ದಿನದ ಸುದ್ದಿ
ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚಿಗಟೇರಿ ಆಸ್ಪತ್ರೆಗೆ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂ ಜನ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಸಿಸಿಟಿವಿಯಲ್ಲಿ ಕೋವಿಡ್ ವಾರ್ಡ್ಗಳ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
ಆರೋಗ್ಯ ಸಚಿವರು ಜಿಲ್ಲಾಧಿಕಾರಿಗಳನ್ನು ಕುರಿತು, ತಕ್ಷಣವೇ ಜಿಲ್ಲೆಯಲ್ಲಿ ಅನಸ್ತೇಶಿಯಾ, ಮೆಡಿಸಿನ್, ಬಯೋಮೆಡಿಕಲ್ ಇಂಜಿನಿಯರಿಂಗ್ ಜತೆ ಇತರೆ ವೈದ್ಯರ ಒಂದು ಕಮಿಟಿ ಮಾಡಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ನಿರ್ದಿಷ್ಟವಾಗಿ ಎಷ್ಟು ಆಕ್ಸಿಜನ್ ಬೇಕು ಎಂಬುದನ್ನು ಮಾಹಿತಿ ಕಲೆ ಹಾಕಿ ಅಷ್ಟೇ ಆಕ್ಸಿಜನ್ ವ್ಯವಸ್ಥೆ ನೀಡಬೇಕು.
ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ಆಕ್ಸಿಜನ್ ನೀಡಬಹುದು ಹಾಗೂ ಜಿಲ್ಲಾಡಳಿತದ ವತಿಯಿಂದ ಜ್ಯೂಡಿಶಿಯರ್ ಅಧಿಕಾರಿಯನ್ನು ನೇಮಕ ಮಾಡಬೇಕು. ಅವರು ಪ್ರತೀ ಆಸ್ಪತ್ರೆಗಳಲ್ಲೂ ಬಳಕೆಯಾಗುವ ಆಕ್ಸಿಜನ್ ಮಾಹಿತಿಯನ್ನು ಕಲೆ ಹಾಕಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿ, ನಮ್ಮ ಜಿಲ್ಲೆಗೆ ಒಬ್ಬ ಡೆಡಿಕೇಟೆಡ್ ಬಯೋಮೆಡಿಕಲ್ ಇಂಜಿನಿಯರ್ ಬೇಕಾಗಿದ್ದು, ಈ ಕುರಿತು ಹಲವು ಬಾರಿ ಮನವಿ ಮಾಡಿದ್ದೇವೆ ಎಂದರು. ಇದಕ್ಕೆ ಆರೋಗ್ಯ ಸಚಿವರು ಪ್ರತಿಕ್ರಿಯಿಸಿ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಒಬ್ಬ ಬಯೋಮೆಡಿಕಲ್ ಇಂಜಿನಿಯರ್ ಇರುತ್ತಾರೆ. ಅವರನ್ನು ಕರೆಸಿಕೊಂಡು ಸಮರ್ಪಕವಾಗಿ ಕೆಲಸ ಮಾಡಿಸಿಕೊಳ್ಳಿ ಎಂದರು.
ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಈಗಾಗಲೇ ವಾರ್ರೂಂ ಮಾಡಿದ್ದು 6-7 ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ 20 ಮೊಬೈಲ್ ಗಳನ್ನು ಕೊಡಿಸಲಾಗಿದೆ. ಅದರ ಮೂಲಕ ಕಾಂಟ್ಯಾಟ್ಸ್ ಟ್ರೇಸಿಂಗ್, ಬೆಡ್ ಮ್ಯಾನೆಜ್ಮೆಂಟ್ ಹೀಗೆ ಕೋವಿಡ್ ಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹಾಗೂ ಕೋವಿಡ್ ಹೆಲ್ಪ್ ಲೈನ್ ನಂಬರ್ ನಮೂದಿಸಿದ್ದು ಸಾರ್ವಜನಿಕರು ಈ ನಂಬರ್ ಮೂಲಕ ಬೆಡ್ಗಳನ್ನು ಕೇಳಿ ಪಡೆಯುತ್ತಾರೆ ಎಂದರು.
ಇದನ್ನೂ ಓದಿ | ಕರ್ನಾಟಕ | ಶನಿವಾರದಿಂದ 18-44 ವಯಸ್ಸಿನವರಿಗೆ ಕೊರೋನಾ ಲಸಿಕೆ ಪುನರಾರಂಭ
ಇದಕ್ಕೆ ಆರೋಗ್ಯ ಸಚಿವರು ಪ್ರತಿಕ್ರಿಯಿಸಿ, ವಾರ್ರೂಂ ಗೆ 3 ಶಿಫ್ಟ್ಗಳನ್ನು ಮಾಡಿ, ಪ್ರತಿ ಶಿಫ್ಟ್ ಗೆ 50 ಜನರನ್ನು ನೇಮಿಸಬೇಕು. ಇದಕ್ಕೆ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಿ. ಹಾಗೂ 4 ಸಂಖ್ಯೆಯುಳ್ಳ ಕೋವಿಡ್ ಹೆಲ್ಪ್ಲೈನ್ ನಂಬರ್ ಅನ್ನು ಕ್ಲೌಡ್ ಕನೆಕ್ಟ್ ಮಾಡಿ ಸಾರ್ವಜನಿಕರಿಗೆ ತಲುಪಿಸಬೇಕು ಎಂದ ಅವರು,
ಜಿಲ್ಲೆಯಲ್ಲಿ 4800 ಸಕ್ರಿಯ ಪ್ರಕರಣಗಳಿದ್ದು, 3259 ಮಂದಿ ಹೋಮ್ ಐಸೋಲೇಶನ್ನಲ್ಲಿದ್ದಾರೆ.
