Connect with us

ದಿನದ ಸುದ್ದಿ

ಪೌರತ್ವ ತಿದ್ದುಪಡಿ ಮಸೂದೆ (CAB) 2019 ತಿರಸ್ಕರಿಸಲು ಎಸ್ಎಫ್ಐ-ಡಿವೈಎಫ್ಐ ಒತ್ತಾಯ

Published

on

ಸುದ್ದಿದಿನ, ಸುರಪುರ್ : ಲೋಕಸಭೆ, ರಾಜ್ಯಸಭೆಗಳಲ್ಲಿ ಮಂಜೂರು ಮಾಡಿದ ಪೌರತ್ವ (ತಿದ್ದುಪಡಿ) ಮಸೂದೆ 2019 (Citizens (Amendment) Bill-2019 CAB) ನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಸಂಘಟನೆಗಳು ಬಲವಾಗಿ ವಿರೋಧಿಸಿವೆ.

ಈ ಮಸೂದೆ ದೇಶದ ಪೌರತ್ವ (ಅಥವಾ ನಾಗರಿಕತ್ವ) ವನ್ನು ಮತಧರ್ಮದ ಆಧಾರದ ಮೇಲೆ ನಿರ್ಧರಿಸುತ್ತಿರುವುದು ಖಂಡನೀಯ.
ಭಾರತ ಸಮಾನವಾಗಿ ಎಲ್ಲಾ ಮತಧರ್ಮಗಳ ಮತ್ತು ಎಲ್ಲಾ ಪ್ರದೇಶಗಳ ಜನರ ದೇಶ. ಆದ್ದರಿಂದ ಭಾರತ ಅವರೆಲ್ಲರನ್ನೂ ಸಮಾನವಾಗಿ ಕಾಣಬೇಕು.
ವಿಪರೀತ ತಾರತಮ್ಯ ತೋರುವ ಈ ಮಸೂದೆಯನ್ನು ಲೋಕಸಭೆ ಭಾರೀ ಬಹುಮತದಿಂದ ಹಾಗೂ ರಾಜ್ಯ ಸಭೆಯಲ್ಲಿಯೂ ಕೂಡ ಮಂಜೂರು ಮಾಡಿವೆ.

ಆದರೆ, ಇದರ ವಿರುದ್ಧ ತೀವ್ರ ಅತೃಪ್ತಿ ಹೊಗೆಯಾಡುತ್ತಿದೆ. ಈ ಮಸೂದೆಯನ್ನು ಲೋಕಸಭೆ, ರಾಜ್ಯ ಸಭೆಯಲ್ಲಿ ಮಂಜೂರು ಮಾಡುತ್ತಿರುವಾಗ, ಈಶಾನ್ಯ ಭಾರತದ ವಿದ್ಯಾರ್ಥಿಗಳು 11 ಗಂಟೆಗಳ ಬಂದ್ ಆಚರಿಸುತ್ತಿದ್ದರು. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಸೂದೆಯು ನೆರೆಯ ಮೂರು ದೇಶಗಳ ಮುಸ್ಲಿಮರನ್ನು ನಮ್ಮ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವುದರಿಂದ ಹೊರಗಿಡುತ್ತದೆ ಮಾತ್ರವಲ್ಲ, ಪೌರತ್ವದ ದಾಖಲೆಗಳನ್ನು ಒದಗಿಸಲಾಗದ ಭಾರತೀಯ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸಿ ಕ್ಯಾಂಪ್ ಗಳಿಗೆ ತಳ್ಳುತ್ತದೆ. ಭಾರತದ ಪೌರತ್ವಕ್ಕೆ ಮತಧರ್ಮದ ಪರೀಕ್ಷೆ ಒಡ್ಡಿರುವುದರಿಂದ ಈ ಮಸೂದೆ, ನಮ್ಮ ದೇಶದ ಸಂವಿಧಾನದಲ್ಲಿ ಪ್ರತಿಷ್ಟಾಪಿಸಲಾಗಿರುವ ಸಮಾನತೆ ಮತ್ತು ಸೆಕ್ಯುಲರಿಸಂ ಗಳ ನೀತಿಗಳನ್ನು ಉಲ್ಲಂಘಿಸುತ್ತದೆ.

