ದಿನದ ಸುದ್ದಿ
ಈ ಹೋರಾಟ ಚಾರಿತ್ರಿಕ ಮತ್ತು ನಿರ್ಣಾಯಕ
- ನಾ ದಿವಾಕರ
ಭಟ್ಟಂಗಿ ಮಾಧ್ಯಮಗಳು, ವಂದಿಮಾಗಧ ಪತ್ರಿಕೋದ್ಯಮಿಗಳು, ನಿಷ್ಕ್ರಿಯ ಮತ್ತು ನಿರ್ವೀರ್ಯ ಸುದ್ದಿಮನೆಗಳು, ಗೋಸುಂಬೆ ರಾಜಕೀಯ ನಾಯಕರು, ಸಮಯಸಾಧಕ ಪ್ರಾದೇಶಿಕ ಪಕ್ಷಗಳು ಮತ್ತು ನಿರ್ಲಜ್ಜ ಆಡಳಿತ ವ್ಯವಸ್ಥೆ – ಇವಿಷ್ಟೂ ಅಧ್ವಾನಗಳ ನಡುವೆ ಡಿಸೆಂಬರ್ 8 2020 ಸ್ವತಂತ್ರ ಭಾರತದ ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ದಿನವಾಗಿ ಹೊರಹೊಮ್ಮಲು ಸಜ್ಜಾಗಿದೆ.
ಕಳೆದ ಹಲವು ತಿಂಗಳುಗಳಿಂದ ದೇಶದ ರೈತ ಸಮುದಾಯದಲ್ಲಿ ಮಡುಗಟ್ಟಿದ್ದ ಆಕ್ರೋಶ ಮತ್ತು ನೋವು ಒಮ್ಮೆಲೆ ಹೊರಚೆಲ್ಲುತ್ತಿರುವುದನ್ನು ದೆಹಲಿಯಲ್ಲಿ ಮತ್ತು ದೇಶದ ಎಲ್ಲ ರಾಜ್ಯಗಳಲ್ಲೂ ಕಾಣುತ್ತಿದ್ದೇವೆ. ತನ್ನ ತೋಳ್ಬಲದಿಂದ ಮತ್ತು ಸಮೂಹ ಸನ್ನಿಯ ಉನ್ಮಾದದ ಮೂಲಕ ರೈತ ಹೋರಾಟವನ್ನು ನಿಷ್ಕ್ರಿಯಗೊಳಿಸಬಹುದು ಎಂಬ ಭ್ರಮೆಗೊಳಗಾಗಿದ್ದ ನರೇಂದ್ರ ಮೋದಿ ಸರ್ಕಾರಕ್ಕೆ ದಿಕ್ಕುತೋಚದಂತಾಗಿದೆ.
ರೈತರ ಮುಷ್ಕರ ಏಕೆ ಇಷ್ಟು ಯಶಸ್ವಿಯಾಗಿದೆ, ಹೇಗೆ ಇಷ್ಟು ದಿಟ್ಟತನದಿಂದ ಮುಂದುವರೆದಿದೆ ಎನ್ನುವ ಜಿಜ್ಞಾಸೆ ಎಲ್ಲರನ್ನೂ ಕಾಡುತ್ತಿರಬಹುದು. ಏಕೆಂದರೆ ಭಾರತದಲ್ಲಿ ಮುಷ್ಕರಗಳು, ಪ್ರತಿಭಟನೆಗಳು ಇತಿಹಾಸವನ್ನೇ ಸೃಷ್ಟಿಸಿರುವ ಸಂದರ್ಭಗಳನ್ನು ನೋಡಿದ್ದೇವೆ. ಬ್ಯಾಂಕ್ ನೌಕರರೂ ಒಂದು ಕಾಲಘಟ್ಟದಲ್ಲಿ ಮೂರು ದಿನಗಳ ಮುಷ್ಕರ ನಡೆಸಿದ್ದರು. 1970ರ ದಶಕದ ರೈಲ್ವೆ ನೌಕರರ ಮುಷ್ಕರ ಚಾರಿತ್ರಿಕವಾಗಿತ್ತು. ಕೋಲಾರ ಚಿನ್ನದ ಗಣಿ ಕಾರ್ಮಿಕರು ದಿನಗಟ್ಟಲೆ ಮುಷ್ಕರ ನಡೆಸಿದ ದೃಷ್ಟಾಂತವಿದೆ. ಆದರೆ ಕಳೆದ ಮೂರು ದಶಕಗಳಲ್ಲಿ, ಎಲ್ಲ ರೀತಿಯ ಹೋರಾಟ, ಚಳುವಳಿ, ಪ್ರತಿಭಟನೆಗಳು ತಾತ್ವಿಕ ಅಂತ್ಯ ಕಾಣುವಲ್ಲಿ ವಿಫಲವಾಗಿರುವ ನಿದರ್ಶನಗಳೇ ಹೆಚ್ಚು.
ಆದರೆ ಈ ಬಾರಿಯ ಮುಷ್ಕರ ನಿರ್ಣಾಯಕ ಹಂತ ತಲುಪುತ್ತಿರುವಂತೆ ತೋರುತ್ತಿದೆ. ನವಂಬರ್ 26ರ ಕಾರ್ಮಿಕ ಮುಷ್ಕರವೂ ಅಭೂತಪೂರ್ವ ಯಶಸ್ಸು ಕಂಡಿದ್ದನ್ನು ಗಮನಿಸಬಹುದು. ದೆಹಲಿಯಲ್ಲಿ ನೆರೆದಿರುವ ಲಕ್ಷಾಂತರ ರೈತರ ಪ್ರತಿರೋಧದ ಧ್ವನಿ ಒಂಟಿದನಿಯಾಗಬಹುದು ಎನ್ನುವ ಆಳುವ ವರ್ಗಗಳ ನಿರೀಕ್ಷೆ ಹುಸಿಯಾಗಿದೆ. ರೈತಾಪಿಯ ನೋವಿನ ದನಿಗೆ ಇಡೀ ದೇಶವೇ ಮಿಡಿಯುತ್ತಿದೆ. ಎಲ್ಲ ವರ್ಗಗಳ ಜನರೂ ಸ್ಪಂದಿಸುತ್ತಿದ್ದಾರೆ.
ಮೊಟ್ಟಮೊದಲ ಬಾರಿಗೆ ಬ್ಯಾಂಕ್ ಅಧಿಕಾರಿಗಳ ಸಂಘಗಳು ಈ ರೀತಿಯ ಒಂದು ಸಾರ್ವಜನಿಕ ಮುಷ್ಕರಕ್ಕೆ ಬೆಂಬಲಿಸಿ ಜಂಟಿ ಹೇಳಿಕೆ ನೀಡಿವೆ. ಸಾರ್ವಜನಿಕ ಉದ್ದಿಮೆಗಳ ಕಾರ್ಮಿಕರು ರೈತಾಪಿಯೊಡನೆ ಐಕಮತ್ಯ ಪ್ರದರ್ಶಿಸಿದ್ದಾರೆ. ಬಿಎಸ್ಎನ್ಎಲ್ ನೌಕರರು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷ ರಾಜಕಾರಣದ ದಾಸ್ಯದ ಸಂಕೋಲೆಗಳಲ್ಲಿ ಬಂಧಿಸಲ್ಪಟ್ಟಿರುವವರನ್ನು ಹೊರತುಪಡಿಸಿ ಎಲ್ಲ ಪ್ರಜ್ಞಾವಂತ ಪ್ರಜೆಗಳೂ ಭಾರತದ ರೈತಾಪಿಯೊಡನೆ ಕೈಜೋಡಿಸುತ್ತಿರುವುದೇ ಇಂದಿನ ಮುಷ್ಕರಕ್ಕೆ ತಾತ್ವಿಕ ಸ್ಪರ್ಶ ನೀಡಿದೆ.
ಈ ಮುಷ್ಕರಕ್ಕೆ ಬೆಂಬಲ ಹೆಚ್ಚಾಗಿರುವುದಕ್ಕಿಂತಲೂ ಇದನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಮತ್ತು ಅದರ ಮಾಧ್ಯಮ ಮಿತ್ರರು ನಡೆಸಿರುವ ಅಪಪ್ರಚಾರವೇ ಮುಷ್ಕರದ ಸಾರ್ಥಕತೆಯನ್ನು ಬಿಂಬಿಸುತ್ತದೆ. ನಿಜ, ಪ್ರಸ್ತುತ ಮುಷ್ಕರದಲ್ಲಿ ಎಲ್ಲ ರಾಜ್ಯಗಳ ರೈತ ಸಮುದಾಯ ಸಂಪೂರ್ಣವಾಗಿ ಪಾಲ್ಗೊಂಡಿಲ್ಲ. ಇದು ಕೇವಲ ಶ್ರೀಮಂತ ರೈತರ, ಭೂಮಾಲಿಕರ ಪರ ಇರುವ ಮುಷ್ಕರ ಎಂಬ ಆರೋಪವೂ ಇದೆ. ಸಣ್ಣ ಮತ್ತು ಅತಿ ಸಣ್ಣ ರೈತರ ಹಿತಾಸಕ್ತಿಯನ್ನು ಪ್ರತಿನಿಧಿಸಲಾಗುತ್ತಿಲ್ಲ ಎನ್ನುವ ಆರೋಪವೂ ಇದೆ. ಈ ಸೂಕ್ಷ್ಮ ದರ್ಶಕ ಮಸೂರಗಳನ್ನು ಬಳಸುವವರಿಗೆ ಭಾರತದ ಕೃಷಿ ವ್ಯವಸ್ಥೆಯ ಸ್ವರೂಪವೇ ಅರ್ಥವಾಗಿಲ್ಲ ಎಂದು ಹೇಳಬೇಕಾದೀತು.
ಭಾರತದಲ್ಲಿ ಶೇ 86 ರಷ್ಟು ರೈತರು ಸಣ್ಣ ಹಿಡುವಳಿದಾರರು, ಐದು ಎಕರೆಗಿಂತಲೂ ಕಡಿಮೆ ಭೂಮಿ ಹೊಂದಿರುವವರು. ಈ ರೈತಾಪಿಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಸ್ವಾಮಿನಾಥನ್ ಆಯೋಗ ಕೇಂದ್ರ ಸರ್ಕಾರ ಹಲವಾರು ಶಿಫಾರಸುಗಳನ್ನು ಮಾಡಿದೆ. ಮಾರುಕಟ್ಟೆ ಆರ್ಥಿಕ ವ್ಯವಸ್ಥೆಯಲ್ಲಿ ನಗರೀಕರಣ ಪ್ರಕ್ರಿಯೆಯಿಂದಲೇ ಈ ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಅಲ್ಪ ಪ್ರಮಾಣ ಭೂಮಿಯನ್ನೂ ಕಳೆದುಕೊಳ್ಳುತ್ತಿದ್ದಾರೆ. ಇಂದು ನಡೆಯುತ್ತಿರುವ ಮುಷ್ಕರದಲ್ಲಿ ಈ ರೈತರ ದನಿ ಕೇಳಿಸುತ್ತಿದ್ದೆಯೇ ಎಂಬ ಪ್ರಶ್ನೆಯೇ ಅಸಂಬದ್ಧವಾದದ್ದು. ಏಕೆಂದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳು ರೈತರ ಅಸ್ತಿತ್ವಕ್ಕೇ ಸಂಚಕಾರ ತರುವಂತಹ ಕಾಯ್ದೆಗಳು.
ಭಾರತದಲ್ಲಿ ಜಾರಿಗೆ ತಂದಿರುವ ಭೂ ಸುಧಾರಣಾ ಕ್ರಮಗಳು ಮತ್ತು ಹಸಿರು ಕ್ರಾಂತಿ ಮೂಲತಃ ದೊಡ್ಡ ರೈತರಿಗೆ ನೆರವಾಗಿರುವುದೇ ಹೆಚ್ಚು ಎನ್ನುವುದು ಸತ್ಯ. ಭಾರತದ ಆಳುವ ವರ್ಗಗಳಿಗೆ ಇಲ್ಲಿನ ಊಳಿಗಮಾನ್ಯ ವ್ಯವಸ್ಥೆಯನ್ನು ಸಂಪೂರ್ಣ ಹೋಗಲಾಡಿಸುವ ಇರಾದೆ ಅಂದಿಗೂ ಇರಲಿಲ್ಲ, ಇಂದಿಗೂ ಇಲ್ಲ.
ಇಂದು ದೇಶವನ್ನು ಕಾಡುತ್ತಿರುವ ಅರೆ ಊಳಿಗಮಾನ್ಯ ವ್ಯವಸ್ಥೆ ಕೃಷಿಕ ಸಮುದಾಯದಲ್ಲೇ ಸಮಾಜೋ ಆರ್ಥಿಕ ತಾರತಮ್ಯ ಮತ್ತು ಅಂತರಗಳನ್ನು ಹಿಗ್ಗಿಸುತ್ತಿರುವುದನ್ನೂ ಗಮನಿಸಬಹುದು. ಸಣ್ಣ ರೈತರು ಮತ್ತು ಭೂಮಾಲಿಕರ ನಡುವಿನ ಸಂಘರ್ಷವೂ ಹಲವು ಸಂದರ್ಭಗಳಲ್ಲಿ ತಾರಕಕ್ಕೇರಿರುವುದನ್ನೂ ಕಂಡಿದ್ದೇವೆ. ಈ ಸಂಘರ್ಷದ ನೆಲೆಯಲ್ಲೇ ಸೂಕ್ಷ್ಮವಾಗಿ ಗಮನಿಸಿದಾಗ ಭೂಹೀನ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಸಂಪೂರ್ಣವಾಗಿ ಅವಕಾಶವಂಚಿತರಾಗಿರುವುದನ್ನೂ ಗಮನಿಸಬಹುದು.
ಜಾಗತೀಕರಣದ ನಂತರ, 1991 ರಿಂದ 2004ರ ಅವಧಿಯಲ್ಲಿ ದೇಶದಲ್ಲಿ ಭೂ ಹೀನ ಕುಟುಂಬಗಳ ಸಂಖ್ಯೆ ಶೇ 12ರಷ್ಟು ಹೆಚ್ಚಾಗಿರುವುದನ್ನು ಗಮನಿಸಿದರೆ, ನವ ಉದಾರವಾದಿ ಯುಗದಲ್ಲಿ ನಗರೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ ಮತ್ತು ಗ್ರಾಮೀಣ ವಲಸೆಯ ಪ್ರಕ್ರಿಯೆಗಳು ಹೇಗೆ ಕೃಷಿ ಸಮುದಾಯವನ್ನು ಅಂಚಿಗೆ ತಳ್ಳುವುದಕ್ಕೆ ಕಾರಣವಾಗಿದೆ ಎನ್ನುವುದನ್ನು ಗ್ರಹಿಸಬಹುದು. ಭಾರತದಲ್ಲಿ ಒಟ್ಟು ಶೇ 38ರಷ್ಟು ಕೃಷಿ ಕುಟುಂಬಗಳು ಭೂಹೀನರಾಗಿವೆ. ದೊಡ್ಡ ಹಿಡುವಳಿದಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಪಂಜಾಬ್ ನಲ್ಲಿ ಶೇ 45ರಷ್ಟು ಭೂಹೀನ ಕುಟುಂಬಗಳಿವೆ. ದಕ್ಷಿಣದ ರಾಜ್ಯಗಳಲ್ಲಿ ಇದರ ಪ್ರಮಾಣ ಶೇ 50ಕ್ಕಿಂತಲೂ ಹೆಚ್ಚಾಗಿದೆ.
ಎಪಿಎಂಸಿ ಕಾರ್ಯನಿರ್ವಹಣೆಯಲ್ಲಿದ್ದ ದೋಷಗಳನ್ನು ಸರಿಪಡಿಸುವುದು ಸರ್ಕಾರದ ಆದ್ಯತೆಯಾಗಬೇಕಿತ್ತು. ಆದರೆ ಗುತ್ತಿಗೆ ಕೃಷಿಗೆ ಅವಕಾಶ ನೀಡುವ ಮೂಲಕ ಕಾರ್ಪೋರೇಟ್ ದಲ್ಲಾಳಿಗಳಿಗೆ ರೈತರ ಭೂಮಿ ಮತ್ತು ಬೆಳೆ ಎರಡರ ಮೇಲೂ ಅಧಿಪತ್ಯ ಸಾಧಿಸಲು ಮುಕ್ತ ಅವಕಾಶ ನೀಡಲಾಗುತ್ತಿದೆ.
ರೈತರು ಬೆಳೆಯುವ ಬೆಳೆ, ಬೆಳೆಯ ಪ್ರಮಾಣ ಮತ್ತು ಕೊಳ್ಳುವ ಬೆಲೆ ಇವೆಲ್ಲವನ್ನೂ ಪೂರ್ವನಿರ್ಧರಿತ ಒಪ್ಪಂದದ ಮೂಲಕ ಕಾರ್ಪೋರೇಟ್ ಉದ್ಯಮಿಗಳು ನಿರ್ಧರಿಸುತ್ತಾರೆ. ಭಾರತದಲ್ಲಿ ಎಷ್ಟು ರೈತರಿಗೆ ಈ ಮಾರುಕಟ್ಟೆ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ? ಎಪಿಎಂಸಿ ವ್ಯವಸ್ಥೆಯಲ್ಲಿ ದಲ್ಲಾಳಿಗಳ ಉಪಟಳ ಹೆಚ್ಚಾಗಿತ್ತು ಎನ್ನುವುದು ವಾಸ್ತವ. ಆದರೆ ನೂತನ ಕೃಷಿ ಕಾಯ್ದೆಗಳು ಗುತ್ತಿಗೆ ಕೃಷಿ ಪದ್ಧತಿಯ ಮೂಲಕ ಕಾರ್ಪೋರೇಟ್ ದಲ್ಲಾಳಿಗಳಿಗೆ ಮುಕ್ತ ಅವಕಾಶ ಒದಗಿಸುತ್ತಿದೆ.
ಮತ್ತೊಂದೆಡೆ ಜನಸಾಮಾನ್ಯರ ದೈನಂದಿನ ಜೀವನದಲ್ಲಿ ಬಳಕೆಯಾಗುವ ಕೃಷಿ ಉತ್ಪನ್ನಗಳನ್ನು ಅವಶ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆಯ ಮೂಲಕ ಮುಕ್ತಗೊಳಿಸಲಾಗುತ್ತಿದೆ. ಆಹಾರ ಧಾನ್ಯಗಳು, ಬೇಳೆ ಕಾಳುಗಳು, ಈರುಳ್ಳಿ, ಆಲೂಗಡ್ಡೆ, ಅಡುಗೆ ಎಣ್ಣೆ ಮತ್ತು ಎಣ್ಣೆ ಬೀಜ ಇವೆಲ್ಲವೂ ಅವಶ್ಯ ವಸ್ತುಗಳ ಪರಿಧಿಯಿಂದ ಹೊರತಾಗುತ್ತವೆ.
ಈ ಪದಾರ್ಥಗಳನ್ನು ಸಗಟು ಮಾರುಕಟ್ಟೆಯಲ್ಲಿ ಖರೀದಿಸಿ ದಾಸ್ತಾನು ಮಾಡುವ ಸಾಮಥ್ಯ ಇರುವ ಕಾರ್ಪೋರೇಟ್ ಉದ್ಯಮಿಗಳು, ಮಾರುಕಟ್ಟೆಯಲ್ಲಿ ಈ ಪದಾರ್ಥಗಳ ಬೆಲೆಗಳನ್ನೂ ನಿಯಂತ್ರಿಸಲು ಸುಲಭವಾಗುತ್ತದೆ. ಒಂದೆಡೆ ಬೆಳೆಯನ್ನು ನಿಯಂತ್ರಿಸುವ ಕಾರ್ಪೋರೇಟ್ ಉದ್ಯಮಗಳು ಮತ್ತೊಂದೆಡೆ ಮಾರುಕಟ್ಟೆ ಬೆಲೆಯನ್ನೂ ನಿರ್ಧರಿಸುತ್ತವೆ. ಶ್ರೀಮಂತ ರೈತರು ಕೊಂಚಮಟ್ಟಿಗೆ ಈ ಪ್ರಹಾರವನ್ನು ಸಹಿಸಿಕೊಳ್ಳಬಹುದಾದರೂ, ಸಣ್ಣ ಮತ್ತು ಅತಿಸಣ್ಣ ರೈತರು ನಶಿಸಿಹೋಗುತ್ತಾರೆ. ತಮ್ಮ ಭೂಮಿಯನ್ನೂ ಕಳೆದುಕೊಳ್ಳುತ್ತಾರೆ.
ಈಗಿರುವ ಅರೆ ಊಳಿಗಮಾನ್ಯ ವ್ಯವಸ್ಥೆಯಲ್ಲೇ ಸಣ್ಣ ಹಿಡುವಳಿದಾರರು , ಭೂ ಹೀನರು ಮತ್ತು ಕೃಷಿ ಕಾರ್ಮಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಮೂರು ದಶಕಗಳಲ್ಲಿ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ಹೆಚ್ಚಾಗಿರುವುದಕ್ಕೂ ಇದೇ ಕಾರಣ ಎನ್ನುವುದೂ ಸ್ಪಷ್ಟ. ಲಾಕ್ ಡೌನ್ ಸಂದರ್ಭದಲ್ಲಿ ಇದರ ಪ್ರಾತ್ಯಕ್ಷಿಕೆಯನ್ನೇ ನೋಡಿದ್ದೇವೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಮುಷ್ಕರವನ್ನು ಗಮನಿಸಿದಾಗ ಇದು ಸಮಸ್ತ ಭಾರತೀಯರನ್ನು ಪ್ರತಿನಿಧಿಸುವ ಮುಷ್ಕರ ಎನಿಸುವುದಿಲ್ಲವೇ ? ನಗರಗಳ ಸುತ್ತಮುತ್ತಲಿನ ಗ್ರಾಮಸ್ಥರು ಕಾರ್ಪೋರೇಟ್ ಉದ್ಯಮಿಗಳು ತೋರುವ ಆಮಿಷಗಳಿಗೆ ಬಲಿಯಾಗಿ ತಮ್ಮ ಅಲ್ಪ ಭೂಮಿಯನ್ನೂ ಕಳೆದುಕೊಂಡಿರುವ ನಿದರ್ಶನಗಳು ನಮ್ಮ ಮುಂದೆ ಹೇರಳವಾಗಿವೆ. ಹೊಸ ಮಸೂದೆಗಳು ಈ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತವೆ.
ಕನಿಷ್ಟ ಬೆಂಬಲ ಬೆಲೆಯನ್ನು ರದ್ದುಪಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ, ನೂತನ ಕಾಯ್ದೆಯಲ್ಲಿ ಈ ಭರವಸೆಯ ಅಂಶವನ್ನು ಕಾಣಲಾಗುತ್ತಿಲ್ಲ. ಎಪಿಎಂಸಿ ಮತ್ತು ಮಂಡಿ ಪದ್ಧತಿಯೂ ಕ್ರಮೇಣ ಇಲ್ಲವಾಗುತ್ತದೆ. ರೈತರು ತಮ್ಮ ಫಸಲನ್ನು ಮಾರಾಟ ಮಾಡಲು ಕಾರ್ಪೋರೇಟ್ ಉದ್ಯಮಿಗಳನ್ನೇ ಅವಲಂಬಿಸಬೇಕಾಗುತ್ತದೆ.
ಕೃಷಿ ಭೂಮಿಯ ಮೇಲೆ ತಮ್ಮ ಹಿಡಿತ ಸಾಧಿಸುವ ಕಾರ್ಪೋರೇಟ್ ವಲಯ ಮಾರುಕಟ್ಟೆಗೆ ಅವಶ್ಯವಾದ ಪದಾರ್ಥಗಳನ್ನು ಬೆಳೆಯಲು ಮುಂದಾಗುತ್ತವೆ. ಜನಸಾಮಾನ್ಯರ ನಿತ್ಯ ಬದುಕಿಗೆ ಅವಶ್ಯವಾದ ವಸ್ತುಗಳನ್ನು ಉತ್ಪಾದಿಸುವುದಿಲ್ಲ. ಇದು ಜನಸಾಮಾನ್ಯರನ್ನು ಬಾಧಿಸುವುದಿಲ್ಲವೇ ? ಈ ಬೆಳವಣಿಗೆಗಳು ನೇರವಾಗಿ ಕೃಷಿಗೆ ಸಂಬಂಧವಿಲ್ಲದ ನಗರ ಮತ್ತು ಪಟ್ಟಣ ಕೇಂದ್ರಿತ ಜನತೆಯನ್ನು ಬಾಧಿಸುವುದಿಲ್ಲವೇ ?
ಭೂ ಹೀನರ, ಕೃಷಿ ಕಾರ್ಮಿಕರ ಮತ್ತು ಗ್ರಾಮೀಣ ಬಡಜನತೆಯ ಸಮಸ್ಯೆಗಳು ಈ ಮಸೂದೆಗಳಿಂದ ಪರಿಹಾರವಾಗುವುದೇ ? ಇನ್ನೂ ಬಿಗಡಾಯಿಸುತ್ತವೆ. ಏಕೆಂದರೆ ಕೃಷಿಕರಿಗೇ ತಮ್ಮ ಅಹವಾಲು ಸಲ್ಲಿಸುವ ಸಾಂಸ್ಥಿಕ ನೆಲೆಗಳು ಇಲ್ಲವಾಗುತ್ತವೆ. ಗುತ್ತಿಗೆ ಕೃಷಿ ವ್ಯವಸ್ಥೆಯಲ್ಲಿ ಫಸಲನ್ನು ಕೊಳ್ಳುವವನೇ ನ್ಯಾಯ ನಿರ್ಣಯ ಮಾಡುವ ಅಧಿಕಾರವನ್ನೂ ಹೊಂದಿರುತ್ತಾನೆ.
ಸರ್ಕಾರಗಳು, ಆಡಳಿತ ವ್ಯವಸ್ಥೆ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಂಡು ದೇಶದ ಸಮಸ್ತ ರೈತ ಸಮುದಾಯವನ್ನು ಕಾರ್ಪೋರೇಟ್ ಮರ್ಜಿಗೆ ಒಳಪಡಿಸುತ್ತದೆ. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಾದರೆ ಭರಿಸುವವರು ಯಾರು ? ಈ ಮಸೂದೆಗೆ ಅವಕಾಶ ನೀಡಿದರೆ ಕ್ರಮೇಣ ಸಾರ್ವಜನಿಕ ಪಡಿತರ ವ್ಯವಸ್ಥೆಯೂ ಇಲ್ಲವಾಗುತ್ತದೆ. ಏಕೆಂದರೆ ಸರ್ಕಾರ ಕೃಷಿ ಫಸಲನ್ನು ಖರೀದಿಸಿ, ದಾಸ್ತಾನು ಮಾಡಿ, ಬಡ ಜನತೆಗೆ ವಿತರಿಸುವ ಹೊಣೆಯಿಂದ ಮುಕ್ತವಾಗುತ್ತದೆ. ಇದು ಜನಸಾಮಾನ್ಯರನ್ನು ಬಾಧಿಸುವುದಿಲ್ಲವೇ ?
ದೆಹಲಿಯಲ್ಲಿ ನೆರೆದಿರುವ ಲಕ್ಷಾಂತರ ರೈತರ ನಡುವೆ ಖಲಿಸ್ತಾನಿಗಳು, ದಲ್ಲಾಳಿಗಳು, ದೇಶದ್ರೋಹಿಗಳು, ನಗರ ನಕ್ಸಲರು ಮತ್ತು ರಾಜಕೀಯ ವಿರೋಧಿಗಳನ್ನು ಗುರುತಿಸುವ ಮುನ್ನ, ಪ್ರಜ್ಞಾವಂತ ಜನತೆ ತಮ್ಮನ್ನು ಮುಷ್ಕರದ ಒಂದು ಭಾಗವಾಗಿ ಗುರುತಿಸಿಕೊಂಡರೆ ಉಜ್ವಲ ಭವಿಷ್ಯವನ್ನು ಕಾಣಲು ಸಾಧ್ಯ.
ಏಕೆಂದರೆ ನವ ಉದಾರವಾದಿ ಆರ್ಥಿಕ ನೀತಿಗಳು ಬೆಟ್ಟದಿಂದ ಉರುಳುವ ಹೆಬ್ಬಂಡೆಯಂತೆ ಎಲ್ಲವನ್ನೂ ಇಲ್ಲವಾಗಿಸುತ್ತದೆ. 1991ರಲ್ಲಿ ಕೈಗಾರಿಕೆಗಳಿಂದ ಆರಂಭವಾದ ಮಾರಾಟ ಪ್ರಕ್ರಿಯೆ ಈಗ ಕೃಷಿ ಭೂಮಿಯವರೆಗೂ ತಲುಪಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸಿದಾಗ ನಿರ್ಲಿಪ್ತರಾಗಿದ್ದ ಬ್ಯಾಂಕ್, ವಿಮೆ, ಸಾರಿಗೆ ಮತ್ತು ದೂರ ಸಂಪರ್ಕ ಕ್ಷೇತ್ರದ ನೌಕರರು ಈಗ ತಮ್ಮ ಅಡಿಪಾಯವೇ ಕುಸಿಯುತ್ತಿರುವುದನ್ನು ಮನಗಾಣುತ್ತಿದ್ದಾರೆ.
ಕೃಷಿ ಮಸೂದೆಯೂ ಹೀಗೆಯೇ ಬಾಧಿಸುತ್ತದೆ. ಇಂದು ನೀರಾವರಿ ಸೌಲಭ್ಯ ಇರುವ, ಬಲಾಢ್ಯ ರೈತರನ್ನು ಬಾಧಿಸುವ ಕೃಷಿ ನೀತಿ ಮುಂದಿನ ದಿನಗಳಲ್ಲಿ ಸಣ್ಣ ರೈತರನ್ನು ನಿರ್ನಾಮ ಮಾಡುತ್ತದೆ. ಕೃಷಿ ಕಾರ್ಮಿಕರನ್ನು ನಿರ್ಗತಿಕರನ್ನಾಗಿ ಮಾಡುತ್ತದೆ. ನಗರೀಕರಣ ಪ್ರಕ್ರಿಯೆ ಚುರುಕುಗೊಂಡ ಸಂದರ್ಭದಲ್ಲೇ ತಮ್ಮ ಭೂಮಿಯನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತರಾಗದ ಬೃಹತ್ ರೈತ ಸಮುದಾಯ ಇಂದು ಕಂಗಾಲಾಗಿರುವುದನ್ನು ಗಮನಿಸುತ್ತಲೇ ಇದ್ದೇವೆ. ಹೊಸ ಕೃಷಿ ಮಸೂದೆಗಳು ಈ ರೈತ ಸಮುದಾಯವನ್ನು ಮತ್ತಷ್ಟು ಅಂಚಿಗೆ ತಳ್ಳುತ್ತವೆ. ಈ ಕಾರಣಕ್ಕಾಗಿಯೇ ಸಮಸ್ತ ರೈತ ಸಮುದಾಯ ಇಂದಿನ ಮುಷ್ಕರಕ್ಕೆ ದನಿಗೂಡಿಸುತ್ತಿದೆ.
ಇದು ಕೇವಲ ರೈತರ ಪ್ರಶ್ನೆ ಎನ್ನುವ ನಿರ್ಲಕ್ಷ್ಯ ಭಾರತದ ಹಿತವಲಯದ ಮಧ್ಯಮ ವರ್ಗಗಳಿಗೆ ಅಪಾಯಕಾರಿಯಾಗುತ್ತದೆ. ದೇಶದ ಆರ್ಥಿಕತೆಯ ಬೆನ್ನೆಲುಬು ಕಾರ್ಪೋರೇಟ್ ವಶವಾಗುತ್ತಿದೆ. ಔದ್ಯಮಿಕ ವಲಯ ಈಗಾಗಲೇ ಕಾರ್ಪೋರೇಟ್ ವಶದಲ್ಲಿದೆ. ಹಣಕಾಸು ಕ್ಷೇತ್ರ ಕ್ರಮೇಣ ಜಾರಿ ಹೋಗುತ್ತಿದೆ.
ನಾವು ಚುನಾಯಿಸುವ ಸರ್ಕಾರಗಳು ಈ ಎಲ್ಲ ಕಾರ್ಪೋರೇಟ್ ವ್ಯವಹಾರಗಳನ್ನು ನಿರ್ವಹಿಸುವ ಒಂದು ಪ್ರಬಂಧಕ ಸಂಸ್ಥೆಯಾಗಿಬಿಡುತ್ತದೆ. ಇಡೀ ಅರ್ಥವ್ಯವಸ್ಥೆ ಮಾರುಕಟ್ಟೆ ವಶವಾಗುತ್ತದೆ. ಈ ಅವ್ಯವಸ್ಥೆಯ ನಡುವೆಯೇ ನಾವು ಭಾರತವೆಂಬೋ ದೇಶದಲ್ಲಿ ದೇಶಪ್ರೇಮ, ದೇಶಭಕ್ತಿಯ ಭಜನೆ ಮಾಡುತ್ತಾ ಮತ್ತೊಮ್ಮೆ ಔದ್ಯಮಿಕ ಜಗತ್ತಿನ ದಾಸ್ಯಕ್ಕೊಳಗಾಗಬೇಕಾಗುತ್ತದೆ. ಸ್ವಾತಂತ್ರ್ಯ ಪೂರ್ವದ ಪರಿಸ್ಥಿತಿಗೆ ಮರಳುತ್ತೇವೆ.
ಹಾಗಾಗಿಯೇ ಈ ಮುಷ್ಕರ ನಿರ್ಣಾಯಕವಾಗುತ್ತದೆ. ಚಾರಿತ್ರಿಕ ಎನಿಸಿಕೊಳ್ಳುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ1 day agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ1 hour agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