ಕೊರೊನಾ ಸೋಂಕಿತರಿಗೆ ಹೋಮ್ ಐಸೋಲೇಶನ್ ನೀಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಸೇರಿಸಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ. ಇದು ಸಾಧ್ಯವಾದಾಗ ಮಾತ್ರ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯ. ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗೆ ಬರುವುದನ್ನು ನಿರ್ಲಕ್ಷಿಸಿದರೆ ಅಂತಹವರಿಗೆ ಪೊಲೀಸರ ಸಹಾಯದ ಮೇರಗೆ ಕೇರ್ ಸೆಂಟರ್ ಗೆ ಕರೆದುಕೊಂಡು ಬರಬೇಕು.
ಪ್ರಸ್ತುತ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗೆ ಕರೆತರಲು ಎಷ್ಟು ದಿನ ಬೇಕಾಗಬಹುದು ಎಂದು ಪ್ರಶ್ನಿಸಿದರು.
ಅದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಅನಕ್ಷರಸ್ಥರಿಗಿಂತ ಹೆಚ್ಚಾಗಿ ಅಕ್ಷರಸ್ತರೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಲು ಬೇಕಾದ ಸವಲತ್ತುಗಳಿಲ್ಲ. ಅಂತಹವರನ್ನು ಕೇರ್ ಸೆಂಟರ್ಗೆ ಕರೆತರುತ್ತಿದ್ದೇವೆ. ಆದರೆ ನಗರಗಳಲ್ಲಿ ಮನೆಯಲ್ಲೇ ಪ್ರತ್ಯೇಕ ಕೋಣೆ ಇದೆ ಎಂದು ಚಿಕಿತ್ಸೆ ಪಡೆಯುತ್ತಿರುವವರ ಮನೆಯಲ್ಲೇ ಸೋಂಕಿತರು ಹೆಚ್ಚಾಗುತ್ತಿದ್ದಾರೆ ಎಂದರು.
ಆರೋಗ್ಯ ಸಚಿವರು ಪ್ರತಿಕ್ರಿಯಿಸಿ ಯಾರೆ ಆದರು ಯಾರಿಗೂ ರಿಯಾಯಿತಿ ನೀಡದೆ ಕೋವಿಡ್ ಪಾಸಿಟಿವ್ ಬಂದರೆ ಅಂತಹವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಬೇಕು. ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಅವರಿಗೆ ಕೋವಿಡ್ ಕಿಟ್ ಒದಗಿಸಬೇಕು. ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಸ್ಯಾಚ್ಯುರೇಷನ್ ರೆಕಾರ್ಡ್ ಮಾಡುತ್ತಿಲ್ಲ. ಹಾಗೂ ಮನೆಯಲ್ಲೇ ಪ್ರತ್ಯೇಕವಾಗಿರುವವರನ್ನು ವಿಚಾರಿಸುತ್ತಿಲ್ಲ. ಇದರಿಂದ ಸೋಂಕು ಹೆಚ್ಚಾಗಿ ಕೊನೆ ಹಂತ ತಲುಪಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗುತ್ತಿದ್ದಾರೆ. ಇಂತಹವುದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಎಚ್ಚರಿಸಿದರು.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳು ಶೇ.75 ರಷ್ಟು ಬೆಡ್ಗಳನ್ನು ನೀಡಬೇಕು. ಖಾಸಗಿ ಆಸ್ಪತ್ರೆಯವರು ಸುಮ್ಮನೆ ಬೆಡ್ಗಳನ್ನು ಬಿಟ್ಟುಕೊಡುವುದು ಬೇಡ. ಸರ್ಕಾರಿ ನೋಂದಾಯಿತ ಚಿಕಿತ್ಸೆಗೆ ಟ್ರಸ್ಟ್ ವತಿಯಿಂದ ಹಣ ಪಾವತಿಸಲಾಗುತ್ತಿದೆ.
ಖಾಸಗಿ ಆಸ್ಪತ್ರೆಗಳು ಸರ್ಕಾರದ ಆದೇಶದಂತೆ ನಡೆದುಕೊಳ್ಳದೆ ಇದ್ದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಇದನ್ನು ಜಿಲ್ಲೆಯ ಡಿಹೆಚ್ಒ ಹಾಗೂ ಜಿಲ್ಲಾಧಿಕಾರಿಗಳು ಯಾವುದೇ ಮುಲಾಜಿಲ್ಲದೆ ಹಾಸಿಗೆಗಳನ್ನು ಪಡೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ, ಸಂಸದರಾದ ಜಿ.ಎಂ.ಸಿದ್ದೇಶ್ವರ್, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್,ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಎಸಿ ಮಮತ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243