Connect with us

ದಿನದ ಸುದ್ದಿ

ಸಿಎಂ ಮಗನ ಭ್ರಷ್ಟಾಚಾರದ ವೃತ್ತಾಂತ : ಪವರ್ ಟಿವಿ ಬಂದ್ ಹಿಂದಿನ ಒಳ ರಾಜಕೀಯ

Published

on

  • ದಿನೇಶ್ ಅಮೀನ್ ಮಟ್ಟು

ವರ್ ಟಿವಿ ಚಾನೆಲ್ ಗೆ ಸಂಬಂಧಿಸಿದ ಬೆಳವಣಿಗೆಗಳಲ್ಲಿ ಎರಡು ಭಾಗಗಳಿವೆ. ಮೊದಲನೆಯದು ಚಾನೆಲ್ ವರದಿ ಮಾಡಿರುವ ಭ್ರಷ್ಟಾಚಾರದ ಹಗರಣ, ಎರಡನೆಯದು ಟಿವಿ ಚಾನೆಲ್ ಪ್ರಸಾರವಾಗದಂತೆ ತಡೆಹಿಡಿದಿರುವ ಕ್ರಮ.

ಮುಖ್ಯಮಂತ್ರಿಯವರ ಕುಟುಂಬದವರು ಗುತ್ತಿಗೆದಾರರಿಂದ ಲಂಚ ವಸೂಲಿ ಮಾಡಿದ್ದಾರೆ ಎನ್ನುವುದು ಆರೋಪ. ಈ ಪ್ರಕರಣದಲ್ಲಿ ಮೂವರು ಪಾತ್ರಧಾರಿಗಳಿದ್ದಾರೆ. ಲಂಚ ಕೊಟ್ಟಿರುವ ಗುತ್ತಿಗೆದಾರ, ಲಂಚ ಪಡೆದಿರುವ ರಾಜಕಾರಣಿ ಮತ್ತು ವರದಿ ಮಾಡಿದ ಪತ್ರಕರ್ತ. ಅಧಿಕಾರಿಯೊಬ್ಬರು ಇದರಲ್ಲಿ ಪೋಷಕ ಪಾತ್ರದಲ್ಲಿದ್ದಾರೆ.

ಚಾನೆಲ್ ಭ್ರಷ್ಟಾಚಾರದ ಆರೋಪ ಮಾಡಿರುವುದು ಮುಖ್ಯಮಂತ್ರಿಯ ಮಗನ ವಿರುದ್ಧ. ಆದ್ದರಿಂದ ಮೇಲ್ನೋಟಕ್ಕೆ ಚಾನೆಲ್ ವರದಿ ಗುತ್ತಿಗೆದಾರನ ಪರ ಮತ್ತು ರಾಜಕಾರಣಿಯ ವಿರುದ್ಧ ಇದ್ದಂತೆ ಕಾಣಿಸುತ್ತಿತ್ತು. ವಿಚಿತ್ರವೆಂದರೆ ಪೊಲೀಸರಿಗೆ ದೂರು ನೀಡಿರುವುದು ರಾಜಕಾರಣಿ ಅಲ್ಲ, ಗುತ್ತಿಗೆದಾರ.

ಪತ್ರಿಕೆಯ ಮಾಲೀಕರು ತಿರುಚಿದ ದಾಖಲೆಗಳನ್ನು ತೋರಿಸಿ ಹಣವಸೂಲಿಗೆ ಪ್ರಯತ್ನಿಸಿದ್ದಾರೆ ಎನ್ನುವುದು ಗುತ್ತಿಗೆದಾರರ ದೂರು. ಆ ದೂರಿನನ್ವಯ ಸಿಸಿಬಿ ಪೊಲೀಸರು ಟಿವಿ ಚಾನೆಲ್ ಮಾಲೀಕರ ಮನೆಗೆ ವಿಚಾರಣೆಗೆ ಹೋಗಿದ್ದಾರೆ, ಚಾನೆಲ್ ನ ಕಚೇರಿಗೆ ಬಂದು ಅಲ್ಲಿನ ಕಂಪ್ಯೂಟರ್ ಗಳನ್ನು ವಶಕ್ಕೆ ತೆಗೆದುಕೊಂಡು ಜಾಲಾಡಿದ್ದಾರೆ.

ಕಾನೂನಿನ ದೃಷ್ಟಿಯಿಂದ ಈ ಹಂತದ ವರೆಗೆ ನಡೆದಿರುವುದು ವಿಚಾರಣೆಯ ಸಹಜ ಪ್ರಕ್ರಿಯೆ. ತಿರುಚಿದ ದಾಖಲೆಗಳ ಮೂಲ ಹುಡುಕಲು ಆರೋಪಿಗಳ ಕಂಪ್ಯೂಟರ್, ಮೊಬೈಲ್ ಗಳನ್ನು ವಶಕ್ಕೆ ಪಡೆಯುವುದು ಪೊಲೀಸ್ ವಿಚಾರಣೆಯ ಭಾಗ.ಪತ್ರಿಕೆ ಮತ್ತು ಚಾನೆಲ್ ಗಳ ಮಾಲೀಕರು ಇಲ್ಲವೇ ವರದಿಗಾರರ ವಿರುದ್ಧ ಆರೋಪ ಎದುರಾದಾಗ ಈ ರೀತಿಯ ವಿಚಾರಣೆ ಕರ್ನಾಟಕದಲ್ಲಿಯೇ ಅನೇಕ ಪ್ರಕರಣಗಳಲ್ಲಿ ನಡೆದಿವೆ.

ಎಡವಟ್ಟಾಗಿರುವುದು ಪ್ರಕರಣದ ಎರಡನೇ ಭಾಗದಲ್ಲಿ. ವಿಚಾರಣೆಗೆಂದು ಕಚೇರಿಗೆ ಹೋಗಿದ್ದ ಪೊಲೀಸರು ಒಂದು ಅತಿರೇಕದ ಹೆಜ್ಜೆ ಮುಂದಿಟ್ಟಿದ್ದಾರೆ. ಕಂಪ್ಯೂಟರ್ ಗಳನ್ನು ವಶಕ್ಕೆ ತೆಗೆದುಕೊಳ್ಳುವ ಜೊತೆಯಲ್ಲಿ ಚಾನೆಲ್ ಪ್ರಸಾರಕ್ಕೆ ಅತ್ಯಗತ್ಯವಾಗಿರುವ ಸರ್ವರ್ ಗಳನ್ನು ವಶಕ್ಕೆ ಪಡೆದಿದ್ದಾರೆ, ಅಷ್ಟು ಮಾತ್ರವಲ್ಲ ಫೇಸ್ ಬುಕ್, ಯುಟ್ಯೂಬ್ ಖಾತೆಗಳ ಪಾಸ್ ವರ್ಡ್ ಗಳನ್ನು ಬದಲಾಯಿಸಿದ್ದಾರೆ. ಚಾನೆಲ್ ಕಾರ್ಯನಿರ್ವಹಣೆಯನ್ನು ಸಂಪೂರ್ಣ ಸ್ಥಗಿತಗೊಳಿಸುವ ದುರುದ್ದೇಶದಿಂದಲೇ ಇದನ್ನು ಮಾಡಿದ್ದಾರೆ.

ಇಂತಹ ಕೆಲಸವನ್ನು ಪೊಲೀಸರು ತಾವಾಗಿಯೇ ಮಾಡುವುದಿಲ್ಲ. ಮೇಲಿನಿಂದ ಆದೇಶ ಬಂದರಷ್ಟೇ ಮಾಡುತ್ತಾರೆ. ಈ ಪ್ರಕರಣದಲ್ಲಿ ಆದೇಶ ಯಾರು ಕೊಟ್ಟಿರಬಹುದೆಂಬ ಬಗ್ಗೆ ಯಾರಿಗೂ ಸಂಶಯ ಇಲ್ಲ. ಅಧಿಕಾರ ಮತ್ತು ದುಡ್ಡಿನ ಮದವೇರಿದ ರಾಜಕಾರಣಿಗಳು ಸಾಮಾನ್ಯವಾಗಿ ಈ ರೀತಿ ತಮ್ಮ ಗೋರಿ ತಾವೇ ತೋಡಿಕೊಳ್ಳುತ್ತಾರೆ.

ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ನನಗೆ ನಿಜಕ್ಕೂ ಕನಿಕರ ಇದೆ. ಅವರು ಈ ರೀತಿ ಸೇಡಿಗೆ ಇಳಿಯುವವರಲ್ಲ. ಅದರಲ್ಲೂ ಪತ್ರಕರ್ತರನ್ನು ಎದುರುಹಾಕಿಕೊಳ್ಳಲು ಹೋಗುವವರಲ್ಲ.( ಅವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ನಾನು ಹಲವಾರು ಅಂಕಣಗಳನ್ನು ಬರೆದಿದ್ದೆ. ಅವರೆಂದೂ ನೇರವಾಗಿ ಇಲ್ಲವೇ ಸಂಪಾದಕರ ಮೂಲಕ ನನ್ನ ಮೇಲೆ ಒತ್ತಡ ಹಾಕಿಲ್ಲ. ಅಂತಹ ಅಂಕಣಗಳು ಪ್ರಕಟವಾದ ದಿನ ಕೆಲವೊಮ್ಮೆ ಬೆಳಿಗ್ಗೆ ನನ್ನ ಹಿರಿಯ ಸಹದ್ಯೋಗಿಯಾಗಿದ್ದ ಅವರ ಮಾಧ್ಯಮ ಸಲಹೆಗಾರರು ನನಗೆ ಪೋನ್ ಮಾಡಿ ‘ದಿನೇಶ್ ಓದಿದೆ,ಚೆನ್ನಾಗಿದೆ’ ಎಂದಷ್ಟೇ ಹೇಳಿ ಪೋನ್ ಇಟ್ಟುಬಿಡುತ್ತಿದ್ದರು)

ಕಳೆದ ಬಾರಿ ಯಡಿಯೂರಪ್ಪನವರು ಜೈಲಿಗೆ ಹೋಗಿರುವುದು ಕೂಡಾ ಪೂರ್ಣವಾಗಿ ಅವರ ತಪ್ಪಿನಿಂದಲ್ಲ. ಈ ಪ್ರಕರಣದಲ್ಲಿಯೂ ಪವರ್ ಟಿವಿ ಮೇಲೆ ಅವರ ಮಗನ ಒತ್ತಡದಿಂದ ದಾಳಿಯಾಗಿದ್ದರೆ ಆ ಮಗನ ಬಗ್ಗೆ ನನಗೆ ಇನ್ನೂ ಹೆಚ್ಚು ಕನಿಕರ ಇದೆ. ಇದು ರಾಜಕೀಯದಲ್ಲಿ ಬೆಳೆಯಲು ಬಯಸುವ ಮಕ್ಕಳ ಲಕ್ಷಣ ಅಲ್ಲ. ಈ ದಾರಿಯಲ್ಲಿ ಅವರು ಬಹಳ ದೂರ ಖಂಡಿತ ಹೋಗಲಾರರು.

ಇವೆಲ್ಲದರ ನಡುವೆ ಈ ಪ್ರಕರಣದಲ್ಲಿ ನನಗೆ ಸುಲಭದಲ್ಲಿ ಅರ್ಥವಾಗದ ಕೆಲವು ಸಿಕ್ಕುಗಳಿವೆ. ಮೊದಲನೆಯದಾಗಿ, ಮಾಧ್ಯಮ ಸಂಸ್ಥೆಗಳ ಮಾಲೀಕರೇ ಸಂಪಾದಕರಾಗಿರುವ ಅನೇಕ ಉದಾಹರಣೆಗಳು ನಮ್ಮ ನಡುವೆ ಇರುವುದರಿಂದ ತಪ್ಪೆಂದು ಹೇಳಲಾಗುವುದಿಲ್ಲ. ಆದರೆ ಪವರ್ ಟಿವಿ ಚಾನೆಲ್ ನ ಮಾಲೀಕರು ತಮ್ಮನ್ನು ಸಂಪಾದಕರೆಂದು ಕರೆಸಿಕೊಂಡಿಲ್ಲ. ಚಾನೆಲ್ ಗೆ ಬೇರೆ ಸಂಪಾದಕರಿದ್ದಾರೆ.

ಹೀಗಿರುವಾಗ ಇಂತಹದ್ದೊಂದು ಮುಖ್ಯವಾದ ವರದಿಯನ್ನು ಅವರೇ ಪರದೆಯ ಮುಂದೆ ಬಂದು ಹೋರಾಟಗಾರನ ರೀತಿ ಪ್ರಸ್ತುತ ಪಡಿಸಿ ಅಬ್ಬರಿಸುತ್ತಿದ್ದುದು ನನಗೆ ವಿಚಿತ್ರವಾಗಿ ಕಂಡಿತ್ತು. ಯಾಕೆಂದರೆ ಮಾಲೀಕರಿಗೆ ಸಾಮಾನ್ಯವಾಗಿ ಬೇರೆ ವ್ಯವಹಾರಿಕವಾದ ಹಿತಾಸಕ್ತಿಗಳಿರುತ್ತವೆ. ಈ ಕಾರಣದಿಂದಾಗಿ ಚಾನೆಲ್ ಮಾಡಿರುವ ವರದಿ ಸತ್ಯನಿಷ್ಠವಾಗಿದ್ದರೂ ವೀಕ್ಷಕರಿಗೆ ಸಹಜವಾಗಿ ಕೆಲವು ಅನುಮಾನ ಮೂಡುತ್ತದೆ.

ಎರಡನೆಯದಾಗಿ, ತಮ್ಮ ಕಚೇರಿಯಲ್ಲಿ ಗಾಂಧಿ,ಅಂಬೇಡ್ಕರ್ ಜೊತೆ ಹೆಡಗೆವಾರ್ ಅವರ ಪೋಟೊಗಳನ್ನೂ ನೇತುಹಾಕಿರುವ ಪವರ್ ಟಿವಿ ಚಾನೆಲ್, ಸೆಕ್ಯುಲರ್, ಲಿಬರಲ್ ಚಾನೆಲ್ ಆಗಿರಲಿಲ್ಲ. ಕನ್ನಡದ ಉಳಿದ ಚಾನೆಲ್ ಗಿಂತ ಬಹಳ ಭಿನ್ನವಾಗಿ ಏನೂ ಇರಲಿಲ್ಲ. ಇತ್ತೀಚಿನ ಡಿ.ಜೆ.ಹಳ್ಳಿ, ಪಾದರಾಯನಪುರಕ್ಕೆ ಸಂಬಂಧಿಸಿದ ವರದಿಗಳನ್ನೇ ಗಮನಿಸಿರಬಹುದು.

ಇಂತಹ ಟಿವಿ ಚಾನೆಲ್ ಇದ್ದಕ್ಕಿದ್ದ ಹಾಗೆ ಮುಖ್ಯಮಂತ್ರಿ ಕುಟುಂಬದ ವಿರುದ್ಧ ತಿರುಗಿ ಬೀಳಲು ಏನು ಕಾರಣ? ಅದೂ ಯಡಿಯೂರಪ್ಪನವರ ಬದಲಾವಣೆಗಾಗಿ ಪಕ್ಷದೊಳಗಿಂದಲೇ ಪ್ರಯತ್ನಗಳು ನಡೆಯುತ್ತಿರುವ ಮತ್ತು ಈ ಬದಲಾವಣೆಯ ಸೂತ್ರವನ್ನು ದೆಹಲಿಯಲ್ಲಿ ಕೂತಿರುವ ಕರ್ನಾಟಕದ ನಾಯಕರೊಬ್ಬರು ಹಿಡ್ಕೊಂಡಿದ್ದಾರೆ ಎಂಬ ವರದಿಗಳು ಬರುತ್ತಿರುವ ಸಂದರ್ಭದಲ್ಲಿ.

ಮೂರನೆಯದಾಗಿ, ಪತ್ರಕರ್ತ/ರಾಜಕಾರಣಿ/ಶಿಕ್ಷಣ ತಜ್ಞರೆನಿಸಿಕೊಂಡಿರುವ ರವೀಂದ್ರ ರೇಷ್ಮೆಯವರ ಪಾತ್ರ. ಹೆಚ್ಚುಕಡಿಮೆ ಕಳೆದೊಂದು ದಶಕದಿಂದ ಬಿಜೆಪಿಯ ಜೊತೆ ಸೈದ್ಧಾಂತಿಕ ಸಹಮತವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಾ ಬಂದಿರುವವರು. ಬಿಎಸ್ ವೈ ಅವರು ಈ ಬಾರಿ ಮುಖ್ಯಮಂತ್ರಿಯಾದಾಗ ಅವರ ಸಂಭವನೀಯ ಮಾಧ್ಯಮ ಸಲಹೆಗಾರರ ಪಟ್ಟಿಯಲ್ಲಿ ಇವರ ಹೆಸರು ಕೂಡಾ ಕೇಳಿಬರುತ್ತಿತ್ತು.

ಹೀಗಿದ್ದವರು ಇದ್ದಕ್ಕಿದ್ದ ಹಾಗೆ ಬಿಎಸ್ ವೈ ಅವರ ವಿರುದ್ದದ ಭ್ರಷ್ಟಾಚಾರದ ಹೋರಾಟದಲ್ಲಿ ಕಣಕ್ಕಿಳಿಯಲು ಏನು ಕಾರಣ? ಬಿ.ಎಸ್.ಯಡಿಯೂರಪ್ಪನವರಾಗಲಿ, ಅವರ ಕುಟುಂಬವಾಗಲಿ ಕಳೆದ ಒಂದು ತಿಂಗಳಿನಿಂದ ಭ್ರಷ್ಟರಾದವರಲ್ಲವಲ್ಲ.

ಶ್ರೀರಾಮುಲು ಅವರ ಭ್ರಷ್ಟತೆಯನ್ನೇ ಸಹಿಸಿಕೊಂಡು ಅವರ ಜೊತೆ ಸೇರಿಕೊಂಡಿದ್ದ ರೇಷ್ಮೆ ಅವರು ದಿಡೀರನೇ ಭ್ರಷ್ಟಾಚಾರದ ವಿರುದ್ದದ ಉಗ್ರಹೋರಾಟಕ್ಕೆ ಇಳಿದಿರುವುದು ನನಗಂತು ಅಚ್ಚರಿ ಮೂಡಿಸಿದೆ. ಪ್ರಾಮಾಣಿಕವಾಗಿ ಇಂತಹದ್ದೊಂದು ಪರಿವರ್ತನೆ ಅವರಲ್ಲಿ ಆಗಿದ್ದರೆ ಅದನ್ನು ಸ್ವಾಗತಿಸುವವರಲ್ಲಿ ನಾನು ಮೊದಲಿಗ. ಅದನ್ನು ಮನವರಿಕೆ ಮಾಡಿಕೊಡುವ ಜವಾಬ್ದಾರಿ ಅವರಲ್ಲಿದೆ.

ಮಾಧ್ಯಮ ಸಂಸ್ಥೆಗಳ ಅದರಲ್ಲೂ ಮುಖ್ಯವಾಗಿ ಕನ್ನಡ ನ್ಯೂಸ್ ಚಾನೆಲ್ ಗಳ ಮಾಲೀಕರ ಬಗ್ಗೆ ನಾನೇನು ಮಾತನಾಡುವುದಿಲ್ಲ. ದುಡ್ಡು ಹಾಕಿದವರು ಯಾರೋ? ಮಾಲೀಕರೆಂದು ಕಾಣಿಸಿಕೊಳ್ಳುವವರು ಯಾರೋ? ಅವರಲ್ಲಿ ನಷ್ಟದ ಉದ್ಯಮವಾದ ಟಿವಿ ಚಾನೆಲ್ ಗಳಲ್ಲಿ ಬಂಡವಾಳ ಹಾಕುವ ಸಾರ್ವಜನಿಕ ಹಿತಾಸಕ್ತಿ ಯಾಕೆ ಉಕ್ಕಿ ಹರಿಯುತ್ತೋ ಒಂದೂ ನನಗೆ ಗೊತ್ತಾಗುವುದಿಲ್ಲ.

ಇವೆಲ್ಲ ಏನೇ ಇದ್ದರೂ ಪತ್ರಕರ್ತನನ್ನು ಸಾಯಿಸುವುದಷ್ಟೇ ಇಲ್ಲವೇ ಅದಕ್ಕಿಂತಲೂ ಹೀನ ಕೆಲಸ ಮಾಧ್ಯಮ ಸಂಸ್ಥೆಯನ್ನು ಸಾಯಿಸುವುದು. ಈ ದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಕೊಲೆಗಡುಕ ಸರ್ಕಾರವೆಂದೇ ಹೇಳಬೇಕಾಗುತ್ತದೆ. ವ್ಯಕ್ತಿಯನ್ನು ಕೊಂದ ಪಾಪಕ್ಕೆ ಪರಿಹಾರ ಇಲ್ಲ, ಆದರೆ ಸಾಯಿಸಲು ಹೊರಟ ಸಂಸ್ಥೆಯನ್ನು ಬದುಕಿಸಲು ಸಾಧ್ಯ ಇದೆ.

ಈಗಲೂ ಕಾಲ ಮಿಂಚಿಲ್ಲ. ಬಿ.ಎಸ್.ಯಡಿಯೂರಪ್ಪನವರು ತಮ್ಮ ತಪ್ಪನ್ನು ಅರಿತುಕೊಂಡು ಚಾನೆಲ್ ಪ್ರಸಾರಕ್ಕೆ ಅವಕಾಶ ಮಾಡಿಕೊಡಬೇಕು ಅಳಿದುಳಿದ ಮಾನವನ್ನು ಉಳಿಸಿಕೊಳ್ಳಬೇಕು. ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ನೊಂದಿರುವ ,ಕಷ್ಟದಲ್ಲಿರುವ ಪವರ್ ಟಿವಿ ಚಾನೆಲ್ ನ ಪತ್ರಕರ್ತರೆಲ್ಲರ ಜೊತೆ ನಾನಿದ್ದೇನೆ. ಅಂದಹಾಗೆ ಈಗಿನ ಮುಖ್ಯಮಂತ್ರಿಗಳಿಗೊಬ್ಬರು ಮಾಧ್ಯಮ ಸಲಹೆಗಾರರಿದ್ದಾರಲ್ಲಾ, ಅವರೇನು ಮಾಡುತ್ತಿದ್ದಾರೆ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending