ದಿನದ ಸುದ್ದಿ
ಬಲಿಷ್ಠ ಸಾರ್ವಜನಿಕ ಉದ್ದಿಮೆಗಳು ಮಾತ್ರ ಖಾಸಗಿ ಕಂಪೆನಿಗಳ ಶೋಷಣೆ ತಡೆಯಬಲ್ಲವು : ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ
ಸುದ್ದಿದಿನ, ದಾವಣಗೆರೆ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಧೋರಣೆ ಹಾಗೂ ಬ್ಯಾಂಕ್ ಖಾಸಗೀಕರಣದ ಪ್ರಸ್ತಾಪವನ್ನು ವಿರೋಧಿಸಿ ಮತ್ತು ಬ್ಯಾಂಕ್ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಲು ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ವಿರೋದಿಸಿ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳು, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಆಂಜನೇಯ ಕಾಟನ್ ಮಿಲ್ ಎಂಪ್ಲಾಯೀಸ್ ಯೂನಿಯನ್, ಸಾಮಿಲ್ ನೌಕರರ ಸಂಘ, ಮುದ್ರಣ ವಲಯದ ನೌಕರರ ಸಂಘಟನೆ ಹಾಗೂ ಇನ್ನಿತರ ಸಂಘಟನೆಗಳು ಇಂದು ಎರಡನೇ ದಿನವೂ ಮುಷ್ಕರ ನಡೆಸಿದರು.
ಎರಡನೇ ದಿನದ ಮುಷ್ಕರದ ಅಂಗವಾಗಿ ಇಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರ ಮೆರವಣಿಗೆ, ಮತ ಪ್ರದರ್ಶನ ಹಾಗೂ ಜಯದೇವ ವೃತ್ತದಲ್ಲಿ ಬಹಿರಂಗ ಸಭೆಯನ್ನು ನಡೆಸಲಾಯಿತು.
- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಹೊತ್ತಿನಲ್ಲೂ ಕಾರ್ಮಿಕರ ಶೋಷಣೆ ನಡೆಯುತ್ತಿದೆ.
| ಹೆಚ್.ಜಿ.ಉಮೇಶ್ ಅವರಗೆರೆ
- ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ದೇಶದ ಆಸ್ತಿಯನ್ನು ಉಳಿಸಿಕೊಳ್ಳಲು ಈ ಹೋರಾಟ.
| ಕೈದಾಳೆ ಮಂಜುನಾಥ್,ಎಐಯುಟಿಯುಸಿ AIUTUC
ದಾವಣಗೆರೆ ಜಿಲ್ಲಾ ಜೆಸಿಟಿಯು ಮತ್ತು ಎಐಟಿಯುಸಿ ಅಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ ದೇಶವನ್ನು ಉಳಿಸಿ-ಕಾರ್ಮಿಕರನ್ನು ರಕ್ಷಿಸಿ ಎನ್ನುವ ಘೋಷಣೆಯೊಂದಿಗೆ ದೇಶಾದ್ಯಂತ ಸುಮಾರು 25 ಕೋಟಿ ಕಾರ್ಮಿಕರು ಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಮಾಡುತ್ತಿದ್ದಾರೆ.
ದೇಶದ ಆಸ್ತಿಗಳಾದ ಬ್ಯಾಂಕುಗಳು, ವಿಮಾ ಕಂಪೆನಿಗಳು, ರೈಲ್ವೆ, ವಿದ್ಯುತ್ ಪ್ರಸರಣ ಸಂಸ್ಥೆಗಳು, ಟೆಲಿಕಾಂ, ಮೂಲಸೌಕರ್ಯ ಮುಂತಾದ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಹಣಗಳಿಕೆಯ ಪೈಪ್ಲೈನ್ (NMP) ಅನ್ನು ರದ್ದುಗೊಳಿಸಬೇಕು. ರೈಲ್ವೇ, ವಿದ್ಯುತ್ ಪ್ರಸರಣ ವ್ಯವಸ್ಥೆಗಳು, ಟೆಲಿಕಾಂ ಮೂಲಸೌಕರ್ಯ ಮುಂತಾದ ವಿವಿಧ ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಭೂಮಿಯೂ ಸಹ ದೇಶದ ಅಮೂಲ್ಯ ಆಸ್ತಿಯಾಗಿದೆ.
ಇವುಗಳನ್ನು ಖಾಸಗಿ ಬಂಡವಾಳಷಾಹಿಗಳಿಗೆ ಮಾರುವ, ಬಂಡವಾಳ ಹಿಂತೆಗೆತ ಮಾಡುವ, ದೀರ್ಘಕಾಲದ ಅವಧಿಗೆ ಖಾಸಗಿಯವರಿಗೆ ಲೀಸ್ಗೆ ನೀಡುವ ಹುನ್ನಾರ ನಡೆಯುತ್ತಿದೆ. ಇದು ದೇಶದ ಭವಿಷ್ಯದ ಹಿತ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ.
ಉದ್ಯೋಗ ನಷ್ಟ ಮಾಡುವ ಹಾಗೂ ಸಾಮಾಜಿಕ ನ್ಯಾಯ ನೀಡುವ ಮೀಸಲಾತಿ ಸೌಲಭ್ಯಗಳನ್ನು ಕಳೆಯುವ ಈ ಖಾಸಗಿಕರಣ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಈ ಮುಷ್ಕರವನ್ನು ನಡೆಸುತ್ತಿದ್ದೇವೆ. ಬಲಿಷ್ಠವಾದ ಸಾರ್ವಜನಿಕ ಉದ್ದಿಮೆಗಳು ಮಾತ್ರ ಖಾಸಗಿ ಕಂಪೆನಿಗಳ ಶೋಷಣೆ ತಡೆಯಬಲ್ಲವು ಎಂದು ಕೆ.ರಾಘವೇಂದ್ರ ನಾಯರಿ ತಿಳಿಸದರು.
ಜಿಲ್ಲಾ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಉಮೇಶ್ ಅವರಗೆರೆ ಮಾತನಾಡಿ ದೇಶದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಹೊತ್ತಿನಲ್ಲೂ ಕಾರ್ಮಿಕರ ಶೋಷಣೆ ಅವ್ಯಾಹತವಾಗಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ನೇತೃತ್ವದ ಸರ್ಕಾರವು ಇದನ್ನು ‘ಅಮೃತ ಕಾಲ’ದ ಆರಂಭ ಎಂದು ಹೇಳಿಕೊಳ್ಳುತ್ತಿದ್ದಾರೆ.
ದೇಶದ ಜನ ನೆಮ್ಮದಿಯಿಂದ ಇದ್ದಾರೆ ಎಂದು ಕೇಂದ್ರ ಸರಕಾರ ಪ್ರಚಾರ ಮಾಡುತ್ತಿದೆ. ಆದರೆ, ದೇಶದ ಶ್ರಮಿಕ ಜನ ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೆಚ್ಚುತ್ತಿರುವ ನಿರುದ್ಯೋಗ, ಮುಳುಗುತ್ತಿರುವ ಆದಾಯ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮಹಿಳೆಯರಿಗೆ ಸುರಕ್ಷಿತೆ, ಭದ್ರತೆ ಇಲ್ಲದ ಸಂಕಷ್ಟದ ಸಮಯವಾಗಿದೆ. ಈ ಎಲ್ಲಾ ಸಂಕಷ್ಟಗಳು ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ಸೃಷ್ಟಿಯಾಗಿವೆ ಎಂದರು.
ಎಐಯುಟಿಯುಸಿ ಮುಖಂಡ ಕೈದಾಳೆ ಮಂಜುನಾಥ್ ಮಾತನಾಡಿ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ದೇಶದ ಆಸ್ತಿಗಳನ್ನು ಉಳಿಸಿಕೊಳ್ಳುವುದಕ್ಕಾ ಈ ಹೋರಾಟ ನಡೆಯುತ್ತಿದೆ. ಜನಪರ ಹೋರಾಟಗಳು ಸರಕಾರವು ಜನರಿಗೆ ಮಾಡುತ್ತಿರುವ ದ್ರೋಹಗಳನ್ನು ತಡೆಯಲು ಯಶಸ್ವಿಯಾಗಿವೆ.
ಒಂದು ವರ್ಷಕ್ಕೂ ಹೆಚ್ಚು ಸುದೀರ್ಘ ಕಾಲ ರೈತರು ನಡೆಸಿದ ಹೋರಾಟದಿಂದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಿಂಪಡೆಯುವ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿತ್ತು. ಆದಾಗ್ಯೂ ಕೇಂದ್ರ ಸರಕಾರ ತನ್ನ ಹಠಮಾರಿ ಧೋರಣೆಗಳಿಂದಾಗಿ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿದೆ. ಖಾಸಗೀಕರಣವನ್ನು ಬಲಗೊಳಿಸುವ ಪ್ರಕ್ರಿಯೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ಸರಕಾರದ ಈ ನೀತಿಗಳು ದೇಶವನ್ನು ದುರ್ಬಲಗೊಳಿಸುವುದಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಮುಷ್ಕರ ನಡೆಸುತ್ತಿದ್ದೇವೆ ಎಂದರು.
ಎಐಟಿಯುಸಿ ಮುಖಂಡ ಅವರಗೆರೆ ಚಂದ್ರು ಮಾತನಾಡಿ ಅಂಗನವಾಡಿ, ಆಶಾ, ಮಧ್ಯಾಹ್ನದ ಬಿಸಿಯೂಟ ಮತ್ತು ಇತರ ಯೋಜನಾ ಕಾರ್ಯಕರ್ತರಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಸರಕಾರವನ್ನು ಒತ್ತಾಯಿಸಿದರು. 60 ಲಕ್ಷಕ್ಕೂ ಹೆಚ್ಚು ‘ಸ್ಕೀಮ್ ವರ್ಕರ್ಗಳು’ ಮಹಿಳೆಯರಾಗಿದ್ದಾರೆ.
ಅವರು ವಿವಿಧ ಸರ್ಕಾರಿ ಯೋಜನೆಗಳಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸೇವೆಗಳು, ಮಕ್ಕಳ ಆರೈಕೆ ಸೇವೆಗಳು ಇತ್ಯಾದಿಗಳನ್ನು ಒದಗಿಸುವಂತಹ ನಿರ್ಣಾಯಕ ಕೆಲಸಗಳನ್ನು ಮಾಡುತ್ತಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿಯೂ ಅವರು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರೂ ಅವರೆಲ್ಲರನ್ನು ‘ಸ್ವಯಂಸೇವಕ ಕೆಲಸಗಾರರು’ ಎಂದು ವರ್ಗೀಕರಿಸಲಾಗಿದೆ ಮತ್ತು ಅತ್ಯಂತ ಕಡಿಮೆ ಗೌರವ ಧನವನ್ನು ನೀಡಲಾಗುತ್ತಿದೆ. ಅವರನ್ನು ಕಾಯಂಗೊಳಿಸಬೇಕು ಮತ್ತು ಎಲ್ಲಾ ಶಾಸನಬದ್ಧ ಹಕ್ಕುಗಳೊಂದಿಗೆ ಕಾರ್ಮಿಕರಂತೆ ಪರಿಗಣಿಸಬೇಕು ಎಂದವರು ಆಗ್ರಹಿಸಿದರು.
ಮುಷ್ಕರನಿರತ ಕಾರ್ಮಿಕರನ್ನು ಉದ್ದೇಶಿಸಿ ಮುಖಂಡರಾದ ಬಿ.ಆನಂದಮೂರ್ತಿ, ಜಬೀನಾ ಖಾನಂ, ಕರಿಬಸಪ್ಪ, ಶ್ರೀಹರ್ಷ, ಕೆ.ಪಿ.ಮಧುಸೂದನ್, ಅವರಗೆರೆ ವಾಸು, ರಾಜೇಂದ್ರ ಬಂಗೇರ ಮತ್ತಿತರರು ಮಾತನಾಡಿದರು.
ಇಂದಿನ ಮುಷ್ಕರದಲ್ಲಿ ಜೆಸಿಟಿಯು ನಾಯಕರುಗಳಾದ ಕೆ.ರಾಘವೇಂದ್ರ ನಾಯರಿ, ಹೆಚ್.ಜಿ.ಉಮೇಶ್ ಅವರಗೆರೆ, ಕೈದಾಳೆ ಮಂಜುನಾಥ್, ಅವರಗೆರೆ ಚಂದ್ರು, ಆನಂದ್ ರಾಜ್, ಬಿ.ಆನಂದಮೂರ್ತಿ, ವಿಶ್ವನಾಥ್ ಬಿಲ್ಲವ, ಜಬೀನಾ ಖಾನಂ, ಎಂ.ಬಿ.ಶಾರದಮ್ಮ, ಸುನೀತ್ ಕುಮಾರ್, ಎಸ್.ನಾಗರಾಜ್, ಸರೋಜಮ್ಮ, ಕರಿಬಸಪ್ಪ, ಹೆಚ್.ಎಸ್.ತಿಪ್ಪೇಸ್ವಾಮಿ, ಐರಣಿ ಚಂದ್ರು, ರಾಜೇಂದ್ರ ಬಂಗೇರ, ಆರ್.ಆಂಜನೇಯ, ಮಲ್ಲಮ್ಮ, ಕಾಳಮ್ಮ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