ಪೌರತ್ವ ದಾಖಲಾತಿಯನ್ನು (NRC) ದೇಶದಾದ್ಯಂತ ನಡೆಸುವುದೆ ರಾಜಕೀಯ ದುರುದ್ದೇಶಕ್ಕಾಗಿ. ಈಗ ಅದಕ್ಕೆ ತಿದ್ದುಪಡಿ ಮಸೂದೆಯ ಮೂಲಕ ಮತ್ತಷ್ಟು ಕೋರೆ ಹಲ್ಲುಗಳನ್ನು ಒದಗಿಸಿದೆ‌. ಇದು ಮುಸಲ್ಮಾನರಲ್ಲಿ ದಾಖಲೆ ಒದಗಿಸಲಾಗದಿದ್ದರೆ ನಾಗರಿಕ ಹಕ್ಕುಗಳನ್ನು ಕಳೆದುಕೊಳ್ಳುವ ಭೀತಿಯನ್ನು ಸೃಷ್ಟಿಸಿದರೆ, ಕೇಂದ್ರ ಸರಕಾರ ಕೇಳುವ ದಾಖಲೆ ಒದಗಿಸಲು ನೂರ ಮೂವತ್ತು ಕೋಟಿ ನಾಗರಿಕರೂ ಧರ್ಮ ಭೇದವಿಲ್ಲದೆ ತೀವ್ರ ಸಂಕಷ್ಟಗಳಿಗೆ ಗುರಿಯಾಗ ಬೇಕಾಗುತ್ತದೆ. ದಾಖಲೆಗಳು ಹೊಂದಿಲ್ಲದ ಆದಿವಾಸಿಗಳು, ಅಲೆಮಾರಿಗಳು, ಬಡವರು ಪೌರತ್ವ ಪಡೆಯಲು ಅಪಾರ ವೇದನೆಗೆ ಗುರಿಯಾಗಬೇಕಾಗುತ್ತದೆ‌. ಒಟ್ಟಾರೆ ಬಿಜೆಪಿ ಸರ್ಕಾರ ತನ್ನ ಆಡಳಿತ ವೈಫಲ್ಯಗಳಿಂದ ಸೃಷ್ಟಿಯಾಗುತ್ತಿರುವ ಜನಾಕ್ರೋಶದ ದಿಕ್ಕನ್ನು ತಪ್ಪಿಸಲು ಈ ಕಾಯ್ದೆಯನ್ನು ಮುಂದಕ್ಕೆ ತಂದಿದೆ. ಇದು ಬಿಜೆಪಿಯ ಒಡೆದಾಳುವ ನೀತಿಯ ಮುಂದುವರಿದ ಭಾಗ.

ಭಾರತವು, ಮ್ಯಾನ್ಮಾರ್ ನಲ್ಲಿ ತೀವ್ರ ಕಿರುಕುಳ ಮತ್ತು ದಮನಕಾರಿ ಹಿಂಸೆಗಳನ್ನು ಎದುರಿಸುತ್ತಿರುವ ರೊಹಿಂಗ್ಯನ್ ಮುಸ್ಲಿಂ ನಿರಾಶ್ರಿತರ ಆಗಮನವನ್ನು ಎದುರಿಸುತ್ತಿದೆ. ಅವರ ಬಳಿ ವಿಶ್ವಸಂಸ್ಥೆಯ ಮಾನ್ಯತೆ ಪಡೆದ ನಿರಾಶ್ರಿತ ಕಾರ್ಡು ಇದ್ದರೂ ಭಾರತ ಸರಕಾರ ಅವರನ್ನು ದೇಶದಿಂದ ಹೊರದಬ್ಬಲು ಪ್ರಯತ್ನಿಸುತ್ತಿದೆ. ಈ ಕ್ರಮವನ್ನು ಈ ಮಸೂದೆ ಕಾನೂನುಬದ್ಧಗೊಳಿಸುತ್ತದೆ.
ಮತ, ಧರ್ಮದ ಮೇಲೆ ದೇಶವನ್ನು ವಿಭಜಿಸುವುದನ್ನು ಎಸ್ಎಫ್ಐ-ಡಿವೈಎಫ್ಐ ಸಂಘಟನೆಗಳು ಒಪ್ಪುವುದಿಲ್ಲ. ಅಲ್ಲದೇ ಪಾರ್ಲಿಮೆಂಟು ಮಂಜೂರು ಮಾಡಿದ ಈ ಭೀಕರ ಮಸೂದೆಯನ್ನು ತಿರಸ್ಕರಿಸಲು ಹಾಗೂ ಅದನ್ನು ವಾಪಸು ಪಡೆಯಬೇಕೆಂದು ಒತ್ತಾಯಿಸುತ್ತವೆ.

ಈ ಸಂದರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪುರ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ ಶಿವಪ್ಪ ಬ್ಯಾಗವಾಟ್, ಎಸ್ಎಫ್ಐ ಜಿಲ್ಲಾ ಸಮಿತಿ ಸದಸ್ಯ ತಿಪ್ಪಣ್ಣ ನಿಲೋಗಲ್, ಬಸವಂತ ಹಿರೆ ಕಡಬೂರ್, ಎಸ್ಎಫ್ಐ ತಾಲೂಕ ಮುಖಂಡರಾದ ಅಮರೇಗೌಡ, ಬಸಲಿಂಗ, ಮುತ್ತುರಾಜ್, ನಾಗರಾಜ್, ವೆಂಕಟೇಶ್, ಯಮನೂರ್, ಅಮರೇಶ್ ನಾಯಕ್, ಮಲ್ಲಪ್ಪ, ಬಸವರಾಜ, ಅಮರಯ್ಯ, ಅವಿನಾಶ್, ನಾಗರಾಜ್ ಅಂಚಿನಾಳ್, ಡಿವೈಎಫ್ಐ ತಾಲೂಕ ಮುಖಂಡರಾದ ಬಸವರಾಜ ಸಿರೋಟಿ, ಕಂಟೆಪ್ಪ, ಕೆ ಪಿ ಆರ್ ಎಸ್ ಮುಖಂಡರಾದ ಸದ್ದಾಮ್ ಹುಸೇನ್, ಮಹಮ್ಮದ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980436243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending