ಅಂತರಂಗ
ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್ ಆಫ್ ದಿ ನೇಷನ್ ಅಂತಾರೆ..!
- ಚೇತನ್ ನಾಡಿಗೇರ್
‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’
ಮಾರ್ಮಿಕವಾಗಿ ಕೇಳಿದರು ಪ್ರಕಾಶ್ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಫಾದರ್’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …
ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್, ಕಮಲ್ ಹಾಸನ್ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.
ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.
ಕೆಲವು ನಟರು ಸಹ ತಾವು ಜಿಮ್ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.
ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.
30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.
‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್ ಆಫ್ ದಿ ನೇಷನ್ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.
ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.
ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.
ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.
ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್, ಮೈನಸ್ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್ ನಾಗ್ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.
ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ19 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ22 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ19 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

