Connect with us

ದಿನದ ಸುದ್ದಿ

ಸಿಎಂ ಮಗನ ಭ್ರಷ್ಟಾಚಾರದ ವೃತ್ತಾಂತ : ಪವರ್ ಟಿವಿ ಬಂದ್ ಹಿಂದಿನ ಒಳ ರಾಜಕೀಯ

Published

on

  • ದಿನೇಶ್ ಅಮೀನ್ ಮಟ್ಟು

ವರ್ ಟಿವಿ ಚಾನೆಲ್ ಗೆ ಸಂಬಂಧಿಸಿದ ಬೆಳವಣಿಗೆಗಳಲ್ಲಿ ಎರಡು ಭಾಗಗಳಿವೆ. ಮೊದಲನೆಯದು ಚಾನೆಲ್ ವರದಿ ಮಾಡಿರುವ ಭ್ರಷ್ಟಾಚಾರದ ಹಗರಣ, ಎರಡನೆಯದು ಟಿವಿ ಚಾನೆಲ್ ಪ್ರಸಾರವಾಗದಂತೆ ತಡೆಹಿಡಿದಿರುವ ಕ್ರಮ.

ಮುಖ್ಯಮಂತ್ರಿಯವರ ಕುಟುಂಬದವರು ಗುತ್ತಿಗೆದಾರರಿಂದ ಲಂಚ ವಸೂಲಿ ಮಾಡಿದ್ದಾರೆ ಎನ್ನುವುದು ಆರೋಪ. ಈ ಪ್ರಕರಣದಲ್ಲಿ ಮೂವರು ಪಾತ್ರಧಾರಿಗಳಿದ್ದಾರೆ. ಲಂಚ ಕೊಟ್ಟಿರುವ ಗುತ್ತಿಗೆದಾರ, ಲಂಚ ಪಡೆದಿರುವ ರಾಜಕಾರಣಿ ಮತ್ತು ವರದಿ ಮಾಡಿದ ಪತ್ರಕರ್ತ. ಅಧಿಕಾರಿಯೊಬ್ಬರು ಇದರಲ್ಲಿ ಪೋಷಕ ಪಾತ್ರದಲ್ಲಿದ್ದಾರೆ.

ಚಾನೆಲ್ ಭ್ರಷ್ಟಾಚಾರದ ಆರೋಪ ಮಾಡಿರುವುದು ಮುಖ್ಯಮಂತ್ರಿಯ ಮಗನ ವಿರುದ್ಧ. ಆದ್ದರಿಂದ ಮೇಲ್ನೋಟಕ್ಕೆ ಚಾನೆಲ್ ವರದಿ ಗುತ್ತಿಗೆದಾರನ ಪರ ಮತ್ತು ರಾಜಕಾರಣಿಯ ವಿರುದ್ಧ ಇದ್ದಂತೆ ಕಾಣಿಸುತ್ತಿತ್ತು. ವಿಚಿತ್ರವೆಂದರೆ ಪೊಲೀಸರಿಗೆ ದೂರು ನೀಡಿರುವುದು ರಾಜಕಾರಣಿ ಅಲ್ಲ, ಗುತ್ತಿಗೆದಾರ.

ಪತ್ರಿಕೆಯ ಮಾಲೀಕರು ತಿರುಚಿದ ದಾಖಲೆಗಳನ್ನು ತೋರಿಸಿ ಹಣವಸೂಲಿಗೆ ಪ್ರಯತ್ನಿಸಿದ್ದಾರೆ ಎನ್ನುವುದು ಗುತ್ತಿಗೆದಾರರ ದೂರು. ಆ ದೂರಿನನ್ವಯ ಸಿಸಿಬಿ ಪೊಲೀಸರು ಟಿವಿ ಚಾನೆಲ್ ಮಾಲೀಕರ ಮನೆಗೆ ವಿಚಾರಣೆಗೆ ಹೋಗಿದ್ದಾರೆ, ಚಾನೆಲ್ ನ ಕಚೇರಿಗೆ ಬಂದು ಅಲ್ಲಿನ ಕಂಪ್ಯೂಟರ್ ಗಳನ್ನು ವಶಕ್ಕೆ ತೆಗೆದುಕೊಂಡು ಜಾಲಾಡಿದ್ದಾರೆ.

ಕಾನೂನಿನ ದೃಷ್ಟಿಯಿಂದ ಈ ಹಂತದ ವರೆಗೆ ನಡೆದಿರುವುದು ವಿಚಾರಣೆಯ ಸಹಜ ಪ್ರಕ್ರಿಯೆ. ತಿರುಚಿದ ದಾಖಲೆಗಳ ಮೂಲ ಹುಡುಕಲು ಆರೋಪಿಗಳ ಕಂಪ್ಯೂಟರ್, ಮೊಬೈಲ್ ಗಳನ್ನು ವಶಕ್ಕೆ ಪಡೆಯುವುದು ಪೊಲೀಸ್ ವಿಚಾರಣೆಯ ಭಾಗ.ಪತ್ರಿಕೆ ಮತ್ತು ಚಾನೆಲ್ ಗಳ ಮಾಲೀಕರು ಇಲ್ಲವೇ ವರದಿಗಾರರ ವಿರುದ್ಧ ಆರೋಪ ಎದುರಾದಾಗ ಈ ರೀತಿಯ ವಿಚಾರಣೆ ಕರ್ನಾಟಕದಲ್ಲಿಯೇ ಅನೇಕ ಪ್ರಕರಣಗಳಲ್ಲಿ ನಡೆದಿವೆ.

ಎಡವಟ್ಟಾಗಿರುವುದು ಪ್ರಕರಣದ ಎರಡನೇ ಭಾಗದಲ್ಲಿ. ವಿಚಾರಣೆಗೆಂದು ಕಚೇರಿಗೆ ಹೋಗಿದ್ದ ಪೊಲೀಸರು ಒಂದು ಅತಿರೇಕದ ಹೆಜ್ಜೆ ಮುಂದಿಟ್ಟಿದ್ದಾರೆ. ಕಂಪ್ಯೂಟರ್ ಗಳನ್ನು ವಶಕ್ಕೆ ತೆಗೆದುಕೊಳ್ಳುವ ಜೊತೆಯಲ್ಲಿ ಚಾನೆಲ್ ಪ್ರಸಾರಕ್ಕೆ ಅತ್ಯಗತ್ಯವಾಗಿರುವ ಸರ್ವರ್ ಗಳನ್ನು ವಶಕ್ಕೆ ಪಡೆದಿದ್ದಾರೆ, ಅಷ್ಟು ಮಾತ್ರವಲ್ಲ ಫೇಸ್ ಬುಕ್, ಯುಟ್ಯೂಬ್ ಖಾತೆಗಳ ಪಾಸ್ ವರ್ಡ್ ಗಳನ್ನು ಬದಲಾಯಿಸಿದ್ದಾರೆ. ಚಾನೆಲ್ ಕಾರ್ಯನಿರ್ವಹಣೆಯನ್ನು ಸಂಪೂರ್ಣ ಸ್ಥಗಿತಗೊಳಿಸುವ ದುರುದ್ದೇಶದಿಂದಲೇ ಇದನ್ನು ಮಾಡಿದ್ದಾರೆ.

ಇಂತಹ ಕೆಲಸವನ್ನು ಪೊಲೀಸರು ತಾವಾಗಿಯೇ ಮಾಡುವುದಿಲ್ಲ. ಮೇಲಿನಿಂದ ಆದೇಶ ಬಂದರಷ್ಟೇ ಮಾಡುತ್ತಾರೆ. ಈ ಪ್ರಕರಣದಲ್ಲಿ ಆದೇಶ ಯಾರು ಕೊಟ್ಟಿರಬಹುದೆಂಬ ಬಗ್ಗೆ ಯಾರಿಗೂ ಸಂಶಯ ಇಲ್ಲ. ಅಧಿಕಾರ ಮತ್ತು ದುಡ್ಡಿನ ಮದವೇರಿದ ರಾಜಕಾರಣಿಗಳು ಸಾಮಾನ್ಯವಾಗಿ ಈ ರೀತಿ ತಮ್ಮ ಗೋರಿ ತಾವೇ ತೋಡಿಕೊಳ್ಳುತ್ತಾರೆ.

ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ನನಗೆ ನಿಜಕ್ಕೂ ಕನಿಕರ ಇದೆ. ಅವರು ಈ ರೀತಿ ಸೇಡಿಗೆ ಇಳಿಯುವವರಲ್ಲ. ಅದರಲ್ಲೂ ಪತ್ರಕರ್ತರನ್ನು ಎದುರುಹಾಕಿಕೊಳ್ಳಲು ಹೋಗುವವರಲ್ಲ.( ಅವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ನಾನು ಹಲವಾರು ಅಂಕಣಗಳನ್ನು ಬರೆದಿದ್ದೆ. ಅವರೆಂದೂ ನೇರವಾಗಿ ಇಲ್ಲವೇ ಸಂಪಾದಕರ ಮೂಲಕ ನನ್ನ ಮೇಲೆ ಒತ್ತಡ ಹಾಕಿಲ್ಲ. ಅಂತಹ ಅಂಕಣಗಳು ಪ್ರಕಟವಾದ ದಿನ ಕೆಲವೊಮ್ಮೆ ಬೆಳಿಗ್ಗೆ ನನ್ನ ಹಿರಿಯ ಸಹದ್ಯೋಗಿಯಾಗಿದ್ದ ಅವರ ಮಾಧ್ಯಮ ಸಲಹೆಗಾರರು ನನಗೆ ಪೋನ್ ಮಾಡಿ ‘ದಿನೇಶ್ ಓದಿದೆ,ಚೆನ್ನಾಗಿದೆ’ ಎಂದಷ್ಟೇ ಹೇಳಿ ಪೋನ್ ಇಟ್ಟುಬಿಡುತ್ತಿದ್ದರು)

ಕಳೆದ ಬಾರಿ ಯಡಿಯೂರಪ್ಪನವರು ಜೈಲಿಗೆ ಹೋಗಿರುವುದು ಕೂಡಾ ಪೂರ್ಣವಾಗಿ ಅವರ ತಪ್ಪಿನಿಂದಲ್ಲ. ಈ ಪ್ರಕರಣದಲ್ಲಿಯೂ ಪವರ್ ಟಿವಿ ಮೇಲೆ ಅವರ ಮಗನ ಒತ್ತಡದಿಂದ ದಾಳಿಯಾಗಿದ್ದರೆ ಆ ಮಗನ ಬಗ್ಗೆ ನನಗೆ ಇನ್ನೂ ಹೆಚ್ಚು ಕನಿಕರ ಇದೆ. ಇದು ರಾಜಕೀಯದಲ್ಲಿ ಬೆಳೆಯಲು ಬಯಸುವ ಮಕ್ಕಳ ಲಕ್ಷಣ ಅಲ್ಲ. ಈ ದಾರಿಯಲ್ಲಿ ಅವರು ಬಹಳ ದೂರ ಖಂಡಿತ ಹೋಗಲಾರರು.

ಇವೆಲ್ಲದರ ನಡುವೆ ಈ ಪ್ರಕರಣದಲ್ಲಿ ನನಗೆ ಸುಲಭದಲ್ಲಿ ಅರ್ಥವಾಗದ ಕೆಲವು ಸಿಕ್ಕುಗಳಿವೆ. ಮೊದಲನೆಯದಾಗಿ, ಮಾಧ್ಯಮ ಸಂಸ್ಥೆಗಳ ಮಾಲೀಕರೇ ಸಂಪಾದಕರಾಗಿರುವ ಅನೇಕ ಉದಾಹರಣೆಗಳು ನಮ್ಮ ನಡುವೆ ಇರುವುದರಿಂದ ತಪ್ಪೆಂದು ಹೇಳಲಾಗುವುದಿಲ್ಲ. ಆದರೆ ಪವರ್ ಟಿವಿ ಚಾನೆಲ್ ನ ಮಾಲೀಕರು ತಮ್ಮನ್ನು ಸಂಪಾದಕರೆಂದು ಕರೆಸಿಕೊಂಡಿಲ್ಲ. ಚಾನೆಲ್ ಗೆ ಬೇರೆ ಸಂಪಾದಕರಿದ್ದಾರೆ.

ಹೀಗಿರುವಾಗ ಇಂತಹದ್ದೊಂದು ಮುಖ್ಯವಾದ ವರದಿಯನ್ನು ಅವರೇ ಪರದೆಯ ಮುಂದೆ ಬಂದು ಹೋರಾಟಗಾರನ ರೀತಿ ಪ್ರಸ್ತುತ ಪಡಿಸಿ ಅಬ್ಬರಿಸುತ್ತಿದ್ದುದು ನನಗೆ ವಿಚಿತ್ರವಾಗಿ ಕಂಡಿತ್ತು. ಯಾಕೆಂದರೆ ಮಾಲೀಕರಿಗೆ ಸಾಮಾನ್ಯವಾಗಿ ಬೇರೆ ವ್ಯವಹಾರಿಕವಾದ ಹಿತಾಸಕ್ತಿಗಳಿರುತ್ತವೆ. ಈ ಕಾರಣದಿಂದಾಗಿ ಚಾನೆಲ್ ಮಾಡಿರುವ ವರದಿ ಸತ್ಯನಿಷ್ಠವಾಗಿದ್ದರೂ ವೀಕ್ಷಕರಿಗೆ ಸಹಜವಾಗಿ ಕೆಲವು ಅನುಮಾನ ಮೂಡುತ್ತದೆ.

ಎರಡನೆಯದಾಗಿ, ತಮ್ಮ ಕಚೇರಿಯಲ್ಲಿ ಗಾಂಧಿ,ಅಂಬೇಡ್ಕರ್ ಜೊತೆ ಹೆಡಗೆವಾರ್ ಅವರ ಪೋಟೊಗಳನ್ನೂ ನೇತುಹಾಕಿರುವ ಪವರ್ ಟಿವಿ ಚಾನೆಲ್, ಸೆಕ್ಯುಲರ್, ಲಿಬರಲ್ ಚಾನೆಲ್ ಆಗಿರಲಿಲ್ಲ. ಕನ್ನಡದ ಉಳಿದ ಚಾನೆಲ್ ಗಿಂತ ಬಹಳ ಭಿನ್ನವಾಗಿ ಏನೂ ಇರಲಿಲ್ಲ. ಇತ್ತೀಚಿನ ಡಿ.ಜೆ.ಹಳ್ಳಿ, ಪಾದರಾಯನಪುರಕ್ಕೆ ಸಂಬಂಧಿಸಿದ ವರದಿಗಳನ್ನೇ ಗಮನಿಸಿರಬಹುದು.

ಇಂತಹ ಟಿವಿ ಚಾನೆಲ್ ಇದ್ದಕ್ಕಿದ್ದ ಹಾಗೆ ಮುಖ್ಯಮಂತ್ರಿ ಕುಟುಂಬದ ವಿರುದ್ಧ ತಿರುಗಿ ಬೀಳಲು ಏನು ಕಾರಣ? ಅದೂ ಯಡಿಯೂರಪ್ಪನವರ ಬದಲಾವಣೆಗಾಗಿ ಪಕ್ಷದೊಳಗಿಂದಲೇ ಪ್ರಯತ್ನಗಳು ನಡೆಯುತ್ತಿರುವ ಮತ್ತು ಈ ಬದಲಾವಣೆಯ ಸೂತ್ರವನ್ನು ದೆಹಲಿಯಲ್ಲಿ ಕೂತಿರುವ ಕರ್ನಾಟಕದ ನಾಯಕರೊಬ್ಬರು ಹಿಡ್ಕೊಂಡಿದ್ದಾರೆ ಎಂಬ ವರದಿಗಳು ಬರುತ್ತಿರುವ ಸಂದರ್ಭದಲ್ಲಿ.

ಮೂರನೆಯದಾಗಿ, ಪತ್ರಕರ್ತ/ರಾಜಕಾರಣಿ/ಶಿಕ್ಷಣ ತಜ್ಞರೆನಿಸಿಕೊಂಡಿರುವ ರವೀಂದ್ರ ರೇಷ್ಮೆಯವರ ಪಾತ್ರ. ಹೆಚ್ಚುಕಡಿಮೆ ಕಳೆದೊಂದು ದಶಕದಿಂದ ಬಿಜೆಪಿಯ ಜೊತೆ ಸೈದ್ಧಾಂತಿಕ ಸಹಮತವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಾ ಬಂದಿರುವವರು. ಬಿಎಸ್ ವೈ ಅವರು ಈ ಬಾರಿ ಮುಖ್ಯಮಂತ್ರಿಯಾದಾಗ ಅವರ ಸಂಭವನೀಯ ಮಾಧ್ಯಮ ಸಲಹೆಗಾರರ ಪಟ್ಟಿಯಲ್ಲಿ ಇವರ ಹೆಸರು ಕೂಡಾ ಕೇಳಿಬರುತ್ತಿತ್ತು.

ಹೀಗಿದ್ದವರು ಇದ್ದಕ್ಕಿದ್ದ ಹಾಗೆ ಬಿಎಸ್ ವೈ ಅವರ ವಿರುದ್ದದ ಭ್ರಷ್ಟಾಚಾರದ ಹೋರಾಟದಲ್ಲಿ ಕಣಕ್ಕಿಳಿಯಲು ಏನು ಕಾರಣ? ಬಿ.ಎಸ್.ಯಡಿಯೂರಪ್ಪನವರಾಗಲಿ, ಅವರ ಕುಟುಂಬವಾಗಲಿ ಕಳೆದ ಒಂದು ತಿಂಗಳಿನಿಂದ ಭ್ರಷ್ಟರಾದವರಲ್ಲವಲ್ಲ.

ಶ್ರೀರಾಮುಲು ಅವರ ಭ್ರಷ್ಟತೆಯನ್ನೇ ಸಹಿಸಿಕೊಂಡು ಅವರ ಜೊತೆ ಸೇರಿಕೊಂಡಿದ್ದ ರೇಷ್ಮೆ ಅವರು ದಿಡೀರನೇ ಭ್ರಷ್ಟಾಚಾರದ ವಿರುದ್ದದ ಉಗ್ರಹೋರಾಟಕ್ಕೆ ಇಳಿದಿರುವುದು ನನಗಂತು ಅಚ್ಚರಿ ಮೂಡಿಸಿದೆ. ಪ್ರಾಮಾಣಿಕವಾಗಿ ಇಂತಹದ್ದೊಂದು ಪರಿವರ್ತನೆ ಅವರಲ್ಲಿ ಆಗಿದ್ದರೆ ಅದನ್ನು ಸ್ವಾಗತಿಸುವವರಲ್ಲಿ ನಾನು ಮೊದಲಿಗ. ಅದನ್ನು ಮನವರಿಕೆ ಮಾಡಿಕೊಡುವ ಜವಾಬ್ದಾರಿ ಅವರಲ್ಲಿದೆ.

ಮಾಧ್ಯಮ ಸಂಸ್ಥೆಗಳ ಅದರಲ್ಲೂ ಮುಖ್ಯವಾಗಿ ಕನ್ನಡ ನ್ಯೂಸ್ ಚಾನೆಲ್ ಗಳ ಮಾಲೀಕರ ಬಗ್ಗೆ ನಾನೇನು ಮಾತನಾಡುವುದಿಲ್ಲ. ದುಡ್ಡು ಹಾಕಿದವರು ಯಾರೋ? ಮಾಲೀಕರೆಂದು ಕಾಣಿಸಿಕೊಳ್ಳುವವರು ಯಾರೋ? ಅವರಲ್ಲಿ ನಷ್ಟದ ಉದ್ಯಮವಾದ ಟಿವಿ ಚಾನೆಲ್ ಗಳಲ್ಲಿ ಬಂಡವಾಳ ಹಾಕುವ ಸಾರ್ವಜನಿಕ ಹಿತಾಸಕ್ತಿ ಯಾಕೆ ಉಕ್ಕಿ ಹರಿಯುತ್ತೋ ಒಂದೂ ನನಗೆ ಗೊತ್ತಾಗುವುದಿಲ್ಲ.

ಇವೆಲ್ಲ ಏನೇ ಇದ್ದರೂ ಪತ್ರಕರ್ತನನ್ನು ಸಾಯಿಸುವುದಷ್ಟೇ ಇಲ್ಲವೇ ಅದಕ್ಕಿಂತಲೂ ಹೀನ ಕೆಲಸ ಮಾಧ್ಯಮ ಸಂಸ್ಥೆಯನ್ನು ಸಾಯಿಸುವುದು. ಈ ದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಕೊಲೆಗಡುಕ ಸರ್ಕಾರವೆಂದೇ ಹೇಳಬೇಕಾಗುತ್ತದೆ. ವ್ಯಕ್ತಿಯನ್ನು ಕೊಂದ ಪಾಪಕ್ಕೆ ಪರಿಹಾರ ಇಲ್ಲ, ಆದರೆ ಸಾಯಿಸಲು ಹೊರಟ ಸಂಸ್ಥೆಯನ್ನು ಬದುಕಿಸಲು ಸಾಧ್ಯ ಇದೆ.

ಈಗಲೂ ಕಾಲ ಮಿಂಚಿಲ್ಲ. ಬಿ.ಎಸ್.ಯಡಿಯೂರಪ್ಪನವರು ತಮ್ಮ ತಪ್ಪನ್ನು ಅರಿತುಕೊಂಡು ಚಾನೆಲ್ ಪ್ರಸಾರಕ್ಕೆ ಅವಕಾಶ ಮಾಡಿಕೊಡಬೇಕು ಅಳಿದುಳಿದ ಮಾನವನ್ನು ಉಳಿಸಿಕೊಳ್ಳಬೇಕು. ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ನೊಂದಿರುವ ,ಕಷ್ಟದಲ್ಲಿರುವ ಪವರ್ ಟಿವಿ ಚಾನೆಲ್ ನ ಪತ್ರಕರ್ತರೆಲ್ಲರ ಜೊತೆ ನಾನಿದ್ದೇನೆ. ಅಂದಹಾಗೆ ಈಗಿನ ಮುಖ್ಯಮಂತ್ರಿಗಳಿಗೊಬ್ಬರು ಮಾಧ್ಯಮ ಸಲಹೆಗಾರರಿದ್ದಾರಲ್ಲಾ, ಅವರೇನು ಮಾಡುತ್ತಿದ್ದಾರೆ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending