಗಳಿಗೆ ಲೆಕ್ಕ ಕೇಳಲು ಮುಂದಾಗುತ್ತವೆ.
ಇದನ್ನೂ ಓದಿ |ರಾಜ್ಯದಲ್ಲಿ ಮೇ 10 ರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ
ಇಲ್ಲಿ ನಮಗೆ ಜಾರ್ಜ್ ಫ್ಲಾಯ್ಡ್ ಮತ್ತೆ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ಆ ಹತಾಶೆಯ ಧ್ವನಿ ಭಾರತದ ಉದ್ದಗಲಕ್ಕೂ ಧ್ವನಿಸುತ್ತಲೇ ಇದೆ. ಇಲ್ಲಿ ಜನಸಾಮಾನ್ಯರ ಕತ್ತು ಹಿಸುಕುತ್ತಿರುವುದು ಪೊಲೀಸರಲ್ಲ, ಒಂದು ವೈರಾಣು. ಉಸಿರಾಡುವ ಗಾಳಿ ಒದಗಿಸುವ ಹೊಣೆ ಆಡಳಿತ ನಿರ್ವಹಣೆ ಮಾಡುವ ಸರ್ಕಾರದ್ದು. ಎಷ್ಟು ಸುಂದರ ಶ್ರೇಣೀಕೃತ ಅಧಿಕಾರದ ಮೆಟ್ಟಿಲುಗಳನ್ನು ನಾವು ಸೃಷ್ಟಿಸಿಕೊಂಡಿದ್ದೇವೆ. ಮಂಡಲ ಪಂಚಾಯತಿಯಿಂದ ಸಂಸತ್ತಿನವರೆಗೆ. ಈ ಮೆಟ್ಟಲುಗಳ ಮೇಲೆ ನಡೆದಾಡುವ ಸಾಲಂಕೃತ ಪ್ರತಿನಿಧಿಗಳಿಗೆ ಮನುಜ ಪ್ರಜ್ಞೆ ಇದ್ದಿದ್ದರೆ ಬಹುಶಃ ಭಾರತ ಸಾವಿನ ಕೂಪ ಆಗುತ್ತಿರಲಿಲ್ಲ. ನಮ್ಮ ದೂಷಣೆಗೆ, ನಿಂದನೆಗೆ ಈಗ ಚೀನಾ, ಜಮಾತ್, ತಬ್ಲೀಗಿಗಳು ನಿಲುಕುವುದಿಲ್ಲ. ಅದು ಮುಗಿದ ಅಧ್ಯಾಯ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ನಿಭಾಯಿಸಲು ಸಿದ್ಧತೆ ನಡೆಸುತ್ತಿರುವುದನ್ನು ನೋಡಿದರೆ ನಮ್ಮ ದೇಶಕ್ಕೆ ಕೋವಿದ್ 19 ಈ ವರ್ಷವೇ ಪ್ರವೇಶಿಸಿದೆ ಎಂದು ಭಾಸವಾಗುತ್ತದೆ. ಆರು ತಿಂಗಳ ಕಾಲ ಮೈಮರೆತು ನಿದ್ರಿಸಿದ ಆಡಳಿತ ವ್ಯವಸ್ಥೆ ಈ ಒಮ್ಮೆಲೆ ಪುಟಿದೆದ್ದು ನಿಲ್ಲಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನಮ್ಮ ದೇಶದ ಆರೋಗ್ಯ ವ್ಯವಸ್ಥೆಗೆ ಸುಭದ್ರ ಬುನಾದಿ ಇಲ್ಲ. ಸಾಂದರ್ಭಿಕ, ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದನ್ನು ನಿರ್ವಹಣೆ ಎನ್ನುವುದಿಲ್ಲ, ಮೇಲ್ವಿಚಾರಣೆ ಎನ್ನುತ್ತಾರೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರಗಳು ಮಾಡುತ್ತಿರುವುದು ಮೇಲ್ವಿಚಾರಣೆ ಮಾತ್ರ.
ಹಾಗಾಗಿಯೇ ಈಗ ದೇಶಾದ್ಯಂತ ಹಾಹಾಕಾರ ಎದ್ದಿದೆ. ಆಸ್ಪತ್ರೆಯ ಸೌಲಭ್ಯಗಳಿಲ್ಲ, ಹಾಸಿಗೆಗಳು ದೊರೆಯುತ್ತಿಲ್ಲ, ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ, ವೆಂಟಿಲೇಟರ್ ಕೊರತೆ ಇದೆ, ರೆಮಿಡಿಸಿವಿರ್ನಂತಹ ಔಷಧಿಗಳಿಗೂ ಕೊರತೆ ಇದೆ. ಆದರೆ ಎಲ್ಲವೂ ಕಾಳಸಂತೆಯಲ್ಲಿ ದೊರೆಯುತ್ತಿದೆ. ಇಂತಹ ವಿಷಮ ಸನ್ನಿವೇಶದಲ್ಲೂ ಕರಾಳದಂಧೆಯೇ ಎಂದು ಹುಬ್ಬೇರಿಸುವುದು ಸಹಜ. ಅಚ್ಚರಿ ಬೇಕಿಲ್ಲ ಏಕೆಂದರೆ, ಇದು ಮಾರುಕಟ್ಟೆ ಪ್ರಪಂಚ. ಹೆಣವೂ ಬಿಕರಿಯಾಗುವ ಕರಾಳ ಮಾರುಕಟ್ಟೆಯಲ್ಲಿ ನಾವು ಮೌಲ್ಯಯುತ ಆಡಳಿತದ ನಿರೀಕ್ಷೆಯಲ್ಲಿದ್ದೇವೆ. ಕಾಳಸಂತೆ ವ್ಯಾಪಾರದ ಮೂಲ ಇರುವುದೇ ಸರಬರಾಜಿನ ಕೊರತೆಯಲ್ಲಿ, ಉತ್ಪಾದನೆಯ ಕೊರತೆಯಲ್ಲಿ ಅಲ್ಲ. ಈ ಸರಬರಾಜು ಅನಿರ್ಬಂಧಿತವಾಗಿ, ಶಿಸ್ತುಬದ್ಧತೆಯಿಂದ, ಕಾನೂನುರೀತ್ಯಾ ಚಾಲ್ತಿಯಲ್ಲಿರಬೇಕೆಂದರೆ ಇದನ್ನು ನಿರ್ವಹಿಸಲು ಒಂದು ಜವಾಬ್ದಾರಿಯುತ ಸರ್ಕಾರ ಅಗತ್ಯ.
ನಮ್ಮ ಕೊರತೆ ಇರುವುದೇ ಇಲ್ಲಿ. ಕಳೆದ ಎರಡು ದಶಕಗಳಲ್ಲಿ ನಾವು ಶಾಸನಸಭೆಗಳಿಗೆ ಆಯ್ಕೆ ಮಾಡುತ್ತಿರುವುದು ವ್ಯಾಪಾರಿಗಳನ್ನೇ ಹೊರತು, ನುರಿತ ಪ್ರಜ್ಞಾವಂತ ರಾಜಕಾರಣಿಗಳನ್ನು ಅಲ್ಲ. ಸಾಮಾಜಿಕ ಜನಾಂದೋಲನಗಳು, ಜನಪರ ಚಳುವಳಿಗಳು, ಕಾರ್ಮಿಕ ಹೋರಾಟಗಳ ಮಧ್ಯದಿಂದ ಮುನ್ನೆಲೆಗೆ ಬಂದಿರುವವರು ಮತ್ತು ಬೌದ್ಧಿಕವಾಗಿ ಪ್ರಬುದ್ಧತೆ ಹೊಂದಿರುವ ವ್ಯಕ್ತಿಗಳು ಅಧಿಕಾರ ರಾಜಕಾರಣದ ಚೌಕಟ್ಟಿನಿಂದಲೇ ಹೊರಗಿದ್ದಾರೆ.
ಒಂದು ವೇಳೆ ಒಳಗಿದ್ದರೂ ಬಹಿಷ್ಕೃತರಾಗಿ, ನಿರ್ಲಕ್ಷಿತರಾಗಿ ಅಧಿಕಾರ ಕೇಂದ್ರಗಳಿಂದ ದೂರವೇ ಇರುತ್ತಾರೆ. ಸೂಕ್ಷ್ಮ ಸಂವೇದನೆಯ ಅರ್ಥವನ್ನಾದರೂ ಅರಿತಿರುವ ಇಂಥವರ ಸ್ಥಾನವನ್ನು ಗುತ್ತಿಗೆದಾರರು, ಗಣಿ ಉದ್ಯಮಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ದಂಗೆಕೋರರು, ಮಾಫಿಯಾಗಳು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಆಕ್ರಮಿಸಿಕೊಳ್ಳುತ್ತಿದ್ದಾರೆ.
ಅಧಿಕಾರ ಸ್ಥಾನಗಳನ್ನು ಆಕ್ರಮಿಸಿಕೊಳ್ಳುವವರು ಇಂತಹ ಜನಪ್ರತಿನಿಧಿಗಳಿಗೆ ಬದ್ಧರಾಗಿರುತ್ತಾರೆ ಅಥವಾ ಕೆಲವೊಮ್ಮೆ ಇದೇ ಹಿನ್ನೆಲೆ ಇರುವವರೂ ಆಗಿರುತ್ತಾರೆ. ಸುಸ್ಥಿರ ಸರ್ಕಾರ ಎನ್ನುವ ಕಲ್ಪನೆ ಈ ಸ್ವಾರ್ಥ ರಾಜಕಾರಣವನ್ನು ಸಂರಕ್ಷಿಸುವ ಒಂದು ಪ್ರಜಾಸತ್ತಾತ್ಮಕ ವಿಧಾನ ಎಂದಷ್ಟೇ ಹೇಳಬಹುದು. ಆದ್ದರಿಂದಲೇ ಎಂತಹ ಪ್ರಮಾದವೇ ನಡೆದರೂ, ನೂರಾರು ಜನರ ಸಾವು ಸಂಭವಿಸಿದರೂ ಸಚಿವರೊಬ್ಬರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ದೃಶ್ಯವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಈ ರಾಜಕೀಯ ನಾಯಕರುಗಳಿಗೆ ತಮ್ಮ ಸ್ವಹಿತಾಸಕ್ತಿ ಮತ್ತು ತಾವು ನಂಬಿರುವ ಪಕ್ಷದ ಅಧಿಕಾರಾಸಕ್ತಿ ಎರಡೇ ಮುಖ್ಯವಾಗುತ್ತದೆ. ಜನರ ಸಾವು ನೋವುಗಳು ನಗಣ್ಯ ಎನಿಸಿಬಿಡುತ್ತವೆ.
ಇದನ್ನು ಚಾಮರಾಜನಗರದಲ್ಲಿ ಸಂಭವಿಸಿದ 24 ಸಾವುಗಳ ಹಿನ್ನೆಲೆಯಲ್ಲೇ ಗಮನಿಸಬಹುದು. ಸಂಸದ ತೇಜಸ್ವಿ ಸೂರ್ಯ ತಮ್ಮ ರಹಸ್ಯ ಕಾರ್ಯಾಚರಣೆಯ ಮೂಲಕ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ಹಗರಣದಲ್ಲೂ ಗಮನಿಸಬಹುದು. ಈ ಅವಘಡಗಳಿಗೆ ಯಾರು ಕಾರಣ ? ಎರಡೂ ಪ್ರಕರಣಗಳಲ್ಲಿ ಯಾವುದೋ ಅಗೋಚರ ಮಾಫಿಯಾ ಕೈವಾಡವಿರುತ್ತದೆ. ಉನ್ನತ ಮಟ್ಟದ ಅಧಿಕಾರಿಗಳಿಂದ ವಿಧಾನಸೌಧದವರೆಗೆ ಈ ಮಾಫಿಯಾದ ಬಾಹುಗಳು ಚಾಚಿರುತ್ತವೆ. ಬಿಬಿಎಂಪಿ ಹಗರಣದ ಹಿಂದೆ ಅಲ್ಲಿ ಗುತ್ತಿಗೆ ಕೆಲಸ ಮಾಡುವ ಕೆಳಮಟ್ಟದ ಅಧಿಕಾರಿಗಳೋ ಅಥವಾ ಗುತ್ತಿಗೆ ನೌಕರರೋ ಕಾರಣವಾಗಿರುವುದಿಲ್ಲ. ಇವರು ನಿಮಿತ್ತ ಮಾತ್ರ. ಬಿಬಿಎಂಪಿ ಉಸ್ತುವಾರಿ ಸಚಿವರ ಗಮನಕ್ಕೆ ಬಾರದೆ ಇಷ್ಟೆಲ್ಲಾ ನಡೆದಿರುತ್ತದೆ ಎಂದು ನಂಬಲು ಆಧಾರಗಳೂ ಇಲ್ಲ.
ಇಲ್ಲಿ ನಾವು ಗಮನಿಸಬೇಕಿರುವ ಒಂದು ಸಂಗತಿ ಇದೆ. ಮಂಡಲ್ ಪಂಚಾಯತ್ ಹಂತದಿಂದ ದೆಹಲಿಯವರೆಗೆ ಪ್ರತಿಯೊಂದು ಹಂತದಲ್ಲೂ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಇರುತ್ತಾನೆ. ಈ ಪ್ರತಿನಿಧಿಗೆ ತನ್ನ ಸುತ್ತಲಿನ ಆಡಳಿತದ ಮೇಲ್ವಿಚಾರಣೆ ನಡೆಸುವ ಅಧಿಕಾರ ಮತ್ತು ನೈತಿಕ ಹೊಣೆ ಇರುತ್ತದೆ. ಕನಿಷ್ಟ ತನ್ನ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏನು ನಡೆಯುತ್ತಿದೆ ಎಂದು ಅರಿತಿರಬೇಕಾದ್ದು ಈ ಪ್ರತಿನಿಧಿಯ ಸಾಂವಿಧಾನಿಕ ಕರ್ತವ್ಯವಲ್ಲವೇ ? ಆಡಳಿತ ನಿರ್ವಹಣೆಯಲ್ಲಿ ಉಂಟಾಗುವ ಪ್ರತಿಯೊಂದು ಲೋಪವನ್ನೂ ಗಮನಿಸಿ ಸರಿಪಡಿಸಲು ಒಬ್ಬ ಸಚಿವ ಇರುತ್ತಾನೆ. ನಡುವೆ ಸು(ಉ)ಸ್ತುವಾರಿ ಸಚಿವರೂ ಇರುತ್ತಾರೆ. ಸಚಿವರನ್ನು ಗಮನಿಸಲು ಮುಖ್ಯಮಂತ್ರಿಯ ಕುರ್ಚಿ ಇರುತ್ತದೆ. ಈ ಸರಪಳಿಯ ಒಂದು ಕೊಂಡಿ ಸಡಿಲವಾದರೂ ಅವಘಡಗಳು ಸಂಭವಿಸುತ್ತವೆ. ಆದರೆ ಹೊಣೆ ಯಾರದು ?
ಇಲ್ಲಿ ಅಧಿಕಾರ ರಾಜಕಾರಣದ ತೋಳ್ಬಲ ಮುನ್ನೆಲೆಗೆ ಬರುತ್ತದೆ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸತ್ತಿದ್ದು ಮೂರೇ ಜನ ಎಂದು ರಾಜ್ಯ ಆರೋಗ್ಯ ಸಚಿವರು ಹೇಳುತ್ತಾರೆ. ಅಂದರೆ ಉಳಿದವರೇನು ಆತ್ಮಹತ್ಯೆ ಮಾಡಿಕೊಂಡರೇ ? ಮೂರೇ ಜನ ಸತ್ತರು ಎಂದರೆ ಆ ಮೂರು ಜೀವಗಳಿಗೆ ಮೌಲ್ಯ ಇಲ್ಲವೇ ? ಇಂತಹ ದಾರುಣ ಸಾವು ಸಂಭವಿಸಿದರೂ, ಇಷ್ಟೆಲ್ಲಾ ಅನಾಹುತವಾದರೂ ಕೊಂಚವೂ ಪಾಪಪ್ರಜ್ಞೆ ಇಲ್ಲದೆ ತಮ್ಮ ಸ್ಥಾನಭದ್ರತೆಗಾಗಿ ಅನ್ಯ ಮಾರ್ಗಗಳನ್ನು ಹುಡುಕುತ್ತಾ ಹೋಗುವಂತಹ ಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡಿದ್ದೇವೆ. ಇವರೇಕೆ ಹೀಗೆ ? ಏಕೆಂದರೆ ಇವರು ಮೂಲತಃ ವ್ಯಾಪಾರಿಗಳು. ಗುತ್ತಿಗೆದಾರರು. ಸಾವು, ನೋವು, ನಷ್ಟ, ಸಂಕಷ್ಟ ಎಲ್ಲವೂ ವ್ಯಾಪಾರದ ಒಂದು ಭಾಗ. ಅಷ್ಟೇ ಅಲ್ಲವೇ ?
ಭೂಪಾಲ್ ಅನಿಲ ದುರಂತದಿಂದ ವಿಶಾಖಪಟ್ಟಣಂ ದುರಂತದವರೆಗೆ, ಇತ್ತೀಚೆಗೆ ಕರ್ನಾಟಕದಲ್ಲೇ ನಡೆದ ಗಣಿ ಸ್ಪೋಟದವರೆಗೆ ಪ್ರಾಣ ಕಳೆದುಕೊಂಡ ಅಮಾಯಕ ಕಾರ್ಮಿಕರಿಗೆ ಪರಿಹಾರದ ಚೆಕ್ ಹೊರತುಪಡಿಸಿ ಮತ್ತಾವ ಪರಿಹಾರ ದೊರೆತಿದೆ ? ಈಗ ಕೊರೋನಾ ಪೀಡಿತರೂ ಇವರ ಸಾಲಿಗೇ ಸೇರುತ್ತಾರೆ. ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ತಿಳಿದಿದ್ದರೂ ಚುನಾವಣಾ ಸಭೆಗಳನ್ನು ನಡೆಸಿ, ಲಕ್ಷಾಂತರ ಜನರು ಸೇರುವಂತೆ ಮಾಡಿದ ರಾಜಕೀಯ ಪಕ್ಷಗಳು ಹೊಣೆ ಹೊರುವುದಿಲ್ಲ. ಭಾರತ ಕೋವಿದ್ ವಿರುದ್ಧ ಗೆದ್ದಿದೆ ಎಂದು ಆತ್ಮರತಿಯಿಂದ ಬೀಗಿದ ಪ್ರಧಾನಮಂತ್ರಿ ಇಂದಿನ ಪರಿಸ್ಥಿತಿಗೆ ನೈತಿಕ ಹೊಣೆ ಹೊರುವುದಿಲ್ಲ. ಕುಂಭಮೇಳ ನಡೆಸಿದ ಉತ್ತರಖಾಂಡ ಸರ್ಕಾರ ಹೊಣೆ ಹೊರುವುದಿಲ್ಲ. ಏಕೆಂದರೆ ಬಲಿಯಾಗುತ್ತಿರುವ ಮತದಾರರು, ಮತ್ತೊಂದು ಮತದಾನದ ವೇಳೆಗೆ ಇವೆಲ್ಲವನ್ನೂ ಮರೆತಿರುತ್ತಾರೆ.
ಇಂದು ಭಾರತ ಕೋವಿದ್ 19 ಹಿನ್ನೆಲೆಯಲ್ಲಿ ಎದುರಿಸುತ್ತಿರುವ ಮೂಲ ಸಮಸ್ಯೆಗಳೆಂದರೆ, ಆಮ್ಲಜನಕ ಪೂರೈಕೆ, ಆಕ್ಸಿಜನ್ ಇರುವ ಹಾಸಿಗೆಯ ಕೊರತೆ, ಸೋಂಕಿತರಿಗೆ ಆಸ್ಪತ್ರೆಗಳ ಕೊರತೆ, ಕೆಲವೆಡೆ ರೆಮಿಡಿಸಿವರ್ ನಂತಹ ಶಮನಕಾರಿ ಔಷಧಿಯ ಕೊರತೆ , ವೆಂಟಿಲೇಟರ್ ಕೊರತೆ. ಈ ಕೊರತೆಗಳು ಸೃಷ್ಟಿಯಾಗಲು ಕಾರಣವೇನು ? ಕೇಂದ್ರ ಸರ್ಕಾರ ಭಾರತ ಕೋವಿದ್ ಮುಕ್ತವಾಗಿದೆ ಎಂಬ ಆತ್ಮರತಿಯಲ್ಲಿ ಮುಳುಗಿಹೋಗಿದ್ದುದು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿಯೂ ಇದೇ ಸ್ವಪ್ರಶಂಸೆಯ ಮಾತುಗಳನ್ನು ದಾಖಲಿಸಲಾಗಿದೆ. ಈ ಎಲ್ಲ ಕೊರತೆಗಳು ಕಳೆದ ಬಾರಿಯ ಕೋವಿದ್ ಸಂದರ್ಭದಲ್ಲೂ ತಲೆದೋರಿದ್ದವು ಎಂದ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದಿತ್ತಲ್ಲವೇ ? ಈ ಲೋಪಕ್ಕೆ ಯಾರು ಹೊಣೆ. ನಮ್ಮ ಜನಪ್ರತಿನಿಧಿಗಳಿಗೆ ನೈತಿಕತೆ ಇದ್ದರೆ ಪ್ರಧಾನಿಯಿಂದ ಮಂಡಲ ಪಂಚಾಯತಿ ಸದಸ್ಯನವರೆಗೂ ಈ ಹೊಣೆ ಹೊರಬೇಕಾಗುತ್ತದೆ.
ಪ್ರಜಾತಂತ್ರ ವ್ಯವಸ್ಥೆ ಇದನ್ನೇ ಬಯಸುತ್ತದೆ. ಆದರೆ ನಾವು ಪ್ರಜಾತಂತ್ರವನ್ನು ಮತಪೆಟ್ಟಿಗೆಯಿಂದ ಹೊರತೆಗೆದೇ ಇಲ್ಲ. ಪ್ರಜಾತಂತ್ರದ ಸಾಂವಿಧಾನಿಕ ಮೌಲ್ಯಗಳ ಪರಿವೆಯೇ ಇಲ್ಲದ ಉದ್ಯಮಿಗಳನ್ನು ನಾವೇ ಆಯ್ಕೆ ಮಾಡಿದ್ದೇವೆ. ಊಳಿಗಮಾನ್ಯ ಧೋರಣೆಯಿಂದ ಇಂದಿಗೂ ಹೊರಬರದ ಈ ಔದ್ಯಮಿಕ ಹಿತಾಸಕ್ತಿಗಳಿಗೆ ಪ್ರಜೆಗಳ ಅಮೂಲ್ಯ ಜೀವಗಳೂ ಮಾರುಕಟ್ಟೆ ಸರಕುಗಳಂತೆಯೇ ಕಾಣುತ್ತವೆ. ಅನಿಲ ಸೋರಿಕೆಯೋ, ಬಾಂಬ್ ಸ್ಫೋಟವೋ, ರೈಲು ಅಪಘಾತವೋ, ಕೋಮು ದಂಗೆಯೋ, ಹತ್ಯಾಕಾಂಡವೋ, ಭಯೋತ್ಪಾದನೆಯೋ ಜೀವ ಕಳೆದುಕೊಳ್ಳುವ ದೇಹಗಳು ಹೆಣಗಳ ಎಣಿಕೆಯ ನಂತರ ನಗಣ್ಯವಾಗಿಬಿಡುತ್ತದೆ. ಚಾಮರಾಜನಗರದ 24 ಶವಗಳಿಗೂ, ದೇಶಾದ್ಯಂತ ನಿತ್ಯ ಆಮ್ಲಜನಕ ಇಲ್ಲದೆ ಸಾಯುತ್ತಿರುವವರಿಗೂ ವ್ಯತ್ಯಾಸವೇನಾದರೂ ಇದ್ದರೆ ಅದು ಭೌಗೋಳಿಕ ಅಂತರವಷ್ಟೇ.
ಕೊರೋನಾ ನಮ್ಮನ್ನು ಕೊಲ್ಲುತ್ತಿಲ್ಲ. ಸುದ್ದಿಮನೆಗಳಲ್ಲಿ ಹೇಳುವಂತೆ ಅದು ಮಹಾಮಾರಿಯೂ ಅಲ್ಲ, ಹೆಮ್ಮಾರಿಯೂ ಅಲ್ಲ, ರಣಚಂಡಿಯೂ ಅಲ್ಲ. ಈ ವೈರಾಣುವನ್ನು ಎದುರಿಸಲು ಅಗತ್ಯವಾಗಿದ್ದ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ನಮ್ಮ “ರಣಕಲಿಗಳು ” ವಿಫಲವಾಗಿರುವುದು ಈ ಸಾವುಗಳಿಗೆ ಕಾರಣ. ಮತ್ತೆ ಫ್ಲಾಯ್ಡ್ ನೆನಪಾಗುತ್ತಾನೆ. #ನನಗೆಉಸಿರಾಡಲಾಗುತ್ತಿಲ್ಲ ಎನ್ನುವ ನೋವಿನ ಧ್ವನಿಗಳು ನಮ್ಮ ನಡುವೆ ಕೇಳಿಬರುತ್ತಲೇ ಇದೆ. ಸರ್ಕಾರಗಳು ಕೋವಿದ್ ವಿರುದ್ಧ ಹೋರಾಡಲಿ. ನಾವು ಹೋರಾಡಬೇಕಿರುವುದು ಈ ಹಂತಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತಿರುವ ಹೊಣೆಗೇಡಿ ರಾಜಕೀಯ ಶಕ್ತಿಗಳ ವಿರುದ್ಧ. ಇಲ್ಲವಾದಲ್ಲಿ ಫ್ಲಾಯ್ಡ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತದೆ. #ನನಗೆಉಸಿರಾಡಲಾಗುತ್ತಿಲ್ಲ ಈ ನೋವಿನ ಧ್ವನಿ ಸಾರ್ವತ್ರಿಕವಾಗಿಬಿಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.
http://Visit : www.suddidina.com
ಗುಟ್ಕಾ, ಪಾನ್ ಮಸಾಲಾ ನಿಷೇಧಕ್ಕೂ ಆಗ್ರಹ
ಬಂದ್ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.
ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.
https://x.com/ians_india/status/2094602342230528256
ಟೈರ್ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ
ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.
ಬಂದ್ಗೆ ವ್ಯಾಪಾರಸ್ಥರ ಬೆಂಬಲ?
ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.
ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.
ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ
ಈ ಚುನಾವಣೆಯಲ್ಲಿ 21ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.
ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.
ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು
20ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.
ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ
ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.
ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.
ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

-
ದಿನದ ಸುದ್ದಿ7 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ



