ದಿನದ ಸುದ್ದಿ
‘ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು..?’ : ರೈತ ಹೋರಾಟ ಕುರಿತು ಪಾಪ್ ಗಾಯಕಿ ರಿಹಾನ ಟ್ವೀಟ್..!
- ದಿನೇಶ್ ಕುಮಾರ್ ಎಸ್.ಸಿ.
ಇಷ್ಟೇ ಆಕೆ ಬರೆದದ್ದು. ಜತೆಗೆ ಸಿಎನ್ ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. ನೋಡನೋಡುತ್ತಿದ್ದಂತೆ ಅದು ಲಕ್ಷಾಂತರ ರೀಟ್ವೀಟ್ ಗಳಾದವು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು.
ಆಕೆ ರಿಹಾನಾ. ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿ. ಟ್ವಿಟರ್ ಒಂದರಲ್ಲೇ ಆಕೆಯ ಅನುಯಾಯಿಗಳ ಸಂಖ್ಯೆ ಹತ್ತು ಕೋಟಿ! ಒಂಭತ್ತು ಗ್ರಾಮಿ ಅವಾರ್ಡ್, ಹದಿಮೂರು ಅಮೆರಿಕನ್ ಮ್ಯೂಸಿಕ್ ಅವಾರ್ಡ್, ಹನ್ನೆರಡು ಬಿಲ್ ಬೋರ್ಡ್ ಮ್ಯೂಸಿಕ್ ಅವಾರ್ಡ್ ಜತೆಗೆ ಆರು ಗಿನ್ನೆಸ್ ದಾಖಲೆಗಳು ಈಕೆಯ ಮಡಿಲಲ್ಲಿವೆ! ಜಗತ್ತಿನ ಯಾವುದೇ ಮಹಿಳಾ ಸಂಗೀತಗಾರ್ತಿಗಿಂತ ಹೆಚ್ಚು ಶ್ರೀಮಂತೆ ಈಕೆ. ಟೈಂ ಮ್ಯಾಗಜೀನ್ ನ ಜಗತ್ತಿನ ಅತಿಹೆಚ್ಚು ಪ್ರಭಾವಶಾಲಿ ಸೆಲೆಬ್ರಿಟಿಗಳಲ್ಲಿ ಈಕೆ ಹಲವಾರು ವರ್ಷ ಖಾಯಂ ಸ್ಥಾನ ಪಡೆದಿದ್ದಾರೆ. ಆಕೆಯ ಆಸ್ತಿಯ ಒಟ್ಟು ಮೌಲ್ಯ ಎಷ್ಟು ಗೊತ್ತೇ? 600 ಮಿಲಿಯನ್ ಡಾಲರ್!
ರಿಹಾನಾ ಕೆರೆಬಿಯನ್ ದ್ವೀಪ ಸಮೂಹದ ಬಾರ್ಬಡೋಸ್ ಎಂಬ ದೇಶದವರು. ಆಕೆಯ ಬಾಲ್ಯವೇ ಆಘಾತಕಾರಿಯಾಗಿತ್ತು. ಕುಡುಕ ಅಪ್ಪ ದಿನವೂ ಈಕೆಯ ತಾಯಿಯನ್ನು ಹೊಡೆಯುತ್ತಿದ್ದ. ರಿಹಾನಾಗೆ ವಿಪರೀತ ತಲೆನೋವು. ಅಮ್ಮ ಅಕೌಂಟೆಂಟ್, ಅಪ್ಪ ವೇರ್ ಹೌಸ್ ಒಂದರ ಸೂಪರ್ ವೈಜರ್. ಸಣ್ಣ ವಯಸ್ಸಿನಲ್ಲೇ ರಿಹಾನ ಬಟ್ಟೆ ವ್ಯಾಪಾರ ಮಾಡುತ್ತಿದ್ದಳು.
ಕುಡುಕ ಅಪ್ಪ ಕೊಕೈನ್ ಗೆ ಅಡಿಕ್ಟ್ ಆಗಿದ್ದ. ಪ್ರತಿನಿತ್ಯ ಮನೆ ರಣರಂಗವಾಗುತ್ತಿತ್ತು, ರಿಹಾನಾಳ ತಲೆನೋವೂ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕೊನೆಗೊಂದು ದಿನ ಈಕೆಗೆ ಹದಿನಾಲ್ಕು ವರ್ಷವಾಗಿದ್ದಾಗ ಅಪ್ಪ-ಅಮ್ಮ ಬೇರೆಯಾದರು. ರಿಹಾನಾಳ ತಲೆನೋವು ಸಂಪೂರ್ಣ ನಿಂತುಹೋಯಿತು!
ರಿಹಾನಾಗೆ ಸಂಗೀತದಲ್ಲಿ ಆಸಕ್ತಿಯಿತ್ತು. ನೀವು ಹೆಸರಾಂತ ಕ್ರಿಕೆಟಿಗರಾದ ಕ್ರಿಸ್ ಜೋರ್ಡಾನ್, ಕಾರ್ಲೋಸ್ ಬ್ರಥ್ ವೈಟ್ ಹೆಸರು ಕೇಳಿರುತ್ತೀರಿ. ಅವರ ಜತೆಯಲ್ಲೇ ಈಕೆ ಶಾಲೆಯಲ್ಲಿ ಓದಿದವಳು. 2003ರಲ್ಲಿ ರಿಹಾನ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ ಸಣ್ಣ ತಂಡ ಮಾಡಿಕೊಂಡು ಸಂಗೀತಾಭ್ಯಾಸ ಆರಂಭಿಸಿದಳು. ಅಮೆರಿಕದ ಮ್ಯೂಸಿಕ್ ಪ್ರೊಡ್ಯೂಸರ್ ಇವಾನ್ ರೋಜರ್ಸ್ ಎಂಬಾತನ ಕಣ್ಣಿಗೆ ಬಿತ್ತು ಈ ತಂಡ. ಆ ನಂತರ ರಿಹಾನಾಳ ಬದುಕಲ್ಲಿ ನಡೆದಿದ್ದೆಲ್ಲ ಪವಾಡ. ಆಕೆ ಮುಟ್ಟಿದ್ದೆಲ್ಲ ಚಿನ್ನ. ಸಂಗೀತ ಜಗತ್ತು ಅವಳನ್ನು ಆರಾಧಿಸಿತು. ಆಕೆ ಇಡೀ ಜಗತ್ತು ಸುತ್ತಿದಳು.
ಹತ್ತಾರು ಮ್ಯೂಸಿಕ್ ಆಲ್ಬಮ್ ಗಳು ಜನಪ್ರಿಯವಾದವು. ಹಣ, ಪ್ರಶಸ್ತಿ, ಖ್ಯಾತಿ ಎಲ್ಲವೂ ಆಕೆಯನ್ನು ಮುತ್ತಿಕೊಂಡವು. 2008ರ ಫೆಬ್ರವರಿ 22 ರಂದು ಅಂದಿನ ಬಾರ್ಬಡೋಸ್ ಸರ್ಕಾರ ರಿಹಾನಾಗೆ ಗೌರವ ನೀಡಲೆಂದು “ರಿಹಾನಾ ದಿನಾಚರಣೆ” (ರಿಹಾನಾ ಡೇ) ಆಚರಿಸಿತು. ಅದಾದ ನಂತರ ಪ್ರತಿವರ್ಷ ಫೆ.22ರಂದು ಬಾರ್ಬಡೋಸ್ ದೇಶದಲ್ಲಿ ರಿಹಾನಾ ಡೇ ಆಚರಿಸಲಾಗುತ್ತಿದೆ. ಬದುಕಿರುವಾಗಲೇ, ಅದೂ ಇಷ್ಟು ಸಣ್ಣ ವಯಸ್ಸಿಗೆ ಇಂಥ ಗೌರವ ಎಷ್ಟು ಜನರಿಗೆ ಸಿಕ್ಕೀತು ಹೇಳಿ?
ಇಂಥ ರಿಹಾನಾ ಈಗ ಭಾರತೀಯ ರೈತರ ಪರವಾಗಿ ಮಾತನಾಡಿದ್ದಾರೆ, ಅದು ಈಗ ಜಾಗತಿಕ ಸುದ್ದಿ. ರಿಹಾನಾ ಬೆನ್ನಲ್ಲೇ ಹಲವು ಜಾಗತಿಕ ಸೆಲೆಬ್ರಿಟಿಗಳು ಭಾರತದ ರೈತರ ಪ್ರತಿಭಟನೆಗಳನ್ನು ಬೆಂಬಲಿಸಿ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ರೈತರ ಕೂಗಿಗೆ ಆನೆ ಬಲ ಬಂದಂತಾಗಿದೆ.
ಅಂದಹಾಗೆ ರಿಹಾನಾ ಈ ರೀತಿಯಲ್ಲಿ ಜಾಗತಿಕ ವಿದ್ಯಮಾನಗಳಿಗೆ ಸ್ಪಂದಿಸುವುದು ಹೊಸದೇನೂ ಅಲ್ಲ. ಸೂಡಾನ್, ನೈಜೀರಿಯಾಗಳಲ್ಲಿ ನಡೆಯುತ್ತಿರುವ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಆಕೆ ಬೆಂಬಲಿಸಿದ್ದರು. ಮ್ಯಾನ್ಮಾರ್ ನ ಬೆಳವಣಿಗೆಗಳ ಕುರಿತೂ ಆಕೆ ಧ್ವನಿ ಎತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ನಂತರ ನಡೆದ ಐತಿಹಾಸಿಕ ಮಹಿಳಾ ರ್ಯಾಲಿಯಲ್ಲಿ ರಿಹಾನಾ ಭಾಗವಹಿಸಿದ್ದರು. ಹಲವಾರು ದೇಶಗಳ ಜನರಿಗೆ ವೀಸಾ ನಿರ್ಬಂಧಿಸಿದ ಟ್ರಂಪ್ ಸರ್ಕಾರದ ನಡೆಯನ್ನೂ ಅವರು ಹಿಂದೆ ಕಟುವಾಗಿ ಟೀಕಿಸಿದ್ದರು.
ಭಾರತದ ರೈತ ಹೋರಾಟದ ಕುರಿತು ರಿಹಾನಾ ನೀಡಿರುವ ಹೇಳಿಕೆ ಈಗ ‘ಗೇಮ್ ಚೇಂಜರ್’ ಎಂದೇ ಭಾವಿಸಲಾಗುತ್ತಿದೆ. ರಷ್ಯಾ, ಬ್ರೆಜಿಲ್ ಮತ್ತು ಭಾರತದಲ್ಲಿ ಈ ವರ್ಷದ ಬಹುದೊಡ್ಡ ಜನಹೋರಾಟಗಳು ನಡೆಯುತ್ತಿವೆ. ಆದರೆ ರಷ್ಯಾದ ಪ್ರತಿಭಟನೆಗಳಿಗೆ ಸಿಕ್ಕಷ್ಟು ಮಹತ್ವ ಭಾರತದ ರೈತರ ಪ್ರತಿಭಟನೆಗಳಿಗೆ ದೊರಕಿರಲಿಲ್ಲ. ಈಗ ರಿಹಾನಾ ಅವರ ಒಂದು ಟ್ವೀಟ್ ಎಲ್ಲವನ್ನೂ ಬದಲಿಸಿದೆ.
ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಒತ್ತಡ, ಮುಜುಗರಗಳಿಂದ ತಪ್ಪಿಸಿಕೊಳ್ಳಲು ಇರುವುದು ಏಕೈಕ ದಾರಿ, ರೈತರ ದಾರಿಯಲ್ಲಿ ಕಬ್ಬಿಣದ ಮುಳ್ಳುಗಳನ್ನು ನೆಡುವುದಲ್ಲ. ರೈತರು ಇಟ್ಟಿರುವ ಎರಡೇ ಬೇಡಿಕೆಗಳನ್ನು ಈಡೇರಿಸುವುದು. ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು, ಎಂಎಸ್ ಪಿಗೆ ಕಾನೂನಿಗೆ ಬಲ ನೀಡಬೇಕು. ರೈತರು ಇನ್ನೇನೂ ಕೇಳುತ್ತಿಲ್ಲ.
ಅದಕ್ಕೆ ಹೊರತಾಗಿ ಸರ್ಕಾರ ಬೇರೆ ಏನನ್ನು ಮಾಡಿದರೂ ಜಗತ್ತಿನಾದ್ಯಂತ ಟೀಕೆಗಳಿಗೆ ಒಳಪಡಲಿದೆ ಮತ್ತು ಇದರ ಪರಿಣಾಮವಾಗಿ ನಮ್ಮ ದೇಶದ ಹೆಸರು, ಮೌಲ್ಯವನ್ನೂ ಕಡಿಮೆ ಮಾಡಿದ ಜವಾಬ್ದಾರಿಯನ್ನು ಮೋದಿ ಸರ್ಕಾರವೇ ಹೊರಬೇಕಾಗುತ್ತದೆ.
ರಿಹಾನ ಟ್ವೀಟ್
why aren’t we talking about this?! #FarmersProtest https://t.co/obmIlXhK9S
— Rihanna (@rihanna) February 2, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243