ದಿನದ ಸುದ್ದಿ
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯಲ್ಲಿ ಕಟ್ಟೆಚ್ಚರವಹಿಸಿ ಯಾವುದೇ ದೂರು, ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಅ.1 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 3 ರಂದು ಪಿಎಸ್ಐ ಹುದ್ದೆಗಳ ಆಯ್ಕೆಗೆ 2 ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ನಂತರ ಮಧ್ಯಾಹ್ನ 12-30 ರಿಂದ 2ಗಂಟೆವರೆಗೆ 2 ನೇ ಅವಧಿಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಲ್ಲದೇ ಬೆಳಿಗ್ಗೆ 9-45ರ ನಂತರ ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಆವರಣವನ್ನು ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.
ಮೊದಲನೆ ಪತ್ರಿಕೆಯ ನಂತರ ಎರಡನೇ ಪತ್ರಿಕೆ ಪ್ರಾರಂಭ ಅಗುವ ಮೊದಲು ಇರುವ ಮೂವತ್ತು ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಹೋಗಲು ಅನುಮತಿಸುವುದಿಲ್ಲ. ಅಭ್ಯರ್ಥಿಗಳು ತಮ್ಮೊಡನೆ ವೈದ್ಯಕೀಯ ಔಷಧಿ, ಮಾತ್ರೆಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕೆಂದು ಮಾಹಿತಿ ನೀಡಿದರು.
ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮೊದಲ ತಪಾಸಣೆಗೆ ಒಳಗಾಗಬೇಕು, ಅಭ್ಯರ್ಥಿಯು ಕೇಂದ್ರದ ಆವರಣವನ್ನು ಪ್ರವೇಶಿಸಿದ ತಕ್ಷಣ, ಪೆಂಡಾಲಿನಲ್ಲಿ ಅವರು ತರುವ ವಸ್ತುಗಳನ್ನು ಇರಿಸಿಕೊಳ್ಳಲು ಮತ್ತು ತಪಾಸಣೆಗೆ ಒಳಗಾಗಲು ವ್ಯವಸ್ಥೆ ಮಾಡಬೇಕು, ಯಾವುದೇ ಕಾರಣಕ್ಕೆ ಪರೀಕ್ಷಾರ್ಥಿಗಳು ಒಮ್ಮೆ ಪೆಂಡಾಲ್ನೊಳಗೆ ತಮ್ಮ ವಸ್ತುಗಳನ್ನು ನೀಡಿದ ನಂತರ ಮತ್ತೆ ಮರಳಿ ಪಡೆಯಲು ಅನುಮತಿಸಬಾರದು. ಅಲ್ಲದೇ ಪರೀಕ್ಷೆ ಮುಗಿದ ನಂತರವೇ ಅವರ ವಸ್ತುಗಳನ್ನು ಮರಳಿ ಪಡೆಯಬೇಕು ಎಂದು ಹೇಳಿದರು.
ಅದರಲ್ಲೂ ಮುಖ್ಯವಾಗಿ ವಿರಾಮದ ಸಮಯದಲ್ಲಿ ಅವರಿಗೆ ಪ್ರತಿ ಅಭ್ಯರ್ಥಿಗಳಿಗೆ ಬಾಳೆಹಣ್ಣು ಮತ್ತು ಬಿಸ್ಕತ್ತು ಪ್ಯಾಕನ್ನು ಸರಬರಾಜು ಮಾಡಬೇಕು. ಪರೀಕ್ಷೆಯ ಕರ್ತವ್ಯಕ್ಕಾಗಿ ಒಬ್ಬ ಸ್ಕ್ವಾಡ್, ಒಬ್ಬ ವೀಕ್ಷಕ ಮತ್ತು ಒಬ್ಬ ಕಸ್ಟೋಡಿಯನ್ರನ್ನು ಗೊತ್ತುಪಡಿಸಲಾಗಿದೆ. ವಿರಾಮದ ವೇಳೆಯಲ್ಲಿಯೂ ಕೊಠಡಿ ಮೇಲ್ವಿಚಾರಕರು ಕೊಠಡಿಯಲ್ಲಿರಬೇಕು, ಯಾವುದೇ ಕಾರಣಕ್ಕೂ ರಿಲೀವರ್ ಇಲ್ಲದೇ ಕೊಠಡಿ ಬಿಡುವಂತಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಪರೀಕ್ಷಾರ್ಥಿಯ ಕಿವಿಗಳನ್ನು ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಇ.ಎನ್.ಟಿ.ತಜ್ಞರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಲ್ಲದೇ ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದರು.
ಯಾವುದೇ ಅಭ್ಯರ್ಥಿ ಒಮ್ಮೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದ ನಂತರ ಮತ್ತೆ ಹೊರಗೆ ಹೋಗುವಂತಿಲ್ಲ. ಯಾವುದೇ ಎಲೆಕ್ಟ್ರಾನಿಕ್ ಡಿವೈಸ್ ಇರುವ ಬಗ್ಗೆ ಅಭ್ಯರ್ಥಿಯ ಮೇಲೆ ಅನುಮಾನ ಕಂಡು ಬಂದರೆ ಪೊಲೀಸ್ ಅಧಿಕಾರಿಗಳ ಸಹಾಯದೊಂದಿಗೆ ಚೆಕ್ ಮಾಡಬೇಕು. ಅಲ್ಲದೇ ಪರೀಕ್ಷಾ ಕೇಂದ್ರದ ಒಳಗೆ ನಕಲು ಮಾಡುತ್ತಿರುವ ಬಗ್ಗೆ ಅನುಮಾನ ಬಂದರೆ ತಕ್ಷಣವೇ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಕರೆ ತಂದು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತಪಾಸಣೆ ಮಾಡಬೇಕು ಎಂದು ಹೇಳಿದರು.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಡಿಮೆ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ.
ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್ಕೋಡನ್ನು ಅನುಸರಿಸುವುದರ ಜೊತೆಗೆ, ಪರೀಕ್ಷಾ ಕೇಂದ್ರಕ್ಕೆ ಇಲ್ಲಿ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ಡ್ರೈವ್ಗಳು, ಇಯರ್ ಫೋನ್ಗಳು, ಮೈಕ್ರೋಫೋನ್ಗಳು, ಬ್ಲೂಟೂಥ್ ಸಾಧನಗಳು, ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.
ಅನುಮತಿಸಲಾದ ಕೆಲ ವಸ್ತುಗಳ ವಿವರ;ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಅವುಗಳಲ್ಲಿ ಪಾಸ್ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗಿ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ಬ್ಯಾಂಕುಗಳು, ಅಂಚೆ ಕಚೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ.ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆ ಪತ್ರ ಅಥವಾ ಪಟ್ಟಾ ಪುಸ್ತಕ, ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ, ಪಿಂಚಣಿ ಮಂಜೂರಾತಿ ಆಗಿರುವ ಆದೇಶ, ಎನ್ಆರ್ಇಜಿಎಸ್ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ, ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ, ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಮನೆಮಾತಾಗಿದ್ದಾರೆ.
ಹೌದು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ ಗ್ರಾಮದಲ್ಲಿರುವ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರದ ಚೇತನ್ ಕುಮಾರ್ ವಿಶಿಷ್ಟ ರೀತಿಯಲ್ಲಿ ತಮ್ಮ ಕಾಯಕ ವೃತ್ತಿಯನ್ನು ನಿರ್ವಹಿಸುವ ಜೊತೆಗೆ ಸಾಂಸ್ಕೃತಿಕ ರಾಯಭಾರಿಯಂತೆ ಕಾರ್ಯ ನಿರ್ವಹಿಸುತ್ತಿರುವುದು ಮನುಷ್ಯತ್ವದ ಅಚಲ ನಂಬಿಕೆಯನ್ನ ಪ್ರತಿಬಿಂಬಿಸುತ್ತದೆ.
ಇಲ್ಲಿನ ವೈವಿಧ್ಯಮಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಸಂಭ್ರಮ ಮತ್ತು ಸಂಸ್ಕಾರವನ್ನು ಬೆಳೆಸುತ್ತಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ.
ಜೂನ್ 27,2022ರಲ್ಲಿ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ಶುರು ಮಾಡಿದ ಇವರು ಕೇವಲ ಕಂಪ್ಯೂಟರ್ ಕಲಿಕೆ ಮಾತ್ರವಲ್ಲದೆ ಮಕ್ಕಳಿಗೆ ಬೇರೆ ಬೇರೆಯ ವಿಷಯಗಳ ಬಗ್ಗೆ ಅರಿವು ನೀಡಬೇಕು ಎಂದು ತೀರ್ಮಾನ ಮಾಡಿ ತಮ್ಮದೇ ಶೈಲಿಯಲ್ಲಿ ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ.
ಜೀವನದ ಜಂಜಾಟದಲ್ಲಿ ಮನೆಯ ಕಷ್ಟ ಜೀವನವನ್ನ ಅರಿತ ಮಕ್ಕಳು ಗೊಂದಲಕ್ಕೆ ಈಡಾಗುತ್ತಾರೆ ಎಂಬುದನ್ನು ಮನಗಂಡ ಇವರು ಮಕ್ಕಳ ಒತ್ತಡವನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳಲ್ಲಿ ಹಾಸ್ಯ ಪ್ರಜ್ಞೆ ಹಾಗೂ ಅಭಿವ್ಯಕ್ತಿ ಕಲೆ ಬೆಳೆಸಲು ಈ ವಿಶಿಷ್ಟ ಕಾರ್ಯಕ್ರಮವನ್ನ ಪ್ರತಿ ಶುಕ್ರವಾರ ಹಮ್ಮಿಕೊಂಡು ಮಕ್ಕಳನ್ನ ನಕ್ಕು ನಗಿಸುವ ಮೂಲಕ ಕಲಿಕೆಗೆ ಸ್ಫೂರ್ತಿ ನೀಡುತ್ತಿದ್ದಾರೆ.
ಆಟೋಟಗಳು
ಬೆಳೆವ ಮಕ್ಕಳು ದೇಶದ ಆಸ್ತಿ.. ಆ ಮಕ್ಕಳು ದೈಹಿಕ ಮತ್ತು ಮಾನಸಿಕ ಸದೃಢರಾಗಿರಬೇಕು ಆಗಲೇ ಕಲಿಕೆಗೆ ಸ್ಫೂರ್ತಿ ಸಿಗುತ್ತೆ ಎನ್ನುವ ಕಾರಣಕ್ಕೆ ಮಕ್ಕಳ ಜೊತೆಯಲ್ಲಿ ಮಕ್ಕಳಾಗಿ ಕೆಲವು ಆಟಗಳನ್ನ ಆಡಿಸುವ ಪರಿಪಾಠವನ್ನು ಮುಂದುವರಿಸುತ್ತ ಬಂದಿದ್ದಾರೆ.
ಒಂದು ದಿನದ ಪಿಕ್ನಿಕ್
ಸದರಿ ತರಬೇತಿ ಕೇಂದ್ರದಲ್ಲಿ ಬರುವ ವಿದ್ಯಾರ್ಥಿಗಳಿಗೆ ವರ್ಷಕ್ಕೊಮ್ಮೆ ಪ್ರವಾಸಕ್ಕೆ ಕರೆದುಕೊಂಡು ಹೋಗಿ ನಕ್ಕು ನಲಿಸಿ ಪ್ರವಾಸಿ ತಾಣಗಳ ಪರಿಚಯ ಮಾಡಿಕೊಂಡು ಬರುವ ವಾಡಿಕೆ ಮುಂದುವರೆಯುತ್ತಲೇ ಇದೆ. ಇದರ ಮೂಲಕ ವಿದ್ಯಾರ್ಥಿಗಳಲ್ಲಿ ಸ್ನೇಹಭಾವ ಮತ್ತು ಹೊರಜಗತ್ತಿನ ಅರಿವು ಮೂಡಿಸಲು ಸಹಕಾರಿಯಾಗಿದ್ದಾರೆ.
ಸಾಮೂಹಿಕ ಭೋಜನ
ಇತ್ತೀಚಿಗೆ ರಾಜಕೀಯ ವ್ಯವಸ್ಥೆಯಲ್ಲಿ ಬಡಜನರ ಮನೆಯಲ್ಲಿ ಊಟ ಮಾಡುವುದೇ ದೊಡ್ಡ ಸುದ್ದಿಯನ್ನಾಗಿ ಬಿಂಬಿಸುವ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಬಡತನ ಸಿರಿತನ ಹಾಗೂ ಜಾತಿ-ಭೇದದ ಅರಿವು ಇರದೇ ಎಲ್ಲರು ಎಲ್ಲರನ್ನು ಪ್ರೀತಿಸಬೇಕು, ಎಲ್ಲರೊಟ್ಟಿಗೆ ಸಾಮೂಹಿಕವಾಗಿ ಒಬ್ಬರ ಮನೆಯಲ್ಲಿನ ಊಟ ಮತ್ತೊಬ್ಬರು ಮಾಡುವ ಮೂಲಕ ಬೇಧ ಭಾವ ಅಳಿಸುವ ಕಾರ್ಯಕ್ಕೆ ಮುನ್ನಡಿ ಬರೆದಿದ್ದಾರೆ.
ಜನ್ಮ ದಿನಾಚರಣೆ
ಈ ತರಬೇತಿ ಕೇಂದ್ರಕ್ಕೆ ಬರುವ ಮಕ್ಕಳ ಜನ್ಮ ದಿನಾಚರಣೆ ಮಾಡಿ ಶುಭ ಹಾರೈಸಿ ಸಿಹಿ ಹಂಚಿ ಸಂಭ್ರಮ ಪಡುತ್ತಾರೆ.
ಪೂಜೆ ಪುನಸ್ಕಾರ
ಇನ್ನು ಮಕ್ಕಳಲ್ಲಿ ಸಂಪ್ರದಾಯ, ದೇಶದ ಮೇಲೆ ಅಭಿಮಾನ, ದೇವರ ಮೇಲೆ ನಂಬಿಕೆ, ಉತ್ತಮ ಕೆಲಸದ ಬಗ್ಗೆ ಸಾರ್ಥಕತೆ ಭಾವ ಬರಬೇಕು ಎಂಬ ಕಾರಣಕ್ಕೆ ಪೂಜೆ ಪುನಸ್ಕಾರ, ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಸ್ವಾಗತರ್ಹ.
ಆರೋಗ್ಯ ಶಿಬಿರ ಆಯೋಜನೆ
ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ತರಬೇತಿ ಕೇಂದ್ರದಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಅತ್ಯಂತ ಮೆಚ್ಚುವಂತಹ ಕೆಲಸವಾಗಿದೆ.
ಕೌಶಲ್ಯ ಸ್ಪರ್ಧೆ
ಇನ್ನು ಪ್ರತಿವರ್ಷ ತಮ್ಮ ತರಬೇತಿ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಅರಿವು ಮೂಡಿಸುವ ಸಲುವಾಗಿ ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲಾಗುತ್ತದೆ. ಇದರ ಜೊತೆಗೆ ಅತ್ಯುತ್ತಮ ವಿದ್ಯಾರ್ಥಿಗಳಿಗೆ
ಬಹುಮಾನ ವಿತರಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಐವಿನ್ ತರಬೇತಿ ಕೇಂದ್ರ ಸಾಮಾಜಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ.
ಬೀಳ್ಕೊಡುಗೆ ಸಮಾರಂಭ
ಇನ್ನೂ ಕೋರ್ಸ್ ಮುಗಿಸಿ ಹೋಗುವ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ವಿದಾಯ ಹೇಳುವ ಮೂಲಕ ಗುರುವಿನ ಮತ್ತು ಸಂಸ್ಥೆಯ ಬಾಂಧವ್ಯವನ್ನು ಗಟ್ಟಿಗೊಳಿಸಲಾಗುತ್ತದೆ.
300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ
ಜೂನ್ 27, 2022ರಲ್ಲಿ ಆರಂಭವಾದ ಈ ತರಬೇತಿ ಕೇಂದ್ರದಲ್ಲಿ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಶಿಬಿರಾರ್ಥಿಗಳು ತರಬೇತಿ ಪಡೆದಿದ್ದಾರೆ. ಒಂದು ಬ್ಯಾಚ್ ಗೆ 8 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.
ನಮಗೆ ಕಂಪ್ಯೂಟರ್ ಕಲಿಕೆಯೊಂದಿಗೆ ಉತ್ತಮ ವಿಚಾರಗಳನ್ನು ಇಲ್ಲಿ ಕಲಿಸಲಾಗುತ್ತಿದೆ. ಪ್ರತಿ ವಾರವು ಒಂದೊಂದು ವಿಭಿನ್ನ ಪ್ರಯತ್ನ ಮಾಡುವ ಮೂಲಕ ಚೇತನ್ ಸರ್ ಹೊಸ ವಿಚಾರಗಳನ್ನು ಕಲಿಸುತ್ತಾರೆ. ನಮ್ಮಲ್ಲಿರುವ ಭಯ ಹೊರಗಡೆ ತಗೆಯೋಕೆ ತುಂಬಾ ಪ್ರಯತ್ನ ಪಡ್ತಾರೆ.. ಅವರ ಆದರ್ಶ ಗುಣಗಳೇ ನಮಗೆ ನಮ್ಮ ಸಾಧನೆಯ ಮೆಟ್ಟಿಲುಗಳಾಗಬೇಕು ಅದಕ್ಕಾಗಿ ನಮ್ಮ ಪ್ರಯತ್ನ ಇದ್ದೇ ಇದೆ.
~ಶಿಬಿರಾರ್ಥಿಗಳು
ಗ್ರಾಮೀಣ ಭಾಗದ ಒಂದು ಕಂಪ್ಯೂಟರ್ ಸೆಂಟರ್ ಇಷ್ಟೊಂದು ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ. ಇದು ಮಕ್ಕಳಲ್ಲಿ ಕೇವಲ ಡಿಜಿಟಲ್ ಕೌಶಲ್ಯವನ್ನಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿಯನ್ನು ಕೂಡ ಬೆಳೆಸುತ್ತದೆ.
ತ್ಯಾವಣಿಗೆಯ ಐವಿನ್ ಕಂಪ್ಯೂಟರ್ ಸೆಂಟರ್ನ ಈ ಮಾದರಿ ಕಾರ್ಯಕ್ರಮಗಳು ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ತ್ಯಾವಣಿಗೆ, ಅರೇಹಳ್ಳಿ -ಕದರನಹಳ್ಳಿ, ಕಬ್ಬಳ, ಕರೆಕಟ್ಟೆ, ಮತ್ತಿ, ಬೆಳಲಗೆರೆ, ಮಿಯಾಪುರ ಸೇರಿದಂತೆ ಅಕ್ಕಪಕ್ಕ ಗ್ರಾಮದ ಹಲವಾರು ಮಕ್ಕಳು ಈ ತರಬೇತಿ ಕೇಂದ್ರಕ್ಕೆ ಬಂದು ತರಬೇತಿ ಪಡೆದಿದ್ದಾರೆ.
ಸಮಾಜದಲ್ಲಿ ಆದಷ್ಟು ಒಳ್ಳೆಯ ಕೆಲಸಗಳನ್ನ ಮಾಡಿ ಮಕ್ಕಳಿಗೆ ಮಾದರಿ ಯಾಗಿರಬೇಕು. ಈ ತರಬೇತಿ ಕೇಂದ್ರ ಆರಂಭಕ್ಕೆ ತುಂಬಾ ಕಷ್ಟಪಟ್ಟಿದ್ದೇನೆ. ನಾವು ಪಟ್ಟ ಕಷ್ಟ ಮುಂದಿನ ಪೀಳಿಗೆ ಪಡಬಾರದು. ಕಲಿಕೆಗೂ ಕಷ್ಟಪಡಬೇಕಾದ ಪರಿಸ್ಥಿತಿ ಇದೆ. ಎಷ್ಟೋ ಮಕ್ಕಳಿಗೆ ನಾವು ಹೇಳಿದಷ್ಟು ಹಣ ಕೊಡೋಕೆ ಆಗಲ್ಲ ಹಾಗಂತ ಅವರನ್ನು ಕಲಿಸದೇ ಕಳಿಸಲ್ಲ.. ಹಣದಲ್ಲಿ ರಿಯಾಯ್ತಿ ನೀಡಿ ಅವರನ್ನು ಕಲಿಸೋಕೆ ಹುರಿದುಂಬಿಸುತ್ತೇವೆ ಎನ್ನುತ್ತಾರೆ ಚೇತನ್ ಕುಮಾರ್.
ಇನ್ನು ಟ್ರೈನರ್ ಗಾಯತ್ರಿ ಅವರು ಕೂಡ ಇಲ್ಲಿ ಬರುವ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿ ಕಂಪ್ಯೂಟರ್ ಕಲಿಸುತ್ತಾರೆ. ಹಾಗೆಯೇ ಈ ಹಿಂದೆ ಇದ್ದ ವಿನುತಾ ಎಂಬ ಟ್ರೈನರ್ ಅವರ ಶ್ರಮ ತುಂಬಾ ಇದೆ ಎನ್ನುತ್ತಾರೆ ಚೇತನ್ ಕುಮಾರ್. ಒಟ್ಟಾರೆ ವಿಭಿನ್ನ ರೀತಿಯಲ್ಲಿ ಕಂಪ್ಯೂಟರ್ ಕಲಿಕೆ ಜೊತೆಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅರಿವು ಮೂಡಿಸುವ ಇವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ.
ಸುದ್ದಿದಿನ|ವಾಟ್ಸಾಪ್|9980346243

-
ದಿನದ ಸುದ್ದಿ4 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ6 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ5 days agoನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
-
ಅಂಕಣ2 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ7 days agoಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ


