ಅಂಕಣ
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
~ ರುದ್ರಪ್ಪ ಹನಗವಾಡಿ
ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.
ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.
ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್ಗೆ ಹೋದ ಸುದ್ದಿ ತಿಳಿದಿತ್ತು. ಗದಗ್ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.
ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್ಎಸ್ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.
ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.
ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.
ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್ಎಸ್ನ ಕರ್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್ಎಸ್ ಕರ್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್ಎಸ್ನ ಎಲ್ಲಾ ಬಣಗಳ ಕರ್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.
1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.
ಕೃಷ್ಣಪ್ಪನವರ ನಿಧನಾನಂತರ ಬಿಎಸ್ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.
ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್ಎಸ್ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್ಪಿಎಫ್ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.
ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್ಎಸ್ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.
2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.
ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.
ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.
ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.
ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.
ನಾಯಕ ನಟನಾಗಿ ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.
ಇನ್ನು 2022ರಲ್ಲಿ ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪರಿಶ್ರಮ ಮತ್ತು ಫಿಟ್ನೆಸ್
ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.
ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್
ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ
ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.
ಬಂಜಾರ ಹವೇಲಿಯ ಹರಿಕಾರ
ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.
ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.
ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ23 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ8 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ22 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ5 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ


